ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಮುಖ ಅಸ್ತ್ರ ಎಂಬ ಸಂದೇಶದೊಂದಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ವತಿಯಿಂದ ತಾಲೂಕಿನ ಚಿಂತರಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.
ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ, ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಹೆಗ್ಡಳ್ ಪರಶುರಾಮ್, ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಅವರ ಜೀವನ ಸಾಧನೆ ಹಾಗೂ ಸಾಮಾಜಿಕ ಹೋರಾಟಗಳನ್ನು ಸ್ಮರಿಸಿದರು. ವರ್ಣಭೇದ, ಜಾತಿ ವ್ಯವಸ್ಥೆ ಹಾಗೂ ಮೂಢನಂಬಿಕೆಗಳ ವಿರುದ್ಧ ಅವರು ನಡೆಸಿದ ಹೋರಾಟಗಳು ಸಮಾಜಕ್ಕೆ ದಿಕ್ಕು ತೋರಿವೆ ಎಂದು ಹೇಳಿದರು.
ತಾಲೂಕು ಸಂಘಟನಾ ಸಂಚಾಲಕ ದಶಮಾಪುರ ಮರಿಯಪ್ಪ ಮಾತನಾಡಿ, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಮತ್ತು ಅಭಿವೃದ್ಧಿ ಸಾಧ್ಯ. ಸರ್ಕಾರ ಹಾಗೂ ವಿವಿಧ ಸಂಘ-ಸಂಸ್ಥೆಗಳು ವಿದ್ಯಾರ್ಥಿಗಳಿಗಾಗಿ ಒದಗಿಸುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಂತರಪಳ್ಳಿ ದೇವೇಂದ್ರಪ್ಪ ಮಾತನಾಡಿ, ಶಿಕ್ಷಣಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಮಕ್ಕಳಿಗೆ ಪುಸ್ತಕ-ಪೆನ್ನು ವಿತರಿಸುತ್ತಿರುವ ದಲಿತ ಸಂಘರ್ಷ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ಯಾರಂಟಿ ಅಧ್ಯಕ್ಷ ಸೊನ್ನದ ಗುರುಬಸವರಾಜ್ ಮಾತನಾಡಿ, ಮಕ್ಕಳ ಮನಸ್ಸು ಖಾಲಿ ಪುಸ್ತಕದಂತೆ ಇರುತ್ತದೆ. ಉತ್ತಮ ಶಿಕ್ಷಣ ಮತ್ತು ಸಂಸ್ಕಾರಗಳಿಂದ ತಮ್ಮ ಜೀವನವನ್ನು ಯಶಸ್ವಿಯಾಗಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಸಂಘಟನಾ ಸಂಚಾಲಕ ಪ್ರಭಾಕರ ಆನಂದಳ್ಳಿ ಮಾತನಾಡಿ, “ಶಿಕ್ಷಣ ಎನ್ನುವುದು ಹುಲಿಯ ಹಾಲಿದ್ದಂತೆ, ಅದನ್ನು ಕುಡಿದವರು ಘರ್ಜಿಸಲೇಬೇಕು” ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರವನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಶ್ರೀನಿವಾಸ್, ಮುಖ್ಯಗುರು ಬಸವರಾಜ್, ಗ್ರಾಮಸ್ಥರಾದ ಹುಲುಗಪ್ಪ, ಸುರೇಶ ಬಣಕಾರ, ಅಂಜಿನಪ್ಪ, ಪ್ರಕಾಶ, ಮಂಜು, ಕೊಟ್ರೇಶ ತಳವಾರ, ಶಿಕ್ಷಕರಾದ ವಾಮದೇವಪ್ಪ, ಭಾರತಿ, ವಿರುಪಾಕ್ಷಿ, ರಾಘವೇಂದ್ರ ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.
“ಶಿಕ್ಷಣವೇ ಸಮಾಜದ ಏಳಿಗೆಗೆ ಮೂಲಭೂತ ಅಸ್ತ್ರ. ವಿದ್ಯಾರ್ಥಿಗಳು ದೊರೆಯುತ್ತಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು.”
ದಶಮಾಪುರ ಮರಿಯಪ್ಪ
ತಾಲೂಕು ಸಂಘಟನಾ ಸಂಚಾಲಕ, ದಲಿತ ಸಂಘರ್ಷ ಸಮಿತಿ

