Home Blog

ರಾಜ್ಯದಲ್ಲಿ ನಕಲಿ ಪನೀರ್ʼಗೆ ಬ್ರೇಕ್; ಒಂದು ವರ್ಷ ಮಾರಾಟ ನಿಷೇಧಿಸಿ ಸರ್ಕಾರ ಆದೇಶ

0

ಬೆಂಗಳೂರು: ರಾಜ್ಯಾದ್ಯಂತ ‘ಪನೀರ್’ ಹೆಸರಿನಲ್ಲಿ ಮಾರಾಟವಾಗುತ್ತಿರುವ ಕೃತಕ (ಅನಲಾಗ್) ಪನೀರ್‌ನ ತಯಾರಿಕೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗ ಈ ನಿರ್ಧಾರ ಕೈಗೊಂಡಿದೆ.

ಅನಲಾಗ್ ಅಥವಾ ನಾನ್-ಡೈರಿ ಪನೀರ್‌ನ ಉತ್ಪಾದನೆ, ಸಂಸ್ಕರಣೆ, ಪ್ಯಾಕಿಂಗ್, ಸಂಗ್ರಹಣೆ, ವಿತರಣೆ, ಸಾಗಣೆ, ಸಗಟು ಹಾಗೂ ಚಿಲ್ಲರೆ ಮಾರಾಟ, ಪ್ರದರ್ಶನ ಮತ್ತು ಸರ್ಕಾರಿ ಪೂರೈಕೆಯನ್ನು ಕರ್ನಾಟಕ ರಾಜ್ಯಾದ್ಯಂತ ಒಂದು ವರ್ಷದ ಮಟ್ಟಿಗೆ ನಿಷೇಧಿಸಿ ಆಗಸ್ಟ್ 17ರಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಕಲಂ 30(2)(a), 18 ಮತ್ತು 29ರ ಅಡಿಯಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ. ಇದೇ ಕಾಯ್ದೆಯ 2011ರ ನಿಯಮ, Regulation 2.1.16ರ ಪ್ರಕಾರ ಪನೀರ್ ಎಂಬುದು ಹಾಲಿನಿಂದ ತಯಾರಿಸಲಾದ ಪ್ರಮಾಣೀಕೃತ ಆಹಾರ ಉತ್ಪನ್ನವಾಗಿದ್ದು, ಹಾಲಿನ ಕೊಬ್ಬು ಅದರ ಪ್ರಮುಖ ಅಂಶ. ಇದರ ಬದಲಿಗೆ ಅಥವಾ ಜೊತೆಗೆ ಸಸ್ಯಜನ್ಯ ಎಣ್ಣೆ, ಸಸ್ಯಜನ್ಯ ಕೊಬ್ಬು ಅಥವಾ ಇತರೆ ನಾನ್-ಡೈರಿ ಪದಾರ್ಥಗಳ ಬಳಕೆಗೆ ಅವಕಾಶವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಸಂಗ್ರಹಿಸಲಾದ ಹಲವು ಪನೀರ್ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಯಾವುದೇ ಕಲಬೆರಕೆ ಪತ್ತೆಯಾಗಿಲ್ಲ. ಆದರೆ ಕಲಬೆರಕೆ ಇಲ್ಲದಿದ್ದರೂ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಉತ್ಪನ್ನಗಳ ಬಳಕೆ, ಸಂಗ್ರಹಣೆ, ಪೂರೈಕೆ, ಮಾರಾಟ ಅಥವಾ ಸಾಗಣೆಯನ್ನು ನಿಷೇಧಿಸಲಾಗಿದೆ ಎಂದು ಇಲಾಖೆ ಹೇಳಿದೆ.

ಹಾಲಿನ ಕೊಬ್ಬು ಅಥವಾ ಹಾಲಿನ ಘನಾಂಶವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಸಸ್ಯಜನ್ಯ ಎಣ್ಣೆ, ಸಸ್ಯಜನ್ಯ ಕೊಬ್ಬು ಅಥವಾ ಇತರೆ ನಾನ್-ಡೈರಿ ಪದಾರ್ಥಗಳಿಂದ ಬದಲಾಯಿಸಿ ಪನೀರ್‌ನಂತೆ ತಯಾರಿಸಲಾದ ಉತ್ಪನ್ನವನ್ನೇ ಅನಲಾಗ್ ಅಥವಾ ನಾನ್-ಡೈರಿ ಪನೀರ್ ಎಂದು ಪರಿಗಣಿಸಲಾಗುತ್ತದೆ. ಇಂತಹ ಉತ್ಪನ್ನಗಳನ್ನು ಪನೀರ್ ಎಂಬ ಹೆಸರಿನಲ್ಲಿ ಮಾರಾಟ ಮಾಡುವಂತಿಲ್ಲ ಅಥವಾ ಗ್ರಾಹಕರಿಗೆ ಪನೀರ್ ಎಂದು ಬಿಂಬಿಸುವಂತಿಲ್ಲ ಎಂದು ಇಲಾಖೆ ತಿಳಿಸಿದೆ.

