Home Blog

ಕೊಡಗಿನಲ್ಲಿ ಹೃದಯವಿದ್ರಾವಕ ಘಟನೆ: ಶಾಲಾ ಗೇಟ್ ಕುಸಿದು 4 ವರ್ಷದ ಮಗು ಸಾವು!

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಮಗು ಮೃತಪಟ್ಟಿದೆ.

ಮೃತ ಮಗುವನ್ನು ಅಪೂರ್ವ ಎಂದು ಗುರುತಿಸಲಾಗಿದೆ. ಆಕೆ ಸತೀಶ್ ಮತ್ತು ಪವಿತ್ರ ದಂಪತಿಯ ಪುತ್ರಿಯಾಗಿದ್ದು, ಮಗಳ ಸಾವಿನಿಂದ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ.

ಮಾಹಿತಿ ಪ್ರಕಾರ, ಮಗು ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಗೇಟ್ ಏಕಾಏಕಿ ಕುಸಿದು ಬಿದ್ದಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಈ ಘಟನೆ ಬಳಿಕ ಬಸವನಹಳ್ಳಿ ಹಾಡಿಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಆವರಣದ ಸುರಕ್ಷತೆ ಬಗ್ಗೆ ಸಾರ್ವಜನಿಕರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಘಟನೆ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Karnataka Weather Update: ಆಗಸ್ಟ್ 13ರವರೆಗೆ ರಾಜ್ಯದಲ್ಲಿ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಆಗಸ್ಟ್ 13ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬೆಂಗಳೂರಿಗೆ ಯಾವುದೇ ಅಲರ್ಟ್ ಘೋಷಣೆ ಮಾಡಲಾಗಿಲ್ಲ.

ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:

ಆಗಸ್ಟ್ 8ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 9ರಿಂದ 13ರವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಹಾಗೂ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?

ಕೊಡಗು ಜಿಲ್ಲೆಯ ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಇದರ ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಮಳೆ ಹಾಗೂ ಗಾಳಿಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಕರಾವಳಿಯಲ್ಲಿ ಮತ್ತೆ ಗುಂಡಿನ ಸದ್ದು; ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿಕ್ಕಿ ಹತ್ಯೆ !

0

ಉಡುಪಿ: ಕರಾವಳಿ ಭಾಗದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಈ ಘಟನೆ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಡೇವಿಡ್ ಡಿಸೋಜಾ ಅವರು ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದರು.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಹಂತಕರಿಗಾಗಿ ಪೊಲೀಸರ ಹುಡುಕಾಟ:

ಡೇವಿಡ್ ಡಿಸೋಜಾ ಅವರ ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷ, ಹಣಕಾಸಿನ ವ್ಯವಹಾರ ಸೇರಿದಂತೆ ಹಲವು ಕಾರಣಗಳಿರುವ ಸಾಧ್ಯತೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಉಡುಪಿಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು ಮತ್ತೊಂದು ಶೂಟೌಟ್:

ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಮತ್ತೊಂದು ಗುಂಡಿನ ದಾಳಿ ಪ್ರಕರಣ ನಡೆದಿತ್ತು.

ಕುಂದಾಪುರದ ಹೋಲಿ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ಉದ್ಯಮಿ ಐವನ್ ರೀಚರ್ಡ್ ಮಸ್ಕರೇನಸ್ (45) ಅವರನ್ನು ಡೆರಿಕ್ ಎಂಬಾತ ನಾಡಪಿಸ್ತೂಲಿನಿಂದ ಗುಂಡಿಕ್ಕಿ ಕೊಲೆ ಮಾಡಿದ್ದ.

ಐವನ್ ಅವರು 27 ಲಕ್ಷ ರೂಪಾಯಿ ಹಣ ವಸೂಲಿ ಮಾಡಿಕೊಟ್ಟಿದ್ದರು. ಆದರೆ ಅವರಿಗೆ ನೀಡಬೇಕಿದ್ದ 1.5 ಲಕ್ಷ ರೂಪಾಯಿ ಬಾಕಿ ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. ಇದೇ ವಿಚಾರ ಕೊಲೆಯಲ್ಲಿ ಅಂತ್ಯವಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು.

