Home Blog

ಧೂಳು, ತುಕ್ಕು ಹಿಡಿದು ಹಾಳಾಗುತ್ತಿರುವ ಕೋಟಿ ಮೌಲ್ಯದ ವಾಹನಗಳು; ಬೆಂಗಳೂರಿನಲ್ಲಿ ಹೊಸ ಸಮಸ್ಯೆ!

ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ಆವರಣ ಹಾಗೂ ಪೊಲೀಸ್ ಯಾರ್ಡ್‌ಗಳು ಜಪ್ತಿ ಮಾಡಿರುವ ವಾಹನಗಳಿಂದ ತುಂಬಿ ತುಳುಕುತ್ತಿವೆ.

ಅಪರಾಧ ಪ್ರಕರಣಗಳು, ಅಪಘಾತಗಳು ಹಾಗೂ ಸಂಚಾರ ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದ ಸಾವಿರಾರು ಕಾರು, ಬೈಕ್ ಮತ್ತು ಆಟೋಗಳು ವರ್ಷಗಳಿಂದ ನಿಂತಲ್ಲೇ ಹಾಳಾಗುತ್ತಿವೆ.

ಪೊಲೀಸ್ ಠಾಣೆಗಳ ಮುಂಭಾಗ, ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲೇ ವಾಹನಗಳನ್ನು ಸಾಲಾಗಿ ನಿಲ್ಲಿಸಲಾಗಿದ್ದು, ಇದರಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿದೆ. ಕೆಲವು ಕಡೆಗಳಲ್ಲಿ ವಾಹನಗಳ ಸುತ್ತ ಗಿಡಗಂಟಿಗಳು ಬೆಳೆದು, ವಿಷಜಂತುಗಳ ಆಶ್ರಯ ತಾಣಗಳಾಗಿವೆ. ಇದರಿಂದ ಸ್ಥಳೀಯ ನಿವಾಸಿಗಳಲ್ಲೂ ಆತಂಕ ಹೆಚ್ಚಾಗಿದೆ.

ಮಳೆ, ಬಿಸಿಲಿಗೆ ಸಿಲುಕಿರುವ ಕೋಟ್ಯಂತರ ರೂಪಾಯಿ ಮೌಲ್ಯದ ವಾಹನಗಳು ಈಗ ತುಕ್ಕು ಹಿಡಿದು ಕಬ್ಬಿಣದ ಚೂರುಗಳಾಗುತ್ತಿವೆ. ಅಪಘಾತ ಹಾಗೂ ಕಳ್ಳತನ ಪ್ರಕರಣಗಳಲ್ಲಿ ಸಿಲುಕಿರುವ ವಾಹನಗಳು ನ್ಯಾಯಾಲಯದ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಿಡುಗಡೆ ಮಾಡಲು ಸಾಧ್ಯವಾಗುವುದಿಲ್ಲ. ಕೆಲವು ಪ್ರಕರಣಗಳು ಇತ್ಯರ್ಥವಾಗಲು ವರ್ಷಗಳೇ ಬೇಕಾಗುತ್ತಿವೆ.

ಇನ್ನು ಕೆಲ ವಾಹನ ಮಾಲೀಕರು ದಂಡದ ಮೊತ್ತ ಹೆಚ್ಚಾಗಿರುವುದು, ದಾಖಲೆಗಳ ಸಮಸ್ಯೆ ಹಾಗೂ ವಾಹನದ ಮೌಲ್ಯ ಕಡಿಮೆಯಾಗಿರುವ ಕಾರಣ ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ನಿಯಮಗಳ ಪ್ರಕಾರ ಹಕ್ಕು ಸಲ್ಲಿಸದ ವಾಹನಗಳನ್ನು ಹರಾಜು ಹಾಕಬೇಕಿದ್ದರೂ, ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ.

