Home Blog

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಹಣ ನೀಡಿ ಪಡೆದ ಬಸ್ ಪಾಸ್ ಮೊತ್ತ ಮರುಪಾವತಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ನಾಲ್ಕು ರಸ್ತೆ ಸಾರಿಗೆ ನಿಗಮಗಳು ಮತ್ತೊಂದು ಸಿಹಿಸುದ್ದಿ ನೀಡಿವೆ.

ಉಚಿತ ಬಸ್ ಪಾಸ್ ಯೋಜನೆ ಜಾರಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ಮರುಪಾವತಿಸಲು ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಪಾವತಿಸಿದ ಬಸ್ ಪಾಸ್ ಶುಲ್ಕವನ್ನು ಹಿಂದಿರುಗಿಸಲು ಕ್ರಮ ಕೈಗೊಂಡಿವೆ.

ಉಚಿತ ಬಸ್ ಪಾಸ್ ಯೋಜನೆಯ ಪ್ರಯೋಜನ ರಾಜ್ಯದ ಗಡಿಭಾಗಗಳಲ್ಲಿ ವಾಸವಿದ್ದು ನೆರೆಯ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ, ನೆರೆಯ ರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ.

ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಮರುಪಾವತಿ ಪಡೆಯಬಹುದು. ಅರ್ಜಿ ಸಲ್ಲಿಸಲು ಒಟಿಪಿ ಆಧಾರಿತ ನೋಂದಣಿ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸಬೇಕು. ಅರ್ಜಿ ಪರಿಶೀಲನೆಯಾದ ಬಳಿಕ ಎನ್‌ಇಎಫ್‌ಟಿ ಅಥವಾ ಆರ್‌ಟಿಜಿಎಸ್ ಮೂಲಕ ಏಳು ದಿನಗಳೊಳಗೆ ಹಣವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿದ್ದರು. ಅದರಂತೆ ಯೋಜನೆ ಜಾರಿಯಾಗಿದ್ದು, ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ಮುಂದಾಗಿದೆ.

ಸರ್ಕಾರದ ಅಂದಾಜಿನ ಪ್ರಕಾರ, ರಾಜ್ಯದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸುಮಾರು 286.08 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇದರ ಜೊತೆಗೆ ಬಸ್ ಪಾಸ್ ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿ ಸೇರಿದಂತೆ ಸುಮಾರು 15 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

2026-27ನೇ ಶೈಕ್ಷಣಿಕ ವರ್ಷದಲ್ಲಿ ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವ ಮೊದಲು ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದಿದ್ದ 19,792 ವಿದ್ಯಾರ್ಥಿಗಳಿಗೆ ಪಾವತಿಸಿದ ಮೊತ್ತವನ್ನು ಮರುಪಾವತಿಸಲು ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ.

ಗುರುಕುಲ ಮಕ್ಕಳ ದಾಸೋಹಕ್ಕೆ ದಾನಿಯ ಮಹಾದಾಸೋಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಠ-ಮಾನ್ಯಗಳು ಹಾಗೂ ಗುರುಕುಲಗಳು ನಡೆಸುವ ಅನ್ನ, ಅಕ್ಷರ ಮತ್ತು ಆಶ್ರಯದ ತ್ರಿವಿಧ ದಾಸೋಹ ಸೇವೆ ನಿರಂತರವಾಗಿ ಸಾಗಲು ದಾನಿಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಹೂವಿನಶಿಗ್ಲಿ ವಿರಕ್ತಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳು ಹೇಳಿದರು.

ಸಮೀಪದ ಹೂವಿನಶಿಗ್ಲಿ ಮಠದ ಗುರುಕುಲದ ಮಕ್ಕಳ ನಿತ್ಯದ ದಾಸೋಹಕ್ಕಾಗಿ ಪ್ರತಿ ಆರು ತಿಂಗಳಿಗೊಮ್ಮೆ ದಿನಸಿ ಪದಾರ್ಥಗಳನ್ನು ಪೂರೈಸುತ್ತಿರುವ ಕಲಬುರಗಿ ಜಿಲ್ಲೆಯ ಸೋನಾಳ ಗ್ರಾಮದ ಉದ್ಯಮಿ ವಿಜಯಕುಮಾರ ಸೂರ್ಯಕಾಂತ ಬಿರಾದಾರ ಅವರಿಗೆ ಗುರುಕುಲ ಹಾಗೂ ಗ್ರಾಮಸ್ಥರ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಸರ್ಕಾರದ ಯಾವುದೇ ಅನುದಾನವಿಲ್ಲದೆ ಗುರುಕುಲದ ನೂರಾರು ಮಕ್ಕಳಿಗೆ ತ್ರಿವಿಧ ದಾಸೋಹ ಸೇವೆ ನೀಡುವುದು ಸವಾಲಿನ ಕೆಲಸವಾಗಿದೆ. ಇಂತಹ ಸಂದರ್ಭದಲ್ಲಿ ವಿಜಯಕುಮಾರ ಬಿರಾದಾರ ಅವರಂತಹ ದಾನಿಗಳ ಸಹಕಾರದಿಂದಲೇ ಸೇವಾ ಪರಂಪರೆ ನಿರಂತರವಾಗಿ ಸಾಗುತ್ತಿದೆ ಎಂದು ಹೇಳಿದರು.

