Home Blog

‘ಗಿಮಿಕ್’ ಅಲ್ಲ, ‘ಗ್ರೇಟ್ ಜಾಬ್’: ಸಿಎಂ ಎಪಿಎಂಸಿ ಭೇಟಿಗೆ ಹೈಕೋರ್ಟ್‌ ಮೆಚ್ಚುಗೆ

0

ಬೆಂಗಳೂರು: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದನ್ನು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಪ್ರಶಂಸಿಸಿದ್ದಾರೆ.

ಕಾರ್ಮಿಕ ಪ್ರಕರಣವೊಂದರ ವಿಚಾರಣೆ ವೇಳೆ ಸಿಎಂ ಭೇಟಿಯನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು, ಯಾರಾದರೂ ಇದನ್ನು ಗಿಮಿಕ್ ಎಂದು ಕರೆಯಬಹುದು. ಆದರೆ ಇದು ‘ಗ್ರೇಟ್ ಜಾಬ್’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಭೇಟಿ ವೇಳೆ ಎಪಿಎಂಸಿ ಮಾರುಕಟ್ಟೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ಹಾಗೂ ಶುಂಠಿ ದರಗಳನ್ನು ಪರಿಶೀಲಿಸಿದ್ದರು. ಅಲ್ಲದೆ ಮಾರುಕಟ್ಟೆಯಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರೊಂದಿಗೆ ಮಾತನಾಡಿದ್ದನ್ನು ನ್ಯಾಯಮೂರ್ತಿಗಳು ವಿಚಾರಣೆ ವೇಳೆ ಉಲ್ಲೇಖಿಸಿದ್ದಾರೆ.

ಎಪಿಎಂಸಿ ಮಳಿಗೆಗಳು ಕೆಲವರ ಹೆಸರಿನಲ್ಲಿದ್ದು, ಬೇರೆಯವರು ಅಲ್ಲಿ ಬಾಡಿಗೆದಾರರಾಗಿ ವ್ಯವಹಾರ ನಡೆಸುತ್ತಿರುವ ಪರಿಸ್ಥಿತಿಯ ಬಗ್ಗೆಯೂ ನ್ಯಾಯಮೂರ್ತಿಗಳು ಪ್ರಸ್ತಾಪಿಸಿದ್ದಾರೆ.

ದೇವನಹಳ್ಳಿ: ಕಪ್ಪು ಪಲ್ಸರ್‌ನಲ್ಲಿ ಬಂದು ಸರಗಳ್ಳತನ; ಖದೀಮರಿಗಾಗಿ ಪೊಲೀಸರ ಶೋಧ!

0

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರವಲಯದಲ್ಲಿ ಕದ್ದ ಕಪ್ಪು ಬಣ್ಣದ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು ಸರಣಿ ಸರಗಳ್ಳತನ ನಡೆಸಿದ್ದಾರೆ.

ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಖದೀಮರು ನೆಲಮಂಗಲದಲ್ಲಿ ಕಪ್ಪು ಬಣ್ಣದ ಪಲ್ಸರ್ ಬೈಕ್ ಕಳವು ಮಾಡಿ ಅದೇ ಬೈಕ್‌ನಲ್ಲಿ ಸರಗಳ್ಳತನ ನಡೆಸಿದ್ದಾರೆ. ಹೊಸಕೋಟೆ ಹಾಗೂ ದೇವನಹಳ್ಳಿ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದು, ನಂದಗುಡಿ, ಸೂಲಿಬೆಲೆ ಹಾಗೂ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ.

ಮಾಲೂರು ಹಾಗೂ ದೇವನಹಳ್ಳಿ ಭಾಗದಲ್ಲೂ ಸರಗಳ್ಳತನಕ್ಕೆ ಖದೀಮರು ಯತ್ನಿಸಿದ್ದಾರೆ. ಆದರೆ ಈ ಎರಡೂ ಕಡೆ ಕೃತ್ಯ ವಿಫಲವಾಗಿದೆ.

ಸರಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಪೀಣ್ಯ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದ ಖದೀಮರು ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಆರೋಪಿಗಳು ಏಕಾಏಕಿ ದಾಳಿ ನಡೆಸಿ ನೆಲಕ್ಕೆ ಬೀಳಿಸಿ ಮಾಂಗಲ್ಯ ಸರ ಕಿತ್ತುಕೊಂಡಿದ್ದರು. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ದೇಹದಲ್ಲಿ ಮ್ಯಾಗ್ನೀಷಿಯಂ ಕಡಿಮೆಯಾಗಿದೆಯೇ? ಈ ಸೂಚನೆಗಳನ್ನು ನಿರ್ಲಕ್ಷಿಸಬೇಡಿ

0

ದೇಹದ ಆರೋಗ್ಯಕ್ಕೆ ವಿಟಮಿನ್‌ಗಳಷ್ಟೇ ಅಲ್ಲ, ವಿವಿಧ ಖನಿಜಾಂಶಗಳೂ ಅಗತ್ಯ. ಅವುಗಳಲ್ಲಿ ಮ್ಯಾಗ್ನೀಷಿಯಂ ಪ್ರಮುಖವಾದದ್ದು. ಸ್ನಾಯು ಮತ್ತು ನರಗಳ ಕಾರ್ಯ, ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ರಕ್ತದೊತ್ತಡದ ನಿರ್ವಹಣೆ, ಶಕ್ತಿ ಉತ್ಪಾದನೆ ಹಾಗೂ ಮೂಳೆಗಳ ಆರೋಗ್ಯದಲ್ಲಿ ಮ್ಯಾಗ್ನೀಷಿಯಂ ಪ್ರಮುಖ ಪಾತ್ರ ವಹಿಸುತ್ತದೆ.

ಮ್ಯಾಗ್ನೀಷಿಯಂ ಕೊರತೆಯಾದರೆ ಏನಾಗುತ್ತದೆ?

