ಗದಗ: ಅಕ್ರಮ ಜೂಜಿನ ದಂಧೆಯಲ್ಲಿ ನಿರಂತರವಾಗಿ ತೊಡಗಿ, ಹಲವು ಬಾರಿ ಪ್ರಕರಣ ದಾಖಲಾಗಿ ಶಿಕ್ಷೆಯಾಗಿದ್ದರೂ ತನ್ನ ಚಟುವಟಿಕೆಗಳನ್ನು ನಿಲ್ಲಿಸದ ರೌಡಿಶೀಟರ್ ರಾಜನಸಾ ವಿರುದ್ಧ ಗದಗ ಜಿಲ್ಲಾ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಗದಗ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಆದೇಶ ಹೊರಡಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ರಾಜನಸಾ ಹಲವು ವರ್ಷಗಳಿಂದ ಬಾಂಬೆ ಮಟ್ಕಾ ಹಾಗೂ ಅಕ್ರಮ ಜೂಜಿನ ದಂಧೆ ನಡೆಸುತ್ತಿದ್ದು, ಆತನ ವಿರುದ್ಧ ಗದಗ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 78(3) ಅಡಿಯಲ್ಲಿ 2013ರಿಂದ 2025ರವರೆಗೆ ಒಟ್ಟು 18 ಪ್ರಕರಣಗಳು ದಾಖಲಾಗಿವೆ.
ಈ ಪೈಕಿ 8 ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರೂ, ಆತ ತನ್ನ ಅಕ್ರಮ ಚಟುವಟಿಕೆಗಳನ್ನು ಮುಂದುವರಿಸಿದ್ದ ಎನ್ನಲಾಗಿದೆ.
ದಾಖಲೆಗಳ ಪ್ರಕಾರ, 2013ರಲ್ಲಿ ಎರಡು, 2015ರಲ್ಲಿ ಒಂದು, 2016ರಲ್ಲಿ ಎರಡು, 2017ರಲ್ಲಿ ಮೂರು, 2018ರಲ್ಲಿ ಎರಡು, 2019ರಲ್ಲಿ ಒಂದು, 2022ರಲ್ಲಿ ಮೂರು, 2023ರಲ್ಲಿ ಮೂರು ಹಾಗೂ 2025ರಲ್ಲಿ ಒಂದು ಪ್ರಕರಣ ದಾಖಲಾಗಿವೆ. ಎಲ್ಲ ಪ್ರಕರಣಗಳೂ ಅಕ್ರಮ ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದವು.
ಪುನಃ ಪುನಃ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದರೂ ವರ್ತನೆ ಬದಲಿಸಿಕೊಳ್ಳದೆ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ, ಗದಗ ನಗರ ಪೊಲೀಸ್ ಠಾಣೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾ ಪೊಲೀಸ್ ಆಡಳಿತ, ಕರ್ನಾಟಕ ಪೊಲೀಸ್ ಕಾಯ್ದೆಯ ಗಡಿಪಾರು ಸಂಬಂಧಿತ ವಿಧಿಗಳಡಿ ರಾಜನಸಾನನ್ನು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡುವ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ಅಕ್ರಮ ಜೂಜು, ಸಮಾಜಘಾತುಕ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಠಿಣ ಕ್ರಮ ಮುಂದುವರಿಯಲಿದ್ದು, ಸಾರ್ವಜನಿಕ ಶಾಂತಿಗೆ ಭಂಗ ತರುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