ಇತ್ತೀಚೆಗೆ ಬೆಂಗಳೂರಿನ ಕೆಲವು ಪೊಲೀಸ್ ಠಾಣೆಗಳಲ್ಲಿ ಜಪ್ತಿ ವಾಹನಗಳಿಗೆ ಬೆಂಕಿ ತಗುಲಿ ನೂರಾರು ವಾಹನಗಳು ಸುಟ್ಟುಹೋದ ಘಟನೆಗಳು ನಡೆದಿವೆ. ವಾಹನಗಳಲ್ಲಿ ಉಳಿದಿರುವ ಪೆಟ್ರೋಲ್, ಡೀಸೆಲ್‌ನಿಂದಾಗಿ ಬೆಂಕಿ ಅವಘಡದ ಅಪಾಯವೂ ಹೆಚ್ಚಾಗಿದೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ ಕೂಡ ಫುಟ್‌ಪಾತ್‌ಗಳ ಮೇಲಿರುವ ಜಪ್ತಿ ವಾಹನಗಳನ್ನು ತೆರವುಗೊಳಿಸುವಂತೆ ಸೂಚಿಸಿತ್ತು. ಇದೀಗ ನಗರದ ಹೊರವಲಯದಲ್ಲಿ ಪರ್ಯಾಯ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆಯಾದರೂ, ಹರಾಜು ಪ್ರಕ್ರಿಯೆಯನ್ನು ತ್ವರಿತಗೊಳಿಸಿದಾಗ ಮಾತ್ರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪೂಂಚ್-ರಾಜೌರಿಯಲ್ಲಿ ಪ್ರಕೃತಿ ವಿಕೋಪದ ಅಟ್ಟಹಾಸ; 11 ಸಾವು, 7 ಮಂದಿ ನಾಪತ್ತೆ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಾಜೌರಿಯಲ್ಲಿ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ.

ಭೂಕುಸಿತ ಹಾಗೂ ಹಠಾತ್ ಪ್ರವಾಹದಿಂದ ಇದುವರೆಗೆ 11 ಮಂದಿ ಮೃತಪಟ್ಟಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ.

ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿದ ಪರಿಣಾಮ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಕ್ಷಣಾ ಸಿಬ್ಬಂದಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಪೂಂಚ್ ಜಿಲ್ಲೆಯ ಸುರಂಕೋಟ್ ಪ್ರದೇಶದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. ಲೋವರ್ ಮುರ್ರಾ ಗ್ರಾಮದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಎರಡು ವರ್ಷದ ಮಗು ಕೂಡ ಸೇರಿದೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಸಾಂಗ್ಲಾ ಗ್ರಾಮದಲ್ಲಿ ಹಠಾತ್ ಪ್ರವಾಹಕ್ಕೆ ಮನೆ ಕೊಚ್ಚಿಹೋಗಿದ್ದು, ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನೂನಬಂದಿ ಗ್ರಾಮದಲ್ಲಿ ಮನೆ ಕುಸಿದು 28 ವರ್ಷದ ಮಹಿಳೆ ಮೃತಪಟ್ಟಿದ್ದು, ಅವರ ಪತಿ ಹಾಗೂ ಮೂವರು ಮಕ್ಕಳನ್ನು ಗಾಯಗೊಂಡ ಸ್ಥಿತಿಯಲ್ಲಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತ ರಾಜೌರಿ ಜಿಲ್ಲೆಯಲ್ಲೂ ಪ್ರವಾಹದ ಭೀತಿ ಎದುರಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿದ ಪರಿಣಾಮ ಹಲವು ಮನೆಗಳು ಹಾಗೂ ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹದ ನೀರಿನಲ್ಲಿ ವಾಹನಗಳು ಕೊಚ್ಚಿಹೋಗಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಮ್ಮ ದೆಹಲಿ ಪ್ರವಾಸವನ್ನು ಮೊಟಕುಗೊಳಿಸಿ ಜಮ್ಮುವಿಗೆ ವಾಪಸ್ ಆಗಿದ್ದಾರೆ. ರಕ್ಷಣಾ ಹಾಗೂ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿರುವ ಅವರು, ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದು, ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 23ರವರೆಗೆ ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಅಧಿಕಾರಿಗಳು ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಅಪಾಯದ ಪ್ರದೇಶಗಳಿಗೆ ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ.

