Home Blog

ಮೂರನೇ ಮದುವೆಗೆ ಸಜ್ಜಾದ ಅಮೀರ್ ಖಾನ್: ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಜೊತೆ ಶೀಘ್ರವೇ ವಿವಾಹ?

ಮುಂಬೈ: ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ವೈಯಕ್ತಿಕ ಬದುಕಿನ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಪ್ರೇಯಸಿ ಗೌರಿ ಸ್ಪ್ರ್ಯಾಟ್ ಜೊತೆ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಜುಲೈ 5ರಂದು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆಮೀರ್ ಖಾನ್ ಕಳೆದ ವರ್ಷ ತಮ್ಮ ಹುಟ್ಟುಹಬ್ಬದ ದಿನವೇ ಗೌರಿ ಅವರನ್ನು ಅಧಿಕೃತವಾಗಿ ಪರಿಚಯಿಸಿ ಸಂಬಂಧದ ಬಗ್ಗೆ ಬಹಿರಂಗಪಡಿಸಿದ್ದರು. ಹಲವು ವರ್ಷಗಳ ಸ್ನೇಹ ಪ್ರೀತಿಗೆ ತಿರುಗಿದ್ದು, ಇದೀಗ ಇಬ್ಬರೂ ದಾಂಪತ್ಯ ಜೀವನ ಆರಂಭಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಆಮೀರ್ ಖಾನ್ ಈಗಾಗಲೇ ಎರಡು ಮದುವೆಗಳನ್ನು ಮಾಡಿಕೊಂಡಿದ್ದಾರೆ. ಮೊದಲ ಪತ್ನಿ ರೀನಾ ದತ್ತಾ ಅವರೊಂದಿಗೆ 16 ವರ್ಷಗಳ ದಾಂಪತ್ಯ ಜೀವನ ನಡೆಸಿದ ಬಳಿಕ ವಿಚ್ಛೇದನ ಪಡೆದಿದ್ದರು. ನಂತರ ಕಿರಣ್ ರಾವ್ ಅವರನ್ನು ವಿವಾಹವಾಗಿದ್ದ ಅವರು, 2021ರಲ್ಲಿ ಬೇರ್ಪಟ್ಟಿದ್ದರು.

ಮೂಲತಃ ಬೆಂಗಳೂರಿನವರಾದ ಗೌರಿ ಸ್ಪ್ರ್ಯಾಟ್ ಫ್ಯಾಶನ್ ಮತ್ತು ಬ್ಯೂಟಿ ಕ್ಷೇತ್ರದಲ್ಲಿ ಗುರುತಿಸಿಕೊಂಡ ಉದ್ಯಮಿಯಾಗಿದ್ದಾರೆ. ಲಂಡನ್‌ನಲ್ಲಿ ಉನ್ನತ ಶಿಕ್ಷಣ ಪಡೆದಿರುವ ಅವರು, ಮುಂಬೈನಲ್ಲಿ ಯಶಸ್ವಿಯಾಗಿ ಸಲೂನ್ ವ್ಯವಹಾರ ನಡೆಸುತ್ತಿದ್ದಾರೆ.

ಸಂಬಂಧವನ್ನು ಬಹಿರಂಗಪಡಿಸಿದ ಬಳಿಕ ಆಮೀರ್ ಖಾನ್, ‘ಗೌರಿ ನನ್ನ ಜೀವನಕ್ಕೆ ಬಂದ ಬಳಿಕ ನಾನು ಹೆಚ್ಚು ಸಂತೋಷವಾಗಿದ್ದೇನೆ. ಜೀವನದಲ್ಲಿ ಮತ್ತೊಮ್ಮೆ ಸಮತೋಲನ ಮತ್ತು ನೆಮ್ಮದಿ ಸಿಕ್ಕಿದೆ’ ಎಂದು ಹೇಳಿಕೊಂಡಿದ್ದರು.

