Home Blog

ರಾಜ್ಯದಲ್ಲಿ ಕೃಷಿ ಇಲಾಖೆ ಸತ್ತಂತಾಗಿದೆ: ಬಸವರಾಜ ಬೊಮ್ಮಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದ್ದು, ಸರ್ಕಾರ ತಕ್ಷಣ ಸಮೀಕ್ಷೆ ನಡೆಸಿ ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲದಂತಾಗಿದ್ದು, ಕೃಷಿ ಇಲಾಖೆ ಏನು ಮಾಡುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಪರ್ಯಾಯ ಬೆಳೆ ಬೆಳೆಯಿರಿ, ಅಲ್ಪಾವಧಿ ಬೆಳೆ ಬೆಳೆಸಿರಿ ಎಂಬ ಸಲಹೆಗಳು ಹೊಸದೇನಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸದ ಇಲಾಖೆ ರೈತರ ಪಾಲಿಗೆ ಸತ್ತಂತಾಗಿದೆ ಎಂದು ಟೀಕಿಸಿದರು.

ಬರಗಾಲ ಘೋಷಿಸಿದ ಬಳಿಕ ಕೇಂದ್ರ ಸರ್ಕಾರ ಅಗತ್ಯ ಅನುದಾನ ಒದಗಿಸಲಿದೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಗಂಭೀರ ಪ್ರಯತ್ನ ನಡೆಸಿಲ್ಲ ಎಂದು ಆರೋಪಿಸಿದರು.

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಯುವಕರ ಬಗ್ಗೆ ಭಯ ಉಂಟಾಗಿದೆ. ಉದ್ಯೋಗ ಸೃಷ್ಟಿಸುವ ಬದಲು ಯುವಕರಿಗೆ ಆಮಿಷವೊಡ್ಡಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರದ ನ್ಯಾಷನಲ್ ಕ್ಯಾರಿಯರ್ ಸರ್ವಿಸ್ ಪೋರ್ಟಲ್ ಮೂಲಕ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರ ನಡುವೆ ನೇರ ಸಂಪರ್ಕ ಕಲ್ಪಿಸಲಾಗಿದ್ದು, ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ಇದೇ ಮಾದರಿಯ ಯೋಜನೆಯನ್ನು ಹೊಸ ಹೆಸರಿನಲ್ಲಿ ಘೋಷಿಸಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಎಂಜಿಎನ್‌ಆರ್‌ಇಜಿಎಸ್ ಯೋಜನೆಯಡಿ ಕೇಂದ್ರ ಸರ್ಕಾರ 100 ದಿನಗಳ ಉದ್ಯೋಗಕ್ಕೆ ಅನುದಾನ ನೀಡುತ್ತಿದ್ದು, ಉಳಿದ 25 ದಿನಗಳಿಗೆ ಮಾತ್ರ ರಾಜ್ಯ ಸರ್ಕಾರ ಹಣ ಒದಗಿಸಬೇಕಿದೆ. ಹಲವು ರಾಜ್ಯಗಳು ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ರೈತರ ಹಿತದೃಷ್ಟಿಯಿಂದ ಕರ್ನಾಟಕದಲ್ಲೂ ತಕ್ಷಣ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಷ್ಠೆ ಬಿಟ್ಟು ನಡೆದುಕೊಳ್ಳಬೇಕು. ರೈತರಿಗೆ ತೊಂದರೆಯಾಗದಂತೆ ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಟೌನ್‌ಶಿಪ್ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.

“ರಾಜ್ಯದಲ್ಲಿ ಕೃಷಿ ಸಚಿವರಿಲ್ಲ, ಕೃಷಿ ಇಲಾಖೆ ಏನು ಮಾಡುತ್ತಿದೆ ಎಂಬುದೇ ಗೊತ್ತಿಲ್ಲ. ಒಟ್ಟಾರೆ ರೈತರ ಪಾಲಿಗೆ ಇಲಾಖೆ ಸತ್ತಂತಾಗಿದೆ.”

