Home Blog

ಶಿರಹಟ್ಟಿ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮತದಾರರ ಪಟ್ಟಿಗಳ ಸಮಗ್ರ ವಿಶೇಷ ಪರಿಷ್ಕರಣೆ-2026ರ ಬಳಿಕ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದುಹಾಕುವಿಕೆ ಸೇರಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಮತದಾರರು ಅರ್ಜಿ ಸಲ್ಲಿಸಬಹುದು ಎಂದು ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಹೇಳಿದರು.

 

ಸೋಮವಾರ ಶಿರಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರಡು ಮತದಾರರ ಪಟ್ಟಿ ಪ್ರಕಟಿಸುವ ಕುರಿತು ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಶಿರಹಟ್ಟಿ ಮತಕ್ಷೇತ್ರದಲ್ಲಿ ಈ ಹಿಂದೆ 252 ಮತಗಟ್ಟೆಗಳಿದ್ದು, 1,200ಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಪ್ರದೇಶಗಳಲ್ಲಿ ಹೊಸದಾಗಿ ಏಳು ಮತಗಟ್ಟೆಗಳನ್ನು ರಚಿಸಲಾಗಿದೆ. ಶಿವಾಜಿನಗರ, ಕುಂದ್ರಳ್ಳಿ, ರಾಮಗೇರಿ, ಆದ್ರಳ್ಳಿ, ಹರದಗಟ್ಟಿ, ಹುಲ್ಲೂರು ಹಾಗೂ ಕೋಗನೂರುಗಳಲ್ಲಿ ಹೊಸ ಮತಗಟ್ಟೆಗಳು ರಚನೆಯಾಗಿದ್ದು, ಒಟ್ಟು ಮತಗಟ್ಟೆಗಳ ಸಂಖ್ಯೆ 259ಕ್ಕೆ ಏರಿಕೆಯಾಗಿದೆ ಎಂದರು.

 

ಕರಡು ಮತದಾರರ ಪಟ್ಟಿ ಪ್ರಕಟಕ್ಕೂ ಮುನ್ನ ಕ್ಷೇತ್ರದಲ್ಲಿ 2,30,268 ಮತದಾರರಿದ್ದರು. ಎಎಸ್‌ಡಿಡಿಒ ಪಟ್ಟಿಯ ಪರಿಷ್ಕರಣೆ ಬಳಿಕ ಕರಡು ಪಟ್ಟಿಯಲ್ಲಿ ಮತದಾರರ ಸಂಖ್ಯೆ 2,00,419ಕ್ಕೆ ಇಳಿಕೆಯಾಗಿದೆ. ಕ್ಷೇತ್ರದಲ್ಲಿ ಒಟ್ಟು 4,339 ಅನಾಮಲಿ ಪ್ರಕರಣಗಳು ಹಾಗೂ 1,464 ನೋ ಮ್ಯಾಪಿಂಗ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಒಟ್ಟು 4,804 ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

 

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತೆಗೆದುಹಾಕುವಿಕೆ ಸೇರಿದಂತೆ ಸಂಬಂಧಿಸಿದ ವಿಚಾರಣೆ ಹಾಗೂ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಆ.24ರಿಂದ ಅ.26ರವರೆಗೆ ನಡೆಯಲಿದೆ. ಈ ಪ್ರಕ್ರಿಯೆಗಾಗಿ 16 ಎಇಆರ್‌ಒಗಳನ್ನು ನೇಮಕ ಮಾಡಲಾಗಿದೆ ಎಂದರು.

 

ಸಭೆಯಲ್ಲಿ ಶಿರಹಟ್ಟಿ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ಲಕ್ಷ್ಮೇಶ್ವರ ತಹಶೀಲ್ದಾರ್ ಧನಂಜಯ, ಸುಜಾತಾ ದೊಡ್ಡಮನಿ, ಶಂಕರ ಮರಾಠೆ, ಬಸವರಾಜ ವಡವಿ, ಶರಣಪ್ಪ ಹೂಗಾರ, ಎಸ್.ಎಸ್. ಅಸ್ಕಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

 

