Home Blog

ವಿಜಯಪುರದಲ್ಲಿ ಭೀಕರ ಘಟನೆ: ಹೆಂಡತಿಯ ಕತ್ತು ಕೊಯ್ದು ಭೀಕರ ಕೊಲೆ, ಪತಿ ಅರೆಸ್ಟ್

ವಿಜಯನಗರ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಆಗಸರ ಓಣಿಯಲ್ಲಿ ನಡೆದಿದೆ.

ಪ್ರಭಾವತಿ (50) ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು, ಆಕೆಯ ಪತಿ ರಾಮಮೂರ್ತಿ (55) ಪತ್ನಿಯನ್ನು ಕತ್ತು ಕೊಯ್ದು ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಇಂದು ಬೆಳಗಿನ ಜಾವ ಅಥವಾ ರಾತ್ರಿ ವೇಳೆಯಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ಬಳಿಕ ಆರೋಪಿ ರಾಮಮೂರ್ತಿ ಮನೆಯಲ್ಲೇ ಇದ್ದಿದ್ದು, ಸ್ಥಳಕ್ಕೆ ಆಗಮಿಸಿದ ಪಟ್ಟಣ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಡಿಷನಲ್ ಎಸ್‌ಪಿ ಮಂಜುನಾಥ್ ಹಾಗೂ ಡಿಎಸ್‌ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಪ್ರಕರಣದ ತನಿಖೆ ಆರಂಭಿಸಲಾಗಿದೆ.

ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದು ಶವ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಿತ್ಯ ಬೆಳಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು?

ಬೆಳಗ್ಗೆ ಎದ್ದ ತಕ್ಷಣ ಟೀ ಅಥವಾ ಕಾಫಿ ಸೇವಿಸುವ ಅಭ್ಯಾಸ ಸಾಮಾನ್ಯವಾಗಿದ್ದರೂ, ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕರವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಬದಲಾಗಿ ಬೆಳಗ್ಗೆ ಮೊದಲಿಗೆ ಒಂದು ಗ್ಲಾಸ್ ನೀರು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಳ್ಳುವುದು ದೇಹಕ್ಕೆ ಹೆಚ್ಚಿನ ಪ್ರಯೋಜನಕಾರಿಯಾಗಿದೆ ಎಂದು ತಿಳಿಸಲಾಗಿದೆ.

ರಾತ್ರಿಯ ನಿದ್ರೆಯ ಬಳಿಕ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಬೆಳಗ್ಗೆ ನೀರು ಕುಡಿಯುವುದರಿಂದ ದೇಹ ಪುನಶ್ಚೇತನಗೊಳ್ಳುತ್ತದೆ ಹಾಗೂ ಅಂಗಾಂಗಗಳ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಹೇಳಲಾಗಿದೆ. ಇದರಿಂದ ದೇಹದ ಉಷ್ಣತೆ ನಿಯಂತ್ರಣವಾಗುವುದರ ಜೊತೆಗೆ ಶಕ್ತಿ ಮಟ್ಟವೂ ಹೆಚ್ಚುತ್ತದೆ.

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ (ಮೆಟಾಬಾಲಿಸಂ) ವೇಗಗೊಳ್ಳುತ್ತದೆ, ಇದು ತೂಕ ಇಳಿಕೆಗೆ ಸಹಾಯಕವಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಜೀರ್ಣಕ್ರಿಯೆ ಸುಧಾರಿಸಿ ಪೋಷಕಾಂಶಗಳ ಶೋಷಣೆಯೂ ಉತ್ತಮವಾಗುತ್ತದೆ ಎಂದು ತಿಳಿಸಲಾಗಿದೆ.

ಮಾನಸಿಕ ಆರೋಗ್ಯದ ದೃಷ್ಟಿಯಿಂದಲೂ ಬೆಳಗಿನ ನೀರು ಸೇವನೆ ಒತ್ತಡವನ್ನು ಕಡಿಮೆ ಮಾಡಿ ಮನಸ್ಸನ್ನು ಚುರುಕು ಮಾಡುತ್ತದೆ ಎಂದು ಹೇಳಲಾಗಿದ್ದು, ತಲೆನೋವಿನಂತಹ ಸಮಸ್ಯೆಗಳಿಗೂ ಇದು ಪರಿಹಾರಕಾರಿಯಾಗಿದೆ.

