Home Blog

ಆಸ್ಟ್ರೇಲಿಯಾ ಉದ್ಯಮಿಗಳಿಗೆ ಪ್ರಧಾನಿ ಮೋದಿ ಬಂಪರ್ ಆಫರ್: ಭಾರತದಲ್ಲಿ ದೀರ್ಘಾವಧಿ ಹೂಡಿಕೆಗೆ ಮುಕ್ತ ಆಹ್ವಾನ

ಮೆಲ್ಬೋರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಹೂಡಿಕೆದಾರರಿಗೆ ಭಾರತವನ್ನು ದೀರ್ಘಾವಧಿಯ ಹೂಡಿಕೆಗೆ ಅತ್ಯಂತ ಸುರಕ್ಷಿತ ಹಾಗೂ ಲಾಭದಾಯಕ ತಾಣ ಎಂದು ಬಣ್ಣಿಸಿದರು. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯಾ–ಭಾರತ ಸಿಇಒಗಳ ವೇದಿಕೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾರತದ ವಿಶಾಲ ಮಾರುಕಟ್ಟೆ ಹಾಗೂ ಆಸ್ಟ್ರೇಲಿಯಾದ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪರಿಣತಿ ಒಂದಾದರೆ ಉಭಯ ರಾಷ್ಟ್ರಗಳಿಗೂ ಲಾಭವಾಗುವ ‘ವಿನ್–ವಿನ್’ ಸಹಭಾಗಿತ್ವ ಸಾಧ್ಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವ್ಯಾಪಾರ ಹಾಗೂ ಹೂಡಿಕೆ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸಲು ಪ್ರಸ್ತಾವಿತ ಸಮಗ್ರ ಆರ್ಥಿಕ ಸಹಕಾರ ಒಪ್ಪಂದ (Comprehensive Economic Cooperation Agreement) ಅನ್ನು ಶೀಘ್ರದಲ್ಲೇ ಅಂತಿಮಗೊಳಿಸುವ ಅಗತ್ಯವಿದೆ ಎಂದು ಅವರು ಒತ್ತಾಯಿಸಿದರು.

ಶಿಕ್ಷಣ ಕ್ಷೇತ್ರದಲ್ಲಿನ ದ್ವಿಪಕ್ಷೀಯ ಸಹಕಾರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು ಭಾರತದಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ಯಾಂಪಸ್‌ಗಳನ್ನು ಆರಂಭಿಸುತ್ತಿರುವ ಕ್ರಮವನ್ನು ಸ್ವಾಗತಿಸಿದರು.

ಉನ್ನತ ಶಿಕ್ಷಣ, ಜಂಟಿ ಸಂಶೋಧನೆ ಹಾಗೂ ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಸಹಕಾರ ಮತ್ತಷ್ಟು ಬಲಗೊಂಡರೆ, ಜಾಗತಿಕ ಅವಕಾಶಗಳಿಗೆ ತಕ್ಕಂತೆ ಯುವ ಪ್ರತಿಭೆಗಳನ್ನು ಸಜ್ಜುಗೊಳಿಸಲು ನೆರವಾಗಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು.

144 ರನ್ ಗುರಿ ಬೆನ್ನತ್ತಿ ಶತಕ ಸಿಡಿಸಿದ 20 ವರ್ಷದ ಲುಹಾನ್-ಡ್ರೆ ಪ್ರಿಟೋರಿಯಸ್! ಟಿ20 ಕ್ರಿಕೆಟ್ʼನಲ್ಲಿ ಹೊಸ ವಿಶ್ವ ದಾಖಲೆ

ಡಲ್ಲಾಸ್: ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ 23ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಯುವ ಬ್ಯಾಟರ್ ಲುಹಾನ್-ಡ್ರೆ ಪ್ರಿಟೋರಿಯಸ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಅತ್ಯಲ್ಪ ಗುರಿಯನ್ನು ಬೆನ್ನತ್ತುವ ವೇಳೆ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಅಪರೂಪದ ಸಾಧನೆಯನ್ನು 20 ವರ್ಷದ ಪ್ರಿಟೋರಿಯಸ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಡಲ್ಲಾಸ್‌ನಲ್ಲಿ ನಡೆದ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್ ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಂಐ ನ್ಯೂಯಾರ್ಕ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 143 ರನ್ ಗಳಿಸಿತು. ಪರಿಣಾಮ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡಕ್ಕೆ 144 ರನ್‌ಗಳ ಗೆಲುವಿನ ಗುರಿ ಸಿಕ್ಕಿತು.

ಸುಲಭ ಗುರಿ ಬೆನ್ನತ್ತಿದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್‌ಗೆ ಆರಂಭಿಕ ಬ್ಯಾಟರ್ ಲುಹಾನ್-ಡ್ರೆ ಪ್ರಿಟೋರಿಯಸ್ ಸ್ಫೋಟಕ ಆರಂಭ ನೀಡಿದರು. ಮೊದಲ ಓವರ್‌ನಿಂದಲೇ ಎದುರಾಳಿ ಬೌಲರ್‌ಗಳ ಮೇಲೆ ಮುಗಿಬಿದ್ದ ಅವರು ಕೇವಲ 52 ಎಸೆತಗಳಲ್ಲಿ 10 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಶತಕ ಪೂರೈಸಿದರು.

