Home Blog

ಹೆಚ್ಚು ವೀವ್ಸ್ ಪಡೆದ ರೀಲ್ಸ್‌ಗೆ ನಗದು ಬಹುಮಾನ”: ‘ರುದ್ರಾಭಿಷೇಕಂ’ ಚಿತ್ರತಂಡದ ಹೊಸ ಘೋಷಣೆ

ಬೆಂಗಳೂರು: ಕನ್ನಡದ ‘ರುದ್ರಾಭಿಷೇಕಂ’ ಸಿನಿಮಾ ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರಚಾರಕ್ಕೆ ಸಿನಿಮಾ ತಂಡ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ವಿಜಯ್ ರಾಘವೇಂದ್ರ ಮತ್ತು ಪ್ರಿಯಾಂಕಾ ತಿಮ್ಮೇಶ್ ಅಭಿನಯದ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡುವವರಿಗೆ ವೀವ್ಸ್ ಆಧಾರದ ಮೇಲೆ ನಗದು ಬಹುಮಾನ ನೀಡುವುದಾಗಿ ನಿರ್ಮಾಣ ಸಂಸ್ಥೆ ಘೋಷಿಸಿದೆ.

ಪ್ಯಾನ್ ಇಂಡಿಯಾ ಕ್ರಿಯೇಷನ್ಸ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುವಂತೆ ತಿಳಿಸಿದೆ. ಸಿನಿಮಾ ಬಿಡುಗಡೆಯಾಗಿ ಮೂರು ದಿನಗಳ ಬಳಿಕ ಹೆಚ್ಚು ವೀವ್ಸ್ ಪಡೆದ ರೀಲ್ಸ್‌ಗಳನ್ನು ಪರಿಗಣಿಸಿ ಬಹುಮಾನ ನೀಡಲಾಗುತ್ತದೆ.

ಹೆಚ್ಚು ವೀವ್ಸ್ ಪಡೆದವರಿಗೆ ₹10 ಸಾವಿರ ಮೊದಲ ಬಹುಮಾನ, ₹7,500 ಎರಡನೇ ಬಹುಮಾನ ಹಾಗೂ ₹5 ಸಾವಿರ ಮೂರನೇ ಬಹುಮಾನ ನೀಡಲಾಗುತ್ತದೆ. ಇದರ ಜತೆಗೆ ₹1 ಸಾವಿರ ಸಮಾಧಾನಕರ ಬಹುಮಾನವನ್ನೂ ಘೋಷಿಸಲಾಗಿದೆ. ರೀಲ್ಸ್ ಹಾಗೂ ವೀವ್ಸ್ ವಿವರಗಳನ್ನು 8553674555 ಮತ್ತು 9845642338 ಸಂಖ್ಯೆಗೆ ಕಳುಹಿಸಬೇಕಾಗಿದೆ.

ಇಷ್ಟೇ ಅಲ್ಲದೆ, ಹೆಚ್ಚು ವೀವ್ಸ್ ಗಳಿಸಿದ ಸ್ಪರ್ಧಿಗಳಿಗೆ ನಗದು ಬಹುಮಾನದ ಜತೆಗೆ ಪ್ಯಾನ್ ಇಂಡಿಯಾ ಕ್ರಿಯೇಷನ್ಸ್ ನಿರ್ಮಾಣದ ಮುಂದಿನ ಸಿನಿಮಾದಲ್ಲಿ ನಟಿಸುವ ಅವಕಾಶ ನೀಡಲಾಗುವುದು ಎಂದು ಚಿತ್ರತಂಡ ತಿಳಿಸಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಯುವಕ-ಯುವತಿಯರಿಗೆ ಈ ಆಫರ್ ವಿಶೇಷ ಅವಕಾಶವಾಗಿದೆ.

‘ರುದ್ರಾಭಿಷೇಕಂ’ ಗ್ರಾಮೀಣ ಹಿನ್ನೆಲೆಯ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ವಿಜಯ್ ರಾಘವೇಂದ್ರ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ವೀರಗಾಸೆ ಕಲಾವಿದ, ರುದ್ರನ ಅವತಾರ, ಹಳ್ಳಿಯ ಅಮಾಯಕ ಯುವಕ ಹಾಗೂ ಗಿರಿಜಾ ಮೀಸೆಯ ಖಡಕ್ ವ್ಯಕ್ತಿಯಂತಹ ಹಲವು ವಿಭಿನ್ನ ಗೆಟಪ್‌ಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ವಸಂತ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ಪ್ರಿಯಾಂಕಾ ತಿಮ್ಮೇಶ್ ನಾಯಕಿಯಾಗಿ ನಟಿಸಿದ್ದು, ಬಾಲ ರಾಜವಾಡಿ, ಮನು, ಸನತ್, ಬುಲೆಟ್ ವಿನು, ಮಮತಾ ತುರುವೇಕೆರೆ, ನವನಿತಾ ಶೆಟ್ಟಿ, ಮಂಜುಳಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಸಿನಿಮಾ ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಪ್ರೀತಿಯ ಹೆಸರಿನಲ್ಲಿ ಕಿರುಕುಳ: ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

0

ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.

ಮೃತಳಾಗಿರುವ ವರ್ಷಾ (22) ಮೈಸೂರಿನಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದರು. ಕೆಲ ದಿನಗಳಿಂದ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದನೆಂದೂ, ಈ ಕಿರುಕುಳಕ್ಕೆ ಬೇಸತ್ತು ವರ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆಂದೂ ಹೇಳಲಾಗಿದೆ.

