Home Blog

4 ದಿನಗಳಿಂದ ಜೋಳದ ತೋಟದಲ್ಲೇ ಇದ್ದ ಆನೆ ಮರಿ: ಸುರಕ್ಷಿತವಾಗಿ ಕಾಡಿಗೆ ಮರಳಿಸಿದ ಸಿಬ್ಬಂದಿ!

ಮೈಸೂರು: ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಮರಿಯಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 6 ಗಂಟೆಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕಾಡಿಗೆ ಮರಳಿಸಿದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಡದಹಳ್ಳಿ ಗ್ರಾಮದ ರೈತ ಮಹಿಳೆ ಸಣ್ಣಮ್ಮ ಅವರಿಗೆ ಸೇರಿದ ಮುಸುಕಿನ ಜೋಳದ ಜಮೀನಿಗೆ ಸುಮಾರು 2 ವರ್ಷದ ಗಂಡಾನೆ ಮರಿ ನುಗ್ಗಿತ್ತು. ಕಳೆದ ನಾಲ್ಕು ದಿನಗಳಿಂದ ಅದೇ ಜಮೀನಿನಲ್ಲಿ ಬೀಡುಬಿಟ್ಟಿದ್ದ ಆನೆ ಮರಿ ಜೋಳದ ಬೆಳೆಯನ್ನು ತಿಂದು, ತುಳಿದು ಹಾನಿಗೊಳಿಸಿತ್ತು. ಇದರಿಂದ ರೈತ ಮಹಿಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ.

ಆನೆ ಮರಿ ಹೊಲದಲ್ಲೇ ಇರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದರು. ಆನೆ ಮರಿಯನ್ನು ಸುರಕ್ಷಿತವಾಗಿ ಕಾಡಿಗೆ ಕಳುಹಿಸಲು ಮೂರು ಸಾಕಾನೆಗಳನ್ನು ಬಳಸಲಾಯಿತು.

ಕಾರ್ಯಾಚರಣೆ ವೇಳೆ ಆನೆ ಮರಿ ಸಿಬ್ಬಂದಿಯ ಕೈಗೆ ಸಿಗದೆ ಬೆದರಿಕೊಂಡು ಹೊಲದಲ್ಲಿ ಓಡಾಡತೊಡಗಿತು. ಹೀಗಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿದರು.

ಸುಮಾರು 6 ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಮರಿಯಾನೆಗೆ ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಪಕ್ಕದ ಅರಣ್ಯ ಪ್ರದೇಶದತ್ತ ಕಳುಹಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಆನೆ ಮರಿ ಕಾಡಿಗೆ ಮರಳಿದ ಬಳಿಕ ದಡದಹಳ್ಳಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

NEET ಪ್ರತಿಭಟನೆ ಕಾವು: ಜಂತರ್ ಮಂತರ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ; 6ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯ!

0

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ‘ಸಂಸದ್ ಚಲೋ’ ಕರೆ ನೀಡಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ನಡೆಸಿದ್ದಾರೆ. ಅಲ್ಲದೆ, ಪರಿಸ್ಥಿತಿ ನಿಯಂತ್ರಿಸಲು ಅಶ್ರುವಾಯು ಪ್ರಯೋಗಿಸಲಾಗಿದೆ.

ಟಾಲ್‌ಸ್ಟಾಯ್ ಮಾರ್ಗ ಹಾಗೂ ಜಂತರ್ ಮಂತರ್ ಸುತ್ತಮುತ್ತ ಘರ್ಷಣೆ ತೀವ್ರಗೊಂಡಿದ್ದು, ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಇಬ್ಬರು ಎಸಿಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ 6ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ನುಸುಳಿದ ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಲಾಠಿಗಳನ್ನು ಕಸಿದುಕೊಂಡು ಹಲ್ಲೆ ನಡೆಸಿರುವ ಆರೋಪವೂ ಕೇಳಿಬಂದಿದೆ. ಆಯೋಜಕರ ಮನವಿಯನ್ನೂ ಲೆಕ್ಕಿಸದೆ ಕೆಲವರು ಹಿಂಸಾಚಾರಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ದೆಹಲಿ ಹಾಗೂ ಜಂತರ್ ಮಂತರ್ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜ್ಯಾಮರ್‌ಗಳನ್ನು ಅಳವಡಿಸಿ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಹಾಗೂ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರ ಗುಂಪೊಂದು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ಹಾಗೂ ಬಾಟಲಿಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಸನದಲ್ಲಿ ಕಾಡಾನೆಗಳ ಅಟ್ಟಹಾಸ: 8 ಎಕರೆ ಕಾಫಿ ತೋಟ ಧ್ವಂಸ, ₹6 ಲಕ್ಷಕ್ಕೂ ಅಧಿಕ ನಷ್ಟ!