ಸಮಾಜದಲ್ಲಿ ದಾನಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಹಲವು ವರ್ಷಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳನ್ನು ದೇಣಿಗೆಯಾಗಿ ನೀಡುತ್ತಿರುವ ವಿಜಯಕುಮಾರ ಬಿರಾದಾರ ಅವರ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಭಗವಂತ ಅವರಿಗೆ ಇನ್ನಷ್ಟು ಶಕ್ತಿ, ಸಂಪತ್ತು ಮತ್ತು ಸೇವಾ ಮನೋಭಾವವನ್ನು ಕರುಣಿಸಲಿ ಎಂದು ಹಾರೈಸಿದರು.

ತಹಸೀಲ್ದಾರ್ ರವಿ ಕೊರಕನವರ ಮಾತನಾಡಿ, ಗುರುಕುಲ ಶಿಕ್ಷಣ ಪದ್ಧತಿ ಮರೆಯಾಗುತ್ತಿರುವ ಕಾಲಘಟ್ಟದಲ್ಲಿ ಹೂವಿನಶಿಗ್ಲಿ ಮಠವು ಅನಾಥ ಹಾಗೂ ಬಡ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ನೀಡುವ ಮಹತ್ವದ ಕಾರ್ಯ ಮಾಡುತ್ತಿದೆ. ಈ ಸೇವೆಗೆ ವಿಜಯಕುಮಾರ ಬಿರಾದಾರ ಅವರು ಹಲವು ವರ್ಷಗಳಿಂದ ಬೆನ್ನೆಲುಬಾಗಿ ನಿಂತಿರುವುದು ಶ್ಲಾಘನೀಯ ಎಂದರು.

ಗುರುಕುಲದ ಆಡಳಿತಾಧಿಕಾರಿ ಆರ್.ಜಿ. ಚಿಕ್ಕಮಠ ಮಾತನಾಡಿ, ಭಕ್ತರು ಹಾಗೂ ದಾನಿಗಳ ಸಹಕಾರದಿಂದಲೇ ಮಠದಲ್ಲಿ ಅನಾಥ ಮತ್ತು ಬಡ ಮಕ್ಕಳ ಸೇವೆ ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಜಯಕುಮಾರ ಎಸ್. ಬಿರಾದಾರ, ಮಕ್ಕಳ ಸೇವೆಯೇ ದೇವರ ಸೇವೆ ಎಂಬ ನಂಬಿಕೆಯಿಂದ ಈ ಕಾರ್ಯದಲ್ಲಿ ತೊಡಗಿದ್ದೇನೆ. ಗುರುಕುಲದ ಸೇವೆಯಲ್ಲಿ ಭಾಗಿಯಾಗಿರುವುದು ಆತ್ಮಸಂತೃಪ್ತಿ ತಂದಿದ್ದು, ಮುಂದೆಯೂ ಈ ಸೇವೆ ಮುಂದುವರಿಯಲಿ ಎಂಬುದು ನನ್ನ ಆಶಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಭಾಷ್ ಮಜ್ಜಗಿ, ರಾಜು ಚಂದರವಾಡ, ಧನರಾಜ ರಾಜಮನೆ, ಎಸ್.ಎಸ್. ಮೈನಾಲೆ, ಬಿ.ಬಿ. ಹೆಡೆ, ಮಹಾದೇವ ಬಿರಾದಾರ, ಮನೋಜ ಹಿರೇಮಠ, ಆಕಾಶ ಹೊನ್ನಿ, ಆರ್.ಬಿ. ಬನ್ನೂರ, ಚಂದ್ರಕಾಂತ ಘಾಟಗೆ, ಶೈಲಾ ಆದಿ, ಜಯಶ್ರೀ ಮೆಳ್ಳಿಗೇರಿ, ಯೋಗೇಂದ್ರ ಜಂಬಗಿ, ಗುರುಕುಲದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಆರ್.ವಿ. ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

“ದಾನಿಗಳ ಸಹಕಾರದಿಂದಲೇ ಗುರುಕುಲಗಳ ತ್ರಿವಿಧ ದಾಸೋಹ ಸೇವೆ ನಿರಂತರವಾಗಿ ಸಾಗುತ್ತಿದೆ.”

