ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಆನೇಕಲ್ ತಾಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿರುವ ವಿವಿಧ ಬೇಡಿಕೆಗಳು ಸರ್ಕಾರದ ಗಮನದಲ್ಲಿವೆ. ಖಾಸಗಿ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವಂತೆ ಬೇಡಿಕೆ ಬಂದಿದ್ದು, ಈ ಕುರಿತು ಮುಂದಿನ ದಿನಗಳಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇನ್ನು ಬೆಂಗಳೂರಿನ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಶಾಲೆಗಳ ಸಮಯ ಬದಲಾವಣೆ ಮಾಡುವಂತೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ ಸಲ್ಲಿಸಿದೆ. ಈ ವಿಚಾರವನ್ನು ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ಖಾಸಗಿ ಶಾಲೆಗಳ ಆರ್ಆರ್ ನವೀಕರಣ ಹಾಗೂ ಬೆಂಗಳೂರು ನಗರದಲ್ಲಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಮನೆ ಬಾಡಿಗೆ ಭತ್ಯೆ (ಎಚ್ಆರ್ಎ)ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೂ ನೀಡುವಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ. ಈ ಬಗ್ಗೆಯೂ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಖಾಸಗಿ ಶಾಲೆಗಳು ಸರ್ಕಾರಕ್ಕೆ ಹಣ ಪಾವತಿಸಲು ಸಿದ್ಧವಿದ್ದು, ಸರ್ಕಾರಿ ಪಠ್ಯಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿರುವ ವಿಚಾರವೂ ಸರ್ಕಾರದ ಗಮನದಲ್ಲಿದೆ. ಈ ಬೇಡಿಕೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