ಘಟನೆಯ ಬಳಿಕ ವರ್ಷಾ ಅವರ ತಾಯಿ ನಾಗರತ್ನಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಯಳಂದೂರು ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಆರೋಪಿ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ, ಉಡುಪಿ ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಬಂಧನ ಭೀತಿಯ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ 59ನೇ ಸಿಸಿಎಚ್ ಕೋರ್ಟ್, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸಾಕ್ಷಿದಾರ ಸಂದೀಪ್‌ಗೆ ವಾಟ್ಸಪ್ ಕರೆ ಮೂಲಕ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಸುಹಾಸ್, ವೇಣು ಹಾಗೂ ಪುನೀತ್‌ರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಪ್ರಮುಖ ಆರೋಪಿ ಗೌರವ್ ಶೆಟ್ಟಿ ಈವರೆಗೆ ತಲೆಮರೆಸಿಕೊಂಡಿದ್ದರು.

ಬಂಧಿತ ಆರೋಪಿಗಳ ವಿಚಾರಣೆ ಹಾಗೂ ಮೊಬೈಲ್ ಪರಿಶೀಲನೆ ವೇಳೆ, ಗೌರವ್ ಶೆಟ್ಟಿ ಕಿರಣ್ ರೆಡ್ಡಿ ಜೊತೆ ಕಾನ್ಫರೆನ್ಸ್ ಕರೆ ಮಾಡಿ ಸಾಕ್ಷಿಗೆ ಬೆದರಿಕೆ ಹಾಕಿದ್ದು ಬೆಳಕಿಗೆ ಬಂದಿತ್ತು. ಇದಾದ ಬಳಿಕ ಗೌರವ್ ಶೆಟ್ಟಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು.

ಇದೀಗ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿರುವ ಗೌರವ್ ಶೆಟ್ಟಿ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಚಾಲನೆ: ₹27 ಕೋಟಿ ವೆಚ್ಚದಲ್ಲಿ 60 ದಿನ ಕಾರ್ಯಾಚರಣೆ

0

ಬೆಂಗಳೂರು: ರಾಜ್ಯದ ಮಳೆ ಕೊರತೆ ನೀಗಿಸುವ ಪ್ರಯತ್ನವಾಗಿ ಜಲಸಂಪನ್ಮೂಲ ಇಲಾಖೆ ವತಿಯಿಂದ ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10 ಗಂಟೆಗೆ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಾಚರಣೆಗೆ ಚಾಲನೆ ನೀಡಿದ್ದು, ಶಾಸಕ ಹೆಚ್‌.ಕೆ. ಪಾಟೀಲ್‌ ಉಪಸ್ಥಿತರಿದ್ದರು.

ಮೋಡ ಬಿತ್ತನೆ ಕಾರ್ಯಾಚರಣೆಯ ಮೇಲ್ವಿಚಾರಣೆ ಮತ್ತು ಪರಿಣಾಮದ ಮೌಲ್ಯಮಾಪನಕ್ಕಾಗಿ ನಾಲ್ಕು ಸಮಿತಿಗಳನ್ನು ರಚಿಸಲಾಗಿದೆ. ಮೇಲ್ವಿಚಾರಣಾ ಸಮಿತಿ, ತಾಂತ್ರಿಕ ಸಮಿತಿ, ಕ್ಷೇತ್ರ ಕಾರ್ಯಾಚರಣೆ ಸಮಿತಿ ಹಾಗೂ ಮೌಲ್ಯಮಾಪನ ಸಮಿತಿಗಳು ಕಾರ್ಯನಿರ್ವಹಿಸಲಿವೆ.

ತಾಂತ್ರಿಕ ಸಮಿತಿಯಲ್ಲಿ ಐಐಟಿ, ಐಐಎಸ್‌ಸಿ ಮತ್ತು ಹವಾಮಾನ ಇಲಾಖೆಯ ತಜ್ಞರು ಇರಲಿದ್ದಾರೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡಗಳ ಲಭ್ಯತೆ ಆಧರಿಸಿ ಅಗತ್ಯವಿರುವ ಪ್ರದೇಶಗಳಲ್ಲಿ ಮೋಡ ಬಿತ್ತನೆ ನಡೆಸಲಾಗುತ್ತದೆ. ಕಾರ್ಯಾಚರಣೆ ನಡೆಯುವ ಪ್ರದೇಶದ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

₹27 ಕೋಟಿ ವೆಚ್ಚದ ಈ ಯೋಜನೆಯನ್ನು 60 ದಿನಗಳ ಕಾಲ ಅನುಷ್ಠಾನಗೊಳಿಸಲಾಗುತ್ತದೆ. ಒಟ್ಟು ಸುಮಾರು 200 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುವ ಉದ್ದೇಶ ಹೊಂದಲಾಗಿದ್ದು, ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಕಾರ್ಯಾಚರಣೆ ನಡೆಯಲಿದೆ.

ಈ ಹಿಂದೆ ರಾಜ್ಯದಲ್ಲಿ ಮೂರು ಬಾರಿ ಮೋಡ ಬಿತ್ತನೆ ಪ್ರಯೋಗ ನಡೆಸಲಾಗಿದ್ದು, ಶೇ.18ರಿಂದ 20ರಷ್ಟು ಯಶಸ್ಸು ದೊರೆತಿತ್ತು. ಹಿಂದಿನ ಅನುಭವದ ಆಧಾರದ ಮೇಲೆ ಈ ಬಾರಿ ಶೇ.30ರಷ್ಟು ಯಶಸ್ಸು ಸಾಧಿಸುವ ನಿರೀಕ್ಷೆಯನ್ನು ಸರ್ಕಾರ ವ್ಯಕ್ತಪಡಿಸಿದೆ.

