Home Blog

ಕದಡಿಯಲ್ಲಿ ನೀಲಾಂಬಿಕಾ ದೇವಿ ಜಾತ್ರಾ ವೈಭವ

0

ಗದಗ: ತಾಲೂಕಿನ ಕದಡಿ ಗ್ರಾಮದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಗ್ರಾಮದ ಆರಾಧ್ಯ ದೇವತೆ ಶ್ರೀ ನೀಲಾಂಬಿಕಾ ದೇವಿ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ ಸೋಮವಾರ ಸಂಜೆ 6.15ಕ್ಕೆ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಗ್ರಾಮದ ಸದ್ಭಕ್ತ ಮಂಡಳಿ ಹಾಗೂ ಗುರು-ಹಿರಿಯರ ಮಾರ್ಗದರ್ಶನದಲ್ಲಿ ನಡೆದ ರಥೋತ್ಸವದಲ್ಲಿ ಡೊಳ್ಳು, ಜಾಗಟೆ ಸೇರಿದಂತೆ ವಿವಿಧ ವಾದ್ಯಗಳ ಸದ್ದಿಗೆ ಭಕ್ತರು ಜಯಘೋಷ ಮೊಳಗಿಸಿದರು. ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಗೆ ವಿಶೇಷ ನೈವೇದ್ಯವಾಗಿ ಹೋಳಿಗೆ ಸಮರ್ಪಿಸಿ, ದಾಸೋಹದಲ್ಲಿ ಪಾಲ್ಗೊಂಡರು.

ಜಾತ್ರೆಯ ಅಂಗವಾಗಿ ನೀಲಾಂಬಿಕಾ ನಾಟ್ಯ ಸಂಘದ ವತಿಯಿಂದ ‘ಬರ್ಕೋ ಪದ ಬರ್ಕೋ’ ಆಧ್ಯಾತ್ಮಿಕ ನಾಟಕ ಹಾಗೂ ಬುಧವಾರ ನಡೆಯುವ ಕಡುಬಿನ ಕಾಳಗದ ಸಂದರ್ಭದಲ್ಲಿ ಶ್ರೀ ಶಂಕರ ಸೇವಾ ನಾಟ್ಯ ಸಂಘದ ವತಿಯಿಂದ ‘ಗೌರಿ ಗೆದ್ದಳು’ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ.

ನಾಟಕ, ಭಜನೆ ಹಾಗೂ ಕಲಾಮೇಳಗಳ ಮೂಲಕ ಜಾತ್ರೆಯು ಗ್ರಾಮೀಣ ಸೊಗಡು, ಕಲೆ-ಸಂಸ್ಕೃತಿ ಹಾಗೂ ಭಾವೈಕ್ಯತೆಯನ್ನು ಸಾರುವ ವೇದಿಕೆಯಾಗಿ ಗಮನ ಸೆಳೆಯುತ್ತಿದೆ.

ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಗುರುತಿಸಿ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರು ಶ್ರಮಿಸಲಿ: ಶ್ರೀ ಮುಕ್ತಿಮುನಿ ಶಿವಾಚಾರ್ಯರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರ ಭವಿಷ್ಯ ರೂಪಿಸುವುದರ ಜತೆಗೆ ದೇಶದ ಸತ್ಪ್ರಜೆಗಳನ್ನು ನಿರ್ಮಿಸುವ ಮಹತ್ತರ ಜವಾಬ್ದಾರಿ ಹೊಂದಿರುವ ರಾಷ್ಟ್ರ ನಿರ್ಮಾತೃಗಳು ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಶ್ರೀ ವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯರು ಹೇಳಿದರು.

ಪಟ್ಟಣದ ಶ್ರೀ ವೀರ ಗಂಗಾಧರ ಕಲ್ಯಾಣ ಮಂಟಪದಲ್ಲಿ ಜಿಪಂ, ತಾಲೂಕಾಡಳಿತ ಹಾಗೂ ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 138ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಲಕ್ಷ್ಮೇಶ್ವರ-ಶಿರಹಟ್ಟಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಹಿಂದೆ ಶಾಲೆಗಳನ್ನು ‘ಸಾಲಿಗುಡಿ’ ಎಂದು ಗೌರವಿಸಲಾಗುತ್ತಿತ್ತು. ಆ ಪರಂಪರೆಯ ಮಹತ್ವವನ್ನು ಅರಿತು ಶಿಕ್ಷಕರು ಕಾರ್ಯನಿರ್ವಹಿಸಬೇಕು. ಸಮಾಜದಲ್ಲಿನ ಮೌಢ್ಯ, ಅಂಧಕಾರ ಹಾಗೂ ಮೂಢನಂಬಿಕೆಗಳನ್ನು ಹೋಗಲಾಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಶ್ರಮಿಸಬೇಕು. ಮಕ್ಕಳು ಹಾಗೂ ಸಮಾಜ ನೀಡುವ ಗೌರವವೇ ಶಿಕ್ಷಕರಿಗೆ ದೊರೆಯುವ ಶ್ರೇಷ್ಠ ಪ್ರಶಸ್ತಿ ಎಂದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ, ತತ್ವಜ್ಞಾನಿ ಹಾಗೂ ರಾಜಕಾರಣಿಯಾಗಿ ದೇಶಕ್ಕೆ ಮಾದರಿಯಾಗಿದ್ದರು. ನಮ್ಮ ನೆಲದಲ್ಲಿ ನಡೆದಾಡಿದ ದೇವರೆಂದೇ ಗೌರವಿಸಲ್ಪಟ್ಟ ಲಿಂ. ವೀರ ಗಂಗಾಧರ ಜಗದ್ಗುರುಗಳು ಡಾ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ಭವನದಲ್ಲಿಈ ಗೌರವಿಸಿದ್ದು ನಮ್ಮ ನೆಲದ ಹೆಮ್ಮೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಶಿಕ್ಷಕರ ಕೊರತೆ ಹಾಗೂ ಸೀಮಿತ ಸೌಲಭ್ಯಗಳ ನಡುವೆಯೂ ಶಿರಹಟ್ಟಿ ಮತಕ್ಷೇತ್ರದಲ್ಲಿ ಶಿಕ್ಷಕರ ಪ್ರಾಮಾಣಿಕ ಸೇವೆಯಿಂದ ಉತ್ತಮ ಶೈಕ್ಷಣಿಕ ಸಾಧನೆ ಮಾಡಿರುವುದು ಶ್ಲಾಘನೀಯ ಎಂದರು.

