Home Blog

ಕನಿಷ್ಠ ವೇತನ ಹೆಚ್ಚಳದ ಹೊರೆ ಗುತ್ತಿಗೆದಾರರ ಮೇಲೆ ಹಾಕಲು ಸಾಧ್ಯವಿಲ್ಲ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಬೆಂಗಳೂರು: ರಾಜ್ಯ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆ ಮಾಡಿದ ಬಳಿಕ, ಚಾಲ್ತಿಯಲ್ಲಿರುವ ಗುತ್ತಿಗೆ ಒಪ್ಪಂದವನ್ನು ನೆಪವೊಡ್ಡಿ ಕಾರ್ಮಿಕರಿಗೆ ಹೆಚ್ಚುವರಿ ವೇತನ ಪಾವತಿಸಲು ಗುತ್ತಿಗೆದಾರರಿಗೆ ಹಣ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೆಂಗಳೂರಿನ ಏಷ್ಯನ್ ಸೆಕ್ಯೂರಿಟಿ ಆ್ಯಂಡ್ ಪರ್ಸನಲ್ ಅರೇಂಜ್‌ಮೆಂಟ್ಸ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಭದ್ರತಾ ಸಿಬ್ಬಂದಿ ಮತ್ತು ಹೌಸ್‌ಕೀಪಿಂಗ್ ಸಿಬ್ಬಂದಿ ಪೂರೈಸಿದ ಸಂಸ್ಥೆಗೆ ಬಾಕಿಯಾಗಿರುವ ₹3.5 ಕೋಟಿ ಮೊತ್ತವನ್ನು ಶೇ.12ರಷ್ಟು ಬಡ್ಡಿಯೊಂದಿಗೆ ಪಾವತಿಸುವಂತೆ ಕರ್ನಾಟಕ ವಿಧಾನಸಭಾ ಸಚಿವಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕನಿಷ್ಠ ವೇತನವನ್ನು ಸರ್ಕಾರವೇ ಪರಿಷ್ಕರಿಸಿದ ನಂತರ, ಗುತ್ತಿಗೆದಾರರಿಗೆ ಉಂಟಾಗುವ ಹೆಚ್ಚುವರಿ ವೆಚ್ಚವನ್ನು ಭರಿಸಲು ನಿರಾಕರಿಸುವುದು ಅಸಂಬದ್ಧ, ತರ್ಕಹೀನ ಹಾಗೂ ಸಾರ್ವಜನಿಕ ನೀತಿಗೆ ವಿರುದ್ಧವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

“ರಾಜ್ಯ ಸರ್ಕಾರ ಮಾಡಿಕೊಂಡ ಯಾವುದೇ ಖಾಸಗಿ ಅಥವಾ ವಾಣಿಜ್ಯ ಗುತ್ತಿಗೆ ಒಪ್ಪಂದಗಳು ದೇಶದ ಶಾಸನಬದ್ಧ ಕಾನೂನುಗಳನ್ನು ಮೀರುವಂತಿಲ್ಲ. ಹಳೆಯ ದರಗಳ ಆಧಾರದ ಮೇಲೆ ಒಪ್ಪಂದವಾಗಿದೆ ಎಂಬ ಕಾರಣಕ್ಕೆ ಸರ್ಕಾರ ಅಧಿಸೂಚನೆ ಮೂಲಕ ಹೆಚ್ಚಿಸಿರುವ ಕನಿಷ್ಠ ವೇತನವನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಪೀಠ ಸ್ಪಷ್ಟಪಡಿಸಿದೆ.

ಅರ್ಜಿದಾರ ಸಂಸ್ಥೆ ಹಾಗೂ ಸರ್ಕಾರದ ನಡುವೆ ನಡೆದ ಒಪ್ಪಂದದಲ್ಲಿ ವೇತನ ಪರಿಷ್ಕರಣೆ ಕುರಿತು ಯಾವುದೇ ಸ್ಪಷ್ಟ ಉಲ್ಲೇಖ ಇರಲಿಲ್ಲ. ಹೆಚ್ಚುವರಿ ವೇತನದ ಹೊರೆ ಗುತ್ತಿಗೆದಾರರೇ ಭರಿಸಬೇಕು ಎಂಬ ಷರತ್ತು ಇದ್ದರೂ, ಸಂವಿಧಾನದ ವಿಧಿ 12ರ ಅಡಿಯಲ್ಲಿ ಬರುವ ಸರ್ಕಾರ ಹಾಗೂ ಅದರ ಅಂಗ ಸಂಸ್ಥೆಗಳು ಖಾಸಗಿ ಕಂಪನಿಗಳಂತೆ ಲಾಭದ ದೃಷ್ಟಿಯಿಂದ ಮಾತ್ರ ವರ್ತಿಸಬಾರದು ಎಂದು ನ್ಯಾಯಾಲಯ ಹೇಳಿದೆ.