ಮ್ಯಾಗ್ನೀಷಿಯಂ ಕೊರತೆ ಆರಂಭಿಕ ಹಂತದಲ್ಲಿ ಸ್ಪಷ್ಟವಾಗಿ ಗೋಚರಿಸದೇ ಇರಬಹುದು. ಆದರೆ ಕೆಲವರಲ್ಲಿ ನಿರಂತರ ದಣಿವು, ದೌರ್ಬಲ್ಯ, ಹಸಿವು ಕಡಿಮೆಯಾಗುವುದು, ವಾಕರಿಕೆ, ಸ್ನಾಯು ಸೆಳೆತ ಹಾಗೂ ಕಾಲುಗಳಲ್ಲಿ ಮರಗಟ್ಟಿದ ಅನುಭವ ಕಾಣಿಸಿಕೊಳ್ಳಬಹುದು.

ಕೊರತೆ ತೀವ್ರವಾದರೆ ಕೈ-ಕಾಲುಗಳಲ್ಲಿ ಜುಮ್ಮೆನಿಸುವುದು, ಸ್ನಾಯುಗಳ ಅಸಹಜ ಸೆಳೆತ ಹಾಗೂ ಹೃದಯ ಬಡಿತದಲ್ಲಿ ಅಸಹಜತೆ ಸೇರಿದಂತೆ ಗಂಭೀರ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇಂತಹ ಸಮಸ್ಯೆಗಳು ನಿರಂತರವಾಗಿ ಕಂಡುಬಂದರೆ ಸ್ವಯಂ ಔಷಧಿ ಸೇವಿಸುವ ಬದಲು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ.

ಮ್ಯಾಗ್ನೀಷಿಯಂ ಕೊರತೆಯಿಂದ ಕ್ಯಾನ್ಸರ್ ಬರುತ್ತದೆಯೇ?

ಮ್ಯಾಗ್ನೀಷಿಯಂ ಕೊರತೆಯೇ ನೇರವಾಗಿ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬುದನ್ನು ಪ್ರಸ್ತುತ ಲಭ್ಯವಿರುವ ಮಾಹಿತಿಯಿಂದ ದೃಢಪಡಿಸಲು ಸಾಧ್ಯವಿಲ್ಲ. ಮ್ಯಾಗ್ನೀಷಿಯಂ ದೇಹದ ಹಲವು ಜೈವಿಕ ಪ್ರಕ್ರಿಯೆಗಳಲ್ಲಿ ಪ್ರಮುಖ ಪಾತ್ರ ವಹಿಸಿದರೂ, ಅದರ ಕೊರತೆ ಮತ್ತು ಕ್ಯಾನ್ಸರ್ ನಡುವೆ ನೇರ ಕಾರಣ-ಪರಿಣಾಮ ಸಂಬಂಧವನ್ನು ದೃಢಪಡಿಸಲು ಇನ್ನಷ್ಟು ಸಂಶೋಧನೆ ಅಗತ್ಯವಿದೆ. ಹೀಗಾಗಿ ಮ್ಯಾಗ್ನೀಷಿಯಂ ಕಡಿಮೆಯಾಗಿದೆ ಎಂದಾಕ್ಷಣ ಕ್ಯಾನ್ಸರ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ.

ಯಾವ ಆಹಾರಗಳಲ್ಲಿ ಮ್ಯಾಗ್ನೀಷಿಯಂ ಸಿಗುತ್ತದೆ?

ಮ್ಯಾಗ್ನೀಷಿಯಂ ಪಡೆಯಲು ದುಬಾರಿ ಆಹಾರಗಳನ್ನೇ ಅವಲಂಬಿಸುವ ಅಗತ್ಯವಿಲ್ಲ. ಬಾದಾಮಿ, ಗೋಡಂಬಿ, ಎಳ್ಳು, ಕುಂಬಳಕಾಯಿ ಬೀಜಗಳು, ಪಾಲಕ್‌ನಂತಹ ಹಸಿರು ಸೊಪ್ಪುಗಳು, ಕಡಲೆ, ರಾಜ್ಮಾ, ಬೇಳೆಕಾಳುಗಳು ಮತ್ತು ಸಂಪೂರ್ಣ ಧಾನ್ಯಗಳು ಉತ್ತಮ ಮೂಲಗಳಾಗಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ರಾಗಿ, ಸಜ್ಜೆ, ಕಡಲೆ, ಬೇಳೆ, ವಿವಿಧ ಬೀಜಗಳು ಹಾಗೂ ಹಸಿರು ಸೊಪ್ಪುಗಳನ್ನು ನಿಯಮಿತವಾಗಿ ಸೇರಿಸಿಕೊಳ್ಳುವುದರಿಂದ ಮ್ಯಾಗ್ನೀಷಿಯಂ ಸೇರಿದಂತೆ ಅಗತ್ಯ ಪೋಷಕಾಂಶಗಳನ್ನು ಪಡೆಯಲು ಸಹಾಯವಾಗಬಹುದು.

ಆಹಾರದ ಮೂಲಕ ಪೋಷಕಾಂಶಗಳನ್ನು ಪಡೆಯುವುದು ಸಾಮಾನ್ಯವಾಗಿ ಉತ್ತಮ ವಿಧಾನವಾಗಿದ್ದು, ಮ್ಯಾಗ್ನೀಷಿಯಂ ಸಪ್ಲಿಮೆಂಟ್‌ಗಳನ್ನು ವೈದ್ಯರ ಸಲಹೆಯಿಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬಾರದು.

37 ವರ್ಷಗಳ ಬಳಿಕ ವಿದ್ಯಾರ್ಥಿ ಸಂಘ ಚುನಾವಣೆ: ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಅಸ್ತು

0

ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 37 ವರ್ಷಗಳ ಬಳಿಕ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಮರುಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ನಡೆಸಲು ಅನುಮೋದನೆ ನೀಡಲಾಗಿದೆ.