ಜಯಘೋಷ, ಭಕ್ತಿಭಾವದ ನಡುವೆ ರಥ ಎಳೆದ ಮಹಿಳೆಯರು

0
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಭಕ್ತಿಭಾವ, ಜಯಘೋಷ ಹಾಗೂ ಮಹಿಳೆಯರ ಉತ್ಸಾಹಭರಿತ ಪಾಲ್ಗೊಳ್ಳುವಿಕೆಗೆ ಸಾಕ್ಷಿಯಾಗಿ ಸಮೀಪದ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂ. ಗುರು ಅನ್ನದಾನ ಸ್ವಾಮಿಗಳವರ 49ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಬೆಳ್ಳಿ ರಥೋತ್ಸವ ಸೋಮವಾರ ಸಂಜೆ ವೈಭವದಿಂದ ಜರುಗಿತು.
ಪುಣ್ಯಸ್ಮರಣೋತ್ಸವದ ಅಂಗವಾಗಿ ಮಹಿಳಾ ಆರೋಗ್ಯ ಶಿಬಿರ, ಉಡಿ ತುಂಬುವ ಸಮಾರಂಭ ಹಾಗೂ ಬೆಳ್ಳಿ ರಥೋತ್ಸವ ಆಯೋಜಿಸಲಾಗಿತ್ತು. ಹಾಲಕೆರೆ ಕ್ಷೇತ್ರಕ್ಕೆ ಆಗಮಿಸಿದ್ದ ವಿವಿಧ ಮಠಗಳ ಹಿರಿ-ಕಿರಿಯ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಹಾಲಕೆರೆ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಬೆಳ್ಳಿ ರಥಕ್ಕೆ ವಿಶೇಷ ಪೂಜೆ ನೆರವೇರಿಸಲಾಯಿತು.
ಬಳಿಕ ಸಂಜೆ 6 ಗಂಟೆಗೆ ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಬೆಳ್ಳಿ ರಥೋತ್ಸವಕ್ಕೆ ಚಾಲನೆ ನೀಡಿದರು. ಚಾಲನೆ ದೊರೆಯುತ್ತಿದ್ದಂತೆ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಭಕ್ತಿಭಾವದಿಂದ ರಥದ ಹಗ್ಗ ಹಿಡಿದು ರಥವನ್ನು ಎಳೆದು ಸಂಭ್ರಮಿಸಿದರು.
ರಥ ಸಾಗುತ್ತಿದ್ದಂತೆ ‘ಅನ್ನದಾನೇಶ್ವರ ಮಹಾರಾಜ್ ಕೀ ಜೈ’, ‘ಗುರು ಕುಮಾರೇಶ್ವರ ಮಹಾರಾಜ್ ಕೀ ಜೈ’, ‘ಲಿಂ. ಗುರು ಅನ್ನದಾನ ಸ್ವಾಮೀಜಿ ಕೀ ಜೈ’, ‘ಲಿಂ. ಅಭಿನವ ಅನ್ನದಾನ ಸ್ವಾಮೀಜಿ ಕೀ ಜೈ’ ಹಾಗೂ ‘ಮುಪ್ಪಿನ ಬಸವಲಿಂಗ ಸ್ವಾಮೀಜಿ ಕೀ ಜೈ’ ಎಂಬ ಜಯಘೋಷಗಳು ಮೊಳಗಿದವು. ಭಕ್ತರ ಜಯಘೋಷದಿಂದ ಇಡೀ ಕ್ಷೇತ್ರವು ಆಧ್ಯಾತ್ಮಿಕ ವಾತಾವರಣದಲ್ಲಿ ಮಿಂದೆದ್ದಿತು.
ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಳ್ಳಿ ರಥ ಎಳೆದದ್ದು ರಥೋತ್ಸವದ ವಿಶೇಷ ಆಕರ್ಷಣೆಯಾಗಿತ್ತು. ಮಹಿಳೆಯರೊಂದಿಗೆ ವಿದ್ಯಾರ್ಥಿನಿಯರೂ ಉತ್ಸಾಹದಿಂದ ರಥ ಎಳೆದು ಭಕ್ತಿಭಾವ ಮೆರೆದರು. ಮಹಿಳೆಯರ ಶ್ರದ್ಧಾಭಕ್ತಿಯ ಪಾಲ್ಗೊಳ್ಳುವಿಕೆ ರಥೋತ್ಸವಕ್ಕೆ ಮತ್ತಷ್ಟು ಮೆರುಗು ತಂದಿತು.
ರಥೋತ್ಸವ ಯಶಸ್ವಿಯಾಗಿ ಪೂರ್ಣಗೊಂಡು ಬೆಳ್ಳಿ ರಥ ಸ್ವಸ್ಥಳಕ್ಕೆ ಮರಳಿದಾಗ ಭಕ್ತರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಮಹಿಳೆಯರು ಹಾಗೂ ಭಕ್ತರು ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾಭಕ್ತಿ ಸಮರ್ಪಿಸಿದರು.
ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ರಾಯಚೂರು ಹಾಗೂ ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ರಥೋತ್ಸವದ ಹಿನ್ನೆಲೆಯಲ್ಲಿ ಹಾಲಕೆರೆ ಕ್ಷೇತ್ರವು ಭಕ್ತರಿಂದ ಕಿಕ್ಕಿರಿದು, ಜಯಘೋಷಗಳಿಂದ ಮೊಳಗುತ್ತಿತ್ತು.
ಮಹಿಳೆಯರ ಭಕ್ತಿ, ವಿದ್ಯಾರ್ಥಿನಿಯರ ಉತ್ಸಾಹ ಹಾಗೂ ಭಕ್ತರ ಜಯಘೋಷಗಳ ನಡುವೆ ನಡೆದ ಹಾಲಕೆರೆ ಬೆಳ್ಳಿ ರಥೋತ್ಸವವು ಲಿಂ. ಗುರು ಅನ್ನದಾನ ಸ್ವಾಮಿಗಳವರ ಪುಣ್ಯಸ್ಮರಣೋತ್ಸವಕ್ಕೆ ಭಕ್ತಿಯ ಮೆರುಗು ನೀಡಿತು.

ಭೀಕರ ಪ್ರವಾಹಕ್ಕೆ ನೇಪಾಳ ತತ್ತರ; ‘ಸಾಧ್ಯವಿರುವ ಎಲ್ಲ ನೆರವು ನೀಡುತ್ತೇವೆ’ ಎಂದ ಮೋದಿ!

0

ನವದೆಹಲಿ: ಭೀಕರ ಪ್ರವಾಹದಿಂದ ತತ್ತರಿಸಿರುವ ನೇಪಾಳಕ್ಕೆ ಭಾರತ ನೆರವಿನ ಹಸ್ತ ಚಾಚಿದೆ.

ಪ್ರವಾಹದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಸಂಕಷ್ಟದ ಸಮಯದಲ್ಲಿ ನೇಪಾಳದೊಂದಿಗೆ ಭಾರತ ಗಟ್ಟಿಯಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.

ಬುಧವಾರ ನೇಪಾಳ ಪ್ರಧಾನಿ ಬಾಲೆನ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಮಾಹಿತಿ ಪಡೆದರು. ನೇಪಾಳಕ್ಕೆ ಅಗತ್ಯವಿರುವ ಎಲ್ಲ ನೆರವು ಹಾಗೂ ಪರಿಹಾರ ಸಹಾಯ ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದ್ದಾರೆ.

ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಎರಡು ಜಿಲ್ಲೆಗಳಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಪ್ರವಾಹದಲ್ಲಿ ಕನಿಷ್ಠ 22 ಮಂದಿ ಮೃತಪಟ್ಟಿದ್ದು, ಸುಮಾರು 400 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನದಿ ತೀರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಹಲವಾರು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಭಾರತವು ನೇಪಾಳದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಭಾರತೀಯ ವಾಯುಪಡೆಯ ವಿಮಾನಗಳ ಮೂಲಕ ಔಷಧಿ, ಆಹಾರ ಹಾಗೂ ಅಗತ್ಯ ವಸ್ತುಗಳನ್ನು ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಕ್ಕೆ ನೆರವಾಗಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿಯನ್ನು ನೇಪಾಳಕ್ಕೆ ಕಳುಹಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ.

