Home Blog

ಬೆಂಗಳೂರು ಡೇ ಕೇರ್ ಕ್ರೌರ್ಯ ಪ್ರಕರಣ: ಸಿಸಿಟಿವಿ ದೃಶ್ಯ ಆಧರಿಸಿ ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿ ಇಬ್ಬರ ಬಂಧನ

ಬೆಂಗಳೂರು: ಬ್ರೂಕ್‌ಫೀಲ್ಡ್‌ನಲ್ಲಿರುವ ಬೇಬಿ ಕೇರ್ ಕೇಂದ್ರದಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಗಳಾದ ಮಂಜುಳಾ ಹಾಗೂ ವಿಜಯಲಕ್ಷ್ಮೀ ರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಲಾಗಿದೆ.

ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಭವಾನಿ, ಸಿಂಧು ಹಾಗೂ ಬಿಂದು ಅವರ ಪಾತ್ರದ ಕುರಿತು ಪ್ರಾಥಮಿಕ ತನಿಖೆಯಲ್ಲಿ ಸ್ಪಷ್ಟ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಹೆಚ್ಚಿನ ವಿಚಾರಣೆಗಾಗಿ ಈ ಮೂವರಿಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಬ್ರೂಕ್‌ಫೀಲ್ಡ್‌ನ ಬೇಬಿ ಕೇರ್ ಕೇಂದ್ರದಲ್ಲಿ ಮಕ್ಕಳಿಗೆ ಆಯಾಗಳು ದೈಹಿಕವಾಗಿ ಹಿಂಸೆ ನೀಡುತ್ತಿರುವ ದೃಶ್ಯಗಳು ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಈ ವಿಡಿಯೊಗಳನ್ನು ಮಕ್ಕಳ ಸಹಾಯವಾಣಿ (ಚೈಲ್ಡ್ ಹೆಲ್ಪ್‌ಲೈನ್) ಅಧಿಕಾರಿಗಳು ಪರಿಶೀಲಿಸಿ, ಮಕ್ಕಳ ಮೇಲೆ ಕ್ರೌರ್ಯ ಎಸಗಿರುವ ಆರೋಪದಡಿ ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ದೂರಿನ ಆಧಾರದ ಮೇಲೆ ಮಂಜುಳಾ, ವಿಜಯಲಕ್ಷ್ಮೀ, ಭವಾನಿ, ಸಿಂಧು ಹಾಗೂ ಬಿಂದು ಸೇರಿ ಐವರು ಆಯಾಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಉಳಿದ ಆರೋಪಿಗಳ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ತನಿಖೆಯ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ರೇಣುಕಾಸ್ವಾಮಿ ಕೇಸ್‌ನ ಸಾಕ್ಷಿಗೆ ಬೆದರಿಕೆ: ಮೂವರು ಅರೆಸ್ಟ್ – ತನಿಖೆ ವೇಳೆ ಹಲವು ವಿಚಾರಗಳು ಬಹಿರಂಗ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ನೀಡಿದ ಪ್ರಕರಣ ಈಗ ಹೊಸ ಹಂತಕ್ಕೆ ತಲುಪಿದೆ. ಕಾಮಾಕ್ಷಿಪಾಳ್ಯ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಹಲವು ಶಂಕಾಸ್ಪದ ಅಂಶಗಳು ಬೆಳಕಿಗೆ ಬಂದಿವೆ.

ಸಾಕ್ಷಿದಾರ ಸಂದೀಪ್ ಅವರಿಗೆ ಕೋರ್ಟ್‌ನಲ್ಲಿ ಹೇಳಿಕೆ ಬದಲಾಯಿಸುವಂತೆ ಒತ್ತಡ ಹೇರಲಾಗಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಪುನೀತ್ ಪ್ರಮುಖವಾಗಿದ್ದು, ವಿಚಾರಣೆ ವೇಳೆ ಆತ “ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿಕೆ ನೀಡಿದ್ದಾನೆ.

ತನಿಖೆಯ ಪ್ರಕಾರ, ಸಂದೀಪ್ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಕೋರ್ಟ್ ವಿಚಾರಣೆ ಕುರಿತು ವಿವರವಾಗಿ ಪ್ರಶ್ನಿಸಿ, ನಿರ್ದಿಷ್ಟ ಹೇಳಿಕೆ ನೀಡುವಂತೆ ಬೆದರಿಕೆ ಹಾಕಲಾಗಿದೆ. ಜೊತೆಗೆ ವಾಟ್ಸಪ್ ಕರೆ ಮೂಲಕ ವಕೀಲರಿಂದಲೂ ಒತ್ತಡ ಬಂದಿದೆ ಎಂಬ ಆರೋಪವಿದೆ.