ಶಿಕ್ಷಕರು ಕರ್ತವ್ಯಪ್ರಜ್ಞೆ, ನಿರಂತರ ಅಧ್ಯಯನಶೀಲತೆ ಹಾಗೂ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರಿಣಾಮಕಾರಿ ಬೋಧನೆಗೆ ಮುಂದಾಗಬೇಕು. ಮಕ್ಕಳ ಭವಿಷ್ಯದ ಜತೆಗೆ ದೇಶದ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಲ್ಲಿದೆ. ಕ್ಷೇತ್ರದ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಪ್ರತಿವರ್ಷ ಶಿಕ್ಷಕರ ದಿನಾಚರಣೆಯಂದೇ ನಿವೃತ್ತ ಶಿಕ್ಷಕರಿಗೆ ಸನ್ಮಾನದ ಜತೆಗೆ ಪಿಂಚಣಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಒಪಿಎಸ್ ಜಾರಿ ಸೇರಿದಂತೆ ಶಿಕ್ಷಕರ ವಿವಿಧ ಸಮಸ್ಯೆಗಳ ಪರಿಹಾರ ಹಾಗೂ ನ್ಯಾಯಯುತ ಬೇಡಿಕೆಗಳಿಗೆ ಧ್ವನಿಯಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಶಿಕ್ಷಕರು ತಮ್ಮ ವೃತ್ತಿಪರ ಪ್ರಾಮಾಣಿಕತೆಯ ಆತ್ಮಾವಲೋಕನ ಮಾಡಿಕೊಂಡು ನಿರಂತರ ಅಧ್ಯಯನಶೀಲ, ಅನುಕರಣೀಯ ಹಾಗೂ ಕೌಶಲ್ಯವಂತರಾಗಬೇಕು. ದೇಶದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುವ ಶಿಕ್ಷಕರಿಗೆ ಸರ್ಕಾರದ ಕೆಲ ನೀತಿಗಳು ಮಾರಕವಾಗಿ ಪರಿಣಮಿಸುತ್ತಿವೆ ಎಂದರು.

ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚುತ್ತಿದ್ದರೆ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಸರ್ಕಾರಿ ಶಾಲೆಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಬಿಇಒ ಶಿವರಾಜ ಶಿಮಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಗಡಿ ಫೌಂಡೇಶನ್ ವತಿಯಿಂದ ಲಕ್ಷ್ಮೇಶ್ವರದ ಸರ್ಕಾರಿ ಶಾಲೆ ನಂ.1ರ ಮೂಲಸೌಕರ್ಯ ಅಭಿವೃದ್ಧಿಗೆ ₹50 ಲಕ್ಷ ದೇಣಿಗೆ ನೀಡಿರುವುದನ್ನು ಸ್ಮರಿಸಿದರು. ಹರಿಹರದ ಹಿರಿಯ ಸಾಹಿತಿ ಪ್ರೊ. ಎಚ್.ಎ. ಭಿಕ್ಷಾವರ್ತಿಮಠ ಉಪನ್ಯಾಸ ನೀಡಿದರು.

ಮಾಜಿ ಶಾಸಕ ರಾಮಣ್ಣ ಲಮಾಣಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಹಾಗೂ ನಾಗರಾಜ ಮಡಿವಾಳರ ಮಾತನಾಡಿದರು.

ಸಮಾರಂಭದಲ್ಲಿ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ 50ಕ್ಕೂ ಹೆಚ್ಚು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿಧನರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವೇದಿಕಾ ಭರತನಾಟ್ಯ ಶಾಲೆಯ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶಿಸಿದರು.

ಒಡೆಯರ ಮಲ್ಲಾಪುರ ಎಂಡಿಆರ್‌ಎಸ್ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ, ಮಲ್ಲು ಕಳಸಾಪುರ ರೈತಗೀತೆ ಹಾಡಿದರು.

ಶಿಕ್ಷಣ ಸಂಯೋಜಕ ಆರ್.ಬಿ. ಜೋಶಿ, ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ, ಹೆಚ್.ಎಸ್. ರಾಮನಗೌಡ್ರ, ಎಸ್.ಕೆ. ಹವಾಲ್ದಾರ, ಮಂಜುನಾಥ ಕೊಕ್ಕರಗುಂದಿ, ನಾಗರಾಜ ಲಕ್ಕುಂಡಿ, ಬಿ.ಎಂ. ಕುಂಬಾರ, ಉಮೇಶ ನೇಕಾರ, ಶ್ರೀಕಾಂತ ನಂದೆಣ್ಣವರ, ಹೆಚ್.ಎಂ. ಸೊಪ್ಪಿನ, ಎಸ್.ಎಫ್. ಮಠದ, ಪರಪ್ಪ ಕರಿಗಾರ, ಜಿ.ಎನ್. ಕೋಡಬಾಳ, ಮೋಹನ ಮಾಂಡ್ರೆ, ಸುನಂದಾ ಹಿರೇಮಠ, ಮುತ್ತಣ್ಣ ಹುಬ್ಬಳ್ಳಿ, ಗೀತಾ ಹಳ್ಳಯಾಳ, ಎಸ್.ಎಫ್. ತಳವಾರ, ನವೀನ ಅಂಗಡಿ, ವಾಸು ದೀಪಾಲಿ, ಶ್ರೀನಿವಾಸ ಮತ್ತೂರ, ಎಲ್.ಎಸ್. ಅರಳಹಳ್ಳಿ ಸೇರಿದಂತೆ ಎರಡೂ ತಾಲೂಕಿನ ಶಿಕ್ಷಕರು, ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಕರ ಸಂಘದ ಎಂ.ಎನ್. ಭರಮಗೌಡ್ರ ಸ್ವಾಗತಿಸಿದರು. ಶಿಕ್ಷಕರಾದ ಎಚ್.ಡಿ. ನಿಂಗರಡ್ಡಿ, ರತ್ನಾ ಕುಂಬಾರ, ಎನ್.ಎನ್. ಶಿಗ್ಲಿ ಹಾಗೂ ಶ್ರೀಪಾಲ್ ಘೋಂಗಡಿ ನಿರೂಪಿಸಿದರು. ಶರಣಬಸವಗೌಡ ಪಾಟೀಲ ವಂದಿಸಿದರು.

ಶಿಕ್ಷಕರು ಕೇವಲ ಪಾಠ ಹೇಳುವವರಲ್ಲ, ವಿದ್ಯಾರ್ಥಿಗಳಲ್ಲಿರುವ ಸುಪ್ತ ಶಕ್ತಿಯನ್ನು ಗುರುತಿಸಿ, ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಮೂಲಕ ರಾಷ್ಟ್ರದ ಭವಿಷ್ಯ ಕಟ್ಟುವ ಮಹಾನ್ ಶಿಲ್ಪಿಗಳು.

