ಹಗರಿಬೊಮ್ಮನಹಳ್ಳಿ: “ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಾಗ ಮಾತ್ರ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ದೇಶದ ಅಭಿವೃದ್ಧಿಗೂ ಬಲ ಸಿಗುತ್ತದೆ” ಎಂದು ಎಸ್ಎಲ್ಆರ್ ಮೆಟಾಲಿಕ್ಸ್ ಸಂಸ್ಥೆಯ ಅಧಿಕಾರಿ ದೀಪಿಕಾ ಹೇಳಿದರು.
ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಗ್ರಾಮದಲ್ಲಿ ಎಸ್ಎಲ್ಆರ್ ಮೆಟಾಲಿಕ್ಸ್ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜುಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಆರು ತಿಂಗಳ ಉಚಿತ ಹೊಲಿಗೆ ತರಬೇತಿ ಸಮಾರೋಪ ಹಾಗೂ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಸಬಲೀಕರಣ ಹೊಂದಿದಾಗ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಹೊರಬರಲು ಸಾಧ್ಯವಾಗುತ್ತದೆ. ಆತ್ಮವಿಶ್ವಾಸದಿಂದ ಸ್ವಂತ ಉದ್ಯೋಗ ಆರಂಭಿಸಿ ಸಮಾಜದಲ್ಲಿ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಎಸ್ಎಲ್ಆರ್ ಸಂಸ್ಥೆಯ ಸಿಎಸ್ಆರ್ ವಿಭಾಗದ ಮುಖ್ಯಸ್ಥ ಕೆ. ಮಲ್ಲಿಕಾರ್ಜುನ ಮಾತನಾಡಿ, ಸಂಸ್ಥೆಯಿಂದ ನೀಡಲಾಗಿರುವ ತರಬೇತಿಯನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಸ್ವಂತ ಟೈಲರಿಂಗ್ ಅಂಗಡಿ ಆರಂಭಿಸುವುದರ ಜೊತೆಗೆ ಇತರರಿಗೂ ತರಬೇತಿ ನೀಡುವ ಮೂಲಕ ಮತ್ತಷ್ಟು ಜನರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಸಂಸ್ಥೆಯ ವತಿಯಿಂದ ವಿದ್ಯಾರ್ಥಿ ಮಿತ್ರ, ರೈತ ಮಿತ್ರ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್ಎಲ್ಆರ್ ಕಂಪನಿಯ ಸಿಬ್ಬಂದಿಗಳಾದ ಮಾರುತಿ ಗೋಶಿ, ವೆಂಕಟೇಶ್, ಪಂಪಾಪತಿ, ಎಸ್ಡಿಎಂಸಿ ಅಧ್ಯಕ್ಷ ದುರುಗಪ್ಪ, ತರಬೇತಿ ಶಿಕ್ಷಕಿ ಸುವರ್ಣಮ್ಮ ಹಾಗೂ ತರಬೇತಿ ಪಡೆದ ಮಹಿಳೆಯರಾದ ಸೊನ್ನದ ವಸಂತ, ದುರುಗಮ್ಮ, ಉಷಾ ಸೇರಿದಂತೆ ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
“ಆರು ತಿಂಗಳ ಉಚಿತ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ. ತರಬೇತಿ ಪಡೆದವರು ಸ್ವಯಂ ಉದ್ಯೋಗ ಆರಂಭಿಸಿ ತಮ್ಮ ಕುಟುಂಬದ ಆರ್ಥಿಕ ಸಂಕಷ್ಟ ನಿವಾರಿಸಿಕೊಳ್ಳಬೇಕು ಎಂದು ಎಸ್ಎಲ್ಆರ್ ಮೆಟಾಲಿಕ್ಸ್,ಸಿಎಸ್ಆರ್ ವಿಭಾಗದ ಮುಖ್ಯಸ್ಥ ಕೆ. ಮಲ್ಲಿಕಾರ್ಜುನ ಹೇಳಿದ್ದಾರೆ.