ಇದೇ ವೇಳೆ, ಪ್ರಕರಣದಲ್ಲಿ ನಿರ್ಮಾಪಕರ ಪಾತ್ರದ ಶಂಕೆ ವ್ಯಕ್ತವಾಗಿದ್ದು, ಅವರ ಸಂಪರ್ಕ ಕುರಿತು ಪೊಲೀಸರು ದಾಖಲೆ ಸಂಗ್ರಹಿಸುತ್ತಿದ್ದಾರೆ. ಆರೋಪಿಗಳ ಮೊಬೈಲ್‌ಗಳನ್ನು FSLಗೆ ಕಳುಹಿಸಲಾಗಿದ್ದು, ಡಿಜಿಟಲ್ ಸಾಕ್ಷ್ಯ ಪರಿಶೀಲನೆ ನಡೆಯುತ್ತಿದೆ.

ಪುನೀತ್ ಮೊಬೈಲ್‌ನಿಂದ ದೊರೆಯುವ ಡೇಟಾ ಪ್ರಕರಣದ ದಿಕ್ಕನ್ನು ಬದಲಾಯಿಸಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಮತ್ತಷ್ಟು ರಾಜಕೀಯ ಮತ್ತು ಚಿತ್ರರಂಗ ಸಂಬಂಧಿತ ತಿರುವು ಪಡೆಯುವ ಸಾಧ್ಯತೆ ಇದೆ.

ಅಧಿಕಾರ ನಂತರ ಮೊದಲ ಕುಟುಂಬ ಭೇಟಿ: ಸಿದ್ದರಾಮಯ್ಯ–ಡಿಕೆಶಿ ನಡುವೆ ಉಪಹಾರ ಕೂಟ, ರಾಜಕೀಯ ಒಗ್ಗಟ್ಟು ಪ್ರದರ್ಶನ

ಬೆಂಗಳೂರು: ಮುಖ್ಯಮಂತ್ರಿ ಆಗಿ ಒಂದು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತರಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಅವರ ಪತ್ನಿ ಉಷಾ ಶಿವಕುಮಾರ್ ಹಾಗೂ ಸಹೋದರ ಡಿಕೆ ಸುರೇಶ್ ಸೇರಿದಂತೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಉಪಹಾರ ಕೂಟದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು ಎಂಬುದು ಗಮನಾರ್ಹವಾಗಿದೆ. ನಂತರ ಇಬ್ಬರು ನಾಯಕರು ಹಾಗೂ ಕುಟುಂಬ ಸದಸ್ಯರು ಒಟ್ಟಿಗೆ ಉಪಹಾರ ಸೇವಿಸಿ ಅನೌಪಚಾರಿಕ ಮಾತುಕತೆ ನಡೆಸಿದರು.

ಈ ವೇಳೆ ಪರಸ್ಪರ ಉಡುಗೊರೆ ವಿನಿಮಯವೂ ನಡೆದಿದ್ದು, ನಾಯಕರು ಪರಸ್ಪರ ಗೌರವ ಹಾಗೂ ಬಾಂಧವ್ಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯವಾಗಿ ಮಹತ್ವದ ಈ ಭೇಟಿ, ರಾಜ್ಯದ ನಾಯಕತ್ವದೊಳಗಿನ ಒಗ್ಗಟ್ಟು ಮತ್ತು ಸೌಹಾರ್ದ ಸಂದೇಶವಾಗಿ ಪರಿಗಣಿಸಲಾಗುತ್ತಿದೆ.

ಮಳೆ ಬಂದರೆ ನೆನೆಯಲು ಇಷ್ಟವೇ? ಇದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೆನು ಗೊತ್ತಾ..?

ಮಳೆಗಾಲ ಆರಂಭವಾದರೆ ತಂಪಾದ ಗಾಳಿ, ಚಿಟಪಟ ಮಳೆಹನಿಗಳು ಮತ್ತು ಆಹ್ಲಾದಕರ ವಾತಾವರಣ ಎಲ್ಲರ ಮನಸ್ಸನ್ನೂ ಸೆಳೆಯುತ್ತವೆ. ಈ ಸಂದರ್ಭದಲ್ಲಿ ಮಳೆಯಲ್ಲಿ ನೆನೆಯಬೇಕು ಎಂಬ ಆಸೆ ಹಲವರಲ್ಲಿ ಮೂಡುತ್ತದೆ. ಆದರೆ ಜ್ವರ ಅಥವಾ ಇತರ ಆರೋಗ್ಯ ಸಮಸ್ಯೆಗಳ ಭಯದಿಂದ ಅನೇಕರು ಹಿಂದೇಟು ಹಾಕುತ್ತಾರೆ.