ಈ ಶತಕದೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಅತ್ಯಲ್ಪ ಗುರಿಯನ್ನು ಬೆನ್ನತ್ತುವ ವೇಳೆ ಶತಕ ದಾಖಲಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಪ್ರಿಟೋರಿಯಸ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಾಜಿ ವಿಕೆಟ್‌ಕೀಪರ್-ಬ್ಯಾಟರ್ ಆಡಂ ಗಿಲ್‌ಕ್ರಿಸ್ಟ್ ಹೆಸರಿನಲ್ಲಿತ್ತು.

2008ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಕ್ಕನ್ ಚಾರ್ಜರ್ಸ್ ಪರ ಆಡಿದ್ದ ಗಿಲ್‌ಕ್ರಿಸ್ಟ್, ಮುಂಬೈ ಇಂಡಿಯನ್ಸ್ ನೀಡಿದ್ದ 155 ರನ್‌ಗಳ ಗುರಿ ಬೆನ್ನತ್ತುವ ವೇಳೆ ಕೇವಲ 47 ಎಸೆತಗಳಲ್ಲಿ ಅಜೇಯ 109 ರನ್ ಸಿಡಿಸಿ ದಾಖಲೆ ನಿರ್ಮಿಸಿದ್ದರು.

ಈಗ 144 ರನ್‌ಗಳ ಗುರಿಯನ್ನು ಬೆನ್ನತ್ತುವ ವೇಳೆ ಶತಕ ಬಾರಿಸುವ ಮೂಲಕ ಲುಹಾನ್-ಡ್ರೆ ಪ್ರಿಟೋರಿಯಸ್ ಆ ದಾಖಲೆಯನ್ನು ಹಿಂದಿಕ್ಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಪ್ರಿಟೋರಿಯಸ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡ ಕೇವಲ 15.4 ಓವರ್‌ಗಳಲ್ಲಿ 146 ರನ್ ಗಳಿಸಿ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ತಂಡ ಅಂಕಪಟ್ಟಿಯಲ್ಲೂ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ.

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್ ಲಾರಿ: ಚಾಲಕ ಪಾರು

ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಬಳಿ ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ಅತಿ ವೇಗದಲ್ಲಿ ಬಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ಯಾಂಕರ್ ಕ್ಷಣಾರ್ಧದಲ್ಲೇ ಹೊತ್ತಿ ಉರಿದರೆ, ಅದರ ಜ್ವಾಲೆ ಪಕ್ಕದಲ್ಲಿದ್ದ ಹಾಲಿನ ಟ್ಯಾಂಕರ್‌ಗೂ ವ್ಯಾಪಿಸಿ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ.

ಅಪಘಾತ ಸಂಭವಿಸಿದ ಕ್ಷಣದಲ್ಲೇ ಚಾಲಕರು ಲಾರಿಯಿಂದ ಹೊರಗೆ ಹಾರಿದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಅವಘಡದಲ್ಲಿ ಎರಡೂ ಲಾರಿಗಳು ಬಹುತೇಕ ಸಂಪೂರ್ಣ ಸುಟ್ಟುಹೋಗಿವೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಏಕದಿನ ಕ್ರಿಕೆಟ್ ನಿಯಮಗಳಲ್ಲಿ ಬಿಗ್ ಚೇಂಜ್: ಪಂದ್ಯವನ್ನು 50 ಓವರ್ʼನಿಂದ 40 ಓವರ್ʼಗೆ ಇಳಿಸುವ ಚಿಂತನೆ!

ನವದೆಹಲಿ: ಟಿ20 ಕ್ರಿಕೆಟ್‌ನ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಬದಲಾಗುತ್ತಿರುವ ಪ್ರೇಕ್ಷಕರ ಅಭಿರುಚಿಯನ್ನು ಗಮನದಲ್ಲಿಟ್ಟುಕೊಂಡು, ಏಕದಿನ ಕ್ರಿಕೆಟ್‌ನ ಭವಿಷ್ಯ ಉಳಿಸಿಕೊಳ್ಳಲು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಹತ್ವದ ಬದಲಾವಣೆಗಳ ಬಗ್ಗೆ ಚಿಂತನೆ ನಡೆಸುತ್ತಿದೆ.

ಅದರ ಭಾಗವಾಗಿ, ಸದ್ಯದ 50 ಓವರ್‌ಗಳ ಏಕದಿನ ಪಂದ್ಯಗಳನ್ನು 40 ಓವರ್‌ಗಳಿಗೆ ಇಳಿಸುವ ಪ್ರಸ್ತಾವನೆ ಐಸಿಸಿ ಮುಂದಿದೆ. ಕ್ರಿಕೆಟ್‌ನ ಭವಿಷ್ಯದ ಕಾರ್ಯತಂತ್ರ ಕುರಿತು ಜಾಗತಿಕ ಸಲಹಾ ಸಂಸ್ಥೆ ಮೆಕಿನ್ಸೆ (McKinsey) ನೇತೃತ್ವದಲ್ಲಿ ಐಸಿಸಿ ಇತ್ತೀಚೆಗೆ ಸಮಗ್ರ ಪರಿಶೀಲನೆ ನಡೆಸಿದೆ. ಈ ವೇಳೆ, ಏಕದಿನ ಕ್ರಿಕೆಟ್‌ಗೆ ಹೊಸ ಚೈತನ್ಯ ತುಂಬಬೇಕಾದರೆ ಓವರ್‌ಗಳ ಸಂಖ್ಯೆಯಲ್ಲಿ ಬದಲಾವಣೆ ಅಗತ್ಯ ಎಂದು ಸಲಹೆ ನೀಡಲಾಗಿದೆ.