ಕಾಲೇಜು ಕ್ಯಾಂಪಸ್‌ಗಳಲ್ಲಿ ಹೆಚ್ಚುತ್ತಿದ್ದ ಹಿಂಸಾಚಾರ, ಗೂಂಡಾಗಿರಿ ಹಾಗೂ ರಾಜಕೀಯ ಹಸ್ತಕ್ಷೇಪದ ಹಿನ್ನೆಲೆಯಲ್ಲಿ 1989ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಆ ನಿಷೇಧವನ್ನು ತೆರವುಗೊಳಿಸಿ ಚುನಾವಣೆಗಳನ್ನು ಮರುಜಾರಿಗೊಳಿಸಲು ಮುಂದಾಗಿದೆ.

ವಿದ್ಯಾರ್ಥಿಗಳಲ್ಲಿ ನಾಯಕತ್ವದ ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿ ಸಂಘ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡಿದೆ. ಆದರೆ, ಚುನಾವಣೆ ನಡೆಸಬೇಕೇ ಅಥವಾ ಬೇಡವೇ ಎಂಬ ನಿರ್ಧಾರವನ್ನು ಆಯಾ ಕಾಲೇಜುಗಳ ಆಡಳಿತ ಮಂಡಳಿಗೆ ಬಿಡಲಾಗಿದೆ.

ವಿದ್ಯಾರ್ಥಿ ಸಂಘದಲ್ಲಿ ಓರ್ವ ಅಧ್ಯಕ್ಷ ಹಾಗೂ ಓರ್ವ ಮಹಿಳೆ ಸೇರಿದಂತೆ ಇಬ್ಬರು ಉಪಾಧ್ಯಕ್ಷರು ಇರಲಿದ್ದಾರೆ. ಇದರ ಜೊತೆಗೆ ಓರ್ವ ಕಾರ್ಯದರ್ಶಿ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಜಂಟಿ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಯಾವುದೇ ಮೀಸಲಾತಿ ಇರುವುದಿಲ್ಲ. ಒಂದು ವೇಳೆ ಕಾಲೇಜಿನ ವಿದ್ಯಾರ್ಥಿಗಳೇ ಚುನಾವಣೆ ಬೇಡ ಎಂದು ನಿರ್ಧರಿಸಿದರೆ, ಅಂತಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಯುವುದಿಲ್ಲ.

ಇನ್ನು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ಸೇರಿದ ವಿದ್ಯಾರ್ಥಿ ಸಂಘಟನೆಗಳಿಗೆ ಅವಕಾಶ ಇರುವುದಿಲ್ಲ. ಅಂದರೆ, ರಾಜಕೀಯ ಪಕ್ಷಗಳ ನೇರ ಹಸ್ತಕ್ಷೇಪವಿಲ್ಲದೆ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಈ ವರ್ಷದ ಜೂನ್‌ನಲ್ಲಿ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿ ಮಾತನಾಡಿದ್ದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ನಿಲ್ಲಿಸಲಾಗಿರುವ ವಿದ್ಯಾರ್ಥಿ ಸಂಘ ಚುನಾವಣೆಗಳನ್ನು ಈ ವರ್ಷದಿಂದಲೇ ಆರಂಭಿಸಲಾಗುವುದು ಎಂದು ಘೋಷಿಸಿದ್ದರು.

ಇದೀಗ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿ ಸಂಘ ಚುನಾವಣೆ ಮರುಜಾರಿಗೆ ಒಪ್ಪಿಗೆ ನೀಡಿರುವುದರಿಂದ, ರಾಜ್ಯದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ಹಲವು ವರ್ಷಗಳ ಬಳಿಕ ವಿದ್ಯಾರ್ಥಿ ನಾಯಕತ್ವದ ಚುನಾವಣಾ ಪ್ರಕ್ರಿಯೆ ಮತ್ತೆ ಆರಂಭವಾಗಲಿದೆ.

ಸಾಲಕ್ಕಿಂತ ದುಪ್ಪಟ್ಟು ಹಣ ವಸೂಲಿ ಮಾಡಿದ್ದೀರಿ, ಇನ್ನೂ ಆರ್ಥಿಕ ಅಪರಾಧಿ ಎನ್ನುವುದೇಕೆ?: ಸರ್ಕಾರದ ವಿರುದ್ಧ ವಿಜಯ್ ಮಲ್ಯ ಪ್ರಶ್ನೆ

0

ಲಂಡನ್: ಭಾರತದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂಬ ಆರೋಪವನ್ನು ಉದ್ಯಮಿ ವಿಜಯ್ ಮಲ್ಯ ಮತ್ತೊಮ್ಮೆ ತಳ್ಳಿಹಾಕಿದ್ದಾರೆ. ತಾವು 1992ರಿಂದಲೇ ಬ್ರಿಟನ್‌ನ ಖಾಯಂ ನಿವಾಸಿಯಾಗಿದ್ದು, ಭಾರತದಿಂದ ಪರಾರಿಯಾಗಿಲ್ಲ ಎಂದು ಮಲ್ಯ ಹೇಳಿದ್ದಾರೆ. ಅಲ್ಲದೆ, ತಮ್ಮಿಂದ ವಸೂಲಿ ಮಾಡಿರುವ ಹಣದ ಪ್ರಮಾಣವನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧವೂ ಪ್ರಶ್ನೆಗಳನ್ನು ಎತ್ತಿದ್ದಾರೆ.

