Home Blog

ರಿವರ್ಸ್ ವೇಳೆ ವಿದ್ಯಾರ್ಥಿನಿಯರ ಮೇಲೆ ಹರಿದ ಥಾರ್: ವಿದ್ಯಾರ್ಥಿನಿ ಸಾವು, ಮೂವರ ಸ್ಥಿತಿ ಗಂಭೀರ

0

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹೀಂದ್ರಾ ಥಾರ್ ವಾಹನ ಹರಿದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅರಗಿನಮರ ಕ್ಯಾಂಪ್ ನಿವಾಸಿ ಭೂಮಿಕಾ (17) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಚಾಲಕ ರಿವರ್ಸ್ ತೆಗೆದುಕೊಳ್ಳುವಾಗ ನಿರ್ಲಕ್ಷ್ಯದಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರು ಸಂಚಾರ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗುಂಡ್ಯಹೊಳೆಯಲ್ಲಿ ದುರಂತ; ಸ್ನಾನಕ್ಕೆ ಹೋದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು

ಮಂಗಳೂರು: ಮಂಗಳೂರಿನ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಸಮೀಪದ ಗುಂಡ್ಯಹೊಳೆಯಲ್ಲಿ ಸಂಭವಿಸಿದ ದುರಂತದಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ನಾನಕ್ಕೆಂದು ನದಿಗೆ ತೆರಳಿದ್ದ ನಾಲ್ವರಲ್ಲಿ ಸುನೀತಾ (21) ಮತ್ತು ಅರ್ಪಿತಾ (15) ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಮೃತರು ಕುಟ್ರುಪ್ಪಾಡಿ ನಿವಾಸಿಗಳಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಚಿಕಿತ್ಸೆ ಫಲಿಸದೆ ಕಾಡಾನೆ ಸಾವು; ಗೋಪಿನಾಥಂ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಕಳವಳ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಕಾವೇರಿ ವನ್ಯಧಾಮದಲ್ಲಿ ಗಾಯಗೊಂಡಿದ್ದ ಗಂಡಾನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಕೆಲ ದಿನಗಳ ಹಿಂದೆ ಜಲಾಶಯಕ್ಕೆ ನೀರು ಕುಡಿಯಲು ಬಂದಿದ್ದ ವೇಳೆ ಕಾಡಾನೆ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿಕಿತ್ಸೆಯನ್ನು ಆರಂಭಿಸಿದ್ದರು.

ಗಾಯಗೊಂಡಿದ್ದ ಆನೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆ ನಿರಂತರ ನಿಗಾವಹಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಂಡಾನೆ ಕೊನೆಯುಸಿರೆಳೆದಿದೆ. ಕಾಡಾನೆಯ ಸಾವಿನಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರಲ್ಲಿ ಬೇಸರ ಮೂಡಿಸಿದೆ.

ಕಾಡಾನೆ ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಚಲನವಲನ ಹೆಚ್ಚಾಗಿರುವ ಹಿನ್ನೆಲೆ ಇಲಾಖೆ ಹೆಚ್ಚುವರಿ ನಿಗಾ ವಹಿಸಿದೆ.

ಹಂಟು ವೈರಸ್ ಆತಂಕ: ಸೋಂಕಿತ ಹಡಗಿನಲ್ಲಿ ಇಬ್ಬರು ಭಾರತೀಯರು

ನವದೆಹಲಿ: ಕೊರೋನಾ ಮಾದರಿಯ ಹಂಟು ವೈರಸ್ ಸೋಂಕು ಪತ್ತೆಯಾಗಿರುವ ಹಡಗಿನಲ್ಲಿ ಇಬ್ಬರು ಭಾರತೀಯ ಸಿಬ್ಬಂದಿ ಇದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆತಂಕ ಹೆಚ್ಚಾಗಿದೆ. ಅರ್ಜೆಂಟೀನಾದಿಂದ ಸ್ಪೇನ್‌ಗೆ ಪ್ರಯಾಣಿಸುತ್ತಿದ್ದ ನೌಕೆಯಲ್ಲಿ ಹಲವು ಪ್ರಯಾಣಿಕರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು.