ಬರ ನಿರ್ವಹಣೆಯಲ್ಲಿ ಗದಗ ಮಾದರಿ: ಎಲ್ಲ ಅಧಿಕಾರಿಗಳ ಭಾಗವಹಿಸುವಿಕೆಗೆ ಸಿಎಂ ಡಿಕೆ ಶಿವಕುಮಾರ್ ಮೆಚ್ಚುಗೆ

0

ಗದಗ: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತಗಳು ಸಂಪೂರ್ಣ ಸನ್ನದ್ಧವಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚಿಸಿದ್ದು, ಇದೇ ವೇಳೆ ಬರ ನಿರ್ವಹಣೆ ಕುರಿತ ರಾಜ್ಯಮಟ್ಟದ ವಿಡಿಯೊ ಸಂವಾದದಲ್ಲಿ ಗದಗ ಜಿಲ್ಲೆಯಿಂದ ಎಲ್ಲ ಇಲಾಖೆಗಳ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿದ್ದನ್ನು ವಿಶೇಷವಾಗಿ ಪ್ರಶಂಸಿಸಿದರು.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮೂರು ಗಂಟೆಗಳಿಗೂ ಅಧಿಕ ಕಾಲ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಗದಗ ಜಿಲ್ಲೆಯಿಂದ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿರುವುದು ಸಂತೋಷ ತಂದಿದೆ. ಬರ ನಿರ್ವಹಣೆ ಕುರಿತು ಪ್ರತಿಯೊಬ್ಬ ಅಧಿಕಾರಿಗೂ ಸಮಗ್ರ ಅರಿವು ಇರಬೇಕು. ಅದಕ್ಕಾಗಿ ಇಂತಹ ಸಮನ್ವಯ ಸಭೆಗಳು ಅತ್ಯಂತ ಮಹತ್ವದ್ದಾಗಿವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬರದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಚಿತವಾಗಿ ಯೋಜನೆ ರೂಪಿಸಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕ್‌ಗಳನ್ನು ಆರಂಭಿಸಬೇಕು. ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ ಆದ್ಯತೆ ನೀಡಬೇಕು. ಜಲಾಶಯಗಳ ನೀರಿನ ಮಟ್ಟ, ಬೆಳೆ ಪರಿಸ್ಥಿತಿ ಹಾಗೂ ಅಂತರ್ಜಲ ಮಟ್ಟದ ಮಾಹಿತಿಯನ್ನು ನಿಯಮಿತವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬರದ ಕಾರಣ ಜನರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ ಗ್ರಾಮೀಣ ಪ್ರದೇಶದಲ್ಲಿ ವಿಬಿ-ಜಿ ರಾಮ್‌ಜಿ ಯೋಜನೆ ಅಡಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೂಚಿಸಿದರು.

ಸಭೆಯಲ್ಲಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಡಿಸಿಎಫ್ ಸಂತೋಷ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲೆಯ ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪದೇ ಪದೆ ಜುಗಾರಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗೆ ಗಡಿಪಾರು ಶಿಕ್ಷೆ!

ಉಡುಪಿ: ಮಟ್ಕಾ ಜುಗಾರಿ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ನಗರದ ಶಿವಳ್ಳಿ ನಿವಾಸಿ ರಾಮರಾಜ್ ಅಲಿಯಾಸ್ ರಮೇಶ್ ಅರಸ್ (48) ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.

ಆರೋಪಿ ರಾಮರಾಜ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, ಮತ್ತೊಂದು ಪ್ರಕರಣದ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.

ಗಡಿಪಾರು ಅವಧಿಯಲ್ಲಿ ರಾಮರಾಜ್ ಅವರು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸ್ತವ್ಯ ಹೂಡುವಂತಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಕಣ್ಣೀರ ವಿದಾಯದ ನಡುವೆ ಚೆನ್ನಮ್ಮ ಅಂತಿಮ ಯಾತ್ರೆ ಆರಂಭ; ದೇವೇಗೌಡರಿಂದ ಪತ್ನಿಗೆ ಕೊನೆಯ ಪೂಜೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತಿಮ ಯಾತ್ರೆ ಭಾನುವಾರ ಬೆಂಗಳೂರಿನಿಂದ ಆರಂಭವಾಗಿದೆ.