ಚರ್ಮದ ಆರೋಗ್ಯಕ್ಕೂ ಬೆಳಗಿನ ನೀರು ಸೇವನೆ ಸಹಕಾರಿ ಆಗಿದ್ದು, ದೇಹದ ತೇವಾಂಶವನ್ನು ಕಾಪಾಡಿ ಚರ್ಮಕ್ಕೆ ನೈಸರ್ಗಿಕ ಹೊಳಪು ನೀಡುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಆರೋಗ್ಯಕರ ದಿನಾರಂಭಕ್ಕಾಗಿ ಬೆಳಗ್ಗೆ ಒಂದು ಗ್ಲಾಸ್ ಉಗುರುಬೆಚ್ಚಗಿನ ನೀರು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಳ್ಳಲು ಸಲಹೆ ನೀಡಲಾಗಿದೆ.

ಗೃಹಜ್ಯೋತಿ ಮರು ಪರಿಶೀಲನೆಗೆ ಜಾತಿ ಪ್ರಮಾಣಪತ್ರ ಕಡ್ಡಾಯವಾ? ಜನರ ಗೊಂದಲಕ್ಕೆ ತೆರೆ ಎಳೆದ ಬೆಸ್ಕಾಂ!

ಬೆಂಗಳೂರು: ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಪ್ರಕ್ರಿಯೆ ಆರಂಭವಾಗಿದ್ದು, ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಹಿತಿ ಸಂಗ್ರಹದ ವೇಳೆ ಜಾತಿ ಪ್ರಮಾಣಪತ್ರ ಕೇಳಲಾಗುತ್ತಿರುವ ವಿಚಾರ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ಉಚಿತ ವಿದ್ಯುತ್ ಯೋಜನೆಗೆ ಜಾತಿ ಮಾಹಿತಿ ಏಕೆ ಬೇಕು ಎಂಬ ಪ್ರಶ್ನೆ ಎದ್ದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆ ಬೆಸ್ಕಾಂ ಜಾತಿ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ಪರಿಶೀಲನೆ ವೇಳೆ ಜಾತಿ ಮಾಹಿತಿ ನೀಡಲು ಇಚ್ಛಿಸದ ಗ್ರಾಹಕರಿಗಾಗಿ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಆಯ್ಕೆಯನ್ನೂ ಫಾರ್ಮ್‌ನಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದೆ.

ಈ ಆಯ್ಕೆಯನ್ನು ಗುರುತಿಸುವ ಮೂಲಕ ಫಲಾನುಭವಿಗಳು ತಮ್ಮ ಜಾತಿ ವಿವರ ನೀಡದೇಯೇ ಮರು ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಗೃಹ ಜ್ಯೋತಿ ಯೋಜನೆಗೆ ಆಧಾರ್ ನಂಬರ್ ಆಧಾರವಾಗಿ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿತ್ತು. ಆದರೆ ಈಗ ಆಧಾರ್ ಜೊತೆಗೆ ವೋಟರ್ ಐಡಿ ಹಾಗೂ ಪ್ಯಾನ್ ಕಾರ್ಡ್ ದಾಖಲೆಗಳನ್ನು ಪರಿಶೀಲನೆಗಾಗಿ ಕೇಳಲಾಗುತ್ತಿದೆ ಎಂದು ತಿಳಿದುಬಂದಿದೆ.

ತೀವ್ರ ವಿರೋಧದ ನಡುವೆ ಜಾತಿ ಮಾಹಿತಿ ಕಡ್ಡಾಯವಲ್ಲ ಎಂಬ ಬೆಸ್ಕಾಂ ಸ್ಪಷ್ಟನೆ ಸಾರ್ವಜನಿಕರಿಗೆ ಸಮಾಧಾನ ತಂದಿದೆ.

ಪ್ರವಾಸಿ ತಾಣಗಳಲ್ಲಿ ವಿಶ್ವದರ್ಜೆಯ ಸೌಲಭ್ಯ ಕಲ್ಪಿಸಲು ಸಚಿವ ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದ್ದು,

ಈ ನೀತಿಯಲ್ಲಿ ಕ್ರೂಸ್‌ ಪ್ರವಾಸೋದ್ಯಮ, ಬೀಚ್‌ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು .

ಇಂದು ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ರಾಜ್ಯದ ಕರಾವಳಿ ಹಾಗೂ ಮಲೆನಾಡು ವ್ಯಾಪ್ತಿಯ ಆರು ಜಿಲ್ಲೆಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಿದ್ಧವಾಗುತ್ತಿರುವ ಹೊಸ ಪ್ರವಾಸೋದ್ಯಮ ನೀತಿಯಲ್ಲಿ, ವಿಷಯಾಧಾರಿತ (Theme-based) ಪ್ರವಾಸೋದ್ಯಮ ಸರ್ಕೀಟ್‌ಗಳು, ಕಡಲತೀರ ಪ್ರವಾಸೋದ್ಯಮ, ಕ್ರೂಸ್‌ ಪ್ರವಾಸೋದ್ಯಮ, ಸಾಹಸ ಕ್ರೀಡೆಗಳು ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಅಂತರರಾಷ್ಟ್ರೀಯ ಕ್ರೂಸ್‌ ಹಡಗುಗಳು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಬಂದರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಮಗ್ರ ಕಾರ್ಯತಂತ್ರ ರೂಪಿಸಬೇಕಿದೆ. ಕ್ರೂಸ್‌ ಪ್ರವಾಸಿಗರು ಕರ್ನಾಟಕದಲ್ಲಿ ಹೆಚ್ಚು ದಿನ ಉಳಿಯುವಂತೆ ಆಕರ್ಷಕ ಪ್ರವಾಸೋದ್ಯಮ ಪ್ಯಾಕೇಜ್‌ಗಳು ಮತ್ತು ಸರ್ಕೀಟ್‌ಗಳನ್ನು ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಮುಖ ಕ್ರೂಸ್‌ ಆಪರೇಟರ್‌ಗಳೊಂದಿಗೆ ಸಭೆ ನಡೆಸಿ, ಅವರ ಹಾಗೂ ಪ್ರವಾಸಿಗರ ನಿರೀಕ್ಷೆಗಳನ್ನು ಆಧರಿಸಿ ನೀತಿಯಲ್ಲಿ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರಾದ ಕೆಜೆ ಜಾರ್ಜ್‌ ಸೂಚಿಸಿದರು.

ಬೀಚ್‌ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಬ್ಲೂ ಫ್ಲಾಗ್‌ ಬೀಚ್‌ಗಳ ಅಭಿವೃದ್ಧಿ, ಸ್ವಚ್ಛತೆ, ಸುರಕ್ಷತೆ, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯ, ಜಲಕ್ರೀಡೆಗಳು (Water Sports), ಸಾಹಸ ಚಟುವಟಿಕೆಗಳು ಹಾಗೂ ಸಮುದ್ರತೀರದಲ್ಲಿ ಗುಣಮಟ್ಟದ ಪ್ರವಾಸಿ ಅನುಭವ ಕಲ್ಪಿಸುವ ಯೋಜನೆಗಳನ್ನು ಹೊಸ ನೀತಿಯಲ್ಲಿ ಸೇರಿಸಬೇಕು ಎಂದು ಅವರು ತಿಳಿಸಿದರು.

ಇದರ ಜೊತೆಗೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಮತ್ತು ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (JLR) ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಗುಣಮಟ್ಟದ ವಸತಿ, ಮೂಲಭೂತ ಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಅಗತ್ಯವಾದ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಪ್ರವಾಸಿಗರ ಅನುಭವವನ್ನು ಉತ್ತಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಪ್ರವಾಸೋದ್ಯಮ ಎಂದರೆ ಕೇವಲ ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲ; ಪ್ರವಾಸಿಗರಿಗೆ ವಿಶ್ವದರ್ಜೆಯ ಅನುಭವವನ್ನು ನೀಡುವ ಸಮಗ್ರ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು. ಉತ್ತಮ ಮೂಲಸೌಕರ್ಯ, ಸುಲಭ ಸಂಪರ್ಕ, ಸುರಕ್ಷತೆ ಮತ್ತು ಗುಣಮಟ್ಟದ ಸೇವೆಗಳ ಮೂಲಕವೇ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಉತ್ತಮ ಸ್ಥಾನ ಪಡೆಯಬಹುದಾಗಿದೆ,” ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು .

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕೆಎಸ್‌ಟಿಡಿಸಿ ಹಾಗೂ ಜೆಎಲ್‌ಆರ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

SIR ನಲ್ಲಿ ಲೋಪ ಸಾಬೀತಾದರೆ ಚುನಾವಣಾ ಆಯೋಗವೇ ಕ್ರಮ ಕೈಗೊಳ್ಳಲಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಯಾವುದೇ ಲೋಪ ಅಥವಾ ನಿಯಮ ಉಲ್ಲಂಘನೆ ನಡೆದಿದ್ದರೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪವನ್ನು ತಳ್ಳಿಹಾಕಿದರು.

“ಮುಖ್ಯಮಂತ್ರಿಗಳು ಪ್ರತಿಯೊಂದು ಬೂತ್‌ನಲ್ಲೂ ನಡೆಯುವ ಪ್ರಕ್ರಿಯೆಗಳನ್ನು ಪರಿಶೀಲಿಸಲು ಸಾಧ್ಯವಿಲ್ಲ. ಸ್ಥಳೀಯ ಮಟ್ಟದಲ್ಲಿ ಕೆಲವರು ಪ್ರಕ್ರಿಯೆಯನ್ನು ವೇಗವಾಗಿ ಮುಗಿಸುವ ಉದ್ದೇಶದಿಂದ ಕೆಲವು ಕ್ರಮ ಕೈಗೊಂಡಿರಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಚುನಾವಣಾ ಆಯೋಗ ಈ ಕುರಿತು ಪರಿಶೀಲನೆ ನಡೆಸಿ, ಅಗತ್ಯವಿದ್ದರೆ ಬಿಎಲ್‌ಒಗಳಿಂದ ವಿವರಣೆ ಪಡೆದು ಕ್ರಮ ಕೈಗೊಳ್ಳುತ್ತದೆ” ಎಂದು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆಗೆ ನಿಗದಿತ ಮಾನದಂಡ ಹಾಗೂ ನಿಯಮಾವಳಿಗಳಿದ್ದು, ಅವುಗಳ ಅನುಸಾರವೇ ಕಾರ್ಯ ನಡೆಯಬೇಕು. ನಿಯಮ ಉಲ್ಲಂಘನೆಯಾಗಿದ್ದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವುದು ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿದೆ. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ಕಾರ್ಯ ನಡೆದಿರುವುದು ಕಂಡುಬಂದರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದರು.

ಈ ವೇಳೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಕೇಳಿರುವ 12 ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಹೇಳಿದ ಅವರು, ಯಾವುದೇ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಈ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನ ಬೇಬಿ ಕೇರ್ ಕೇಂದ್ರದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಸಂಬಂಧಿತ ಕಂಪನಿಗೆ ಗೃಹ ಇಲಾಖೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

“ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಘಟನೆಯ ಬಗ್ಗೆ ಸ್ಪಷ್ಟನೆ ನೀಡುವಂತೆ ಕಂಪನಿಗೆ ಸೂಚಿಸಲಾಗಿದೆ. ದೊಡ್ಡ ಸಂಸ್ಥೆಗಳಿಗೆ ತಮ್ಮದೇ ಆದ ಜಾಗತಿಕ ನೀತಿ ಹಾಗೂ ಕಾರ್ಯವಿಧಾನ (ಎಸ್‌ಒಪಿ) ಇರುತ್ತದೆ. ಅದರ ಅನುಸಾರವಾಗಿ ಕಾರ್ಯನಿರ್ವಹಿಸಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಅಗತ್ಯ ಮುನ್ನೆಚ್ಚರಿಕೆಗಳು ಪಾಲನೆಯಾಗಿಲ್ಲ ಎನ್ನುವುದು ಪ್ರಾಥಮಿಕವಾಗಿ ಕಂಡುಬರುತ್ತಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ದೆಹಲಿಯಲ್ಲಿ ಇಂಗ್ಲಿಷ್ʼನಲ್ಲೇ ಪ್ರೆಸ್ಮೀಟ್ ಮಾಡಿ SIR ವಿಚಾರ ಬಹಿರಂಗಪಡಿಸುತ್ತೇನೆ: ರಾಹುಲ್ ಗಾಂಧಿಗೆ ನಿಖಿಲ್ ಸವಾಲ್