ತಜ್ಞರ ಪ್ರಕಾರ, ಸೀಮಿತ ಅವಧಿಯವರೆಗೆ ಮಳೆಯಲ್ಲಿ ನೆನೆಯುವುದು ಕೆಲ ಆರೋಗ್ಯಕರ ಅನುಭವಗಳನ್ನು ನೀಡಬಹುದು. ಆದರೆ ಅತಿಯಾದ ಸಮಯ ಮಳೆಯಲ್ಲಿ ಕಳೆಯುವುದು ಸೂಕ್ತವಲ್ಲ. ಹಾಗಾದರೆ ಮಳೆಯಲ್ಲಿ ನೆನೆಯುವುದರಿಂದ ಸಿಗುವ ಪ್ರಯೋಜನಗಳು ಯಾವುವು ಮತ್ತು ಯಾವ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು ಎಂಬುದನ್ನು ತಿಳಿಯೋಣ.

ಮಳೆಯಲ್ಲಿ ನೆನೆಯುವುದರಿಂದ ಸಿಗಬಹುದಾದ ಪ್ರಯೋಜನಗಳು

ಕೂದಲಿನ ಸ್ವಚ್ಛತೆಗೆ ನೆರವು

ಮಳೆನೀರು ನೆತ್ತಿಯ ಮೇಲಿರುವ ಧೂಳು ಮತ್ತು ಕಲ್ಮಶವನ್ನು ತೊಳೆಯಲು ಸಹಾಯ ಮಾಡುತ್ತದೆ ಎಂದು ಕೆಲ ತಜ್ಞರು ಹೇಳುತ್ತಾರೆ. ಇದರಿಂದ ಕೂದಲು ತಾಜಾತನವನ್ನು ಪಡೆದು ಮೃದುತ್ವ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ ಸುರಿಯುವ ಮಳೆನೀರು ಯಾವಾಗಲೂ ಶುದ್ಧವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಒತ್ತಡ ಕಡಿಮೆ ಮಾಡಲು ಸಹಕಾರಿ

ಮಳೆಯಲ್ಲಿ ಕೆಲ ಹೊತ್ತು ನೆನೆಯುವುದು ಮನಸ್ಸಿಗೆ ನೆಮ್ಮದಿ ನೀಡುವ ಅನುಭವವಾಗಬಹುದು. ಪ್ರಕೃತಿಯೊಂದಿಗೆ ಸಮಯ ಕಳೆಯುವುದರಿಂದ ಒತ್ತಡ ಕಡಿಮೆಯಾಗಲು ಮತ್ತು ಮನಸ್ಥಿತಿ ಸುಧಾರಿಸಲು ನೆರವಾಗುತ್ತದೆ. ಇದರಿಂದ ಉತ್ತಮ ನಿದ್ರೆಯೂ ದೊರೆಯಬಹುದು.

ಮಾನಸಿಕ ಆರೋಗ್ಯಕ್ಕೆ ಉತ್ತೇಜನ

ಮಳೆಹನಿಗಳ ಸ್ಪರ್ಶ ಮತ್ತು ತಂಪಾದ ವಾತಾವರಣ ಮನಸ್ಸಿಗೆ ಉಲ್ಲಾಸ ನೀಡಬಹುದು. ದೈನಂದಿನ ಒತ್ತಡದಿಂದ ಸ್ವಲ್ಪ ಹೊತ್ತು ದೂರವಿರಲು ಇದು ನೆರವಾಗುವುದರಿಂದ ಮಾನಸಿಕ ನೆಮ್ಮದಿ ಹೆಚ್ಚಾಗುವ ಸಾಧ್ಯತೆಯಿದೆ.

ಚರ್ಮಕ್ಕೆ ತಂಪಿನ ಅನುಭವ

ಬೇಸಿಗೆಯ ಬಿಸಿಲಿನಿಂದ ಉಂಟಾಗುವ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ತಂಪಾದ ಮಳೆನೀರು ಸಹಕಾರಿಯಾಗಬಹುದು. ಇದರಿಂದ ದೇಹಕ್ಕೆ ತಾಜಾತನದ ಅನುಭವ ಸಿಗುತ್ತದೆ. ಆದರೆ ಸೂಕ್ಷ್ಮ ಚರ್ಮ ಹೊಂದಿರುವವರು ಅಥವಾ ಚರ್ಮದ ಸಮಸ್ಯೆ ಇರುವವರು ಎಚ್ಚರಿಕೆ ವಹಿಸುವುದು ಅಗತ್ಯ.