— ಶ್ರೀ ವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯರು

ಕೆರೆ ತುಂಬಿಸಿ, ರೈತರ ಬದುಕು ಹಸನಾಗಿಸಿ: ಸಿಎಂಗೆ ಶಾಸಕ ಮನವಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಕೂಡ್ಲಿಗಿ ಪಟ್ಟಣದಲ್ಲಿ ನಡೆದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ರೈತರ ಬಹುದಿನಗಳ ನೀರಾವರಿ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮರಬ್ಬೀಹಾಳು ಏತ ನೀರಾವರಿ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಶಾಸಕ ಕೆ. ನೇಮಿರಾಜ್ ನಾಯ್ಕ ಮನವಿ ಸಲ್ಲಿಸಿದರು.

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರಬ್ಬೀಹಾಳು ಭಾಗದ ರೈತರ ಬಹುದಿನಗಳ ನೀರಾವರಿ ಬೇಡಿಕೆಯನ್ನು ಪೂರೈಸುವ ದೃಷ್ಟಿಯಿಂದ ಈ ಏತ ನೀರಾವರಿ ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಯೋಜನೆಯಿಂದ ಸುಮಾರು 850 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವುದರ ಜೊತೆಗೆ ಲಡಕನಬಾವಿ, ವರದಾಪುರ ಹಾಗೂ ಹಂಪಪಟ್ಟಣ ಕೆರೆಗಳಿಗೆ ನೀರು ತುಂಬಿಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಯೋಜನೆಯಲ್ಲಿ ಪಂಪಿಂಗ್ ವ್ಯವಸ್ಥೆ, ವಿದ್ಯುತ್ ಮೂಲಸೌಕರ್ಯ, ರೈಸಿಂಗ್ ಮೇನ್, ಕಾಲುವೆ ಹಾಗೂ ವಿತರಣಾ ವ್ಯವಸ್ಥೆ ಮತ್ತು ಕೆರೆ ಸುಧಾರಣಾ ಕಾಮಗಾರಿಗಳು ಒಳಗೊಂಡಿವೆ. ಇದರಿಂದ ಕ್ಷೇತ್ರದ ಕೃಷಿ ಅಭಿವೃದ್ಧಿಗೆ ಉತ್ತೇಜನ ದೊರೆಯುವುದರೊಂದಿಗೆ ನೀರಿನ ಸಂಗ್ರಹ ಹಾಗೂ ದೀರ್ಘಕಾಲಿಕ ನೀರಿನ ಭದ್ರತೆಗೆ ಸಹಕಾರಿಯಾಗಲಿದೆ. ಯೋಜನೆಯ ಒಟ್ಟು ಅಂದಾಜು ವೆಚ್ಚ ₹70 ಕೋಟಿ ಆಗಿದೆ.

ಯೋಜನೆಗೆ ಅಗತ್ಯವಿರುವ ನೀರಿನ ಹಂಚಿಕೆಯನ್ನು ತುಂಗಭದ್ರಾ ಮಂಡಳಿ ಈಗಾಗಲೇ ಮಂಜೂರು ಮಾಡಿದ್ದು, ನೀರಿನ ಲಭ್ಯತೆಯೂ ಖಚಿತವಾಗಿದೆ. ಹೀಗಾಗಿ ಹಂಚಿಕೆಯಾಗಿರುವ ನೀರನ್ನು ಸದುಪಯೋಗಪಡಿಸಿಕೊಂಡು ಉದ್ದೇಶಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಮೂಲಸೌಕರ್ಯ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ WRD 2024-25 SR ದರಗಳು ಹಾಗೂ ಮಾರ್ಗಸೂಚಿಗಳನ್ವಯ ಡಿಪಿಆರ್‌ ಪರಿಷ್ಕರಿಸಿ, ಅಗತ್ಯ ತಾಂತ್ರಿಕ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ರೈತರ ಹಿತಾಸಕ್ತಿ, ಈಗಾಗಲೇ ಲಭ್ಯವಿರುವ ನೀರಿನ ಹಂಚಿಕೆ ಹಾಗೂ ಕ್ಷೇತ್ರದ ನೀರಾವರಿ ಅಗತ್ಯವನ್ನು ಪರಿಗಣಿಸಿ ಪರಿಷ್ಕೃತ ಡಿಪಿಆರ್‌ಗೆ ಶೀಘ್ರ ಅನುಮೋದನೆ ನೀಡಿ, ಅಗತ್ಯ ಅನುದಾನ ಒದಗಿಸುವ ಮೂಲಕ ಮರಬ್ಬೀಹಾಳು ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಶಾಸಕ ಕೆ. ನೇಮಿರಾಜ್ ನಾಯ್ಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

ಹಿಂದ್ ಕೇಸರಿಯಿಂದ ಸೆ. 22ರಂದು ಕವನ ಸ್ಪರ್ಧೆ

0

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ನಗರದ ಡಾ. ಸಿಂಪಿ ಲಿಂಗಣ್ಣ ರಸ್ತೆಯ ಹಿಂದ್ ಕೇಸರಿ ಯುವಕ ಮಂಡಳಿಯಿಂದ ಪ್ರಥಮ ಬಾರಿಗೆ ಕವನ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದ ಕವಿಗಳಿಗೆ ಒಟ್ಟು ₹5 ಸಾವಿರ ನಗದು ಹಾಗೂ ಪುಸ್ತಕ ಬಹುಮಾನ ನೀಡಲಾಗುವುದು ಎಂದು ಮಂಡಳಿ ಅಧ್ಯಕ್ಷ ಬಸವರಾಜ ಕರುಗಲ್ ತಿಳಿಸಿದ್ದಾರೆ.

ಇದುವರೆಗೆ ಶ್ರೀ ಗಜಾನನ ಗೆಳೆಯರ ಬಳಗ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದ ಬಳಗವು ಗಣೇಶೋತ್ಸವದ ಸಂದರ್ಭದಲ್ಲಿ ಕೊಪ್ಪಳದ ಕೋಟ್ಯಧಿಪತಿ ಕಾರ್ಯಕ್ರಮ ಆಯೋಜಿಸುವ ಮೂಲಕ ಗಮನ ಸೆಳೆದಿತ್ತು. ಈ ವರ್ಷದಿಂದ ಹಿಂದ್ ಕೇಸರಿ ಯುವಕ ಮಂಡಳಿ ಎಂಬ ಹೊಸ ಹೆಸರಿನೊಂದಿಗೆ ವಿನೂತನವಾಗಿ ಕವನ ಸ್ಪರ್ಧೆ ಆಯೋಜಿಸುತ್ತಿದೆ.