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟವನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ದಾಳಿಯಿಂದ ಕಾಫಿ, ಅಡಿಕೆ ಹಾಗೂ ಬಾಳೆ ಬೆಳೆಗಳು ನಾಶವಾಗಿದ್ದು, ತೋಟದ ಮಾಲೀಕರಿಗೆ ಸುಮಾರು 6 ಲಕ್ಷ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ.

ಜಗನ್ನಾಥ್ ಶೆಟ್ಟಿ, ಪ್ರಭಾಕರ್ ಶೆಟ್ಟಿ ಹಾಗೂ ಸ್ವಾಮಿ ಅವರಿಗೆ ಸೇರಿದ ತೋಟಕ್ಕೆ ಮರಿಗಳೊಂದಿಗೆ ಬಂದ 20ಕ್ಕೂ ಹೆಚ್ಚು ಕಾಡಾನೆಗಳು ನುಗ್ಗಿ ಬೆಳೆಗಳನ್ನು ಹಾನಿಗೊಳಿಸಿವೆ. ಕಾಡಾನೆಗಳ ಹಿಂಡು ತೋಟದಲ್ಲೇ ಬೀಡುಬಿಟ್ಟಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

ಮರಿಗಳೂ ಹಿಂಡಿನೊಂದಿಗೆ ಇರುವ ಕಾರಣ ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಎಚ್ಚರಿಕೆಯಿಂದ ನಡೆದುಕೊಳ್ಳುತ್ತಿದ್ದಾರೆ. ಪಟಾಕಿ ಸಿಡಿಸಿ ಕಾಡಾನೆಗಳನ್ನು ಓಡಿಸಿದರೆ ಅವುಗಳು ಆಕ್ರೋಶಗೊಂಡು ಮನುಷ್ಯರ ಮೇಲೆ ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಅಂತಹ ಕ್ರಮಕ್ಕೆ ಸಿಬ್ಬಂದಿ ಹಿಂದೇಟು ಹಾಕಿದ್ದಾರೆ.

ಕಾಡಾನೆಗಳ ಹಾವಳಿಯಿಂದ ತೋಟದ ಮಾಲೀಕರು ಹಾಗೂ ಸುತ್ತಮುತ್ತಲಿನ ರೈತರು ಆತಂಕದಲ್ಲಿದ್ದು, ಶೀಘ್ರದಲ್ಲೇ ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಮರಳಿಸುವಂತೆ ಹಾಗೂ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ: ಇಂದು ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ರಜೆ!

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ಇಲಾಖೆ ನೀಡಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆ ಪ್ರಕಾರ ಜುಲೈ 24ರಂದೂ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಗಲ್‌ಬೆಟ್‌ನಲ್ಲಿ 22 ಸೆಂ.ಮೀ. ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 7 ಸೆಂ.ಮೀ., ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 6 ಸೆಂ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯಲ್ಲಿ 6 ಸೆಂ.ಮೀ., ಪುತ್ತೂರು ಹಾಗೂ ಸುಬ್ರಹ್ಮಣ್ಯದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ. ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮೂಡುಬಿದಿರೆಯಲ್ಲಿ ತಲಾ 3 ಸೆಂ.ಮೀ. ಮತ್ತು ರಾಯಚೂರು ಜಿಲ್ಲೆಯ ಕುರ್ಡಿಯಲ್ಲಿ 3 ಸೆಂ.ಮೀ. ಮಳೆಯಾಗಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 23ರಂದು ಜಿಲ್ಲೆಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ನಿರಂತರ ಮಳೆಯಿಂದ ಭೂಕುಸಿತ ಹಾಗೂ ಪ್ರವಾಹದ ಆತಂಕ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.

