Home Blog

ಮೊಟ್ಟೆ ಖರೀದಿ ವಿಚಾರಕ್ಕೆ ಕಿರಿಕ್! ನೆಲಕ್ಕೆ ಕೆಡವಿ 55ರ ವ್ಯಕ್ತಿಯನ್ನು ಕೊಲೆಗೈದ ಕಿಡಿಗೇಡಿಗಳು, ಮೂವರು ಅರೆಸ್ಟ್!

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ ವ್ಯಕ್ತಿಯೋರ್ವರ ಕೊಲೆಯಲ್ಲಿ ಅಂತ್ಯವಾಗಿದೆ.

ಗೂಡಂಗಡಿ ಮಾಲೀಕರಾಗಿದ್ದ 55 ವರ್ಷದ ಶಿವಾಜಿರಾವ್ ಬೈರೋಜಿ ಮೃತ ವ್ಯಕ್ತಿ. ಮೊಟ್ಟೆ ಖರೀದಿ ವೇಳೆ ಹಣದ ವಿಚಾರವಾಗಿ ಉಂಟಾದ ವಾಗ್ವಾದ ತೀವ್ರಗೊಂಡು ತಳ್ಳಾಟ ಮತ್ತು ಹಲ್ಲೆಗೆ ತಿರುಗಿದೆ. ಈ ವೇಳೆ ಮಧ್ಯಪ್ರವೇಶಿಸಿದ ಶಿವಾಜಿರಾವ್ ಅವರನ್ನು ಆರೋಪಿಗಳು ನೆಲಕ್ಕೆ ಕೆಡವಿ ಕಾಲಿನಿಂದ ತುಳಿದಿದ್ದಾರೆ ಎನ್ನಲಾಗಿದೆ. ನಂತರ ಅವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದು, ಆಸ್ಪತ್ರೆಗೆ ಸಾಗಿಸಿದರೂ ದುರಾದಷ್ಟವಶಾತ್ ಮೃತಪಟ್ಟಿದ್ದಾರೆ.

ಘಟನೆ ಮಂಗಳವಾರ ಸಂಜೆ ಜನತಾ ಪ್ಲಾಟ್ ಪ್ರದೇಶದಲ್ಲಿ ನಡೆದಿದೆ. ಶಿವಾಜಿರಾವ್ ತಮ್ಮ ಪುತ್ರ ಭರತ್ ಜೊತೆ ಗೂಡಂಗಡಿ ನಡೆಸುತ್ತಿದ್ದರು. ಹಣದ ವಿಚಾರಕ್ಕೆ ಆರಂಭವಾದ ಜಗಳದಲ್ಲಿ ಭರತ್ ಮೇಲೂ ಹಲ್ಲೆ ನಡೆದಿದ್ದು, ಅವರು ಗಾಯಗೊಂಡಿದ್ದಾರೆ.

ಘಟನೆ ನಂತರ ನಾಲ್ವರು ಆರೋಪಿಗಳು ಪರಾರಿಯಾಗಿದ್ದರು. ಪೊಲೀಸರ ತನಿಖೆಯ ನಂತರ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧ ಮುಂದುವರಿದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ರಟ್ಟಿಹಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಬೆಳಗಾವಿಯಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರೀಯ ಮಹಾಸಭೆ: ಜುಲೈ 6ಕ್ಕೆ ಮೋಹನ್ ಭಾಗವತ್‌ ಆಗಮನ

0

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವದ ಅಂಗವಾಗಿ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜುಲೈ 10ರಿಂದ 12ರವರೆಗೆ ಬೆಳಗಾವಿಯಲ್ಲಿ ನಡೆಯಲಿದೆ. ದೇಶದಾದ್ಯಂತ ಸಂಘದ ಮುಂದಿನ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ನಡೆಯಲಿರುವ ಈ ಸಭೆಗೆ ಸಂಘದ ಅತ್ಯುನ್ನತ ನಾಯಕತ್ವ ಸಮೇತ ವಿವಿಧ ರಾಜ್ಯಗಳ ಪ್ರಮುಖ ಪದಾಧಿಕಾರಿಗಳು ಆಗಮಿಸುತ್ತಿದ್ದಾರೆ.