ಗಣೇಶೋತ್ಸವದ ಅಂಗವಾಗಿ ಸೆ.22ರಂದು ಸಂಜೆ 6 ಗಂಟೆಗೆ ನಗರದ ಡಾ. ಸಿಂಪಿ ಲಿಂಗಣ್ಣ ರಸ್ತೆಯಲ್ಲಿರುವ ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಗೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಆಸಕ್ತರು ಮುಕ್ತವಾಗಿ ಭಾಗವಹಿಸಬಹುದಾಗಿದ್ದು, ಸ್ವರಚಿತ ಕವನಗಳನ್ನು ಮಾತ್ರ ವಾಚಿಸಬೇಕು. ಸ್ಪರ್ಧೆಯ ವಿಜೇತರ ಆಯ್ಕೆಯಲ್ಲಿ ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರಲಿದೆ.

ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಬಸವರಾಜ ಕರುಗಲ್ (9380605892), ಅಮಿತ್ ಮಾಲಗಿತ್ತಿ (9035556637) ಹಾಗೂ ಆನಂದ್ ವಿಭೂತಿಮಠ (7411850242) ಅವರನ್ನು ಸಂಪರ್ಕಿಸಬಹುದು.

ಆದರ್ಶ ಶಿಕ್ಷಕ ಬಿ.ಎ. ಮುಳ್ಳಳ್ಳಿ ಅವರಿಗೆ ಕಸಾಪದಿಂದ ಗುರುವಂದನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮಾಜವನ್ನು ತಿದ್ದಿ ರೂಪಿಸುವ ಶಿಕ್ಷಕರು ಸಮಾಜದ ದೊಡ್ಡ ಆಸ್ತಿಯಾಗಿದ್ದಾರೆ. ಗಡಿಯಲ್ಲಿ ಸೈನಿಕರು ದೇಶವನ್ನು ಕಾಯ್ದರೆ, ರೈತರು ಅನ್ನ ನೀಡುತ್ತಾರೆ. ಆದರೆ ತರಗತಿಯ ನಾಲ್ಕು ಗೋಡೆಗಳ ನಡುವೆ ಶಿಕ್ಷಕರು ದೇಶದ ಭವಿಷ್ಯವನ್ನು ನಿರ್ಮಿಸುತ್ತಾರೆ ಎಂದು ಯುವ ಮುಖಂಡ ಸುನೀಲ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.

ತಾಲೂಕ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಮಾಸದ ಮಾತು’ ಕಾರ್ಯಕ್ರಮ ಸರಣಿಯ 40ನೇ ಕಾರ್ಯಕ್ರಮವಾಗಿ ಶನಿವಾರ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ಹಿರಿಯ ಗುರುಚೇತನ: ಸಂವಾದ-ಸಮ್ಮಾನ’ ಕಾರ್ಯಕ್ರಮದಲ್ಲಿ ಸಾರ್ಥಕ 94 ಸಂವತ್ಸರಗಳನ್ನು ಪೂರೈಸಿದ ಆದರ್ಶ ಶಿಕ್ಷಕ ಬಿ.ಎ. ಮುಳ್ಳಳ್ಳಿ ಅವರನ್ನು ಗೌರವಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದ ವಿದ್ಯಾಗುರುಗಳನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ. ಬಿ.ಎ. ಮುಳ್ಳಳ್ಳಿ ಅವರು ಅಂದಿನ ಕಾಲದಲ್ಲಿಯೇ ಶ್ರೇಷ್ಠ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳ ಜೀವನ ರೂಪಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದರು.

ಮುಖ್ಯ ಅತಿಥಿ ಪ್ರಭಾರಿ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಕೆ. ಹವಾಲ್ದಾರ ಮಾತನಾಡಿ, ನಾಡಿಗೆ ವಿ.ಪಿ. ಬಳಿಗಾರ ಅವರಂತಹ ಶ್ರೇಷ್ಠ ಐಎಎಸ್ ಅಧಿಕಾರಿಗಳನ್ನು ನೀಡಿದ ಶ್ರೇಯಸ್ಸು ಹಿರಿಯ ಗುರು ಬಿ.ಎ. ಮುಳ್ಳಳ್ಳಿ ಅವರಿಗೆ ಸಲ್ಲುತ್ತದೆ ಎಂದರು.

ವಿಶ್ರಾಂತ ಶಿಕ್ಷಣ ಸಂಯೋಜಕ ಐ.ಎಸ್. ಮಡಿವಾಳರ ಮಾತನಾಡಿ, ಅಪಾರ ಶಿಷ್ಯ ಬಳಗ ಹೊಂದಿರುವ ಮುಳ್ಳಳ್ಳಿ ಗುರುಗಳು ಮಾದರಿ ಶಿಕ್ಷಕರಾಗಿದ್ದಾರೆ. 94ರ ಹರೆಯದಲ್ಲಿಯೂ ಅವರ ಜೀವನೋತ್ಸಾಹ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಲಕ್ಷ್ಮೇಶ್ವರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಈಶ್ವರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ನೀಲಪ್ಪ ಹತ್ತಿ ಗುರುವಂದನಾ ನುಡಿಗಳನ್ನಾಡಿದರು. ಕಸಾಪ ಹಾಗೂ ಶಿಷ್ಯ ಬಳಗದ ವತಿಯಿಂದ ಬಿ.ಎ. ಮುಳ್ಳಳ್ಳಿ ಅವರಿಗೆ ಗೌರವ ಸನ್ಮಾನ ಸಲ್ಲಿಸಲಾಯಿತು.

ಕಸಾಪದ ಈರಣ್ಣ ಗಾಣಿಗೇರ ಸ್ವಾಗತಿಸಿದರು. ಶಂಕರ ಶಿಳ್ಳಿನ ಹಾಗೂ ಎನ್.ಪಿ. ಪ್ಯಾಟಿಗೌಡ್ರ ಕಾರ್ಯಕ್ರಮ ನಿರ್ವಹಿಸಿದರು. ಸಂಘಟನಾ ಕಾರ್ಯದರ್ಶಿ ನಾಗರಾಜ ಮಜ್ಜಿಗುಡ್ಡ ನಿರೂಪಿಸಿದರು. ಶಿಕ್ಷಕ ರಾಜಣ್ಣ ಮುಳ್ಳಳ್ಳಿ ವಂದಿಸಿದರು. ವಿ.ಎಂ. ಹೂಗಾರ ಗುರುವಂದನಾ ಗೀತೆ ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಗಣ್ಯ ವ್ಯಾಪಾರಸ್ಥ ಶಿವು ವಡಕಣ್ಣವರ, ಈರಣ್ಣ ಬೆಳವಗಿ, ಪ್ರಿಯಾಂಕ ಮುಳ್ಳಳ್ಳಿ, ಶಿಕ್ಷಕಿ ವೀಣಾ ಜಾಧವ, ಪ್ರವೀಣಕುಮಾರ ಮುಳ್ಳಳ್ಳಿ, ದೇವೇಂದ್ರಗೌಡ ಪಾಟೀಲ, ನಾಗನಗೌಡ ಪಾಟೀಲ, ರವಿ ತಂತ್ರಿ ಸೇರಿದಂತೆ ಗಣ್ಯರು ಹಾಗೂ ಶಿಷ್ಯ ಬಳಗದವರು ಉಪಸ್ಥಿತರಿದ್ದರು.