ಈಗ ಅವರ ವಿವಾಹದ ಸುದ್ದಿ ಹೊರಬಿದ್ದಿರುವ ಹಿನ್ನೆಲೆಯಲ್ಲಿ ಬಾಲಿವುಡ್ ವಲಯದಲ್ಲಿ ಭಾರಿ ಕುತೂಹಲ ಮೂಡಿದ್ದು, ಅಧಿಕೃತ ಘೋಷಣೆಯ ನಿರೀಕ್ಷೆ ಹೆಚ್ಚಾಗಿದೆ.

26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದೆ: ನಟಿ ಕಂಗನಾ ರಣಾವತ್

ಮುಂಬೈ: 2008ರ ನವೆಂಬರ್ 26ರಂದು ನಡೆದ ಭೀಕರ ಮುಂಬೈ ಉಗ್ರರ ದಾಳಿಯ ಸಮಯದಲ್ಲಿ ತಾವು ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ತೊಡಗಿಸಿಕೊಂಡಿದ್ದೆವು ಎಂದು ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಬಹಿರಂಗಪಡಿಸಿದ್ದಾರೆ. ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶವನ್ನೇ ಬೆಚ್ಚಿಬೀಳಿಸಿದ್ದ ಆ ಕರಾಳ ರಾತ್ರಿಯ ನೆನಪುಗಳನ್ನು ಹಂಚಿಕೊಂಡರು.

ಕಂಗನಾ ಅವರ ಪ್ರಕಾರ, ನಟಿ ಶಹಾನಾ ಗೋಸ್ವಾಮಿ ಹೊಸ ಮನೆಗೆ ಗೃಹಪ್ರವೇಶ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾರಿ ರೋಡ್‌ನಲ್ಲಿರುವ ನಿವಾಸದಲ್ಲಿ ವಿಶೇಷ್ ಫಿಲ್ಮ್ಸ್‌ಗೆ ಸಂಬಂಧಿಸಿದ ಕಲಾವಿದರಿಗಾಗಿ ಹೌಸ್ ಪಾರ್ಟಿ ಆಯೋಜಿಸಲಾಗಿತ್ತು. ಅಲ್ಲಿ ಎಲ್ಲರೂ ಹಾಡು, ನೃತ್ಯ ಮತ್ತು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಈ ವೇಳೆ ಹಿರಿಯ ನಿರ್ದೇಶಕ ಮಹೇಶ್ ಭಟ್ ಪಾರ್ಟಿಗೆ ಆಗಮಿಸಿ ತಕ್ಷಣ ಟಿವಿ ಆನ್ ಮಾಡುವಂತೆ ಸೂಚಿಸಿದ್ದರು. ಟಿವಿ ತೆರೆದಾಗ ಮುಂಬೈನಲ್ಲಿ ಉಗ್ರರ ದಾಳಿ ನಡೆಯುತ್ತಿರುವ ದೃಶ್ಯಗಳು ನೇರ ಪ್ರಸಾರವಾಗುತ್ತಿದ್ದು, ಅಲ್ಲಿ ಇದ್ದವರು ಆಘಾತಕ್ಕೊಳಗಾದರು ಎಂದು ಕಂಗನಾ ತಿಳಿಸಿದ್ದಾರೆ.

ಆರಂಭದಲ್ಲಿ ಪರಿಸ್ಥಿತಿಯ ಗಂಭೀರತೆ ಅರ್ಥವಾಗದ ಕಾರಣ ಪಾರ್ಟಿ ಮುಂದುವರಿಸಬೇಕೇ ಅಥವಾ ಮನೆಗೆ ತೆರಳಬೇಕೇ ಎಂಬ ಚರ್ಚೆ ನಡೆದಿತ್ತು. ಆದರೆ ಮಹೇಶ್ ಭಟ್ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ಎಲ್ಲರೂ ಕೂಡಲೇ ಮನೆಗೆ ತೆರಳುವಂತೆ ಸೂಚಿಸಿದರು. ಅವರ ಸಲಹೆಯಿಂದಲೇ ನಾವು ಅಲ್ಲಿಂದ ಹೊರಟೆವು ಎಂದು ಕಂಗನಾ ನೆನಪಿಸಿಕೊಂಡರು.

