ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದ್ದು, ಸರ್ಕಾರ ತಕ್ಷಣ ಸಮೀಕ್ಷೆ ನಡೆಸಿ ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲದಂತಾಗಿದ್ದು, ಕೃಷಿ ಇಲಾಖೆ ಏನು ಮಾಡುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಪರ್ಯಾಯ ಬೆಳೆ ಬೆಳೆಯಿರಿ, ಅಲ್ಪಾವಧಿ ಬೆಳೆ ಬೆಳೆಸಿರಿ ಎಂಬ ಸಲಹೆಗಳು ಹೊಸದೇನಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸದ ಇಲಾಖೆ ರೈತರ ಪಾಲಿಗೆ ಸತ್ತಂತಾಗಿದೆ ಎಂದು ಟೀಕಿಸಿದರು.
ಬರಗಾಲ ಘೋಷಿಸಿದ ಬಳಿಕ ಕೇಂದ್ರ ಸರ್ಕಾರ ಅಗತ್ಯ ಅನುದಾನ ಒದಗಿಸಲಿದೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಗಂಭೀರ ಪ್ರಯತ್ನ ನಡೆಸಿಲ್ಲ ಎಂದು ಆರೋಪಿಸಿದರು.
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಯುವಕರ ಬಗ್ಗೆ ಭಯ ಉಂಟಾಗಿದೆ. ಉದ್ಯೋಗ ಸೃಷ್ಟಿಸುವ ಬದಲು ಯುವಕರಿಗೆ ಆಮಿಷವೊಡ್ಡಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರದ ನ್ಯಾಷನಲ್ ಕ್ಯಾರಿಯರ್ ಸರ್ವಿಸ್ ಪೋರ್ಟಲ್ ಮೂಲಕ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರ ನಡುವೆ ನೇರ ಸಂಪರ್ಕ ಕಲ್ಪಿಸಲಾಗಿದ್ದು, ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ಇದೇ ಮಾದರಿಯ ಯೋಜನೆಯನ್ನು ಹೊಸ ಹೆಸರಿನಲ್ಲಿ ಘೋಷಿಸಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಎಂಜಿಎನ್ಆರ್ಇಜಿಎಸ್ ಯೋಜನೆಯಡಿ ಕೇಂದ್ರ ಸರ್ಕಾರ 100 ದಿನಗಳ ಉದ್ಯೋಗಕ್ಕೆ ಅನುದಾನ ನೀಡುತ್ತಿದ್ದು, ಉಳಿದ 25 ದಿನಗಳಿಗೆ ಮಾತ್ರ ರಾಜ್ಯ ಸರ್ಕಾರ ಹಣ ಒದಗಿಸಬೇಕಿದೆ. ಹಲವು ರಾಜ್ಯಗಳು ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ರೈತರ ಹಿತದೃಷ್ಟಿಯಿಂದ ಕರ್ನಾಟಕದಲ್ಲೂ ತಕ್ಷಣ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಬಿಡದಿ ಟೌನ್ಶಿಪ್ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಷ್ಠೆ ಬಿಟ್ಟು ನಡೆದುಕೊಳ್ಳಬೇಕು. ರೈತರಿಗೆ ತೊಂದರೆಯಾಗದಂತೆ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಟೌನ್ಶಿಪ್ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.
“ರಾಜ್ಯದಲ್ಲಿ ಕೃಷಿ ಸಚಿವರಿಲ್ಲ, ಕೃಷಿ ಇಲಾಖೆ ಏನು ಮಾಡುತ್ತಿದೆ ಎಂಬುದೇ ಗೊತ್ತಿಲ್ಲ. ಒಟ್ಟಾರೆ ರೈತರ ಪಾಲಿಗೆ ಇಲಾಖೆ ಸತ್ತಂತಾಗಿದೆ.”
– ಬಸವರಾಜ ಬೊಮ್ಮಾಯಿ, ಸಂಸದ