ಚೆನ್ನಮ್ಮ ಅವರ ಪಾರ್ಥಿವ ಶರೀರ ಹೊತ್ತ ವಾಹನ ಹಾಸನದತ್ತ ಪ್ರಯಾಣ ಬೆಳೆಸಿದ್ದು, ಕುಟುಂಬಸ್ಥರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕಣ್ಣೀರಿನ ವಿದಾಯ ನೀಡಿದ್ದಾರೆ.

ಅಂತಿಮ ಯಾತ್ರೆ ಆರಂಭಕ್ಕೂ ಮುನ್ನ ಬೆಂಗಳೂರಿನಲ್ಲಿ ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿದರು. ಪತಿ ಎಚ್.ಡಿ. ದೇವೇಗೌಡ ಅವರು ಪತ್ನಿಗೆ ಮೊದಲ ಪೂಜೆ ನೆರವೇರಿಸಿ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ದೇವೇಗೌಡರು ಚೆನ್ನಮ್ಮ ಅವರ ಹಣೆಗೆ ಕುಂಕುಮ ಇಟ್ಟು, ತಲೆಗೆ ಹೂವು ಮುಡಿಸಿ ಭಾವುಕರಾದರು. ಬಳಿಕ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿಮಕ್ಕಳು ಪೂಜೆ ಸಲ್ಲಿಸಿ ಅಗಲಿದ ಹಿರಿಯ ಜೀವಕ್ಕೆ ಗೌರವ ಅರ್ಪಿಸಿದರು.

ಚೆನ್ನಮ್ಮ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಅಂತಿಮ ಯಾತ್ರೆಯ ವಾಹನ ಬೆಂಗಳೂರಿನಿಂದ ಹಾಸನದತ್ತ ಹೊರಟಿತು.

ಅಂತಿಮ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ದೇವೇಗೌಡರ ಕುಟುಂಬದ ಸದಸ್ಯರು ಭಾಗಿಯಾಗಿದ್ದಾರೆ. ಮಾರ್ಗದುದ್ದಕ್ಕೂ ಸಾರ್ವಜನಿಕರು, ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಈ ಮಾರ್ಗದಲ್ಲಿ ಸಾಗಲಿದೆ ಅಂತಿಮ ಯಾತ್ರೆ:

ಚೆನ್ನಮ್ಮ ಅವರ ಪಾರ್ಥಿವ ಶರೀರ ಸಾಗುವ ಮಾರ್ಗದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಂತಿಮ ಯಾತ್ರೆ ಸಾಗುವ ಪ್ರಮುಖ ಸ್ಥಳಗಳು:

  • ನೆಲಮಂಗಲ ಕ್ರಾಸ್
  • ಸೋಲೂರು ಕ್ರಾಸ್
  • ಮರೂರು ಹ್ಯಾಂಡ್ ಪೋಸ್ಟ್
  • ಕುಣಿಗಲ್ ಕ್ರಾಸ್
  • ಬೆಳ್ಳೂರು ಕ್ರಾಸ್
  • ಕದಬಳ್ಳಿ ಕ್ರಾಸ್
  • ಹಿರಿಸಾವೆ ಕ್ರಾಸ್
  • ಚನ್ನರಾಯಪಟ್ಟಣ
  • ಎಲೆಯೂರು (ಉದಯಪುರ)
  • ಶಾಂತಿಗ್ರಾಮ
  • ಬೂವನಹಳ್ಳಿ ಕ್ರಾಸ್
  • ಹಾಸನ ಡೈರಿ ಸರ್ಕಲ್
  • ಎನ್.ಆರ್. ಸರ್ಕಲ್
  • ಮೊಸಳೆ ಹೊಸಹಳ್ಳಿ

ಹೊಳೆನರಸೀಪುರದಲ್ಲಿ ಸಾರ್ವಜನಿಕ ಅಂತಿಮ ದರ್ಶನ:

ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಭಾನುವಾರ ರಾತ್ರಿ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ.

