ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲುವು ಸಾಧಿಸಲು ನೆರವಾದ ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈ ಗೆಲುವು ಸರ್ಕಾರದ ಸಾಧನೆಗಳು ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಸಿಕ್ಕ ಜಯವಾಗಿದೆ. ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ನಡುವೆಯೂ ಜನರು ಕಾಂಗ್ರೆಸ್ ಹಾಗೂ ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತ ಚಲಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದ ಜನತೆ ತಮ್ಮ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಇದೇ ರೀತಿಯ ಬೆಂಬಲ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿಯ ರಾಜಕಾರಣಕ್ಕೆ ಅವಕಾಶ ಇಲ್ಲ ಎಂಬ ಸ್ಪಷ್ಟ ಸಂದೇಶ ಈ ಫಲಿತಾಂಶಗಳಿಂದ ಹೊರಬಂದಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಇದೇ ರೀತಿಯ ಜನಾಭಿಪ್ರಾಯ ವ್ಯಕ್ತವಾಗಿದೆ ಎಂದರು.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿರೀಕ್ಷಿತವಾಗಿತ್ತು ಎಂದು ಹೇಳಿದ ಅವರು, ಅಭ್ಯರ್ಥಿಗಳ ಆಯ್ಕೆದಿಂದ ಪ್ರಚಾರದ ಕಾರ್ಯತಂತ್ರದವರೆಗೆ ರಾಜ್ಯದ ಕಾಂಗ್ರೆಸ್ ನಾಯಕರು ಸಂಘಟಿತವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರ ಶ್ರಮವನ್ನು ಸಿಎಂ ಪ್ರಶಂಸಿಸಿದ್ದಾರೆ.
ಶೀಘ್ರದಲ್ಲೇ ಕೇರಳದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ. ಕರ್ನಾಟಕದಂತೆ ಕೇರಳದಲ್ಲಿಯೂ ಉತ್ತಮ ಆಡಳಿತ ನೀಡಲಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಿಎಂ, ನೆರೆಯ ರಾಜ್ಯದ ಗೆಲುವು ಕರ್ನಾಟಕ ಕಾಂಗ್ರೆಸ್ ಬಲವನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