ಈ ಪ್ರಕರಣದ ಆರೋಪಿ ಡೆರಿಕ್ ಪತ್ತೆಗಾಗಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ.

ಕರಾವಳಿಯಲ್ಲಿ ಆತಂಕ:

ಉಡುಪಿ ಜಿಲ್ಲೆಯಲ್ಲಿ ಪದೇಪದೇ ನಡೆಯುತ್ತಿರುವ ಗುಂಡಿನ ದಾಳಿ ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಇದೀಗ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್ ನಿವಾಸಗಳ ಮೇಲೆ ED ದಾಳಿ

ಬೆಳಗಾವಿ: ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಕಂಪನಿ ಮಾಲೀಕ ಶಿವಾನಂದ ನೀಲಣ್ಣನವರ್ ಅವರಿಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ.

40 ಸಾವಿರಕ್ಕೂ ಹೆಚ್ಚು ಹೂಡಿಕೆದಾರರಿಗೆ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಳಗಾವಿಯ ಮೂರು ಪ್ರಮುಖ ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಮಂಗಳೂರು ಹಾಗೂ ಗೋವಾದಿಂದ ಆಗಮಿಸಿದ ಇಡಿ ಅಧಿಕಾರಿಗಳ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಶಿವಾನಂದ ನೀಲಣ್ಣನವರ್ ಅವರಿಗೆ ಸೇರಿದ ಬೆಳಗಾವಿಯ ಶಿವಬಸವನಗರದಲ್ಲಿರುವ ಎಂ.ಎಸ್. ಟವರ್ ಅಪಾರ್ಟ್‌ಮೆಂಟ್, ಬಡಕುಂದ್ರಿ ಗ್ರಾಮದ ನಿವಾಸ ಹಾಗೂ ಚಿಕ್ಕೋಡಿ ಪಟ್ಟಣದಲ್ಲಿರುವ ಅವರ ವ್ಯವಹಾರ ಪಾಲುದಾರ ಸುಭಾಷ್ ನಂದರಗಿ ಅವರ ಮನೆ ಮೇಲೆ ಶೋಧ ನಡೆಸಲಾಗಿದೆ.

ದಾಳಿ ವೇಳೆ ಇಡಿ ಅಧಿಕಾರಿಗಳು ಶಿವಾನಂದ ನೀಲಣ್ಣನವರ್ ಹಾಗೂ ಅವರ ಪತ್ನಿ ಸಂಗೀತಾ ಅವರನ್ನು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

2,400 ಕೋಟಿ ಸಂಗ್ರಹ ಆರೋಪ:

ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ಸ್ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿತ್ತು. ಬಳಿಕ ಮೇ 15ರಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಂಪನಿ ಕಚೇರಿ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿತ್ತು.

ಅಕ್ರಮವಾಗಿ ಠೇವಣಿ ಸಂಗ್ರಹ ಹಾಗೂ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಣ ಸಂಗ್ರಹಿಸಿದ ಆರೋಪದಡಿ ಶಿವಾನಂದ ನೀಲಣ್ಣನವರ್ ಅವರನ್ನು ಬಂಧಿಸಲಾಗಿತ್ತು. ತನಿಖೆ ವೇಳೆ ಸುಮಾರು ₹2,400 ಕೋಟಿ ಹಣವನ್ನು 40,700ಕ್ಕೂ ಹೆಚ್ಚು ಜನರಿಂದ ಸಂಗ್ರಹಿಸಿರುವುದು ಬೆಳಕಿಗೆ ಬಂದಿತ್ತು.

ಈ ಹಣದಲ್ಲಿ ಸುಮಾರು ₹540 ಕೋಟಿಯನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿದ್ದು, ಅದರಲ್ಲಿ ಸುಮಾರು ₹170 ಕೋಟಿ ನಷ್ಟವಾಗಿದೆ ಎಂದು ಸಿಐಡಿ ತನಿಖೆಯಲ್ಲಿ ಮಾಹಿತಿ ನೀಡಲಾಗಿತ್ತು.