40 ಓವರ್‌ಗಳ ಪ್ರಸ್ತಾವನೆಗೆ ಪ್ರಮುಖ ಕಾರಣಗಳು

ಪ್ರಸ್ತುತ ಟಿ20 ಪಂದ್ಯಗಳು ಕೇವಲ 3 ರಿಂದ 4 ಗಂಟೆಗಳಲ್ಲೇ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಸುಮಾರು 8 ಗಂಟೆಗಳ ಕಾಲ ನಡೆಯುವ ಏಕದಿನ ಪಂದ್ಯಗಳತ್ತ ಪ್ರೇಕ್ಷಕರ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪಂದ್ಯವನ್ನು 40 ಓವರ್‌ಗಳಿಗೆ ಸೀಮಿತಗೊಳಿಸಿದರೆ ಅದರ ಅವಧಿ ಸುಮಾರು 6 ಗಂಟೆಗಳಿಗೆ ಇಳಿಯಲಿದ್ದು, ವೀಕ್ಷಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ.

ಇನ್ನೊಂದೆಡೆ, ಏಕದಿನ ಕ್ರಿಕೆಟ್‌ನಲ್ಲಿ 15ರಿಂದ 40ನೇ ಓವರ್‌ಗಳ ನಡುವಿನ ಆಟ ಹೆಚ್ಚು ರೋಚಕವಾಗಿರುವುದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಅವಧಿಯಲ್ಲಿ ಹೆಚ್ಚಾಗಿ ಸಿಂಗಲ್ಸ್ ಮತ್ತು ಡಬಲ್ಸ್‌ಗೆ ಒತ್ತು ನೀಡಲಾಗುವುದರಿಂದ ಪಂದ್ಯದಲ್ಲಿ ರೋಮಾಂಚನ ಕಡಿಮೆಯಾಗುತ್ತದೆ. ಓವರ್‌ಗಳ ಕಡಿತದಿಂದ ಮೊದಲಿನಿಂದ ಕೊನೆಯವರೆಗೂ ಪಂದ್ಯವನ್ನು ಹೆಚ್ಚು ಆಕರ್ಷಕವಾಗಿಡುವ ಉದ್ದೇಶ ಹೊಂದಲಾಗಿದೆ.

ಇದರ ಜೊತೆಗೆ, ನಿರಂತರ ಕ್ರಿಕೆಟ್ ವೇಳಾಪಟ್ಟಿಯಿಂದ ಆಟಗಾರರ ಮೇಲೆ ಉಂಟಾಗುತ್ತಿರುವ ದೈಹಿಕ ಒತ್ತಡ ಹಾಗೂ ಗಾಯದ ಸಮಸ್ಯೆಗಳನ್ನು ಕಡಿಮೆ ಮಾಡಲು ಈ ಬದಲಾವಣೆ ಸಹಕಾರಿಯಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಐಸಿಸಿ ಮುಂದಿರುವ ಪ್ರಮುಖ ಶಿಫಾರಸುಗಳು

ಮೆಕಿನ್ಸೆ ಸಂಸ್ಥೆ ಐಸಿಸಿಗೆ ಹಲವು ಮಹತ್ವದ ಸಲಹೆಗಳನ್ನು ನೀಡಿದೆ. ಅವುಗಳಲ್ಲಿ ಪ್ರಮುಖವಾಗಿ 50 ಓವರ್‌ಗಳ ಬದಲಿಗೆ 40 ಓವರ್‌ಗಳ ಏಕದಿನ ಪಂದ್ಯಗಳನ್ನು ಪರಿಚಯಿಸುವುದು, ಏಕದಿನ ವಿಶ್ವಕಪ್‌ಗೆ 18 ತಿಂಗಳ ಮುಂಚೆಯಷ್ಟೇ ಏಕದಿನ ಸರಣಿಗಳನ್ನು ಆಯೋಜಿಸುವುದು,

ಟೆಸ್ಟ್, ಏಕದಿನ ಹಾಗೂ ಟಿ20 ಮಾದರಿಗಳಿಗೆ ಪ್ರತ್ಯೇಕ ವೇಳಾಪಟ್ಟಿಯನ್ನು ರೂಪಿಸುವುದು ಮತ್ತು ಏಷ್ಯಾಕಪ್ ಮಾದರಿಯಲ್ಲಿ ವಿವಿಧ ಖಂಡಗಳಲ್ಲಿ ಕಾಂಟಿನೆಂಟಲ್ ಟೂರ್ನಿಗಳು ಹಾಗೂ ತ್ರಿಕೋನ ಸರಣಿಗಳನ್ನು ಉತ್ತೇಜಿಸುವುದು ಸೇರಿವೆ.