ಸಣ್ಣ ಮಳೆಗೂ ಮುಳುಗಿದ ಬೆಂಗಳೂರು ರಸ್ತೆ: ಹೆಣ್ಣೂರು-ಬಾಗಲೂರು ಮಾರ್ಗದಲ್ಲಿ ವಾಹನ ಸವಾರರ ಪರದಾಟ

ಬೆಂಗಳೂರು: ಮಧ್ಯಾಹ್ನ ಸುರಿದ ಅಲ್ಪ ಮಳೆಗೆ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.

ಹೆಣ್ಣೂರು-ಬಾಗಲೂರು ಮುಖ್ಯರಸ್ತೆ (ನ್ಯೂ ಏರ್ಪೋರ್ಟ್ ರಸ್ತೆ) ಜಲಾವೃತಗೊಂಡ ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೊರಮಾವು ವಾರ್ಡ್ ವ್ಯಾಪ್ತಿಯಲ್ಲಿ ಮಳೆ ನೀರು ರಸ್ತೆಯಲ್ಲೇ ತುಂಬಿಕೊಂಡಿದ್ದು, ರಸ್ತೆ ಯಾವುದು? ಫುಟ್‌ಪಾತ್ ಯಾವುದು? ಎಂಬ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ನ್ಯೂ ಏರ್ಪೋರ್ಟ್ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸುಮಾರು 3 ಕಿಲೋಮೀಟರ್‌ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರತಿ ಬಾರಿ ಮಳೆ ಬಂದಾಗ ಬೆಂಗಳೂರಿನ ಹಲವು ಭಾಗಗಳಲ್ಲಿ ಜಲಾವೃತ ಸಮಸ್ಯೆ ಎದುರಾಗುತ್ತಿದ್ದು, ಈ ಬಾರಿ ಕೂಡ ಅಲ್ಪ ಮಳೆಗೆ ರಸ್ತೆಗಳು ಮುಳುಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಮಳೆ ಮುನ್ಸೂಚನೆ:

ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಗಾಳಿಯ ಸಾಧ್ಯತೆ ಇದ್ದು, ಬಳ್ಳಾರಿ, ದಾವಣಗೆರೆ, ಮೈಸೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

 

IPL ಸಂಸ್ಥಾಪಕ ಲಲಿತ್ ಮೋದಿ ಭಾರತಕ್ಕೆ ಮರಳಲು ಸಿದ್ಧ: 16 ವರ್ಷದ ಹೋರಾಟಕ್ಕೆ ತೆರೆ!

0

ನವದೆಹಲಿ: ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಅವರು ಭಾರತಕ್ಕೆ ವಾಪಸ್ ಆಗುವ ಸುಳಿವು ನೀಡಿದ್ದಾರೆ.

16 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ FEMA ಪ್ರಕರಣದಲ್ಲಿ ರಿಲೀಫ್ ಸಿಕ್ಕಿರುವ ಹಿನ್ನೆಲೆಯಲ್ಲಿ ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

2009ರ ಐಪಿಎಲ್ ಎರಡನೇ ಆವೃತ್ತಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದ ವೇಳೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಯಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಲಲಿತ್ ಮೋದಿ ವಿರುದ್ಧ ಪ್ರಕರಣ ದಾಖಲಿಸಿತ್ತು.

ಈ ಪ್ರಕರಣದಲ್ಲಿ ಮೇಲ್ಮನವಿ ನ್ಯಾಯಮಂಡಳಿ ಲಲಿತ್ ಮೋದಿ ಅವರಿಗೆ ರಿಲೀಫ್ ನೀಡಿದ್ದು, ಅವರ ಮೇಲಿದ್ದ ದಂಡವನ್ನು ರದ್ದುಗೊಳಿಸಿದೆ. ಈ ತೀರ್ಪಿನಿಂದ 16 ವರ್ಷಗಳ ಕಾನೂನು ಹೋರಾಟ ಅಂತ್ಯಗೊಂಡಿದೆ ಎಂದು ಲಲಿತ್ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

“ನಿನ್ನೆಯ ತೀರ್ಪಿನಿಂದ ನನಗೆ ತುಂಬಾ ಸಂತೋಷವಾಗಿದೆ. 16 ವರ್ಷಗಳಿಂದ ನಾನು ಹೋರಾಡುತ್ತಿದ್ದೆ. ನಾನು ಹೇಳುತ್ತಿದ್ದ ವಿಚಾರಗಳು ಕೊನೆಗೂ ಸತ್ಯ ಎಂದು ಸಾಬೀತಾಗಿದೆ” ಎಂದು ಲಲಿತ್ ಮೋದಿ ಹೇಳಿದ್ದಾರೆ.