– ಬಸವರಾಜ ಬೊಮ್ಮಾಯಿ, ಸಂಸದ

ಶೀಘ್ರದಲ್ಲೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ: ಹೊರರಾಜ್ಯದ ವೀಕ್ಷಕರಿಂದ ಆಯ್ಕೆ ಪ್ರಕ್ರಿಯೆ ಎಂದ ಬಿ.ಕೆ. ಹರಿಪ್ರಸಾದ್

ಮಂಗಳೂರು: ರಾಜ್ಯ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಜಿಲ್ಲಾಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಇನ್ನು ಮುಂದೆ ಬೇರೆ ರಾಜ್ಯಗಳಿಂದ ಆಗಮಿಸುವ ವೀಕ್ಷಕರು ಜಿಲ್ಲೆಯಲ್ಲೇ ಒಂದು ವಾರ ತಂಗಿ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಎಐಸಿಸಿಗೆ ಹೆಸರುಗಳನ್ನು ಶಿಫಾರಸು ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಜಿಲ್ಲಾಧ್ಯಕ್ಷರ ಹೆಸರನ್ನು ಎಐಸಿಸಿಗೆ ಶಿಫಾರಸು ಮಾಡುತ್ತಿದ್ದರು. ಆದರೆ, ಇದೀಗ ಎಐಸಿಸಿ ಜಾರಿಗೆ ತಂದಿರುವ “ಸಂಘಟನ್ ಸರ್ಜನ್ ಅಭಿಯಾನ್” ಅಡಿಯಲ್ಲಿ ಹೊಸ ವಿಧಾನ ಅನುಸರಿಸಲಾಗುತ್ತಿದೆ ಎಂದು ಹೇಳಿದರು.

ಅದರಂತೆ, ಬೇರೆ ರಾಜ್ಯಗಳ ವೀಕ್ಷಕರು ಜಿಲ್ಲೆಗೆ ಭೇಟಿ ನೀಡಿ ಕನಿಷ್ಠ ಏಳು ದಿನಗಳ ಕಾಲ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಭೆ ನಡೆಸಲಿದ್ದಾರೆ. ಈ ವೇಳೆ ಕಾರ್ಯಕರ್ತರು ಹಾಗೂ ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿ, ಕನಿಷ್ಠ ಇಬ್ಬರಿಂದ ಗರಿಷ್ಠ ಆರು ಅಭ್ಯರ್ಥಿಗಳ ಹೆಸರನ್ನು ಎಐಸಿಸಿಗೆ ಶಿಫಾರಸು ಮಾಡಲಿದ್ದಾರೆ. ಆ ಪಟ್ಟಿಯ ಆಧಾರದ ಮೇಲೆ ಅಂತಿಮವಾಗಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ವಿವರಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ ಎಂದು ತಿಳಿಸಿದ ಹರಿಪ್ರಸಾದ್, ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ನೈಜ ಮತದಾರರನ್ನು ಮತ್ತೆ ದಾಖಲಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಒತ್ತಾಯಿಸಲಾಗಿದೆ ಎಂದರು.

ನೈಜ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ. ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಭಾವನೆ ಮೂಡಿದೆ. ಯಾವುದೇ ನೈಜ ಮತದಾರರು ತಮ್ಮ ಮತದಾನದ ಹಕ್ಕು ಕಳೆದುಕೊಳ್ಳದಂತೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು  ಹೇಳಿದರು.

ಕಾರವಾರ-ಬಳ್ಳಾರಿಯಲ್ಲಿ ಏಕಕಾಲಕ್ಕೆ ದಾಳಿ: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ಕಾರವಾರ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿರುವ ಲೋಕಾಯುಕ್ತ,

ಮತ್ತೊಂದೆಡೆ ಬಳ್ಳಾರಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದೆ.