ಮಳೆನೀರಿನಲ್ಲಿ ವಿಟಮಿನ್ ಬಿ12 ನೇರವಾಗಿ ದೊರೆಯುತ್ತದೆ ಎಂಬುದಕ್ಕೆ ವೈಜ್ಞಾನಿಕವಾಗಿ ದೃಢವಾದ ಸಾಕ್ಷ್ಯಗಳು ಲಭ್ಯವಿಲ್ಲ. ಆದ್ದರಿಂದ ವಿಟಮಿನ್ ಬಿ12ಗಾಗಿ ಮಳೆನೀರನ್ನು ಅವಲಂಬಿಸುವುದು ಸೂಕ್ತವಲ್ಲ. ಅಗತ್ಯವಿದ್ದರೆ ವೈದ್ಯರ ಸಲಹೆಯಂತೆ ಆಹಾರ ಅಥವಾ ಪೂರಕಗಳನ್ನು ಸೇವಿಸುವುದು ಉತ್ತಮ.

ಮಳೆಯಲ್ಲಿ ನೆನೆಯುವಾಗ ಪಾಲಿಸಬೇಕಾದ ಮುನ್ನೆಚ್ಚರಿಕೆಗಳು

  • 15 ರಿಂದ 20 ನಿಮಿಷಗಳಿಗಿಂತ ಹೆಚ್ಚು ಸಮಯ ಮಳೆಯಲ್ಲಿ ನೆನೆಯುವುದನ್ನು ತಪ್ಪಿಸಿ.
  • ಮಳೆಯಲ್ಲಿ ನೆನೆದ ತಕ್ಷಣ ಉಗುರುಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ ಮತ್ತು ಒದ್ದೆಯಾದ ಬಟ್ಟೆಗಳನ್ನು ಬದಲಾಯಿಸಿ.
  • ದೇಹವನ್ನು ಬೆಚ್ಚಗಿರಿಸಲು ಬಿಸಿ ಸೂಪ್, ಹಾಲು ಅಥವಾ ಚಹಾ ಸೇವಿಸಬಹುದು.
  • ಮೊದಲ ಮಳೆಯ ಸಮಯದಲ್ಲಿ ಸಾಧ್ಯವಾದಷ್ಟು ನೆನೆಯುವುದನ್ನು ತಪ್ಪಿಸುವುದು ಉತ್ತಮ. ಆರಂಭಿಕ ಮಳೆಯಲ್ಲಿ ವಾತಾವರಣದಲ್ಲಿರುವ ಧೂಳು ಮತ್ತು ಮಾಲಿನ್ಯ ನೀರಿನೊಂದಿಗೆ ಬೆರೆಯುವ ಸಾಧ್ಯತೆ ಇರುತ್ತದೆ.
  • ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಜ್ವರ ಅಥವಾ ಉಸಿರಾಟದ ಸಮಸ್ಯೆ ಇರುವವರು ಮಳೆಯಲ್ಲಿ ನೆನೆಯುವ ಮೊದಲು ಎಚ್ಚರಿಕೆ ವಹಿಸಬೇಕು.

ಮಳೆಗಾಲದ ಸೊಬಗನ್ನು ಸವಿಯುವುದು ಖಂಡಿತ ಖುಷಿಯ ವಿಚಾರ. ಆದರೆ ಆರೋಗ್ಯದ ಸುರಕ್ಷತೆಯನ್ನೂ ಗಮನದಲ್ಲಿಟ್ಟುಕೊಂಡು ಮಿತವಾಗಿ ಮಳೆಯಲ್ಲಿ ನೆನೆಯುವುದೇ ಉತ್ತಮ.

32 ವರ್ಷಗಳ ಬಳಿಕ ಮುದ್ರಾಂಕ ಶುಲ್ಕ ನೋಟಿಸ್ ಅಮಾನ್ಯ: ಕಂದಾಯ ಇಲಾಖೆಯ ಕ್ರಮ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮೂರು ದಶಕಗಳಿಗೂ ಹೆಚ್ಚು ಹಳೆಯ ಆಸ್ತಿ ನೋಂದಣಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊರತೆಯ ಮುದ್ರಾಂಕ ಶುಲ್ಕ ವಸೂಲಿಗಾಗಿ ಕಂದಾಯ ಇಲಾಖೆ ಹೊರಡಿಸಿದ್ದ ನೋಟಿಸ್‌ನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಅಮಾನ್ಯಗೊಳಿಸಿದೆ.

