ಗಜೇಂದ್ರಗಡ: ಪಟ್ಟಣದ ಜವಳಿ ಪ್ಲಾಟ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಪೈಪ್ ಹಾಗೂ ಕಿರಾಣಿ ಸಾಮಗ್ರಿ ಸಂಗ್ರಹಿಸಿಟ್ಟಿದ್ದ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಮಹೇಶ್ ಪಾಟೀಲ್ ಅವರಿಗೆ ಸೇರಿದ ಗೋಡೌನ್ನಲ್ಲಿ ಪ್ಲಾಸ್ಟಿಕ್ ಪೈಪ್ಗಳು ಹಾಗೂ ಕಿರಾಣಿ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಗೋಡೌನ್ನಲ್ಲಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳು ಹಾಗೂ ಪೈಪ್ಗಳಿಗೆ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲೇ ಇಡೀ ಗೋಡೌನ್ಗೆ ವ್ಯಾಪಿಸಿದೆ.
ಬೆಂಕಿಯ ತೀವ್ರತೆಗೆ ದಟ್ಟ ಕಪ್ಪು ಹೊಗೆ ಆವರಿಸಿದ್ದು, ಇಡೀ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗೋಡೌನ್ನಲ್ಲಿದ್ದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಕಿರಾಣಿ ಸ್ಟಾಕ್ ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ಮತ್ತಷ್ಟು ಪ್ರದೇಶಕ್ಕೆ ವ್ಯಾಪಿಸುವುದನ್ನು ತಡೆಯಲಾಗಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಸೇರಿದಂತೆ ವಿವಿಧ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಯುತ್ತಿದ್ದು, ಬೆಂಕಿ ಅವಘಡದ ನಿಖರ ಕಾರಣ ತನಿಖೆಯಿಂದಷ್ಟೇ ಹೊರಬರಬೇಕಿದೆ.

