ಬೆಂಗಳೂರು: ಇಸ್ಲಾಂ ಧರ್ಮ ಶ್ರೇಷ್ಠ ಎಂಬ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರ 6ನೇ ಗ್ಯಾರಂಟಿಯನ್ನು ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ’ ಎಂದು ಲೇವಡಿ ಮಾಡಿದ್ದಾರೆ ಎಂದು ಅಶೋಕ್ ಟೀಕಿಸಿದ್ದಾರೆ.
ರಾಯರೆಡ್ಡಿ ಹೇಳಿಕೆಗೆ ಸಂಬಂಧಿಸಿದಂತೆ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಆರ್. ಅಶೋಕ್, ‘ಹಿಂದೂಗಳ ಮತ ಬೇಕಾದಾಗ ದೇವಸ್ಥಾನ ಸುತ್ತುವ ಸಿಎಂ ಶಿವಕುಮಾರ್, ಅಧಿಕಾರ ಸಿಕ್ಕ ಬಳಿಕ ತಮ್ಮದೇ ಸಂಪುಟದ ಸಚಿವರು ಹಿಂದೂ ಧರ್ಮದ ಬಗ್ಗೆ ಹೇಳಿಕೆ ನೀಡಿದಾಗ ಮೌನ ವಹಿಸುತ್ತಿರುವುದೇಕೆ’ ಎಂದು ಪ್ರಶ್ನಿಸಿದ್ದಾರೆ.
ಸಚಿವ ಬಸವರಾಜ ರಾಯರೆಡ್ಡಿ ಅವರು ‘ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ’ ಎಂದು ನೀಡಿರುವ ಹೇಳಿಕೆ ರಾಜ್ಯದ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಧರ್ಮದ ಬಗ್ಗೆ ವೈಯಕ್ತಿಕ ನಂಬಿಕೆ ಇರಬಹುದಾದರೂ, ಸಚಿವ ಸ್ಥಾನದಲ್ಲಿದ್ದುಕೊಂಡು ಹಿಂದೂ ಸಂಪ್ರದಾಯ ಹಾಗೂ ಮಠ-ಮಾನ್ಯಗಳ ಬಗ್ಗೆ ಈ ರೀತಿ ಮಾತನಾಡಿರುವುದು ಸರಿಯಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ರಾಯರೆಡ್ಡಿ ಹೇಳಿಕೆಗಿಂತಲೂ ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೌನ ವಹಿಸಿರುವುದೇ ಹೆಚ್ಚು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅಶೋಕ್ ಅಭಿಪ್ರಾಯಪಟ್ಟಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಧೋರಣೆಯನ್ನು ತೋರಿಸುತ್ತದೆ ಎಂದೂ ಅವರು ಆರೋಪಿಸಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಯರೆಡ್ಡಿ ಹೇಳಿಕೆಯನ್ನು ಬಹಿರಂಗವಾಗಿ ಖಂಡಿಸಬೇಕು ಹಾಗೂ ಸಾರ್ವಜನಿಕ ಕ್ಷಮೆಯಾಚನೆ ಮಾಡಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ. ಇದಕ್ಕೆ ಸಚಿವರು ಸಿದ್ಧರಿಲ್ಲದಿದ್ದರೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ. ಈ ಎರಡನ್ನೂ ಮಾಡದಿದ್ದರೆ ಮುಖ್ಯಮಂತ್ರಿಗಳ ಮೌನವೇ ಉತ್ತರವಾಗಲಿದೆ ಎಂದು ಅಶೋಕ್ ಹೇಳಿದ್ದಾರೆ.