ಕಾನೂನು ನಿಗದಿಪಡಿಸಿರುವ ಅವಧಿ ಮುಗಿದ ಬಳಿಕ ಇಂತಹ ವಸೂಲಿ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಅಧಿಕಾರವಿಲ್ಲ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೆಳಗಾವಿಯ ಅಂಜನೇಯ ನಗರದ ನಿವಾಸಿ ರಾಜೇಶ್ವರಿ ಮುತ್ತಣ್ಣ ಬಿರಾಜ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ನ್ಯಾಯಪೀಠವು ಕರ್ನಾಟಕ ಮುದ್ರಾಂಕ ಕಾಯ್ದೆ–1957ರ ಸೆಕ್ಷನ್ 46ಎ(1) ಅನ್ನು ಉಲ್ಲೇಖಿಸಿ, ಮುದ್ರಾಂಕ ಶುಲ್ಕದ ಕೊರತೆ ವಸೂಲಿ ಮಾಡಲು ಅಧಿಕಾರಿಗಳಿಗೆ ಮಿತಿಯಿಲ್ಲದ ಅಧಿಕಾರ ಇರುವುದಿಲ್ಲ ಎಂದು ತಿಳಿಸಿದೆ. ಸಾಮಾನ್ಯವಾಗಿ ಇಂತಹ ಕ್ರಮವನ್ನು ಐದು ವರ್ಷಗಳೊಳಗೆ ಕೈಗೊಳ್ಳಬೇಕು. ವಂಚನೆ, ಪಿತೂರಿ ಅಥವಾ ಉದ್ದೇಶಪೂರ್ವಕ ತಪ್ಪು ಮಾಹಿತಿ ನೀಡಿರುವುದು ಸಾಬೀತಾದರೆ ಮಾತ್ರ ಗರಿಷ್ಠ 10 ವರ್ಷಗಳವರೆಗೆ ಅವಧಿ ವಿಸ್ತರಿಸಬಹುದಾಗಿದೆ ಎಂದು ಸ್ಪಷ್ಟಪಡಿಸಿದೆ.

ಈ ಪ್ರಕರಣದಲ್ಲಿ 1993ರ ವ್ಯವಹಾರಕ್ಕೆ ಸಂಬಂಧಿಸಿ 2025ರಲ್ಲಿ, ಅಂದರೆ ಸುಮಾರು 32 ವರ್ಷಗಳ ಬಳಿಕ ನೋಟಿಸ್ ಜಾರಿಗೊಳಿಸಿರುವುದು ಕಾನೂನುಬಾಹಿರವಾಗಿದ್ದು, ಕಾಲಮಿತಿಯನ್ನು ಸಂಪೂರ್ಣವಾಗಿ ಮೀರಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ನಿಗದಿತ ಅವಧಿ ಮುಗಿದ ನಂತರ ಅಧಿಕಾರಿಗಳಿಗೆ ಮುದ್ರಾಂಕ ಶುಲ್ಕ ವಸೂಲಾತಿ ಪ್ರಕ್ರಿಯೆ ಆರಂಭಿಸುವ ಅಧಿಕಾರವೇ ಇರುವುದಿಲ್ಲ. ಆದ್ದರಿಂದ, ಇಂತಹ ನೋಟಿಸ್‌ಗಳಿಗೆ ಕಾನೂನುಬದ್ಧ ಮಾನ್ಯತೆ ಇರುವುದಿಲ್ಲ ಎಂದು ಹೇಳಿದೆ.