“ಐಪಿಎಲ್‌ನ ಒಳಿತನ್ನು ಹೊರತುಪಡಿಸಿ ನನಗೆ ಬೇರೆ ಯಾವುದೇ ಉದ್ದೇಶ ಇರಲಿಲ್ಲ. ಆ ಅಧ್ಯಾಯ ಈಗ ಮುಗಿದಿದೆ. ಜೀವನದಲ್ಲಿ ಮುಂದೆ ಸಾಗಲು ಬಯಸುತ್ತೇನೆ. ಭಾರತಕ್ಕೆ ಮರಳಲು ಎದುರು ನೋಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೆ ಮರಳುವ ಯೋಜನೆ ಇದೆ ಎಂದು ಹೇಳಿರುವ ಲಲಿತ್ ಮೋದಿ, ತಮ್ಮ ಮಗಳು ಅಕ್ಟೋಬರ್‌ನಲ್ಲಿ ಮೊಮ್ಮಗನೊಂದಿಗೆ ಭಾರತಕ್ಕೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

2009ರಲ್ಲಿ ಲೋಕಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯಾವಳಿಯನ್ನು ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸಲಾಗಿತ್ತು. ಈ ವೇಳೆ ಆರ್‌ಬಿಐ ಪೂರ್ವಾನುಮತಿ ಇಲ್ಲದೆ ಸುಮಾರು ₹243.45 ಕೋಟಿ ವಿದೇಶಿ ವಿನಿಮಯ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಇಡಿ ಕ್ರಮ ಕೈಗೊಂಡಿತ್ತು.

ಈ ಸಂಬಂಧ ಲಲಿತ್ ಮೋದಿ ಅವರಿಗೆ ₹10.65 ಕೋಟಿ ದಂಡ ವಿಧಿಸಲಾಗಿತ್ತು. ಆದರೆ ಇದೀಗ ಸಫೆಮಾ ಮೇಲ್ಮನವಿ ನ್ಯಾಯಾಧಿಕರಣವು ಪ್ರಕರಣಗಳನ್ನು ವಜಾಗೊಳಿಸಿ ದಂಡವನ್ನು ರದ್ದುಗೊಳಿಸಿದೆ.

2010ರಿಂದ ಭಾರತದಿಂದ ಹೊರಗಿರುವ ಲಲಿತ್ ಮೋದಿ, ಇದೀಗ ಕಾನೂನು ಅಡೆತಡೆಗಳು ನಿವಾರಣೆಯಾದ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

 

ಮಡಿಕೇರಿ: ಮನೆಯ ಎದುರೇ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ!

ಮಡಿಕೇರಿ: ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಚಿರತೆಯೊಂದು ಮನೆಯ ಸಮೀಪದಿಂದಲೇ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ.

ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಸ್ಥಳೀಯ ನಿವಾಸಿ ಅರುಣ್ ಅವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲೇ ಮನೆಯ ಸಮೀಪದಲ್ಲಿದ್ದ ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಕಳೆದ ಕೆಲವು ದಿನಗಳಿಂದ ಆಲೂರು ಸಿದ್ಧಾಪುರ ವ್ಯಾಪ್ತಿಯ ಆಲೂರು, ಮಾಲಂಬಿ ಹಾಗೂ ಹೊಸಗುತ್ತಿ ಭಾಗಗಳಲ್ಲಿ ಚಿರತೆಯ ಓಡಾಟ ನಿರಂತರವಾಗಿ ಕಂಡುಬರುತ್ತಿದೆ. ರಾತ್ರಿ ವೇಳೆಯಲ್ಲಿ ಸಾಕು ನಾಯಿಗಳು ಹಾಗೂ ದನದ ಕೊಟ್ಟಿಗೆಯಲ್ಲಿದ್ದ ಕರುಗಳನ್ನು ಬೇಟೆಯಾಡುತ್ತಿರುವ ಘಟನೆಗಳೂ ವರದಿಯಾಗುತ್ತಿವೆ.