— ಶ್ರೀ ಚನ್ನವೀರ ಮಹಾಸ್ವಾಮಿಗಳು, ಹೂವಿನಶಿಗ್ಲಿ ವಿರಕ್ತಮಠ

ಶ್ರದ್ಧಾ-ಭಕ್ತಿಯಿಂದ ಗಂಗಾಮಾತಾ ಜಯಂತಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಗಂಗಾಮತ ಸಮಾಜ ಬಾಂಧವರಿಂದ ಬುಧವಾರ ಗಂಗಾಮಾತಾ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

ಬೆಳಿಗ್ಗೆ ಪುರಸಭೆ ಸಮೀಪದ ಸುಣಗಾರ ಓಣಿಯ ಗಂಗಾದೇವಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಬಳಿಕ ಗಂಗಾದೇವಿ ಭಾವಚಿತ್ರದ ಮೆರವಣಿಗೆಯು ಪೂರ್ಣಕುಂಭ ಹಾಗೂ ವಾದ್ಯಗಳ ಸಮೇತ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಭ್ರಮದಿಂದ ಸಾಗಿತು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಭರಮಣ್ಣ ಕಟ್ಟಿಮನಿ ಮಾತನಾಡಿ, ಭಗೀರಥನ ತಪಸ್ಸಿಗೆ ಮೆಚ್ಚಿ ಭೂಲೋಕಕ್ಕೆ ಅವತರಿಸಿದ ಗಂಗಾಮಾತೆ ಸಕಲ ಜೀವಜಗತ್ತಿನ ಆಶ್ರಯದಾತೆಯಾಗಿದ್ದು, ಜೀವಕೋಟಿಗಳಿಗೆ ಉಸಿರಾಗಿರುವ ಪವಿತ್ರ ದಿನವನ್ನು ಗಂಗಾಮಾತಾ ಜಯಂತಿಯಾಗಿ ಆಚರಿಸಲಾಗುತ್ತದೆ ಎಂದರು.

ಗಂಗಾಮಾತೆ ಜೀವಕೋಟಿಗಳಿಗೆ ಮೂಲಸೆಲೆ, ನೆಲೆ ಹಾಗೂ ಆಧಾರವಾಗಿರುವುದರಿಂದ ಪ್ರತಿಯೊಬ್ಬರೂ ಆಕೆಯನ್ನು ನಿತ್ಯ ಸ್ಮರಿಸಿ ಪೂಜಿಸಬೇಕು. ಗಂಗಾಮತ ಸಮಾಜದ ಬಾಂಧವರು ತಮ್ಮ ಸಾಂಪ್ರದಾಯಿಕ ಕಾಯಕದ ಜೊತೆಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲೂ ಮುನ್ನಡೆಯಬೇಕು. ಮಕ್ಕಳಿಗೆ ಸಂಸ್ಕಾರಯುತ ಹಾಗೂ ಉನ್ನತ ಶಿಕ್ಷಣ ಕಲ್ಪಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಕರೆ ನೀಡಿದರು.

ಮೆರವಣಿಗೆಯಲ್ಲಿ ಸಮಾಜದ ಮುಖಂಡರಾದ ಮಹದೇವಪ್ಪ ಕಟ್ಟಿಮನಿ, ಸೋಮಪ್ಪ ಸುಣಗಾರ, ಹೊನ್ನಪ್ಪ ಸುಣಗಾರ, ಸೋಮಪ್ಪ ತಂಡಿಗೇರ, ರವಿ ಸುಣಗಾರ, ಹೊಳಲಪ್ಪ ಕಟ್ಟಿಮನಿ, ಮಾಲತೇಶ ತಂಡಿಗೇರ, ಆಕಾಶ ಸವದತ್ತಿ, ರಾಜು ಸುಣಗಾರ, ಹನುಮಂತಪ್ಪ ಸುಣಗಾರ, ಕಿರಣ ಕಟ್ಟಿಮನಿ ಸೇರಿದಂತೆ ಸಮಾಜದ ಬಾಂಧವರು ಭಾಗವಹಿಸಿದ್ದರು.

ರಾಷ್ಟ್ರೀಯ ಬಾಲ ಪ್ರತಿಭೆ ಪ್ರಶಸ್ತಿಗೆ ಶ್ರೀರಕ್ಷ ಆಯ್ಕೆ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ರಾಮನಗರದ ಪ್ರತಿಭಾವಂತ ಬಾಲಕಿ ಕುಮಾರಿ ಹೆಚ್. ಶ್ರೀರಕ್ಷ ಅವರು ಪ್ರತಿಷ್ಠಿತ ಶ್ರೀ ವಾಲ್ಮೀಕಿ ಕಲಾ ಸೇವಾ ರಾಷ್ಟ್ರೀಯ ಬಾಲ ಪ್ರತಿಭೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯ ಶ್ರೀ ವಾಲ್ಮೀಕಿ ಮಹಿಳಾ ಕಲಾ ಸಂಸ್ಥೆ (ರಿ.) ವತಿಯಿಂದ ಜೂನ್ 28ರಂದು ಆಯೋಜಿಸಿರುವ 13ನೇ ವಾರ್ಷಿಕೋತ್ಸವ ಹಾಗೂ ರಾಜ್ಯ-ರಾಷ್ಟ್ರ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀರಕ್ಷ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷೆ ಅನುರಾಧ ವಾಲ್ಮೀಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮನಗರದ ಹಿಟ್ನಾಳ್ ಶ್ರೀನಿವಾಸ ಹಾಗೂ ಶ್ರೀದೇವಿ ದಂಪತಿಯ ಪುತ್ರಿಯಾಗಿರುವ ಶ್ರೀರಕ್ಷ, ಪ್ರಸಿದ್ಧಿ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕರಾಟೆ ಹಾಗೂ ಭರತನಾಟ್ಯ ಕ್ಷೇತ್ರಗಳಲ್ಲಿ ವಿಶೇಷ ಪ್ರತಿಭೆ ತೋರಿದ್ದಾರೆ. ಅಲ್ಲದೇ ಮೊದಲನೇ ತರಗತಿಯಲ್ಲಿಯೇ 10 ಅಡಿ ಎತ್ತರದ ಮಲ್ಲಗಂಬ ಏರುವ ಮೂಲಕ ಗಮನ ಸೆಳೆದಿದ್ದರು.