ಜುಲೈ 20ರಂದು ಬೆಳಗ್ಗೆ 7 ಗಂಟೆಯಿಂದ 9.30ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಬೆಳಗ್ಗೆ 10 ಗಂಟೆಗೆ ಹೊಳೆನರಸೀಪುರದಿಂದ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಕೊಂಡೊಯ್ಯಲಾಗುತ್ತದೆ.

ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹುಟ್ಟೂರು ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿಯ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ.

ಬೆಳಗ್ಗೆ 11.30ರ ವೇಳೆಗೆ ಪಾರ್ಥಿವ ಶರೀರ ಅಂತ್ಯಕ್ರಿಯೆ ಸ್ಥಳ ತಲುಪಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.15ರವರೆಗೆ ಅಂತಿಮ ವಿಧಿವಿಧಾನಗಳು ನಡೆಯಲಿವೆ.

ರಾಜ್ಯ ಸರ್ಕಾರದ ವತಿಯಿಂದ ಚೆನ್ನಮ್ಮ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತಿದ್ದು, ಗಣ್ಯರು, ಜನಪ್ರತಿನಿಧಿಗಳು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಅಂತಿಮ ಸಂಸ್ಕಾರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

72 ವರ್ಷಗಳ ದಾಂಪತ್ಯ ಜೀವನ ನಡೆಸಿದ ದೇವೇಗೌಡ ಮತ್ತು ಚೆನ್ನಮ್ಮ ಅವರ ಬಾಂಧವ್ಯಕ್ಕೆ ಸಾಕ್ಷಿಯಾಗಿದ್ದ ಚೆನ್ನಮ್ಮ ಅವರ ಅಗಲಿಕೆ ಕುಟುಂಬದವರು ಹಾಗೂ ಅಭಿಮಾನಿಗಳಲ್ಲಿ ಅಪಾರ ದುಃಖ ಮೂಡಿಸಿದೆ.

‘ನನ್ನ ದೇವತೆಯನ್ನೇ ಕಳೆದುಕೊಂಡೆ, ನನ್ನ ಮನೆಯೇ ಹೋಯಿತು’: ತಾಯಿ ಚೆನ್ನಮ್ಮರನ್ನು ನೆನೆದು ಕಣ್ಣೀರಿಟ್ಟ ಹೆಚ್.ಡಿ. ರೇವಣ್ಣ!

ಹಾಸನ: ತಾಯಿ ಚೆನ್ನಮ್ಮ ಅವರ ನಿಧನದ ನೋವಿನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಕಣ್ಣೀರಿಡುತ್ತಲೇ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಈ ವೇಳೆ ತಾಯಿಯನ್ನು ನೆನೆದು ಭಾವುಕರಾದ ರೇವಣ್ಣ, ಬಿಕ್ಕಿ ಬಿಕ್ಕಿ ಅತ್ತರು. ತಾಯಿಯ ಬಗ್ಗೆ ಮಾತನಾಡಿದ ಅವರು, “ನನ್ನ ದೇವತೆಯನ್ನೇ ಕಳೆದುಕೊಂಡೆ… ನನ್ನ ಮನೆಯೇ ಹೋಯಿತು” ಎಂದು ದುಃಖ ವ್ಯಕ್ತಪಡಿಸಿದರು.

“ನನಗಾಗಿ ಅವರು ಆ್ಯಸಿಡ್ ಹಾಕಿಸಿಕೊಂಡಿದ್ದರು. 25 ವರ್ಷ ನೋವು ಅನುಭವಿಸಿದ್ದರು. ಆದರೂ ಯಾರಿಗೂ ಅನ್ಯಾಯ ಮಾಡಲಿಲ್ಲ. ಮನೆಗೆ ಬಂದವರನ್ನು ಬರಿಗೈಯಲ್ಲಿ ಕಳುಹಿಸುತ್ತಿರಲಿಲ್ಲ. ಊಟ ಮಾಡಿಸಿ, ಸೀರೆ, ಕುಂಕುಮ ನೀಡಿ ಕಳುಹಿಸುತ್ತಿದ್ದರು. ಓದುವ ಮಕ್ಕಳಿಗೆ ಊಟ ಹಾಕಿದ್ದರು” ಎಂದು ತಾಯಿಯ ಸೇವಾ ಗುಣಗಳನ್ನು ನೆನಪಿಸಿಕೊಂಡರು.