ಸಿಐಡಿ ಬಳಿಕ ED ತನಿಖೆ:

ಪ್ರಕರಣದ ತನಿಖೆಯನ್ನು ಬಳಿಕ ಸಿಐಡಿಗೆ ವಹಿಸಲಾಗಿತ್ತು. ಬಂಧನಕ್ಕೊಳಗಾಗಿದ್ದ ಶಿವಾನಂದ ನೀಲಣ್ಣನವರ್ ಪ್ರಸ್ತುತ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಇದೀಗ ಹಣಕಾಸು ಅಕ್ರಮ ವ್ಯವಹಾರಗಳ ಜಾಡು ಹಿಡಿದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಿಂದ ಕೊಯಿಕ್ಕೋಡ್‌ಗೆ KSRTC ಫ್ಲೈ ಬಸ್ ಸೇವೆ ಆರಂಭ; ಆಗಸ್ಟ್ 15ರಿಂದ ಸಂಚಾರ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಬೆಂಗಳೂರಿನಿಂದ ಕೇರಳದ ಕೊಯಿಕ್ಕೋಡ್‌ಗೆ ಸಂಪರ್ಕ ಕಲ್ಪಿಸುವ ನೂತನ ಫ್ಲೈ ಬಸ್ ಸೇವೆ ಆರಂಭಿಸಲಾಗುತ್ತಿದೆ. ಆಗಸ್ಟ್ 15ರಿಂದ ಈ ಬಸ್ ಸಂಚಾರ ಆರಂಭವಾಗಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 10.45ಕ್ಕೆ ಹೊರಡುವ ಬಸ್, ಯಲಹಂಕ, ಹೆಬ್ಬಾಳ ಹಾಗೂ ನಾಯಂಡಳ್ಳಿ ಮೆಟ್ರೋ ನಿಲ್ದಾಣದ ಮೂಲಕ ಮೈಸೂರು, ಹುಣಸೂರು, ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟಾ, ಮಾನಂತವಾಡಿ ಹಾಗೂ ಕಲ್ಪೆಟ್ಟಾ ಮಾರ್ಗವಾಗಿ ಕೊಯಿಕ್ಕೋಡ್ ತಲುಪಲಿದೆ.

ಬೆಂಗಳೂರು ಏರ್‌ಪೋರ್ಟ್‌ನಿಂದ ಹೊರಡುವ ಬಸ್ ಬೆಳಗ್ಗೆ 7.15ಕ್ಕೆ ಕೊಯಿಕ್ಕೋಡ್ ತಲುಪಲಿದೆ. ಕೊಯಿಕ್ಕೋಡ್‌ನಿಂದ ಸಂಜೆ 7.30ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 4.15ಕ್ಕೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ.

ಪ್ರಯಾಣದ ಸಮಯ:

ಬೆಂಗಳೂರು ಏರ್‌ಪೋರ್ಟ್‌ನಿಂದ ರಾತ್ರಿ 10.45ಕ್ಕೆ ಹೊರಡುವ ಬಸ್, ನಾಯಂಡಳ್ಳಿ ಮೆಟ್ರೋ ನಿಲ್ದಾಣಕ್ಕೆ ರಾತ್ರಿ 11.55ಕ್ಕೆ, ಮೈಸೂರಿಗೆ ಬೆಳಗಿನ ಜಾವ 2.45ಕ್ಕೆ, ಗೋಣಿಕೊಪ್ಪಕ್ಕೆ 4.15ಕ್ಕೆ, ಮಾನಂತವಾಡಿಗೆ 5.20ಕ್ಕೆ, ಕಲ್ಪೆಟ್ಟಾಗೆ ಬೆಳಗ್ಗೆ 6ಕ್ಕೆ ಹಾಗೂ ಕೊಯಿಕ್ಕೋಡ್‌ಗೆ 7.15ಕ್ಕೆ ತಲುಪಲಿದೆ.