ಇದೇ ವೇಳೆ ತಮ್ಮ ಹೊಸ ಸಿನಿಮಾ ‘ಭಾರತ್ ಭಾಗ್ಯ ವಿಧಾತ’ ಕುರಿತು ಮಾತನಾಡಿದ ಅವರು, 26/11 ಉಗ್ರರ ದಾಳಿಯ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್‌ಗಳು ತೋರಿದ ಮಾನವೀಯತೆ ಮತ್ತು ಧೈರ್ಯದ ಕಥೆಯನ್ನು ಚಿತ್ರ ಹೇಳಲಿದೆ ಎಂದು ತಿಳಿಸಿದರು. ಚಿತ್ರದಲ್ಲಿ ಕಂಗನಾ ನರ್ಸ್ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಖಿನ್ನತೆಗೆ ಜಾರಿದ್ದ ಮಹಿಳೆಯಿಂದ ದಾರುಣ ಕೃತ್ಯ: ಇಬ್ಬರು ಪುಟ್ಟ ಮಕ್ಕಳ ಹತ್ಯೆ

0

ಕೋಲಾರ: ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಪತಿಯ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾಳೆ.

ಆಂಧ್ರಪ್ರದೇಶ ಮೂಲದ ಬುಜ್ಜಮ್ಮ (22) ತನ್ನ ಮೂರು ವರ್ಷದ ಮಗಳು ಸರಸ್ವತಿ ಮತ್ತು ಒಂದು ವರ್ಷದ ಮಗು ಹೇಮಾಶ್ರಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಆಕೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬುಜ್ಜಮ್ಮ ಮತ್ತು ಪತಿ ಬಾಬು ಕಳೆದ ಒಂದು ವರ್ಷದಿಂದ ಆಲಂಗೂರಿನ ಮಾವಿನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ 20 ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಬಾಬು ಮೃತಪಟ್ಟಿದ್ದರು. ಈ ಘಟನೆಯ ಬಳಿಕ ಬುಜ್ಜಮ್ಮ ತೀವ್ರ ಮಾನಸಿಕ ಆಘಾತ ಹಾಗೂ ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದುಬಂದಿದೆ.

ಕುಟುಂಬದ ಆಧಾರಸ್ತಂಭನನ್ನು ಕಳೆದುಕೊಂಡ ನೋವಿನಿಂದ ಬಳಲುತ್ತಿದ್ದ ಮಹಿಳೆ, ಕೊನೆಗೆ ತನ್ನ ಮಕ್ಕಳ ಜೀವ ಕಸಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.

ನಾನು ಟ್ರೋಲ್ ಪೇಜ್ʼಗಳ ಕ್ರಶ್: ಸಚಿವ ಸ್ಥಾನ ಸಿಕ್ಕರೂ ಸರಿ, ಸಿಗದಿದ್ದರೂ ಸರಿ – ಪ್ರದೀಪ್ ಈಶ್ವರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ ದಿನ ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿರುವ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಆ ಸಂದರ್ಭದಲ್ಲಿ ಯಾವುದೇ ವಿಶೇಷ ಕಾರಣದಿಂದ ಮೌನವಾಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಿರಿಯ ನಾಯಕರು ಅಧಿಕಾರದಿಂದ ಹೊರಬರುತ್ತಿದ್ದರೆ, ಹೊಸ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವಂತಹ ಭಾವನಾತ್ಮಕ ಸಂದರ್ಭವಾಗಿತ್ತು. ಆ ಸಮಯದಲ್ಲಿ ಏನು ಮಾತನಾಡಬೇಕು ಎಂಬುದರ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಇಂತಹ ಕ್ಷಣಗಳಲ್ಲಿ ಯಾವುದೇ ಹೇಳಿಕೆ ನೀಡಿದರೂ ಅದು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇರುವುದರಿಂದ ಮೌನವಾಗಿದ್ದೆ ಎಂದು ಹೇಳಿದರು.

ಟ್ರೋಲ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಟ್ರೋಲ್‌ಗಳು ನನಗೆ ಹೊಸದಲ್ಲ. ಕರ್ನಾಟಕದ ಟ್ರೋಲ್ ಪೇಜ್‌ಗಳ ಕ್ರಶ್ ನಾನು ಎಂದು ಹಾಸ್ಯಮಯವಾಗಿ ಉತ್ತರಿಸಿದರು.

ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಸ್ಥಾನ ಪಡೆಯುವ ಆಸೆ ಇದೆ. ಆದರೆ ಕೊಟ್ಟರೂ ಸರಿ, ಕೊಡದಿದ್ದರೂ ಸರಿ. ನಾವು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ, ಪಕ್ಷದ ಸಿದ್ಧಾಂತ ಮತ್ತು ಜನಸೇವೆಯ ಉದ್ದೇಶದಿಂದ ಬಂದಿದ್ದೇವೆ ಎಂದು ಹೇಳಿದರು.

ನಾನು ಒಬಿಸಿ ಸಮುದಾಯದ ಯುವ ನಾಯಕ. ರಾಜ್ಯದಲ್ಲಿ ಒಬಿಸಿ ಚಳವಳಿಯನ್ನು ಮತ್ತಷ್ಟು ಬಲಪಡಿಸುವುದು ನನ್ನ ಉದ್ದೇಶ. ಅಧಿಕಾರವೇ ಗುರಿಯಾಗಿದ್ದರೆ ಅನೇಕ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಕೆಲಸ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಆಯ್ಕೆಯಾಗಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಇಬ್ಬರಿಗೂ ಅಭಿನಂದನೆ ಸಲ್ಲಿಸಿದರು.

ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಮತ್ತೊಂದು ಹಂತದ ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸವಿದೆ. ಒಬಿಸಿ ಸಮುದಾಯದ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಒಬಿಸಿ ಸಮುದಾಯದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಅಧಿಕಾರ ಬೇಕಾದವರು ಡಿಕೆ ಶಿವಕುಮಾರ್ ಜೊತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಮತ್ತು ಸಚಿವ ಸ್ಥಾನಗಳಿಗಾಗಿ ರಾಜಕೀಯ ಮಾಡುವವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹೋಗಬಹುದು. ಆದರೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು, ಪಕ್ಷದ ಸಿದ್ಧಾಂತ ಹಾಗೂ ವರಿಷ್ಠರ ಕೈ ಬಲಪಡಿಸುವುದೇ ಗುರಿ ಎನ್ನುವವರು ನನ್ನೊಂದಿಗೆ ಬರಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮಾತನಾಡಿದ ಅವರು, ಈ ಹೇಳಿಕೆಯನ್ನು ಯಾವುದೇ ಬಣ ರಾಜಕೀಯದ ದೃಷ್ಟಿಯಿಂದ ನೋಡಬಾರದು ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ನೀಡಿದ್ದಾರೆ. ವಿದ್ಯಾರ್ಥಿ ದಶೆಯಿಂದಲೇ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಾನು, ಎಂದಿಗೂ ಅಧಿಕಾರ ಅಥವಾ ಸಚಿವ ಸ್ಥಾನಕ್ಕಾಗಿ ವರಿಷ್ಠರ ಮುಂದೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನಾನು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದವನಲ್ಲ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ, ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಹಿರಿಯ ನಾಯಕರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಾ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ತಿಳಿಸಿದರು.

2028ರ ವಿಧಾನಸಭೆ ಚುನಾವಣೆಗೆ ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಹರಿಪ್ರಸಾದ್, ಅದನ್ನು ವಾಟ್ಸಪ್ ಯುನಿವರ್ಸಿಟಿಯ ಅಪಪ್ರಚಾರ ಎಂದು ತಳ್ಳಿಹಾಕಿದರು.