ಚೆನ್ನಮ್ಮ ಅವರ ಆರೋಗ್ಯದ ಕುರಿತು ಮಾತನಾಡಿದ ರೇವಣ್ಣ, “ನಿನ್ನೆ ಬೆಳಗ್ಗೆ ವೈದ್ಯರು ಶೇ.30ರಷ್ಟು ಚೇತರಿಕೆ ಕಂಡುಬಂದಿದೆ ಎಂದು ಹೇಳಿದ್ದರು. ನಾನು ತಿರುಪತಿಗೆ ಹೋಗಿ ಬಂದು ಅವರೊಂದಿಗೆ ಕೊನೆಯದಾಗಿ ಮಾತನಾಡಿಸಿದ್ದೆ. ಆದರೆ ಈಗ ಅವರನ್ನು ಕಳೆದುಕೊಂಡಿದ್ದೇನೆ” ಎಂದು ಕಣ್ಣೀರಿಟ್ಟರು.

ಚೆನ್ನಮ್ಮ ಅವರ ಸರಳತೆ ಹಾಗೂ ಮಾನವೀಯ ಗುಣಗಳನ್ನು ಸ್ಮರಿಸಿದ ಅವರು, ಶೃಂಗೇರಿ ಶ್ರೀಗಳು ಕೂಡ ಚೆನ್ನಮ್ಮ ಅವರನ್ನು ಅಪಾರವಾಗಿ ಗೌರವಿಸುತ್ತಿದ್ದರು ಎಂದು ಹೇಳಿದರು.

“ಅವರು ಯಾರಿಗೂ ಕೆಡುಕು ಬಯಸಿದವರಲ್ಲ. ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣುತ್ತಿದ್ದರು. ಅಂತಹ ಮಹಾತಾಯಿಯನ್ನು ಕಳೆದುಕೊಂಡಿದ್ದೇನೆ” ಎಂದು ಹೆಚ್.ಡಿ. ರೇವಣ್ಣ ಭಾವುಕರಾದರು.

ಚೆನ್ನಮ್ಮ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿದ ಅವರು, ಕುಟುಂಬದವರು ಸೋಮವಾರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಿದ್ದು, ಆ ಕಾರ್ಯಕ್ರಮಕ್ಕೆ ಸರ್ಕಾರದ ವತಿಯಿಂದ ಅಗತ್ಯ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

“ಕರ್ನಾಟಕ ಸರ್ಕಾರದ ವತಿಯಿಂದ ಚೆನ್ನಮ್ಮ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು. ಕುಟುಂಬದವರು ಸೋಮವಾರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದ್ದು, ಸರ್ಕಾರವೂ ಆ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಅಂತ್ಯಕ್ರಿಯೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಚೆನ್ನಮ್ಮ ಅವರು ಮಾಜಿ ಪ್ರಧಾನಮಂತ್ರಿಯವರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವರ ತಾಯಿಯಾಗಿದ್ದ ಹಿನ್ನೆಲೆ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

“ದೇವೇಗೌಡ ಅವರ ಸುದೀರ್ಘ ರಾಜಕೀಯ ಪಯಣದ ಪ್ರತಿಯೊಂದು ಹಂತದಲ್ಲೂ ಚೆನ್ನಮ್ಮ ಅವರು ಬೆನ್ನೆಲುಬಾಗಿ ನಿಂತಿದ್ದರು. ಅವರ ಅಗಲಿಕೆ ರಾಜ್ಯಕ್ಕೆ ಹಾಗೂ ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಎಲ್ಲ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದರು.

ಫಿಫಾ ವಿಶ್ವಕಪ್ ಫೈನಲ್: ಶಾಂತಿಯುತವಾಗಿ ಪಂದ್ಯ ವೀಕ್ಷಿಸಿ ಎಂದು ಅಭಿಮಾನಿಗಳಿಗೆ ಡಿಕೆಶಿ ಮನವಿ!