ಸಭೆಯಲ್ಲಿ ದೇಶದ 46 ಪ್ರಾಂತಗಳ ಪ್ರಾಂತ ಹಾಗೂ ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಮತ್ತು ಸಹ ಕ್ಷೇತ್ರ ಪ್ರಚಾರಕರು, ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳ ಪ್ರಮುಖ ಪ್ರಚಾರಕರು ಹಾಗೂ ಸಂಘ ಪ್ರೇರಿತ 32 ವಿವಿಧ ಸಂಘಟನೆಗಳ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.

ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್ ಭಾಗವತ್ ಜುಲೈ 6ರಿಂದಲೇ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದು, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ರಾಷ್ಟ್ರೀಯ ಮಟ್ಟದ ನಾಯಕರು ಸಭೆಯ ನೇತೃತ್ವ ವಹಿಸಲಿದ್ದಾರೆ. ಶತಮಾನೋತ್ಸವ ವರ್ಷದಲ್ಲಿ ಶಾಖೆಗಳ ವಿಸ್ತರಣೆ, ಸಂಘಟನಾ ಬಲವರ್ಧನೆ ಹಾಗೂ ದೇಶವ್ಯಾಪಿ ಕಾರ್ಯಯೋಜನೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ರಾಷ್ಟ್ರೀಯ ಮಟ್ಟದ ನಾಯಕರು ಭಾಗವಹಿಸುವ ಹಿನ್ನೆಲೆಯಲ್ಲಿ ಬೆಳಗಾವಿ ನಗರವನ್ನು ಹೈ ಸೆಕ್ಯುರಿಟಿ ವಲಯವನ್ನಾಗಿ ಪರಿವರ್ತಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ಜಿಮ್ಸ್‌ನಲ್ಲಿ ಚಿಕಿತ್ಸೆ ನಿರ್ಲಕ್ಷ್ಯ ಆರೋಪ: ಮಹಿಳೆ ಸಾವು, ಕುಟುಂಬಸ್ಥರ ಆಕ್ರೋಶ

ಗದಗ: ಗದಗ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆ ಆವರಣದಲ್ಲೇ ಮೃತಪಟ್ಟ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ತಾಯಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು, ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಈ ಆರೋಪವನ್ನು ನಿರಾಕರಿಸಿದ್ದಾರೆ.

ಮೃತರನ್ನು ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದ ರತ್ನವ್ವ ಈಟಿ (45) ಎಂದು ಗುರುತಿಸಲಾಗಿದೆ. ಹೊಟ್ಟೆ ನೋವು ಹಾಗೂ ಚರ್ಮದ ಕಾಯಿಲೆಗೆ ಚಿಕಿತ್ಸೆ ಪಡೆಯಲು ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಹೊಟ್ಟೆ ನೋವಿನಿಂದ ಗೋಳಾಡುತ್ತಿದ್ದರೂ ವೈದ್ಯರು ಸಮರ್ಪಕ ಚಿಕಿತ್ಸೆ ನೀಡಲಿಲ್ಲ. ಸಕಾಲಕ್ಕೆ ಚಿಕಿತ್ಸೆ ನೀಡಿದ್ದರೆ ಹಾಗೂ ಒಂದು ಇಂಜೆಕ್ಷನ್ ನೀಡಿದ್ದರೂ ನಮ್ಮ ತಾಯಿ ಬದುಕುತ್ತಿದ್ದರು ಎಂದು ಪುತ್ರರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಮಹಿಳೆ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿಲ್ಲ. ಹೃದಯಾಘಾತವೇ ಸಾವಿಗೆ ಕಾರಣ. ರೋಗಿ ಚರ್ಮದ ಕಾಯಿಲೆಗೆ ದೀರ್ಘಕಾಲದಿಂದ ಸ್ಟೀರಾಯ್ಡ್ ಔಷಧಿಗಳನ್ನು ಸೇವಿಸುತ್ತಿದ್ದರು. ಬಳಿಕ ಕುಟುಂಬಸ್ಥರೇ ಬೇರೆ ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿ ಡಿಸ್ಚಾರ್ಜ್ ಪಡೆದುಕೊಂಡಿದ್ದು, ಆಸ್ಪತ್ರೆ ಆವರಣದಿಂದ ಹೊರಡುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರ ಆರೋಪ ಮತ್ತು ಆಸ್ಪತ್ರೆ ಆಡಳಿತದ ಸ್ಪಷ್ಟನೆ ನಡುವೆ ನಿಜಾಂಶ ಏನು ಎಂಬುದು ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

KEA ಮಹತ್ವದ ಪ್ರಕಟಣೆ: PGCET-2026 ಅರ್ಜಿ ಸರಿಪಡಿಸಲು ಅಂತಿಮ ಅವಕಾಶ!