2027 ವಿಶ್ವಕಪ್‌ವರೆಗೆ ಯಾವುದೇ ಬದಲಾವಣೆ ಇಲ್ಲ

ಈ ಪ್ರಸ್ತಾವನೆಗಳು ಚರ್ಚೆಯ ಹಂತದಲ್ಲಿದ್ದು, 2027ರ ಏಕದಿನ ವಿಶ್ವಕಪ್ ಮುಗಿಯುವವರೆಗೆ ಯಾವುದೇ ಹೊಸ ನಿಯಮ ಜಾರಿಗೆ ಬರುವುದಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ಪ್ರಸ್ತುತ ಜಾರಿಯಲ್ಲಿರುವ ‘ಫ್ಯೂಚರ್ ಟೂರ್ಸ್ ಪ್ರೋಗ್ರಾಂ’ (FTP) ವೇಳಾಪಟ್ಟಿಯನ್ನು ಪರಿಶೀಲಿಸಿದ ಬಳಿಕವೇ ಐಸಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

ಸದ್ಯ ಲಭ್ಯವಿರುವ ಮಾಹಿತಿಯಂತೆ, ಸ್ಕಾಟ್ಲೆಂಡ್‌ನ ಎಡಿನ್‌ಬರ್ಗ್‌ನಲ್ಲಿ ನಡೆಯಲಿರುವ ಐಸಿಸಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 12 ಪೂರ್ಣ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳ ಮುಂದೆ ಈ ಪ್ರಸ್ತಾವನೆಯನ್ನು ಚರ್ಚೆಗೆ ಇಡಲಾಗುತ್ತದೆ. ಸಭೆಯ ಬಳಿಕವೇ ಏಕದಿನ ಕ್ರಿಕೆಟ್‌ನ ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಅವರೆಗೆ, 2027ರ ಏಕದಿನ ವಿಶ್ವಕಪ್ ಸೇರಿದಂತೆ ಎಲ್ಲಾ ಏಕದಿನ ಟೂರ್ನಿಗಳು ಸಾಂಪ್ರದಾಯಿಕ 50 ಓವರ್‌ಗಳ ಮಾದರಿಯಲ್ಲೇ ಮುಂದುವರಿಯಲಿವೆ.

ಗದಗ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸಿದ ಅಮಾನವೀಯ ಕೃತ್ಯ! ವಿಡಿಯೋ ವೈರಲ್ ಆರೋಪ!

ಗದಗ: ಜಿಲ್ಲೆಯಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಬುದ್ಧಿಮಾಂದ್ಯ ಯುವತಿಯೊಬ್ಬಳು ಆರು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ಆರೋಪದಡಿ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಯುವತಿಗೆ ಚಾಕೊಲೇಟ್ ಹಾಗೂ ತಿಂಡಿ ಕೊಡಿಸುವ ಆಮಿಷವೊಡ್ಡಿ ದುರ್ಗಪ್ಪ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಯುವತಿಯ ಆರೋಗ್ಯದಲ್ಲಿ ಬದಲಾವಣೆ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಅನುಮಾನ ವ್ಯಕ್ತವಾಗಿದ್ದು, ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಲಾಗಿದೆ. ಬಳಿಕ ಜುಲೈ 6ರಂದು ಯುವತಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಸುಮಾರು ಆರು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಘಟನೆ ಬೆಳಕಿಗೆ ಬಂದ ನಂತರ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೊ ಗ್ರಾಮದಲ್ಲಿನ ಕೆಲವರ ಮೊಬೈಲ್‌ಗಳಲ್ಲಿ ಹರಿದಾಡಿದೆ ಎಂಬ ಆರೋಪವೂ ವ್ಯಕ್ತವಾಗಿದ್ದು,

ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ವಿಡಿಯೊ ವೈರಲ್ ಆಗಿದೆ ಎಂಬ ಆರೋಪದ ಸತ್ಯಾಸತ್ಯತೆಯನ್ನೂ ತನಿಖೆ ಮೂಲಕವೇ ಖಚಿತಪಡಿಸಿಕೊಳ್ಳಬೇಕಿದೆ. ಇದೇ ಪ್ರಕರಣದಲ್ಲಿ ಇನ್ನೂ ಕೆಲವರ ಪಾತ್ರವಿದೆಯೇ ಎಂಬ ಅನುಮಾನವೂ ವ್ಯಕ್ತವಾಗಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂತ್ರಸ್ತ ಯುವತಿಗೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯ ನೆರವು ನೀಡಲಾಗುತ್ತಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಯನಾಡು ಸುರಂಗ ದುರಂತ: ಕೇರಳದ ಅವಳಿ ಸುರಂಗ ನಿರ್ಮಾಣ ಮಾಡಿದ ಕಂಪನಿಗೆ ಕರ್ನಾಟಕದ ನಂಟು

ವಯನಾಡು: ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ಸುರಂಗ ನಿರ್ಮಾಣ ಕಾಮಗಾರಿಯನ್ನು ನಿರ್ವಹಿಸುತ್ತಿರುವ ದಿಲೀಪ್ ಬಿಲ್ಡ್‌ಕಾನ್ ಸಂಸ್ಥೆಗೆ ಕರ್ನಾಟಕದೊಂದಿಗೆ ನಂಟಿದ್ದು, ರಾಜ್ಯದಲ್ಲಿ ಕೈಗೊಂಡಿದ್ದ ಹಲವು ಯೋಜನೆಗಳು ಈ ಹಿಂದೆ ವಿವಾದಕ್ಕೆ ಗುರಿಯಾಗಿದ್ದವು. ಕೆಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಂಸ್ಥೆ ವಿರುದ್ಧ ಆರೋಪಗಳು ಕೇಳಿಬಂದಿದ್ದು, ಕೆಲ ಯೋಜನೆಗಳಲ್ಲಿ ನಿರ್ಬಂಧವೂ ವಿಧಿಸಲಾಗಿತ್ತು.