ಕಾರವಾರ ಲೋಕಾಯುಕ್ತ ಎಸ್‌ಪಿ ಕುಮಾರಚಂದ್ರ ಅವರ ನೇತೃತ್ವದಲ್ಲಿ ಧಾರವಾಡ ಹಾಗೂ ಕಾರವಾರ ಡಿವೈಎಸ್‌ಪಿಗಳ ಜಂಟಿ ತಂಡ ಮುಂಡಗೋಡಿನ ಎರಡು ಸರ್ಕಾರಿ ಕಚೇರಿಗಳ ಮೇಲೆ ದಾಳಿ ನಡೆಸಿತು.

ಹೆಸ್ಕಾಂ ಇಂಜಿನಿಯರ್ ಧರ್ಮರಾಜ್ ಬೆಡಸಗಾಂವ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ಅವರಿಂದ ₹65 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದರು.

ಇನ್ನೊಂದು ಪ್ರಕರಣದಲ್ಲಿ, ಫಾರ್ಮ್‌ಹೌಸ್‌ಗೆ ಪರವಾನಗಿ ನೀಡಲು ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕ ಬಸವರಾಜ್ ಬಿಸ್ನಾಳ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಬಳ್ಳಾರಿ ಲೋಕಾಯುಕ್ತ ಎಸ್‌ಪಿ ವಾಸುದೇವರಾಮ್ ನೇತೃತ್ವದಲ್ಲಿ ಸಿರುಗುಪ್ಪ ತಾಲೂಕಿನ ಆರ್‌ಡಿಪಿಆರ್ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವ್ಯಾಸಗಾರ ತಿಪ್ಪೇಸ್ವಾಮಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿರೋಧಕ ಕಾಯ್ದೆಯಡಿ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಯಿತು.

ಬಳ್ಳಾರಿಯ ಹನುಮಾನ್ ನಗರ ಹಾಗೂ ಕುಡಿತಿನಿಯಲ್ಲಿರುವ ನಿವಾಸಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ಸುಮಾರು 300 ಗ್ರಾಂ ಚಿನ್ನ, 800 ಗ್ರಾಂ ಬೆಳ್ಳಿ ಆಭರಣ, 6 ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳು, ₹1 ಲಕ್ಷ ನಗದು ಪತ್ತೆಹಚ್ಚಿದರು. ಜೊತೆಗೆ ಬ್ಯಾಂಕ್ ಖಾತೆಯಲ್ಲಿದ್ದ ₹5 ಲಕ್ಷವನ್ನು ಫ್ರೀಜ್ ಮಾಡಲಾಗಿದೆ.

ಮನೆಗಳ ಮೇಲಿನ ದಾಳಿಯ ಬಳಿಕ ಸಿರುಗುಪ್ಪ ನಗರದ ಆರ್‌ಡಿಪಿಆರ್ ಕಚೇರಿಯ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿ, ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಅಡ್ಡ ಮತದಾನ ಮಾಡಿದವರ ವಿರುದ್ಧ ಪಕ್ಷ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಅರಗ ಜ್ಞಾನೇಂದ್ರ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ವಿರುದ್ಧ ಪಕ್ಷ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯಂತಹ ಶಿಸ್ತಿನ ಪಕ್ಷದಲ್ಲಿ ಅಡ್ಡ ಮತದಾನ ಮಾಡಿರುವುದು ಪಕ್ಷಕ್ಕೆ ಮಾಡಿದ ದ್ರೋಹ. ಇಂತಹ ಘಟನೆ ನಡೆಯಬಾರದು. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