ಅರ್ಜಿದಾರರು ಮೂಲ ವ್ಯವಹಾರದ ಪಕ್ಷಕಾರರಲ್ಲ. ಅವರು ನಂತರದ ಅವಧಿಯಲ್ಲಿ ಆಸ್ತಿಯನ್ನು ಖರೀದಿಸಿದ ಮುಗ್ಧ ಖರೀದಿದಾರರಾಗಿದ್ದಾರೆ. ಹಲವು ವರ್ಷಗಳ ಹಿಂದೆ ಮಾರಾಟಗಾರರು ಮಾಡಿರುವ ಯಾವುದೇ ತಪ್ಪಿಗೆ ಈಗಿನ ಖರೀದಿದಾರರನ್ನು ಹೊಣೆಗಾರರನ್ನಾಗಿ ಮಾಡುವುದು ನೋಂದಾಯಿತ ಆಸ್ತಿ ವ್ಯವಹಾರಗಳ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ಅಧಿಕಾರ ವ್ಯಾಪ್ತಿ ಮೀರಿ ನೀಡಲಾಗಿದ್ದ ನೋಟಿಸ್‌ನ್ನು ರದ್ದುಗೊಳಿಸಿರುವ ಹೈಕೋರ್ಟ್, ಮುದ್ರಾಂಕ ಶುಲ್ಕ ಬಾಕಿ ಕುರಿತು ಆಸ್ತಿಯ ದಾಖಲೆಗಳಲ್ಲಿ ಮಾಡಲಾಗಿದ್ದ ನಮೂದನ್ನೂ ತೆರವುಗೊಳಿಸುವಂತೆ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:
ಅರ್ಜಿದಾರರ ಆಸ್ತಿಗೆ ಸಂಬಂಧಿಸಿದ ಮಾರಾಟ ಪತ್ರವು 1993ರ ಮೇ 15ರಂದು ನೋಂದಣಿಯಾಗಿತ್ತು. ಬಳಿಕ ಸುಮಾರು 32 ವರ್ಷಗಳ ನಂತರ, 2025ರ ಮಾರ್ಚ್ 20ರಂದು ಬೆಳಗಾವಿ ತಹಶೀಲ್ದಾರರು ಕೊರತೆಯ ಮುದ್ರಾಂಕ ಶುಲ್ಕ ಪಾವತಿಸುವಂತೆ ನೋಟಿಸ್ ನೀಡಿದ್ದರು. ಈ ನೋಟಿಸ್ ಆಧರಿಸಿ ಭೂ ದಾಖಲೆಗಳ ಇಲಾಖೆಯು ಆಸ್ತಿಯ ದಾಖಲೆಗಳಲ್ಲಿ ಸಂಬಂಧಿತ ನಮೂದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜೇಶ್ವರಿ ಮುತ್ತಣ್ಣ ಬಿರಾಜ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗೃಹ ಸಚಿವರ ತವರಲ್ಲೇ ಪೊಲೀಸರ ಎಡವಟ್ಟು! ಪೋಕ್ಸೋ ಕೇಸ್ ಆರೋಪಿ ಠಾಣೆಯಿಂದ ಎಸ್ಕೇಪ್

ಕಲಬುರಗಿ: ಗೃಹ ಸಚಿವರ ತವರ ಜಿಲ್ಲೆಯಾದ ಕಲಬುರಗಿಯಲ್ಲಿ ಪೊಲೀಸ್ ಭದ್ರತಾ ಲೋಪ ಬೆಳಕಿಗೆ ಬಂದಿದೆ.

ಅಫಜಲಪುರ ಪೊಲೀಸ್ ಠಾಣೆಯಿಂದ POCSO ಪ್ರಕರಣದ ಆರೋಪಿ ಮಂಜುನಾಥ್ ಪರಾರಿಯಾಗಿರುವ ಘಟನೆ ನಡೆದಿದೆ.

ಸುಮಾರು ಒಂದು ವಾರದ ಹಿಂದೆ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆತರಲಾಗಿತ್ತು. ಗುರುವಾರ ಮಧ್ಯರಾತ್ರಿ ಆರೋಪಿ ಲಾಕಪ್‌ನಿಂದ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಠಾಣೆಯಲ್ಲಿದ್ದ ಸಿಬ್ಬಂದಿ ನಿದ್ರೆಯಲ್ಲಿದ್ದ ಸಂದರ್ಭವನ್ನು ಬಳಸಿಕೊಂಡು ಆರೋಪಿ ಎಸ್ಕೇಪ್ ಆಗಿದ್ದಾನೆ. ಪರಾರಿಯ ದೃಶ್ಯಗಳು ಕೂಡ ಲಭ್ಯವಾಗಿವೆ ಎಂದು ತಿಳಿದುಬಂದಿದೆ.

ಈ ಘಟನೆ ಬಳಿಕ ಎಚ್ಚೆತ್ತಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಗೃಹ ಸಚಿವರ ತವರಿನಲ್ಲೇ ನಡೆದಿರುವ ಈ ಘಟನೆ ಸದ್ಯ ಇಡೀ ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟುಮಾಡಿದೆ. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿಯ ವಿರುದ್ಧವೂ ಕಠಿಣ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

 

ತುಂಗಭದ್ರಾ ಡ್ಯಾಂ ಕಾಲುವೆ ನೀರು ಸಂಪೂರ್ಣ ಸ್ಥಗಿತ: ರೈತರಿಗೆ ದೊಡ್ಡ ಸಂಕಷ್ಟ!

ಕೊಪ್ಪಳ: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವುದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಕಡಿಮೆಯಾಗಿರುವುದರಿಂದ ಮುಂಗಾರು ಬೆಳೆಗೆ ನೀರು ಒದಗಿಸಲು ಸಾಧ್ಯವಿಲ್ಲ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರದ ಸೂಚನೆಯ ಮೇರೆಗೆ ಕಾಲುವೆ ನೀರು ಬಂದ್ ಮಾಡಲಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಹೆಚ್ಚಾಗಿದೆ.