ಈ ನಿಷೇಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನಿಗದಿಪಡಿಸದ ಮತ್ತು ಪ್ರಮಾಣೀಕರಿಸದ ಡೈರಿ ಅನಲಾಗ್ ಉತ್ಪನ್ನಗಳಿಗೆ ಮಾತ್ರ ಅನ್ವಯಿಸುತ್ತದೆ. ಈಗಾಗಲೇ ಪ್ರತ್ಯೇಕ ಮಾನದಂಡ ಹೊಂದಿರುವ Frozen Dessert, Processed Cheese ಮತ್ತು Mixed Fat Spread ನಂತಹ ಪ್ರಮಾಣೀಕೃತ ಉತ್ಪನ್ನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಯಾವುದೇ ಆಹಾರ ವ್ಯವಹಾರ ಸಂಸ್ಥೆ ಕೃತಕ (ಅನಲಾಗ್) ಪನೀರ್ ಅನ್ನು ಇತರೆ ಆಹಾರ ಉತ್ಪನ್ನ ಅಥವಾ ಪದಾರ್ಥ ತಯಾರಿಕೆಯಲ್ಲಿ ಬಳಸುವುದು, ಸಂಗ್ರಹಿಸುವುದು, ಪೂರೈಸುವುದು ಅಥವಾ ಮಾರಾಟ ಮಾಡುವುದನ್ನೂ ನಿಷೇಧಿಸಲಾಗಿದೆ. ಆದೇಶದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತೆ ವಿಭಾಗದ ಆಯುಕ್ತರು ತಿಳಿಸಿದ್ದಾರೆ. ಸಾರ್ವಜನಿಕರು ಮತ್ತು ಆಹಾರ ವ್ಯವಹಾರ ನಿರ್ವಾಹಕರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಇಲಾಖೆ ಸೂಚಿಸಿದೆ.

ಬಿ ಟು ಎ ಖಾತಾ ಪರಿವರ್ತನೆಗೆ ನಾಳೆಯೇ ಕೊನೆ: ಅವಧಿ ವಿಸ್ತರಣೆ ಇಲ್ಲ, 70 ಸಾವಿರ ಅರ್ಜಿ ಮಾತ್ರ ಸಲ್ಲಿಕೆ

0

ಬೆಂಗಳೂರು: ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡಿಕೊಳ್ಳಲು ಅರ್ಜಿ ಸಲ್ಲಿಸುವ ಗಡುವು ನಾಳೆ, ಆಗಸ್ಟ್ 23ಕ್ಕೆ ಮುಕ್ತಾಯವಾಗಲಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಸ್ಪಷ್ಟಪಡಿಸಿದ್ದಾರೆ.

ಎ ಖಾತಾ ಪರಿವರ್ತನೆಗೆ ಇದುವರೆಗೆ ಸುಮಾರು 70 ಸಾವಿರ ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ. ಬೆಂಗಳೂರಿನಲ್ಲಿ ಸುಮಾರು ಏಳೂವರೆ ಲಕ್ಷ ಬಿ ಖಾತಾ ಆಸ್ತಿಗಳಿದ್ದರೂ, ಅರ್ಜಿ ಸಲ್ಲಿಕೆಗೆ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಸುಮಾರು 20 ಸಾವಿರ ಅರ್ಜಿಗಳಿಗೆ ಈಗಾಗಲೇ ಎ ಖಾತಾ ಮಂಜೂರಾಗಿದೆ ಎಂದು ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಮಾರ್ಗಸೂಚಿ ದರದ ಶೇ.2ರಷ್ಟು ಮೊತ್ತ ಪಾವತಿಸಿ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡಿಕೊಳ್ಳಲು ಸರ್ಕಾರ ಅವಕಾಶ ನೀಡಿತ್ತು. ಈ ವಿಶೇಷ ರಿಯಾಯಿತಿ ಯೋಜನೆಯಡಿ ಅರ್ಜಿ ಸಲ್ಲಿಸಲು ಭಾನುವಾರ ಕೊನೆಯ ಅವಕಾಶವಾಗಿದೆ.

