Home Blog

ಚಾಮರಾಜನಗರದಲ್ಲಿ ವೃದ್ಧೆಯ ನಿಗೂಢ ಸಾವು: ಚಿನ್ನಾಭರಣ, ನಗದು ಮಾಯ

ಚಾಮರಾಜನಗರ: ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ನಡೆದಿದೆ.

ಮಕ್ಕಳ ಸಹಾಯವಿಲ್ಲದೆ ಪೆಟ್ಟಿಗೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಸಿದ್ದಮ್ಮ (84) ಅವರ ಸಾವಿಗೆ ಇದೀಗ ಹಲವು ಅನುಮಾನಗಳು ವ್ಯಕ್ತವಾಗಿವೆ. ಮೃತ ಸಿದ್ದಮ್ಮ ಅವರಿಗೆ ಮೂವರು ಮಕ್ಕಳಿದ್ದರೂ ಸ್ವತಂತ್ರವಾಗಿ ಬದುಕಬೇಕೆಂದು ಬಯಸಿದ ಅವರು ಗ್ರಾಮದಲ್ಲೇ ಸಣ್ಣ ಪೆಟ್ಟಿಗೆ ಅಂಗಡಿ ನಡೆಸಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಸೋಮವಾರ ಬೆಳಗ್ಗೆ ಆಗಿದ್ದರೂ ಮನೆಬಿಟ್ಟು ಹೊರಬರದೇ ಇದ್ದದ್ದು ಹಾಗೂ ಅಂಗಡಿಯನ್ನೂ ತೆರೆಯದಿದ್ದ ಹಿನ್ನೆಲೆ ಎದುರು ಮನೆಯವರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಿದ್ದಮ್ಮ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಸಿದ್ದಮ್ಮ ಅವರ ಮೈಮೇಲೆ ಇದ್ದ ಚಿನ್ನದ ಓಲೆ, ಚಿನ್ನದ ಸರ ಹಾಗೂ ಸೆರಗಿನಲ್ಲಿಟ್ಟಿದ್ದ ಸುಮಾರು 50 ಸಾವಿರ ರೂಪಾಯಿ ನಗದು ಕಾಣೆಯಾಗಿರುವುದು ಪ್ರಕರಣದ ಬಗ್ಗೆ ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಹಣ ಮತ್ತು ಚಿನ್ನದ ಆಸೆಗೆ ವೃದ್ಧೆಯನ್ನು ಕೊಲೆ ಮಾಡಲಾಗಿದೆ ಎಂದು ಮಕ್ಕಳಿಂದ ಆರೋಪ ಕೇಳಿಬಂದಿದೆ.

ಮಾಹಿತಿ ಪ್ರಕಾರ, ವಯಸ್ಸಾದರೂ ಸಿದ್ದಮ್ಮ ಆರೋಗ್ಯವಾಗಿಯೇ ಇದ್ದರು. ಮಳೆಗಾಲಕ್ಕೂ ಮುನ್ನ ಮನೆ ದುರಸ್ತಿ ಮಾಡಿಸಬೇಕೆಂದು ಹೇಳುತ್ತಿದ್ದ ಅವರು ಸುಮಾರು 50 ಸಾವಿರ ರೂಪಾಯಿ ಹಣವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿನ್ನಾಭರಣ ಮತ್ತು ಹಣಕ್ಕಾಗಿ ವೃದ್ಧೆಯನ್ನು ಕೊಲೆ ಮಾಡಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಕರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.

ಈ ಸಂಬಂಧ ಪೊಲೀಸರು ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವೃದ್ಧೆಯ ಸಾವಿನ ನಿಜವಾದ ಕಾರಣ ತನಿಖೆಯಿಂದಲೇ ಬೆಳಕಿಗೆ ಬರಬೇಕಿದೆ.

ವದಂತಿಗಳಿಗೆ ಬ್ರೇಕ್: ನಿವೃತ್ತಿ ಯೋಚನೆ ಇಲ್ಲ ಎಂದ ಸೂರ್ಯಕುಮಾರ್!