ವಿಬಿಜಿ-ರಾಮ್-ಜಿ ಯೋಜನೆಯಡಿ ವರ್ಷಕ್ಕೆ 125 ದಿನ ಉದ್ಯೋಗ : ಇಒ ಶ್ರೀಧರ್ ಚಿನಗುಂಡಿ

0

ವಿಜಯಸಾಕ್ಷಿ ಸುದ್ದಿ, ನರಗುಂದ: ತಾಲೂಕಿನ ಬೆನಕನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಕದಾಳ ಗ್ರಾಮದಲ್ಲಿ ವಿಬಿಜಿ-ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಕಾಮಗಾರಿ ಸ್ಥಳದಲ್ಲಿದ್ದ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು, ಯೋಜನೆಯಡಿ ದೊರೆಯುವ ಸೌಲಭ್ಯಗಳು, ಕೂಲಿ ಪಾವತಿ ಹಾಗೂ ಹಾಜರಾತಿ ನಿಯಮಗಳ ಕುರಿತು ಮಾಹಿತಿ ನೀಡಿದರು. ಯೋಜನೆಯಡಿ ದಿನಕ್ಕೆ ₹382 ಕೂಲಿ ನಿಗದಿಯಾಗಿದ್ದು, ನಿಗದಿತ ಅಳತೆಗೆ ಅನುಗುಣವಾಗಿ ಕೆಲಸ ಮಾಡಿದರೆ ಪೂರ್ಣ ಕೂಲಿ ದೊರೆಯಲಿದೆ. ಕೆಲಸದ ಅಳತೆಯಲ್ಲಿ ವ್ಯತ್ಯಾಸವಾದರೆ ಅದಕ್ಕೆ ಅನುಗುಣವಾಗಿ ಕೂಲಿ ಮೊತ್ತದಲ್ಲೂ ವ್ಯತ್ಯಾಸವಾಗಲಿದೆ ಎಂದು ಸ್ಪಷ್ಟಪಡಿಸಿದರು.

ನಿರಂತರವಾಗಿ ಕೆಲಸ ಒದಗಿಸುವಂತೆ ಕಾರ್ಮಿಕರು ಮನವಿ ಮಾಡಿದರು. ಈ ವೇಳೆ ವೈಯಕ್ತಿಕವಾಗಿ ಇಒ ಅವರನ್ನು ಭೇಟಿಯಾದ ಕಾರ್ಮಿಕರು ನಮೂನೆ-6 ಸಲ್ಲಿಸಿದ ಬಳಿಕ 15 ದಿನಗಳಲ್ಲಿ ಕೆಲಸ ದೊರೆಯದಿದ್ದರೆ ಏನು ಮಾಡಬೇಕು ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಇಒ, ಮೊದಲು ನಮೂನೆ-6 ಸಲ್ಲಿಸುವಂತೆ ಸೂಚಿಸಿ, 15 ದಿನಗಳೊಳಗೆ ಕೆಲಸ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಸಿಬ್ಬಂದಿಯಿಂದ ಕೆಲಸ ನೀಡಲು ಸಾಧ್ಯವಾಗದಿದ್ದರೆ ಯೋಜನೆಯ ನಿಯಮದಂತೆ ನಿರುದ್ಯೋಗ ಭತ್ಯೆ ನೀಡುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.

ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಯೋಜನೆಯಡಿ ನಿರಂತರವಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದ್ದು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾಮಗಾರಿ ಸ್ಥಳದಲ್ಲಿ ದಿನದ ಎರಡೂ ಹಾಜರಾತಿಗಳಿಗೆ ಕಾರ್ಮಿಕರು ಕಡ್ಡಾಯವಾಗಿ ಹಾಜರಾಗಬೇಕು. ಒಂದು ಹಾಜರಾತಿಗೆ ಮಾತ್ರ ಹಾಜರಾಗಿ ಮತ್ತೊಂದಕ್ಕೆ ಗೈರಾದರೆ ಕೂಲಿ ಪಾವತಿಯಲ್ಲಿ ತೊಂದರೆಯಾಗಲಿದೆ. ಆದ್ದರಿಂದ ಎರಡೂ ಹಾಜರಾತಿಗಳನ್ನು ಕಡ್ಡಾಯವಾಗಿ ನೀಡುವಂತೆ ಸೂಚಿಸಿದರು.

ವಿಬಿಜಿ-ರಾಮ್-ಜಿ ಯೋಜನೆಯಡಿ ವರ್ಷಕ್ಕೆ 125 ದಿನಗಳವರೆಗೆ ಉದ್ಯೋಗ ಒದಗಿಸುವ ಅವಕಾಶವಿದ್ದು, ಅರ್ಹ ಕೂಲಿಕಾರ್ಮಿಕರಿಗೆ ವರ್ಷದಲ್ಲಿ 125 ದಿನಗಳವರೆಗೆ ಕೆಲಸ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀಧರ್ ಚಿನಗುಂಡಿ ತಿಳಿಸಿದರು.

ಈ ಸಂದರ್ಭದಲ್ಲಿ ಬೆನಕನಕೊಪ್ಪ ಗ್ರಾಪಂ ಪಿಡಿಒ ವಿ.ಆರ್. ರಾಯನಗೌಡರ, ವಿಬಿಜಿ-ರಾಮ್-ಜಿ ಸಿಬ್ಬಂದಿ ಹನುಮಂತ ಡಂಬಳ, ಲಿಂಗರಾಜ ಮುದಿಗೌಡರ ಹಾಗೂ ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

ಅಳತೆಗೆ ಅನುಗುಣವಾಗಿ ನಿಗದಿತ ಪ್ರಮಾಣದ ಕೆಲಸ ಮಾಡಿದರೆ ಕಾರ್ಮಿಕರಿಗೆ ಪೂರ್ಣ ಕೂಲಿ ದೊರೆಯಲಿದೆ. ನಮೂನೆ-6 ಸಲ್ಲಿಸಿದ 15 ದಿನಗಳೊಳಗೆ ಕೆಲಸ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಸಾಧ್ಯವಾಗದಿದ್ದರೆ ನಿಯಮಾನುಸಾರ ನಿರುದ್ಯೋಗ ಭತ್ಯೆ ನೀಡುವ ಕುರಿತು ಕ್ರಮ ಕೈಗೊಳ್ಳುತ್ತೇವೆ.