ಪ್ರಸ್ತುತ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದ್ದು, ಇದು ಕಳೆದ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಟ್ಟವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 75 ಟಿಎಂಸಿ ನೀರು ಸಂಗ್ರಹವಾಗಿತ್ತು. ಆದರೆ ಈ ಬಾರಿ ಮುಂಗಾರು ಮಳೆಯೇ ತಡವಾಗಿರುವುದರಿಂದ ಜೂನ್ ತಿಂಗಳಲ್ಲಿ ಯಾವುದೇ ಪ್ರಮುಖ ಒಳಹರಿವು ದಾಖಲಾಗಿಲ್ಲ.

ಈ ಹಿನ್ನೆಲೆ ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳ ಲಕ್ಷಾಂತರ ರೈತರಿಗೆ ತೀವ್ರ ಸಂಕಷ್ಟ ಉಂಟಾಗಿದೆ. ಕೃಷಿ ಇಲಾಖೆಯು ಈಗಾಗಲೇ ಜಲಾಶಯದ ನೀರನ್ನೇ ನಂಬಿ ಹೆಚ್ಚಿನ ನೀರು ಬೇಡುವ ಬೆಳೆಗಳನ್ನು ಬಿತ್ತಬಾರದು ಎಂದು ಎಚ್ಚರಿಕೆ ನೀಡಿದೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯ ಬಳಿಕ ರೈತರಿಗೆ ಎಚ್ಚರಿಕೆ ನೀಡಿದ್ದು, ಕೇವಲ ಜಲಾಶಯದ ನೀರನ್ನು ನಂಬಿ ಬಿತ್ತನೆ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಈ ವರ್ಷದ ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ಶೇಕಡಾ 42ರಷ್ಟು ಮಳೆ ಕೊರತೆ ದಾಖಲಾಗಿದ್ದು, ಇದು ಕಳೆದ ಐದು ದಶಕಗಳಲ್ಲೇ ನಾಲ್ಕನೇ ಅತ್ಯಂತ ಕಡಿಮೆ ಮಳೆಯ ಅವಧಿಯಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಕುಸಿದಿದೆ.

ಒಟ್ಟಾರೆ, ಮಳೆ ಕೊರತೆ ಮತ್ತು ಜಲಾಶಯ ನೀರಿನ ಇಳಿಕೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಕೃಷಿ ಚಟುವಟಿಕೆಗಳಿಗೆ ಗಂಭೀರ ಭೀತಿ ಎದುರಾಗಿದೆ.

ವಿದ್ಯುತ್ ಖಾಸಗೀಕರಣಕ್ಕೆ ಸರ್ಕಾರ ವಿರೋಧ: ಇಂದಿನ ಸಭೆಯಲ್ಲಿ ತೀರ್ಮಾನ ಎಂದ ಸಿಎಂ ಡಿಕೆಶಿ!

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಅಂತಿಮ ತೀರ್ಮಾನವನ್ನು ಶುಕ್ರವಾರ ನಡೆಯುವ ಕೆಇಆರ್‌ಸಿ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಖಾಸಗೀಕರಣಕ್ಕೆ ಸಂಬಂಧಿಸಿ ಟಾಟಾ ಸಂಸ್ಥೆಯವರು ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಎಸ್ಕಾಂಗಳು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಸರ್ಕಾರದ ನಿಲುವು ಸ್ಪಷ್ಟವಾಗಿದ್ದು, ಖಾಸಗೀಕರಣಕ್ಕೆ ಒಪ್ಪದಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಶುಕ್ರವಾರದ ಕೆಇಆರ್‌ಸಿ ಸಭೆಯಲ್ಲಿ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಸಿಎಂ, ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಲು ‘ಪ್ರಜಾಸೇವೆ ಇಲಾಖೆ’ ಆರಂಭಿಸಲಾಗುತ್ತಿದೆ. ಈ ಇಲಾಖೆಯ ಜವಾಬ್ದಾರಿಯನ್ನು ಒಬ್ಬ ಸಚಿವರಿಗೆ ನೀಡಲಾಗುವುದು. ಪ್ರತಿ ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಕನಿಷ್ಠ ಎರಡು ದಿನ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವುದು ಕಡ್ಡಾಯವಾಗಲಿದೆ. ಎಲ್ಲಾ ಇಲಾಖೆಯ ಅಧಿಕಾರಿಗಳು ಈ ಸಭೆಗಳಲ್ಲಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಜನರ ಅಹವಾಲುಗಳನ್ನು ನೇರವಾಗಿ ಸರ್ಕಾರವೇ ಆಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ. ಒಂದು ದಿನ ಮುಂಚಿತವಾಗಿ ಅರ್ಜಿಗಳನ್ನು ಪರಿಶೀಲಿಸಿ, ಸ್ಥಳೀಯ ಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಹೇಳಿದರು. ತಾವು ಕೂಡ ಕೆಲ ತಾಲೂಕುಗಳಲ್ಲಿ ಇಂತಹ ಸಭೆಗಳಲ್ಲಿ ಭಾಗವಹಿಸುವುದಾಗಿ ಅವರು ತಿಳಿಸಿದ್ದಾರೆ.