ಚಿರತೆಯ ನಿರಂತರ ಓಡಾಟದಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಅರಣ್ಯ ಇಲಾಖೆ ಕೂಡಲೇ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಹೊಸ ತಿರುವು: ಮರುತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು!

ಮಂಗಳೂರು: 14 ವರ್ಷಗಳ ಹಿಂದೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದ್ದು, ತನಿಖೆಯ ಜವಾಬ್ದಾರಿ ಯಾರಿಗೆ ನೀಡಬೇಕು ಎಂಬ ಬಗ್ಗೆ ಮಹತ್ವದ ಆದೇಶ ಹೊರಬೀಳಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆದಿದೆ.

ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಮರುತನಿಖೆ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ವಿರುದ್ಧ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

“14 ವರ್ಷಗಳು ಕಳೆದರೂ ಸರಿಯಾದ ತನಿಖೆ ನಡೆದಿಲ್ಲ. ತನಿಖಾಧಿಕಾರಿ ಘಟನಾ ಸ್ಥಳಕ್ಕೂ ಭೇಟಿ ನೀಡಿಲ್ಲ. ಸಿಐಡಿ ವರದಿಯನ್ನೇ ಆಧಾರವಾಗಿಸಿಕೊಂಡು ತನಿಖೆ ನಡೆಸಲಾಗಿದೆ ಎಂಬ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿ” ಎಂದು ನ್ಯಾಯಾಲಯ ಸಿಬಿಐ ಅಧಿಕಾರಿಗಳನ್ನು ಪ್ರಶ್ನಿಸಿದೆ.

ಹಿಂದೆ ಕೆಲವು ಆರೋಪಿಗಳ ವಿರುದ್ಧ ಇನ್ನೂ ತನಿಖೆ ನಡೆಸಬೇಕಿದೆ ಎಂದು ಹೇಳಿದ್ದ ಸಿಬಿಐ, ಇದೀಗ ಸಿಬ್ಬಂದಿ ಕೊರತೆ ಮತ್ತು ಹಣಕಾಸಿನ ಸಮಸ್ಯೆಯನ್ನು ಕಾರಣವಾಗಿ ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಇದೇ ವೇಳೆ ಕರ್ನಾಟಕ ಸರ್ಕಾರವು ಪ್ರಕರಣದ ಮರುತನಿಖೆಗಾಗಿ ವಿಶೇಷ ತನಿಖಾ ತಂಡ ಅಂದರೆ ಎಸ್‌ಐಟಿ ರಚಿಸಲು ಸಿದ್ಧವಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಆದರೆ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು, ಸಿಬಿಐ ತನಿಖೆಯ ಮೇಲೆ ನಂಬಿಕೆ ಇಲ್ಲ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇದೀಗ ಎಲ್ಲರ ಗಮನ ಸುಪ್ರೀಂ ಕೋರ್ಟ್‌ನ ಅಂತಿಮ ಆದೇಶದತ್ತ ನೆಟ್ಟಿದೆ. ಮರುತನಿಖೆಯನ್ನು ಎಸ್‌ಐಟಿ ನಡೆಸಬೇಕೇ?
ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ವಿಶೇಷ ತಂಡ ತನಿಖೆ ನಡೆಸಬೇಕೇ? ಎಂಬುದನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಲಿದೆ.

14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿರುವ ಸೌಜನ್ಯ ಕುಟುಂಬಕ್ಕೆ ಈ ಬೆಳವಣಿಗೆ ಹೊಸ ನಿರೀಕ್ಷೆ ಮೂಡಿಸಿದೆ. ಸೌಜನ್ಯ ಪ್ರಕರಣದಲ್ಲಿ ನ್ಯಾಯದ ಹೋರಾಟಕ್ಕೆ ಈಗ ಹೊಸ ತಿರುವು ಸಿಕ್ಕಿದ್ದು, ಸುಪ್ರೀಂ ಕೋರ್ಟ್‌ನ ಮುಂದಿನ ಆದೇಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿಗೆ ಗಾಯ!