ಬಾಲ್ಯದಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತೋರಿದ ಸಾಧನೆ ಹಾಗೂ ಪ್ರತಿಭೆಯನ್ನು ಪರಿಗಣಿಸಿ ರಾಷ್ಟ್ರೀಯ ಬಾಲ ಪ್ರತಿಭೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶ್ರೀರಕ್ಷ ಅವರ ಸಾಧನೆಗೆ ಕರಾಟೆ ತರಬೇತುದಾರರಾದ ಅಲಬೂರು ನಾಗರಾಜ ಮತ್ತು ಕಿರಣ್, ಭರತನಾಟ್ಯ ಶಿಕ್ಷಕಿ ಅಂಬಿಕಾ ಮೇಡಂಗು ಅಭಿನಂದನೆ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀರಕ್ಷ ಅವರಿಗೆ ಕುಟುಂಬ ಸದಸ್ಯರು, ಪ್ರಸಿದ್ಧಿ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

ಬೀದಿ ನಾಯಿಗಳ ಅಟ್ಟಹಾಸಕ್ಕೆ ಕರು ಬಲಿ..!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾಂಸ ಹಾಗೂ ಎಗ್‌ರೈಸ್ ಅಂಗಡಿಗಳ ಪರಿಣಾಮ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಕ್ಕಳು ಹಾಗೂ ಸಾಕು ಪ್ರಾಣಿಗಳ ಜೀವಕ್ಕೆ ಅಪಾಯ ಎದುರಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಅಂಗಡಿಗಳ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ರಸ್ತೆ ಬದಿ, ಖಾಲಿ ಜಾಗ ಹಾಗೂ ಚರಂಡಿಗಳ ಬಳಿ ಎಸೆಯುತ್ತಿರುವುದರಿಂದ ಬೀದಿ ನಾಯಿಗಳಿಗೆ ಶಾಶ್ವತ ಆಹಾರ ಮೂಲ ಸಿಗುತ್ತಿದ್ದು, ನಾಯಿಗಳು ಗುಂಪುಗೂಡಿ ಸಾಕು ಪ್ರಾಣಿಗಳು ಹಾಗೂ ಸಾರ್ವಜನಿಕರ ಮೇಲೆ ದಾಳಿ ನಡೆಸುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಇದಕ್ಕೆ ಸಾಕ್ಷಿಯೆಂಬಂತೆ ಬುಧವಾರ ಬೆಳಗಿನ ಜಾವ ತಾಲೂಕಿನ ಗೊಜನೂರ ಗ್ರಾಮದಲ್ಲಿ ರೈತ ಚನ್ನಪ್ಪ ಷಣ್ಮುಕಿ ಅವರ ಮನೆಯಲ್ಲಿದ್ದ ಹಸುಗರುವಿನ ಮೇಲೆ ಬೀದಿ ನಾಯಿಗಳು ಮಾರಣಾಂತಿಕ ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡ ಕರುವನ್ನು ಗದಗ ಜಿಲ್ಲಾ ಪಶುವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಈ ಘಟನೆಗೆ ಬೇಸರ ವ್ಯಕ್ತಪಡಿಸಿರುವ ರೈತ ಚನ್ನಪ್ಪ ಷಣ್ಮುಕಿ, ತಹಸೀಲ್ದಾರರು, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಪಶುವೈದ್ಯಕೀಯ ಇಲಾಖೆಗೆ ಮನವಿ ಸಲ್ಲಿಸಿ, ಇಂತಹ ಘಟನೆಗಳಿಗೆ ಕಾರಣವಾಗುತ್ತಿರುವ ಅನಧಿಕೃತ ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಬೇಕು ಹಾಗೂ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮನವಿ ಸ್ವೀಕರಿಸಿದ ಗ್ರಾಮ ಆಡಳಿತಾಧಿಕಾರಿ ಅನಿಲಕುಮಾರ ಬೇವಿನಮರದ, ಘಟನೆಯ ಕುರಿತು ಮಾಹಿತಿ ಪಡೆದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಶಾಲೆಗೆ ತೆರಳುವ ಮಕ್ಕಳು, ವೃದ್ಧರು ಹಾಗೂ ಬೆಳಗಿನ ಜಾವ ವಾಯುವಿಹಾರಕ್ಕೆ ಹೋಗುವ ನಾಗರಿಕರು ಕೂಡ ನಾಯಿಗಳ ದಾಳಿಯ ಭಯದಲ್ಲೇ ಓಡಾಡುವಂತಾಗಿದೆ. ಬೈಕ್ ಸವಾರರನ್ನು ಬೆನ್ನಟ್ಟುವ ಘಟನೆಗಳು ಅಪಘಾತಗಳಿಗೆ ಕಾರಣವಾಗುತ್ತಿರುವುದು ಸಾರ್ವಜನಿಕರ ಆತಂಕ ಹೆಚ್ಚಿಸಿದೆ.