150ಕ್ಕೂ ಹೆಚ್ಚು ಜನರಿದ್ದ ಹಡಗಿನಲ್ಲಿ ಮಧ್ಯದಲ್ಲೇ ಹಲವರು ಇಳಿದಿದ್ದು, ಉಳಿದವರಲ್ಲಿ ಎಂಟು ಮಂದಿಗೆ ಸೋಂಕಿನ ಶಂಕೆ ವ್ಯಕ್ತವಾಗಿತ್ತು. ಬಳಿಕ ಐದು ಮಂದಿಯಲ್ಲಿ ಹಂಟು ವೈರಸ್ ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದೇ ನೌಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಭಾರತೀಯರ ಆರೋಗ್ಯ ಸ್ಥಿತಿ ಕುರಿತು ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಮೇ 10ರಂದು ಹಡಗು ಸ್ಪೇನ್ ತಲುಪಿದ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಈ ನಡುವೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ರಾಷ್ಟ್ರೀಯ ನರವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ನವೀನ್ ಕುಮಾರ್ ಮಾತನಾಡಿ, “ಹಂಟು ವೈರಸ್ ಕೊರೋನಾವಿನಂತೆ ವ್ಯಕ್ತಿಯಿಂದ ವ್ಯಕ್ತಿಗೆ ವೇಗವಾಗಿ ಹರಡುವ ಸೋಂಕಲ್ಲ. ಸೋಂಕಿತ ದಂಶಕಗಳ ಮಲ, ಮೂತ್ರ ಅಥವಾ ಲಾಲಾರಸದ ಸಂಪರ್ಕದಿಂದ ಮಾತ್ರ ಹರಡುತ್ತದೆ” ಎಂದು ತಿಳಿಸಿದ್ದಾರೆ.

ಹಂಟು ವೈರಸ್ ಸಾಮಾನ್ಯವಾಗಿ ಇಲಿಗಳಂತಹ ದಂಶಕಗಳಿಂದ ಹರಡುವ ಸೋಂಕಾಗಿದ್ದು, ಗಂಭೀರ ಉಸಿರಾಟ ಸಮಸ್ಯೆಗೆ ಕಾರಣವಾಗಬಹುದು. ಜ್ವರ, ದಣಿವು, ಉಸಿರಾಟದ ತೊಂದರೆ, ಒಣ ಕೆಮ್ಮು, ಸ್ನಾಯು ನೋವು, ವಾಂತಿ ಮತ್ತು ಅತಿಸಾರ ಪ್ರಮುಖ ಲಕ್ಷಣಗಳಾಗಿವೆ. ಸೋಂಕು ತೀವ್ರವಾದರೆ ಶ್ವಾಸಕೋಶ ಹಾಗೂ ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಈಜಲು ಹೋಗಿದ್ದ ಸ್ನೇಹಿತರಿಗೆ ಶಾಕ್: ಇಬ್ಬರು ಯುವಕರ ದಾರುಣ ಅಂತ್ಯ

ಆನೇಕಲ್: ಸ್ನೇಹಿತರ ಜೊತೆ ಈಜಲು ಕೆರೆಗೆ ಇಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶಾಹಪುರ ಮೂಲದ ಆನಂದ್ ಮತ್ತು ಅಂಬರೀಶ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ನಾಲ್ವರು ಸ್ನೇಹಿತರು ಕೆರೆಯಲ್ಲಿ ಈಜಲು ತೆರಳಿದ್ದು, ಈಜು ಬಾರದ ಕಾರಣ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಬಳಿಕ ಸ್ಥಳಕ್ಕೆ ಆನೇಕಲ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ಆದರೆ ಸಂಜೆ ವೇಳೆಗೆ ಕತ್ತಲೆ ಆವರಿಸಿದ ಕಾರಣ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮೃತದೇಹಗಳ ಪತ್ತೆಗೆ ನಾಳೆ ಬೆಳಗ್ಗೆ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಉಡುಪಿಯಲ್ಲಿ ಬಾರ್-ರೆಸ್ಟೋರೆಂಟ್‌ಗಳಿಗೆ ಗ್ಯಾಸ್ ಕೊರತೆ? ವ್ಯಾಪಾರಿಗಳ ಆಕ್ರೋಶ