ಬೆಂಗಳೂರು–ಮೈಸೂರು ನಡುವಿನ 117 ಕಿಲೋಮೀಟರ್ ಉದ್ದದ ಎಕ್ಸ್‌ಪ್ರೆಸ್‌ವೇಯನ್ನು ಸುಮಾರು ₹8,480 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವುದು ಇದೇ ದಿಲೀಪ್ ಬಿಲ್ಡ್‌ಕಾನ್ ಸಂಸ್ಥೆ. ಇದರ ಜೊತೆಗೆ ಮಂಗಳೂರಿನ ಕೆತ್ತಿಕಲ್‌ನಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನೂ ಸಂಸ್ಥೆ ಕೈಗೊಂಡಿತ್ತು. ಆ ವೇಳೆ ಅವೈಜ್ಞಾನಿಕವಾಗಿ ಮಣ್ಣು ವಿಲೇವಾರಿ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು.

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಸಂಭವಿಸಿದ ಸರಣಿ ಅಪಘಾತಗಳಲ್ಲಿ 90ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಹೆದ್ದಾರಿ ವಿನ್ಯಾಸದ ದೋಷ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ಸಮಸ್ಯೆ ಹಾಗೂ ಸಮರ್ಪಕ ಸುರಕ್ಷತಾ ಕ್ರಮಗಳ ಕೊರತೆಯೇ ಅಪಘಾತಗಳಿಗೆ ಕಾರಣ ಎಂಬ ಆರೋಪಗಳು ಆಗ ವ್ಯಕ್ತವಾಗಿದ್ದವು.

ಇದೇ ಯೋಜನೆಗೆ ಸಂಬಂಧಿಸಿದ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದ ಪ್ರಕರಣದಲ್ಲೂ ಕಂಪನಿಯ ಕೆಲವು ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆ ಬೆಂಗಳೂರಿನ ಸುರಂಗ ರಸ್ತೆ ಯೋಜನೆಗೆ ಟೆಂಡರ್ ಸಲ್ಲಿಸುವ ಪ್ರಕ್ರಿಯೆಯಿಂದಲೂ ಸಂಸ್ಥೆಯನ್ನು ಹೊರಗಿಡಲಾಗಿತ್ತು.

ಇದೀಗ ವಯನಾಡಿನ ಕಲ್ಲಾಡಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅವಳಿ ಸುರಂಗದ ಬಳಿ ಸಂಭವಿಸಿದ ಭೂಕುಸಿತದಲ್ಲಿ ಮಣ್ಣಿನೊಂದಿಗೆ ಕೊಚ್ಚಿಹೋದ ಟ್ಯಾಂಕರ್‌ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ನೋಂದಣಿಯಾಗಿರುವುದು ಬೆಳಕಿಗೆ ಬಂದಿದೆ.

ಆದರೆ, ಈ ದುರಂತಕ್ಕೆ ತಮ್ಮ ಸಂಸ್ಥೆ ಕಾರಣವಲ್ಲ ಎಂದು ದಿಲೀಪ್ ಬಿಲ್ಡ್‌ಕಾನ್ ಸ್ಪಷ್ಟನೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಗಳು, “ಸುರಂಗದಿಂದ ಹೊರತೆಗೆದ ಮಣ್ಣನ್ನು ಸಂಗ್ರಹಿಸಿರುವ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿಲ್ಲ. ಘಟನೆ ಸುರಂಗ ಕಾಮಗಾರಿ ನಡೆಯುತ್ತಿರುವ ಸ್ಥಳದಿಂದ ಸುಮಾರು 12 ಮೀಟರ್ ದೂರದಲ್ಲಿ ನಡೆದಿದೆ. ನಾವು ವೈಜ್ಞಾನಿಕ ರೀತಿಯಲ್ಲೇ ಮಣ್ಣು ವಿಲೇವಾರಿ ಮಾಡಿದ್ದೇವೆ. ಏಕಾಏಕಿ ಸುರಿದ ಭಾರೀ ಮಳೆಯೇ ಭೂಕುಸಿತಕ್ಕೆ ಕಾರಣ” ಎಂದು ತಿಳಿಸಿದ್ದಾರೆ.