ಅಂಡರ್‌ಪಾಸ್‌ಗಾಗಿ ಪುರಾತನ ಮರ ತೆರವಿಗೆ NHAI ಸೂಚನೆ: ಉಗ್ರರೂಪಿ ರಾಹುಗುಳಿಗನಿಂದ ಎಚ್ಚರಿಕೆ

0

ಮಂಗಳೂರು: ನಂತೂರು ಪದವು ಬಳಿಯ ಭಗವಾನ್ ಬಬ್ಬುಸ್ವಾಮಿ ದೈವಸ್ಥಾನದ ಆವರಣದಲ್ಲಿರುವ ಪುರಾತನ ಸಂಪಿಗೆ ಮರ ತೆರವು ವಿಚಾರ ಇದೀಗ ದೈವದ ಎಚ್ಚರಿಕೆಯಿಂದ ಚರ್ಚೆಗೆ ಬಂದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಂತೂರು ಸರ್ಕಲ್ ಬಳಿ ಅಂಡರ್‌ಪಾಸ್ ನಿರ್ಮಾಣಕ್ಕೆ ಯೋಜನೆ ರೂಪಿಸಿರುವ NHAI, ರಸ್ತೆ ಡಿವೈಡರ್‌ನಲ್ಲಿರುವ ಮರವನ್ನು ತೆರವುಗೊಳಿಸುವಂತೆ ಸೂಚಿಸಿದ್ದು, ಇದಕ್ಕೆ ರಾಹುಗುಳಿಗ ದೈವ ವಿರೋಧ ವ್ಯಕ್ತಪಡಿಸಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ನಂತೂರು ಸರ್ಕಲ್‌ನ ಸಾರಿಗೆ ದಟ್ಟಣೆ ನಿಯಂತ್ರಿಸಲು NHAI ಅಂಡರ್‌ಪಾಸ್ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಈ ಯೋಜನೆಗೆ ಸಂಬಂಧಿಸಿದಂತೆ ರಸ್ತೆ ಡಿವೈಡರ್‌ನಲ್ಲಿರುವ ಸಂಪಿಗೆ ಮರ ತೆರವು ಅಗತ್ಯವಿದೆ ಎಂದು ಅಧಿಕಾರಿಗಳು ದೈವಸ್ಥಾನದ ಆಡಳಿತ ಮಂಡಳಿಗೆ ಸೂಚಿಸಿದ್ದರು.

ಇತ್ತೀಚೆಗೆ ನಡೆದ ನೇಮೋತ್ಸವದ ಸಂದರ್ಭದಲ್ಲಿ ಆಡಳಿತ ಮಂಡಳಿ ಈ ವಿಚಾರವನ್ನು ರಾಹುಗುಳಿಗ ದೈವದ ಮುಂದಿಟ್ಟಿತ್ತು. ಮರ ತೆರವು ವಿಷಯ ತಿಳಿದ ಬಳಿಕ ದೈವ ಉಗ್ರ ಸ್ವರೂಪ ತಾಳಿ, “ಇದು ನನ್ನ ಮರ, ನನ್ನ ದೃಷ್ಟಿ ಅದರ ಮೇಲಿದೆ. ಅದನ್ನು ತೆರವುಗೊಳಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ” ಎಂದು ಎಚ್ಚರಿಕೆ ನೀಡಿದೆ ಎಂದು ಹೇಳಲಾಗಿದೆ. ಅಲ್ಲದೆ, ದೈವ ನೇರವಾಗಿ ಸಂಪಿಗೆ ಮರವನ್ನು ಹತ್ತಿ ಆದೇಶ ನೀಡಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಪುರಾತನ ಸಂಪಿಗೆ ಮರವು ದೈವಸ್ಥಾನಕ್ಕೆ ಸೇರಿದದ್ದಾಗಿದ್ದು, ಹಿಂದಿನ ದಿನಗಳಲ್ಲಿ ಮರದ ಕಟ್ಟೆಯಲ್ಲೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿತ್ತು. ಮರಕ್ಕೆ ಪೂಜೆ ಸಲ್ಲಿಸುವ ಸಂಪ್ರದಾಯವೂ ಇತ್ತು. ಹಿಂದೆಯೂ ರಸ್ತೆ ಅಗಲೀಕರಣದ ವೇಳೆ ಮರವನ್ನು ಉಳಿಸಿಕೊಂಡೇ ರಸ್ತೆ ನಿರ್ಮಿಸಲಾಗಿತ್ತು.

ಆದರೆ ಬಳಿಕ ಈ ಪ್ರದೇಶದಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಮರದಲ್ಲಿದ್ದ ರಾಹುಗುಳಿಗ ದೈವಕ್ಕೆ ದೈವಸ್ಥಾನದ ಆವರಣದಲ್ಲಿ ಪ್ರತ್ಯೇಕ ಗುಡಿ ನಿರ್ಮಿಸಿ ಪೂಜೆ ಸಲ್ಲಿಸಲಾಗಿತ್ತು. ಅದರ ಬಳಿಕ ಅಪಘಾತಗಳು ನಿಂತುಹೋದವು ಎಂಬುದು ಆಡಳಿತ ಮಂಡಳಿಯ ಹೇಳಿಕೆ.

ಈ ಹಿಂದೆ ಸ್ಥಳೀಯ ಕಾರ್ಪೊರೇಟರ್‌ವೊಬ್ಬರು ಮರ ತೆರವುಗೊಳಿಸಲು ಬಂದಾಗ ಬೃಹತ್ ನಾಗರಹಾವು ಕಾಣಿಸಿಕೊಂಡು ಅವರು ಹಿಂದೆ ಸರಿದಿದ್ದರು ಎನ್ನಲಾಗಿದೆ. ಇದೀಗ NHAI ಮತ್ತೆ ಮರ ತೆರವಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಮರ ತೆರವು ಮಾಡದಂತೆ ಸೂಕ್ತ ಮನವರಿಕೆ ಮಾಡಿಕೊಡಬೇಕು ಎಂದು ಆಡಳಿತ ಮಂಡಳಿ ಮನವಿ ಮಾಡಿದೆ.