ನಾಳೆಯೊಳಗೆ ಅರ್ಜಿ ಸಲ್ಲಿಸದಿದ್ದರೆ ಸರ್ಕಾರ ನೀಡಿರುವ ಡಿಸ್ಕೌಂಟ್ ಆಫರ್ ಮುಕ್ತಾಯವಾಗಲಿದೆ. ಹೀಗಾಗಿ ಬಿ ಖಾತಾ ಹೊಂದಿರುವ ಆಸ್ತಿ ಮಾಲೀಕರು ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಈ ಬಾರಿಯೂ ಬಿ ಟು ಎ ಖಾತಾ ಪರಿವರ್ತನೆಗೆ ಸಾರ್ವಜನಿಕರಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ. ಒಟ್ಟು ಬಿ ಖಾತಾ ಆಸ್ತಿಗಳ ಸಂಖ್ಯೆಗೆ ಹೋಲಿಸಿದರೆ ಅರ್ಜಿ ಸಲ್ಲಿಸಿರುವವರ ಸಂಖ್ಯೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನಿ ಗ್ಯಾಂಗ್ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದ ವ್ಯಕ್ತಿ ಪೊಲೀಸರ ವಶಕ್ಕೆ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಗಳ ಜೊತೆ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರ ನಗರ ಪೊಲೀಸರು, ಕೌಂಟರ್ ಇಂಟೆಲಿಜೆನ್ಸ್ ಸೆಲ್ ಹಾಗೂ ಸೆಂಟ್ರಲ್ ಐಬಿ ಅಧಿಕಾರಿಗಳಿಂದ ಬಂದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್(28) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಪಾಕಿಸ್ತಾನ ಮೂಲದ ಶಾಜದ್ ಭಟ್ಟಿ ನೆಟ್‌ವರ್ಕ್‌ಗೆ ಸಂಬಂಧಿಸಿದ ಗ್ಯಾಂಗ್‌ನ ಇನ್‌ಸ್ಟಾಗ್ರಾಂ ಖಾತೆಯೊಂದಿಗೆ ಆರೋಪಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ‘Hammadmemon333’ ಎಂಬ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಪಾಕಿಸ್ತಾನಿ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪ ಕೇಳಿಬಂದಿದೆ.

ಈ ಗ್ಯಾಂಗ್ ಗಣ್ಯ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಆರೋಪಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ತನ್ನ ಆಧಾರ್ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆಗಳನ್ನು ನೀಡಿ ಆ ಖಾತೆಗೆ ಲಾಗಿನ್ ಆಗಿದ್ದ ಎನ್ನಲಾಗಿದ್ದು, ಕಳೆದ ಎರಡು ವರ್ಷಗಳಿಂದ ಇನ್‌ಸ್ಟಾಗ್ರಾಂ ಮೂಲಕ ಪಾಕಿಸ್ತಾನಿ ಗ್ಯಾಂಗ್‌ನೊಂದಿಗೆ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಗ್ಯಾಂಗ್‌ನ ಸೂಚನೆಯಂತೆ ಕೇರಳ ಮತ್ತು ದೆಹಲಿಗೆ ತೆರಳಿ ತರಬೇತಿ ಪಡೆದು ಬಂದಿದ್ದ ಎಂಬ ಆರೋಪವೂ ಸೈಯದ್ ಅಬೂಬಕರ್ ವಿರುದ್ಧ ಕೇಳಿಬಂದಿದೆ.

ದೊಡ್ಡಬಳ್ಳಾಪುರದ ಇಸ್ಲಾಂಪುರದಲ್ಲಿರುವ ಮನೆಯಲ್ಲಿ ಇದ್ದ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಎಸಿ ರಿಪೇರಿ ಕೆಲಸ ಮಾಡಿಕೊಂಡಿದ್ದು, ಬೆಂಗಳೂರಿನ ಮಸೀದಿಯೊಂದರಲ್ಲಿ ಪಾಠ ಮಾಡುತ್ತಿದ್ದ ಎನ್ನಲಾಗಿದೆ.

ಬಂಧಿತನ ವಿರುದ್ಧ BNS ಸೆಕ್ಷನ್ 113(3) ಹಾಗೂ 197(2) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಪಾಕಿಸ್ತಾನಿ ನೆಟ್‌ವರ್ಕ್‌ನೊಂದಿಗೆ ಆತನ ಸಂಪರ್ಕ, ಸಾಮಾಜಿಕ ಜಾಲತಾಣದ ಚಟುವಟಿಕೆಗಳು ಹಾಗೂ ಇನ್ನಿತರರು ಈ ಜಾಲದಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ನಕಲಿ ಔಷಧ ಜಾಲ ಪತ್ತೆಗೆ SIT ಸಜ್ಜು: ರಾಮನಗರ ಪ್ರಕರಣದ ಸಂಪೂರ್ಣ ತನಿಖೆಗೆ ಗೃಹ ಇಲಾಖೆಗೆ ಮನವಿ