ಕೊಯಿಕ್ಕೋಡ್‌ನಿಂದ ಸಂಜೆ 7.30ಕ್ಕೆ ಹೊರಡುವ ಬಸ್, ಕಲ್ಪೆಟ್ಟಾಗೆ 8.40ಕ್ಕೆ, ಮಾನಂತವಾಡಿಗೆ 9.15ಕ್ಕೆ, ಗೋಣಿಕೊಪ್ಪಕ್ಕೆ 10.50ಕ್ಕೆ, ಮೈಸೂರಿಗೆ ರಾತ್ರಿ 12.30ಕ್ಕೆ, ನಾಯಂಡಳ್ಳಿ ಮೆಟ್ರೋ ನಿಲ್ದಾಣಕ್ಕೆ 3.15ಕ್ಕೆ ಹಾಗೂ ಬೆಂಗಳೂರು ಏರ್‌ಪೋರ್ಟ್‌ಗೆ ಬೆಳಗ್ಗೆ 4.15ಕ್ಕೆ ತಲುಪಲಿದೆ.

ಟಿಕೆಟ್ ದರ ಎಷ್ಟು?

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ₹960, ಗೋಣಿಕೊಪ್ಪಕ್ಕೆ ₹1,200, ಮಾನಂತವಾಡಿಗೆ ₹1,350, ಕಲ್ಪೆಟ್ಟಾಗೆ ₹1,400 ಹಾಗೂ ಕೊಯಿಕ್ಕೋಡ್‌ಗೆ ₹1,500 ಟಿಕೆಟ್ ದರ ನಿಗದಿಪಡಿಸಲಾಗಿದೆ.

ಹೊಸ ಫ್ಲೈ ಬಸ್ ಸೇವೆಯಿಂದ ಬೆಂಗಳೂರು, ಮೈಸೂರು ಹಾಗೂ ಕೊಡಗು ಮಾರ್ಗವಾಗಿ ಕೇರಳದ ಕೊಯಿಕ್ಕೋಡ್‌ಗೆ ಪ್ರಯಾಣಿಸುವವರಿಗೆ ಹೆಚ್ಚಿನ ಅನುಕೂಲವಾಗಲಿದೆ.

RTO ಕಚೇರಿಗೆ ಉಪಲೋಕಾಯುಕ್ತರ ದಿಢೀರ್ ಭೇಟಿ; ಸಿಬ್ಬಂದಿಗೆ ಖಡಕ್ ಎಚ್ಚರಿಕೆ

0

ಗದಗ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗೆ ಶುಕ್ರವಾರ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ, ಕಚೇರಿ ನಿರ್ವಹಣೆ, ದಾಖಲೆಗಳ ನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಕಚೇರಿಯ ವಿವಿಧ ರಿಜಿಸ್ಟರ್‌ಗಳನ್ನು ಪರಿಶೀಲಿಸಿದ ಅವರು, ಜಪ್ತಿ ಮಾಡಿದ ವಾಹನಗಳು, ಶಾಲಾ ವಾಹನಗಳು ಹಾಗೂ ತೆರಿಗೆ ಬಾಕಿ ಇರುವ ವಾಹನಗಳ ವಿವರಗಳನ್ನು ಪರಿಶೀಲಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಅಗತ್ಯ ದಾಖಲೆಗಳಿಲ್ಲದೆ ಹಾಗೂ ತೆರಿಗೆ ಪಾವತಿಸದೆ ಸಂಚರಿಸುವ ಶಾಲಾ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುವಂತೆ ನಿರ್ದೇಶನ ನೀಡಿದರು.

ಬಳಿಕ ಸಿಬ್ಬಂದಿಯ ಹಾಜರಾತಿ, ನಗದು ವಹಿ ಹಾಗೂ ಚಲನ-ವಲನ ವಹಿಗಳನ್ನು ಪರಿಶೀಲಿಸಿದ ಅವರು, ವಹಿಗಳನ್ನು ಸಮರ್ಪಕವಾಗಿ ನಿರ್ವಹಿಸದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ನಿಯಮಿತವಾಗಿ ದಾಖಲೆಗಳನ್ನು ನಮೂದಿಸದ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದ ಅವರು, ಎಲ್ಲ ಸಿಬ್ಬಂದಿಯ ಮೊಬೈಲ್‌ಗಳನ್ನು ಪರಿಶೀಲಿಸುವಂತೆ ಆದೇಶಿಸಿದರು.