‘ಅನೈತಿಕ ಸಂಬಂಧ, ನಾರ್ಸಿಸಿಸ್ಟಿಕ್ ಅಬ್ಯೂಸ್’ ಆರೋಪ: ವಿಚ್ಛೇದನದ ಬಳಿಕ ದುನಿಯಾ ವಿಜಯ್ ಪತ್ನಿ ನಾಗರತ್ನ ಹೇಳಿದ್ದೇನು?

ಬೆಂಗಳೂರು: ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ವಿಚ್ಛೇದನದ ಮೂಲಕ ತೆರೆಬಿದ್ದ ಬೆನ್ನಲ್ಲೇ ನಾಗರತ್ನ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಇಷ್ಟು ವರ್ಷಗಳ ಕಾಲ ಎಲ್ಲವನ್ನೂ ಸಹಿಸಿಕೊಂಡು, ಮದುವೆಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ವಿಚ್ಛೇದನವನ್ನು ವಿರೋಧಿಸುತ್ತಾ ಬಂದಿದ್ದೆ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯ ಇದೀಗ ಅಂತಿಮವಾಗಿ ವಿಚ್ಛೇದನ ಮಂಜೂರು ಮಾಡಿದೆ. ದೀರ್ಘಕಾಲದ ಕಾನೂನು ಹೋರಾಟದ ಉದ್ದೇಶ ಮದುವೆಯ ಹೊರಗೆ ಆಯ್ಕೆ ಮಾಡಿಕೊಂಡಿರುವ ಅನೈತಿಕ ಸಂಬಂಧವನ್ನು ಅಧಿಕೃತಗೊಳಿಸುವುದಾಗಿದ್ದರೆ, ಆ ಉದ್ದೇಶ ಕೊನೆಗೂ ಈಡೇರಿದೆ ಎಂದು ನಾಗರತ್ನ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾರ್ಸಿಸಿಸ್ಟಿಕ್ ಅಬ್ಯೂಸ್‌ನಿಂದಾಗಿ ಅನುಭವಿಸಿದ ನೋವು ಹಾಗೂ ಅದರ ಪರಿಣಾಮಗಳನ್ನು ಸಹಿಸಿಕೊಂಡಿರುವುದಾಗಿ ಅವರು ಹೇಳಿದ್ದಾರೆ. ಯಾರಿಗೂ ಹೊರಗಿನಿಂದ ಕಾಣದ ಆಳವಾದ ಮಾನಸಿಕ ಮತ್ತು ಭಾವನಾತ್ಮಕ ನೋವಿನೊಂದಿಗೆ ಬದುಕುವುದು ಹೇಗಿರುತ್ತದೆ ಎಂಬುದು ತಮ್ಮ ಅನುಭವದಿಂದ ತಿಳಿದಿದೆ ಎಂದಿದ್ದಾರೆ.

ಒಂದು ದಿನ ತಮ್ಮ ಅನುಭವವನ್ನು ಬಹಿರಂಗವಾಗಿ ಹಂಚಿಕೊಳ್ಳಲು ಬಯಸುವುದಾಗಿ ತಿಳಿಸಿರುವ ನಾಗರತ್ನ, ಯಾರನ್ನೂ ಆರೋಪಿಸುವುದು ತಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂತಹ ಪರಿಸ್ಥಿತಿಯನ್ನು ಎದುರಿಸುತ್ತಿರುವ ಮಹಿಳೆಯರಿಗೆ ತಾವು ಒಂಟಿಯಲ್ಲ ಎಂಬ ಭಾವನೆ ಮೂಡಿಸುವುದೇ ತಮ್ಮ ಆಶಯ ಎಂದಿದ್ದಾರೆ.

ಮಕ್ಕಳ ಭವಿಷ್ಯವೇ ತಮ್ಮ ಜೀವನದ ಮೊದಲ ಆದ್ಯತೆಯಾಗಿದ್ದು, ಈಗಲೂ ಅದೇ ಮುಂದುವರಿದಿದೆ. ಮಕ್ಕಳ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿರುವ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ನೋವುಗಳು ಅದಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಸದ್ಯ ಮೌನವಾಗಿರಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.

ಒಂದು ದಿನ ಸರಿಯಾದ ಸಮಯ ಬಂದಾಗ ತಮ್ಮ ಅನುಭವವನ್ನು ತಮ್ಮದೇ ಮಾತುಗಳಲ್ಲಿ ಹಂಚಿಕೊಳ್ಳುವುದಾಗಿ ನಾಗರತ್ನ ತಿಳಿಸಿದ್ದಾರೆ. ತಮ್ಮ ಮೂವರು ಮಕ್ಕಳು ಸದಾ ತಮ್ಮ ಶಕ್ತಿಯಾಗಿ ನಿಂತಿದ್ದಾರೆ ಎಂದು ಹೇಳಿರುವ ಅವರು, ಮಕ್ಕಳ ಮೇಲೆ ಎಲ್ಲರ ಆಶೀರ್ವಾದ ಇರಲಿ ಎಂದು ಮನವಿ ಮಾಡಿದ್ದಾರೆ. ವಿಜಯ್ ಕುಮಾರ್ ತಮ್ಮ ಜೀವನದಲ್ಲಿ ಸಂತೋಷವಾಗಿರಲಿ ಎಂದು ಹಾರೈಸಿ, ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಟ್ಟಿದ್ದೇನೆ ಎಂದು ಹೇಳಿದ್ದಾರೆ.

ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯುಗೆ ವಿಶೇಷ ಗೌರವ: ಈ ಬಾರಿ ‘ನಿಶಾನೆ ಆನೆ’ಯಾಗಿ ಕಾಣಿಸಿಕೊಳ್ಳಲಿರುವ ಗಜರಾಜ

0

ಮೈಸೂರು: ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಸಾರ್ವಜನಿಕರ ತೀವ್ರ ಆಗ್ರಹದ ಬೆನ್ನಲ್ಲೇ, ಗಜಪಡೆ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲು ಅರಣ್ಯ ಇಲಾಖೆ ಅವಕಾಶ ನೀಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಮೈಸೂರು ದಸರಾ 2026ರಲ್ಲಿ ಅಭಿಮನ್ಯುವಿನ ಅಮೂಲ್ಯ ಸೇವೆಗೆ ಸರ್ಕಾರ ವಿಶೇಷ ಗೌರವ ನೀಡುತ್ತಿದೆ ಎಂದು ತಿಳಿಸಿದ್ದಾರೆ. ಹಲವು ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಗಾಂಭೀರ್ಯದಿಂದ ಹೊತ್ತು ಕರುನಾಡಿನ ಜನರ ಮನಗೆದ್ದ ಅಭಿಮನ್ಯುವಿನ ಸುದೀರ್ಘ ಸೇವೆಯನ್ನು ಗೌರವಿಸಿ, ಈ ಬಾರಿಯ ಮೈಸೂರು ದಸರಾ-2026ರ ಜಂಬೂಸವಾರಿಯಲ್ಲಿ ಅಭಿಮನ್ಯುವಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ‘ನಿಶಾನೆ ಆನೆ’ಯಾಗಿ ಮುಂಚೂಣಿಯಲ್ಲಿ ಮುನ್ನಡೆಸುವಂತೆ ಅರಣ್ಯ ಇಲಾಖೆಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.

ಅಲ್ಲದೆ ಪ್ರಕಟಣೆ ಹೊರಡಿಸಿರುವ ಅರಣ್ಯ ಸಚಿವರು, ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈಭವವನ್ನು ವಿಶ್ವದಾದ್ಯಂತ ಸಾರುವ ಐತಿಹಾಸಿಕ ಉತ್ಸವವಾಗಿದೆ ಎಂದು ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಉತ್ಸವದಲ್ಲಿ ದಸರಾ ಗಜಪಡೆಯ ಆನೆಗಳು ವರ್ಷಗಳಿಂದಲೂ ಪ್ರಮುಖ ಪಾತ್ರ ವಹಿಸುತ್ತಾ ಬಂದಿವೆ ಎಂದು ಸಚಿವರು ತಿಳಿಸಿದ್ದಾರೆ.

ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾದರೆ ಸಮಾಜದ ಗತಿ ಏನು?: ಶಿವಶಂಕರಪ್ಪ ಸಾಹುಕಾರ್ʼಗೆ ಹೈಕೋರ್ಟ್ ಚಾಟಿ

0

ಬೆಂಗಳೂರು: ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡುವ ಜವಾಬ್ದಾರಿ ಹೊಂದಿರುವವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೈಕೋರ್ಟ್ ಮೌಖಿಕವಾಗಿ ಕಳವಳ ವ್ಯಕ್ತಪಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅವರ ವಿರುದ್ಧದ ನೇಮಕಾತಿ ಅಕ್ರಮ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಬಂಧನ ಭೀತಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್‌ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ನಡೆಸಿತು.

ವಿಚಾರಣೆ ವೇಳೆ, “ನೇಮಕಾತಿ ಸಂಸ್ಥೆಯ ಮುಖ್ಯಸ್ಥರಾಗಿದ್ದು, ಸಾಂವಿಧಾನಿಕ ಹುದ್ದೆಯಲ್ಲಿರುವವರು ನೇಮಕಾತಿಗೆ ಸಂಬಂಧಿಸಿದ ವಂಚನೆಯಲ್ಲಿ ಹೇಗೆ ಭಾಗಿಯಾಗಲು ಸಾಧ್ಯ? ಭವಿಷ್ಯದ ಆಡಳಿತಗಾರರನ್ನು ನೇಮಕ ಮಾಡುವ ಹುದ್ದೆಯಲ್ಲಿದ್ದ ನೀವು ಇಂತಹ ಕೃತ್ಯದಲ್ಲಿ ಭಾಗಿಯಾಗಿದ್ದರೆ, ಭವಿಷ್ಯದಲ್ಲಿ ಯಾವ ರೀತಿಯ ಸಮಾಜವನ್ನು ನಿರೀಕ್ಷಿಸಲು ಸಾಧ್ಯ?” ಎಂದು ನ್ಯಾಯಪೀಠ ಪ್ರಶ್ನಿಸಿತು.

ಈ ವೇಳೆ ಸರ್ಕಾರದ ಪರ ವಕೀಲರು ಕೆಲವು ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದರು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪೀಠ, ಪ್ರಕರಣದಲ್ಲಿ ಸಾಹುಕಾರ್‌ ಅವರ ಪಾತ್ರವೂ ಪತ್ತೆಯಾಗಿರುವುದಾಗಿ ಸೂಚಿಸಿತು. ಅಲ್ಲದೆ, ಅವರ ಪುತ್ರಿಯ ನೇಮಕಾತಿಗೆ ಸಂಬಂಧಿಸಿದ ಕೆಲವು ವಾಸ್ತವಿಕ ಅಂಶಗಳನ್ನು ಅವರು ಮರೆಮಾಚಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ಬಂದಿರುವುದಾಗಿ ಹೇಳಿತು.