— ಶ್ರೀಧರ್ ಚಿನಗುಂಡಿ, ತಾಲೂಕು ಪಂಚಾಯಿತಿ ಇಒ

SIR ಪ್ರಕ್ರಿಯೆ ಬಳಿಕವೂ ವೋಟರ್ ಐಡಿ ಕ್ಯಾನ್ಸಲ್ ನೋಟಿಸ್; ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ!

0

ಬೆಂಗಳೂರು: ಬೆಂಗಳೂರು ಹೊರವಲಯದ ಜಿಗಣಿ ಸಮೀಪದ ಕಲ್ಲುಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆ ಗೊಂದಲಕ್ಕೆ ಕಾರಣವಾಗಿದ್ದು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ SIR ಪ್ರಕ್ರಿಯೆ ಪೂರ್ಣಗೊಳಿಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದರೂ, ಕೆಲವರಿಗೆ ‘ನಿಮ್ಮ ವೋಟರ್ ಐಡಿ ಕ್ಯಾನ್ಸಲ್ ಆಗಿದೆ’ ಎಂದು ನೋಟಿಸ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆಧಾರ್ ಕಾರ್ಡ್, ವೋಟರ್ ಐಡಿ ಸೇರಿದಂತೆ ಹಲವು ಅಧಿಕೃತ ದಾಖಲೆಗಳನ್ನು ತೋರಿಸಿದರೂ ಅಧಿಕಾರಿಗಳು ಪರಿಗಣಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಇನ್ನು 71 ವರ್ಷದ ಹಿರಿಯ ನಾಗರಿಕರಿಗೂ ಮಾರ್ಕ್ಸ್ ಕಾರ್ಡ್ ಹಾಗೂ ಜನ್ಮ ಪ್ರಮಾಣಪತ್ರ ತರುವಂತೆ ಅಧಿಕಾರಿಗಳು ಸೂಚಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಈ ವಯಸ್ಸಿನಲ್ಲಿ ಇಂತಹ ದಾಖಲೆಗಳನ್ನು ಎಲ್ಲಿಂದ ತರಬೇಕು ಎಂದು ಹಿರಿಯ ನಾಗರಿಕರು ಪ್ರಶ್ನಿಸಿದ್ದಾರೆ.

ಮತ್ತೊಂದೆಡೆ, ಕರ್ನಾಟಕದಲ್ಲೇ ಹುಟ್ಟಿ ಬೆಳೆದಿದ್ದರೂ ತಮ್ಮ ವಿಳಾಸ ತಮಿಳುನಾಡಿಗೆ ಬದಲಾಗಿದೆ ಎಂದು ಬಿಎಲ್‌ಒ ಹಾಗೂ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಮತ್ತೊಬ್ಬ ನಿವಾಸಿ ಆರೋಪಿಸಿದ್ದಾರೆ. ಅಧಿಕಾರಿಗಳ ತಪ್ಪಿನಿಂದ ಈ ಸಮಸ್ಯೆ ಉಂಟಾಗಿದ್ದು, ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ವಿದೇಶದಲ್ಲಿರುವವರಿಗೆ ಸಹ ಸೂಕ್ತ ಕಾಲಾವಕಾಶ ನೀಡದೆ ನಿಗದಿತ ಸಮಯದಲ್ಲೇ SIR ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಧಿಕಾರಿಗಳು ಹಾಗೂ ಬಿಎಲ್‌ಒಗಳ ತಪ್ಪಿಗೆ ಸಾರ್ವಜನಿಕರು ಏಕೆ ತೊಂದರೆ ಅನುಭವಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಅಡಿಷನಲ್ ಎಇಆರ್‌ಒ ನಾರಾಯಣಪ್ಪ ಹಾಗೂ ಸ್ಥಳೀಯ ಅಧಿಕಾರಿಗಳನ್ನು ಗ್ರಾಮಸ್ಥರು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು. ಸರ್ಕಾರ ನೀಡಿರುವ ಅಧಿಕೃತ ದಾಖಲೆಗಳನ್ನು ಪರಿಗಣಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಮತದಾನದ ಹಕ್ಕೇ ಬೇಡ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

20 ವರ್ಷಗಳಿಂದ ದುಡಿದ ಪೌರಕಾರ್ಮಿಕರಿಗೆ ಕನಿಷ್ಠ ವೇತನ ನೀಡಿ: ನಗರಸಭೆ ಮುಂದೆ ಅನಿರ್ದಿಷ್ಟಾವಧಿ ಧರಣಿ

0

ವಿಜಯಸಾಕ್ಷಿ ಸುದ್ದಿ, ಗದಗ: ಎರಡು ದಶಕಗಳಿಂದ ಮನೆ-ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸುವ ಮೂಲಕ ಗದಗ-ಬೆಟಗೇರಿ ಅವಳಿ ನಗರದ ಸ್ವಚ್ಛತೆ ಕಾಪಾಡುತ್ತಿರುವ 133 ದಲಿತ ಮಹಿಳಾ ಪೌರಕಾರ್ಮಿಕರು, ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಅಥವಾ ನೇರ ನೇಮಕಾತಿ ನೀಡುವಂತೆ ಆಗ್ರಹಿಸಿ ನಗರಸಭೆ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ನಗರಸಭೆ ಸದಸ್ಯ ಕೃಷ್ಣಾ ಪರಾಪೂರ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ, ಬೇಡಿಕೆ ಈಡೇರುವವರೆಗೆ ಮನೆ-ಮನೆ ಕಸ ಸಂಗ್ರಹ ಹಾಗೂ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸುವುದಾಗಿ ಕಾರ್ಮಿಕರು ಎಚ್ಚರಿಸಿದ್ದಾರೆ. ಇದರಿಂದ ಅವಳಿ ನಗರದಲ್ಲಿ ಕಸದ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ಎದುರಾಗಿದೆ.