ಎಕ್ಸ್ ಖಾತೆಯಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ಮಾಹಿತಿಯನ್ನು ಪ್ರಸ್ತಾಪಿಸಿರುವ ಮಲ್ಯ, 2021ರ ವೇಳೆಗೆ ತಮ್ಮ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಒಟ್ಟು ₹14,131.60 ಕೋಟಿ ವಸೂಲಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಬ್ಯಾಂಕುಗಳಿಗೆ ಬರಬೇಕಿದ್ದ ಅಸಲು ಸಾಲದ ಮೊತ್ತ ಸುಮಾರು ₹6,203 ಕೋಟಿ ಮಾತ್ರವಾಗಿತ್ತು. ಹೀಗಿರುವಾಗ ಸಾಲಕ್ಕಿಂತ ಹೆಚ್ಚಿನ ಹಣವನ್ನು ಸರ್ಕಾರ ವಸೂಲಿ ಮಾಡಿದೆ. ಆದ್ದರಿಂದ ಹೆಚ್ಚುವರಿ ಮೊತ್ತವನ್ನು ಸರ್ಕಾರವೇ ತನಗೆ ಪಾವತಿಸಬೇಕು ಎಂದು ಮಲ್ಯ ವಾದಿಸಿದ್ದಾರೆ.

ಮಲ್ಯ ಅವರ ಹೇಳಿಕೆಗಳ ನಡುವೆಯೇ ಬಾಂಬೆ ಹೈಕೋರ್ಟ್‌ ಪ್ರಕರಣವೊಂದರಲ್ಲಿ ಅವರು ಉದ್ದೇಶಪೂರ್ವಕವಾಗಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದೆ.

ನೌಕರರ ವೇತನ ಪಾವತಿ ವಿಚಾರ

ಕಿಂಗ್‌ಫಿಷರ್ ಏರ್‌ಲೈನ್ಸ್‌ನ ನೌಕರರಿಗೆ ಬಾಕಿ ವೇತನ ಪಾವತಿಸಲು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದ್ದ ನಿಧಿಯಿಂದಲೇ ₹350 ಕೋಟಿಗೂ ಅಧಿಕ ಹಣ ಬಿಡುಗಡೆ ಮಾಡಿದೆ ಎಂದು ಮಲ್ಯ ಹೇಳಿದ್ದಾರೆ.

ತಮ್ಮ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದ್ದರಿಂದ ನೌಕರರಿಗೆ ತಾವೇ ಬಾಕಿ ವೇತನ ಪಾವತಿಸಲು ಸಾಧ್ಯವಾಗಲಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

‘ಭಾರತಕ್ಕೆ ಬಾರದಿರುವುದು ಪಲಾಯನವಲ್ಲ’

1992ರಿಂದಲೂ ತಾವು ಯುನೈಟೆಡ್ ಕಿಂಗ್‌ಡಂನ ಖಾಯಂ ನಿವಾಸಿಯಾಗಿದ್ದೇನೆ ಎಂದು ಮಲ್ಯ ಹೇಳಿದ್ದಾರೆ. ಸ್ಥಳೀಯ ಕಾನೂನು ನಿಯಮಗಳ ಕಾರಣದಿಂದ ಬ್ರಿಟನ್‌ ತೊರೆದು ತೆರಳಲು ತಮ್ಮ ಮೇಲೆ ನಿರ್ಬಂಧಗಳಿವೆ. ಹೀಗಾಗಿ ಭಾರತಕ್ಕೆ ಮರಳದೇ ಇರುವುದನ್ನು ಪಲಾಯನ ಎಂದು ಕರೆಯಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ವಿರುದ್ಧದ ಆರ್ಥಿಕ ಅಪರಾಧಿ ಎಂಬ ಆರೋಪ ಹಾಗೂ ಭಾರತದಿಂದ ಪರಾರಿಯಾಗಿರುವ ವ್ಯಕ್ತಿ ಎಂಬ ಆರೋಪವನ್ನು ಮಲ್ಯ ನಿರಂತರವಾಗಿ ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಅವರ ಆಸ್ತಿಗಳ ಜಪ್ತಿ, ಸಾಲ ವಸೂಲಿ ಹಾಗೂ ಭಾರತಕ್ಕೆ ಹಸ್ತಾಂತರಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.

ಅಪ್ರಾಪ್ತೆಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆಯೂ ಅಪರಾಧ; ತಪ್ಪಿತಸ್ಥನಿಗೆ 20 ವರ್ಷ ಕಠಿಣ ಶಿಕ್ಷೆ, ದಂಡ

0

ಬೆಂಗಳೂರು: ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಮೇರೆಗೆ ಲೈಂಗಿಕ ಕ್ರಿಯೆ ನಡೆದಿದೆ ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದ ಆರೋಪಿಯಿಂದ ಕ್ರಿಮಿನಲ್ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಬಾಲಕಿಯ ಸಮ್ಮತಿ ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದು ತಿಳಿಸಿರುವ ನ್ಯಾಯಪೀಠ, ಪೋಕ್ಸೋ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹1.05 ಲಕ್ಷ ದಂಡ ವಿಧಿಸಿದೆ. ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ಬಿ. ಪ್ರಮೋದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಸಂತ್ರಸ್ತೆಯ ಜನನ ಪ್ರಮಾಣಪತ್ರ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯ ಆಧಾರದ ಮೇಲೆ ಘಟನೆ ನಡೆದ ಸಂದರ್ಭದಲ್ಲಿ ಆಕೆಗೆ 16 ವರ್ಷ ವಯಸ್ಸಾಗಿತ್ತು ಎಂಬುದು ಸಾಬೀತಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. ಹೀಗಾಗಿ ಪೋಕ್ಸೋ ಕಾಯ್ದೆಯಡಿ ಆಕೆ ಅಪ್ರಾಪ್ತೆಯಾಗಿದ್ದು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಸಮ್ಮತಿ ಇದೆಯೇ ಅಥವಾ ಇಲ್ಲವೇ ಎಂಬುದು ಕಾನೂನಿನ ದೃಷ್ಟಿಯಲ್ಲಿ ಮುಖ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಪ್ರಾಪ್ತೆಯ ಸಮ್ಮತಿಯನ್ನು ಆರೋಪಿಯು ತನ್ನ ರಕ್ಷಣೆಯಾಗಿ ಬಳಸಿಕೊಳ್ಳಲು ಯಾವುದೇ ಅವಕಾಶವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣದ ವಿಚಾರಣೆ ವೇಳೆ ಆರೋಪಿ ಹಾಗೂ ಸಂತ್ರಸ್ತೆಯ ರಕ್ತದ ಮಾದರಿಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿತ್ತು. DNA ಪರೀಕ್ಷಾ ವರದಿಯು ಗರ್ಭಪಾತಗೊಳಿಸಲಾದ ಭ್ರೂಣಕ್ಕೆ ಆರೋಪಿಯೇ ಜೈವಿಕ ತಂದೆ ಹಾಗೂ ಸಂತ್ರಸ್ತೆಯೇ ಜೈವಿಕ ತಾಯಿ ಎಂಬುದನ್ನು ದೃಢಪಡಿಸಿತ್ತು.