0

2024ರ ಟಿ20 ವಿಶ್ವಕಪ್ ಬಳಿಕ ಭಾರತ ಟಿ20 ತಂಡದ ನಾಯಕತ್ವ ವಹಿಸಿಕೊಂಡ ಸೂರ್ಯಕುಮಾರ್ ಯಾದವ್ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.

ನಾಯಕನಾಗಿ ಉತ್ತಮ ಪ್ರದರ್ಶನ ನೀಡಿದರೂ ಆಟಗಾರನಾಗಿ ಸೂರ್ಯಕುಮಾರ್ ಕಳೆದ ಕೆಲವು ಸಮಯದಲ್ಲಿ ಏರಿಳಿತಗಳನ್ನು ಕಂಡಿದ್ದರು. ಟಿ20 ವಿಶ್ವಕಪ್‌ಗೆ ಮುನ್ನ ಸುಮಾರು ಒಂದು ವರ್ಷ ರನ್ ಬರ ಎದುರಿಸಿದ್ದ ಅವರು, ವಿಶ್ವಕಪ್ ಸಮೀಪಿಸುತ್ತಿದ್ದಂತೆ ಮತ್ತೆ ಉತ್ತಮ ಫಾರ್ಮ್ ಕಂಡುಕೊಂಡರು.

ಸೂರ್ಯಕುಮಾರ್ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತು.

ಇದರ ನಡುವೆ 35 ವರ್ಷದ ಸೂರ್ಯಕುಮಾರ್ ಯಾದವ್ ವಿಶ್ವಕಪ್ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಬಹುದು ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಆದರೆ ಫೈನಲ್ ಪಂದ್ಯದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೂರ್ಯಕುಮಾರ್, ನಿವೃತ್ತಿ ಕುರಿತು ಹರಡಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಸೂರ್ಯಕುಮಾರ್, “ಎಲ್ಲವೂ ಚೆನ್ನಾಗಿ ನಡೆಯುತ್ತಿರುವಾಗ ನಿವೃತ್ತಿಯ ಬಗ್ಗೆ ಯಾಕೆ ಯೋಚಿಸಬೇಕು? ನಾನು ಇನ್ನೂ ನಿವೃತ್ತಿಯ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನನ್ನಲ್ಲಿ ಇನ್ನೂ ಸಾಕಷ್ಟು ಕ್ರಿಕೆಟ್ ಉಳಿದಿದೆ,” ಎಂದು ಸ್ಪಷ್ಟಪಡಿಸಿದರು.

ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಯಾವುದೇ ರನ್ ಗಳಿಸದೆ ಔಟಾದರೂ, ಸಂಪೂರ್ಣ ಪಂದ್ಯಾವಳಿಯಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದರು. ಒಟ್ಟು ಒಂಬತ್ತು ಪಂದ್ಯಗಳಲ್ಲಿ 242 ರನ್ ಗಳಿಸಿದ ಸೂರ್ಯಕುಮಾರ್, 2026ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಇದರಲ್ಲಿ ಆರಂಭಿಕ ಪಂದ್ಯದಲ್ಲಿನ ಅರ್ಧಶತಕವೂ ಸೇರಿದೆ.

 

ಬೆಳಗಾವಿಯಲ್ಲಿ ಅಂತಾರಾಜ್ಯ ವಾಹನ ಕಳ್ಳರ ಗ್ಯಾಂಗ್ ಭೇದಿಸಿದ ಪೊಲೀಸರು!