ಮುಚ್ಚಿದ ಲಕೋಟೆಯಲ್ಲಿರುವ ದಾಖಲೆಗಳು ಗೌಪ್ಯ ಸ್ವರೂಪದ್ದಾಗಿದ್ದು, ಅದರಲ್ಲಿರುವ ಮಾಹಿತಿಯನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿತು.

ಇದಕ್ಕೆ ಪ್ರತಿಯಾಗಿ ಸಾಹುಕಾರ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್, ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರು ಹಾಗೂ ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆರೋಪಗಳು ಕೇಳಿಬಂದಿವೆ ಎಂದು ತಿಳಿಸಿದರು. ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆಗಳ ಪರಿಶೀಲನೆ ಹಾಗೂ ಅಂಕ ನಿಗದಿ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಯ ಹಲವು ವಿಚಾರಗಳು ಪರೀಕ್ಷಾ ನಿಯಂತ್ರಕರ ವ್ಯಾಪ್ತಿಗೆ ಬರುತ್ತವೆ ಎಂದು ವಾದಿಸಿದರು.

ಈಗಾಗಲೇ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಅಮಾನತುಗೊಳಿಸಲಾಗಿದ್ದು, ಕೆಪಿಎಸ್ಸಿ ಕಚೇರಿಗೆ ಪ್ರವೇಶವನ್ನೂ ನಿರಾಕರಿಸಲಾಗಿದೆ ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಸಾಹುಕಾರ್‌ ಅವರ ಪುತ್ರಿ ಕೆಪಿಎಸ್ಸಿ ಪರೀಕ್ಷೆಗೆ ಹಾಜರಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಕೆಪಿಎಸ್ಸಿ ಕಾಯಿದೆ, ನಿಯಮಗಳು ಅಥವಾ ಕೈಪಿಡಿಯಲ್ಲಿ ಆಯೋಗದ ಆಡಳಿತಗಾರರ ಪುತ್ರಿ ಪರೀಕ್ಷೆಗೆ ಹಾಜರಾಗಬಾರದು ಎಂಬ ನಿರ್ಬಂಧವಿಲ್ಲ ಎಂದು ವಕೀಲರು ವಾದಿಸಿದರು. ಈ ವಿಚಾರವನ್ನು ಸಂದರ್ಶನದ ಸಂದರ್ಭದಲ್ಲಿ ಬಹಿರಂಗಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಜಾರಿ ನಿರ್ದೇಶನಾಲಯದ ಶೋಧ ಕಾರ್ಯಾಚರಣೆ ವೇಳೆ ಸಾಹುಕಾರ್‌ ಅವರ ಮನೆಯಲ್ಲಿ ಯಾವುದೇ ಆಕ್ಷೇಪಾರ್ಹ ದಾಖಲೆಗಳು ಪತ್ತೆಯಾಗಿಲ್ಲ ಎಂದೂ ಅವರ ಪರ ವಕೀಲರು ವಾದಿಸಿದರು.

ಇನ್ನು, ಸಿಐಡಿ ಅಧಿಕಾರಿಗಳು ಮಧ್ಯಾಹ್ನ 1 ಗಂಟೆಗೆ ನೋಟಿಸ್‌ ನೀಡಿ, ಅದೇ ದಿನ ಸಂಜೆ 4 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನ್ಯಾಯಾಲಯ ವಿಧಿಸುವ ಯಾವುದೇ ಷರತ್ತಿಗೆ ಬದ್ಧರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಾಹುಕಾರ್‌ ತಿಳಿಸಿದ್ದಾರೆ. ಹೀಗಾಗಿ ಅವರಿಗೆ ಬಂಧನದಿಂದ ರಕ್ಷಣೆ ನೀಡಬೇಕು ಎಂದು ವಕೀಲರು ಮನವಿ ಮಾಡಿದರು.

ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲರು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯಲ್ಲಿ ನ್ಯಾಯಾಲಯ ತನ್ನ ವಿಶೇಷಾಧಿಕಾರವನ್ನು ಬಳಸಬಾರದು. ಅರ್ಜಿದಾರರಿಗೆ ಯಾವುದೇ ಮಧ್ಯಂತರ ಪರಿಹಾರ ನೀಡಬಾರದು ಎಂದು ಮನವಿ ಮಾಡಿದರು.

ಎರಡೂ ಕಡೆಯ ವಾದ ಆಲಿಸಿದ ನ್ಯಾಯಪೀಠ, ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿತು. ಬಳಿಕ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ

ಕೆಪಿಎಸ್ಸಿಯ ಪಶುವೈದ್ಯಾಧಿಕಾರಿ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಶಿವಶಂಕರಪ್ಪ ಸಾಹುಕಾರ್‌ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್‌ 318(3) ಹಾಗೂ ಕರ್ನಾಟಕ ಸರ್ಕಾರಿ ಪರೀಕ್ಷೆಗಳ (ಭ್ರಷ್ಟಾಚಾರ ನಿಷೇಧ ಮತ್ತು ಅಕ್ರಮ ನೇಮಕಾತಿ) ತಡೆ ಕಾಯ್ದೆಯ ಸೆಕ್ಷನ್‌ 10ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸಾಹುಕಾರ್‌, ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