ಆದರೂ ವಿಚಾರಣಾ ನ್ಯಾಯಾಲಯವು ಸಂತ್ರಸ್ತೆಯ ವಯಸ್ಸು ಹಾಗೂ DNA ಸಾಕ್ಷ್ಯಗಳನ್ನು ಸಮರ್ಪಕವಾಗಿ ಪರಿಗಣಿಸದೆ ಆರೋಪಿಯನ್ನು ಖುಲಾಸೆಗೊಳಿಸಿರುವುದು ಕಾನೂನುಬಾಹಿರ ಮತ್ತು ತಪ್ಪಾದ ನಿರ್ಧಾರ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ವಿಚಾರಣಾ ನ್ಯಾಯಾಲಯವು ಸುಪ್ರೀಂ ಕೋರ್ಟ್‌ನ ಹಿಂದಿನ ಕೆಲವು ಆದೇಶಗಳನ್ನು ಪರಿಗಣಿಸಿದ್ದರೂ, ಪೋಕ್ಸೋ ಕಾಯ್ದೆ ಜಾರಿಗೊಳಿಸಿರುವ ಉದ್ದೇಶವನ್ನು ಸರಿಯಾಗಿ ಅರ್ಥೈಸಿಕೊಂಡಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಪೋಕ್ಸೋ ಕಾಯ್ದೆಯ ಸೆಕ್ಷನ್ 6 ಹಾಗೂ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಲಾಗಿದೆ. ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ ₹5 ಸಾವಿರ ದಂಡ ವಿಧಿಸಲಾಗಿದೆ.

ಒಟ್ಟು ₹1.05 ಲಕ್ಷ ದಂಡದ ಮೊತ್ತದಲ್ಲಿ ₹90 ಸಾವಿರವನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ನೀಡಬೇಕು. ಉಳಿದ ₹15 ಸಾವಿರವನ್ನು ಸರ್ಕಾರಕ್ಕೆ ಜಮಾ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಅಲ್ಲದೆ, ಆದೇಶದ ಪ್ರತಿ ಲಭ್ಯವಾದ ಒಂದು ವಾರದೊಳಗೆ ಆರೋಪಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಬೇಕು. ಆತ ಶರಣಾಗದಿದ್ದರೆ ಕೂಡಲೇ ಬಂಧಿಸಿ ಕಾರಾಗೃಹಕ್ಕೆ ಕಳುಹಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ

ಆದೇಶದಲ್ಲಿರುವ ಮಾಹಿತಿಯ ಪ್ರಕಾರ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಟೀಚರ್ಸ್ ಕಾಲೋನಿ ನಿವಾಸಿಯಾಗಿದ್ದ 26 ವರ್ಷದ ಯುವಕನಿಗೆ 2021ರಲ್ಲಿ ಫೇಸ್‌ಬುಕ್ ಮೂಲಕ 16 ವರ್ಷದ ಬಾಲಕಿಯ ಪರಿಚಯವಾಗಿತ್ತು.

ಬಾಲಕಿಯ ಪೋಷಕರಿಗೆ ತಿಳಿಯದಂತೆ ಆಕೆಯನ್ನು ಕಾರಿನಲ್ಲಿ ಅಪಹರಿಸಿ ವಿವಿಧ ಸ್ಥಳಗಳಿಗೆ ಕರೆದೊಯ್ದು ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪ ಯುವಕನ ಮೇಲಿತ್ತು. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ.

ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354(ಡಿ), 363, 366, 376(2)(ಎನ್) ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 6 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಚಾರಣಾ ನ್ಯಾಯಾಲಯದಲ್ಲಿ ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿ ಆರೋಪಿಯನ್ನು ಖುಲಾಸೆಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆಯ ಪೋಷಕರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಆರೋಪಿಯ ಪರ ವಕೀಲರು, ಸಂತ್ರಸ್ತೆಯ ಸಮ್ಮತಿಯ ಮೇರೆಗೆ ಲೈಂಗಿಕ ಕ್ರಿಯೆ ನಡೆದಿದ್ದು, ವಿಚಾರಣಾ ನ್ಯಾಯಾಲಯ ನೀಡಿರುವ ಖುಲಾಸೆ ಆದೇಶ ಸರಿಯಾಗಿದೆ. ಹೀಗಾಗಿ ಮೇಲ್ಮನವಿಯನ್ನು ವಜಾಗೊಳಿಸಬೇಕು ಎಂದು ವಾದಿಸಿದ್ದರು. ಆದರೆ ಈ ವಾದವನ್ನು ಪರಿಗಣಿಸದ ಹೈಕೋರ್ಟ್, ಸಂತ್ರಸ್ತೆ ಅಪ್ರಾಪ್ತೆಯಾಗಿದ್ದ ಹಿನ್ನೆಲೆಯಲ್ಲಿ ಆಕೆಯ ಸಮ್ಮತಿ ಕಾನೂನಿನ ರಕ್ಷಣೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿ ಆರೋಪಿಗೆ ಶಿಕ್ಷೆ ವಿಧಿಸಿದೆ.