ನಾನು ಹಿಂದುಳಿದ ಅಥವಾ ಮುಂದುವರಿದ ವರ್ಗಕ್ಕೆ ಸೇರಿದವನು ಎಂಬುದು ಮುಖ್ಯವಲ್ಲ. ನನ್ನ ಮುಂದಿರುವ ಜವಾಬ್ದಾರಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು. ಸಿಎಎ, ಎಸ್‌ಐಆರ್ ಸೇರಿದಂತೆ ಜನಪರ ಹೋರಾಟಗಳಲ್ಲಿ ಪಕ್ಷವನ್ನು ಮುನ್ನಡೆಸಬೇಕಿದೆ. ಅಧಿಕಾರಕ್ಕಿಂತ ಹೋರಾಟ ಮತ್ತು ಸಂಘಟನೆ ನನಗೆ ಮುಖ್ಯ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಜನರ ಸಮಸ್ಯೆಗಳ ಪರವಾಗಿ ಹೋರಾಟ ನಡೆಸುವುದು ತಮ್ಮ ಮೊದಲ ಆದ್ಯತೆ ಎಂದು ಹರಿಪ್ರಸಾದ್ ತಿಳಿಸಿದರು. ಕಾಂಗ್ರೆಸ್ ಕೇವಲ ಅಧಿಕಾರದ ಪಕ್ಷವಲ್ಲ. ಇದು ಸಿದ್ಧಾಂತ ಮತ್ತು ಹೋರಾಟದ ಪಕ್ಷ. ಪಕ್ಷದ ತತ್ವ, ಮೌಲ್ಯಗಳು ಹಾಗೂ ವರಿಷ್ಠರ ನಾಯಕತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು  ಹೇಳಿದರು.

ಕೇರಳಕ್ಕೆ ಮುಂಗಾರು ಎಂಟ್ರಿ; ಕರ್ನಾಟಕದಲ್ಲಿ ಇನ್ನೆರಡು ದಿನಗಳಲ್ಲಿ ಮಳೆ ಅಬ್ಬರ, ಹಲವು ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ನೈಋತ್ಯ ಮುಂಗಾರು ಇಂದು (ಜೂನ್ 4) ಕೇರಳ ಕರಾವಳಿಯನ್ನು ತಲುಪಿದ್ದು, ವಾಡಿಕೆಗಿಂತ ಮೂರು ದಿನ ತಡವಾಗಿ ಅಧಿಕೃತವಾಗಿ ಪ್ರವೇಶಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಮುಂದಿನ ಎರಡು ದಿನಗಳಲ್ಲಿ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದ್ದು, ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕಕ್ಕೆ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬ ಬಗ್ಗೆ ಹವಾಮಾನ ಇಲಾಖೆ ಇನ್ನೂ ಅಂತಿಮ ಘೋಷಣೆ ಮಾಡಿಲ್ಲ. ಗುರುವಾರ ಮುಂಗಾರು ಗಾಳಿಯ ಚಲನವಲನ ಮತ್ತು ವಾತಾವರಣದ ಸ್ಥಿತಿಗತಿಗಳನ್ನು ಪರಿಶೀಲಿಸಿದ ಬಳಿಕ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

ಈ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ, ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ವಿಶೇಷವಾಗಿ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ರೈತರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸುವಂತೆ ಸಲಹೆ ನೀಡಲಾಗಿದೆ.

ಹವಾಮಾನ ತಜ್ಞರ ಪ್ರಕಾರ, ನೈಋತ್ಯ ಮುಂಗಾರು ಅರಬ್ಬಿ ಸಮುದ್ರದ ನೈಋತ್ಯ ಮತ್ತು ಆಗ್ನೇಯ ಭಾಗಗಳು, ಲಕ್ಷದ್ವೀಪ, ಕೇರಳ ಹಾಗೂ ತಮಿಳುನಾಡಿನ ಕೆಲವು ಪ್ರದೇಶಗಳ ಜೊತೆಗೆ ಬಂಗಾಳ ಕೊಲ್ಲಿಯ ಹಲವು ಭಾಗಗಳತ್ತ ವೇಗವಾಗಿ ಮುನ್ನಡೆಯುತ್ತಿದೆ. ಮುಂಗಾರು ಮತ್ತಷ್ಟು ಬಲ ಪಡೆದುಕೊಂಡಿರುವುದರಿಂದ ಕರ್ನಾಟಕದಲ್ಲೂ ವ್ಯಾಪಕ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಮಾನ ಏರಿಕೆಯಿಂದ ಬಳಲುತ್ತಿದ್ದ ಜನರಿಗೆ ಮುಂಗಾರು ಮಳೆ ನಿರಾಳತೆಯನ್ನು ನೀಡುವ ನಿರೀಕ್ಷೆ ಇದ್ದು, ರೈತ ಸಮುದಾಯವೂ ಉತ್ತಮ ಮಳೆಯ ನಿರೀಕ್ಷೆಯಲ್ಲಿದೆ.