0

ಬೆಂಗಳೂರು: ರಾಮನಗರದ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧದ ಬೃಹತ್ ಜಾಲದ ತನಿಖೆ ದಿನಕ್ಕೊಂದು ಮೈಲಿಗಲ್ಲು ತಲುಪುತ್ತಿದೆ. ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಸರ್ಕಾರ ಎಸ್‌ಐಟಿ ರಚಿಸಿದ್ದರೂ, ಕಾನೂನು ತೊಡಕುಗಳು ಎದುರಾಗಿವೆ. ಹೀಗಾಗಿ ಔಷಧ ಸಂಬಂಧಿತ ಅಪರಾಧಗಳ ಸಂಪೂರ್ಣ ತನಿಖೆಗೆ ವಿಶೇಷ ಅಧಿಕಾರ ಕೋರಿ ಗೃಹ ಇಲಾಖೆಗೆ ಪತ್ರ ಬರೆಯಲು ಎಸ್‌ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.

ನಿನ್ನೆ ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಎಸ್‌ಐಟಿಗೆ ಕೇವಲ ದೂರಿನ ಆಧಾರದಲ್ಲಿ ಶಂಕಿತರ ವಿರುದ್ಧ ಕ್ರಮ ಕೈಗೊಳ್ಳಲಷ್ಟೇ ಅವಕಾಶವಿದೆ. ನಿಯಮಗಳ ಪ್ರಕಾರ ‘ಔಷಧ ಮತ್ತು ಕಾಸ್ಮೆಟಿಕ್ಸ್ ಕಾಯ್ದೆ’ಯಡಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುವ ಅಧಿಕಾರ ಡ್ರಗ್ ಕಂಟ್ರೋಲ್ ಬೋರ್ಡ್‌ಗೆ ಮಾತ್ರ ಇರುತ್ತದೆ.

ಆದರೆ ಈ ನಕಲಿ ಔಷಧ ಜಾಲದ ಅಪರಾಧಕ್ಕೆ ಕಾನೂನಿನಲ್ಲಿ ಜೀವಾವಧಿ ಶಿಕ್ಷೆಯವರೆಗೂ ಅವಕಾಶವಿದೆ. ಪ್ರಕರಣ ಅತ್ಯಂತ ಗಂಭೀರವಾಗಿರುವುದರಿಂದ, ತಮಗೇ ಸಂಪೂರ್ಣವಾಗಿ ತನಿಖೆ ನಡೆಸಲು ವಿಶೇಷ ಅಧಿಕಾರ ನೀಡುವಂತೆ ಕೋರಿ ಎಸ್‌ಐಟಿ ಗೃಹ ಇಲಾಖೆಗೆ ಮನವಿ ಸಲ್ಲಿಸಲಿದೆ.

ಈ ಪ್ರಕರಣದ ಮುಖ್ಯ ಸೂತ್ರಧಾರ ಪ್ರಶಾಂತ್ ವಿರುದ್ಧ ಈಗಾಗಲೇ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಆರೋಪಿಗಳು ಖಾಸಗಿ ‘ಪೋರ್ಟರ್’ (Porter) ಆ್ಯಪ್ ಬಳಸಿ, ಬೆಂಗಳೂರಿನಲ್ಲಿ ಕುಳಿತು ರಾಮನಗರದ ಫಾರ್ಮ್‌ಹೌಸ್‌ನಿಂದ ಪ್ರತಿ ವಾರ ಸುಮಾರು 100 ಬಾಟಲಿ ನಕಲಿ ಔಷಧಗಳನ್ನು ಸರಬರಾಜು ಮಾಡುತ್ತಿದ್ದರು.

ವಾರದಲ್ಲಿ 2-3 ಬಾರಿ ರಹಸ್ಯವಾಗಿ ಕಾರುಗಳು ಬಂದು ಹೋಗುತ್ತಿದ್ದ ಈ ಫಾರ್ಮ್‌ಹೌಸ್ ಬಗ್ಗೆ ಸ್ಥಳೀಯರಿಗೆ ಅನುಮಾನ ಮೂಡಿತ್ತು. ಯಾರೂ ಒಳಗೆ ಬರದಂತೆ ಕ್ರೂರ ತಳಿಯ ನಾಯಿಯನ್ನು ಸಾಕಲಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದಾಗ ಈ ದಂಧೆ ಬಯಲಿಗೆ ಬಂದಿತ್ತು.

