ವಿಜಯಪುರ: ಚಿನ್ನಾಭರಣ ತಯಾರಿಕಾ ಮಳಿಗೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಅಕ್ಕಸಾಲಿಗರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ನಗರದ ಹೃದಯಭಾಗವಾದ ಸರಾಫ್ ಬಜಾರ್ನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಬೆಳ್ಳಂಬೆಳಗ್ಗೆ ಕೆಲಸ ಆರಂಭಿಸಲು ಅಂಗಡಿಗೆ ಬಂದಿದ್ದ ಕಾರ್ಮಿಕರು ಸಿದ್ಧತೆ ನಡೆಸುತ್ತಿದ್ದ ವೇಳೆ ಏಕಾಏಕಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಅಂಗಡಿಗಳಲ್ಲಿದ್ದ ವಸ್ತುಗಳು ನೆಲಕ್ಕಪ್ಪಳಿಸಿದ್ದು, ಗಾಜುಗಳು ಪುಡಿಪುಡಿಯಾಗಿವೆ.
ಘಟನೆಯಲ್ಲಿ ಬೀಜು (38) ಹಾಗೂ ನಾನಾ ಹಕ್ಕಿಂ (40) ಎಂಬ ಇಬ್ಬರು ಅಕ್ಕಸಾಲಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿನ್ನಾಭರಣ ತಯಾರಿಕೆಗೆ ಬಳಸಲಾಗುವ ಕುಲುಮೆ ಕಾರ್ಯಕ್ಕಾಗಿ ಉಪಯೋಗಿಸುತ್ತಿದ್ದ ಗ್ಯಾಸ್ ಸಿಲಿಂಡರ್ ಲೀಕ್ ಆಗಿದ್ದೇ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಸ್ಫೋಟದ ಪರಿಣಾಮ ಅಂಗಡಿಯ ಕಬ್ಬಿಣದ ಶಟರ್ ಸಂಪೂರ್ಣವಾಗಿ ಕಿತ್ತು ರಸ್ತೆಗೆ ಎಸೆಯಲ್ಪಟ್ಟಿದ್ದು, ಪಕ್ಕದ ಗಿಫ್ಟ್ ಸೆಂಟರ್ ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳಿಗೂ ಭಾರೀ ಹಾನಿಯಾಗಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