ಹಾಸ್ಟೆಲ್ ಊಟದ ಅವ್ಯವಸ್ಥೆ ಬಯಲು: ವಿದ್ಯಾರ್ಥಿಗಳಿಗೆ ಮನೆಯಲ್ಲಿ ಊಟ ಬಡಿಸಿದ ಶಾಸಕ ಶರಣು ಸಲಗರ್

0

ಬೀದರ್: ಹಾಸ್ಟೆಲ್‌ನಲ್ಲಿ ನೀಡಲಾಗುತ್ತಿದ್ದ ಕಳಪೆ ಆಹಾರ ಹಾಗೂ ಕೊಳೆತ ತರಕಾರಿಗಳ ವಿರುದ್ಧ ವಿದ್ಯಾರ್ಥಿಗಳೇ ಧ್ವನಿ ಎತ್ತಿದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳು ಆಹಾರ ಮಾದರಿಗಳನ್ನು ಹಿಡಿದು ಶಾಸಕ ಶರಣು ಸಲಗರ್ ನಿವಾಸಕ್ಕೆ ತೆರಳಿ ಸಮಸ್ಯೆ ವಿವರಿಸಿದ್ದಾರೆ.

ವಿದ್ಯಾರ್ಥಿಗಳ ಅಹವಾಲು ಆಲಿಸಿದ ಶಾಸಕ ಶರಣು ಸಲಗರ್, ತರಲಾದ ಆಹಾರ ಮತ್ತು ತರಕಾರಿಗಳನ್ನು ಪರಿಶೀಲಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ವಾರ್ಡನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನಿಸಿ ಸ್ಪಷ್ಟನೆ ಕೇಳಿದರು.

ಸರ್ಕಾರ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿರುವಾಗ ಹಾಸ್ಟೆಲ್‌ಗಳಲ್ಲಿ ಇಂತಹ ಅವ್ಯವಸ್ಥೆ ಸಹಿಸಲಾಗದು ಎಂದು ಶಾಸಕ ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಇದೇ ವೇಳೆ ತಮ್ಮ ನಿವಾಸದಲ್ಲೇ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿಸಿ ಮಾನವೀಯತೆ ಮೆರೆದ ಶಾಸಕ, ಹಾಸ್ಟೆಲ್ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಘಟನೆ ಸ್ಥಳೀಯ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಹಾಸ್ಟೆಲ್‌ಗಳ ಆಹಾರ ಗುಣಮಟ್ಟದ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ.

ಸೂರ್ಯ ನಟನೆಯ ‘ಕಿಲ್ಲರ್’ ಸಿನಿಮಾ ಸೆಟ್‌ನಲ್ಲಿ ಭೀಕರ ಸ್ಫೋಟ: ಯುವ ತಂತ್ರಜ್ಞ ಸಾವು, ಇಬ್ಬರ ಬಂಧನ

ಚೆನ್ನೈ: ‘ಕಿಲ್ಲರ್’ ಚಿತ್ರದ ಚಿತ್ರೀಕರಣದ ವೇಳೆ ಸಂಭವಿಸಿದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟವು ಒಬ್ಬ ಯುವ ತಂತ್ರಜ್ಞನ ಜೀವ ಬಲಿತೆಗೆದುಕೊಂಡಿದ್ದು, ಮೂವರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಚೆನ್ನೈ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಬಿನ್ನಿ ಮಿಲ್ಸ್‌ನಲ್ಲಿ ನಿರ್ಮಿಸಲಾದ ಸೆಟ್‌ನಲ್ಲಿ ಮುಂಜಾನೆ ಸಾಹಸ ದೃಶ್ಯದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿತ್ತು. ವಿಶೇಷ ಎಫೆಕ್ಟ್ಸ್‌ಗಾಗಿ ಬಳಸಲಾಗುತ್ತಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಚಿತ್ರೀಕರಣ ಸ್ಥಳದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಯಿತು.