 

ಮಂಡ್ಯದಲ್ಲಿ ಮೆಡಿಸಿನ್ ಕಂಟೇನರ್ ಮೇಲೆ ಗುಂಡಿನ ದಾಳಿ! ಐಷಾರಾಮಿ ಕಾರಿನಲ್ಲಿ ಬಂದಿದ್ದ ಪ್ರಭಾವಿ ವ್ಯಕ್ತಿಯ ಪುತ್ರನಿಂದ ಕೃತ್ಯ?

ಮಂಡ್ಯ: ಬೆಂಗಳೂರಿನಿಂದ ಮೆಡಿಸಿನ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ಕಂಟೇನರ್ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು–ಮೈಸೂರು ಹಳೆ ಹೆದ್ದಾರಿಯಲ್ಲಿ ನಿನ್ನೆ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಘಟನೆ ನಡೆದಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಐಷಾರಾಮಿ ಕಾರಿನಲ್ಲಿ ಬಂದಿದ್ದ ಕೆಲವರು ಕಂಟೇನರ್ ಲಾರಿಯನ್ನು ಅಡ್ಡಗಟ್ಟಲು ಯತ್ನಿಸಿದ್ದಾರೆ. ಕಂಟೇನರ್‌ನಲ್ಲಿ ಚಾಲಕ ಮಾತ್ರ ಇದ್ದು, ಮೈಸೂರು ಮೂಲದ ಚಾಲಕ ಶಂಕರ್ ಘಟನೆ ಬಳಿಕ ಭಯಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡದೆ ಮುಂದೆ ಸಾಗಿದ್ದಾನೆ ಎಂದು ಹೇಳಲಾಗಿದೆ.

ಲಾರಿ ನಿಲ್ಲಿಸದ ಹಿನ್ನೆಲೆಯಲ್ಲಿ ಆರೋಪಿತರು ಗುಂಡು ಹಾರಿಸಿದ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ಮಂಡ್ಯದ ಪ್ರಭಾವಿ ವ್ಯಕ್ತಿಯ ಪುತ್ರ ಹಾಗೂ ಅವರ ತಂಡ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪವೂ ಹೊರಬಂದಿದೆ.

ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ಚಾಲಕ ಶಂಕರ್‌ನನ್ನು ಠಾಣೆಗೆ ಕರೆಸಿ ದೂರು ದಾಖಲಿಸಿಕೊಂಡಿದ್ದಾರೆ. ನಂತರ ಆರೋಪಿತ ವ್ಯಕ್ತಿಯನ್ನು ತಡರಾತ್ರಿ ಠಾಣೆಗೆ ಕರೆಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಚಾರಣೆ ನಡೆಸಲಾಗಿದೆ. ವಿಚಾರಣೆ ಮಂಡ್ಯ DYSP ಕಚೇರಿಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಅತೀ ಗಂಭೀರ ವಿಷಯವೆಂದರೆ, ಆರೋಪಿತನ ಬಳಿ ಗನ್ ಲೈಸೆನ್ಸ್ ಇಲ್ಲದಿದ್ದರೂ ಶಸ್ತ್ರಾಸ್ತ್ರ ಬಳಕೆಯಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆತನಿಗೆ ಗನ್ ಹೇಗೆ ದೊರಕಿತು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಇದು ದರೋಡೆ ಯತ್ನವಾಗಿತ್ತೇ ಅಥವಾ ಬೇರೆ ಕಾರಣವಿದೆಯೇ ಎಂಬುದು ಪರಿಶೀಲನೆಗೆ ಒಳಪಟ್ಟಿದೆ.

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ತರಗತಿ ನಡೆಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಹಾಗೂ ಅನಗತ್ಯ ಸಂಚಾರವನ್ನು ತಪ್ಪಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.