ಬೆಂಗಳೂರು: ಪಿಜಿಸಿಇಟಿ-2026 ಅರ್ಜಿಯಲ್ಲಿ ದಾಖಲಿಸಿರುವ ಮಾಹಿತಿಯ ತಿದ್ದುಪಡಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಂತಿಮ ಅವಕಾಶ ನೀಡಿದೆ.

KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ನೀಡಿರುವ ಮಾಹಿತಿಯ ಪ್ರಕಾರ, ಅಭ್ಯರ್ಥಿಗಳು ಜುಲೈ 3ರಿಂದ 6ರವರೆಗೆ ತಮ್ಮ ಅರ್ಜಿಯಲ್ಲಿ ಇರುವ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಅರ್ಜಿಯಲ್ಲಿನ ಎಲ್ಲಾ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿ ನಂತರವೇ ತಿದ್ದುಪಡಿ ಮಾಡಲು ಸೂಚಿಸಲಾಗಿದೆ. ಜೊತೆಗೆ ಮೀಸಲಾತಿ ವಿವರಗಳನ್ನು ಸಹ ತಪ್ಪದೇ ಪರಿಶೀಲಿಸಬೇಕು ಎಂದು ತಿಳಿಸಲಾಗಿದೆ.

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸುಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಈ ಅವಕಾಶ ಅನ್ವಯವಾಗಲಿದೆ.

ಇದೇ ವೇಳೆ, ಎಂ.ಇ/ಎಂ.ಟೆಕ್ ಕೋರ್ಸುಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಜುಲೈ 10ರಂದು ಬೆಳಿಗ್ಗೆ 10:30ರಿಂದ ಸಂಜೆ 4ರೊಳಗೆ ಮೂಲ ದಾಖಲೆಗಳ ಪರಿಶೀಲನೆಗೆ ಖುದ್ದಾಗಿ ಹಾಜರಾಗಬೇಕು ಎಂದು KEA ಸೂಚಿಸಿದೆ.

ಅಭ್ಯರ್ಥಿಗಳು ಪದವಿ ಪರೀಕ್ಷೆಯ ಎಲ್ಲಾ ಸೆಮಿಸ್ಟರ್/ವರ್ಷಗಳ ಅಂಕಪಟ್ಟಿಗಳು, KEA ಆನ್‌ಲೈನ್ ಅರ್ಜಿ ಪ್ರತಿ, ಗುರುತು ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು. ಪರಿಶೀಲನೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮಾತ್ರ ನಿಯಮಾನುಸಾರ ರ್ಯಾಂಕಿಂಗ್ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಜೈವಿಕ ತಂತ್ರಜ್ಞಾನ, ಕೆಮಿಕಲ್ ಎಂಜಿನಿಯರಿಂಗ್, ಎನ್ವಿರಾನ್‌ಮೆಂಟಲ್ ಎಂಜಿನಿಯರಿಂಗ್, ಪಾಲಿಮರ್ ಸೈನ್ಸ್, ಜವಳಿ ತಂತ್ರಜ್ಞಾನ ಹಾಗೂ ಆರ್ಕಿಟೆಕ್ಚರ್ ಕೋರ್ಸುಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದ ಕಾರ್ಮಿಕನ ಬದುಕು ಕ್ವಾರಿಯಲ್ಲೇ ಅಂತ್ಯ; ಯಾದಗಿರಿಯ ರಾಮು ನಾಯಕ ಬಂಡೆ ಕುಸಿತಕ್ಕೆ ಬಲಿ

ರಾಮನಗರ/ಯಾದಗಿರಿ: ಜೀವನೋಪಾಯಕ್ಕಾಗಿ ಯಾದಗಿರಿಯಿಂದ ಬೆಂಗಳೂರಿಗೆ ವಲಸೆ ಬಂದಿದ್ದ ಕಾರ್ಮಿಕನೊಬ್ಬ ರಾಮನಗರ ಜಿಲ್ಲೆಯ ಮಾದಪಟ್ಟಣ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತಕ್ಕೆ ಬಲಿಯಾಗಿದ್ದಾನೆ.