“ಸರ್ಕಾರವು ಮಾದರಿ ಉದ್ಯೋಗದಾತವಾಗಬೇಕು. ಗುತ್ತಿಗೆಯ ಕಟ್ಟುನಿಟ್ಟಿನ ಷರತ್ತುಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಕಲ್ಯಾಣ ಕಾಯ್ದೆಗಳ ಉಲ್ಲಂಘನೆಗೆ ಪರೋಕ್ಷವಾಗಿ ಕಾರಣವಾಗಬಾರದು” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಕನಿಷ್ಠ ವೇತನ ಪಾವತಿಸುವುದು ಕೇವಲ ಒಪ್ಪಂದದ ವಿಷಯವಲ್ಲ; ಅದು ಶಾಸನಬದ್ಧ ಹಾಗೂ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಕನಿಷ್ಠ ವೇತನಕ್ಕಿಂತ ಕಡಿಮೆ ಸಂಬಳ ನೀಡುವುದು ಸಂವಿಧಾನದ 23ನೇ ವಿಧಿಯ ಅಡಿಯಲ್ಲಿ ಬಲವಂತದ ದುಡಿಮೆಗೆ ಸಮಾನವಾಗುತ್ತದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಪ್ರಕರಣದ ಹಿನ್ನೆಲೆ ಕುರಿತು ಹೇಳುವುದಾದರೆ, ಅರ್ಜಿದಾರ ಸಂಸ್ಥೆ ಕರ್ನಾಟಕ ವಿಧಾನಸಭಾ ಸಚಿವಾಲಯಕ್ಕೆ ಹೌಸ್‌ಕೀಪಿಂಗ್ ಹಾಗೂ ಭದ್ರತಾ ಸಿಬ್ಬಂದಿ ಒದಗಿಸುತ್ತಿತ್ತು. 2016ರಲ್ಲಿ ರಾಜ್ಯ ಸರ್ಕಾರ ಕನಿಷ್ಠ ವೇತನ ಹೆಚ್ಚಿಸಿ ಅಧಿಸೂಚನೆ ಹೊರಡಿಸಿದ ಬಳಿಕ, ಸಂಸ್ಥೆ ಕಾರ್ಮಿಕರಿಗೆ ಹೆಚ್ಚಿದ ವೇತನ ಪಾವತಿಸಿತ್ತು.

ಈ ಹೆಚ್ಚುವರಿ ವೆಚ್ಚದ ₹3.5 ಕೋಟಿ ಮೊತ್ತವನ್ನು ಪಾವತಿಸುವಂತೆ ವಿಧಾನಸಭಾ ಸಚಿವಾಲಯಕ್ಕೆ ಬಿಲ್ ಸಲ್ಲಿಸಲಾಗಿತ್ತು. ಆದರೆ ಗುತ್ತಿಗೆ ಹಳೆಯ ದರಗಳ ಆಧಾರದ ಮೇಲೆ ಇರುವುದರಿಂದ ಹೆಚ್ಚುವರಿ ವೆಚ್ಚವನ್ನು ಗುತ್ತಿಗೆದಾರರೇ ಭರಿಸಬೇಕು ಎಂದು ಹೇಳಿ ಸರ್ಕಾರ 2024ರಲ್ಲಿ ಬಿಲ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿತ್ತು.

ಲಾಡ್ಜ್ ನಲ್ಲಿ ತಂಗಿದ್ದ ತಮಿಳುನಾಡು ಮೂಲದ ವ್ಯಕ್ತಿಗೆ ಹೃದಯಾಘಾತ! ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ೊಂದರಲ್ಲಿ ತಂಗಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮುರುಗನ್ ಮಧು (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪುಳಿಯಂಪಟ್ಟಿ ನಿವಾಸಿಯಾಗಿದ್ದ ಮಧು, ಬುಧವಾರ ಮಡಿವಾಳದ ಗೋಲ್ಡನ್ ನೆಕ್ಸ್ ಲಾಡ್ಜ್‌ನಲ್ಲಿ ತಂಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಲಾಡ್ಜ್ ಮಾಲೀಕರು ನೀಡಿದ ದೂರಿನ ಮೇರೆಗೆ ಮಡಿವಾಳ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಮಧು ಅವಿವಾಹಿತರಾಗಿದ್ದು ತಾಯಿಯೊಂದಿಗೆ ವಾಸಿಸುತ್ತಿದ್ದರು. ಅವರು ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಈ ಹಿಂದೆ ಎರಡು ಬಾರಿ ಲಘು ಹೃದಯಾಘಾತಕ್ಕೂ ಒಳಗಾಗಿದ್ದರು ಎನ್ನಲಾಗಿದೆ.

ಮೇ 18ರಂದು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳುತ್ತಿರುವುದಾಗಿ ತಾಯಿಗೆ ತಿಳಿಸಿ ಮನೆಯಿಂದ ಹೊರಟಿದ್ದ ಮಧು, ಬಳಿಕ ಮಡಿವಾಳದ ಗೋಲ್ಡನ್ ನೆಕ್ಸ್ ಲಾಡ್ಜ್‌ಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಫಜಿ ಉಲ್ಲಾ ಖಾನ್ ಹೆಸರಿನಲ್ಲಿ ಬುಕ್ ಮಾಡಲಾಗಿದ್ದ ಕೊಠಡಿಯಲ್ಲಿ ಮಧು ತಂಗಿದ್ದರು. ಬುಧವಾರ ಹೃದಯಾಘಾತದಿಂದ ಮೃತಪಟ್ಟಿರುವುದು ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯೇ ಸಾವಿಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಬಾಲಿಷ ಹೇಳಿಕೆ ಸಹಿಸುವುದಿಲ್ಲ: ಪ್ರಧಾನಿ ಮೋದಿ ಕುರಿತು ರಾಹುಲ್ ಹೇಳಿಕೆಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದನ್ನು ರಾಹುಲ್ ಗಾಂಧಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ” ಎಂದು ಆರೋಪಿಸಿದರು.

“ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಟ್ಟದ ನಾಯಕರು ಈ ರೀತಿಯ ಬಾಲಿಷ ಹೇಳಿಕೆಗಳನ್ನು ನೀಡಬಾರದು. ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುವುದು ಸರಿಯಲ್ಲ” ಎಂದು ವಿಜಯೇಂದ್ರ ಹೇಳಿದರು.

ಹಿಂದುಳಿದ ವರ್ಗದ ಸಮುದಾಯದಿಂದ ಬಂದ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತವನ್ನು ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕ ಶಕ್ತಿಯನ್ನಾಗಿ ರೂಪಿಸಿರುವ ನಾಯಕತ್ವವನ್ನು ಕಾಂಗ್ರೆಸ್ ಸಹಿಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದರು.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಪಡಿಸುವ ಧೈರ್ಯ ಕಾಂಗ್ರೆಸ್‌ಗೆ ಇರಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಆ ನಿರ್ಧಾರ ಕೈಗೊಳ್ಳಲಾಯಿತು. ದೇಶದಲ್ಲಿ ನಕ್ಸಲಿಸಂ ನಿರ್ಮೂಲನೆ ಮಾಡುವ ದಿಸೆಯಲ್ಲಿಯೂ ಅಮಿತ್ ಶಾ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಪ್ರಧಾನಿ ಮೋದಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದಾರೆ. ದೇಶದ ಅಭಿವೃದ್ಧಿಯನ್ನು ಸಹಿಸದೇ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕ್ಷಮೆ ಕೇಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಶೃಂಗೇರಿ ಮರು ಮತ ಎಣಿಕೆ ಕೇಸ್‌ಗೆ ಹೊಸ ಟ್ವಿಸ್ಟ್: ಟಿ.ಡಿ.ರಾಜೇಗೌಡರಿಗೆ ಮತ್ತೆ ಸುಪ್ರೀಂ ಕೋರ್ಟ್ ರಕ್ಷಣೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರುಎಣಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರಿಗೆ ಸುಪ್ರೀಂ ಕೋರ್ಟ್ ಮತ್ತೆ ಮಧ್ಯಂತರ ರಿಲೀಫ್ ನೀಡಿದೆ. ಪ್ರಕರಣದ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿರುವ ನ್ಯಾಯಾಲಯ, ಅದುವರೆಗೂ ಯಥಾಸ್ಥಿತಿ ಮುಂದುವರಿಯಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ.

ಬೈಕ್‌ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ: ಇಬ್ಬರು ಯುವಕರ ಸ್ಥಳದಲ್ಲೇ ಸಾವು

0

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗಲಿ ಗ್ರಾಮದ ಬಳಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.

ಗಂಡಸಿ ಹೋಬಳಿಯ ಕಾಲೇನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರದೀಪ್ (22) ಮತ್ತು ಅರುಣ್ (21) ಮೃತ ದುರ್ದೈವಿಗಳಾಗಿದ್ದಾರೆ.

ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದ ವೇಳೆ ಸೇತುವೆ ಸಮೀಪ ಅಪರಿಚಿತ ವಾಹನ ಅವರ ಬೈಕ್‌ಗೆ ವೇಗವಾಗಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಬಳಿಕ ವಾಹನ ಚಾಲಕ ಯಾವುದೇ ನೆರವು ನೀಡದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಹೀಗಾಗಿ ಪ್ರಕರಣ ಹಿಟ್ ಅಂಡ್ ರನ್ ಆಗಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಸ್ತೆ ಪರಿಶೀಲನೆಗೆ ಬಂದ ಸಿ.ಟಿ.ರವಿ ವಿರುದ್ಧ ಘೇರಾವ್: ಚಿಕ್ಕಮಗಳೂರಲ್ಲಿ ಹೈಡ್ರಾಮಾ

ಚಿಕ್ಕಮಗಳೂರು: ಚಿಕ್ಕಮಗಳೂರು-ಕೆ.ಆರ್.ಪೇಟೆ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ರಸ್ತೆ ಕಾಮಗಾರಿಯಲ್ಲಿ ಗುತ್ತಿಗೆ ಸಂಸ್ಥೆಯ ನಿರ್ಲಕ್ಷ್ಯದ ಬಗ್ಗೆ ಶಾಸಕ ಎಚ್.ಡಿ.ತಮ್ಮಯ್ಯ ಇತ್ತೀಚೆಗೆ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ, ಕಾಮಗಾರಿಯ ಪ್ರಗತಿ ಪರಿಶೀಲಿಸಲು ಸಿ.ಟಿ.ರವಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿದ್ದರು.

ರಾಂಪುರ ಸರ್ಕಲ್ ಬಳಿ ಅವರು ವಾಹನದಿಂದ ಇಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಸುತ್ತುವರಿದು ಧಿಕ್ಕಾರ ಕೂಗಲು ಆರಂಭಿಸಿದರು. ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ಜೋರಾಗಿ ತಳ್ಳಾಟ-ನೂಕಾಟಕ್ಕೂ ಕಾರಣವಾಯಿತು.

“ಇಪ್ಪತ್ತು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ” ಎಂದು ಆರೋಪಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಎರಡೂ ಬಣಗಳನ್ನು ನಿಯಂತ್ರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ತಮಿಳುನಾಡಿನಲ್ಲಿ ವಿಜಯ್ ಸಚಿವ ಸಂಪುಟ ವಿಸ್ತರಣೆ: 23 ಶಾಸಕರು ಸಚಿವರಾಗಿ ಪ್ರಮಾಣವಚನ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 23 ಶಾಸಕರು ನೂತನ ಸಚಿವರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಟಿವಿಕೆ ಪಕ್ಷದ 21 ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ವಿಜಯ್ ಸರ್ಕಾರದಲ್ಲಿ ಸಚಿವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ತಮಿಳುನಾಡು ವಿಧಾನಸಭೆಯ ಬಲದ ಪ್ರಕಾರ ಗರಿಷ್ಠ 35 ಸಚಿವರನ್ನು ಸರ್ಕಾರ ಹೊಂದಲು ಅವಕಾಶವಿದೆ.

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಟಿವಿಕೆ ಪಕ್ಷದ ಹಲವು ಪ್ರಮುಖ ಶಾಸಕರು ಸೇರಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷದ ರಾಜೇಶ್ ಕುಮಾರ್ ಹಾಗೂ ತಿರು ಪಿ. ವಿಶ್ವನಾಥನ್ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸುಮಾರು ಆರು ದಶಕಗಳ ಬಳಿಕ ತಮಿಳುನಾಡು ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷ ಸಚಿವ ಸಂಪುಟದ ಭಾಗವಾಗಿರುವುದು ವಿಶೇಷವೆಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. 1967ರಲ್ಲಿ ಎಂ. ಭಕ್ತವತ್ಸಲಂ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಳಿಕ ಪಕ್ಷಕ್ಕೆ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆತಿರಲಿಲ್ಲ.

ಇನ್ನೊಂದೆಡೆ, ಮೈತ್ರಿ ಪಕ್ಷಗಳಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಹಾಗೂ ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷಗಳಿಗೆ ತಲಾ ಒಂದು ಸಚಿವ ಸ್ಥಾನ ಮೀಸಲಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈವರೆಗೆ ಆ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿಲ್ಲ. ಮುಂದಿನ ಹಂತದಲ್ಲಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.

ಗಮನಾರ್ಹವಾಗಿ, ಮೇ 10ರಂದು ಜೋಸೆಫ್ ವಿಜಯ್ ಮುಖ್ಯಮಂತ್ರಿಯಾಗಿ ಹಾಗೂ 9 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ನಡೆದ ಸಚಿವ ಸಂಪುಟ ವಿಸ್ತರಣೆಯೊಂದಿಗೆ ವಿಜಯ್ ಸರ್ಕಾರ ಆಡಳಿತಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ವೇಗಗೊಳಿಸುವ ನಿರೀಕ್ಷೆ ವ್ಯಕ್ತವಾಗಿದೆ.

 

ಸಕ್ರೆಬೈಲು ಆನೆ ಬಿಡಾರಕ್ಕೆ ಬ್ರೇಕ್: ದುಬಾರೆ ದುರಂತದ ಬಳಿಕ ರಾಜ್ಯಾದ್ಯಂತ ಅಲರ್ಟ್

ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ನಡೆದ ದಾರುಣ ಘಟನೆ ಬಳಿಕ ಶಿವಮೊಗ್ಗದ ಪ್ರಸಿದ್ಧ ಸಕ್ರೆಬೈಲು ಆನೆ ಬಿಡಾರವನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಮುಚ್ಚಿದೆ. ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ.

ಮೊದಲ ಹಂತದಲ್ಲಿ ಆನೆಗಳ ಸ್ನಾನ ಹಾಗೂ ಪ್ರವಾಸಿಗರು ಆನೆಗಳನ್ನು ಸ್ಪರ್ಶಿಸುವುದಕ್ಕೆ ಮಾತ್ರ ನಿರ್ಬಂಧ ವಿಧಿಸಲಾಗಿತ್ತು. ಆದರೆ ಇದೀಗ ಯಾವುದೇ ಅಪಾಯ ಸಂಭವಿಸದಂತೆ ತಡೆಯಲು ಪ್ರವಾಸಿಗರ ಪ್ರವೇಶವನ್ನೇ ಸಂಪೂರ್ಣವಾಗಿ ನಿಲ್ಲಿಸಲಾಗಿದೆ.

ಗಾಜನೂರು ಸಮೀಪ ತುಂಗಾ ಹಿನ್ನೀರಿನ ಪ್ರದೇಶದಲ್ಲಿರುವ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರತಿದಿನ ನೂರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ವಿಶೇಷವಾಗಿ ಆನೆ ಸ್ನಾನ ವೀಕ್ಷಣೆ ಹಾಗೂ ಆನೆಗಳೊಂದಿಗೆ ಸಮಯ ಕಳೆಯಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದರು.

ಇತ್ತೀಚೆಗೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಎರಡು ಸಾಕಾನೆಗಳ ನಡುವೆ ನಡೆದ ಕಾಳಗ ದುರಂತಕ್ಕೆ ಕಾರಣವಾಗಿತ್ತು. ನಿಯಂತ್ರಣ ತಪ್ಪಿದ ಆನೆ ದಾಳಿ ನಡೆಸಿದ ಪರಿಣಾಮ ತಮಿಳುನಾಡಿನ ಮಹಿಳಾ ಪ್ರವಾಸಿ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆಯೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿತ್ತು.