ಅಡ್ಡ ಮತದಾನದ ಬೆಳವಣಿಗೆಯಿಂದ ಪಕ್ಷದ ರಾಜ್ಯಾಧ್ಯಕ್ಷರು ವಿಚಲಿತರಾಗಿದ್ದಾರೆ. ಭಾವೋದ್ವೇಗದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಅಡ್ಡ ಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳಕ್ಕೆ ಹೋಗುವ ಅಗತ್ಯವಿಲ್ಲ. ಬೇರೆ ಮಾರ್ಗಗಳ ಮೂಲಕ ಸತ್ಯಾಸತ್ಯತೆ ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಅಡ್ಡ ಮತದಾನ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬಾರದು ಎಂದು ಹೇಳಿದ ಅವರು, ಈ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಸಮಿತಿ ರಚಿಸಲಾಗಿದೆ. ಸಮಿತಿಯ ವರದಿ ಬಂದ ಬಳಿಕ ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಅದಕ್ಕೆ ಸ್ವಲ್ಪ ಸಮಯ ಬೇಕಾಗಬಹುದು ಎಂದರು.

ಪಕ್ಷ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇದೇ ಕಾರಣಕ್ಕೆ ರಾಜ್ಯಾಧ್ಯಕ್ಷರು ಹಾಗೂ ಪ್ರತಿಪಕ್ಷ ನಾಯಕರನ್ನು ದೆಹಲಿಗೆ ಕರೆಯಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಅಡ್ಡ ಮತದಾನ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ!

0

ಉಡುಪಿ: ಉದ್ಯಾವರ ಸಮೀಪದ ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಪಿತ್ರೋಡಿ ನಿವಾಸಿ ಹರ್ಷಿತ್ ಶೆಟ್ಟಿ (28) ಮೃತ ಯುವಕನಾಗಿದ್ದು, ಬೆಳಗ್ಗೆ ಕ್ರಿಕೆಟ್ ಆಡಲು ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದನು. ಆದರೆ, ಸಂಜೆವರೆಗೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ಆರಂಭಿಸಿದ್ದರು.

ಈ ವೇಳೆ ಪಾಪನಾಶಿನಿ ಸೇತುವೆ ಮೇಲೆಯೇ ಹರ್ಷಿತ್ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಜೊತೆಗೆ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಅನುಮಾನ ಮತ್ತಷ್ಟು ಬಲವಾಗಿತ್ತು. ತಕ್ಷಣ ಸ್ಥಳೀಯರು ಹಾಗೂ ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ನದಿಯಲ್ಲಿ ಶೋಧ ಕಾರ್ಯ ಕೈಗೊಳ್ಳಲಾಯಿತು.

ಸಂಜೆಯ ವೇಳೆಗೆ ನದಿಯಲ್ಲಿ ಹರ್ಷಿತ್ ಮೃತದೇಹ ಪತ್ತೆಯಾಗಿದ್ದು, ಬಳಿಕ ಅದನ್ನು ಮೇಲಕ್ಕೆತ್ತಲಾಯಿತು. ಹರ್ಷಿತ್ ಮಲ್ಪೆಯಲ್ಲಿರುವ ಸೊಸೈಟಿಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್ʼಗೆ ಪದ್ಮವಿಭೂಷಣ ಗೌರವ: ಕ್ರಿಕೆಟಿಗ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರದಾನ

0

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ನಡೆದ ಎರಡನೇ ಸುತ್ತಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟೆನಿಸ್ ದಂತಕಥೆ ವಿಜಯ್ ಅಮೃತರಾಜ್, ಮಲಯಾಳಂ ಚಿತ್ರರಂಗದ ಹಿರಿಯ ನಟ ಮಮ್ಮುಟ್ಟಿ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

ಚಿತ್ರರಂಗ, ಸಂಗೀತ, ಕ್ರೀಡೆ, ಸಾರ್ವಜನಿಕ ಸೇವೆ ಹಾಗೂ ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಹಲವಾರು ಗಣ್ಯರನ್ನು ಈ ಸಂದರ್ಭದಲ್ಲಿ ರಾಷ್ಟ್ರಪತಿಗಳು ಸನ್ಮಾನಿಸಿದರು.