ಉಡುಪಿ: ಜಿಲ್ಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಅಡುಗೆ ಅನಿಲ ಪೂರೈಕೆ ಸಮಸ್ಯೆ ತೀವ್ರಗೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಆಕ್ರೋಶ ವ್ಯಕ್ತಪಡಿಸಿದೆ.

ಕಳೆದ ಎರಡು ತಿಂಗಳಿನಿಂದ ಸಮರ್ಪಕ ಗ್ಯಾಸ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿದ ಅಸೋಸಿಯೇಶನ್ ಸದಸ್ಯರು, ಉಡುಪಿಯ ಶಾರದಾ ಹೋಟೆಲ್‌ನಲ್ಲಿ ಸಭೆ ನಡೆಸಿ ಜಿಲ್ಲಾಡಳಿತದ ಗಮನ ಸೆಳೆಯಲು ಮುಂದಾದರು.

ಸಭೆಯಲ್ಲಿ ಮಾತನಾಡಿದ ವ್ಯಾಪಾರಿಗಳು, ಕೇಟರಿಂಗ್ ಹಾಗೂ ಕಾಳಸಂತೆಯಲ್ಲಿ ಗ್ಯಾಸ್ ಸುಲಭವಾಗಿ ಲಭ್ಯವಿದ್ದರೂ, ಸರ್ಕಾರಕ್ಕೆ ಜಿಎಸ್‌ಟಿ ಹಾಗೂ ಅಬಕಾರಿ ತೆರಿಗೆ ಪಾವತಿಸುವ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಮಾತ್ರ ಸಮರ್ಪಕ ಪೂರೈಕೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಧ್ಯಪ್ರಾಚ್ಯ ಯುದ್ಧದ ನೆಪವಿಟ್ಟು ಗ್ಯಾಸ್ ಪೂರೈಕೆ ಕಡಿತ ಮಾಡಲಾಗಿದೆ ಎಂದು ಆರೋಪಿಸಿದ ಸದಸ್ಯರು, ಗ್ಯಾಸ್ ವಿತರಕ ಏಜೆನ್ಸಿಗಳ ಮೇಲೆ ಸಮಗ್ರ ಆಡಿಟ್ ನಡೆಸುವಂತೆ ಆಗ್ರಹಿಸಿದರು.

ಪ್ರತಿ ತಿಂಗಳು 30ರಿಂದ 40 ಸಾವಿರ ರೂಪಾಯಿ ಜಿಎಸ್‌ಟಿ ಪಾವತಿಸುತ್ತಿದ್ದರೂ, ಮೂಲಭೂತ ಅಗತ್ಯವಾದ ಅಡುಗೆ ಅನಿಲಕ್ಕಾಗಿ ಸಂಕಷ್ಟ ಎದುರಿಸುವಂತಾಗಿದೆ ಎಂದು ವ್ಯಾಪಾರಿಗಳು ದೂರಿದರು. ಬಾರ್ ಹಾಗೂ ವೆಜ್ ರೆಸ್ಟೋರೆಂಟ್‌ಗಳಿಗೆ ಆದ್ಯತೆ ಮೇರೆಗೆ ಗ್ಯಾಸ್ ಪೂರೈಕೆ ಮಾಡಬೇಕು. ಇಲ್ಲವಾದರೆ ವ್ಯವಹಾರ ನಿರ್ವಹಣೆ ಕಷ್ಟವಾಗಲಿದೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಅಸೋಸಿಯೇಶನ್ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.