ಬೀದಿ ನಾಯಿಗಳ ಸಂತಾನಹರಣ, ರೇಬೀಸ್ ಲಸಿಕಾ ಅಭಿಯಾನ ಹಾಗೂ ಮಾಂಸದ ಅಂಗಡಿಗಳಿಗೆ ಕಡ್ಡಾಯ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಲೂಕಿನಾದ್ಯಂತ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಅಧಿಕಾರಿಗಳು ತಾತ್ಕಾಲಿಕ ಕ್ರಮಕ್ಕೆ ಸೀಮಿತರಾಗದೇ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ರೈತರೊಂದಿಗೆ ಹೋರಾಟ ನಡೆಸಲಾಗುವುದು ಎಂದು ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ ಎಚ್ಚರಿಕೆ ನೀಡಿದ್ದಾರೆ.

“ಅನಧಿಕೃತ ಮಾಂಸ ಹಾಗೂ ಎಗ್‌ರೈಸ್ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ, ಬೀದಿ ನಾಯಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.”

ಮಂಜುನಾಥ ಮಾಗಡಿ, ತಾಲೂಕು ಅಧ್ಯಕ್ಷರು, ಸಮಗ್ರ ರೈತ ಸಂಘಟನೆಗಳ ಒಕ್ಕೂಟ

ವಿದ್ಯುತ್ ಖಾಸಗೀಕರಣಕ್ಕೆ ರೈತರ ತೀವ್ರ ವಿರೋಧ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯದಲ್ಲಿ ವಿದ್ಯುತ್ ವಿತರಣೆಯನ್ನು ಖಾಸಗಿ ಕಂಪನಿಗಳಿಗೆ ವಹಿಸಬಾರದು ಹಾಗೂ ಟಾಟಾ ಕಂಪನಿಗೆ ವಿದ್ಯುತ್ ವಿತರಣಾ ಪರವಾನಿಗೆ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಲಕ್ಷ್ಮೇಶ್ವರ ತಾಲೂಕು ಘಟಕದ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ್ ಎಂ. ಧನಂಜಯ ಅವರಿಗೆ ಮನವಿ ಸಲ್ಲಿಸಿದರು.

ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳು ಪ್ರವೇಶಿಸಿದರೆ ರೈತರ ಪಂಪ್‌ಸೆಟ್‌ಗಳಿಗೆ ಹಾಗೂ ಗೃಹ ಬಳಕೆದಾರರಿಗೆ ತೊಂದರೆಯಾಗಲಿದೆ. ಜೊತೆಗೆ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯುತ್ ಇಲಾಖೆಯನ್ನು ಖಾಸಗಿಯವರಿಗೆ ವಹಿಸಲು ಯಾವುದೇ ಪರವಾನಿಗೆ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈಗಾಗಲೇ ಕೆಲವು ರಾಜ್ಯಗಳಲ್ಲಿ ಖಾಸಗಿ ಕಂಪನಿಗಳು ವಿದ್ಯುತ್ ಕ್ಷೇತ್ರಕ್ಕೆ ಪ್ರವೇಶಿಸಿದ ಪರಿಣಾಮ ರೈತರು ಹಾಗೂ ಸಾಮಾನ್ಯ ಗ್ರಾಹಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೆಸ್ಕಾಂನ ಆರ್ಥಿಕ ಸ್ಥಿರತೆ, ವಿದ್ಯುತ್ ಕಾರ್ಮಿಕರ ಹಿತಾಸಕ್ತಿ ಹಾಗೂ ಗ್ರಾಮೀಣ ಗ್ರಾಹಕರ, ವಿಶೇಷವಾಗಿ ರೈತರ ಹಿತದೃಷ್ಟಿಯಿಂದ ಖಾಸಗಿ ವಿತರಣಾ ಪರವಾನಗಿ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಲಾಯಿತು.