EOS-05 Launch: ಭಾರತದ ಮೊದಲ ಜಿಯೋಸಿಂಕ್ರೋನಸ್ ಇಮೇಜಿಂಗ್ ಉಪಗ್ರಹ ಯಶಸ್ವಿಯಾಗಿ ಉಡಾವಣೆ

0

ಅಮರಾವತಿ: ಏಳು ತಿಂಗಳ ವಿರಾಮದ ಬಳಿಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮಹತ್ವದ ಉಡಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ GSLV-F17 ರಾಕೆಟ್‌ ಮೂಲಕ ಭಾರತದ ಮೊದಲ ಜಿಯೋಸಿಂಕ್ರೋನಸ್ ಇಮೇಜಿಂಗ್ ಉಪಗ್ರಹ EOS-05 ಅನ್ನು ಶುಕ್ರವಾರ ನಸುಕಿನ ಜಾವ 2.55ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣಾ ಪ್ಯಾಡ್‌ನಿಂದ ಉಡಾವಣೆಯಾದ GSLV-F17, EOS-05 ಉಪಗ್ರಹವನ್ನು ನಿಗದಿತ ಸಬ್-ಜಿಯೋಸಿಂಕ್ರೋನಸ್ ಟ್ರಾನ್ಸ್‌ಫರ್ ಆರ್ಬಿಟ್‌ ಗೆ ಯಶಸ್ವಿಯಾಗಿ ನಿಯೋಜಿಸಿದೆ. ಇದು GSLV ರಾಕೆಟ್‌ನ 19ನೇ ಹಾರಾಟವಾಗಿದೆ.

ಭಾರತದ ಮೊದಲ ಜಿಯೋಸಿಂಕ್ರೋನಸ್ ಇಮೇಜಿಂಗ್ ಉಪಗ್ರಹ:

EOS-05 ಸಾಮಾನ್ಯ ಭೂ ವೀಕ್ಷಣಾ ಉಪಗ್ರಹಗಳಿಗಿಂತ ಭಿನ್ನವಾಗಿದೆ. ಜಿಯೋಸಿಂಕ್ರೋನಸ್ ಕಕ್ಷೆಯಿಂದ ಭೂಮಿಯ ದೊಡ್ಡ ಪ್ರದೇಶವನ್ನು ನಿರಂತರವಾಗಿ ವೀಕ್ಷಿಸುವ ಸಾಮರ್ಥ್ಯ ಇದಕ್ಕಿದೆ. ಈ ಮೂಲಕ ನಿರ್ದಿಷ್ಟ ಪ್ರದೇಶದ ಹವಾಮಾನ, ಪರಿಸರ ಸೇರಿದಂತೆ ವಿವಿಧ ಬದಲಾವಣೆಗಳನ್ನು ಕಡಿಮೆ ಸಮಯದ ಅಂತರದಲ್ಲಿ ಗಮನಿಸಲು ಸಾಧ್ಯವಾಗಲಿದೆ.

ಉಪಗ್ರಹದಿಂದ ದೊರೆಯುವ ಮಾಹಿತಿಯನ್ನು ಕೃಷಿ, ಜಲ ಸಂಪನ್ಮೂಲ ನಿರ್ವಹಣೆ, ನಗರ ಯೋಜನೆ, ಪರಿಸರ ಮೇಲ್ವಿಚಾರಣೆ, ಅರಣ್ಯ, ಸಾಗರ ಸಂಪನ್ಮೂಲ ಹಾಗೂ ಪ್ರಕೃತಿ ವಿಕೋಪ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ಬಳಸಬಹುದಾಗಿದೆ.

ರೈತರಿಗೆ ಹೇಗೆ ಸಹಾಯ?

EOS-05ನ ಭೂ ವೀಕ್ಷಣಾ ಸಾಮರ್ಥ್ಯವು ಕೃಷಿ ಕ್ಷೇತ್ರಕ್ಕೂ ಉಪಯುಕ್ತವಾಗುವ ನಿರೀಕ್ಷೆಯಿದೆ. ಉಪಗ್ರಹ ಚಿತ್ರಗಳ ಮೂಲಕ ಬೆಳೆ ಪ್ರದೇಶ, ಬೆಳೆ ಬೆಳವಣಿಗೆ, ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯಂತಹ ಬದಲಾವಣೆಗಳನ್ನು ದೊಡ್ಡ ಪ್ರಮಾಣದಲ್ಲಿ ಮೇಲ್ವಿಚಾರಣೆ ಮಾಡಬಹುದು. ಈ ಮಾಹಿತಿಯನ್ನು ಬೆಳೆ ಅಂದಾಜು, ಬರ ನಿರ್ವಹಣೆ ಮತ್ತು ಇತರ ಕೃಷಿ ಸಂಬಂಧಿತ ಯೋಜನೆಗಳಿಗೆ ಬಳಸುವ ಸಾಧ್ಯತೆಯಿದೆ.

ಏಳು ತಿಂಗಳ ಬಳಿಕ ಇಸ್ರೋ ಉಡಾವಣಾ ಹಾದಿಗೆ:

2026ರ ಜನವರಿ 12ರಂದು PSLV-C62/EOS-N1 ಮಿಷನ್‌ ಉಡಾವಣೆಯಾಗಿತ್ತು. ಆದರೆ ಮಿಷನ್‌ ಯಶಸ್ವಿಯಾಗದೆ, ಬಳಿಕ ಕಾರಣ ಪತ್ತೆಹಚ್ಚಲು ವಿವರವಾದ ಪರಿಶೀಲನೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಮುಖ ಉಡಾವಣೆಗಳ ನಡುವೆ ಸುಮಾರು ಏಳು ತಿಂಗಳ ಅಂತರ ಕಂಡುಬಂದಿತ್ತು. ಇದೀಗ GSLV-F17/EOS-05 ಮಿಷನ್‌ ಯಶಸ್ವಿಯಾಗುವ ಮೂಲಕ ಇಸ್ರೋ ಮತ್ತೆ ಮಹತ್ವದ ಉಡಾವಣಾ ಹಾದಿಗೆ ಮರಳಿದೆ.