ಮೃತರನ್ನು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಡಿಹಾಳ ದೇವಸು ನಾಯಕ ತಾಂಡಾದ ನಿವಾಸಿ ರಾಮು ನಾಯಕ (45) ಎಂದು ಗುರುತಿಸಲಾಗಿದೆ.

ಸುಮಾರು ನಾಲ್ಕು ವರ್ಷಗಳ ಹಿಂದೆ ಕುಟುಂಬದ ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ರಾಮು ನಾಯಕ ಬೆಂಗಳೂರಿಗೆ ವಲಸೆ ಬಂದಿದ್ದರು. ವಿವಿಧ ಕೂಲಿ ಕೆಲಸಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಅವರು, ಇತ್ತೀಚೆಗೆ ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ ಕಾರ್ಮಿಕರೊಂದಿಗೆ ಕೆಲಸ ಮಾಡುತ್ತಿದ್ದರು.

ಬುಧವಾರ (ಜು.2) ಕ್ವಾರಿಯಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಏಕಾಏಕಿ ಬೃಹತ್ ಬಂಡೆ ಕುಸಿದ ಪರಿಣಾಮ ರಾಮು ನಾಯಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಹೊಟ್ಟೆಪಾಡಿಗಾಗಿ ಊರು ಬಿಟ್ಟು ಬಂದಿದ್ದ ರಾಮು ನಾಯಕ ಕ್ವಾರಿಯಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ಕುಟುಂಬದವರನ್ನು ಹಾಗೂ ಗ್ರಾಮಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಪಕ್ಷದ ಶಿಸ್ತು ಉಲ್ಲಂಘನೆ: ಬಿಜೆಪಿಯಿಂದ ಸತೀಶ್ ಕಡತನಮಲೆ 6 ವರ್ಷ ಉಚ್ಛಾಟನೆ!

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಾಗೂ ಶಿಸ್ತು ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ ಅವರನ್ನು ಬಿಜೆಪಿ ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದೆ.

ಈ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಮಾಹಿತಿಯ ಪ್ರಕಾರ, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಪದೇಪದೇ ಮಾಧ್ಯಮಗಳ ಮುಂದೆ ಪಕ್ಷ ಹಾಗೂ ನಾಯಕರ ವಿರುದ್ಧ ಹೇಳಿಕೆ ನೀಡಿದ್ದರಿಂದ ಪಕ್ಷದ ಒಳಗೆ ಅಸಮಾಧಾನ ಹೆಚ್ಚಾಗಿತ್ತು.

ಸತೀಶ್ ಕಡತನಮಲೆ ಅವರು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಆಪ್ತರಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೂ ಸಂಪರ್ಕದಲ್ಲಿದ್ದರು ಎಂಬುದೂ ಗಮನ ಸೆಳೆದಿತ್ತು.

ಈ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರು ರಾಜ್ಯ ಶಿಸ್ತು ಸಮಿತಿಗೆ ದೂರು ಸಲ್ಲಿಸಿದ್ದರು. ಬಳಿಕ ಪಕ್ಷವು ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ ನೀಡಿದ ಉತ್ತರ ತೃಪ್ತಿಕರವಾಗಿಲ್ಲ ಎಂದು ಹೇಳಿ, ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

ಹುಬ್ಬಳ್ಳಿ ಕಿಮ್ಸ್‌ನಲ್ಲಿ ಇತಿಹಾಸ ನಿರ್ಮಾಣ: ಮೊದಲ ರೋಬೋಟಿಕ್ ಮೊಣಕಾಲು ಶಸ್ತ್ರಚಿಕಿತ್ಸೆ ಯಶಸ್ವಿ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿ ಪಡೆದಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತೊಂದು ಮಹತ್ವದ ಸಾಧನೆ ಮಾಡಿದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕಿಮ್ಸ್‌ನಲ್ಲಿ ರೋಬೋಟಿಕ್ ತಂತ್ರಜ್ಞಾನ ಬಳಸಿ ಮೊಣಕಾಲು ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ.