121 ಶಾಸಕರ ಬೆಂಬಲದೊಂದಿಗೆ ಟಿವಿಕೆ ಸರ್ಕಾರಕ್ಕೆ ಗ್ರೀನ್ ಸಿಗ್ನಲ್! ನಾಳೆ ವಿಜಯ್ ಪ್ರಮಾಣವಚನ

ಚೆನ್ನೈ: ತಮಿಳುನಾಡಿನಲ್ಲಿ ಹೊಸ ರಾಜಕೀಯ ಅಧ್ಯಾಯಕ್ಕೆ ವೇದಿಕೆ ಸಿದ್ಧವಾಗಿದ್ದು, ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಬಹುಮತ ಸಾಬೀತುಪಡಿಸಿರುವ ಹಿನ್ನೆಲೆಯಲ್ಲಿ ವಿಜಯ್ ನಾಳೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್, 121 ಶಾಸಕರ ಬೆಂಬಲ ಪತ್ರದೊಂದಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಅಗತ್ಯ ಬಹುಮತವನ್ನು ಸಾಬೀತುಪಡಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ.

234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅವಶ್ಯಕತೆ ಇದ್ದು, ಟಿವಿಕೆ 108 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ ಹಾಗೂ ಸಿಪಿಐ(ಎಂ) ಪಕ್ಷಗಳ ಬೆಂಬಲದೊಂದಿಗೆ ಒಟ್ಟು ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಜ್ಯಪಾಲರು ವಿಜಯ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಕಾರ್ಯಕ್ರಮಕ್ಕಾಗಿ ಈಗಾಗಲೇ ಭಾರೀ ಸಿದ್ಧತೆಗಳು ಆರಂಭಗೊಂಡಿವೆ.

ನಟನಾಗಿ ಜನಪ್ರಿಯತೆ ಗಳಿಸಿದ್ದ ವಿಜಯ್ ಇದೀಗ ರಾಜಕೀಯ ಕ್ಷೇತ್ರದಲ್ಲೂ ಮಹತ್ವದ ಸಾಧನೆ ಮಾಡಿದ್ದು, ಟಿವಿಕೆ ಸರ್ಕಾರದ ನೇತೃತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ಆಡಳಿತ ಆರಂಭವಾಗಲಿದೆ.

ಸೂರ್ಯಕುಮಾರ್‌ಗೆ ಬಿಗ್‌ ಶಾಕ್‌ ಸಾಧ್ಯತೆ! ಟಿ20 ನಾಯಕತ್ವ ಬದಲಾವಣೆಗೆ ಬಿಸಿಸಿಐ ಚಿಂತನೆ

ಭಾರತ ಟಿ20 ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದ್ದು, ಹಾಲಿ ನಾಯಕ ಸೂರ್ಯಕುಮಾರ್ ಯಾದವ್ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ನೇಮಕ ಮಾಡುವ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ ಎನ್ನಲಾಗಿದೆ.

2026ರ ಟಿ20 ವಿಶ್ವಕಪ್ ಗೆದ್ದಿದ್ದರೂ, ಸೂರ್ಯಕುಮಾರ್ ಯಾದವ್ ಅವರ ಇತ್ತೀಚಿನ ಕಳಪೆ ಫಾರ್ಮ್ ಮತ್ತು ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿರುವ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಿಂದ ಆಯ್ಕೆ ಸಮಿತಿ ಮೆಚ್ಚುಗೆಯಾಗಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ, ಐಪಿಎಲ್ ಬಳಿಕ ನಡೆಯಲಿರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಗಳಿಗೆ ಯುವ ಆಟಗಾರರನ್ನು ಒಳಗೊಂಡ ಹೊಸ ತಂಡ ರಚನೆಗೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಇತ್ತೀಚಿನ ಐಪಿಎಲ್ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿರುವ ಸೂರ್ಯಕುಮಾರ್ ಯಾದವ್ 10 ಪಂದ್ಯಗಳಲ್ಲಿ ಕೇವಲ 195 ರನ್ ಗಳಿಸಿದ್ದು, ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಜೊತೆಗೆ ಅವರು ಮಣಿಕಟ್ಟು ನೋವಿನಿಂದ ಬಳಲುತ್ತಿದ್ದು, ಅಸ್ವಸ್ಥತೆಯ ನಡುವೆಯೇ ಪಂದ್ಯಗಳಲ್ಲಿ ಆಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್ ಮೊದಲ ಏಳು ಪಂದ್ಯಗಳಲ್ಲಿ ಆರು ಗೆಲುವು ಸಾಧಿಸಿದ್ದು, ಅವರು ಒಂಬತ್ತು ಇನ್ನಿಂಗ್ಸ್‌ಗಳಲ್ಲಿ 333 ರನ್ ಗಳಿಸಿ ಗಮನ ಸೆಳೆದಿದ್ದಾರೆ.