ಈ ಯಶಸ್ವಿ ಮಿಷನ್‌ ಭಾರತದ ಭೂ ವೀಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ, ಜಿಯೋಸಿಂಕ್ರೋನಸ್ ಕಕ್ಷೆಯಿಂದ ನಿರಂತರ ಭೂ ವೀಕ್ಷಣೆಯಲ್ಲಿ ದೇಶದ ಸಾಮರ್ಥ್ಯಕ್ಕೆ ಹೊಸ ಅಧ್ಯಾಯವನ್ನು ತೆರೆದಿದೆ.

Women’s Asia Cup 2026: ಹಾಂಗ್‌ಕಾಂಗ್ ವಿರುದ್ಧ ಭಾರತಕ್ಕೆ 137 ರನ್‌ಗಳ ಭರ್ಜರಿ ಜಯ; ಸೆಮಿಫೈನಲ್‌ಗೆ ಲಗ್ಗೆ!

0

2026ರ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಭಾರತ ಮಹಿಳಾ ತಂಡ ಸತತ ಎರಡನೇ ಗೆಲುವು ದಾಖಲಿಸಿದ್ದು, ಹಾಂಗ್‌ಕಾಂಗ್ ಚೀನಾ ವಿರುದ್ಧ 137 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಭಾರತ ತಂಡ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಟಾಸ್ ಗೆದ್ದ ಹಾಂಗ್‌ಕಾಂಗ್ ಚೀನಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಸ್ಮೃತಿ ಮಂಧಾನ ಅವರ ದಾಖಲೆಯ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 193 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತು. ಗುರಿ ಬೆನ್ನತ್ತಿದ ಹಾಂಗ್‌ಕಾಂಗ್ ತಂಡ 16.2 ಓವರ್‌ಗಳಲ್ಲಿ ಕೇವಲ 56 ರನ್‌ಗಳಿಗೆ ಆಲೌಟ್ ಆಯಿತು.

ಸ್ಮೃತಿ ಮಂಧಾನ ಸ್ಫೋಟಕ ಶತಕ:

ಭಾರತದ ಪರ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 64 ಎಸೆತಗಳಲ್ಲಿ 124 ರನ್ ಗಳಿಸಿದ ಅವರು 14 ಬೌಂಡರಿ ಹಾಗೂ 7 ಸಿಕ್ಸರ್‌ಗಳನ್ನು ಸಿಡಿಸಿದರು. ಈ ಮೂಲಕ ಮಹಿಳಾ ಏಷ್ಯಾಕಪ್ ಇತಿಹಾಸದಲ್ಲೇ ಅತ್ಯಧಿಕ ವೈಯಕ್ತಿಕ ಸ್ಕೋರ್ ದಾಖಲಿಸಿದರು.

ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದ ಮಂಧಾನ ಅರ್ಧಶತಕದ ಬಳಿಕ ಬ್ಯಾಟಿಂಗ್ ವೇಗ ಹೆಚ್ಚಿಸಿದರು. ಕೇವಲ 57 ಎಸೆತಗಳಲ್ಲಿ ಶತಕ ಪೂರೈಸಿ ತಂಡದ ಮೊತ್ತವನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ದರು.

ಮಿಥಾಲಿ ರಾಜ ದಾಖಲೆ ಹಿಂದಿಕ್ಕಿದ ಮಂಧಾನ:

ಈ ದಾಖಲೆಯ ಇನ್ನಿಂಗ್ಸ್‌ನೊಂದಿಗೆ ಮಂಧಾನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಹಾಂಗ್‌ಕಾಂಗ್ ವಿರುದ್ಧದ ಇನ್ನಿಂಗ್ಸ್ ವೇಳೆ ಅವರು ಒಟ್ಟು 10,880 ಅಂತಾರಾಷ್ಟ್ರೀಯ ರನ್ ಗಳಿಸಿ, ಮಾಜಿ ನಾಯಕಿ ಮಿಥಾಲಿ ರಾಜ್ ಅವರ 10,868 ರನ್‌ಗಳ ದಾಖಲೆಯನ್ನು ಹಿಂದಿಕ್ಕಿದರು.

ಅಲ್ಲದೆ, ಇದು ಮಂಧಾನ ಅವರ 18ನೇ ಅಂತಾರಾಷ್ಟ್ರೀಯ ಶತಕವಾಗಿದ್ದು, ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರ್ತಿಯೆಂಬ ಹೆಗ್ಗಳಿಕೆಯನ್ನು ಮತ್ತಷ್ಟು ಬಲಪಡಿಸಿದೆ.

ಬೌಲಿಂಗ್‌ನಲ್ಲೂ ಭಾರತದ ಪ್ರಾಬಲ್ಯ:

193 ರನ್‌ಗಳ ಗುರಿ ಬೆನ್ನತ್ತಿದ ಹಾಂಗ್‌ಕಾಂಗ್ ಬ್ಯಾಟರ್‌ಗಳಿಗೆ ಭಾರತದ ಬೌಲರ್‌ಗಳು ಅವಕಾಶ ನೀಡಲಿಲ್ಲ. ದೀಪ್ತಿ ಶರ್ಮಾ 3 ವಿಕೆಟ್ ಪಡೆದು ಮಿಂಚಿದರೆ, ಶ್ರೀ ಚರಣಿ, ಪ್ರೇಮಾ ರಾವತ್ ಹಾಗೂ ನಂದಿನಿ ಶರ್ಮಾ ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಪರಿಣಾಮ ಹಾಂಗ್‌ಕಾಂಗ್ 56 ರನ್‌ಗಳಿಗೆ ಕುಸಿಯಿತು. ಈ ಗೆಲುವಿನೊಂದಿಗೆ ಭಾರತ ಮಹಿಳಾ ಏಷ್ಯಾಕಪ್‌ನಲ್ಲಿ ಸತತ ಎರಡನೇ ಜಯ ದಾಖಲಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದ ಮೊದಲ ತಂಡವಾಗಿದೆ.