ಕಾವೇರಿ ನೀರು ಬಿಡುಗಡೆ ಆದೇಶ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ಕಿಡಿ

0

ಬೆಂಗಳೂರು: ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ಹಂಚಿಕೆ ಪ್ರಾಧಿಕಾರ ನೀಡಿರುವ ನಿರ್ದೇಶನ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಕರ್ನಾಟಕದ ಕಾವೇರಿ ಕಣಿವೆ ಜಲಾಶಯಗಳ ವಾಸ್ತವ ಸ್ಥಿತಿ, ಕುಡಿಯುವ ನೀರಿನ ಅಗತ್ಯ, ರೈತರ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ನೀರಿನ ಲಭ್ಯತೆ ಕುರಿತು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಪ್ರಾಧಿಕಾರದ ಮುಂದೆ ಸಮರ್ಥವಾಗಿ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಇದು ಕೇವಲ ಆಡಳಿತಾತ್ಮಕ ಲೋಪವಲ್ಲ. ಕರ್ನಾಟಕದ ಜಲ ಹಕ್ಕುಗಳನ್ನು ರಕ್ಷಿಸುವಲ್ಲಿ ಸರ್ಕಾರ ತೋರಿರುವ ಗಂಭೀರ ನಿರ್ಲಕ್ಷ್ಯ ಎಂದು ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

15 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದರೆ ಒಟ್ಟು 7.5 ಟಿಎಂಸಿ ನೀರು ರಾಜ್ಯದಿಂದ ಹೊರಹೋಗಲಿದೆ. ರಾಜ್ಯವೇ ನೀರಿನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಷ್ಟು ಪ್ರಮಾಣದ ನೀರು ಬಿಡುಗಡೆ ಮಾಡುವುದು ಅಸಾಧ್ಯ. ಹೀಗಾಗಿ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ಸದ್ಯ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಈ ವೈಫಲ್ಯದ ಹೊಣೆ ಹೊತ್ತು ರಾಜ್ಯದ ಜನರಿಗೆ ಉತ್ತರ ನೀಡಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ. ಪ್ರಾಧಿಕಾರದ ಮುಂದೆ ಕರ್ನಾಟಕದ ಪರವಾಗಿ ಯಾವೆಲ್ಲಾ ಅಂಶಗಳನ್ನು ಮಂಡಿಸಲಾಗಿತ್ತು? ರಾಜ್ಯದ ಜಲಾಶಯಗಳ ನೈಜ ಸ್ಥಿತಿಯ ವರದಿಯನ್ನು ಸಲ್ಲಿಸಲಾಗಿತ್ತೇ? ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದರೆ ಬೆಂಗಳೂರಿನ ಕುಡಿಯುವ ನೀರು ಹಾಗೂ ಕರ್ನಾಟಕದ ರೈತರ ಮೇಲೆ ಉಂಟಾಗುವ ಪರಿಣಾಮವನ್ನು ಸಮರ್ಪಕವಾಗಿ ವಿವರಿಸಲಾಗಿತ್ತೇ? ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದ ಹಿತಾಸಕ್ತಿ ಕಾಪಾಡಲು ಪ್ರಾಧಿಕಾರದ ಮುಂದೆ ಸರ್ಕಾರ ಮಂಡಿಸಿರುವ ದಾಖಲೆಗಳನ್ನು ಸಾರ್ವಜನಿಕಗೊಳಿಸಬೇಕು. ಜಲಾಶಯಗಳ ಲೈವ್ ಸ್ಟೋರೇಜ್, ಒಳಹರಿವು ಹಾಗೂ ಮುಂದಿನ ತಿಂಗಳ ನೀರಿನ ಅಗತ್ಯಕ್ಕೆ ಸಂಬಂಧಿಸಿದ ವೈಜ್ಞಾನಿಕ ಲೆಕ್ಕಾಚಾರವನ್ನು ಏಕೆ ಪರಿಣಾಮಕಾರಿಯಾಗಿ ಮಂಡಿಸಲಿಲ್ಲ ಎಂಬುದಕ್ಕೂ ಸರ್ಕಾರ ಉತ್ತರಿಸಬೇಕು ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಬೆಳೆಗಳಿಗೆ ಬೇಕಾಗುವ ನೀರಿನ ಪ್ರಮಾಣವನ್ನು ಪರಿಗಣಿಸಿ ರಾಜ್ಯದಲ್ಲಿನ ನೀರಿನ ಕೊರತೆಯ ವಾಸ್ತವಾಂಶವನ್ನು ಏಕೆ ಸಮರ್ಪಕವಾಗಿ ಮನವರಿಕೆ ಮಾಡಿಕೊಡಲಿಲ್ಲ ಎಂಬುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಪರವಾಗಿ ವಾದ ಮಂಡಿಸಿದ ತಾಂತ್ರಿಕ ಹಾಗೂ ಕಾನೂನು ತಂಡದ ಕಾರ್ಯವೈಖರಿ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಕರ್ನಾಟಕದ ಹಿತಾಸಕ್ತಿಯನ್ನು ಸಮರ್ಪಕವಾಗಿ ಮಂಡಿಸುವಲ್ಲಿ ಯಾರಿಂದ ಲೋಪವಾಗಿದೆ ಎಂಬುದನ್ನು ಗುರುತಿಸಿ, ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಾವುದೇ ನೀರು ಬಿಡುಗಡೆ ಆದೇಶ ಬರುವ ಮುನ್ನವೇ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮಂಡಿಸಲು ಶಾಶ್ವತ ಕಾವೇರಿ ತಾಂತ್ರಿಕ-ಕಾನೂನು ಕಾರ್ಯತಂತ್ರ ರೂಪಿಸಬೇಕು ಎಂದು ಅಶೋಕ್ ಹೇಳಿದ್ದಾರೆ. “ನೀರು ಬಿಡುವುದು, ಆದೇಶ ಬಂದ ನಂತರ ಕಣ್ಣೀರು ಹಾಕುವುದು—ಇದು ರಾಜ್ಯ ಸರ್ಕಾರದ ಕಾವೇರಿ ನೀತಿ ಆಗಬಾರದು” ಎಂದು ಅವರು ತೀವ್ರವಾಗಿ ಟೀಕಿಸಿದ್ದಾರೆ.