105 ಭಾರತೀಯರು ಸೇರಿದಂತೆ 291 ವಿದೇಶಿಯರು ನಾಪತ್ತೆ:

ರಸುವಾ ಪ್ರದೇಶದ ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದ ಬಳಿಕ 105 ಭಾರತೀಯರು ಸೇರಿದಂತೆ 291 ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿ ಮಾಹಿತಿ ನೀಡಿದೆ.

ಒಟ್ಟು 384 ಪ್ರಯಾಣಿಕರು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅವರಲ್ಲಿ 291 ವಿದೇಶಿ ಪ್ರಜೆಗಳು ಹಾಗೂ 93 ನೇಪಾಳಿ ಪ್ರಜೆಗಳು ಸೇರಿದ್ದಾರೆ.

ನಾಪತ್ತೆಯಾಗಿರುವವರ ಕುಟುಂಬಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ಭಾರತೀಯರನ್ನು ಸುರಕ್ಷಿತವಾಗಿ ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ. ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯೂ ತುರ್ತು ಸಂಪರ್ಕ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಹೈಡ್ರಾಮಾ..! ವ್ಯಕ್ತಿಗೆ ಹಲ್ಲೆ, ಠಾಣೆ ಮುಂದೆ ಜಮಾಯಿಸಿದ ಹಿಂದೂ ಕಾರ್ಯಕರ್ತರು

0

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ನಗರದ ಬಸವನಗುಡಿಯ ಕೆ.ಆರ್. ರಸ್ತೆಯಲ್ಲಿ ನಡೆದಿದೆ.

ಪುನೀತ್ ಕೆರೆಹಳ್ಳಿ ಅವರ ಕಚೇರಿ ಎದುರು ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಮುರಳಿ ಎಂಬ ವ್ಯಕ್ತಿಯ ಮೇಲೆ ಗುಂಪು ಹಲ್ಲೆ ನಡೆಸಿದ್ದು, ಗಾಯಗೊಂಡು ರಕ್ತಸ್ರಾವವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಘಟನೆಯನ್ನು ಖಂಡಿಸಿ ಪುನೀತ್ ಕೆರೆಹಳ್ಳಿ ಪ್ರತಿಭಟನೆ ನಡೆಸಿದ್ದು, ಬಳಿಕ ಹಿಂದೂ ಪರ ಕಾರ್ಯಕರ್ತರು ಬಸವನಗುಡಿ ಪೊಲೀಸ್ ಠಾಣೆ ಎದುರು ಜಮಾಯಿಸಿದ್ದರು. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದೆ ಎನ್ನಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಮೆರವಣಿಗೆಯಲ್ಲಿ ಮುಸ್ಲಿಂ ಮುಖಂಡರು ಬೀಸುತ್ತಿದ್ದ ಬಾವುಟ ಮುರಳಿಗೆ ತಾಗಿ ಗಲಾಟೆ ಆರಂಭವಾಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: 23 ವರ್ಷದ ಯೂಟ್ಯೂಬರ್ ಹಾಗೂ ತಾಯಿ ಸ್ಥಳದಲ್ಲೇ ಸಾವು!

0

ಮಧ್ಯಪ್ರದೇಶ: ಟ್ರಕ್‌ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ 23 ವರ್ಷದ ಯೂಟ್ಯೂಬರ್ ಹಾಗೂ ಅವರ ತಾಯಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ನಡೆದಿದೆ.

ಉಜ್ಜಯಿನಿ-ಗರೋತ್ ಹೆದ್ದಾರಿಯ ರಾಮಖೇಡಿ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಎರ್ಟಿಗಾ ಕಾರು ಮುಂದೆ ಸಾಗುತ್ತಿದ್ದ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಟ್ರಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದೆ.

ಮೃತರನ್ನು ಉತ್ತರ ಪ್ರದೇಶದ ನಿವಾಸಿಗಳಾದ 50 ವರ್ಷದ ಸಾರಿಕಾ ಹಾಗೂ ಅವರ 23 ವರ್ಷದ ಪುತ್ರಿ ಛವಿ ವರ್ಶ್ನಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕಾರಿನ ಅವಶೇಷಗಳಲ್ಲಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಗಾಯಾಳುಗಳನ್ನು ಬರೋಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಸಾರಿಕಾ ಹಾಗೂ ಛವಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಅಪಘಾತದಲ್ಲಿ ಛವಿ ಅವರ ತಂದೆ 54 ವರ್ಷದ ಶ್ಯಾಮಲಾಲ್, ಸಂಬಂಧಿ ಸೂರಜ್‌ಪಾಲ್ ಹಾಗೂ ಕಾರು ಚಾಲಕ ಸಚಿನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಮೂವರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬವು ಸೋಮವಾರ ರಾತ್ರಿ ಉಜ್ಜಯಿನಿಗೆ ತೀರ್ಥಯಾತ್ರೆಗೆ ತೆರಳಿತ್ತು. ಈ ವೇಳೆ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ಛವಿ ವರ್ಶ್ನಿ ಜನಪ್ರಿಯ ಯೂಟ್ಯೂಬರ್ ಆಗಿದ್ದರು. ಅವರ ಯೂಟ್ಯೂಬ್ ಚಾನೆಲ್‌ಗೆ 7 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದು, ಇನ್‌ಸ್ಟಾಗ್ರಾಂನಲ್ಲಿ ಒಂದು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದರು.

ಛವಿ ಅವರು 2021ರಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದರು. ಆರಂಭದಲ್ಲಿ ದೈನಂದಿನ ಜೀವನಕ್ಕೆ ಸಂಬಂಧಿಸಿದ ವ್ಲಾಗ್‌ಗಳನ್ನು ಪ್ರಕಟಿಸುತ್ತಿದ್ದ ಅವರು, ಬಳಿಕ ಆನ್‌ಲೈನ್ ಗೇಮಿಂಗ್‌ಗೆ ಸಂಬಂಧಿಸಿದ ವಿಡಿಯೋಗಳನ್ನೂ ಮಾಡುತ್ತಿದ್ದರು.