ಧಾರವಾಡ: ಚಲಿಸುತ್ತಿದ್ದ ವೇಳೆ ಮುಂಭಾಗದ ಟೈರ್ ಸ್ಫೋಟಗೊಂಡ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿ ನಿವಾಸಿ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡದಿಂದ ಮಿರಜ್‌ಗೆ ತೆರಳುತ್ತಿದ್ದ ಬಸ್‌ನ ಮುಂಭಾಗದ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮಹಿಳೆಯರು ಹಾಗೂ ವೃದ್ಧರು ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನಗಳ ಸವಾರರು ಸ್ಥಳಕ್ಕೆ ಧಾವಿಸಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಣಾ ಕಾರ್ಯ ನಡೆಸಿದರು.

ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಸಂಪೂರ್ಣ ಒಡೆದು ಹೋಗಿದ್ದು, ಬಸ್‌ನ ಮುಂಭಾಗಕ್ಕೆ ತೀವ್ರ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಗೆ ಸರ್ಕಾರದ ಒತ್ತು!

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಜಲ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.

ಜುಲೈ ತಿಂಗಳಲ್ಲಿ ಪ್ರತಿದಿನ ಸರಾಸರಿ 84.34 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಕೆಪಿಸಿಎಲ್ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳನ್ನು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಂಡಿದೆ. ಪ್ರತಿದಿನದ ಉತ್ಪಾದನೆಯನ್ನು 100 ದಶಲಕ್ಷ ಯೂನಿಟ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ.

ಕಳೆದ ವರ್ಷದ ಜುಲೈನಲ್ಲಿ ಸರಾಸರಿ 54.47 ದಶಲಕ್ಷ ಯೂನಿಟ್ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆಯಾಗಿದ್ದರೆ, ಈ ವರ್ಷ ಅದು 84.34 ದಶಲಕ್ಷ ಯೂನಿಟ್‌ಗೆ ಏರಿಕೆಯಾಗಿದೆ.

ಸಚಿವರ ಪ್ರಕಾರ, ಜಲ ವಿದ್ಯುತ್ ಉತ್ಪಾದನೆ ಕಡಿಮೆಯಾದರೆ ಮುಕ್ತ ಮಾರುಕಟ್ಟೆಯಿಂದ ವಿದ್ಯುತ್ ಖರೀದಿಸಬೇಕಾಗುತ್ತದೆ. ಇದರಿಂದ ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವುದನ್ನು ತಪ್ಪಿಸಲು ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ ಈ ಜುಲೈನಲ್ಲಿ ಸರಾಸರಿ 24.45 ದಶಲಕ್ಷ ಯೂನಿಟ್, ಬಳ್ಳಾರಿ ಸ್ಥಾವರದಲ್ಲಿ 33.64 ದಶಲಕ್ಷ ಯೂನಿಟ್ ಹಾಗೂ ಯರಮರಸ್ ಸ್ಥಾವರದಲ್ಲಿ 26.25 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿದೆ. ಈ ಮೂರು ಸ್ಥಾವರಗಳಲ್ಲೂ ಕಳೆದ ವರ್ಷಕ್ಕಿಂತ ಉತ್ಪಾದನೆ ಗಮನಾರ್ಹವಾಗಿ ಹೆಚ್ಚಿದೆ.

ಹೆಚ್ಚುವರಿ ವಿದ್ಯುತ್ ಉತ್ಪಾದನೆಗಾಗಿ ಕಲ್ಲಿದ್ದಲು ಸಂಗ್ರಹವನ್ನೂ ಹೆಚ್ಚಿಸಲಾಗಿದೆ. ಕಳೆದ ವರ್ಷ 12 ದಿನಕ್ಕೆ ಸಾಕಾಗುವಷ್ಟು ಕಲ್ಲಿದ್ದಲು ಸಂಗ್ರಹವಿದ್ದರೆ, ಈಗ 15 ದಿನಕ್ಕೆ ಬೇಕಾಗುವಷ್ಟು ಸಂಗ್ರಹವಿದ್ದು, ಅದನ್ನು 20 ದಿನಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಪ್ರತಿದಿನ 17 ರಿಂದ 18 ರೇಕ್ ಕಲ್ಲಿದ್ದಲು ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.