ಬೆಂಗಳೂರು: ಫಿಫಾ ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ರಾಜ್ಯದ ಫುಟ್ಬಾಲ್ ಅಭಿಮಾನಿಗಳಿಗೆ ಅನುಕೂಲವಾಗುವಂತೆ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಬೆಳಗಿನ ಜಾವ 3.30ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕರ ಮನವಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

“ಯಾವ ತಂಡ ಗೆದ್ದರೂ ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳದೆ ಶಾಂತಿಯುತವಾಗಿ ಪಂದ್ಯ ವೀಕ್ಷಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಲ್ಲೆಡೆ ಕ್ಯಾಮೆರಾಗಳನ್ನು ಅಳವಡಿಸಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ” ಎಂದು ಹೇಳಿದರು.

ಇದೇ ವೇಳೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರಕ್ಕೆ ರಜೆ ಎಂಬುದಿಲ್ಲ. ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಈಗಾಗಲೇ ಪ್ರತಿ ತಾಲ್ಲೂಕಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.

ವರದಕ್ಷಿಣೆ ಕಿರುಕುಳ ಆರೋಪ: ಮಕ್ಕಳಾಗಿಲ್ಲ ಎಂಬ ನೋವಿನ ನಡುವೆ ಗೃಹಿಣಿ ಆತ್ಮಹತ್ಯೆ!

ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಸಂತಾನವಾಗದ ಕಾರಣದಿಂದ ಉಂಟಾಗಿದ್ದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 25 ವರ್ಷದ ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಕಾವ್ಯ (25) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಕುಟುಂಬದವರ ಸಮ್ಮುಖದಲ್ಲಿ ನವೀನ್ ಅವರೊಂದಿಗೆ ಕಾವ್ಯ ಅವರ ವಿವಾಹ ನಡೆದಿತ್ತು. ವಿವಾಹದ ಬಳಿಕ ದಂಪತಿ ನೆಲಮಂಗಲ ಸಮೀಪದ ಸೊಂಡೆಕೊಪ್ಪದಲ್ಲಿ ವಾಸಿಸುತ್ತಿದ್ದರು.

ವಿವಾಹವಾಗಿ ಮೂರು ವರ್ಷ ಕಳೆದರೂ ಸಂತಾನವಾಗದ ಕಾರಣ ದಂಪತಿ ನಡುವೆ ಆಗಾಗ ಕಲಹ ಉಂಟಾಗುತ್ತಿತ್ತು ಎಂದು ತಿಳಿದುಬಂದಿದೆ. ಇದೇ ಕಾರಣದಿಂದ ಮನನೊಂದ ಕಾವ್ಯ, ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಿದರು.

ಮೃತ ಕಾವ್ಯ ಅವರ ಪೋಷಕರು, ಪತಿ ನವೀನ್ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಚೆನ್ನಮ್ಮ ನಿಧನ: ಹಾಸನ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ!

ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾದ್ಯಂತ ಎರಡು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪದ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹಾಗೂ ಸೋಮವಾರ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಇನ್ನು ಚೆನ್ನಮ್ಮ ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಶಾಸಕ ಸಿ.ಎನ್. ಬಾಲಕೃಷ್ಣ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಳಿಕ ಪೂಜಾ ವಿಧಿವಿಧಾನಗಳು ನೆರವೇರಲಿದ್ದು, ನಂತರ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಕ್ಯಾತನಹಳ್ಳಿಗೆ ತರಲಾಗುತ್ತದೆ. ಅಲ್ಲಿ ಕೆಲಕಾಲ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಿದ ಬಳಿಕ ಮಧ್ಯಾಹ್ನ 2 ಗಂಟೆಯ ನಂತರ ಅಂತ್ಯಕ್ರಿಯೆ ನೆರವೇರಲಿದೆ.

ಚೆನ್ನಮ್ಮ ಅವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದ್ದಾರೆ.