ಬೆಳಗಾವಿ: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ವಾಹನ ಕಳವು ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಗ್ಯಾಂಗ್‌ನ್ನು ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಒಂದು ವಾಹನ ಕಳ್ಳತನ ಪ್ರಕರಣದ ತನಿಖೆ ವೇಳೆ ಪೊಲೀಸರ ಬಲೆಗೆ ದೊಡ್ಡ ಗ್ಯಾಂಗ್ ಸಿಕ್ಕಿಬಿದ್ದಿದ್ದು, ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ 21 ಕಳವು ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಆರೋಪಿಗಳ ಪೈಕಿ ಐವರನ್ನು ಪೊಲೀಸರು ಬಂಧಿಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಯೂಸುಫ್ ಖಾನ್, ಜಾಕೀರ್ ಹುಸೇನ್, ಶಫೀಕ್ ಅಹಮ್ಮದ್, ಆಜಾದ್ ಹಾಗೂ ಬಶೀರ್ ಅಹಮ್ಮದ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಕರ್ನಾಟಕ ಸೇರಿದಂತೆ ನೆರೆಯ ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಸೇರಿದವರು ಎಂಬುದು ತಿಳಿದುಬಂದಿದೆ.

ಬಂಧಿತ ಆರೋಪಿಗಳಿಂದ 8 ಮಿನಿ ಗೂಡ್ಸ್ ವಾಹನಗಳು, ರಾಯಲ್ ಎನ್‌ಫೀಲ್ಡ್ ಮತ್ತು ಹೋಂಡಾ ಸೇರಿದಂತೆ 8 ಬೈಕ್‌ಗಳು ಹಾಗೂ 5 ಸ್ಕೂಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೂರು ತಿಂಗಳ ಹಿಂದೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ಮಿನಿ ಗೂಡ್ಸ್ ವಾಹನ ಕಳ್ಳತನವಾಗಿತ್ತು. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ಬೈಕ್‌ನಲ್ಲಿ ಬಂದ ನಾಲ್ವರು ಆರೋಪಿಗಳು ಮಿನಿ ಗೂಡ್ಸ್ ವಾಹನ ಕದ್ದು ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ಪತ್ತೆಯಾಯಿತು.

ಆರೋಪಿಗಳು ಬಳಸಿದ್ದ ಬೈಕ್ ಸಂಖ್ಯೆಯ ಸುಳಿವು ಹಿಡಿದು ಪೊಲೀಸರು ಪರಿಶೀಲನೆ ನಡೆಸಿದಾಗ ಆ ಬೈಕ್ ಕೂಡ ಕಳ್ಳತನವಾಗಿರುವುದು ಬೆಳಕಿಗೆ ಬಂತು. ಹೀಗಾಗಿ ಕದ್ದ ವಾಹನಗಳನ್ನೇ ಬಳಸಿಕೊಂಡು ಮತ್ತಷ್ಟು ವಾಹನ ಕಳ್ಳತನ ಮಾಡುತ್ತಿರುವ ಗ್ಯಾಂಗ್ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತು.

ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಕೊನೆಗೂ ಐದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಕಳುವಾಗಿದ್ದ ತಮ್ಮ ವಾಹನಗಳು ಮರಳಿ ಸಿಕ್ಕ ಹಿನ್ನೆಲೆಯಲ್ಲಿ ವಾಹನ ಮಾಲೀಕರು ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗರ್ಭಧಾರಣೆಗೆ ಮೊದಲು ಐರನ್ ಕೊರತೆ ಸರಿಪಡಿಸಿಕೊಳ್ಳುವುದು ಯಾಕೆ ಮುಖ್ಯ?

0

ಗರ್ಭಧಾರಣೆ ಅಥವಾ ಪ್ರೆಗ್ನೆನ್ಸಿಗೆ ಪ್ಲಾನ್ ಮಾಡುವ ಮೊದಲು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಸಂಪೂರ್ಣವಾಗಿ ಗಮನ ಹರಿಸುವುದು ಅತ್ಯಂತ ಅಗತ್ಯ.