2005-06ರಿಂದ ನಗರಸಭೆ ವ್ಯಾಪ್ತಿಯ ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳಿಂದ ತ್ಯಾಜ್ಯ ಸಂಗ್ರಹಿಸುವ ಕೆಲಸ ಮಾಡುತ್ತಿರುವ ಈ ಮಹಿಳಾ ಕಾರ್ಮಿಕರಿಗೆ ಆರಂಭದಲ್ಲಿ ಮನೆಗಳಿಂದ ಸಂಗ್ರಹಿಸುವ ವಂತಿಕೆಯ ಆಧಾರದಲ್ಲಿ ಪಾವತಿ ಮಾಡಲಾಗುತ್ತಿತ್ತು. ವಂತಿಕೆ ಸಂಗ್ರಹದಲ್ಲಿ ಎದುರಾದ ಸಮಸ್ಯೆಗಳ ಹಿನ್ನೆಲೆಯಲ್ಲಿ 2014ರಲ್ಲಿ ನಗರಸಭೆ ಟೆಂಡರ್ ಮೂಲಕ 133 ಕಾರ್ಮಿಕರನ್ನು ನೇಮಿಸಿಕೊಂಡು ತಿಂಗಳಿಗೆ ₹3 ಸಾವಿರ ಗೌರವಧನ ನಿಗದಿಪಡಿಸಿತ್ತು. 2017ರಲ್ಲಿ ಅದು ₹5 ಸಾವಿರಕ್ಕೆ ಏರಿಕೆಯಾಗಿದ್ದು, 2022ರಿಂದ ₹6,500 ನೀಡಲಾಗುತ್ತಿದೆ ಎಂದು ಕಾರ್ಮಿಕರು ತಿಳಿಸಿದ್ದಾರೆ.

ನಗರಸಭೆಯಲ್ಲಿ ಇತ್ತೀಚೆಗೆ ನೇಮಕಗೊಂಡ ಲೋಡರ್‌ಗಳು, ಚಾಲಕರು ಹಾಗೂ ಮೊಬಿಲೈಸರ್‌ಗಳಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತಿದೆ. ಆದರೆ 20 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ತಮ್ಮನ್ನು ಮಾತ್ರ ಕನಿಷ್ಠ ವೇತನದಿಂದ ವಂಚಿಸಲಾಗುತ್ತಿದೆ ಎಂದು ಮಹಿಳಾ ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಂಕಷ್ಟದ ಸಂದರ್ಭದಲ್ಲೂ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದೇವೆ. ಬೆಲೆ ಏರಿಕೆಯ ನಡುವೆ ₹6,500 ಗೌರವಧನದಲ್ಲಿ ಕುಟುಂಬ ನಿರ್ವಹಿಸುವುದು ಕಷ್ಟವಾಗಿದೆ. ನಮ್ಮ ಸೇವೆಯನ್ನು ಪರಿಗಣಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು; ಸಾಧ್ಯವಾಗದಿದ್ದರೆ ನಗರಸಭೆಯಿಂದ ನೇರವಾಗಿ ವೇತನ ಪಾವತಿಸುವ ವ್ಯವಸ್ಥೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ಪೌರಕಾರ್ಮಿಕರ ನೇರ ನೇಮಕಾತಿ ವಿಚಾರದಲ್ಲಿಯೂ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ. ಬೇಡಿಕೆಗಳ ಕುರಿತು ಸ್ಪಷ್ಟ ಭರವಸೆ ದೊರೆಯದಿದ್ದರೆ ಹೋರಾಟ ತೀವ್ರಗೊಳಿಸಿ ಕುಟುಂಬ ಸಮೇತ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ. ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಶಾಸಕ ಡಾ. ಹೆಚ್.ಕೆ. ಪಾಟೀಲ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಗರದ ಸ್ವಚ್ಛತೆ ಕಾಪಾಡುವಲ್ಲಿ ಮಹಿಳಾ ಪೌರಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. 20 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಅವರಿಗೆ ಕನಿಷ್ಠ ವೇತನ ನೀಡದೆ ಕಡಿಮೆ ಗೌರವಧನದಲ್ಲಿ ದುಡಿಸಿಕೊಳ್ಳುವುದು ನ್ಯಾಯಸಮ್ಮತವಲ್ಲ. ಕೊರೋನಾ ಸಂದರ್ಭದಲ್ಲೂ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ ಈ ಕಾರ್ಮಿಕರಿಗೆ ಸರ್ಕಾರದ ನಿಯಮದಂತೆ ವೇತನ ಅಥವಾ ನೇರ ನೇಮಕಾತಿ ಕಲ್ಪಿಸಬೇಕು. ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು.

— ಕೃಷ್ಣಾ ಪರಾಪೂರ, ನಗರಸಭೆ ಸದಸ್ಯ

ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ನಿರ್ವಹಣಾ ಕಾಮಗಾರಿ: ಹಲವು ಪ್ರದೇಶಗಳಲ್ಲಿ ಸೆ.9ರಂದು ವಿದ್ಯುತ್ ಸ್ಥಗಿತ

0

ವಿಜಯಸಾಕ್ಷಿ ಸುದ್ದಿ, ಗದಗ: 110 ಕೆವ್ಹಿ ಮುಂಡರಗಿ, ಡಂಬಳ ಹಾಗೂ ಶಿಂಗಟಾಲೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆ.9ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂನ ಕಾರ್ಯ ಮತ್ತು ಪಾಲನೆ ವಿಭಾಗ, ಗದಗ ಪ್ರಕಟಣೆಯಲ್ಲಿ ತಿಳಿಸಿದೆ.

ಡಂಬಳ ವಿದ್ಯುತ್ ಉಪಕೇಂದ್ರದಿಂದ ಹೊರಹೋಗುವ ಎಲ್ಲ 11 ಕೆವ್ಹಿ ಮಾರ್ಗಗಳು, 33 ಕೆವ್ಹಿ ವಾಟರ್‌ ಸಪ್ಲೈ ಮಾರ್ಗ ಹಾಗೂ 33 ಕೆವ್ಹಿ ಲಕ್ಕುಂಡಿ ವಿದ್ಯುತ್ ಉಪಕೇಂದ್ರದಿಂದ ಹೊರಹೋಗುವ ಎಲ್ಲ 11 ಕೆವ್ಹಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಅಲ್ಲದೆ 110 ಕೆವ್ಹಿ ಐಪಿಪಿ ಮೆ. ಸುಜಲಾನ್ ಲಿ., ಹಾರೋಗೇರಿ, ಮೆ. ಎನರ್‌ಕಾನ್ ಲಿ., ಮೆ. ಅಕಿಲಾಗ್ಯಾ ಸೋಲಾರ್ ಹಾಗೂ ಮೆ. ಚುರ್ಚಿಹಾಳ ನೀರಾವರಿ ಮಾರ್ಗಗಳಿಗೂ ವ್ಯತ್ಯಯ ಉಂಟಾಗಲಿದೆ.