ಭಾರೀ ಮಳೆಗೆ HPCL ಘಟಕ ಜಲಾವೃತ: ನದಿಯಲ್ಲಿ ತೇಲಿ ಹೋದ 3,000 LPG ಸಿಲಿಂಡರ್ ಗಳು

ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ರಾಯಗಢ ಜಿಲ್ಲೆಯ ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)ನ ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್ ಘಟಕಕ್ಕೆ ಪ್ರವಾಹದ ನೀರು ನುಗ್ಗಿದ್ದು, ಸುಮಾರು 3,000 ಎಲ್‌ಪಿಜಿ ಸಿಲಿಂಡರ್‌ಗಳು ನೀರಿನಲ್ಲಿ ತೇಲಿ ಹೋಗಿರುವ ಘಟನೆ ನಡೆದಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆತಂಕಕ್ಕೆ ಕಾರಣವಾಗಿವೆ.

ಪಾತಾಳಗಂಗಾ ನದಿಯ ನೀರಿನ ಮಟ್ಟ ಏರಿಕೆಯಾಗಿ ಘಟಕ ಜಲಾವೃತಗೊಂಡ ಪರಿಣಾಮ ಸಿಲಿಂಡರ್‌ಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ತೇಲಿ ಹೋದ ಸಿಲಿಂಡರ್‌ಗಳಲ್ಲಿ ಕೆಲವು ಗ್ಯಾಸ್ ತುಂಬಿದ್ದರೆ, ಇನ್ನೂ ಕೆಲವು ಖಾಲಿಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಳಿಕ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ನದಿಯಲ್ಲಿ ಅಥವಾ ದಡದಲ್ಲಿ ಸಿಲಿಂಡರ್‌ಗಳು ಕಂಡುಬಂದರೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಅವುಗಳನ್ನು ಮುಟ್ಟಬಾರದು, ಸ್ಥಳಾಂತರಿಸಬಾರದು ಅಥವಾ ಮನೆಗೆ ತೆಗೆದುಕೊಂಡು ಹೋಗಬಾರದು ಎಂದು ರಾಯಗಢ ಜಿಲ್ಲಾಧಿಕಾರಿ ಕಿಶನ್ ಜವಾಲೆ ಎಚ್ಚರಿಕೆ ನೀಡಿದ್ದಾರೆ.

ಸಿಲಿಂಡರ್‌ಗಳ ಸ್ಥಿತಿ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲದ ಕಾರಣ ಅವು ಅಪಾಯಕಾರಿಯಾಗಿರುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಸಿಲಿಂಡರ್ ಕಂಡುಬಂದರೆ ತಕ್ಷಣ ಸ್ಥಳೀಯ ಆಡಳಿತ ಅಥವಾ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಜಿಲ್ಲೆಯ ಹಲವು ಭಾಗಗಳಲ್ಲಿ ಇನ್ನೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸಾರ್ವಜನಿಕರು ಅನಗತ್ಯವಾಗಿ ಪ್ರವಾಹಪೀಡಿತ ಪ್ರದೇಶಗಳಿಗೆ ತೆರಳದಂತೆ ಹಾಗೂ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಕಿರುಕುಳ ಆರೋಪ: ಎರಡು ಪ್ರತ್ಯೇಕ ಪ್ರಕರಣ ದಾಖಲು, ತನಿಖೆ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಬಳಿ ಯುವತಿಗೆ ಚಾಕು ತೋರಿಸಿ ಕಿರುಕುಳ ನೀಡಲಾಗಿದೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪುರುಷರಕಟ್ಟೆ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಕುರಿತು ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಕೂಟಿ ನಿಲ್ಲಿಸಿ ಬಸ್ ಹತ್ತಲು ತೆರಳುತ್ತಿದ್ದ ವೇಳೆ ತನಗೆ ಪರಿಚಯವಿದ್ದ ಸುಹೈಲ್ ಹಾಗೂ ಆತನ ಜೊತೆಗಿದ್ದ ಇತರ ಮೂವರು ಯುವಕರು ಅಡ್ಡಗಟ್ಟಿ ಚಾಕು ತೋರಿಸಿ ಕಿರುಕುಳ ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಯುವತಿಯ ದೂರಿನ ಆಧಾರದ ಮೇಲೆ ಪುತ್ತೂರು ಮಹಿಳಾ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 78(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಯುವಕರಿಂದ ಪ್ರತಿದೂರು:

ಈ ನಡುವೆ ಆರೋಪಿತ ಯುವಕರು ಕೂಡ ಪೊಲೀಸರಿಗೆ ಪ್ರತ್ಯೇಕ ದೂರು ನೀಡಿದ್ದಾರೆ. ತಾವು ಯಾವುದೇ ಕಿರುಕುಳ ಅಥವಾ ಬೆದರಿಕೆ ನೀಡಿಲ್ಲ ಎಂದು ಹೇಳಿರುವ ಅವರು, ಬೇಕರಿಯಲ್ಲಿ ಬ್ರೆಡ್‌ಗೆ ಚೀಸ್ ಹಾಕಲು ಚಾಕು ಪಡೆದುಕೊಂಡಿದ್ದೆವು. ಚೀಸ್ ಕತ್ತರಿಸಿದ ಬಳಿಕ ಅದನ್ನು ವಾಪಸ್ ನೀಡಲು ತೆರಳುತ್ತಿದ್ದಾಗ ಯುವತಿ ಎದುರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಯುವಕರು ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಸಿಸಿಟಿವಿ ದೃಶ್ಯಗಳ ಪರಿಶೀಲನೆ:

ಸದ್ಯ ಪೊಲೀಸರು ಪುರುಷರಕಟ್ಟೆ ಜಂಕ್ಷನ್ ಹಾಗೂ ಬೇಕರಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಯುವತಿ ಮಾಡಿರುವ ಆರೋಪ ಮತ್ತು ಯುವಕರು ನೀಡಿರುವ ಪ್ರತಿದೂರಿನ ಸತ್ಯಾಸತ್ಯತೆ ಪತ್ತೆಹಚ್ಚಲು ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.

