ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಹಿರಿಯ ಹಾಗೂ ಅನುಭವಿ ರಾಜಕಾರಣಿ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲೇಬೇಕು. ಅವರನ್ನು ಸಚಿವ ಸಂಪುಟದಿಂದ ಹೊರಗಿಡುವುದು ಉತ್ತರ ಕರ್ನಾಟಕ ಭಾಗಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಗದಗ-ಬೆಟಗೇರಿ ಶಹರ ಮಹಿಳಾ ಕಾಂಗ್ರೆಸ್ ಹೇಳಿದೆ.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗದಗ-ಬೆಟಗೇರಿ ಶಹರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ ಅಕ್ಕಿ, ಮುಖ್ಯಮಂತ್ರಿ ಸ್ಥಾನ ನಿಭಾಯಿಸುವ ಸಾಮರ್ಥ್ಯ ಹೊಂದಿರುವ ಎಚ್.ಕೆ. ಪಾಟೀಲ ಅವರಿಗೆ ಮೊದಲ ಹಂತದ ಸಚಿವ ಸಂಪುಟದಲ್ಲಿಯೇ ಸ್ಥಾನ ಸಿಗಬೇಕಿತ್ತು. ಆದರೆ ಅವರನ್ನು ಕಡೆಗಣಿಸಲಾಗಿದೆ. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಎಚ್.ಕೆ. ಪಾಟೀಲ ಅವರು ದಿಟ್ಟ, ಪ್ರಾಮಾಣಿಕ, ಕಳಂಕರಹಿತ ಹಾಗೂ ರಾಜ್ಯದ ಹಿರಿಯ ನಾಯಕರಾಗಿದ್ದು, ಪಕ್ಷದ ಸಂಘಟನೆ ಮತ್ತು ಆಡಳಿತ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಇಂತಹ ನಾಯಕರನ್ನು ಸಂಪುಟದಿಂದ ಹೊರಗಿಡುವುದು ಕಾಂಗ್ರೆಸ್ ಕಾರ್ಯಕರ್ತರಿಗೂ ನಿರಾಸೆ ಮೂಡಿಸಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ ಮಾತನಾಡಿ, ಗದಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪರಿಚಯಿಸುವ ಮೂಲಕ ಎಚ್.ಕೆ. ಪಾಟೀಲ ಅವರು ಜನಪರ ಆಡಳಿತದ ಮಾದರಿ ನಿರ್ಮಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿರುವ ಅವರು ಸಚಿವ ಸ್ಥಾನಕ್ಕೆ ಸಂಪೂರ್ಣ ಅರ್ಹರು ಎಂದು ಹೇಳಿದರು.
ರಾಜ್ಯದ ಅಭಿವೃದ್ಧಿಗೆ ಅವರ ಅನುಭವ ಮತ್ತು ದೂರದೃಷ್ಟಿಯ ನಾಯಕತ್ವ ಅಗತ್ಯವಿದೆ. ಹೀಗಾಗಿ ಸಚಿವ ಸ್ಥಾನ ಮಾತ್ರವಲ್ಲದೆ ಉಪಮುಖ್ಯಮಂತ್ರಿ ಹುದ್ದೆಯನ್ನೂ ನೀಡುವ ಮೂಲಕ ಗೌರವಿಸಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ದ್ರಾಕ್ಷಾಯಿಣಿ ಹಾಸಿಲಕರ, ಮೀನಾಕ್ಷಿ ಬೆನಕಣ್ಣವರ, ವೀಣಾ ಕಟ್ನಳ್ಳಿ, ಲಕ್ಷ್ಮೀ ಸಿದ್ದಮನಹಳ್ಳಿ, ಮುಸ್ಕಾನ್ ಸಯ್ಯದ್, ಯಲ್ಲಮ್ಮ ಜಡಿ, ರುದ್ರಮ್ಮ ಕೆರಕಲಮಟ್ಟಿ, ಲತಾ ಗೊಳಗೊಳಕಿ, ವಾಣಿ ಹಿರೇಮಠ ಸೇರಿದಂತೆ ಮಹಿಳಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


