ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಖಾತೆ ಜಮಾಬಂಧಿ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಶಿರಹಟ್ಟಿ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದು, ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಧ್ಯವರ್ತಿಯಾಗಿ ಆರೋಪಿಸಲಾದ ವಿನೋದ ಕಪ್ಪತ್ತನವರ ಪರಾರಿಯಾಗಿದ್ದಾನೆ.
ಮಾಂತೇಶ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಹಟ್ಟಿ ಪಟ್ಟಣ ಪಂಚಾಯಿತಿಯ ಮಾಜಿ ಮುಖ್ಯಾಧಿಕಾರಿ ಸವಿತಾ ತಾಂಬ್ರೆ ವಿರುದ್ಧವೂ ಗದಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಂದ ಖಾತೆ ಜಮಾಬಂಧಿ ಪತ್ರ ನೀಡಲು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅದರ ಭಾಗವಾಗಿ ₹5 ಸಾವಿರ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚ ಸ್ವೀಕರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.
ದಾಳಿ ವೇಳೆ ಆರೋಪಿ ವಿನೋದ ಕಪ್ಪತ್ತನವರ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಲೋಕಾಯುಕ್ತ ಡಿಎಸ್ಪಿ ಲೋಕೇಶ್ ನೇತೃತ್ವದ ತಂಡ ಗುರುವಾರ ತಡರಾತ್ರಿವರೆಗೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿತು.
“ದೂರು ಆಧರಿಸಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದ್ದು, ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.”
– ಲೋಕಾಯುಕ್ತ ಅಧಿಕಾರಿಗಳು