ದೇಹದಲ್ಲಿ ಯಾವುದೇ ಪೋಷಕಾಂಶಗಳ ಕೊರತೆ ಇದ್ದರೆ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು. ಅದರಲ್ಲಿಯೂ ದೇಹದಲ್ಲಿ ಐರನ್ ಕೊರತೆ ಇದ್ದರೆ ಗರ್ಭಧಾರಣೆಗೆ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಹಲವಾರು ಸಂದರ್ಭಗಳಲ್ಲಿ ಮಹಿಳೆಯರು ಈ ವಿಷಯಗಳ ಬಗ್ಗೆ ಹೆಚ್ಚಿನ ಗಮನಹರಿಸುವುದಿಲ್ಲ. ತಜ್ಞರ ಪ್ರಕಾರ, ಐರನ್ ಕೊರತೆ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾದರೆ ಐರನ್ ದೇಹಕ್ಕೆ ಯಾಕೆ ಮುಖ್ಯ? ಗರ್ಭಧಾರಣೆಯ ಸಮಯದಲ್ಲಿ ಐರನ್ ಕೊರತೆ ಯಾಕೆ ಅಪಾಯಕಾರಿ? ಎಂಬುದನ್ನು ತಿಳಿದುಕೊಳ್ಳೋಣ.

ಐರನ್ ದೇಹಕ್ಕೆ ಯಾಕೆ ಮುಖ್ಯ?
ಆರೋಗ್ಯ ತಜ್ಞರ ಪ್ರಕಾರ, ದೇಹದಲ್ಲಿ ಐರನ್ ಕೊರತೆ ಇರುವುದು ಆರೋಗ್ಯಕ್ಕೆ ಒಳ್ಳೆಯ ಸೂಚನೆ ಅಲ್ಲ. ಐರನ್ ದೇಹದಲ್ಲಿ ಹೀಮೋಗ್ಲೋಬಿನ್ ಉತ್ಪಾದನೆಗೆ ಅಗತ್ಯವಾಗಿದೆ. ಐರನ್ ಕಡಿಮೆ ಇದ್ದರೆ ಹೀಮೋಗ್ಲೋಬಿನ್ ಮಟ್ಟವೂ ಕಡಿಮೆಯಾಗುತ್ತದೆ. ಹೀಮೋಗ್ಲೋಬಿನ್ ದೇಹದ ಎಲ್ಲಾ ಭಾಗಗಳಿಗೆ ರಕ್ತದ ಮೂಲಕ ಆಮ್ಲಜನಕವನ್ನು (ಆಕ್ಸಿಜನ್) ತಲುಪಿಸುವ ಪ್ರಮುಖ ಕೆಲಸ ಮಾಡುತ್ತದೆ. ಆದ್ದರಿಂದ ದೇಹದಲ್ಲಿ ಐರನ್ ಮಟ್ಟ ಸರಿಯಾಗಿರುವುದು ಬಹಳ ಮುಖ್ಯ.

ಗರ್ಭಧಾರಣೆಯ ಸಮಯದಲ್ಲಿ ಐರನ್ ಕೊರತೆ ಯಾಕೆ ಅಪಾಯಕಾರಿ?
ಆರೋಗ್ಯ ತಜ್ಞರ ಪ್ರಕಾರ, ಗರ್ಭಧಾರಣೆಯ ಸಮಯದಲ್ಲಿ ಮಹಿಳೆಯ ದೇಹದಲ್ಲಿ ಐರನ್ ಕೊರತೆ ಇದ್ದರೆ ಅದು ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ಮಗು ಪ್ರೀಮ್ಯಾಚುರ್ ಆಗಿ ಜನಿಸುವ ಸಾಧ್ಯತೆ ಇರುತ್ತದೆ. ಮಗುವಿನ ತೂಕ ಸಾಮಾನ್ಯಕ್ಕಿಂತ ಕಡಿಮೆ ಇರಬಹುದು. ಡೆಲಿವರಿ ಸಮಯದಲ್ಲಿ ಹೆಚ್ಚು ರಕ್ತಸ್ರಾವ (ಬ್ಲೀಡಿಂಗ್) ಆಗುವ ಅಪಾಯವೂ ಹೆಚ್ಚಾಗಿರುತ್ತದೆ.