KPSC ಅಕ್ರಮ ಬೆನ್ನಲ್ಲೇ ಐಎಎಸ್ ಅಧಿಕಾರಿ ನಾಪತ್ತೆ:ಮೊಬೈಲ್ ಸ್ವಿಚ್ ಆಫ್, ಪತ್ತೆಗೆ ಪೊಲೀಸರ ಶೋಧ

0

ಬೆಂಗಳೂರು: KPSC ನೇಮಕಾತಿ ಅಕ್ರಮದ ಬೆನ್ನಲ್ಲೇ ಐಎಎಸ್ ಅಧಿಕಾರಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ದೆಹಲಿಗೆ ತೆರಳಲು ಟಿಕೆಟ್ ಬುಕ್ ಮಾಡಿದ್ದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಕುಟುಂಬದವರ ಸಂಪರ್ಕಕ್ಕೂ ಸಿಗುತ್ತಿಲ್ಲ. ಜಾರಿ ನಿರ್ದೇಶನಾಲಯ (ED) ದಾಳಿ ನಡೆದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಧಿಕಾರಿ ವಿಮಾನ ನಿಲ್ದಾಣದಿಂದ ಎಲ್ಲಿಗೆ ತೆರಳಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದು, ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಎಲ್ಲಾ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ.

ಇತ್ತೀಚೆಗೆ ಬೆಳಕಿಗೆ ಬಂದಿರುವ KPSC ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಈ ನಾಪತ್ತೆ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಈ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು.

ಜ್ಞಾನೇಂದ್ರ ಕುಮಾರ್ ಅವರು ಹಿಂದೆ KPSCಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದೆ. ED ದಾಳಿ ನಡೆದ ಮರುದಿನವೇ ಅವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅಧಿಕಾರಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, ನಾಪತ್ತೆಯ ಹಿಂದಿನ ನಿಖರ ಕಾರಣ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

ಮದುವೆ ಬಳಿಕ ಗೋವಾ ತಂಡ ತೊರೆಯುವ ವದಂತಿಗೆ ತೆರೆ ಎಳೆದ ಅರ್ಜುನ್ ತೆಂಡೂಲ್ಕರ್!

0

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಇತ್ತೀಚೆಗೆ ತಮ್ಮ ಬಹುಕಾಲದ ಗೆಳತಿ ಸಾನಿಯಾ ಚಂದೋಕ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅದ್ಧೂರಿಯಾಗಿ ನಡೆದ ವಿವಾಹ ಸಮಾರಂಭದಲ್ಲಿ ಹಲವು ಗಣ್ಯರು ಹಾಗೂ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಇದೀಗ ಮದುವೆ ಹಾಗೂ ಐಪಿಎಲ್ ಬಳಿಕ ಅರ್ಜುನ್ ತೆಂಡೂಲ್ಕರ್ ತಮ್ಮ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅರ್ಜುನ್ ತೆಂಡೂಲ್ಕರ್ ಅವರ ದೇಶಿ ಕ್ರಿಕೆಟ್ ಭವಿಷ್ಯದ ಕುರಿತು ಹಲವು ಊಹಾಪೋಹಗಳು ಕೇಳಿಬಂದಿದ್ದವು. ಐಪಿಎಲ್ ಬಳಿಕ ವಿಶ್ರಾಂತಿಗೆ ತೆರಳಿದ್ದ ಅರ್ಜುನ್, ಪತ್ನಿ ಸಾನಿಯಾ ಚಂದೋಕ್ ಅವರೊಂದಿಗೆ ಪ್ರವಾಸದಲ್ಲಿದ್ದರು. ಇದೇ ವೇಳೆ ಗೋವಾ ತಂಡದ ಓಮನ್ ಪ್ರವಾಸಕ್ಕೂ ಅವರು ಗೈರಾಗಿದ್ದರು.

ಇದಕ್ಕೂ ಮುನ್ನ ಕೆಲವು ದೇಶಿ ಟೂರ್ನಿಗಳಿಂದಲೂ ಅರ್ಜುನ್ ದೂರ ಉಳಿದಿದ್ದರಿಂದ, ಅವರು ಗೋವಾ ತಂಡವನ್ನು ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಇದೀಗ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಮುಂಬರುವ ದೇಶಿ ಕ್ರಿಕೆಟ್ ಋತುವಿನಲ್ಲಿ ಗೋವಾ ತಂಡದ ಪರವೇ ಮುಂದುವರಿಯಲು ಅರ್ಜುನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ ಎಂದು ಮಾಹಿತಿ ಹೊರಬಿದ್ದಿದೆ. ಇದಕ್ಕಾಗಿ ಈಗಾಗಲೇ ಅವರು ಅಭ್ಯಾಸವನ್ನೂ ಆರಂಭಿಸಿದ್ದಾರೆ.

ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ತಮ್ಮ ಕೌಶಲ್ಯವನ್ನು ಮತ್ತಷ್ಟು ಸುಧಾರಿಸಿಕೊಳ್ಳಲು ಅರ್ಜುನ್ ಗಮನ ಹರಿಸುತ್ತಿದ್ದಾರೆ. ಗೋವಾ ತಂಡದ ಪ್ರಮುಖ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿರುವ ಅವರು ಮುಂಬರುವ ದೇಶಿ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದ್ದಾರೆ.