ಸಮಾರಂಭದಲ್ಲಿ ನಟ ಮಮ್ಮುಟ್ಟಿ ಅವರ ಪತ್ನಿ ಸಲ್ಫತ್, ಪುತ್ರ ಹಾಗೂ ನಟ ದುಲ್ಕರ್ ಸಲ್ಮಾನ್ ಮತ್ತು ಪುತ್ರಿ ಸುರುಮಿ ಉಪಸ್ಥಿತರಿದ್ದರು.

ರೋಹಿತ್ ಶರ್ಮಾ, ಆರ್. ಮಾಧವನ್‌ಗೆ ಪದ್ಮಶ್ರೀ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಬಾಲಿವುಡ್ ನಟ ಆರ್. ಮಾಧವನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ರಂಗ ಕಲಾವಿದ ನೂರುದ್ದೀನ್ ಅಹ್ಮದ್ ಅವರಿಗೂ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿಬು ಸೊರೆನ್‌ಗೆ ಮರಣೋತ್ತರ ಪದ್ಮಭೂಷಣ

ಸಾರ್ವಜನಿಕ ವ್ಯವಹಾರಗಳ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಜೆಎಂಎಂ ಸಂಸ್ಥಾಪಕ ಹಾಗೂ ಬುಡಕಟ್ಟು ನಾಯಕ ಶಿಬು ಸೊರೆನ್ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪರವಾಗಿ ಪತ್ನಿ ರೂಪಿ ಸೊರೆನ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮೊದಲ ಸಮಾರಂಭದಲ್ಲಿ 66 ಪದ್ಮ ಪ್ರಶಸ್ತಿಗಳ ಪ್ರದಾನ

ಇದಕ್ಕೂ ಮುನ್ನ ಮೇ 26ರಂದು ನಡೆದ ಮೊದಲ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಟ್ಟು 66 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದರು.

ಆ ಸಮಾರಂಭದಲ್ಲಿ ದಿವಂಗತ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರ ಪರವಾಗಿ ಪತ್ನಿ ಹಾಗೂ ನಟಿ-ರಾಜಕಾರಣಿ ಹೇಮಾ ಮಾಲಿನಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಹೊಸ ಕಾನೂನು ತಂತ್ರ: ಸುಪ್ರೀಂ ಕೋರ್ಟ್‌ನಲ್ಲಿ ಗಡುವು ಸಡಿಲಿಕೆಗೆ ಮನವಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ತಮ್ಮ ಕಾನೂನು ಹೋರಾಟಕ್ಕೆ ಹೊಸ ದಿಕ್ಕು ನೀಡಿದ್ದಾರೆ. ಪ್ರಕರಣದಲ್ಲಿ ವಾದಿಸುತ್ತಿದ್ದ ವಕೀಲರನ್ನು ಬದಲಾಯಿಸಿರುವ ಅವರು, ಹೊಸ ವಕೀಲರ ಮೂಲಕ ಸುಪ್ರೀಂ ಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆಗೆ ಸಂಬಂಧಿಸಿ 60 ಸಾಕ್ಷಿಗಳ ಹೇಳಿಕೆಗಳನ್ನು ಒಂದು ವರ್ಷದೊಳಗೆ ದಾಖಲಿಸಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನಿರ್ದೇಶನ ನೀಡಿತ್ತು. ಇದೀಗ ಆ ಗಡುವು ಕಾರ್ಯಸಾಧ್ಯವಲ್ಲ ಎಂಬ ವಾದದೊಂದಿಗೆ ಅವಧಿಯನ್ನು ಮರುಪರಿಶೀಲಿಸಿ ಕಡಿಮೆ ಅಥವಾ ಪರಿಷ್ಕರಿಸುವಂತೆ ಮನವಿ ಮಾಡಲಾಗಿದೆ.