ಸ್ಫೋಟದಲ್ಲಿ ಗಾಯಗೊಂಡ ನಾಲ್ವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ 26 ವರ್ಷದ ತಂತ್ರಜ್ಞ ಮದನ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉಳಿದ ಮೂವರು ತಂತ್ರಜ್ಞರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದುರಂತದ ಬೆನ್ನಲ್ಲೇ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಶೂಟಿಂಗ್ ವೇಳೆ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತೇ ಎಂಬುದನ್ನು ತನಿಖೆಯ ಪ್ರಮುಖ ಅಂಶವನ್ನಾಗಿ ಪರಿಗಣಿಸಲಾಗಿದೆ.

ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಡಿ ಗ್ಯಾಸ್ ಸಿಲಿಂಡರ್ ಪೂರೈಕೆದಾರ ರಾಮು ಮತ್ತು ಉಸ್ತುವಾರಿ ಮೇಲ್ವಿಚಾರಕ ಆರ್ಮುಗಂ ಅವರನ್ನು ಬಂಧಿಸಲಾಗಿದೆ. ಸ್ಫೋಟದ ನಿಖರ ಕಾರಣ ಪತ್ತೆ ಹಚ್ಚಲು ತಜ್ಞರ ನೆರವಿನೊಂದಿಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಚಿತ್ರರಂಗದಲ್ಲಿ ಸುರಕ್ಷತಾ ಕ್ರಮಗಳ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಎದ್ದಿರುವ ಈ ಘಟನೆ ತಮಿಳು ಚಿತ್ರೋದ್ಯಮವನ್ನು ಬೆಚ್ಚಿಬೀಳಿಸಿದೆ.

ಚಾಮರಾಜನಗರ-ಚಿಕ್ಕಬಳ್ಳಾಪುರದಲ್ಲಿ ರಸ್ತೆ ದುರಂತ: ವೃದ್ಧ ದಂಪತಿ ಸೇರಿ 4 ಮಂದಿ ಬಲಿ

ಬೆಂಗಳೂರು: ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ನಾಲ್ವರು ಜೀವಗಳನ್ನು ಬಲಿ ಪಡೆದಿವೆ. ಅಪಘಾತಗಳಲ್ಲಿ 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮುಬಾರಕ್ (70) ಮತ್ತು 7 ತಿಂಗಳ ಮಗು ಸಾವನ್ನಪ್ಪಿವೆ. ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೊಂದು ದುರಂತ ಚಿಕ್ಕಬಳ್ಳಾಪುರ ಜಿಲ್ಲೆಯ ಸಾದಲಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಬಸ್ ಮತ್ತು ಟಿವಿಎಸ್ ಎಕ್ಸೇಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಲಕ್ಷ್ಮಣ್ (75) ಹಾಗೂ ಅವರ ಪತ್ನಿ ರತ್ನಮ್ಮ (70) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ದ್ವಿಚಕ್ರ ವಾಹನ ಸವಾರರು ದಿಢೀರ್ ರಸ್ತೆ ತಿರುವು ಪಡೆದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮೃತ ದಂಪತಿ ಶಿಡ್ಲಘಟ್ಟ ತಾಲ್ಲೂಕಿನ ತಿರುಕಾಚೇನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದರು.

ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೇಶಕ್ಕಾಗಿ ಅಲ್ಲ, ನನ್ನ ಖುಷಿಗಾಗಿ ಕ್ರಿಕೆಟ್ ಆಡಿದೆ: ಕಪಿಲ್ ದೇವ್ ಹೇಳಿಕೆ ವೈರಲ್

ಚೆನ್ನೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ತಮ್ಮ ಕ್ರಿಕೆಟ್ ಜೀವನದ ಕುರಿತು ನೀಡಿರುವ ಹೇಳಿಕೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ತಾವು ಕ್ರಿಕೆಟ್ ಆಡಿದ್ದು ದೇಶಕ್ಕಾಗಿ ಅಲ್ಲ, ಬದಲಾಗಿ ವೈಯಕ್ತಿಕ ಆಸಕ್ತಿ ಮತ್ತು ಸಂತೋಷಕ್ಕಾಗಿ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಚೆನ್ನೈನ ಮದ್ರಾಸ್ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕಪಿಲ್ ದೇವ್, ಫೆಡರಲ್ ಬ್ಯಾಂಕ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ಯಾಮ್ ಶ್ರೀನಿವಾಸನ್ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ತಮ್ಮ ಜೀವನದ ಹಲವು ಆಸಕ್ತಿಕರ ಸಂಗತಿಗಳನ್ನು ಹಂಚಿಕೊಂಡರು.

“ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಾನು ಕ್ರಿಕೆಟ್ ಆಡಿದ್ದು ನನ್ನ ವೈಯಕ್ತಿಕ ಕಾರಣಕ್ಕಾಗಿ. ಕ್ರಿಕೆಟ್ ಆಡುವುದರಿಂದ ನನಗೆ ಸಂತೋಷ ಸಿಗುತ್ತಿತ್ತು. ಯಾರಾದರೂ ನಾನು ದೇಶಕ್ಕಾಗಿ ಕ್ರಿಕೆಟ್ ಆಡಿದೆ ಎಂದು ಹೇಳಿದರೆ ಅದು ಸತ್ಯವಲ್ಲ. ಪ್ರತಿಯೊಬ್ಬ ಕ್ರೀಡಾಪಟುವೂ ಮೊದಲು ತನ್ನ ಕನಸು, ತನ್ನ ಸಂತೋಷ ಮತ್ತು ತನ್ನ ಸಾಧನೆಗಾಗಿ ಆಡುತ್ತಾನೆ. ನಾವು ನಮಗಾಗಿ ಆಡುತ್ತೇವೆ, ಅದೇ ನಿಜ” ಎಂದು ಕಪಿಲ್ ದೇವ್ ಹೇಳಿದರು.

ಇದೇ ವೇಳೆ ತಮ್ಮ ಬಾಲ್ಯದ ದಿನಗಳನ್ನು ನೆನೆಸಿಕೊಂಡ ಅವರು, ಓದಿನಲ್ಲಿ ಹೆಚ್ಚು ಆಸಕ್ತಿ ಇರಲಿಲ್ಲ ಎಂದು ನಗುತ್ತಾ ಹೇಳಿದರು. “ನಾನು ಓದಿನಲ್ಲಿ ತುಂಬಾ ದುರ್ಬಲನಾಗಿದ್ದೆ. ಶಾಲೆಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕ್ರೀಡೆಗಳು ನನಗೆ ಸಹಾಯ ಮಾಡುತ್ತಿದ್ದವು. ಆರಂಭದಲ್ಲಿ ಭಾರತ ತಂಡದ ಪರ ಆಡಬೇಕು ಎಂಬ ಕನಸೂ ಇರಲಿಲ್ಲ” ಎಂದು ಹೇಳಿದರು.

“ಆ ದಿನಗಳಲ್ಲಿ ಫುಟ್ಬಾಲ್ ಆಡಿದರೆ ಕೇವಲ ಒಂದು ಗಂಟೆ ಮಾತ್ರ ತರಗತಿಯಿಂದ ಹೊರಗಿರಬಹುದಿತ್ತು. ಆದರೆ ಕ್ರಿಕೆಟ್ ಆಡಿದರೆ ಹಲವು ದಿನಗಳ ಕಾಲ ಶಾಲಾ ತರಗತಿಗಳಿಂದ ದೂರ ಇರಬಹುದಿತ್ತು. ಅದಕ್ಕಾಗಿಯೇ ಮೊದಲಿಗೆ ಕ್ರಿಕೆಟ್ ಕಡೆಗೆ ಆಕರ್ಷಿತನಾದೆ. ನಂತರ ಅದೇ ನನ್ನ ಜೀವನದ ದಾರಿಯನ್ನು ಬದಲಿಸಿತು” ಎಂದು ಕಪಿಲ್ ದೇವ್ ಹಾಸ್ಯಮಿಶ್ರಿತವಾಗಿ ನೆನಪಿಸಿಕೊಂಡರು.

error: Content is protected !!