ಪ್ರಭಾಸ್ ಚಿತ್ರದ ಸೆಟ್‌ನಲ್ಲಿ ಅವಘಡ; ಕೀಟ ಕಚ್ಚಿದ ಬಳಿಕ ನಟ ರಾಜೇಶ್ ಶರ್ಮ ಆರೋಗ್ಯದಲ್ಲಿ ತೀವ್ರ ಏರುಪೇರು- ಆಸ್ಪತ್ರೆಗೆ ದಾಖಲು

ಹೈದರಾಬಾದ್: ‘ಫೌಜಿ’ ಚಿತ್ರದ ಚಿತ್ರೀಕರಣದ ವೇಳೆ ಹಿರಿಯ ನಟ ರಾಜೇಶ್ ಶರ್ಮ ಅವರಿಗೆ ಕೀಟ ಕಚ್ಚಿದ ಪರಿಣಾಮ ಆರೋಗ್ಯ ಗಂಭೀರಗೊಂಡಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಈ ಘಟನೆ ಬಳಿಕ ಅವರನ್ನು ಕೋಲ್ಕತ್ತಾದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.

ಚಿತ್ರೀಕರಣ ಮುಗಿದ ಬಳಿಕ ದಟ್ಟ ಗಿಡಗಂಟಿಗಳಿದ್ದ ಪ್ರದೇಶದಲ್ಲಿ ತಂತ್ರಜ್ಞರೊಂದಿಗೆ ಮಾತನಾಡುತ್ತಿದ್ದ ವೇಳೆ ಕೀಟ ಕಚ್ಚಿದರೂ, ಅದನ್ನು ಸಾಮಾನ್ಯ ಎಂದು ಭಾವಿಸಿ ರಾಜೇಶ್ ಶರ್ಮ ಚಿಕಿತ್ಸೆ ಪಡೆಯದೆ ನಿರ್ಲಕ್ಷ್ಯ ವಹಿಸಿದ್ದರು. ಆದರೆ ಕೆಲವೇ ಗಂಟೆಗಳಲ್ಲಿ ಬಲಗಾಲಿನಲ್ಲಿ ತೀವ್ರ ನೋವು ಮತ್ತು ಜ್ವರ ಕಾಣಿಸಿಕೊಂಡಿದ್ದು, ಕೋಲ್ಕತ್ತಾ ತಲುಪಿದ ನಂತರ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ.

ವೈದ್ಯರ ಪ್ರಕಾರ, ಸೋಂಕು ಕಾಲ್ಬೆರಳುಗಳಿಂದ ಮೊಣಕಾಲಿನವರೆಗೆ ವೇಗವಾಗಿ ಹರಡಿದ್ದು, ದೊಡ್ಡ ಗುಳ್ಳೆಗಳು ಕಾಣಿಸಿಕೊಂಡಿವೆ. ಜೊತೆಗೆ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿರುವುದರಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ರಕ್ತ ಹೆಪ್ಪುಗಟ್ಟುವಿಕೆ ಉಂಟಾಗುವ ಅಪಾಯವಿದ್ದು, ಅದು ಶ್ವಾಸಕೋಶಕ್ಕೆ ತಲುಪದಂತೆ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ.

ಡಾ. ಅವಿಜಿತ್ ಭಟ್ಟಾಚಾರ್ಯ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಬಂಗಾಳ ಚಲನಚಿತ್ರ ಕಲಾವಿದರ ಸಂಘ ಹಾಗೂ ನಟ ಪ್ರೊಸೆಂಜಿತ್ ಚಟರ್ಜಿ ವೈದ್ಯಕೀಯ ನೆರವು ಒದಗಿಸುತ್ತಿದ್ದಾರೆ. ಹಿಂದಿ ಮತ್ತು ಬಂಗಾಳಿ ಚಿತ್ರರಂಗದಲ್ಲಿ ಮೂರು ದಶಕಗಳಿಂದ ಸಕ್ರಿಯವಾಗಿರುವ ರಾಜೇಶ್ ಶರ್ಮ, ಅನೇಕ ಯಶಸ್ವಿ ಸಿನಿಮಾಗಳು ಮತ್ತು ವೆಬ್‌ಸಿರೀಸ್‌ಗಳ ಮೂಲಕ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದಾರೆ.

ಅಮೆರಿಕ-ಇರಾನ್ ಸಂಘರ್ಷ ತೀವ್ರ: ತನ್ನ ಹತ್ಯೆಗೆ ಸಂಚು ನಡೆಯುತ್ತಿದೆ ಎಂದ ಟ್ರಂಪ್!

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸೇನಾ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ಇರಾನ್ ತನ್ನನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.

ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ ನ್ಯಾಟೋ ಶೃಂಗಸಭೆ ವೇಳೆ ಮಾತನಾಡಿದ ಟ್ರಂಪ್, ತಾನು ಇರಾನ್‌ನ ಪ್ರಮುಖ ಗುರಿಯಾಗಿದ್ದೇನೆ ಎಂದು ಹೇಳಿದ್ದಾರೆ. ಇರಾನ್‌ನ ಕೆಲವು ಶಕ್ತಿಗಳು ತಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಕದನ ವಿರಾಮ ಮುರಿದಿದೆ ಎಂದ ಟ್ರಂಪ್:

ಕತಾರ್ ಮಧ್ಯಸ್ಥಿಕೆಯಲ್ಲಿ ನಡೆದಿದ್ದ ಮಧ್ಯಂತರ ಕದನ ವಿರಾಮ ಒಪ್ಪಂದ ಈಗ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ಪದೇಪದೆ ಒಪ್ಪಂದಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ ಅವರು, ಇರಾನ್ ವಿರುದ್ಧ ಈಗಾಗಲೇ ಕಠಿಣ ದಾಳಿ ನಡೆಸಲಾಗಿದ್ದು, ಅಗತ್ಯವಿದ್ದರೆ ಮತ್ತಷ್ಟು ಮಿಲಿಟರಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇರಾನ್ ಜೊತೆ ಶಾಂತಿ ಮಾತುಕತೆ ನಡೆಸುವ ಪ್ರಯತ್ನಗಳು ಸಮಯ ವ್ಯರ್ಥವಾಗುತ್ತಿವೆ ಎಂದು ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಮೆರಿಕ ದಾಳಿಯಲ್ಲಿ 8 ಇರಾನ್ ಸೈನಿಕರ ಸಾವು:

ಇತ್ತೀಚಿನ ಅಮೆರಿಕದ ವಾಯುದಾಳಿಯಲ್ಲಿ ಇರಾನ್‌ನ 8 ಸೈನಿಕರು ಮೃತಪಟ್ಟಿದ್ದಾರೆ ಎಂದು ಇರಾನ್ ಸೇನೆ ತಿಳಿಸಿದೆ. ದಕ್ಷಿಣ ಇರಾನ್‌ನ ಬಂದರ್ ಅಬ್ಬಾಸ್ ಹಾಗೂ ಬುಶೆಹರ್ ಪ್ರದೇಶಗಳಲ್ಲಿರುವ ಮಿಲಿಟರಿ ನೆಲೆಗಳ ಮೇಲೆ ನಡೆದ ದಾಳಿಯಲ್ಲಿ ವಾಯುಪಡೆ ಮತ್ತು ನೌಕಾಪಡೆಯ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕ ಏಕಪಕ್ಷೀಯವಾಗಿ ದಾಳಿ ನಡೆಸುವ ಮೂಲಕ ಅಂತಾರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಆರೋಪಿಸಿದೆ.

ಟ್ರಂಪ್‌ಗೆ ಇರಾನ್‌ನಿಂದ ಬೆದರಿಕೆ ಏಕೆ?

2020ರಲ್ಲಿ ಅಮೆರಿಕ ಅಧ್ಯಕ್ಷರಾಗಿದ್ದ ವೇಳೆ ಡೊನಾಲ್ಡ್ ಟ್ರಂಪ್ ಆದೇಶದ ಮೇರೆಗೆ ಇರಾನ್‌ನ ಪ್ರಮುಖ ಸೇನಾ ಕಮಾಂಡರ್ ಜನರಲ್ ಖಾಸಿಂ ಸುಲೈಮಾನಿ ಅವರನ್ನು ಬಾಗ್ದಾದ್‌ನಲ್ಲಿ ಡ್ರೋನ್ ದಾಳಿ ಮೂಲಕ ಹತ್ಯೆ ಮಾಡಲಾಗಿತ್ತು.

ಈ ಘಟನೆ ಬಳಿಕ ಇರಾನ್ ನಾಯಕತ್ವ ಟ್ರಂಪ್ ವಿರುದ್ಧ ಸೇಡು ತೀರಿಸಿಕೊಳ್ಳುವ ಎಚ್ಚರಿಕೆ ನೀಡಿತ್ತು. ಇದೇ ಕಾರಣದಿಂದ ಈಗಲೂ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಟ್ರಂಪ್ ಹೇಳುತ್ತಿದ್ದಾರೆ.

ಹಾರ್ಮುಜ್ ಜಲಸಂಧಿ ಮೇಲೆ ವಿಶ್ವದ ಕಣ್ಣು:

ಅಮೆರಿಕ-ಇರಾನ್ ಸಂಘರ್ಷದಿಂದ ಹಾರ್ಮುಜ್ ಜಲಸಂಧಿಯಲ್ಲಿನ ಭದ್ರತೆ ಬಗ್ಗೆ ಆತಂಕ ಹೆಚ್ಚಾಗಿದೆ. ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಈ ಪ್ರದೇಶದಲ್ಲಿ ಸಂಘರ್ಷ ಮುಂದುವರಿದರೆ ಇಂಧನ ಪೂರೈಕೆಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ.

ಈ ಬೆಳವಣಿಗೆಗಳನ್ನು ವಿಶ್ವದ ರಾಷ್ಟ್ರಗಳು ಆತಂಕದಿಂದ ಗಮನಿಸುತ್ತಿವೆ.