ಇದೇ ವೇಳೆ ದರ್ಶನ್ ಸೇರಿದಂತೆ ಲಕ್ಷ್ಮಣ್ ಹಾಗೂ ನಾಗರಾಜ್ ಪರವಾಗಿ ವಾದಿಸುತ್ತಿದ್ದ ವಕೀಲ ಸುನೀಲ್ ಕುಮಾರ್ ಅವರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು 59ನೇ ಸೆಷನ್ಸ್ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿರುವ ಅವರು, ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಚಾರಣೆ ವೇಳೆ ನ್ಯಾಯಾಲಯ, ಹಿರಿಯ ವಕೀಲ ಹಷ್ಮತ್ ಪಾಷಾ ಅವರು ದರ್ಶನ್ ಪರವಾಗಿ ಹೊಸದಾಗಿ ವಕಾಲತ್ತು ಸಲ್ಲಿಸಿರುವುದನ್ನು ಉಲ್ಲೇಖಿಸಿತು. ಪ್ರಕರಣದ ಎಲ್ಲಾ ದಾಖಲೆಗಳನ್ನು ನೂತನ ವಕೀಲರಿಗೆ ಹಸ್ತಾಂತರಿಸುವಂತೆ ಕೋರ್ಟ್ ಸೂಚನೆ ನೀಡಿದಾಗ, ದಾಖಲೆಗಳನ್ನು ಈಗಾಗಲೇ ಕುಟುಂಬಸ್ಥರ ಮೂಲಕ ಹಸ್ತಾಂತರಿಸಲಾಗಿದೆ ಎಂದು ಸುನೀಲ್ ಕುಮಾರ್ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ವಕೀಲರ ಬದಲಾವಣೆ, ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿ ಹಾಗೂ ವಿಚಾರಣಾ ಗಡುವಿನ ಪ್ರಶ್ನೆ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ.

ಮಂಗಳೂರು ಮಾಜಿ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ: ಸಮಾಜಕ್ಕೆ ಅಪಾರ ನಷ್ಟ ಎಂದ ಯು.ಟಿ. ಖಾದರ್

0

ಮಂಗಳೂರು: ಮಂಗಳೂರಿನ ಮಾಜಿ ಖಾಝಿ ಹಾಗೂ ಹಿರಿಯ ಧಾರ್ಮಿಕ ವಿದ್ವಾಂಸ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನವು ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ದೊಡ್ಡ ನಷ್ಟವಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಮುಸ್ಲಿಯಾರ್ ಅವರು ಹಲವು ದಶಕಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಧಾರ್ಮಿಕ ಮಾರ್ಗದರ್ಶನ ನೀಡುವ ಮೂಲಕ ಗೌರವಾನ್ವಿತ ಸ್ಥಾನ ಗಳಿಸಿದ್ದರು. ಧರ್ಮ, ಶಿಕ್ಷಣ ಮತ್ತು ಸಮಾಜ ಸೇವೆಯ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಅವರ ಜೀವನ ಪಯಣವು ಸರಳತೆ, ಜ್ಞಾನ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿತ್ತು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಗೌರವವನ್ನು ಬೆಳೆಸುವಲ್ಲಿ ಅವರು ವಹಿಸಿದ್ದ ಪಾತ್ರ ಅಪ್ರತಿಮವಾಗಿದೆ ಎಂದು ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ಮುಸ್ಲಿಯಾರ್ ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬುವುದು ಕಷ್ಟ. ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಲಿವೆ ಎಂದು ಹೇಳಿರುವ ಸಚಿವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ ದುಃಖ ಸಹಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಚರ್ಚೆಗೆ ಬಿಡದಿಗೆ ಯಾಕೆ ಹೋಗಬೇಕು? ವಿಧಾನಸೌಧಕ್ಕೆ ಬರಲಿ: HDKಗೆ ಶಾಸಕ ಹೆಚ್.ಸಿ. ಬಾಲಕೃಷ್ಣ ತಿರುಗೇಟು