ಗರ್ಭಧಾರಣೆಗೆ ಮೊದಲೇ ದೇಹದಲ್ಲಿ ಐರನ್ ಕೊರತೆ ಇದ್ದರೆ, ಗರ್ಭಧಾರಣೆಯ ಸಮಯದಲ್ಲಿ ಈ ಸಮಸ್ಯೆ ಇನ್ನಷ್ಟು ಗಂಭೀರವಾಗಬಹುದು. ಸಾಮಾನ್ಯವಾಗಿ ಮಹಿಳೆಯರಲ್ಲಿ ಐರನ್ ಕೊರತೆ ಅಸಮತೋಲನ ಆಹಾರ ಪದ್ಧತಿ ಮತ್ತು ಪೋಷಕಾಂಶಗಳ ಕೊರತೆಯಿಂದ ಉಂಟಾಗುತ್ತದೆ. ಸರಿಯಾದ ಪೌಷ್ಟಿಕ ಆಹಾರ ಸೇವಿಸದಿದ್ದರೆ ಈ ಸಮಸ್ಯೆ ಕಾಣಿಸಬಹುದು.

ಐರನ್ ಕೊರತೆ ಕಂಡುಬರುವ ಮೊದಲು ಕೆಲವು ಸಾಮಾನ್ಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅವುಗಳಲ್ಲಿ ಹೆಚ್ಚು ದಣಿವಾಗುವುದು, ದೌರ್ಬಲ್ಯ, ತಲೆ ಸುತ್ತು, ಶಕ್ತಿಯ ಕೊರತೆ ಮುಂತಾದವು ಸೇರಿವೆ. ಈ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈದ್ಯರು ರಕ್ತ ಪರೀಕ್ಷೆಯ ಮೂಲಕ ಐರನ್ ಮಟ್ಟವನ್ನು ಪರಿಶೀಲಿಸಿ, ಅಗತ್ಯವಿದ್ದರೆ ಆಹಾರದಲ್ಲಿ ಬದಲಾವಣೆ ಹಾಗೂ ಔಷಧಿಗಳ ಮೂಲಕ ಈ ಸಮಸ್ಯೆಯನ್ನು ಸರಿಪಡಿಸಲು ಸಲಹೆ ನೀಡುತ್ತಾರೆ.

ಗಮನಿಸಿ: ಆರೋಗ್ಯ ತಜ್ಞರ ಸಲಹೆಯಂತೆ ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಳ್ಳುವುದು ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ.

ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸೋಮವಾರ ವಿಧಾನಪರಿಷತ್‌ನಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ಇರುವುದನ್ನು ಒಪ್ಪಿಕೊಂಡರು.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೂ ಪ್ರಾಥಮಿಕ ಶಾಲೆಗಳಲ್ಲಿ 34,027 ಮತ್ತು ಪ್ರೌಢ ಶಾಲೆಗಳಲ್ಲಿ 9,499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಮೂಲಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆಗಳು ಮುಚ್ಚಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲೆಯಲ್ಲಿ ಒಟ್ಟು 1,462 ಸರ್ಕಾರಿ ಶಾಲೆಗಳಿದ್ದು, ಸುಮಾರು 2.24 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಹೇಳಿದರು.

ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯ ಕೊರತೆಯಿಂದ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಚಿಕ್ಕಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಯುವತಿ ಸಾವು!

0

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜಳಾ–ಮುನಿರಾಜು ದಂಪತಿಯ ಪುತ್ರಿ ಮೊನಿಷಾ (25) ಮೃತಪಟ್ಟ ಯುವತಿಯಾಗಿದ್ದಾರೆ.