ಮುಂಬೈ ತೊರೆದು ಗೋವಾ ಸೇರಿದ್ದ ಅರ್ಜುನ್

ಅರ್ಜುನ್ ತೆಂಡೂಲ್ಕರ್ ಆರಂಭದಲ್ಲಿ ಮುಂಬೈ ತಂಡದ ಪರ ದೇಶಿ ಕ್ರಿಕೆಟ್ ಆಡುತ್ತಿದ್ದರು. ಆದರೆ ತಂಡದಲ್ಲಿ ನಿರಂತರವಾಗಿ ಅವಕಾಶ ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಬಳಿಕ ಮುಂಬೈ ತಂಡವನ್ನು ತೊರೆಯುವ ನಿರ್ಧಾರ ಕೈಗೊಂಡಿದ್ದರು.

ಬಳಿಕ ಗೋವಾ ತಂಡಕ್ಕೆ ಸೇರ್ಪಡೆಯಾದ ಅರ್ಜುನ್, ಹೊಸ ತಂಡದ ಪರ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದರು. ಗೋವಾ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಶತಕ ಕೂಡ ಸಿಡಿಸಿರುವ ಅವರು, ಇದುವರೆಗೆ 50 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ನಲ್ಲೂ ಕೊಡುಗೆ ನೀಡಬಲ್ಲ ಆಲ್‌ರೌಂಡರ್ ಆಗಿ ಅರ್ಜುನ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿದ್ದಾರೆ.ಐಪಿಎಲ್‌ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಪರ ಆಡುತ್ತಿರುವ ಅರ್ಜುನ್ ತೆಂಡೂಲ್ಕರ್, ಮುಂದಿನ ಆವೃತ್ತಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಆಯ್ಕೆ ಸಮಿತಿಯ ಗಮನ ಸೆಳೆಯುವ ಗುರಿ ಹೊಂದಿದ್ದಾರೆ.

ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ, ಐಪಿಎಲ್‌ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸುವುದು ಅರ್ಜುನ್ ಅವರ ಮುಂದಿನ ಗುರಿಯಾಗಿದೆ. ಹೀಗಾಗಿ ಮದುವೆ ಬಳಿಕ ವೈಯಕ್ತಿಕ ಜೀವನದ ಜೊತೆಗೆ ಕ್ರಿಕೆಟ್ ವೃತ್ತಿಜೀವನಕ್ಕೂ ಹೆಚ್ಚಿನ ಆದ್ಯತೆ ನೀಡಲು ಅರ್ಜುನ್ ಮುಂದಾಗಿದ್ದಾರೆ.

ಗೋವಾ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಅರ್ಜುನ್, ಇದೀಗ ಹೊಸ ದೇಶಿ ಋತುವಿಗಾಗಿ ಸಜ್ಜಾಗುತ್ತಿದ್ದಾರೆ. ಅವರ ಮುಂದಿನ ಪ್ರದರ್ಶನದ ಮೇಲೆ ಕ್ರಿಕೆಟ್ ಅಭಿಮಾನಿಗಳು ಹಾಗೂ ಆಯ್ಕೆ ಸಮಿತಿಯ ಕಣ್ಣು ನೆಟ್ಟಿದೆ.

ಉರುಳಿಗೆ ಸಿಲುಕಿ ಸತ್ತ ಚಿರತೆ ಸುಟ್ಟು ಹಾಕಿದ ಆರೋಪ; ತುಮಕೂರಿನಲ್ಲಿ ಮೂವರು ಬಂಧನ!

0

ತುಮಕೂರು: ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡದೆ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಗೌರಗೊಂಡನಹಳ್ಳಿಯ ಜಿ.ಡಿ. ಶಿವಕುಮಾರ್, ನಾರಾಯಣಪ್ಪ ಹಾಗೂ ಚಂದ್ರಶೇಖರ್ ಎಂದು ಗುರುತಿಸಲಾಗಿದೆ.

ಕಾಡುಪ್ರಾಣಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ನಾರಾಯಣಪ್ಪ ಅವರ ಜಮೀನಿನಲ್ಲಿ ಉರುಳು ಹಾಕಲಾಗಿತ್ತು ಎನ್ನಲಾಗಿದೆ. ಇತ್ತೀಚೆಗೆ ಈ ಉರುಳಿಗೆ ಚಿರತೆ ಸಿಲುಕಿ ಸಾವನ್ನಪ್ಪಿತ್ತು. ಚಿರತೆ ಸಾವನ್ನಪ್ಪಿರುವ ವಿಚಾರವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸುವ ಬದಲು ಗ್ರಾಮಸ್ಥರು ಅದನ್ನು ಸ್ಥಳದಲ್ಲೇ ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಚಿರತೆ ಸುಡುವ ಸಂದರ್ಭದಲ್ಲಿ ಗ್ರಾಮದ ಕೆಲ ಯುವಕರು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಘಟನೆ ಬಂದಿದೆ.