ಬೆಂಗಳೂರು: ಬಿಡದಿ ಟೌನ್‌ಶಿಪ್ ಎಐ ಸಿಟಿ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಪತ್ರ ಸಮರದ ನಡುವೆ, ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಿಡದಿಗೆ ಹೋಗುವ ಅಗತ್ಯವೇ ಇಲ್ಲ. ಮುಖ್ಯಮಂತ್ರಿ ವಿಧಾನಸೌಧಕ್ಕೆ ಆಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಅಲ್ಲಿಗೆ ಬಂದು ಚರ್ಚೆ ನಡೆಸಲಿ. ಇಂತಹ ನಾಟಕಗಳನ್ನು ಅವರು ಬಿಡಬೇಕು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಯ ಮೂಲ ಕಲ್ಪನೆಯೇ ಹೆಚ್.ಡಿ. ಕುಮಾರಸ್ವಾಮಿ ಅವರದ್ದಾಗಿದೆ. ಅವರು ಮತ್ತು ಅವರ ತಂದೆ ಅಧಿಕಾರದಲ್ಲಿದ್ದಾಗ ಯೋಜನೆಯನ್ನು ರದ್ದುಪಡಿಸಲಿಲ್ಲ. ಈಗ ವಿರೋಧ ವ್ಯಕ್ತಪಡಿಸುವುದು ಕೇವಲ ರಾಜಕೀಯ ನಾಟಕ ಎಂದು ಬಾಲಕೃಷ್ಣ ಆರೋಪಿಸಿದರು.

ಮುಖ್ಯಮಂತ್ರಿ ಈಗಾಗಲೇ ಯೋಜನೆ ಕುರಿತು ನಿರ್ಧಾರ ಕೈಗೊಂಡಿದ್ದು, ಅದನ್ನು ಜಾರಿಗೊಳಿಸುವುದು ಖಚಿತ. ಯಾರೇ ಎಷ್ಟೇ ಹೋರಾಟ ಮಾಡಿದರೂ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸವಾಲು ಹಾಕಿದರು.

ರೈತರ ಸಮ್ಮುಖದಲ್ಲೇ ಚರ್ಚೆ ನಡೆಯಲಿ ಎಂಬ ಕುಮಾರಸ್ವಾಮಿ ಪತ್ರದ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಚರ್ಚೆಗೆ ಕರೆದಿದ್ದಾರೆ. ಅವರು ವಿಧಾನಸೌಧಕ್ಕೆ ಬರಲಿ. ಬರಲು ಇಷ್ಟವಿದ್ದರೆ ಬರಲಿ, ಇಲ್ಲದಿದ್ದರೆ ಬಿಡಲಿ ಎಂದು ತಿರುಗೇಟು ನೀಡಿದರು.

ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ನಿಜವಾದ ರೈತರಲ್ಲ, ಹೊರಗಿನಿಂದ ಬಂದವರೇ ಹೆಚ್ಚಾಗಿದ್ದರು ಎಂದು ಆರೋಪಿಸಿದರು. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಎಐ ಸಿಟಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕುಮಾರಸ್ವಾಮಿ ನೀಡಿದ್ದಕ್ಕಿಂತ ಹೆಚ್ಚಿನ ಪರಿಹಾರವನ್ನು ಸರ್ಕಾರ ರೈತರಿಗೆ ನೀಡುತ್ತಿದೆ ಎಂದು ಬಾಲಕೃಷ್ಣ ಹೇಳಿದರು.

ಕೆರೆಗಳ ಶುದ್ಧೀಕರಣಕ್ಕಾಗಿ ಸರ್ಕಾರ ಹಣ ಮೀಸಲಿಟ್ಟಿದ್ದು, ರೈತರಿಗೆ ಪ್ರತಿದಿನ ಆರ್‌ಟಿಜಿಎಸ್ ಮೂಲಕ ಪರಿಹಾರ ಧನ ಪಾವತಿಸಲಾಗುತ್ತಿದೆ. ಸಾಲ ಪಡೆದ ರೈತರಿಗೆ ಒನ್‌ಟೈಮ್ ಸೆಟಲ್‌ಮೆಂಟ್ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ ಎಂದು ವಿವರಿಸಿದರು.