ಮೃತ ಮೊನಿಷಾ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆ ನಡೆದ ದಿನ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದು, ಪರಿಣಾಮವಾಗಿ ಯುವತಿ ಸಾವನ್ನಪ್ಪಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಾನೂನು ಉಲ್ಲಂಘಿಸಿ ‘ಬಗರ್ ಹುಕುಂ’ ಮಂಜೂರು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

ಬೆಂಗಳೂರು: ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ ಜಮೀನು ಮಂಜೂರು ಮಾಡಬೇಕು ಎಂಬ ಸರ್ಕಾರದ ಉದ್ದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ಕಾನೂನು ಮತ್ತು ನಿಯಮಗಳನ್ನು ಮೀರಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಮಾಜಿ ಸಚಿವ ಟಿ.ಬಿ. ಜಯಚಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ಕರ್ನಾಟಕದಲ್ಲಿ ಹೆಂಡ (ಸೇಂದಿ) ಇಳಿಸುವ ಕುಲಕಸುಬು ಇದ್ದುದರಿಂದ ಅದನ್ನು ಅವಲಂಬಿಸಿದ್ದವರಿಗಾಗಿ ಕೆಲವು ಪ್ರದೇಶಗಳನ್ನು ಈಚಲುವನ ಅಥವಾ ಸೇಂದಿವನ ಎಂದು ಕಾಯ್ದಿರಿಸಲಾಗಿತ್ತು ಎಂದು ವಿವರಿಸಿದರು.

ನಂತರ ಈ ವೃತ್ತಿಯನ್ನು ನಿಷೇಧಿಸಿದ ಬಳಿಕ ಕೆಲವರು ಆ ಜಮೀನಿನಲ್ಲಿ ಕೃಷಿ ಮಾಡತೊಡಗಿದರು. ಇನ್ನೂ ಕೆಲವು ಪ್ರದೇಶಗಳನ್ನು ಸರ್ಕಾರವೇ ವಿವಿಧ ಜನಕಲ್ಯಾಣ ಕಾರ್ಯಕ್ರಮಗಳಿಗೆ ನೀಡಿದೆ. ಆದರೆ ಪ್ರಸ್ತುತ ಅದೇ ಜಮೀನನ್ನು ಬಗರ್ ಹುಕುಂ ಯೋಜನೆಯಡಿ ಮಂಜೂರು ಮಾಡಲು 2003ರಲ್ಲಿ ಹೊರಡಿಸಿದ ಸರ್ಕಾರಿ ಆದೇಶದ ಕಾರಣ ಕೆಲವು ಕಾನೂನು ತೊಡಕುಗಳು ಎದುರಾಗಿವೆ ಎಂದು ಹೇಳಿದರು.

ಸೇಂದಿವನ ಪ್ರದೇಶವನ್ನು ಬಗರ್ ಹುಕುಂ ಯೋಜನೆಯಡಿ ರೈತರಿಗೆ ಮಂಜೂರು ಮಾಡಬೇಕು ಎಂಬ ಬೇಡಿಕೆ ನಮಗೆ ಅರ್ಥವಾಗಿದೆ. ಈ ಬಗ್ಗೆ ಸಕಾರಾತ್ಮಕ ತೀರ್ಮಾನ ಕೈಗೊಳ್ಳುವ ಉದ್ದೇಶ ಸರ್ಕಾರಕ್ಕಿದೆ ಎಂದು ತಿಳಿಸಿದರು.

ಆದರೆ ಸೇಂದಿವನ ಜಮೀನನ್ನು ಅಬಕಾರಿ ಇಲಾಖೆಯಿಂದ ಕಂದಾಯ ಇಲಾಖೆಗೆ ವರ್ಗಾವಣೆ ಮಾಡುವಾಗ 2003ರಲ್ಲಿ ಅಂದಿನ ಸರ್ಕಾರ ರೂಪಿಸಿದ್ದ ಐದು ನಿಯಮಗಳು ಈಗ ಅಡೆತಡೆಗಳಾಗಿ ಪರಿಣಮಿಸಿವೆ ಎಂದು ಸಚಿವ ಕೃಷ್ಣ ಬೈರೇಗೌಡ ವಿವರಿಸಿದರು.