ಪದವಿ ಶಿಕ್ಷಣ ಪೂರ್ಣಗೊಳಿಸಿದ್ದ ಛವಿ ವಿದ್ಯಾಭ್ಯಾಸದಲ್ಲೂ ಉತ್ತಮ ಸಾಧನೆ ಮಾಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿಭಿನ್ನವಾಗಿ ಏನಾದರೂ ಸಾಧಿಸಬೇಕೆಂಬ ಆಸಕ್ತಿ ಹೊಂದಿದ್ದ ಅವರಿಗೆ ಕುಟುಂಬದವರು ಸಾಮಾಜಿಕ ಜಾಲತಾಣದ ವೃತ್ತಿಜೀವನಕ್ಕೆ ಸಂಪೂರ್ಣ ಬೆಂಬಲ ನೀಡಿದ್ದರು ಎನ್ನಲಾಗಿದೆ.

ಈ ಕುರಿತು ಬರೋಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಾರು ಟ್ರಕ್‌ಗೆ ಡಿಕ್ಕಿ ಹೊಡೆಯಲು ವೇಗ, ಚಾಲಕರ ನಿರ್ಲಕ್ಷ್ಯ ಸೇರಿದಂತೆ ಇತರ ಕಾರಣಗಳಿದ್ದವೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಹಾಲು, ಪನೀರ್, ಮಸಾಲೆ, ಎಣ್ಣೆ ಖರೀದಿಸುವ ಮುನ್ನ ಎಚ್ಚರ! ಈ ಮಾಹಿತಿ ತಿಳಿಯಿರಿ

0

ಬೆಳಗ್ಗೆ ಎದ್ದ ತಕ್ಷಣ ಬಳಸುವ ಟೂತ್‌ಪೇಸ್ಟ್‌ನಿಂದ ರಾತ್ರಿ ಮಲಗುವ ಮುನ್ನ ಬಳಸುವ ರೂಮ್ ಫ್ರೆಶನರ್‌ವರೆಗೆ ದಿನನಿತ್ಯದ ಹಲವು ವಸ್ತುಗಳ ಗುಣಮಟ್ಟದ ಬಗ್ಗೆ ಗ್ರಾಹಕರು ಎಚ್ಚರಿಕೆ ವಹಿಸುವ ಅಗತ್ಯವಿದೆ.

ಆಹಾರ ಪದಾರ್ಥಗಳಲ್ಲಿನ ಕಲಬೆರಕೆ, ತಪ್ಪು ಲೇಬಲಿಂಗ್, ಕಳಪೆ ಗುಣಮಟ್ಟ ಅಥವಾ ಉತ್ಪನ್ನದ ಬಗ್ಗೆ ನೀಡುವ ತಪ್ಪು ಮಾಹಿತಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ವಿಶೇಷವಾಗಿ ಹಾಲು, ಪನೀರ್, ಖೋವಾ, ಮಸಾಲೆ, ಅಡುಗೆ ಎಣ್ಣೆ ಹಾಗೂ ಜೇನುತುಪ್ಪ ಖರೀದಿಸುವಾಗ ಹೆಚ್ಚಿನ ಜಾಗರೂಕತೆ ಅಗತ್ಯ. ‘ಆರ್ಗ್ಯಾನಿಕ್’, ‘ನ್ಯಾಚುರಲ್’, ‘100% ನ್ಯಾಚುರಲ್’, ‘ಫಾರ್ಮ್ ಫ್ರೆಶ್’ ಎಂಬ ಪದಗಳನ್ನು ಕಂಡ ತಕ್ಷಣ ಉತ್ಪನ್ನ ಸುರಕ್ಷಿತ ಎಂದು ಭಾವಿಸದೆ, ಪ್ಯಾಕೆಟ್‌ನಲ್ಲಿರುವ ಲೇಬಲ್, ಪದಾರ್ಥಗಳ ಪಟ್ಟಿ, ಪ್ರಮಾಣ, ತಯಾರಿಕಾ ದಿನಾಂಕ, ಅವಧಿ ಮುಕ್ತಾಯ ದಿನಾಂಕ ಹಾಗೂ ಆಹಾರ ಸುರಕ್ಷತಾ ಮಾಹಿತಿಯನ್ನು ಪರಿಶೀಲಿಸುವುದು ಮುಖ್ಯ.

ಆಹಾರ ಮಾತ್ರವಲ್ಲ, ಇತರ ಉತ್ಪನ್ನಗಳಲ್ಲೂ ಎಚ್ಚರಿಕೆ ಅಗತ್ಯ:

ಕಲಬೆರಕೆ ಎಂಬುದು ಕೇವಲ ಆಹಾರ ಪದಾರ್ಥಗಳಿಗೆ ಸೀಮಿತವಾಗಿಲ್ಲ. ಟೂತ್‌ಪೇಸ್ಟ್, ಸಾಬೂನು, ಶಾಂಪೂ, ಕಾಸ್ಮೆಟಿಕ್ಸ್ ಹಾಗೂ ಸುಗಂಧ ಉತ್ಪನ್ನಗಳನ್ನು ಖರೀದಿಸುವಾಗಲೂ ಅವುಗಳಲ್ಲಿರುವ ಪದಾರ್ಥಗಳು ಮತ್ತು ಲೇಬಲ್ ಮಾಹಿತಿಯನ್ನು ಪರಿಶೀಲಿಸುವುದು ಉತ್ತಮ.