ವಿಡಿಯೋ ಆಧರಿಸಿ ತನಿಖೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ವಿಜಯಪುರದಲ್ಲಿ ಮನಕಲಕುವ ಘಟನೆ: ಬಾವಿಗೆ ಬಿದ್ದ ಇಬ್ಬರು ಮಕ್ಕಳು, ರಕ್ಷಿಸಲು ಹೋದ ತಂದೆಯೂ ನಾಪತ್ತೆ

0

ವಿಜಯಪುರ: ತೆರೆದ ಬಾವಿಗೆ ಕಾಲು ಜಾರಿ ಇಬ್ಬರು ಮಕ್ಕಳು ಬಿದ್ದಿದ್ದು, ಅವರನ್ನು ರಕ್ಷಿಸಲು ಬಾವಿಗೆ ಹಾರಿದ ತಂದೆಯೂ ನಾಪತ್ತೆಯಾಗಿರುವ ದುರ್ಘಟನೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆದಿದೆ.

ಬಳಬಟ್ಟಿ ಗ್ರಾಮದ ತೋಟದ ಮನೆಯೊಂದರ ಬಳಿ ಈ ಘಟನೆ ನಡೆದಿದೆ. ತೋಟದ ಮನೆಯ ಸಮೀಪದಲ್ಲಿದ್ದ ತೆರೆದ ಬಾವಿಯ ಬಳಿ ತೆರಳಿದ್ದ ವೇಳೆ ಇಬ್ಬರು ಹೆಣ್ಣು ಮಕ್ಕಳು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಬಾವಿಗೆ ಬಿದ್ದ ಮಕ್ಕಳನ್ನು ಸಾಕ್ಷಿ (15) ಮತ್ತು ರಕ್ಷಿತಾ (10) ಎಂದು ಗುರುತಿಸಲಾಗಿದೆ. ಸಾಕ್ಷಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಮಕ್ಕಳು ಬಾವಿಗೆ ಬಿದ್ದಿರುವುದನ್ನು ಗಮನಿಸಿದ ಅವರ ತಂದೆ ಸಾಬಣ್ಣ (40) ಕೂಡಲೇ ಅವರನ್ನು ರಕ್ಷಿಸಲು ಬಾವಿಗೆ ಜಿಗಿದಿದ್ದಾರೆ. ಆದರೆ ಸಾಬಣ್ಣ ಅವರಿಗೆ ಈಜು ಬಾರದ ಹಿನ್ನೆಲೆಯಲ್ಲಿ ಅವರೂ ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ನಿಡಗುಂದಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳಿಬ್ಬರು ಹಾಗೂ ತಂದೆ ಸಾಬಣ್ಣ ಅವರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ಗ್ರಾಮಸ್ಥರು ಕೂಡ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದ್ದು, ತೆಪ್ಪದ ಮೂಲಕ ಬಾವಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಮೂವರ ಪತ್ತೆಗಾಗಿ ನಿರಂತರ ಶೋಧ ಕಾರ್ಯ ಮುಂದುವರಿದಿದೆ.

ಘಟನೆಯಿಂದ ಬಳಬಟ್ಟಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪೊಲೀಸ್ ಠಾಣೆಗಳ ಸಿಸಿಟಿವಿ 24 ಗಂಟೆಯೂ ಆನ್ ಇರಬೇಕು: ಹೈಕೋರ್ಟ್ ಖಡಕ್ ಆದೇಶ

0

ಬೆಂಗಳೂರು: ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಒಂದು ನಿಮಿಷವೂ ಸಿಸಿಟಿವಿ ಆಫ್ ಆಗದಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಖಡಕ್ ನಿರ್ದೇಶನ ನೀಡಿದೆ.

ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಕಿರುಕುಳ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಈ ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣದ ತನಿಖೆ ವೇಳೆ ಕಳೆದ 11 ತಿಂಗಳಿನಿಂದ ಠಾಣೆಯ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಸಿಸಿಟಿವಿ ಕಾರ್ಯನಿರ್ವಹಿಸದಿರುವುದಕ್ಕೆ ಠಾಣೆಯಲ್ಲಿ ಯುಪಿಎಸ್ ಸಮಸ್ಯೆ ಇತ್ತು ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಪೊಲೀಸರ ಈ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಇಂತಹ ಉತ್ತರಗಳು ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತರುತ್ತವೆ ಎಂದು ಅಭಿಪ್ರಾಯಪಟ್ಟಿದೆ.