ಒಂದು ವೇಳೆ ವಿದ್ಯುತ್ ಖಾಸಗೀಕರಣಕ್ಕೆ ಮುಂದಾದರೆ ರಾಜ್ಯಾದ್ಯಂತ ಬಂದ್ ಹಾಗೂ ಬಾರಕೋಲು ಚಳವಳಿ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಕಳ್ಳಿಹಾಳ, ಮಂಜುನಾಥ ಅಣ್ಣಿಗೇರಿ ಸೇರಿದಂತೆ ರಾಮಣ್ಣ ಕಾಶಿಕೋವಿ, ಶಿವಾನಂದ ಲಿಂಗಶೆಟ್ಟಿ, ಮಂಜುನಾಥ ಹಾವಳಕೇರಿ, ಮುರುಗೇಶ ಬಳಿಗಾರ, ಶಂಭಣ್ಣ ಬಳಿಗಾರ, ಸಿದ್ಧಲಿಂಗಪ್ಪ ಕಳ್ಳಿಹಾಳ, ಪ್ರಕಾಶ ಬಡಿಗೇರ, ಖಾದರ್‌ಸಾಬ್ ರಿತ್ತಿ, ಶಿವಪ್ಪ ಶಿವಸಿಂಪಿಗೇರ, ದಾಲವ್‌ಸಾಬ ತಬ್ಬಲ, ಫಕ್ಕೀರೇಶ ಶೀರನಹಳ್ಳಿ, ಕುಮಾರ ಕರಡಿಕೊಪ್ಪ ಹಾಗೂ ರಮೇಶ ಕಾಶಿಕೋವಿ ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ಕುಖ್ಯಾತ ಅಪರಾಧಿಯ ಹೆಡೆಮುರಿ ಕಟ್ಟಿದ ಪೊಲೀಸ್!

ಬೆಂಗಳೂರು: ವಿವಿಧ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಅಪರಾಧಿ ಸೈಯದ್ ಅಬ್ರಾರ್‌ನನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ವಿರುದ್ಧ ಕೊಲೆ, ಕೊಲೆಯತ್ನ, ಡಕಾಯಿತಿ ಸೇರಿದಂತೆ ಒಟ್ಟು 67 ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮನೆಗಳ್ಳತನ ಪ್ರಕರಣವೊಂದರ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರು ಸೈಯದ್ ಅಬ್ರಾರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆತನ ವಿರುದ್ಧ ಹಲವು ಜಿಲ್ಲೆಗಳಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳ ಮಾಹಿತಿ ಬಹಿರಂಗಗೊಂಡಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ವಿರುದ್ಧ 30 ಜಾಮೀನುರಹಿತ ವಾರಂಟ್‌ಗಳು ಬಾಕಿ ಇದ್ದು, ಐದು ಪ್ರೊಕ್ಲಮೇಷನ್ ಪ್ರಕರಣಗಳಲ್ಲೂ ಆತ ತಲೆಮರೆಸಿಕೊಂಡಿದ್ದ. ಬೆಂಗಳೂರು, ಕೋಲಾರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಅಬ್ರಾರ್ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್‌ಗಳನ್ನು ರಚಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿರುವ ನಡುವೆಯೇ ಈ ಕಾರ್ಯಾಚರಣೆ ಮಹತ್ವ ಪಡೆದುಕೊಂಡಿದೆ.

ಸದ್ಯ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

 

ವಿದ್ಯುತ್ ಖಾಸಗೀಕರಣಕ್ಕೆ ರೈತ ಸಂಘದ ತೀವ್ರ ವಿರೋಧ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ನೀತಿಯನ್ನು ಜಾರಿಗೆ ತರಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ರೈತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಶಿವಕುಮಾರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ರೈತ ಸಂಘದ ಸಂಚಾಲಕ ಶಿಗೇನಹಳ್ಳಿ ಬಸವರಾಜ್, ವಿದ್ಯುತ್ ಖಾಸಗೀಕರಣದಿಂದ ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ. ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿರುವ ಉಚಿತ ವಿದ್ಯುತ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಹಾಗೂ ಗ್ರಾಮೀಣ ಭಾಗಗಳಿಗೆ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ತಾಲೂಕು ರೈತ ಸಂಘದ ಮುಖಂಡ ಟಿ. ಕೊಟ್ರೇಶ್ ಮಾತನಾಡಿ, ವಿದ್ಯುತ್ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸಿದರೆ ರೈತರು ಹಾಗೂ ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ವಿದ್ಯುತ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ಹಳೆಯ ಟ್ರಾನ್ಸ್‌ಫಾರ್ಮರ್‌ಗಳ ಬದಲಾವಣೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಮನವಿಯಲ್ಲಿ ವಿದ್ಯುತ್ ಖಾಸಗೀಕರಣ ನೀತಿಯನ್ನು ಹಿಂಪಡೆಯುವುದು, ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಖಚಿತಪಡಿಸುವುದು, ವಿದ್ಯುತ್ ಅವಘಡಗಳಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರಿಗೆ ಸೂಕ್ತ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪ್ರಸ್ತಾಪಿಸಲಾಯಿತು.