‘ರೀಲ್ ಅಲ್ಲ, ರಿಯಲ್ ಪಕ್ಷ’: ವಿಪಕ್ಷಗಳಿಗೆ ವಿಜಯ್ ತಿರುಗೇಟು, ವೈರಲ್ ಸಂಜ್ಞೆಯ ಮೂಲಕ ರಾಜಕೀಯ ಸಂದೇಶ

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದಳಪತಿ ವಿಜಯ್ ನೀಡಿದ ಭಾಷಣ ಹಾಗೂ ಅದರ ಕೊನೆಯಲ್ಲಿ ಪ್ರದರ್ಶಿಸಿದ ಸ್ಟೈಲ್ ಇದೀಗ ರಾಜಕೀಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ವಿಪಕ್ಷಗಳ ಟೀಕೆಗಳಿಗೆ ತಕ್ಕ ಉತ್ತರ ನೀಡಿದ ವಿಜಯ್, ತಮ್ಮ ಪಕ್ಷದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡು ಭ್ರಷ್ಟಾಚಾರದ ವಿರುದ್ಧ ಕಠಿಣ ಸಂದೇಶ ರವಾನಿಸಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷಗಳು ಸರ್ಕಾರ ಹಾಗೂ ವಿಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಸಭಾತ್ಯಾಗ ಮಾಡಿದ್ದವು. ಬಳಿಕ ಉತ್ತರ ಭಾಷಣ ಮಾಡಿದ ವಿಜಯ್, ತಮ್ಮ ಪಕ್ಷವನ್ನು ಕೇವಲ ಸಿನಿಮಾ ಹಿನ್ನೆಲೆಯ ಪಕ್ಷ ಎಂದು ಟೀಕಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಗೂ ಮುನ್ನ ಜನಪರ ಹೋರಾಟಗಳು, ಸಾಮಾಜಿಕ ಸೇವಾ ಕಾರ್ಯಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಪರ ನಡೆಸಿದ ಹೋರಾಟಗಳ ವಿವರ ನೀಡಿದ ಅವರು, “ನಮ್ಮದು ಜನರ ಮಧ್ಯೆ ಬೆಳೆದ ರಿಯಲ್ ಪಕ್ಷ” ಎಂದು ಸ್ಪಷ್ಟಪಡಿಸಿದರು.

ಭಾಷಣದ ಕೊನೆಯಲ್ಲಿ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಈ ಹಿಂದೆ ಬಳಸಿದ್ದ ವೈರಲ್ ಸಂಜ್ಞೆಯನ್ನು ಮರುಕಳಿಸಿದ ವಿಜಯ್, ಪರೋಕ್ಷವಾಗಿ ರಾಜಕೀಯ ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು. ವಿಶೇಷವಾಗಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮದ ಸಂದೇಶ ನೀಡಿದ ತಕ್ಷಣ ಆ ಸಂಜ್ಞೆ ಪ್ರದರ್ಶಿಸಿದ್ದರಿಂದ, ಇದು ಹಿಂದಿನ ಆಡಳಿತದ ವಿರುದ್ಧದ ರಾಜಕೀಯ ಸೂಚನೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ವಿಧಾನಸಭೆಯಲ್ಲಿನ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಂಬಲಿಗರು ವಿಜಯ್ ಅವರ ರಾಜಕೀಯ ಆತ್ಮವಿಶ್ವಾಸವನ್ನು ಪ್ರಶಂಸಿಸುತ್ತಿದ್ದರೆ, ವಿರೋಧಿಗಳು ಅದರ ಬಗ್ಗೆ ವಿಭಿನ್ನ ವ್ಯಾಖ್ಯಾನಗಳನ್ನು ಮಾಡುತ್ತಿದ್ದಾರೆ.

error: Content is protected !!