ರೋಹಿತ್ ಶರ್ಮಾ ನಿವೃತ್ತಿಯಾದ ಬಳಿಕ ಭಾರತ ಟಿ20 ತಂಡದ ನಾಯಕತ್ವ ವಹಿಸಿಕೊಂಡ ಸೂರ್ಯಕುಮಾರ್ ಯಾದವ್ ಇದುವರೆಗೆ ಯಾವುದೇ ಸರಣಿ ಸೋತಿಲ್ಲ. ಆದರೆ ಶ್ರೇಯಸ್ ಅಯ್ಯರ್ 2023ರ ಡಿಸೆಂಬರ್ ಬಳಿಕ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷವಾಗಿದೆ.

ಮೇ.10 ರಂದು ಮೆಟ್ರೋ ಸೇವೆಯಲ್ಲಿ ವ್ಯತ್ಯಯ! ಈ ಮಾರ್ಗದಲ್ಲಿ 2 ಗಂಟೆ ರೈಲು ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು: ಮೇ 10ರಂದು ಬೆಳಗ್ಗೆ 7ರಿಂದ 9 ಗಂಟೆಯವರೆಗೆ ನೇರಳೆ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಸೆಂಟ್ರಲ್ ಕಾಲೇಜು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೆಟ್ರೋ ನಿಲ್ದಾಣದಿಂದ ಕಬ್ಬನ್ ಪಾರ್ಕ್ ನಿಲ್ದಾಣದವರೆಗೆ ಮೆಟ್ರೋ ಸೇವೆ ಎರಡು ಗಂಟೆಗಳ ಕಾಲ ಸ್ಥಗಿತಗೊಳ್ಳಲಿದೆ.

ಆದರೆ ಚಲ್ಲಘಟ್ಟ–ವಿಜಯನಗರ, ಎಂಜಿ ರಸ್ತೆ–ವೈಟ್‌ಫೀಲ್ಡ್, ಮಾದಾವರ–ಸಿಲ್ಕ್ ಇನ್‌ಸ್ಟಿಟ್ಯೂಟ್ ಹಾಗೂ ಆರ್‌ವಿ ರಸ್ತೆ–ಬೊಮ್ಮಸಂದ್ರ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್‌ ಸ್ಪಷ್ಟಪಡಿಸಿದೆ.

ಬೆಳಗ್ಗೆ 9 ಗಂಟೆಯ ನಂತರ ಸ್ಥಗಿತಗೊಂಡ ನಿಲ್ದಾಣಗಳಲ್ಲಿಯೂ ಮೆಟ್ರೋ ಸೇವೆ ಪುನರಾರಂಭವಾಗಲಿದೆ.

ಪ್ರಯಾಣಿಕರು ಈ ತಾತ್ಕಾಲಿಕ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಪೂರ್ವಯೋಜನೆ ಮಾಡಿಕೊಳ್ಳುವಂತೆ ಬಿಎಂಆರ್‌ಸಿಎಲ್‌ ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ! ಯಾವ್ಯಾವ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ!?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದರೂ, ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 11ರವರೆಗೆ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ತೀವ್ರ ಬಿಸಿಲು ಕೂಡ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ವರುಣನ ಅಬ್ಬರ ಕಂಡುಬರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಇನ್ನೊಂದೆಡೆ ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗಿದೆ. ನಗರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 10ರಿಂದ 16 ಕಿಲೋ ಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

error: Content is protected !!