ಈ ಸಂದರ್ಭದಲ್ಲಿ ನಾಗೇಶ್ ಸಿ., ನಾಗರಾಜ ತಳವಾರ, ಸೋಮು, ಮಾಬು, ಎಸ್.ಕೆ. ಸೋಮನಾಥ್, ಎಸ್.ಕೆ. ಮಹೇಶ್, ತಂಬ್ರಹಳ್ಳಿ ಮಹೇಶ್, ಮದ್ದಿ ದುರ್ಗಮ್ಮ ಸೇರಿದಂತೆ ತಾಲೂಕು ರೈತ ಸಂಘದ ಪದಾಧಿಕಾರಿಗಳು, ವಿವಿಧ ಗ್ರಾಮಗಳ ರೈತರು ಹಾಗೂ ರೈತ ಹೋರಾಟಗಾರರು ಉಪಸ್ಥಿತರಿದ್ದರು.

“ವಿದ್ಯುತ್ ಖಾಸಗೀಕರಣ ರೈತರಿಗೆ ಮಾರಕವಾಗಲಿದೆ. ಉಚಿತ ವಿದ್ಯುತ್ ಯೋಜನೆ ಮತ್ತು ಗ್ರಾಮೀಣ ವಿದ್ಯುತ್ ಪೂರೈಕೆಯನ್ನು ಯಾವುದೇ ಕಾರಣಕ್ಕೂ ದುರ್ಬಲಗೊಳಿಸಬಾರದು.”

ಶಿಗೇನಹಳ್ಳಿ ಬಸವರಾಜ್, ತಾಲೂಕು ರೈತ ಸಂಘದ ಸಂಚಾಲಕ

ಯೋಗದಲ್ಲಿ ಆರೋಗ್ಯದ ಜೊತೆಗೆ ವಿಜ್ಞಾನ ಅಡಗಿದೆ: ಶ್ರೀಧರ್ ಕೊಟಗಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದರೊಳಗೆ ಆರೋಗ್ಯಕರ ಬದುಕಿನ ವಿಜ್ಞಾನ ಅಡಗಿದ್ದು, ಪ್ರತಿಯೊಬ್ಬರೂ ಯೋಗವನ್ನು ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಯೋಗ ಸಾಧಕ ಶ್ರೀಧರ್ ಕೊಟಗಿ ಹೇಳಿದರು.

ಪಟ್ಟಣದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸಿನ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಂಸ್ಥೆಯ ಮುಖ್ಯಸ್ಥೆ ಸ್ವಾತಿ ಉ. ಪೈ ಮಾತನಾಡಿ, ಯೋಗವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಶಾಂತಿ, ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ವಿದ್ಯಾರ್ಥಿಗಳು ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಭುಗೌಡ ಯಕಿಕೊಪ್ಪ ಅವರು ಆರೋಗ್ಯಕರ ಜೀವನಶೈಲಿಗೆ ಯೋಗದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರಾದ ಮೃತ್ಯುಂಜಯ ಹಿರೇಮಠ, ಆರ್.ಎಂ. ಕದಡಿ ಹಾಗೂ ರಾಜು ಲಮಾಣಿ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನಡೆಸಿ ಯೋಗಾಭ್ಯಾಸ ಮಾಡಿಸಿದರು.

ಜೆ.ಡಿ. ಲಮಾಣಿ ಕಾರ್ಯಕ್ರಮ ನಿರೂಪಿಸಿದರೆ, ವಿಜಯಕುಮಾರ್ ಬಿಳಿಯಲಿ ವಂದಿಸಿದರು. ಡಾ. ಶಿವಾನಂದ ಹೂವಿನ, ಸುಮಿತ್ರಾ ಹೂಗಾರ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮಳೆ ಕೈಕೊಟ್ಟರೂ ಬೆಳೆ ಉಳಿಸಬಹುದು: ಬಸವರಾಜ ಗದಗಿನ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮುಂಗಾರು ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೈತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಬೆಳೆಗಳನ್ನು ಸಂರಕ್ಷಿಸಬೇಕು ಎಂದು ರೈತ ಸಂಪರ್ಕ ಕೇಂದ್ರದ ಅಧಿಕಾರಿ ಬಸವರಾಜ ಗದಗಿನ ಸಲಹೆ ನೀಡಿದ್ದಾರೆ.

ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಬೆಳೆಗಳ ಮೇಲಿನ ಒತ್ತಡ ಕಡಿಮೆ ಮಾಡಲು ನೀರಿನಲ್ಲಿ ಕರಗುವ ರಸಗೊಬ್ಬರಗಳನ್ನು ಎಲೆಗಳ ಮೂಲಕ ಸಿಂಪಡಿಸಬೇಕು. 19:19:19 ಗೊಬ್ಬರವನ್ನು ಪ್ರತಿ ಲೀಟರ್ ನೀರಿಗೆ 3 ರಿಂದ 5 ಗ್ರಾಂ ಪ್ರಮಾಣದಲ್ಲಿ ಬೆರೆಸಿ, ಪ್ರತಿ ಎಕರೆಗೆ 180 ರಿಂದ 200 ಲೀಟರ್ ದ್ರಾವಣವನ್ನು ಸಿಂಪಡಿಸಬಹುದು ಎಂದು ತಿಳಿಸಿದರು.

