ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಯನ್ನು ನಾಲ್ಕೈದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಗರದ ತಮ್ಮ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಘೋಷಣೆಯಾದ ಬಳಿಕ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರಥಮ ಸಭೆ ನಡೆಸಲಾಗಿದೆ ಎಂದು ಹೇಳಿದರು. ಎರಡು ದಿನಗಳ ರಜೆಯ ಬಳಿಕ ಈಗ ಪ್ರಕ್ರಿಯೆ ಮತ್ತೆ ಆರಂಭಗೊಂಡಿದ್ದು, ಒಳ ಮೀಸಲಾತಿ ಸಮಸ್ಯೆ ಪರಿಹಾರಗೊಂಡಿರುವುದರಿಂದ ನೇಮಕಾತಿಗೆ ಅಡಚಣೆಗಳಿಲ್ಲ ಎಂದು ಸ್ಪಷ್ಟಪಡಿಸಿದರು.
ಶಿಕ್ಷಕರ ನೇಮಕಾತಿಗಾಗಿ ಸಿಇಟಿ ಪರೀಕ್ಷೆಯನ್ನು ಸಾಧ್ಯವಾದಷ್ಟು ಬೇಗ ನಡೆಸಲಾಗುವುದು. ಕಳೆದ ವರ್ಷವೇ ಆರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶವಿತ್ತು. ಆದರೆ ಈಗ ಒಳ ಮೀಸಲಾತಿ ಸಮಸ್ಯೆ ನಿವಾರಣೆಯಾಗಿರುವ ಹಿನ್ನೆಲೆಯಲ್ಲಿ ನಾಲ್ಕೈದು ತಿಂಗಳೊಳಗೆ ನೇಮಕಾತಿ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಜೂನ್ ತಿಂಗಳಲ್ಲೇ ನೇಮಕಾತಿ ಪ್ರಾರಂಭಿಸುವ ಯೋಚನೆ ಇತ್ತು, ನಂತರ ಜುಲೈಗೆ ಮುಂದೂಡಲಾಯಿತು. ಆದರೆ ಅಲ್ಪ ಅವಧಿಯಲ್ಲಿ ಎಲ್ಲವನ್ನು ಮುಗಿಸುವುದು ಸಾಧ್ಯವಿಲ್ಲ. ಆದ್ದರಿಂದ ಸಾಧ್ಯವಾದಷ್ಟು ಬೇಗ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿ ನಡೆಯಬೇಕಿರುವುದು ಶಿಕ್ಷಣ ಇಲಾಖೆಯಲ್ಲೇ ಆಗಿದ್ದು, ಅಭ್ಯರ್ಥಿಗಳ ಕಷ್ಟ ನಮಗೆ ತಿಳಿದಿದೆ. ಕೆಲವರು ಸರ್ಕಾರದ ಬಳಿ ಹಣದ ಕೊರತೆ ಇದೆ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಅವರು ಟೀಕಿಸಿದರು.
ಇನ್ನು, ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಕೋರ್ಟ್ನಲ್ಲಿ ವ್ಯಾಜ್ಯಗಳು ಇರುವುದರಿಂದ ಪ್ರಕ್ರಿಯೆ ವಿಳಂಬವಾಗುತ್ತಿದೆ. ಟಿಇಟಿ ಪರೀಕ್ಷೆ ಈಗಾಗಲೇ ಮುಗಿದಿದ್ದು, ಮುಂದಿನ ಹಂತವಾಗಿ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ. ಒಳ ಮೀಸಲಾತಿ ಘೋಷಣೆಯಾದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಇದೀಗ ಸುಗಮವಾಗಿದೆ ಎಂದು ಸಚಿವರು ವಿವರಿಸಿದರು.