ಟೂತ್‌ಪೇಸ್ಟ್‌ನಲ್ಲಿ ಫ್ಲೋರೈಡ್, ಕ್ಯಾಲ್ಸಿಯಂ ಕಾರ್ಬೊನೇಟ್ ಸೇರಿದಂತೆ ವಿವಿಧ ಪದಾರ್ಥಗಳಿರಬಹುದು. ಸಾಬೂನು ಮತ್ತು ಶಾಂಪೂಗಳಲ್ಲಿ ಸರ್ಫ್ಯಾಕ್ಟೆಂಟ್‌ಗಳು, ಸುಗಂಧ ಪದಾರ್ಥಗಳು, ಸಂರಕ್ಷಕಗಳು ಹಾಗೂ ಇತರ ರಾಸಾಯನಿಕಗಳು ಇರಬಹುದು. ಈ ಪದಾರ್ಥಗಳಿರುವುದೇ ಅಪಾಯಕಾರಿ ಎಂದಲ್ಲ. ಅವು ನಿಗದಿತ ಮಾನದಂಡಗಳಿಗೆ ಅನುಗುಣವಾಗಿವೆಯೇ ಹಾಗೂ ಲೇಬಲ್‌ನಲ್ಲಿ ಸರಿಯಾದ ಮಾಹಿತಿ ನೀಡಲಾಗಿದೆಯೇ ಎಂಬುದು ಮುಖ್ಯ.

ಹಾಲು, ಪನೀರ್, ಖೋವಾ ಖರೀದಿಸುವಾಗ ಎಚ್ಚರಿಕೆ:

ಹಾಲಿನಲ್ಲಿ ನೀರು ಅಥವಾ ಇತರ ಅಸಮರ್ಪಕ ಪದಾರ್ಥಗಳನ್ನು ಸೇರಿಸುವ ಕಲಬೆರಕೆ ಪ್ರಕರಣಗಳು ವರದಿಯಾಗುತ್ತಲೇ ಇವೆ. ಪನೀರ್ ಮತ್ತು ಖೋವಾ ಕೂಡ ಆಹಾರ ಸುರಕ್ಷತಾ ತಪಾಸಣೆಯ ವ್ಯಾಪ್ತಿಗೆ ಬರುತ್ತವೆ. ಹೀಗಾಗಿ ಪ್ಯಾಕ್ ಮಾಡಿದ ಆಹಾರ ಖರೀದಿಸುವಾಗ ಕೇವಲ ಬೆಲೆ ಅಥವಾ ಬ್ರ್ಯಾಂಡ್‌ಗೆ ಆದ್ಯತೆ ನೀಡದೆ, ಲೇಬಲ್ ಮತ್ತು ಆಹಾರ ಸುರಕ್ಷತಾ ವಿವರಗಳನ್ನು ಪರಿಶೀಲಿಸಬೇಕು.

ಮಸಾಲೆಗಳಲ್ಲಿ ಕಲಬೆರಕೆ ಸಾಧ್ಯತೆ:

ಅರಿಶಿನ ಮತ್ತು ಮೆಣಸಿನ ಪುಡಿ ಸೇರಿದಂತೆ ಪುಡಿ ಮಾಡಿದ ಮಸಾಲೆಗಳಲ್ಲಿ ಕಡಿಮೆ ಬೆಲೆಯ ವಸ್ತುಗಳು ಅಥವಾ ಕೃತಕ ಬಣ್ಣಗಳನ್ನು ಸೇರಿಸುವ ಸಾಧ್ಯತೆಯಿದೆ. ಇಂತಹ ಕಲಬೆರಕೆಯನ್ನು ಬರಿಗಣ್ಣಿನಿಂದ ಗುರುತಿಸುವುದು ಕಷ್ಟವಾಗಬಹುದು. ಆದ್ದರಿಂದ ವಿಶ್ವಾಸಾರ್ಹ ಬ್ರ್ಯಾಂಡ್‌ಗಳ ಹಾಗೂ ಸರಿಯಾದ ಲೇಬಲಿಂಗ್ ಹೊಂದಿರುವ ಉತ್ಪನ್ನಗಳನ್ನು ಆಯ್ಕೆ ಮಾಡುವುದು ಉತ್ತಮ.

ಅಡುಗೆ ಎಣ್ಣೆ, ಜೇನುತುಪ್ಪದಲ್ಲೂ ಎಚ್ಚರಿಕೆ:

ದುಬಾರಿ ಅಡುಗೆ ಎಣ್ಣೆಗೆ ಅಗ್ಗದ ಎಣ್ಣೆ ಬೆರೆಸುವುದು ಆಹಾರ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಯಾಗಬಹುದು. ಜೇನುತುಪ್ಪದಲ್ಲೂ ಸಕ್ಕರೆ ಸಿರಪ್‌ನಂತಹ ಪದಾರ್ಥಗಳನ್ನು ಸೇರಿಸುವ ಬಗ್ಗೆ ಹಲವು ಸಂದರ್ಭಗಳಲ್ಲಿ ಚರ್ಚೆಗಳು ನಡೆದಿವೆ. ಹೀಗಾಗಿ ‘ನ್ಯಾಚುರಲ್’ ಅಥವಾ ‘ಪ್ಯೂರ್’ ಎಂಬ ಪದಗಳನ್ನು ಮಾತ್ರ ನಂಬದೆ ಉತ್ಪನ್ನದ ಸಂಪೂರ್ಣ ಮಾಹಿತಿಯನ್ನು ಓದಬೇಕು.

ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡಿದರೂ ಎಚ್ಚರಿಕೆ ಅಗತ್ಯ:

ಆನ್‌ಲೈನ್‌ನಲ್ಲಿ ಆಹಾರ ಆರ್ಡರ್ ಮಾಡುವುದರಿಂದ ಆಹಾರ ಸುರಕ್ಷತೆಯ ಬಗ್ಗೆ ಇರುವ ಎಲ್ಲ ಆತಂಕಗಳು ದೂರವಾಗುವುದಿಲ್ಲ. ಆಹಾರದ ಹೈಜೀನ್, ಸಂಗ್ರಹಣೆ, ತಾಜಾತನ, ಲೇಬಲಿಂಗ್ ಹಾಗೂ ಆಹಾರ ಸುರಕ್ಷತಾ ನಿಯಮಗಳ ಪಾಲನೆ ಕೂಡ ಮುಖ್ಯ. ಆ್ಯಪ್‌ನಲ್ಲಿ ರೆಸ್ಟೋರೆಂಟ್ ಕಾಣಿಸುತ್ತಿದೆ ಎಂಬ ಕಾರಣಕ್ಕೆ ಅಲ್ಲಿನ ಆಹಾರ ಸುರಕ್ಷಿತ ಎಂದು ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ. ಸಾಧ್ಯವಾದಷ್ಟು ವಿಶ್ವಾಸಾರ್ಹ ಆಹಾರ ಸಂಸ್ಥೆಗಳಿಂದ ಆರ್ಡರ್ ಮಾಡುವುದು ಉತ್ತಮ.