ಮಂಡಿ ನೋವು ಹಾಗೂ ಮೂಳೆ ಸವಕಳಿಯ 4ನೇ ಹಂತದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ 55 ವರ್ಷದ ಮಹಿಳೆಯೊಬ್ಬರಿಗೆ ಈ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆರ್ಥೋಪಿಡಿಕ್ ವಿಭಾಗದ ಮುಖ್ಯಸ್ಥ ಡಾ. ಎಸ್.ಎಫ್. ಕಮ್ಮಾರ್ ನೇತೃತ್ವದ ವೈದ್ಯರ ತಂಡ ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ರೋಬೋಟಿಕ್ ತಂತ್ರಜ್ಞಾನ ಬಳಕೆಯಿಂದ ಶಸ್ತ್ರಚಿಕಿತ್ಸೆಯಲ್ಲಿ ನಿಖರತೆ ಹೆಚ್ಚಿದ್ದು, ಮಾನವ ದೋಷಗಳ ಸಾಧ್ಯತೆ ಕಡಿಮೆಯಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ರೋಗಿಗೆ ನೋವು ಕಡಿಮೆ ಆಗಿ, ಚೇತರಿಕೆ ವೇಗವಾಗಿ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಈ ಚಿಕಿತ್ಸೆಗಾಗಿ ಕಿಮ್ಸ್ ಸಂಸ್ಥೆ ಇತ್ತೀಚೆಗೆ ಸುಮಾರು ₹2.79 ಕೋಟಿ ವೆಚ್ಚದಲ್ಲಿ ರೋಬೋಟಿಕ್ ಯಂತ್ರವನ್ನು ಖರೀದಿಸಿ, ಹೈಟೆಕ್ ಆಪರೇಷನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿತ್ತು.

ಈ ರೋಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಕಾರಣ, ಸರ್ಕಾರದ ಯೋಜನೆಯಡಿ ಶಸ್ತ್ರಚಿಕಿತ್ಸೆ ಸಂಪೂರ್ಣ ಉಚಿತವಾಗಿ ನೀಡಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಕೇವಲ ಒಂದು ದಿನದಲ್ಲೇ ಮಹಿಳೆ ಸುಲಭವಾಗಿ ಓಡಾಡುವಂತಾಗಿರುವುದು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಎಂದು ಪರಿಗಣಿಸಲಾಗಿದೆ.

ಕಿಮ್ಸ್ ಈ ಸಾಧನೆ ಮೂಲಕ ಕರ್ನಾಟಕದ ಸರ್ಕಾರಿ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕ್ವಾರಿ ದುರಂತ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಿ: HD ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಮಾದಪಟ್ಟಣದಲ್ಲಿ ನಡೆದ ಕಲ್ಲು ಕ್ವಾರಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಅತೀವ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ರಾಜ್ಯ ಸರ್ಕಾರವು ನೊಂದ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಹಾಗೂ ಅಗತ್ಯ ತುರ್ತು ನೆರವು ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜೊತೆಗೆ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ತಂದು ಸಂಬಂಧಿತ ಇಲಾಖೆಗಳು ಕಠಿಣ ನಿಗಾ ವಹಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂತಹ ದುರಂತಗಳು ಪದೇ ಪದೇ ಸಂಭವಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕ್ವಾರಿ ಮಾಲೀಕರು ಕೂಡ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬಳ್ಳಾರಿಯಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ! ಕಾಮುಕ ಉಪನ್ಯಾಸಕ ಕೊನೆಗೂ ಅರೆಸ್ಟ್‌

ಬಳ್ಳಾರಿ: ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ ಸರಿಯಾದ ದಾರಿಯಲ್ಲಿ ನಡೆಸಬೇಕಾದ ಉಪನ್ಯಾಸಕನೇ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.

ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಾಹಿತಿಯ ಪ್ರಕಾರ, 2025ರಲ್ಲಿ ಉಪನ್ಯಾಸಕ ಮತ್ತು ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಡುವೆ ಕಾಲೇಜಿನಲ್ಲಿ ಪರಿಚಯವಾಗಿ ಸ್ನೇಹ ಬೆಳೆಯಿತು. ನಂತರ ಈ ಸಂಬಂಧವನ್ನು ದುರುಪಯೋಗ ಮಾಡಿಕೊಂಡ ಆರೋಪಿ, “ನಿನ್ನನ್ನು ಮದುವೆಯಾಗುತ್ತೇನೆ” ಎಂದು ನಂಬಿಸಿ ಹಲವು ಬಾರಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಆರೋಪಿಯು ಈಗಾಗಲೇ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂಬ ವಿಷಯ ವಿದ್ಯಾರ್ಥಿನಿಗೆ ನಂತರ ತಿಳಿದುಬಂದಿದ್ದು, ಇದರಿಂದ ಆಕೆ ಹಾಗೂ ಕುಟುಂಬಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಈ ಕುರಿತು ಪೋಷಕರು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತನಿಖೆ ಆರಂಭಿಸಿದ ಪೊಲೀಸರು ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಮನಗರ ಕ್ವಾರಿ ದುರಂತ: ಮಾಲೀಕನ ಬಂಧನಕ್ಕೆ ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯ!

ಬೆಂಗಳೂರು/ರಾಮನಗರ: ಕಲ್ಲು ಕ್ವಾರಿ ದುರಂತದ ಹಿನ್ನೆಲೆಯಲ್ಲಿ ಕ್ರಷರ್ ಮಾಲೀಕನನ್ನು ಕೂಡಲೇ ಬಂಧಿಸಬೇಕು ಎಂದು ಶಾಸಕ ಎಸ್.ಟಿ. ಸೋಮಶೇಖರ್ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹಿಂದೆ ಬಂಡೆ ಓನರ್‌ಗಳೊಂದಿಗೆ ಸಭೆ ನಡೆಸಿ ಲೀಗಲ್ ಆಗಿ ಬ್ಲಾಸ್ಟಿಂಗ್ ಮಾಡುವಂತೆ ಸೂಚಿಸಿದ್ದೆ. ಗರ್ಭಿಣಿ ಚಿರತೆ ಸಾವು ಪ್ರಕರಣದಲ್ಲಿಯೂ ತಾವು ಈ ವಿಷಯ ಪ್ರಸ್ತಾಪಿಸಿದ್ದಾಗಿ ಅವರು ಹೇಳಿದ್ದಾರೆ.

ಇತ್ತೀಚಿನ ಕ್ವಾರಿ ದುರಂತದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, “ಪ್ರಭಾವಶಾಲಿಗಳು ಇರುವುದರಿಂದ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ. ಆದ್ದರಿಂದ ಕಠಿಣ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ನ್ಯಾಯ ದೊರಕಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕ್ರಷರ್ ಮಾಲೀಕರು ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಕ್ವಾರಿ ಅಕ್ರಮವಾಗಿ ನಡೆಯುತ್ತಿದೆ ಎಂದು ಆರೋಪಿಸಿರುವ ಎಸ್.ಟಿ. ಸೋಮಶೇಖರ್, ಗಣಿ ಇಲಾಖೆ, ಅರಣ್ಯ ಇಲಾಖೆ, ಸ್ಥಳೀಯ ಪೊಲೀಸರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯವರ ಪಾತ್ರವೂ ಪರಿಶೀಲನೆಗೆ ಒಳಪಡಬೇಕು ಎಂದು ಹೇಳಿದ್ದಾರೆ. ಇವರ ವಿರುದ್ಧವೂ ಎಫ್‌ಐಆರ್ ದಾಖಲಿಸಬೇಕು ಎಂದು ಅವರು ಕಿಡಿಕಾರಿದ್ದಾರೆ.

ಈ ಕುರಿತು ಸಿಎಂ ಗಮನಕ್ಕೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಅವರು ತಿಳಿಸಿದ್ದಾರೆ.