ಪರ್ಯಾಯವಾಗಿ ಪೊಟ್ಯಾಶಿಯಂ ನೈಟ್ರೇಟ್ (13:0:45) ಅನ್ನು ಪ್ರತಿ ಲೀಟರ್ ನೀರಿಗೆ 5 ರಿಂದ 10 ಗ್ರಾಂ ಪ್ರಮಾಣದಲ್ಲಿ ಬೆರೆಸಿ ಸಿಂಪಡಿಸುವುದರಿಂದ ಬೆಳೆಗಳ ಬೆಳವಣಿಗೆಗೆ ನೆರವಾಗುತ್ತದೆ ಎಂದು ಹೇಳಿದರು.

ಮಣ್ಣಿನಲ್ಲಿರುವ ತೇವಾಂಶ ಉಳಿಸಿಕೊಳ್ಳಲು ಹೊಲಗಳಲ್ಲಿ ಹೊದಿಕೆ ಪದ್ಧತಿ ಅಳವಡಿಸಿಕೊಳ್ಳಬೇಕು. ಕಳೆ ನಿಯಂತ್ರಣ ಮಾಡಿ, ಒಣಗಿದ ಬೆಳೆ ಅವಶೇಷಗಳನ್ನು ಹೊದಿಕೆಯಾಗಿ ಬಳಸುವುದರಿಂದ ಮಣ್ಣಿನ ತೇವಾಂಶ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ತೆಳುವಾಗಿ ಎಡೆಕುಂಟಿ ಹೊಡೆಯುವುದರಿಂದ ಜಮೀನಿನಲ್ಲಿ ಉಂಟಾಗಿರುವ ಬಿರುಕುಗಳು ಮುಚ್ಚಿಕೊಳ್ಳುತ್ತವೆ. ಇದರಿಂದ ಮಳೆಯ ಕೊರತೆಯ ನಡುವೆಯೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.

ನರೇಗಲ್ಲ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕೃಷಿ ಇಲಾಖೆಯ ಸಿಬ್ಬಂದಿ ನಡೆಸಿದ ಸಮೀಕ್ಷೆಯ ಆಧಾರದ ಮೇಲೆ ರೈತರಿಗೆ ಈ ಸಲಹೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಕೃಷಿಗೆ ನೆರವಾಗುವ ವಿಶೇಷ ಬೈಕ್

ಈ ಸಂದರ್ಭದಲ್ಲಿ ಇಳಕಲ್ ತಾಲೂಕಿನ ಸೂಳಿಬಾವಿ ಗ್ರಾಮದ ರೈತ ಬಸವರಾಜ ಉಳ್ಳಾಗಡ್ಡಿ ಅವರು ತಮ್ಮ ಬೈಕ್‌ನ್ನು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪರಿವರ್ತಿಸಿರುವುದನ್ನು ಪ್ರದರ್ಶಿಸಿದರು. ಅಂತರ ಬೇಸಾಯ, ಔಷಧಿ ಸಿಂಪರಣೆ ಹಾಗೂ ಹರಗುವ ಕಾರ್ಯಗಳಿಗೆ ಬಳಸಬಹುದಾದ ಈ ವಾಹನವನ್ನು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಸಿದ್ಧಪಡಿಸಲಾಗಿದೆ.

ಒಂದು ಎಕರೆ ಕೃಷಿ ಕಾರ್ಯಕ್ಕೆ ಕೇವಲ ಒಂದು ಲೀಟರ್ ಪೆಟ್ರೋಲ್ ಸಾಕಾಗುತ್ತಿದ್ದು, 200 ಲೀಟರ್ ಸಿಂಪಡಣೆ ದ್ರಾವಣವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ ಎಂದು ಅವರು ಮಾಹಿತಿ ನೀಡಿದರು.

ಗಾಂಜಾ ಬೆಳೆ ಬೆಳೆದರೆ ಕಾನೂನು ಕ್ರಮ

ಕೆಲವು ರೈತರು ಹೊಲಗಳಲ್ಲಿ ಗಾಂಜಾ ಬೆಳೆ ಬೆಳೆಯುತ್ತಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದೆ. ಗಾಂಜಾ ಬೆಳೆಯುವುದು ಕಾನೂನುಬಾಹಿರವಾಗಿದ್ದು, ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಅಂತಹ ಪ್ರಕರಣಗಳು ಇಲಾಖೆಯ ಗಮನಕ್ಕೆ ಬಂದರೆ ಸಂಬಂಧಿಸಿದ ರೈತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ ಗದಗಿನ ಎಚ್ಚರಿಕೆ ನೀಡಿದರು.

error: Content is protected !!