ರೂಮ್ ಫ್ರೆಶನರ್ ಬಳಕೆಯಲ್ಲೂ ಎಚ್ಚರಿಕೆ:

ಮನೆಗೆ ಸುಗಂಧ ನೀಡಲು ರೂಮ್ ಫ್ರೆಶನರ್, ಡಿಫ್ಯೂಸರ್ ಅಥವಾ ಫ್ರೆಗ್ರನ್ಸ್ ಆಯಿಲ್ ಬಳಸುವುದು ಸಾಮಾನ್ಯ. ಕೆಲವು ಸುಗಂಧ ಉತ್ಪನ್ನಗಳಲ್ಲಿ ವಿವಿಧ ರಾಸಾಯನಿಕ ಸಂಯುಕ್ತಗಳಿರಬಹುದು. ಇವು ಎಲ್ಲರಿಗೂ ಅಪಾಯಕಾರಿ ಎಂದಲ್ಲ. ಆದರೆ ತೀವ್ರವಾದ ಸುಗಂಧದಿಂದ ಕೆಲವು ಸೂಕ್ಷ್ಮ ವ್ಯಕ್ತಿಗಳಲ್ಲಿ ತಲೆನೋವು, ಕಿರಿಕಿರಿ ಅಥವಾ ಉಸಿರಾಟದ ತೊಂದರೆ ಉಂಟಾಗುವ ಸಾಧ್ಯತೆಯಿದೆ.

ಹೀಗಾಗಿ ಯಾವುದೇ ಉತ್ಪನ್ನ ಖರೀದಿಸುವ ಮುನ್ನ ಅದರ ಲೇಬಲ್ ಮತ್ತು ಬಳಕೆಯ ಸೂಚನೆಗಳನ್ನು ಓದುವುದು, ಅಗತ್ಯವಿದ್ದಲ್ಲಿ ಸರಿಯಾದ ಗಾಳಿಯ ಸಂಚಾರ ಇರುವಂತೆ ನೋಡಿಕೊಳ್ಳುವುದು ಉತ್ತಮ.

ಯಾವುದೇ ಉತ್ಪನ್ನವನ್ನು ‘ಕಲಬೆರಕೆ’ ಎಂದು ನಿರ್ಧರಿಸುವ ಮೊದಲು ಅಧಿಕೃತ ಆಹಾರ ಸುರಕ್ಷತಾ ಪರೀಕ್ಷೆ ಅಥವಾ ಸಂಬಂಧಿತ ಅಧಿಕಾರಿಗಳ ಮಾಹಿತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು. ಪ್ರತಿಯೊಂದು ರಾಸಾಯನಿಕ ಪದಾರ್ಥವೂ ಅಪಾಯಕಾರಿ ಎಂದಲ್ಲ; ಅದರ ಪ್ರಮಾಣ, ಬಳಕೆ ಹಾಗೂ ಸುರಕ್ಷತಾ ಮಾನದಂಡಗಳು ಮುಖ್ಯ.

ಬಾಯಲ್ಲೇ ಚಿನ್ನದ ಕ್ಯಾಪ್ಸೂಲ್: ದುಬೈನಿಂದ ಬಂದ ಪ್ರಯಾಣಿಕನಿಂದ 82 ಗ್ರಾಂ ಗೋಲ್ಡ್ ಪತ್ತೆ, ಏರ್‌ಪೋರ್ಟ್‌ನಲ್ಲಿ ಹೈಡ್ರಾಮಾ

0

ಬೆಂಗಳೂರು: ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಪ್ರಯಾಣಿಕನೊಬ್ಬ ಅನುಸರಿಸಿದ್ದ ವಿಚಿತ್ರ ಮಾರ್ಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಯಲಾಗಿದೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಬಾಯಿಯಲ್ಲಿ ಬರೋಬ್ಬರಿ 82 ಗ್ರಾಂ ಚಿನ್ನ ಪತ್ತೆಯಾಗಿದ್ದು, CISF ಸಿಬ್ಬಂದಿಯ ಸಮಯೋಚಿತ ಅನುಮಾನದಿಂದ ಕಳ್ಳಸಾಗಣೆ ಪ್ರಯತ್ನ ಬಯಲಾಗಿದೆ.

ಮಹಮ್ಮದ್ ಸಿರಾಜ್ ಎಂಬಾತ ದುಬೈನಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿದಿದ್ದ. ಬಳಿಕ ಬೆಂಗಳೂರಿನಿಂದ ಗಾಜಿಯಾಬಾದ್‌ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ. ಈ ವೇಳೆ ವಿಮಾನ ನಿಲ್ದಾಣದಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಗೆ ಆತನ ವರ್ತನೆ ಅನುಮಾನಾಸ್ಪದವಾಗಿ ಕಂಡುಬಂದಿದೆ.

CISF ಸಿಬ್ಬಂದಿ ಆತನನ್ನು ಪರಿಶೀಲಿಸಿದರೂ ಆರಂಭದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ. ಬಳಿಕ ಬಾಯಿಯನ್ನು ಪರಿಶೀಲಿಸಿದಾಗ ಎರಡು ಚಿನ್ನದ ಕ್ಯಾಪ್ಸೂಲ್‌ಗಳು ಪತ್ತೆಯಾಗಿವೆ. ಅವುಗಳಲ್ಲಿ ಒಟ್ಟು 82 ಗ್ರಾಂ ಚಿನ್ನ ಇತ್ತು ಎನ್ನಲಾಗಿದೆ.

ಬಾಡಿ ಸ್ಕ್ಯಾನರ್‌ನಲ್ಲಿ ಚಿನ್ನ ಪತ್ತೆಯಾಗದಂತೆ ಮಾಡಲು ಬಾಯಿಯಲ್ಲಿ ಕ್ಯಾಪ್ಸೂಲ್ ರೂಪದಲ್ಲಿ ಚಿನ್ನವನ್ನು ಅಡಗಿಸಿಕೊಂಡು ಬಂದಿದ್ದ ಎನ್ನಲಾಗಿದೆ. ಆದರೆ CISF ಸಿಬ್ಬಂದಿಯ ಅನುಮಾನದಿಂದಾಗಿ ಕೊನೆಗೂ ಅಕ್ರಮ ಸಾಗಣೆ ಪ್ರಯತ್ನ ಬಯಲಾಗಿದೆ.

ಸದ್ಯ ಮಹಮ್ಮದ್ ಸಿರಾಜ್‌ನನ್ನು ಹೆಚ್ಚಿನ ತನಿಖೆಗಾಗಿ ಕೆಐಎ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಚಿನ್ನದ ಮೂಲವೇನು, ಯಾರಿಗಾಗಿ ಅದನ್ನು ಸಾಗಿಸಲಾಗುತ್ತಿತ್ತು ಹಾಗೂ ಇದರ ಹಿಂದೆ ಮತ್ತಾರಾದರೂ ಇದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

106 ಜೋಡಿಗಳ ಸಾಮೂಹಿಕ ವಿವಾಹ: ಮದುವೆ ಗಿಫ್ಟ್ ಆಗಿ ಸೀಮೆ ಹಸು, ಜೊತೆಗೆ ₹50 ಸಾವಿರ ನಗದು

0

ಚಿಕ್ಕಬಳ್ಳಾಪುರ: ಸಾಮೂಹಿಕ ವಿವಾಹದಲ್ಲಿ ನವಜೋಡಿಗಳಿಗೆ ಸೀಮೆ ಹಸುವನ್ನೇ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಬಾಗೇಪಲ್ಲಿಯಲ್ಲಿ ನಡೆದಿದೆ. 23ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬರೋಬ್ಬರಿ 106 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಪ್ರತಿ ನವದಂಪತಿಗೂ ಸೀಮೆ ಹಸು ನೀಡಲಾಗಿದೆ.

ಬಾಗೇಪಲ್ಲಿ ತಾಲೂಕಿನ ಗಡಿದಂ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಎಸ್.ಎನ್. ಚಾರಿಟೇಬಲ್ ಟ್ರಸ್ಟ್ ಈ ಸಾಮೂಹಿಕ ವಿವಾಹವನ್ನು ಆಯೋಜಿಸಿತ್ತು. ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ನವದಂಪತಿಗಳಿಗೆ ಸೀಮೆ ಹಸುಗಳನ್ನು ಉಡುಗೊರೆಯಾಗಿ ನೀಡಿದರು. ಜತೆಗೆ 50 ಸಾವಿರ ರೂ. ನಗದು ನೆರವು ನೀಡುವ ಘೋಷಣೆಯೂ ಮಾಡಲಾಗಿದೆ.

ನವದಂಪತಿಗಳ ಹೊಸ ಬದುಕಿಗೆ ಆದಾಯದ ಮೂಲ ಕಲ್ಪಿಸುವ ಉದ್ದೇಶದಿಂದ ಈ ರೀತಿಯ ಉಡುಗೊರೆ ನೀಡಲಾಗಿದೆ. ಸಾಮಾನ್ಯವಾಗಿ ಸಾಮೂಹಿಕ ವಿವಾಹಗಳಲ್ಲಿ ನೀಡುವ ಬಟ್ಟೆ, ಆಭರಣಗಳ ಬದಲಿಗೆ ಜೀವನೋಪಾಯಕ್ಕೆ ನೆರವಾಗುವ ಉಡುಗೊರೆ ನೀಡಿರುವುದು ವಿಶೇಷ ಗಮನ ಸೆಳೆದಿದೆ.

ಇದೇ ವೇಳೆ ಶ್ರೀ ತಿರುಮಲ ತಿರುಪತಿ ದೇವಸ್ಥಾನದ ವತಿಯಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವವೂ ನಡೆಯಿತು. ಕಾರ್ಯಕ್ರಮದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ, ಮಾಜಿ ಸಂಸದ ಡಿ.ಕೆ. ಸುರೇಶ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಮಾಜಿ ಸಚಿವ ಶಿವಶಂಕರ ರೆಡ್ಡಿ, ಮಾಜಿ ಶಾಸಕ ಎನ್. ಸಂಪಂಗಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

106 ಜೋಡಿಗಳ ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದ ಬಾಗೇಪಲ್ಲಿಯಲ್ಲಿ, ನವದಂಪತಿಗಳ ಭವಿಷ್ಯಕ್ಕೆ ಆರ್ಥಿಕ ಭದ್ರತೆ ಕಲ್ಪಿಸುವ ಉದ್ದೇಶದ ಈ ವಿಭಿನ್ನ ಉಡುಗೊರೆ ಇದೀಗ ವಿಶೇಷ ಚರ್ಚೆಗೆ ಕಾರಣವಾಗಿದೆ.

ಟಿಪ್ಪು ಕಟೌಟ್ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲಿ ‘ಐ ಲವ್ ಮೊಹಮ್ಮದ್’: ಈದ್ ಮಿಲಾದ್ ಬ್ಯಾನರ್ ಮತ್ತೆ ಚರ್ಚೆಗೆ

0

ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ವಿವಾದದ ಸರಣಿ ಮುಂದುವರಿದಿದೆ. ಟಿಪ್ಪು ಕಟೌಟ್ ವಿಡಿಯೋಗೆ ದೇಶವಿರೋಧಿ ಹಾಡು ಬಳಕೆ ಆರೋಪದ ಕುರಿತು ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ಟಿಪ್ಪು ನಗರದಲ್ಲಿ ‘ಐ ಲವ್ ಮೊಹಮ್ಮದ್’ ಬ್ಯಾನರ್ ಅಳವಡಿಸಿರುವುದು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.

ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಸಲಾಗಿದ್ದು, ಕಳೆದ ವರ್ಷ ಉತ್ತರ ಪ್ರದೇಶದ ಕಾನ್ಪುರದಲ್ಲಿ ಇದೇ ಘೋಷವಾಕ್ಯದಿಂದ ಆರಂಭವಾಗಿದ್ದ ವಿವಾದವನ್ನು ಮತ್ತೆ ನೆನಪಿಸಿದೆ.

ಕಾನ್ಪುರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಐ ಲವ್ ಮೊಹಮ್ಮದ್’ ಬ್ಯಾನರ್ ಬಳಕೆಯಾದ ಬಳಿಕ ಘೋಷವಾಕ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ನಂತರ ಮುಂಬೈ, ತೆಲಂಗಾಣ, ಹೈದರಾಬಾದ್, ನಾಗ್ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಇದೇ ಹೆಸರಿನಲ್ಲಿ ರ್ಯಾಲಿಗಳು ನಡೆದಿದ್ದವು.

ರಾಜ್ಯದಲ್ಲೂ ‘ಐ ಲವ್ ಮೊಹಮ್ಮದ್’ ಬ್ಯಾನರ್ ಹಾಗೂ ಘೋಷಣೆ ವಿಚಾರ ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿರುವುದಲ್ಲ. ಬೆಳಗಾವಿ, ದಾವಣಗೆರೆ, ಆಳಂದ ಸೇರಿದಂತೆ ವಿವಿಧೆಡೆ ಈ ಸಂಬಂಧ ವಿವಾದಗಳು ಉಂಟಾಗಿದ್ದವು. ಕೆಲವು ಸಂದರ್ಭಗಳಲ್ಲಿ ಪೊಲೀಸ್ ಪ್ರಕರಣಗಳೂ ದಾಖಲಾಗಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.

ಇದೀಗ ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದದ ಬೆನ್ನಲ್ಲೇ ಇದೇ ಘೋಷವಾಕ್ಯದ ಬ್ಯಾನರ್ ಕಾಣಿಸಿಕೊಂಡಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಘಟನೆಯ ಕುರಿತು ಮುಂದಿನ ಕ್ರಮ ಹಾಗೂ ಆಡಳಿತದ ಪ್ರತಿಕ್ರಿಯೆ ಏನು ಎಂಬುದು ಇದೀಗ ಕುತೂಹಲ ಮೂಡಿಸಿದೆ.

ತಾಯಿ, 5 ಮಕ್ಕಳ ಸಾವಿನ ಹಿಂದೆ ಕೌಟುಂಬಿಕ ಕಲಹ? ಭೂತನಾಳ ಕೆರೆ ಪ್ರಕರಣದಲ್ಲಿ ಪತಿ ವಿರುದ್ಧ ಕುಟುಂಬಸ್ಥರ ಆರೋಪ

0

ವಿಜಯಪುರ: ಭೂತನಾಳ ಕೆರೆಯಲ್ಲಿ ತಾಯಿ ಸೇರಿದಂತೆ ಐವರು ಮಕ್ಕಳ ಮೃತದೇಹ ಪತ್ತೆಯಾದ ಪ್ರಕರಣ ತೀವ್ರ ಕುತೂಹಲ ಮೂಡಿಸಿದ್ದು, ತನಿಖೆಯಲ್ಲಿ ಕೌಟುಂಬಿಕ ಕಲಹದ ಆಯಾಮ ಪ್ರಮುಖವಾಗಿ ಹೊರಹೊಮ್ಮಿದೆ. ಮೃತರನ್ನು ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ ಉರ್ಫ್ ತಿಪ್ಪರಾಯ (10), ವಿಕಾಸ (5) ಮತ್ತು ಸಾನಿಕಾ (7) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಆಗಸ್ಟ್ 23ರ ರಾತ್ರಿ ಶೋಭಾ ಹಾಗೂ ಪತಿ ಮಲಕಾರಿ ನಡುವೆ ಜಗಳ ನಡೆದಿತ್ತು. ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ಪೂಜೆಗೆ ನೈವೇದ್ಯ ಸಿದ್ಧಪಡಿಸುವುದು ಹಾಗೂ ಕೂಲಿ ಕೆಲಸಕ್ಕೆ ತೆರಳಲು ಬುತ್ತಿ ಮಾಡಿಕೊಡುವ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಬಳಿಕ ಶೋಭಾ ಮಕ್ಕಳೊಂದಿಗೆ ಮನೆಯಿಂದ ಹೊರಹೋಗಿದ್ದರು.

ಅವರು ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಮಲಕಾರಿ ಗ್ರಾಮ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದ. ಸುಳಿವು ಸಿಗದ ಹಿನ್ನೆಲೆಯಲ್ಲಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದ. ನಂತರ ಭೂತನಾಳ ಕೆರೆಯಲ್ಲಿ ಆರು ಮಂದಿಯ ಶವಗಳು ಪತ್ತೆಯಾಗಿವೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಬಿಎಲ್‌ಡಿಇ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣ ವರದಿ ಬಂದ ಬಳಿಕ ಸ್ಪಷ್ಟವಾಗಲಿದೆ ಎಂದು ಎಸ್‌ಪಿ ಲಕ್ಷ್ಮಣ ಬಿ. ನಿಂಬರಗಿ ತಿಳಿಸಿದ್ದಾರೆ.

ಇತ್ತ ಶೋಭಾ ಕುಟುಂಬಸ್ಥರು ಮಲಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಮದ್ಯಪಾನ ಮಾಡಿ ಹಲ್ಲೆ ನಡೆಸುತ್ತಿದ್ದ ಹಾಗೂ ಮತ್ತೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಭಾಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.

ಆದರ್ಶ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕೌಟುಂಬಿಕ ಕಲಹ ಸೇರಿದಂತೆ ಸಾವಿಗೆ ಕಾರಣವಾಗಬಹುದಾದ ಎಲ್ಲ ಸಾಧ್ಯತೆಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.