ಕಾವೇರಿ ನೀರು ಕರ್ನಾಟಕದ ರೈತರ ಬದುಕು, ಬೆಂಗಳೂರಿನ ಕುಡಿಯುವ ನೀರು ಹಾಗೂ ರಾಜ್ಯದ ಭವಿಷ್ಯದ ಜಲ ಭದ್ರತೆಯ ಪ್ರಶ್ನೆಯಾಗಿದೆ. ರಾಜ್ಯದ ಹಿತಾಸಕ್ತಿಯನ್ನು ಬಲಿಕೊಟ್ಟು ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದನ್ನು ಬಿಜೆಪಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ಸರ್ಕಾರ ಕೂಡಲೇ ಪ್ರಾಧಿಕಾರದ ಮುಂದೆ ಮರುಪರಿಶೀಲನೆಗೆ ಒತ್ತಾಯಿಸಬೇಕು. ಅಗತ್ಯವಿದ್ದರೆ ಕಾನೂನು ಹೋರಾಟಕ್ಕೂ ಮುಂದಾಗಬೇಕು. ಕರ್ನಾಟಕದ ನೀರಿನ ಮೇಲೆ ಮೊದಲ ಹಕ್ಕು ಕರ್ನಾಟಕದ ಜನರದು ಎಂಬ ನಿಲುವನ್ನು ಸರ್ಕಾರ ಸ್ಪಷ್ಟವಾಗಿ ಹಾಗೂ ನಿರ್ದಾಕ್ಷಿಣ್ಯವಾಗಿ ಪ್ರತಿಪಾದಿಸಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.

ಮೈಶುಗರ್ ಕಾರ್ಖಾನೆ ಬಾಯ್ಲರ್ʼಗೆ ಬಿದ್ದು ಕಾರ್ಮಿಕ ಸಾವು!

0

ಮಂಡ್ಯ: ಮೈಶುಗರ್‌ ಕಾರ್ಖಾನೆಯ ಬಾಯ್ಲರ್‌ಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕೆ. ಶೆಟ್ಟಿಹಳ್ಳಿ ಗ್ರಾಮದ ಚರಣ್ ಕುಮಾರ್ (33) ಮೃತ ಕಾರ್ಮಿಕ.

ಕಾರ್ಮಿಕನ ಸಾವಿಗೆ ಕಾರ್ಖಾನೆ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಮೃತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಚರಣ್ ಕುಮಾರ್ ಅವರು ಶ್ರೇಯ ಏಜೆನ್ಸಿ ಮೂಲಕ ಗುತ್ತಿಗೆ ಆಧಾರದಲ್ಲಿ ಕಳೆದ ಒಂದೂವರೆ ವರ್ಷದಿಂದ ಮೈಶುಗರ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್‌ 3ರಂದು ಕೆಲಸದ ವೇಳೆ ಬಾಯ್ಲರ್‌ಗೆ ಬಿದ್ದಿದ್ದ ಚರಣ್‌ ಕುಮಾರ್ ಅವರನ್ನು ಗಂಭೀರ ಗಾಯಗಳೊಂದಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಅವರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ.

ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ಹಾಗೂ ಸೂಕ್ತ ಪರಿಹಾರ ದೊರೆಯುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಇದೇ ವೇಳೆ, ಕಾರ್ಖಾನೆ ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಮೈಶುಗರ್‌ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಪ್ರಶ್ನಿಸಿ ಸುಪ್ರೀಂಗೆ ರಾಜ್ಯ ಸರ್ಕಾರ: ಚಲುವರಾಯಸ್ವಾಮಿ

0

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಜ್ಜಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಈ ವಿಚಾರವಾಗಿ ಮುಖ್ಯಮಂತ್ರಿ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚನೆ ನಡೆಸಿ, ನಾಳೆಯೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಇದರ ಜತೆಗೆ CWRC ಮುಂದೆ ಕೂಡ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. CWRC ನೀಡಿದ್ದ ಆದೇಶವನ್ನೇ CWMA ಕೂಡ ಎತ್ತಿಹಿಡಿದಿದೆ. ಆದರೆ ರಾಜ್ಯದ ಜಲಾಶಯಗಳ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ತಮಿಳುನಾಡಿಗೆ ನೀರು ಹರಿಸಲು ರಾಜ್ಯದಲ್ಲೇ ಸಾಕಷ್ಟು ನೀರಿಲ್ಲ ಎಂದು ಚಲುವರಾಯಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಸದ್ಯ ರಾಜ್ಯದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಇದರ ನಡುವೆ ಬತ್ತಿಹೋಗಿರುವ ಕೆರೆ-ಕಟ್ಟೆಗಳನ್ನು ಕೂಡ ತುಂಬಿಸಬೇಕಾದ ಅನಿವಾರ್ಯತೆ ಇದೆ. ಗೌರಿ-ಗಣೇಶ ಹಬ್ಬದ ಒಂದು ವಾರದೊಳಗೆ ಉತ್ತಮ ಮಳೆಯಾದರೆ ಮಾತ್ರ ಪರಿಸ್ಥಿತಿ ತುಸು ಸುಧಾರಿಸಬಹುದು ಎಂದು ಸಚಿವರು ಹೇಳಿದರು.