ಬೆಂಗಳೂರು ಇಂದು ಕೇವಲ ಟ್ರಾಫಿಕ್ ಜಾಮ್‌ʼಗೆ ಹೆಸರುವಾಸಿ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವ್ಯಂಗ್ಯ

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯಗಳ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಕುರಿತು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ. ಅಲ್ಲಿನ ಜನ ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಮಳೆ ಬಂದರೆ ಚೆನ್ನೈ ಮತ್ತು ಮುಂಬೈ ನಗರಗಳು ಹೇಗೆ ಸ್ಥಗಿತಗೊಳ್ಳುತ್ತವೆ ಎಂಬುದನ್ನೂ ಉಲ್ಲೇಖಿಸಿದ ಅವರು, ಹೈದರಾಬಾದ್ ಅಂತಹ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಹೇಳಿದ್ದಾರೆ.

ಹೈದರಾಬಾದ್ ಅನ್ನು ಮಾಲಿನ್ಯ ಮುಕ್ತ ನಗರವನ್ನಾಗಿ ಮಾಡುವ ಗುರಿ ಹೊಂದಿದ್ದೇವೆ. ನಮಗೆ ಬೆಂಗಳೂರು ಅಥವಾ ಮುಂಬೈ ನಗರಗಳು ಸ್ಪರ್ಧಿಯಲ್ಲ. ನಮ್ಮ ಸ್ಪರ್ಧೆ ಸಿಂಗಾಪುರ ಮತ್ತು ಟೋಕಿಯೋದಂತಹ ಜಾಗತಿಕ ನಗರಗಳೊಂದಿಗೆ ಎಂದು ತಿಳಿಸಿದ್ದಾರೆ.

ಕಣ್ಣಿಗೆ ಲೆನ್ಸ್ ಹಾಕಲು ₹6 ಸಾವಿರ ಲಂಚ: ತುಮಕೂರು ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು: ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯೆ ಡಾ. ಸವಿತಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ₹6,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಅವರನ್ನು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಡಾ. ಸವಿತಾ ಕಣ್ಣಿನ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು. ಉಪ್ಪಾರಹಳ್ಳಿ ನಿವಾಸಿ ಅವಿನಾಶ್ ಅವರ ತಾಯಿಗೆ ಕಣ್ಣಿಗೆ ಲೆನ್ಸ್ ಹಾಕಲು ಲಂಚ ಬೇಡಿಕೆ ಇಟ್ಟಿದ್ದಾಗಿ ಆರೋಪಿಸಲಾಗಿದೆ.

ಸಿಬ್ಬಂದಿ ಮನೋಜ್ ಮೂಲಕ ₹6,000 ಲಂಚ ಸ್ವೀಕರಿಸಿದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಈ ವೇಳೆ ಸಿಬ್ಬಂದಿ ಮನೋಜ್ ಕೂಡ ಸಿಕ್ಕಿಬಿದ್ದಿದ್ದಾನೆ.

ನಂತರ ವೈದ್ಯೆ ಸವಿತಾರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿ ವೈ ಎಸ್ ಪಿ ಮಂಜುನಾಥ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಗೃಹಿಣಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ! ಆತ್ಮಹತ್ಯೆ ಶಂಕೆ

ಬೆಂಗಳೂರು: ನಗರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಸುಪ್ರಿತಾ (27) ಎಂದು ಗುರುತಿಸಲಾಗಿದೆ. ಸುಪ್ರಿತಾ ಅವರು ಸುಮಾರು ಐದು ವರ್ಷಗಳ ಹಿಂದೆ ಕಿರಣ್ ಕುಮಾರ್ ಅವರನ್ನು ವಿವಾಹವಾಗಿದ್ದರು. ಕಿರಣ್ ಕುಮಾರ್ ಖಾಸಗಿ ಸಂಸ್ಥೆಯಲ್ಲಿ ಸೇಲ್ಸ್ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದು, ಸುಪ್ರಿತಾ ಗೃಹಿಣಿಯಾಗಿ ಮನೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ.

ಕುಟುಂಬಸ್ಥರ ಪ್ರಕಾರ ಸುಪ್ರಿತಾ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬರುತ್ತಿದ್ದರೂ, ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

ಮಾಹಿತಿ ತಿಳಿದು ಹೆಣ್ಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

error: Content is protected !!