ಪ್ರತಿ ಸಿಬ್ಬಂದಿಯೂ ಪ್ರತಿದಿನ ಕಡ್ಡಾಯವಾಗಿ ಹಾಜರಾತಿ, ನಗದು ವಹಿ ಹಾಗೂ ಚಲನ-ವಲನ ವಹಿಗಳನ್ನು ಸರಿಯಾಗಿ ನಿರ್ವಹಿಸಬೇಕು. ಅಧಿಕಾರಿಗಳು ಸಹ ಈ ದಾಖಲೆಗಳನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ತಿಳಿಸಿದರು.

ಆನ್‌ಲೈನ್ ಸೇವೆಗಳಿದ್ದರೂ ಮಧ್ಯವರ್ತಿಗಳು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದಿವೆ. ಇಂತಹ ಅಕ್ರಮಗಳು ಮರುಕಳಿಸಿದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಉಪಲೋಕಾಯುಕ್ತರು ಖಡಕ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ್, ಸುನೀಲಕುಮಾರ್ ಆರ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ ಜಿ.ಪಿ. ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

“ಸರ್ಕಾರಿ ಸೇವೆಗಳು ಪಾರದರ್ಶಕವಾಗಿ ಜನರಿಗೆ ತಲುಪಬೇಕು. ಆನ್‌ಲೈನ್ ವ್ಯವಸ್ಥೆಯಲ್ಲೂ ಮಧ್ಯವರ್ತಿಗಳ ಹಾವಳಿ ಕಂಡುಬಂದರೆ ಕಠಿಣ ಶಿಸ್ತು ಕ್ರಮ ಅನಿವಾರ್ಯ ಎಂದು ನ್ಯಾಯಮೂರ್ತಿಗಳು ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಹೇಳಿದರು.

ಪುತ್ರಿಗಾಗಿ ನಾನು ಸಚಿವ ಸ್ಥಾನ ಬಿಡುತ್ತೇನೆ ಎಂಬ ವದಂತಿ ಸುಳ್ಳು: ಎಲ್ಲ ಗೊಂದಲಗಳಿಗೆ ತೆರೆ ಎಳೆದ ಕೆ.ಹೆಚ್. ಮುನಿಯಪ್ಪ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯ ಬಳಿಕ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳು ಜೋರಾಗಿರುವ ನಡುವೆಯೇ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಮ್ಮ ಪುತ್ರಿ ಹಾಗೂ ಕೆಜಿಎಫ್ ಶಾಸಕಿಯಾದ ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ಕಲ್ಪಿಸಲು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯನ್ನು ಅವರ ಕಚೇರಿ ಸ್ಪಷ್ಟವಾಗಿ ತಳ್ಳಿಹಾಕಿದೆ.

ಈ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅವರ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕೆಲವು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ “ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡಲು ಮುನಿಯಪ್ಪ ಸಚಿವ ಸ್ಥಾನ ತ್ಯಜಿಸಲಿದ್ದಾರೆ” ಎಂಬ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟಪಡಿಸಿದೆ.

ಪ್ರಕಟಣೆಯಲ್ಲಿ, ಕೆ.ಎಚ್. ಮುನಿಯಪ್ಪ ಕಳೆದ ಐದು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಹಿರಿಯ ನಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇಂದಿರಾ ಗಾಂಧಿಯವರ ಕಾಲದಿಂದಲೂ ಪಕ್ಷವನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿರುವ ಅವರು, ಕುಟುಂಬ ಸಮೇತ ಕಾಂಗ್ರೆಸ್ ಸಿದ್ಧಾಂತಗಳಿಗೆ ಬದ್ಧರಾಗಿದ್ದಾರೆ ಎಂದು ಹೇಳಲಾಗಿದೆ.

ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮುನಿಯಪ್ಪ, ಕೇಂದ್ರದಲ್ಲಿ ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಶಂಕರಾನಂದ ಹಾಗೂ ಜಾಫರ್ ಶರೀಫ್ ನಂತರ ಅತ್ಯಧಿಕ ಬಾರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕರಲ್ಲಿ ಅವರೂ ಒಬ್ಬರು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ ರಾಜ್ಯ ಸರ್ಕಾರದಲ್ಲಿ ಆಹಾರ ಇಲಾಖೆಯ ಸಚಿವರಾಗಿರುವ ಮುನಿಯಪ್ಪ, ಪರಿಶಿಷ್ಟ ಜಾತಿ ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿ ನೀಡುವಂತೆ ಕಾಂಗ್ರೆಸ್ ನಾಯಕತ್ವದ ಗಮನಕ್ಕೆ ಮನವಿ ಮಾಡಿರುವುದಾಗಿ ಪ್ರಕಟಣೆ ತಿಳಿಸಿದೆ. ಈ ಕುರಿತು ಪಕ್ಷದ ವರಿಷ್ಠರಿಂದ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ ಎಂದೂ ಹೇಳಲಾಗಿದೆ.

ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಯಾವುದೇ ವಾಸ್ತವಿಕತೆ ಇಲ್ಲ. ಪರಿಶೀಲಿಸದ ಮಾಹಿತಿಯನ್ನು ನಂಬಬಾರದು ಎಂದು ಸಚಿವರ ಕಚೇರಿ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ಮನವಿ ಮಾಡಿದೆ.

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣದ ವದಂತಿಗೆ ಅಧಿಕೃತ ತೆರೆ: ₹3,300 ಕೋಟಿ ಹಣಕಾಸಿನ ಲೆಕ್ಕಪತ್ರ ಸಂಪೂರ್ಣ ಪಕ್ಕಾ ಎಂದ ಟ್ರಸ್ಟ್!

0

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ₹3,300 ಕೋಟಿ ದೇಣಿಗೆ ಹಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಕ್ರಮ ಅಥವಾ ಹಗರಣ ನಡೆದಿದೆ ಎಂಬ ಆರೋಪಗಳು ಆಧಾರರಹಿತವಾಗಿವೆ ಎಂದು ಸರ್ಕಾರಿ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಭಕ್ತರು ನೀಡಿರುವ ₹3,300 ಕೋಟಿ ದೇಣಿಗೆಯ ಪ್ರತಿಯೊಂದು ರೂಪಾಯಿಯೂ ಸುರಕ್ಷಿತವಾಗಿದ್ದು, ಸಂಪೂರ್ಣ ಲೆಕ್ಕಪರಿಶೋಧನೆಗೆ ಒಳಪಟ್ಟಿದೆ. ಟ್ರಸ್ಟ್‌ನ ಆಡಳಿತದಲ್ಲಿ ಯಾವುದೇ ರೀತಿಯ ಹಣಕಾಸು ಅಕ್ರಮ ನಡೆದಿಲ್ಲ. ಇತ್ತೀಚೆಗೆ ಬೆಳಕಿಗೆ ಬಂದಿರುವುದು ಹುಂಡಿಯಲ್ಲಿನ ನಗದು ಎಣಿಕೆ ವೇಳೆ ನಡೆದ ಪ್ರತ್ಯೇಕ ಕಳ್ಳತನದ ಪ್ರಕರಣ ಮಾತ್ರ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಾರ್ವಜನಿಕರಿಂದ ಬಂದಿರುವ ₹3,300 ಕೋಟಿ ದೇಣಿಗೆಯನ್ನು ಸ್ವತಂತ್ರ ಬಾಹ್ಯ ಲೆಕ್ಕಪರಿಶೋಧನಾ ಸಂಸ್ಥೆಯಾದ ‘ವಿ. ಶಂಕರ್ ಅಯ್ಯರ್ ಆ್ಯಂಡ್ ಕಂಪನಿ’ ಪರಿಶೀಲಿಸಿದೆ.