ರಾಮನಗರ: ರಾಮನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೂ ಕರ್ನಾಟಕಕ್ಕೆ ಬಂದು ಪರಿಸ್ಥಿತಿಯನ್ನು ಪರಿಶೀಲಿಸಬೇಕು ಎಂದು ಅವರು ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ದೆಹಲಿಯಲ್ಲಿ ಕುಳಿತು ಮತದಾರರ ಪಟ್ಟಿಯ ಅಕ್ರಮಗಳ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರದ ಅವಧಿಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಬಂದು ನೋಡಬೇಕು ಎಂದು ಹೇಳಿದರು. ಅಗತ್ಯವಿದ್ದರೆ ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್‌ನಲ್ಲೇ ಪತ್ರಿಕಾಗೋಷ್ಠಿ ನಡೆಸುತ್ತೇನೆ ಎಂದರು.

ರಾಮನಗರದ ಟಿಪ್ಪು ನಗರ, ಯಾರಬ್ ನಗರ ಹಾಗೂ ಮೆಹಬೂಬ್ ನಗರ ವಾರ್ಡ್‌ಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ ಅವರು, ಅಲ್ಲಿನ ಪರಿಸ್ಥಿತಿಯಿಂದ ಕಾರ್ಯಕರ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಆದರೂ ಜೆಡಿಎಸ್ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ವಿಡಿಯೊ ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಜಿಗಳನ್ನು ಹಂಚುವ ಪ್ರಕ್ರಿಯೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಬಿಎಲ್‌ಎ-2 ಪ್ರತಿನಿಧಿಗಳ ಸಮ್ಮುಖದಲ್ಲಿ ಹಾಗೂ ನಿಯಮಾನುಸಾರ ಕ್ರಮ ನಡೆಯಬೇಕು. ಆದರೆ ರಾಮನಗರ ಜಿಲ್ಲಾಡಳಿತ ನಿಯಮಗಳನ್ನು ಪಾಲಿಸದೆ ಏಕಪಕ್ಷೀಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಆರೋಪಿಸಿದರು.

ಜಿಲ್ಲಾಧಿಕಾರಿಗಳ ನಡೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ, ಪ್ರತಿಭಟನೆಗೆ ಹೆದರಿ ಅವರು ಸ್ಥಳದಲ್ಲಿರದೆ ಮುಖ್ಯಮಂತ್ರಿ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎಂದು ಟೀಕಿಸಿದರು. ಅಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಕುಣಿಗಲ್‌ನಲ್ಲಿಯೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಕೆಲವು ಜನಪ್ರತಿನಿಧಿಗಳು ಬಿಎಲ್‌ಒಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿಯೂ ತಮ್ಮ ವಿರುದ್ಧ ಅಕ್ರಮ ಮತದಾನ ನಡೆದಿದೆ ಎಂದು ಆರೋಪಿಸಿದ ನಿಖಿಲ್ ಕುಮಾರಸ್ವಾಮಿ, ರಾಮನಗರದ ಜನರು ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ: ಮೂವರು ಅರೆಸ್ಟ್, ಇಬ್ಬರಿಗೆ ಶೋಧ

ಚಿಕ್ಕಬಳ್ಳಾಪುರ: ಚುಡಾಯಿಸಿದ್ದಕ್ಕೆ ಕೆನ್ನೆಗೆ ಬಾರಿಸಿದ್ದ ಯುವತಿಯ ಮೇಲೆ ಸೇಡು ತೀರಿಸಿಕೊಳ್ಳಲು ಮನೆಗೆ ನುಗ್ಗಿ ಚಾಕು ಇರಿದ ಪ್ರಕರಣದಲ್ಲಿ ಚಿಂತಾಮಣಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಲಕ್ಷ್ಮೀ, ಮಂಜುನಾಥ ಹಾಗೂ ಜಬಿವುಲ್ಲಾ ಬಂಧಿತರಾಗಿದ್ದು, ಕಾರ್ತಿಕ್ ಮತ್ತು ವಿನೋದ್ ಪರಾರಿಯಾಗಿದ್ದಾರೆ. ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಆಶ್ರಯ ಬಡಾವಣೆಯ ನಿವಾಸಿ ಮೇಘನಾ ಅವರನ್ನು ಆರೋಪಿಗಳು ಚುಡಾಯಿಸಿದ್ದರು. ಇದಕ್ಕೆ ಆಕ್ರೋಶಗೊಂಡ ಯುವತಿ ಅವರ ಕೆನ್ನೆಗೆ ಬಾರಿಸಿದ್ದಳು. ಇದೇ ದ್ವೇಷದಿಂದ ಆರೋಪಿಗಳು ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ್ದರು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್‌ಗೆ ಭಾರಿ ಹಿನ್ನಡೆ: ಸುಪ್ರೀಂ ರಿಜಿಸ್ಟ್ರಿಯಿಂದಲೇ ಅರ್ಜಿ ವಜಾ