CWRC ಆದೇಶವನ್ನು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಈ ಹಿಂದೆ ಕರ್ನಾಟಕದಿಂದ 100 ಟಿಎಂಸಿ ನೀರು ಬಿಡಲಾಗಿತ್ತು. ಆದರೆ ಈ ಬಾರಿ ಈಗಾಗಲೇ 30 ಟಿಎಂಸಿ ನೀರು ನೀಡಲಾಗಿದೆ. ಆದರೂ ತಮಿಳುನಾಡು ಸರ್ಕಾರ ನಿರಂತರವಾಗಿ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದರು.

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಸಲಹೆಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರ ಪರಿಣಾಮಕಾರಿಯಾಗಿ ವಾದ ಮಂಡಿಸಲು ವಿಶೇಷ ವಕೀಲರನ್ನು ನೇಮಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.

ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೂ ಚರ್ಚೆ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. ರಾಜ್ಯದ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕಾನೂನು ಹೋರಾಟ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರಿಗೆ ಉಗ್ರರ ಮತ್ತೊಮ್ಮೆ ಬೆದರಿಕೆ; ಕೆಲಸ ತೊರೆಯದಿದ್ದರೆ ಅಪಾಯದ ಎಚ್ಚರಿಕೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ ಸಮುದಾಯದ ಸರ್ಕಾರಿ ನೌಕರರಿಗೆ ಉಗ್ರ ಸಂಘಟನೆಗಳಿಂದ ಮತ್ತೊಮ್ಮೆ ಬೆದರಿಕೆ ಬಂದಿದೆ. ಲಷ್ಕರ್-ಎ-ತಯ್ಬಾ ಜೊತೆ ಸಂಪರ್ಕ ಹೊಂದಿರುವುದಾಗಿ ಹೇಳಲಾಗಿರುವ ಯುನೈಟೆಡ್ ಲಿಬರೇಷನ್ ಕೌನ್ಸಿಲ್, ಪ್ರಧಾನಮಂತ್ರಿ ಪ್ಯಾಕೇಜ್ ಅಡಿ ನೇಮಕಗೊಂಡಿರುವ ಕಾಶ್ಮೀರಿ ಪಂಡಿತ ನೌಕರರಿಗೆ ಕೆಲಸ ತೊರೆಯುವಂತೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.

ಕೆಲಸ ಮುಂದುವರಿಸಿದರೆ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರ ಸುರಕ್ಷತೆ ಕುರಿತು ಆತಂಕ ಮತ್ತಷ್ಟು ಹೆಚ್ಚಾಗಿದೆ.

ಮಾಹಿತಿಯ ಪ್ರಕಾರ, ಸುಮಾರು 7 ಸಾವಿರ ಕಾಶ್ಮೀರಿ ಪಂಡಿತ ಉದ್ಯೋಗಿಗಳು ಉಗ್ರರ ಬೆದರಿಕೆಯ ವ್ಯಾಪ್ತಿಯಲ್ಲಿದ್ದಾರೆ ಎನ್ನಲಾಗಿದೆ. ಉದ್ಯೋಗಿಗಳ ಮೊಬೈಲ್ ಸಂಖ್ಯೆ, ಮನೆ ವಿಳಾಸ ಹಾಗೂ ವಾಹನ ನೋಂದಣಿ ಸಂಖ್ಯೆಯಂತಹ ವೈಯಕ್ತಿಕ ಮಾಹಿತಿಯನ್ನು ಭಯೋತ್ಪಾದಕ ಸಂಘಟನೆ ಆನ್‌ಲೈನ್‌ನಲ್ಲಿ ಸೋರಿಕೆ ಮಾಡಿದೆ ಎಂದು ತಿಳಿದುಬಂದಿದೆ.

ಕೆಲವು ಬೆದರಿಕೆ ಪತ್ರಗಳು ಮೊದಲು ಡಾರ್ಕ್ ವೆಬ್‌ನಲ್ಲಿ ಕಾಣಿಸಿಕೊಂಡಿದ್ದು, ಬಳಿಕ ವಾಟ್ಸ್‌ಆ್ಯಪ್ ಮತ್ತು ಟೆಲಿಗ್ರಾಂ ಮೂಲಕ ಹರಿದಾಡಿವೆ ಎನ್ನಲಾಗಿದೆ. ಉದ್ಯೋಗಿಗಳ ವೈಯಕ್ತಿಕ ಮಾಹಿತಿಯ ಸೋರಿಕೆಯ ಮೂಲವನ್ನು ಪತ್ತೆಹಚ್ಚುವುದು ಹಾಗೂ ಇದರ ಹಿಂದೆ ಇರುವ ಜಾಲವನ್ನು ಬಯಲಿಗೆಳೆಯುವುದು ಭದ್ರತಾ ಸಂಸ್ಥೆಗಳಿಗೆ ಸವಾಲಾಗಿದೆ.

ಕಳೆದ ಒಂದು ತಿಂಗಳಲ್ಲಿ ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ಕನಿಷ್ಠ ಐದು ಬೆದರಿಕೆ ಪತ್ರಗಳು ಹೊರಬಂದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿವೆ.

ಸೆಪ್ಟೆಂಬರ್ 5ರಂದು ಹೊರಬಂದ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಪೊಲೀಸ್ ಸೈಬರ್ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಬೆದರಿಕೆ ಪತ್ರಗಳು ಮತ್ತು ವೈಯಕ್ತಿಕ ಮಾಹಿತಿಯ ಸೋರಿಕೆ ಕುರಿತು ತನಿಖೆ ಮುಂದುವರಿದಿದ್ದು, ಉದ್ಯೋಗಿಗಳ ಸುರಕ್ಷತೆ ಹಾಗೂ ಮಾಹಿತಿಯ ಮೂಲದ ಬಗ್ಗೆ ಭದ್ರತಾ ಸಂಸ್ಥೆಗಳು ಗಮನಹರಿಸಿವೆ.