ಟ್ರಸ್ಟ್‌ ಮಾಹಿತಿ ಪ್ರಕಾರ, ರಾಮ ಮಂದಿರ ನಿರ್ಮಾಣಕ್ಕಾಗಿ ಸುಮಾರು ₹1,800 ಕೋಟಿ ಹಾಗೂ ಭೂ ಖರೀದಿಗೆ ಸುಮಾರು ₹400 ಕೋಟಿ ವೆಚ್ಚ ಮಾಡಲಾಗಿದೆ. ಎಲ್ಲಾ ಹಣಕಾಸು ವ್ಯವಹಾರಗಳನ್ನು ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕವೇ ನಡೆಸಲಾಗಿದ್ದು, ಯಾವುದೇ ನಗದು ವಹಿವಾಟು ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಂಡಿಯಿಂದ ಸಂಗ್ರಹಿಸಿದ ಹಣವನ್ನು ಯಂತ್ರಗಳ ಮೂಲಕ ಎಣಿಕೆ ಮಾಡುವ ಮೊದಲು ಕೈಯಿಂದ ಬೇರ್ಪಡಿಸುವ ಪ್ರಕ್ರಿಯೆ ವೇಳೆ ಕಳ್ಳತನ ನಡೆದಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇಮಿಸಿದ್ದ ‘ಸೈನಿಕ್ ಸೆಕ್ಯುರಿಟಿ ಸರ್ವೀಸಸ್’ (SSS) ಸಂಸ್ಥೆಯ ಆರು ಹೊರಗುತ್ತಿಗೆ ಸಿಬ್ಬಂದಿ ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪತ್ತೆಯಾಗಿದೆ.

ಆರೋಪಿಗಳನ್ನು ತಕ್ಷಣವೇ ಬಂಧಿಸಲಾಗಿದ್ದು, ಬಂಧಿತರಲ್ಲಿ ಯಾರೂ ರಾಮ ಮಂದಿರ ಟ್ರಸ್ಟ್ ಅಥವಾ ದೇವಸ್ಥಾನದ ಆಡಳಿತದ ನೇರ ಸಿಬ್ಬಂದಿಯಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಕಳ್ಳತನದ ಪ್ರಕರಣದ ತನಿಖೆಗಾಗಿ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ದೇವಸ್ಥಾನದ ಸುತ್ತಮುತ್ತಲಿನ ಭೂ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳನ್ನೂ ಸರ್ಕಾರ ತಳ್ಳಿಹಾಕಿದೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಭೂಮಿಯ ಬೆಲೆ ಗಣನೀಯವಾಗಿ ಏರಿಕೆಯಾದ ಕಾರಣ ಹಾಗೂ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಪರಿಹಾರ ನೀಡಬೇಕಾದ ಹಿನ್ನೆಲೆಯಲ್ಲಿ ವೆಚ್ಚ ಹೆಚ್ಚಾಗಿದೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳ್ಳತನದ ಘಟನೆ ಬಹಿರಂಗವಾದ ಬಳಿಕವೂ ಅಯೋಧ್ಯೆ ರಾಮ ಮಂದಿರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹಾಗೂ ದೇಣಿಗೆಯ ಪ್ರಮಾಣದಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ.

2026-27ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (Q1) ಹುಂಡಿ ದೇಣಿಗೆಯ ಮೂಲಕವೇ ಪ್ರತಿ ತಿಂಗಳು ಸರಾಸರಿ ₹5 ಕೋಟಿ ನಗದು ಸಂಗ್ರಹವಾಗುತ್ತಿದೆ ಎಂದು ಮಾಹಿತಿ ನೀಡಲಾಗಿದೆ.

ಇಂತಹ ಘಟನೆಗಳು ಮರುಕಳಿಸದಂತೆ ಹುಂಡಿ ಹಣ ಎಣಿಕೆ ಕೇಂದ್ರಗಳಲ್ಲಿ ಡಿಜಿಟಲ್ ಸ್ಕ್ಯಾನಿಂಗ್ ವ್ಯವಸ್ಥೆ ಹಾಗೂ ಹೆಚ್ಚುವರಿ ಬಯೋಮೆಟ್ರಿಕ್ ಭದ್ರತಾ ಕ್ರಮಗಳನ್ನು ಜಾರಿಗೆ ತರಲು ಎಸ್‌ಬಿಐ ಮತ್ತು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಂಟಿಯಾಗಿ ನಿರ್ಧರಿಸಿವೆ.