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಅವು ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಕಡ್ಡಾಯವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ರಾಜ್ಯ ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಡಿಜಿ-ಐಜಿಪಿ ಕಚೇರಿಯಿಂದಲೇ ಲೈವ್ ಮಾನಿಟರಿಂಗ್:

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರಿಯಲ್‌ಟೈಮ್‌ನಲ್ಲಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಡಿಜಿ-ಐಜಿಪಿ ಕಚೇರಿಯಿಂದಲೇ ಲೈವ್ ಮಾನಿಟರ್ ಮಾಡುವ ವ್ಯವಸ್ಥೆ ರೂಪಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಸಿಸಿಟಿವಿ ಕ್ಯಾಮೆರಾಗಳು ಸ್ಥಗಿತಗೊಂಡರೆ ಅಥವಾ ತಾಂತ್ರಿಕ ಸಮಸ್ಯೆ ಎದುರಾದರೆ ತಕ್ಷಣವೇ ಅದನ್ನು ಸರಿಪಡಿಸುವ ವ್ಯವಸ್ಥೆ ಇರಬೇಕು. ಪೊಲೀಸ್ ಠಾಣೆಗಳಲ್ಲಿನ ವಿಚಾರಣೆ ಹಾಗೂ ಇತರ ಚಟುವಟಿಕೆಗಳ ಮೇಲೆ ನಿಗಾ ಇಡುವ ದೃಷ್ಟಿಯಿಂದ ಸಿಸಿಟಿವಿ ವ್ಯವಸ್ಥೆ ನಿರಂತರವಾಗಿ ಕಾರ್ಯನಿರ್ವಹಿಸುವುದು ಅತ್ಯಂತ ಅಗತ್ಯ ಎಂದು ನ್ಯಾಯಾಲಯದ ನಿರ್ದೇಶನಗಳು ಸ್ಪಷ್ಟಪಡಿಸಿವೆ.

ವೈಟ್‌ಫೀಲ್ಡ್ ಠಾಣೆ ವಿರುದ್ಧ ಮಹಿಳೆಯ ದೂರು:

ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಸಿಬ್ಬಂದಿ ತಮ್ಮ ಮೇಲೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶೈಲಜಾ ಎಂಬ ಮಹಿಳೆ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ತನಿಖೆ ವೇಳೆ ಠಾಣೆಯ ಸಿಸಿಟಿವಿ ಕಳೆದ 11 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಪೊಲೀಸರಿಂದ ನ್ಯಾಯಾಲಯಕ್ಕೆ ತಿಳಿದುಬಂದಿತ್ತು.

ಈ ಹಿನ್ನೆಲೆಯಲ್ಲಿ ಸಿಸಿಟಿವಿ ವ್ಯವಸ್ಥೆಯ ನಿರ್ವಹಣೆ ಕುರಿತು ಪೊಲೀಸರ ಕಾರ್ಯವೈಖರಿಯನ್ನು ಪ್ರಶ್ನಿಸಿದ ಹೈಕೋರ್ಟ್, ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಕೇವಲ ಅಳವಡಿಸಿರುವುದಷ್ಟೇ ಅಲ್ಲದೆ, ಅದು ಸದಾ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳುವುದು ಇಲಾಖೆಯ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದೆ.

₹2 ಲಕ್ಷ ಲಂಚ ಪಡೆಯುವಾಗ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

0

ಚಿಕ್ಕಮಗಳೂರು: 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಸರ್ವೇಯರ್‌ಗಳಾದ ದೊರೆರಾಜ್ ಹಾಗೂ ರಂಗನಾಥ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿಗಳು. ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಇಂದಾವರ ಗ್ರಾಮದ ಧರಣೇಶ್ ಎಂಬವರು ತಮ್ಮ ಕೃಷಿ ಜಮೀನಿನ ಸರ್ವೇಗಾಗಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಈ ವೇಳೆ ಸರ್ವೇ ಹಾಗೂ ಸ್ಕೆಚ್‌ ತಯಾರಿಸಲು ₹10 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ ₹2 ಲಕ್ಷ ನೀಡುವಂತೆ ಸೂಚಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಧರಣೇಶ್ ಅವರು ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಖಾಸಗಿ ಕಚೇರಿಯಲ್ಲಿ ₹2 ಲಕ್ಷ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳನ್ನು ಬಲೆಗೆ ಬೀಳಿಸಿದ್ದಾರೆ.

ಡಿವೈಎಸ್‌ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ.