Home Blog

ಬೆಳಗಾವಿಯಲ್ಲಿ ಮೂವರು ಯುವಕರ ಮೇಲೆ ತಲ್ವಾರ್ ದಾಳಿ! ಹಳೆಯ ವೈಷಮ್ಯ ಶಂಕೆ?

ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್‌ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

ದಾಳಿಗೆ ಒಳಗಾದವರನ್ನು ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ದೊರೆತ ಕೂಡಲೇ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿ ನಡೆದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಹಳೆಯ ವೈಷಮ್ಯವೇ ಈ ಹಲ್ಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಕಳೆದುಹೋದ ಮೊಬೈಲ್‌ಗಳಿಗೆ ಮರುಜೀವ: 769 ಫೋನ್‌ಗಳನ್ನು ಪತ್ತೆಹಚ್ಚಿದ ಪೊಲೀಸ್ ಇಲಾಖೆ!

ಗದಗ: ಜಿಲ್ಲಾ ಪೊಲೀಸ್ ಇಲಾಖೆಯು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ಕಳೆದುಹೋಗಿದ್ದ ಹಾಗೂ ಕಳ್ಳತನವಾಗಿದ್ದ 1.13 ಕೋಟಿ ರೂ. ಮೌಲ್ಯದ 769 ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.

ಮಂಗಳವಾರ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ ಜಗದೀಶ ಅವರು, 2026ರ ಜನವರಿ 1ರಿಂದ ಕಳೆದ ಕೇವಲ ನಾಲ್ಕು ತಿಂಗಳಲ್ಲಿ ಈ ಬೃಹತ್ ಪ್ರಮಾಣದ ಮೊಬೈಲ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದರು.

ಫೆಬ್ರವರಿ 2023ರಲ್ಲಿ ಸಿ.ಇ.ಐ.ಆರ್ (Central Equipment Identity Register) ಜಾರಿಗೆ ಬಂದಾಗಿನಿಂದ ಈವರೆಗೆ ಒಟ್ಟು 5,546 ಮೊಬೈಲ್‌ಗಳನ್ನು ಬ್ಲಾಕ್ ಮಾಡಲಾಗಿದೆ. ಈ ಪೈಕಿ 3,251 ಮೊಬೈಲ್‌ಗಳು ಪತ್ತೆಯಾಗಿದ್ದು, ಈಗಾಗಲೇ 2,295 ಮೊಬೈಲ್‌ಗಳನ್ನು ಮಾಲೀಕರಿಗೆ ಮರಳಿಸಲಾಗಿದೆ ಎಂದು ಅವರು ಹೇಳಿದರು.

ಪತ್ತೆಯಾದ 769 ಮೊಬೈಲ್‌ಗಳಲ್ಲಿ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮೊಬೈಲ್‌ಗಳು ಪತ್ತೆಯಾಗಿವೆ. ರೋಣದಲ್ಲಿ 166, ಗದಗ ಶಹರದಲ್ಲಿ 131, ಮುಂಡರಗಿಯಲ್ಲಿ 109, ಗದಗ ಗ್ರಾಮೀಣ ಹಾಗೂ ಲಕ್ಷ್ಮೇಶ್ವರದಲ್ಲಿ ತಲಾ 83, ಗಜೇಂದ್ರಗಡದಲ್ಲಿ 53, ಬಡಾವಣೆ ಠಾಣೆಯಲ್ಲಿ 46, ನರಗುಂದದಲ್ಲಿ 41, ಸಿ.ಇ.ಎನ್ ವಿಭಾಗದಲ್ಲಿ 17, ಮುಳಗುಂದದಲ್ಲಿ 14, ನರೇಗಲ್‌ನಲ್ಲಿ 13, ಬೆಟಗೇರಿಯಲ್ಲಿ 8 ಹಾಗೂ ಶಿರಹಟ್ಟಿ ಠಾಣೆಯಲ್ಲಿ 5 ಮೊಬೈಲ್‌ಗಳನ್ನು ಪತ್ತೆ ಮಾಡಲಾಗಿದೆ ಎಂದು ವಿವರಿಸಿದರು.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಡಿಎಸ್‌ಪಿಗಳಾದ ಎಂ.ಐ. ಸಜ್ಜನ, ಮುರ್ತುಜಾ ಖಾದ್ರಿ, ಪ್ರಭುಗೌಡ ಕಿರೇದಹಳ್ಳಿ ಹಾಗೂ ಜಿಲ್ಲೆಯ ವಿವಿಧ ಠಾಣೆಗಳ ಸಿಪಿಐಗಳು, ಪಿಎಸ್‌ಐಗಳು ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಕರ್ತವ್ಯದಕ್ಷತೆ ಮೆರೆದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಎಸ್ಪಿ ರೋಹನ ಜಗದೀಶ ತಿಳಿಸಿದ್ದಾರೆ.

ಅಂತರರಾಜ್ಯ ಮಾದಕ ಜಾಲಕ್ಕೆ ಬ್ರೇಕ್: ಇಬ್ಬರು ಪೆಡ್ಲರ್‌ಗಳು ಬಂಧನ!

ಬೆಂಗಳೂರು: ವಿದೇಶದಿಂದ ಹೈಡ್ರೋ ಗಾಂಜಾ ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸೌಗೇಶ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಬಳಿಕ ವಿದೇಶದಿಂದ ಹೈಡ್ರೋ ಗಾಂಜಾ ತರಿಸಿ ಕರ್ನಾಟಕದಲ್ಲಿ ಮಾರಾಟ ಮಾಡುವ ಜಾಲದಲ್ಲಿ ತೊಡಗಿಕೊಂಡಿದ್ದರು.

ಪೊಲೀಸರು ಬಂಧಿತರಿಂದ ಸುಮಾರು 5 ಕೋಟಿ 75 ಲಕ್ಷ ರೂ. ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿರುವುದು ನಗರದಲ್ಲಿ ಚರ್ಚೆಗೆ ಕಾರಣವಾಗಿದೆ.

ತನಿಖೆಯಲ್ಲಿ ಆರೋಪಿಗಳ ವಿರುದ್ಧ ಕೇರಳದಲ್ಲಿ ಈಗಾಗಲೇ ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿರುವುದು ಪತ್ತೆಯಾಗಿದೆ. ಅಂತರರಾಜ್ಯ ಮಾದಕ ಜಾಲದ ಸಂಪರ್ಕಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಪ್ರಕರಣದ ಕುರಿತು ನಂದಿನಿ ಲೇಔಟ್ ಪೊಲೀಸರು ಮುಂದುವರಿದ ತನಿಖೆ ಕೈಗೊಂಡಿದ್ದು, ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.

ಅಕಾಲಿಕ ಮಳೆಯಿಂದ ಹಾನಿ: ವಿದ್ಯುತ್ ಕಂಬಗಳ ತುರ್ತು ದುರಸ್ತಿಗೆ ಎಸ್.ಆರ್. ಪಾಟೀಲ ಸೂಚನೆ!

ಧಾರವಾಡ:- ಜಿಲ್ಲೆಯಲ್ಲಿ ಸಂಭವಿಸಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಬಿದ್ದು, ತಂತಿಗಳು ಹಾನಿಗೊಳಗಾದ ಘಟನೆಗಳು ವರದಿಯಾಗಿವೆ.

ಈ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆ ತಕ್ಷಣ ಕ್ರಮ ಕೈಗೊಂಡು ದುರಸ್ತಿಯನ್ನು ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿದ್ದಿರುವ ಕಂಬಗಳನ್ನು ತಕ್ಷಣ ಸರಿಪಡಿಸಿ ರೈತರ ಕೃಷಿ ಕಾರ್ಯಕ್ಕೆ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಆವರಣಗಳಲ್ಲಿ ವಾಲಿರುವ ವಿದ್ಯುತ್ ಕಂಬಗಳನ್ನು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತಕ್ಷಣ ಸ್ಥಳಾಂತರಿಸಬೇಕು. ಇಂತಹ ಸಮಸ್ಯೆಗಳು ಕಂಡುಬಂದರೆ ತಕ್ಷಣ ಸಂಬಂಧಿತ ಇಲಾಖೆಯ ಗಮನಕ್ಕೆ ತರಬೇಕು ಎಂದು ಹೇಳಿದರು.

ಯುವನಿಧಿ ಯೋಜನೆ ಕುರಿತು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕೋಚಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಯೋಜನೆಯ ಮಾಹಿತಿ ನೀಡಬೇಕು. ಸಭೆಗಳು, ಮಾಹಿತಿ ಶಿಬಿರಗಳ ಮೂಲಕ ಅರ್ಜಿ ಸಲ್ಲಿಕೆ ವಿಧಾನ ಹಾಗೂ ಅರ್ಹತೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಯುವನಿಧಿ ಫಲಾನುಭವಿಗಳಿಗಾಗಿ ಟೆಲಿಗ್ರಾಂ ಗುಂಪುಗಳನ್ನು ರಚಿಸಿ ತರಬೇತಿ ಹಾಗೂ ಇತರ ಮಾಹಿತಿಗಳನ್ನು ಹಂಚಿಕೊಳ್ಳುವಂತೆ ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಮಾಹಿತಿ ಸ್ಟಾಲ್‌ಗಳನ್ನು ಅಳವಡಿಸಿ ಯೋಜನೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ಮುರಗಯ್ಯಾ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹಾನ್ ರಝಾ ಐನಾಪೂರಿ, ರತ್ನಾ ತೇಗೂರಮಠ ಸೇರಿದಂತೆ ಹಲವು ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ:-

ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ.

ಯುವನಿಧಿ: 11,985 ಅರ್ಜಿಗಳು; 9,780 ಫಲಾನುಭವಿಗಳಿಗೆ ಡಿಬಿಟಿ ಮೂಲಕ ರೂ. 27.60 ಕೋಟಿ ಜಮೆ

ಶಕ್ತಿ ಯೋಜನೆ: 5,988.44 ಲಕ್ಷ ಮಹಿಳೆಯರು ಉಚಿತ ಪ್ರಯಾಣ; ರೂ. 1,52,158.52 ಲಕ್ಷ ಬಿಡುಗಡೆ

ಗೃಹ ಜ್ಯೋತಿ: 5,10,864 ಫಲಾನುಭವಿಗಳು; ರೂ. 72,951.16 ಲಕ್ಷ ಬಿಡುಗಡೆ

ಗೃಹಲಕ್ಷ್ಮಿ: 4,03,696 ಫಲಾನುಭವಿಗಳು; ರೂ. 2,119.22 ಕೋಟಿ ಬಿಡುಗಡೆ

ಅನ್ನಭಾಗ್ಯ: 3,62,516 ಫಲಾನುಭವಿಗಳು; ರೂ. 358.28 ಲಕ್ಷ ಬಿಡುಗಡೆ.

ಮ್ಯೂಟೇಷನ್ ಕೆಲಸಕ್ಕೆ ₹5 ಲಕ್ಷ ಬೇಡಿಕೆ; ಲೋಕಾಯುಕ್ತ ಟ್ರ್ಯಾಪ್‌ನಲ್ಲಿ ಇಬ್ಬರು ಅರೆಸ್ಟ್

ಬೀದರ್: ಮನೆ ಮ್ಯೂಟೇಷನ್ ಮಾಡಿಕೊಡಲು ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮರಕುಂದಾ ಗ್ರಾಮದ ವಿಎ ಶಿವಕುಮಾರ ಹಾಗೂ ಆತನ ಸಹಚರ ಶರಣಯ್ಯ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮರಕುಂದಾ ಗ್ರಾಮದ ಹೊರವಲಯದಲ್ಲಿರುವ ಧಾಬಾ ಒಂದರಲ್ಲಿ ಮುಂಗಡವಾಗಿ ₹2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.

ಮರಕುಂದಾ ಗ್ರಾಮದ ಮಹಾದೇವ ಶಾಂತಪ್ಪ ಎಂಬುವವರಿಂದ ಮ್ಯೂಟೇಷನ್ ಕಾರ್ಯಕ್ಕಾಗಿ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ, ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಆಧಾರವಾಗಿ ಬೀದರ್ ಲೋಕಾಯುಕ್ತ ಡಿಎಸ್ಪಿ ಹಣಮಂತರಾಯ್ ಅವರ ನೇತೃತ್ವದಲ್ಲಿ ಟ್ರ್ಯಾಪ್ ಕಾರ್ಯಾಚರಣೆ ನಡೆಸಲಾಯಿತು.

ಈ ವೇಳೆ ಪಿಐ ಅರ್ಜುನಪ್ಪ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಣ್ಣದ ಕೈಯಲ್ಲಿ ಹಿಡಿದಿದ್ದಾರೆ. ಬಂಧಿತ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್: ಶಿಶುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ?

ಬೇಸಿಗೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆ, ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂಬುದು ತಜ್ಞರ ಸಲಹೆಯಾಗಿದೆ. ದೇಹದ ಉಷ್ಣಾಂಶ ಅತಿಯಾಗಿ ಏರಿಕೆಯಾಗುವ ಹೀಟ್ ಸ್ಟ್ರೋಕ್ ಸಮಸ್ಯೆ ಗರ್ಭಿಣಿಯರಿಗೆ ಗಂಭೀರ ಪರಿಣಾಮಗಳನ್ನು ಉಂಟುಮಾಡುವ ಸಾಧ್ಯತೆ ಇದೆ.

ತಜ್ಞರ ಪ್ರಕಾರ, ದೀರ್ಘಕಾಲ ತೀವ್ರ ಬಿಸಿಲಿನಲ್ಲಿ ಇರುವುದರಿಂದ ದೇಹವು ತಾನೇ ತಣ್ಣಗಾಗಲು ಸಾಧ್ಯವಾಗದೆ ಹೀಟ್ ಸ್ಟ್ರೋಕ್ ಉಂಟಾಗುತ್ತದೆ. ಈ ಸಂದರ್ಭದಲ್ಲಿ ತೀವ್ರ ಜ್ವರ, ತಲೆಸುತ್ತು, ದೌರ್ಬಲ್ಯ ಮೊದಲಾದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಗರ್ಭಾವಸ್ಥೆಯಲ್ಲಿ ಈ ಸಮಸ್ಯೆ ಉಂಟಾದರೆ ಗರ್ಭದಲ್ಲಿರುವ ಶಿಶುವಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಹೆಚ್ಚಿನ ದೇಹದ ತಾಪಮಾನವು ಕೋಶಗಳ ಮೇಲೆ ದುಷ್ಪರಿಣಾಮ ಬೀರುವುದರಿಂದ ಶಿಶುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಉಂಟಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಕೆಲ ಪ್ರಕರಣಗಳಲ್ಲಿ ಮಕ್ಕಳಲ್ಲಿ ನರ ಸಂಬಂಧಿತ ಸಮಸ್ಯೆಗಳ ಅಪಾಯವೂ ಹೆಚ್ಚಾಗಬಹುದು. ಆದರೂ ಇದು ಎಲ್ಲರಲ್ಲೂ ಕಂಡುಬರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಿಶೇಷವಾಗಿ ದೀರ್ಘಕಾಲ ಬಿಸಿಲಿನಲ್ಲಿ ಕೆಲಸ ಮಾಡುವ ಅಥವಾ ಹೊರಗಡೆ ಹೆಚ್ಚು ಸಮಯ ಕಳೆಯುವ ಗರ್ಭಿಣಿಯರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು. ಈಗಾಗಲೇ ಆರೋಗ್ಯ ಸಮಸ್ಯೆಗಳಿರುವ ಮಹಿಳೆಯರು ಇನ್ನಷ್ಟು ಜಾಗರೂಕರಾಗಿರುವುದು ಅಗತ್ಯ. ದೇಹದಲ್ಲಿ ನೀರಿನ ಕೊರತೆಯಿಂದ ಆರಂಭವಾಗಿ ನಂತರ ಹೀಟ್ ಸ್ಟ್ರೋಕ್‌ಗೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ.

ಮುನ್ನೆಚ್ಚರಿಕಾ ಕ್ರಮವಾಗಿ ಗರ್ಭಿಣಿಯರು ದಿನಕ್ಕೆ ಕನಿಷ್ಠ 7 ರಿಂದ 8 ಗ್ಲಾಸ್ ನೀರು ಕುಡಿಯಬೇಕು. ಜೊತೆಗೆ ಎಳನೀರು, ಮಜ್ಜಿಗೆ ಸೇವಿಸುವುದು ಉಪಯುಕ್ತ. ಅಗತ್ಯವಿದ್ದಲ್ಲಿ ವೈದ್ಯರ ಸಲಹೆಯಂತೆ ಓಆರ್‌ಎಸ್ ಬಳಸಬಹುದು. ತೀವ್ರ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ, ಹಗುರವಾದ ಬಟ್ಟೆ ಧರಿಸುವುದು ಮತ್ತು ಸಾಕಷ್ಟು ವಿಶ್ರಾಂತಿ ಪಡೆಯುವುದು ಮುಖ್ಯ.

ಒಟ್ಟಾರೆ, ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯವನ್ನು ನಿರ್ಲಕ್ಷ್ಯ ಮಾಡಬಾರದು. ಸರಿಯಾದ ಜಾಗೃತಿ ಮತ್ತು ಮುನ್ನೆಚ್ಚರಿಕೆ ಕ್ರಮಗಳಿಂದ ತಾಯಿ ಹಾಗೂ ಶಿಶುವಿನ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿಲ್ಲ: ನಾಯಕತ್ವ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಆರ್.ಬಿ. ತಿಮ್ಮಾಪುರ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಹರಿದಾಡುತ್ತಿರುವ ಸುದ್ದಿಗಳು ಕೇವಲ ಮಾಧ್ಯಮಗಳಲ್ಲಿ ಮೂಡಿಬರುತ್ತಿರುವ ಊಹಾಪೋಹಗಳಷ್ಟೇ ಎಂದು ಹೇಳಿದರು.

“ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಯಾವುದೇ ಸೂಚನೆ ನೀಡಿಲ್ಲ. ಈ ಕುರಿತು ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆಯೂ ನಡೆದಿಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ವಿಚಾರ ಪ್ರಸ್ತಾಪವಾಗುತ್ತಿದೆ” ಎಂದು ಅವರು ತಿಳಿಸಿದರು.

ಯತೀಂದ್ರ ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ನಿಲುವಾಗಿದೆ. ಅದನ್ನು ಪಕ್ಷದ ಅಧಿಕೃತ ನಿಲುವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಮ್ಮಾಪುರ್ ಸ್ಪಷ್ಟಪಡಿಸಿದರು.

ಶಾಸಕರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುವುದು ಸಹಜ. ಅದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಿನಾಂಕ ನಿಗದಿ ಮಾಡಿ ಚರ್ಚೆಗೆ ಕರೆಯುವುದಾಗಿ ಹೇಳಿದ್ದರೂ, ಆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದರು.

ಬಂಗಾಳ-ಅಸ್ಸಾಂ ಫಲಿತಾಂಶಕ್ಕೆ ಚುನಾವಣಾ ಆಯುಕ್ತರನ್ನು ಹೊಣೆ ಮಾಡಿದ ಸಂತೋಷ್ ಲಾಡ್

ಬೆಂಗಳೂರು: ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶಗಳ ಬಳಿಕ ಸಚಿವ ಸಂತೋಷ್ ಲಾಡ್ ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ಬಿಜೆಪಿ ಗೆಲುವಿನ ಹಿಂದೆ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪಾತ್ರವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಯಂತೆ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂದು ಹೇಳಿದರು.

ಸರ್ಕಾರದ ಜನಪರ ಕಾರ್ಯಕ್ರಮಗಳು, ಕಾರ್ಯಕರ್ತರು ಹಾಗೂ ಮುಖಂಡರ ಪರಿಶ್ರಮದಿಂದ ಜನರು ನಮ್ಮ ಪರ ಮತ ಹಾಕಿದ್ದಾರೆ. ಅದರ ಫಲವಾಗಿ ಉಪ ಚುನಾವಣೆಯಲ್ಲಿ ಗೆಲುವು ದೊರೆತಿದೆ,” ಎಂದು ಸಂತೋಷ್ ಲಾಡ್ ಹೇಳಿದರು.

ಪಂಚರಾಜ್ಯಗಳ ಫಲಿತಾಂಶಗಳಲ್ಲಿ ತಮಿಳುನಾಡಿನ ಬೆಳವಣಿಗೆ ಅಚ್ಚರಿ ತಂದಿದೆ ಎಂದು ಹೇಳಿದ ಅವರು, ಟಿವಿಕೆ ನಾಯಕ ವಿಜಯ್ ಅವರ ಗೆಲುವಿಗೆ ಶುಭಾಶಯ ಕೋರಿದರು.

ತಮಿಳುನಾಡಿನಲ್ಲಿ ವಿಜಯ್ ಗೆಲುವು ಸರ್ಪ್ರೈಸ್ ಆಗಿದೆ. ಅವರು 35 ಶೇಕಡಾ ಮತಗಳನ್ನು ಪಡೆದಿದ್ದಾರೆ. ಕೇವಲ ಒಂದು ವರ್ಷದೊಳಗೆ ಸರಳ ಬಹುಮತ ಪಡೆದಿರುವುದು ಗಮನಾರ್ಹ ಸಾಧನೆ. ಅವರಿಗೆ ಶುಭವಾಗಲಿ,” ಎಂದರು.

ಟಿವಿಕೆ ಜೊತೆ ಕಾಂಗ್ರೆಸ್ ಮೈತ್ರಿ ಸಾಧ್ಯತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಇದೇ ವೇಳೆ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಗಳ ಕುರಿತು ತೀವ್ರ ಆರೋಪ ಮಾಡಿದ ಸಂತೋಷ್ ಲಾಡ್, ಅಸ್ಸಾಂ ಚುನಾವಣೆಯಲ್ಲಿ ‘ಮ್ಯಾನ್ ಆಫ್ ದಿ ಮ್ಯಾಚ್’ ಮತ್ತು ‘ಮ್ಯಾನ್ ಆಫ್ ದಿ ಸಿರೀಸ್’ ಜ್ಞಾನೇಶ್ ಕುಮಾರ್, ಎಂದು ವ್ಯಂಗ್ಯವಾಡಿದರು.

ಹರಿಹರ ಪಂಚಮಸಾಲಿ ಪೀಠದಲ್ಲಿ ಹೆಚ್ಚಿದ ಉದ್ವಿಗ್ನತೆ; ಸಭೆ-ಸಮಾರಂಭಗಳಿಗೆ ಜಿಲ್ಲಾಡಳಿತ ನಿಷೇಧಾಜ್ಞೆ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ಸ್ವಾಮೀಜಿ ಬೆಂಬಲಿಗರು ಮತ್ತು ಟ್ರಸ್ಟಿಗಳ ನಡುವಿನ ಗಲಾಟೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಠದಲ್ಲಿ ಸಭೆ, ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಮಠದಲ್ಲಿ ಕಳೆದ ಮಾರ್ಚ್ 10ರಿಂದ ಎರಡು ಬಣಗಳ ಬೆಂಬಲಿಗರು ಪ್ರತ್ಯೇಕವಾಗಿ ಸಭೆಗಳು, ಸಮಾರಂಭಗಳು ಹಾಗೂ ಸುದ್ದಿಗೋಷ್ಠಿಗಳನ್ನು ನಡೆಸುತ್ತಿದ್ದು, ಪರಿಸ್ಥಿತಿ ಉದ್ವಿಗ್ನ ಸ್ವರೂಪ ಪಡೆದುಕೊಂಡಿದೆ.

ಈ ಬೆಳವಣಿಗೆಗಳಿಂದ ಗಲಾಟೆ, ಪ್ರಚೋದನಕಾರಿ ಹೇಳಿಕೆಗಳು ಹಾಗೂ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗುವ ಆತಂಕವೂ ವ್ಯಕ್ತವಾಗಿದೆ.

ಪೊಲೀಸ್ ಇಲಾಖೆ ಪದೇ ಪದೇ ಭದ್ರತೆ ಒದಗಿಸಲು ಸಾಧ್ಯವಿಲ್ಲದ ಹಿನ್ನೆಲೆ, ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಮೇ 1ರಿಂದ ಮೇ 30ರವರೆಗೆ ಮಠದಲ್ಲಿ ಯಾವುದೇ ಸಭೆ, ಸಮಾರಂಭ ಅಥವಾ ಪತ್ರಿಕಾಗೋಷ್ಠಿ ನಡೆಸದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಸಂಬಂಧ ಸ್ವಾಮೀಜಿ, ಟ್ರಸ್ಟಿಗಳು ಹಾಗೂ ಅವರ ಬೆಂಬಲಿಗರಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಇದೀಗ ಮೇ 5ರಂದು ಟ್ರಸ್ಟಿಗಳ ವಿರುದ್ಧ ಸ್ವಾಮೀಜಿ ಬೆಂಬಲಿಗರು ‘ಲೆಕ್ಕಕೊಡಿ’ ಅಭಿಯಾನ ಹಮ್ಮಿಕೊಳ್ಳಲು ಮುಂದಾಗಿದ್ದರು. ಏಪ್ರಿಲ್ 27ರಂದು ಟ್ರಸ್ಟಿಗಳು ಸುಳ್ಳು ಲೆಕ್ಕ ನೀಡಿದ್ದಾರೆ ಎಂದು ಆರೋಪಿಸಿರುವ ಬೆಂಬಲಿಗರು, ಪಾರದರ್ಶಕ ಲೆಕ್ಕಪತ್ರ ಮಂಡನೆಗೆ ಒತ್ತಾಯಿಸಲು ಸಜ್ಜಾಗಿದ್ದರು.

ಇದರ ಜೊತೆಗೆ ಗ್ರಾಮಾಂತರ ಪ್ರದೇಶಗಳಿಗೆ ತೆರಳಿ ಭಕ್ತರು ನೀಡಿದ ಕಾಣಿಕೆಗಳ ವಿವರ ಸಂಗ್ರಹಿಸುವ ಅಭಿಯಾನಕ್ಕೂ ಅವರು ಮುಂದಾಗಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಭೆ ನಡೆಸಲು ಸ್ವಾಮೀಜಿ ಬೆಂಬಲಿಗರು ಯತ್ನಿಸಿರುವುದು ಮಠದ ಒಳಗಿರುವ ವಿವಾದ ಮತ್ತಷ್ಟು ತೀವ್ರಗೊಂಡಿರುವುದನ್ನು ಸೂಚಿಸಿದೆ.

ಸೈಕಲ್ ಸವಾರಿ ವೇಳೆ ಗೂಡ್ಸ್ ವಾಹನ ಡಿಕ್ಕಿ: ಬೇಸಿಗೆ ರಜೆಗೆ ತಾತನ ಮನೆಗೆ ಬಂದಿದ್ದ ಬಾಲಕನ ದುರ್ಮರಣ!

ಚಾಮರಾಜನಗರ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಾತನ ಮನೆಗೆ ಬಂದಿದ್ದ 11 ವರ್ಷದ ಬಾಲಕ ಸೈಕಲ್ ಸವಾರಿ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಳ್ಳೇಗಾಲ ತಾಲೂಕಿನ ಹರಳೆ–ಅಣಗಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಬೆಂಗಳೂರಿನ ನಿವಾಸಿ ಆನಂದ್ರಾಜ್ ಅವರ ಪುತ್ರ ಯಶವಂತ್ ಎಂದು ಗುರುತಿಸಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಯಶವಂತ್ ಅಣಗಳ್ಳಿ ಗ್ರಾಮದ ತನ್ನ ತಾತ ಶಿವಲಿಂಗಯ್ಯ ಅವರ ಮನೆಗೆ ಬಂದಿದ್ದ. ಮಂಗಳವಾರ ಬೆಳಗ್ಗೆ ಆಟವಾಡಲು ಕುಟುಂಬಸ್ಥರು ಸೈಕಲ್ ನೀಡಿದ್ದರು.

ಸೈಕಲ್ ಸವಾರಿ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಪವಿಭಾಗ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸರು ಗೂಡ್ಸ್ ವಾಹನ ಹಾಗೂ ಸೈಕಲ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿಸಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.

error: Content is protected !!