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ: ಗೇಟ್ʼಗೆ ಪೊಲೀಸ್ ಜೀಪ್ ಡಿಕ್ಕಿ – ತಪ್ಪಿದ ಅನಾಹುತ

ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬರ ಪರಿಸ್ಥಿತಿ ಪರಿಶೀಲನೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿದ್ದರು. ಈ ವೇಳೆ ಅಜ್ಜಂಪುರದ ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸಚಿವರ ವಾಹನದ ಮುಂಭಾಗದಲ್ಲಿ ಸಾಗುತ್ತಿದ್ದ ಪೊಲೀಸ್ ಜೀಪ್ ತಿರುವಿನ ಬಳಿ ಬ್ರೇಕ್ ಹಾಕುವ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಜೀಪ್ ನೇರವಾಗಿ ಅಮೃತ ಮಹಲ್ ತಳಿ ಸಂವರ್ಧನ ಕೇಂದ್ರದ ಪ್ರವೇಶ ದ್ವಾರದ ಗೇಟ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಆದರೆ ಪೊಲೀಸ್ ಜೀಪ್‌ನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

ತಮಿಳು ಸಿಎಂ ವಿಜಯ್ ದಾಂಪತ್ಯಕ್ಕೆ ಹೊಸ ತಿರುವು: ಪತ್ನಿ ಸಂಗೀತ ವಿಚ್ಛೇದನ ಅರ್ಜಿ ವಾಪಸ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಅವರ ದಾಂಪತ್ಯ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದೆ. ಅವರ ಪತ್ನಿ ಸಂಗೀತ, ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಅಧಿಕೃತವಾಗಿ ಹಿಂಪಡೆದಿದ್ದಾರೆ. ಇದರಿಂದ ಹಲವು ತಿಂಗಳುಗಳಿಂದ ಸುದ್ದಿಯಾಗಿದ್ದ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದೆ.

ಫೆಬ್ರವರಿಯಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ ದಾಂಪತ್ಯ ಭಿನ್ನಾಭಿಪ್ರಾಯಗಳನ್ನು ಉಲ್ಲೇಖಿಸಿದ್ದ ಸಂಗೀತ, ಜೀವನಾಂಶ ಮತ್ತು ದಂಪತಿಯ ಜಂಟಿ ನಿವಾಸದಲ್ಲಿ ವಾಸಿಸಲು ಅನುಮತಿ ಕೋರಿದ್ದರು. ಆದರೆ ವಿಚಾರಣೆ ಪದೇಪದೆ ಮುಂದೂಡಿಕೆಯಾಗುತ್ತಲೇ ಬಂದಿತ್ತು.

ಪ್ರಕರಣದ ಯಾವುದೇ ವಿಚಾರಣೆಯಲ್ಲೂ ವಿಜಯ್ ಹಾಗೂ ಸಂಗೀತ ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಅವರ ಪರ ವಕೀಲರು ಮಾತ್ರ ಹಾಜರಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡುತ್ತಿದ್ದರು. ಆಗಸ್ಟ್ 7ರಂದು ನಿಗದಿಯಾಗಿದ್ದ ವಿಚಾರಣೆಗೆ ಮುನ್ನವೇ ಸಂಗೀತ ಅರ್ಜಿ ಹಿಂಪಡೆದಿರುವುದರಿಂದ ಪ್ರಕರಣದ ಮುಂದಿನ ವಿಚಾರಣೆಯ ಅಗತ್ಯವೇ ಉಳಿದಿಲ್ಲ.

ವಿಚ್ಛೇದನ ಅರ್ಜಿ ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ವಿಜಯ್–ಸಂಗೀತ ದಾಂಪತ್ಯ ವಿವಾದದ ಕಾನೂನು ಅಧ್ಯಾಯ ಸದ್ಯಕ್ಕೆ ಅಂತ್ಯಗೊಂಡಿದ್ದು, ಈ ಬೆಳವಣಿಗೆ ತಮಿಳುನಾಡಿನ ರಾಜಕೀಯ ಹಾಗೂ ಚಿತ್ರರಂಗದಲ್ಲೂ ಸಾಕಷ್ಟು ಗಮನ ಸೆಳೆದಿದೆ.