ಈ ಘಟನೆ ಬೆನ್ನಲ್ಲೇ ರಾಜ್ಯದ ಎಲ್ಲಾ ಆನೆ ಬಿಡಾರಗಳಲ್ಲಿ ಸುರಕ್ಷತಾ ಕ್ರಮಗಳನ್ನು ಮರುಪರಿಶೀಲಿಸಲಾಗುತ್ತಿದ್ದು, ಹೊಸ ಎಸ್‌ಒಪಿ ಜಾರಿಯಾಗುವವರೆಗೆ ಸಕ್ರೆಬೈಲು ಬಿಡಾರ ಪ್ರವಾಸಿಗರಿಗೆ ಬಂದ್ ಆಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಕಿಂಗ್ ವೇಳೆ ಪಾದಚಾರಿಗೆ ಬೈಕ್ ಡಿಕ್ಕಿ; ಕೃಷಿ ಇಲಾಖೆಯ ನೌಕರ ಸ್ಥಳದಲ್ಲೇ ಸಾವು

ಗದಗ: ವಾಕಿಂಗ್ ವೇಳೆ ಪಾದಚಾರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೃಷಿ ಇಲಾಖೆಯ ಎಫ್‌ಡಿಎ (ಪ್ರಥಮ ದರ್ಜೆ ಸಹಾಯಕ) ಸುನೀಲ್ ದಾಸರ್ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬುಧವಾರ ರಾತ್ರಿ ಗದಗ ನಗರದಲ್ಲಿ ನಡೆದಿದೆ.

ನಗರದ ದೋಭಿಘಾಟ್ ಸಮೀಪ ಈ ದುರ್ಘಟನೆ ಸಂಭವಿಸಿದ್ದು, ಸುನೀಲ್ ದಾಸರ್ ಅವರು ವಾಕಿಂಗ್ ಮಾಡುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಡಿಕ್ಕಿಯ ತೀವ್ರತೆಗೆ ಸುನೀಲ್ ದಾಸರ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಗದಗ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂಧನ ಬೆಲೆ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ತೆರಿಗೆ ಇಳಿಕೆ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಅವರು ಕಿಡಿಕಾರುವ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, “ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತದೆ, ನಾವು ತೆರಿಗೆ ಕಡಿಮೆ ಮಾಡಬೇಕಾ? ಅವರು ಬೆಲೆ ಹೆಚ್ಚಿಸಿದಾಗ ನೀವು ಪ್ರಶ್ನೆ ಕೇಳುವುದೇ ಇಲ್ಲ. ಆದರೆ ರಾಜ್ಯ ಸರ್ಕಾರ ತೆರಿಗೆ ಕಡಿತ ಮಾಡುತ್ತದೆಯಾ ಅಂತ ಕೇಳ್ತೀರಾ” ಎಂದು ಮಾಧ್ಯಮಗಳನ್ನೇ ಪ್ರಶ್ನಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, “ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಪೆಟ್ರೋಲ್ ದರ 70 ರೂ., ಡೀಸೆಲ್ 48 ರೂ. ಇತ್ತು. ಗ್ಯಾಸ್ ಸಿಲಿಂಡರ್ 414 ರೂ.ಗೆ ಸಿಗುತ್ತಿತ್ತು. ಈಗ ಎಷ್ಟು ಆಗಿದೆ? ಯಾರು ಬೆಲೆ ಏರಿಸಿದ್ದಾರೆ ಎಂಬುದನ್ನು ಜನರು ನೋಡಬೇಕು” ಎಂದರು.

ರಾಜ್ಯ ಸರ್ಕಾರ ಜನರಿಗೆ ಪರಿಹಾರ ನೀಡುತ್ತದೆಯೇ ಎಂಬ ಪ್ರಶ್ನೆಗೆ ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದಾಗ ಅವರಿಗೆ ಯಾಕೆ ಪ್ರಶ್ನೆ ಕೇಳಲ್ಲ? ರಾಜ್ಯ ತೆರಿಗೆ ಕಡಿಮೆ ಮಾಡಬೇಕು ಅಂತ ಮಾತ್ರ ಕೇಳ್ತೀರಾ? ನಿಮ್ಮ ಪ್ರಶ್ನೆಗಳಲ್ಲೇ ಯಾರ ಪರ ಇದ್ದೀರೋ ಗೊತ್ತಾಗುತ್ತಿದೆ” ಎಂದು ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

error: Content is protected !!