ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರಿ ಮಳೆಯಿಂದಾಗಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೆಲ ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ವಿಮಾನ ನಿಲ್ದಾಣದ ಒಳಗೆ ಮಳೆ ನೀರು ನುಗ್ಗಿದ್ದು, ನೀರನ್ನು ತೆರವುಗೊಳಿಸಲು ಸಿಬ್ಬಂದಿ ಹರಸಾಹಸಪಟ್ಟರು. ಕೆಲವೆಡೆ ಮೊಣಕಾಲು ಎತ್ತರದವರೆಗೆ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣದೊಳಗೆ ಸಂಚರಿಸಲು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.
ಧಾರಾಕಾರ ಮಳೆಯ ಪರಿಣಾಮ ದೆಹಲಿಯ ವಿಮಾನ ಸಂಚಾರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಅಹಮದಾಬಾದ್, ಮುಂಬೈ, ಪೋರ್ಟ್ ಬ್ಲೇರ್ ಸೇರಿದಂತೆ ವಿವಿಧ ನಗರಗಳಿಂದ ದೆಹಲಿಗೆ ಆಗಮಿಸಬೇಕಿದ್ದ ಹಲವು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದೆ.
ಭಾರಿ ಮಳೆಯಿಂದಾಗಿ ದೆಹಲಿಯ ಹಲವು ಪ್ರದೇಶಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ರಸ್ತೆಗಳು ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಈ ನಡುವೆ ಹವಾಮಾನ ಇಲಾಖೆ ದೆಹಲಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