ನವದೆಹಲಿ: ನಟ ದರ್ಶನ್ ತೂಗುದೀಪ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ. ಜಾಮೀನು ಸಂಬಂಧದ ತಿದ್ದುಪಡಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯೇ ತಿರಸ್ಕರಿಸಿದ್ದು, ದರ್ಶನ್‌ಗೆ ಸದ್ಯ ಜೈಲಿನಿಂದ ಹೊರಬರುವ ದಾರಿ ಮತ್ತಷ್ಟು ಕಠಿಣವಾಗಿದೆ.

ಒಂದು ವರ್ಷದೊಳಗೆ ಜಾಮೀನು ಅರ್ಜಿ ಸಲ್ಲಿಸದಂತೆ ಈ ಹಿಂದೆ ನೀಡಿದ್ದ ಆದೇಶದಲ್ಲಿ ತುರ್ತು ಪರಿಸ್ಥಿತಿಗೆ ವಿನಾಯಿತಿ ನೀಡುವಂತೆ ದರ್ಶನ್ ಮನವಿ ಮಾಡಿದ್ದರು. ಆದರೆ, ಈ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ಹೇಳಿ ರಿಜಿಸ್ಟ್ರಿ ನೇರವಾಗಿ ವಜಾಗೊಳಿಸಿದೆ.

ಈ ಹಿಂದೆ ವಿಚಾರಣೆ ನಡೆಸಿದ್ದ ಪರ್ದಿವಾಲಾ-ವಿಜಯ್ ಬಿಷ್ಣೋಯಿ ಪೀಠ, ಜೈಲಿನಲ್ಲಿರುವ ಕ್ವಾರಂಟೈನ್ ಸೆಲ್ ಕೂಡ ಜೈಲಿನ ಭಾಗವೇ ಎಂದು ಸ್ಪಷ್ಟಪಡಿಸಿ, ವಿಶೇಷ ಸೌಲಭ್ಯ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿತ್ತು. ಜೈಲು ಮ್ಯಾನ್ಯುಯಲ್ ಪ್ರಕಾರ ಅಗತ್ಯ ಸೌಲಭ್ಯಗಳನ್ನು ಮಾತ್ರ ನೀಡಲು ಸೂಚಿಸಿ, ಜಾಮೀನು ನಿರಾಕರಿಸಿತ್ತು.

ಈ ಬೆಳವಣಿಗೆಯಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ಮತ್ತೊಂದು ಕಾನೂನು ಹಿನ್ನಡೆಯಾಗಿದ್ದು, ನ್ಯಾಯಾಲಯದ ಹಿಂದಿನ ಆದೇಶದಂತೆ ಮುಂದಿನ ವರ್ಷದ ಮೇ 15ರವರೆಗೆ ಜೈಲಿನಲ್ಲೇ ಉಳಿಯುವ ಪರಿಸ್ಥಿತಿ ಬಹುತೇಕ ಖಚಿತವಾಗಿದೆ.

ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆಗೆ ಜಾತಿ ಪ್ರಮಾಣಪತ್ರ ಕಡ್ಡಾಯವಲ್ಲ: ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜುಲೈ 1ರಿಂದ ಆರಂಭವಾಗಿರುವ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹ ಪ್ರಕ್ರಿಯೆಯಲ್ಲಿ ಜಾತಿ ಅಥವಾ ಪ್ರವರ್ಗಕ್ಕೆ ಸಂಬಂಧಿಸಿದ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಈ ಮಾಹಿತಿ ನೀಡುವುದು ಸಂಪೂರ್ಣವಾಗಿ ಫಲಾನುಭವಿಗಳ ಇಚ್ಛೆಗೆ ಬಿಟ್ಟ ವಿಚಾರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನೆ ಅಂಗವಾಗಿ ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಶನ್ ಮತ್ತು ಮುದ್ರಿತ ಘೋಷಣಾ ಪತ್ರದ ಮೂಲಕ ಮನೆ-ಮನೆಗೆ ತೆರಳಿ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ಫಲಾನುಭವಿಯ ಪ್ರವರ್ಗ ಅಥವಾ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಮಾಹಿತಿ ಕೇಳುತ್ತಿರುವ ಕುರಿತು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದ್ದ ಗೊಂದಲಗಳಿಗೆ ಸ್ಪಷ್ಟನೆ ನೀಡಿರುವ ಬೆಸ್ಕಾಂ, ಜಾತಿ ಮಾಹಿತಿ ನೀಡಲು ಫಲಾನುಭವಿಗಳು ಇಚ್ಛಿಸದಿದ್ದರೆ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಇರುವ ‘ಮಾಹಿತಿ ನೀಡಲು ನಿರಾಕರಣೆ’ ಎಂಬ ಆಯ್ಕೆಯನ್ನು ದಾಖಲಿಸುವಂತೆ ಸಿಬ್ಬಂದಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆ 2023ರ ಜುಲೈನಲ್ಲಿ ಜಾರಿಗೆ ಬಂದಿತ್ತು. ಇದೀಗ ಯೋಜನೆಯ ಫಲಾನುಭವಿಗಳ ಮಾಹಿತಿ ಹಾಗೂ ದಾಖಲೆಗಳ ಮರುಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಕೈಗೊಂಡಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಮೀಟರ್ ರೀಡರ್‌ಗಳು ಹಾಗೂ ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿ ಮೊಬೈಲ್ ಅಪ್ಲಿಕೇಶನ್ ಹಾಗೂ ಘೋಷಣಾ ಪತ್ರದ ಮೂಲಕ ಮಾಹಿತಿ ದಾಖಲಿಸುತ್ತಿದ್ದಾರೆ.

ಮನೆ-ಮನೆ ಪರಿಶೀಲನೆ ವೇಳೆ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಅಗತ್ಯವಿದ್ದಲ್ಲಿ ಬಾಡಿಗೆ ಒಪ್ಪಂದ ಪತ್ರ ಸೇರಿದಂತೆ ಕೆಲವು ದಾಖಲೆಗಳನ್ನು ತೋರಿಸುವಂತೆ ಫಲಾನುಭವಿಗಳಿಗೆ ಮನವಿ ಮಾಡಲಾಗಿದೆ. ಜಾತಿ ಪ್ರಮಾಣಪತ್ರದ ಮಾಹಿತಿಯನ್ನು ಕೇಳಲಾಗಿದ್ದರೂ, ಅದನ್ನು ಒದಗಿಸುವುದು ಕಡ್ಡಾಯವಲ್ಲ ಎಂಬುದನ್ನು ಬೆಸ್ಕಾಂ ಪುನರುಚ್ಚರಿಸಿದೆ.

ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ: ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಅರೆಸ್ಟ್!

ಹಾಸನ: ಮುಸ್ಲಿಂ ಧರ್ಮಗುರುಗಳಿಗೆ ಅವಮಾನಕರ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಅಬ್ದುಲ್ ರಜಾಕ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿರುವ ಪುನೀತ್ ಅವರ ನಿವಾಸಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ಬಂಧನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ಕೆರೆಹಳ್ಳಿ, ತಮ್ಮ ವಿರುದ್ಧ ರಾಜಕೀಯ ಪ್ರೇರಿತ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು. ತಮಗೆ ಜೀವ ಬೆದರಿಕೆ ಇದ್ದು, ಈ ಸಂಬಂಧ ತಾವು ಅಬ್ದುಲ್ ರಜಾಕ್ ವಿರುದ್ಧವೂ ದೂರು ನೀಡಿದ್ದೇನೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ತಮ್ಮನ್ನು ಬಂಧಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಉದ್ದೇಶಪೂರ್ವಕವಾಗಿ ತಮ್ಮ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಅವರು ಆರೋಪಿಸಿದರು.

ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿ ಕರೆದೊಯ್ಯುವ ವೇಳೆ ಅವರ ತಾಯಿ ಭಾವುಕರಾಗಿ ಕಣ್ಣೀರಿಟ್ಟರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದು, ತನಿಖೆ ಮುಂದುವರಿದಿದೆ.