ಮುಂಡರಗಿ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ 110 ಕೆವ್ಹಿ ಐಪಿಪಿ ಮೆ. ವಿಜಯನಗರ ಶುಗರ್ಸ್ ಲಿ., ಮೆ. ಬೀಡನಾಳ, ನೀರಾವರಿ, ಶಿಂಗಟಾಲೂರು ಹಾಗೂ ಉಪ್ಪಿನ ಬೇಟಗೇರಿ ಮಾರ್ಗಗಳು ಸೇರಿದಂತೆ ಉಪಕೇಂದ್ರದಿಂದ ಹೊರಹೋಗುವ ಎಲ್ಲ 11 ಕೆವ್ಹಿ ಮತ್ತು 33 ಕೆವ್ಹಿ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಶಿಂಗಟಾಲೂರು ವಿದ್ಯುತ್ ಉಪಕೇಂದ್ರದಿಂದ ಹೊರಹೋಗುವ ಎಲ್ಲ 11 ಕೆವ್ಹಿ ಮಾರ್ಗಗಳಲ್ಲಿಯೂ ಇದೇ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮುಂಡರಗಿ, ಡಂಬಳ ಹಾಗೂ ಶಿಂಗಟಾಲೂರು ವಿದ್ಯುತ್ ವಿತರಣಾ ಕೇಂದ್ರಗಳಿಂದ ಪೂರೈಕೆಯಾಗುವ ನಗರ ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲ 11 ಕೆವ್ಹಿ ವಿತರಣಾ ಮಾರ್ಗಗಳಿಗೂ ವಿದ್ಯುತ್ ವ್ಯತ್ಯಯದ ಪರಿಣಾಮ ಇರಲಿದೆ. ಸಾರ್ವಜನಿಕರು ಈ ಪ್ರಕಟಣೆಯನ್ನು ಗಮನಿಸಿ ಹೆಸ್ಕಾಂನೊಂದಿಗೆ ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಕಾರ್ಯ ಮತ್ತು ಪಾಲನೆ ವಿಭಾಗ, ಹುವಿಸಕಂನಿ., ಗದಗ ಅವರು ಮನವಿ ಮಾಡಿದ್ದಾರೆ.

ರಂಜಿತಾ ಸಾವಿನ ಸಮಗ್ರ ತನಿಖೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

0

ವಿಜಯಸಾಕ್ಷಿ ಸುದ್ದಿ, ವಿಜಯನಗರ: ದಾವಣಗೆರೆಯ ಟೀಮ್ ಅಕಾಡೆಮಿ ಹಾಸ್ಟೆಲ್‌ನಲ್ಲಿ ಮೃತಪಟ್ಟಿರುವ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ 17 ವರ್ಷದ ವಿದ್ಯಾರ್ಥಿನಿ ಬಿ. ರಂಜಿತಾ ಅವರ ಸಂಶಯಾಸ್ಪದ ಸಾವಿನ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿ ಗಂಗಾಮತ ಬೆಸ್ತ ಸಮಾಜದ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಂಜಿತಾ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ದಾವಣಗೆರೆಯ ಟೀಮ್ ಅಕಾಡೆಮಿಗೆ ಸೇರಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಸೆ.2ರಂದು ಸಂಜೆ ಸ್ನೇಹಿತೆಯೊಂದಿಗೆ ಹಾಸ್ಟೆಲ್‌ಗೆ ಆಗಮಿಸಿದ ಕೆಲವೇ ಸಮಯದ ಬಳಿಕ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ರಾತ್ರಿ ವಾರ್ಡನ್ ಕುಟುಂಬದವರಿಗೆ ಮಾಹಿತಿ ನೀಡಿದ್ದರು. ಘಟನೆಯ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದು, ಸೆ.3ರಂದು ಮೃತಳ ತಂದೆ ಭೋವಿ ನಿಂಗಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 201/2026, ಬಿಎನ್‌ಎಸ್ ಕಲಂ 103(1) ಅಡಿ ದಾಖಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಹಾಸ್ಟೆಲ್ ವಾರ್ಡನ್, ಪ್ರಾಂಶುಪಾಲರು, ಅಧ್ಯಕ್ಷರು ಸೇರಿದಂತೆ ಸಂಬಂಧಪಟ್ಟವರ ಪಾತ್ರವನ್ನು ತನಿಖೆಗೆ ಒಳಪಡಿಸಬೇಕು. ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ಕರೆ ವಿವರ, ಸಂದೇಶಗಳು, ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಗಳನ್ನು ಪರಿಶೀಲಿಸಿ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಿ ಸತ್ಯಾಂಶ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಗಂಗಾಮತ ಬೆಸ್ತ ಸಮಾಜದ ಅಧ್ಯಕ್ಷ ವೈ. ಯಮುನೇಶ್, ಮುಖಂಡರಾದ ಸರ್ದಾರ್ ಯಮನೂರಪ್ಪ, ನಿವೃತ್ತ ಪಿಎಸ್ಐ ಕಬ್ಬೇರ್ ರಾಮಪ್ಪ, ಮಡ್ಡಿ ವೆಂಕಪ್ಪ, ಶ್ರೀಧರ್, ಗಣೇಶ್ ಚಿಕ್ಕಕುರುವತ್ತಿ, ನಿಂಗರಾಜು ಬೆಂಡಿಗೇರಿ, ನಿಂಗಪ್ಪ ಕರಿಯಮ್ಮನವರ, ತಿರುಕಪ್ಪ ಸಿಗ್ಲಿ, ಶಿವು ಕಣಿವಿ, ಹಾಲೇಶ್ ಬೋವಿ, ನಾಗಪ್ಪ ಕಲ್ಲಮ್ಮನವರ, ರಾಜೇಶ್, ವೀರೇಶ್, ಸುರೇಶ್, ಶಶಿ, ಶಿವಕುಮಾರ್, ವೈ. ಜಂಬಯ್ಯ, ಆರ್. ಜಂಬಯ್ಯ, ಎನ್. ಅನಿಲ್, ಎಂ. ರಾಘವೇಂದ್ರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಸಮಾಜದ ಮುಖಂಡರು ಉಪಸ್ಥಿತರಿದ್ದರು.

ರಂಜಿತಾ ಅವರ ಸಾವಿನ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಕುಟುಂಬದ ಅನುಮಾನಗಳಿಗೆ ಉತ್ತರ ದೊರೆಯುವಂತೆ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು.

— ಅಂಬಾಡಿ ನಾಗರಾಜ್, ಮಾಜಿ ಜಿಲ್ಲಾ ಅಧ್ಯಕ್ಷರು, ಗಂಗಾಮತ ಬೆಸ್ತ ಸಮಾಜ