Home Blog

ತುಮಕೂರು: ಕ್ವಾರಿ ಗುಂಡಿಗೆ ಲಾರಿ ಬಿದ್ದು ಚಾಲಕ, ಕ್ಲೀನರ್ ದುರ್ಮರಣ!

ತುಮಕೂರು: ಗಣಿಗಾರಿಕೆ ಪ್ರದೇಶದಲ್ಲಿ ರಸ್ತೆ ಕುಸಿದ ಪರಿಣಾಮ ಕ್ವಾರಿಯ ಆಳವಾದ ಗುಂಡಿಗೆ ಲಾರಿ ಉರುಳಿ ಚಾಲಕ ಹಾಗೂ ಕ್ಲೀನರ್ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಖಾಲಿ ಲಾರಿಯನ್ನು ಯೂಟರ್ನ್ ತೆಗೆದುಕೊಳ್ಳುವ ವೇಳೆ ಏಕಾಏಕಿ ರಸ್ತೆ ಕುಸಿದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಲಾರಿ ಸುಮಾರು 50 ಮೀಟರ್ ಆಳದ ಕ್ವಾರಿ ಗುಂಡಿಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಲಾರಿಯಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಜಾರ್ಖಂಡ್ ಮೂಲದ ಅಕ್ಷಯ್ (30) ಹಾಗೂ ಮಧ್ಯಪ್ರದೇಶ ಮೂಲದ ಸಹದೇವ್ (25) ಎಂದು ಗುರುತಿಸಲಾಗಿದೆ.

ಘಟನೆ ತಿಳಿದು ಸ್ಥಳಕ್ಕೆ ಹುಲಿಯೂರುದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

ಜಾತಿ ಪ್ರಮಾಣ ಪತ್ರದಲ್ಲಿ ವಿಳಾಸ ಬದಲಾಯಿಸಬೇಕೇ? ಈ 4 ಹಂತಗಳನ್ನು ಅನುಸರಿಸಿ!

ಬೆಂಗಳೂರು: ಜಾತಿ ಪ್ರಮಾಣ ಪತ್ರವು ವ್ಯಕ್ತಿಯ ಜಾತಿಯನ್ನು ದೃಢೀಕರಿಸುವ ಪ್ರಮುಖ ಸರ್ಕಾರಿ ದಾಖಲೆಯಾಗಿದ್ದು, ಶಿಕ್ಷಣ, ಉದ್ಯೋಗ, ಮೀಸಲಾತಿ ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿದೆ. ಆದರೆ, ಈ ಪ್ರಮಾಣ ಪತ್ರದಲ್ಲಿರುವ ವಿಳಾಸವನ್ನು ನೇರವಾಗಿ ತಿದ್ದುಪಡಿ ಮಾಡಲು ಅವಕಾಶವಿಲ್ಲ.

ವಿಳಾಸ ಬದಲಾದಲ್ಲಿ ಹೊಸ ವಿಳಾಸದೊಂದಿಗೆ ಹೊಸ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಅಥವಾ ಹಳೆಯ ಪ್ರಮಾಣ ಪತ್ರದೊಂದಿಗೆ ವಿಳಾಸ ಬದಲಾವಣೆಯನ್ನು ದೃಢೀಕರಿಸುವ ಅಫಿಡವಿಟ್ ಸಲ್ಲಿಸುವುದು ಅಗತ್ಯವಾಗಿದೆ.

ವಿಳಾಸ ಬದಲಾವಣೆಗಾಗಿ ಅನುಸರಿಸಬೇಕಾದ ಕ್ರಮಗಳು:

  • ನಾಡಕಚೇರಿ, ಗ್ರಾಮ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಹೊಸ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಬೇಕು.
  • ಹಳೆಯ ಜಾತಿ ಪ್ರಮಾಣ ಪತ್ರ, ಹೊಸ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಅಥವಾ ಇತರೆ ವಿಳಾಸದ ಪುರಾವೆ, ಸ್ವಯಂ ಘೋಷಣಾ ಪತ್ರವನ್ನು ಸಲ್ಲಿಸಬೇಕು.
  • ಸ್ಥಳಾಂತರವನ್ನು ದೃಢೀಕರಿಸುವ ಅಫಿಡವಿಟ್ ಅನ್ನು ನೋಟರಿ ಅಥವಾ ಮ್ಯಾಜಿಸ್ಟ್ರೇಟ್ ಮೂಲಕ ಮಾಡಿಸಬೇಕು.
  • ಅಫಿಡವಿಟ್ ಅನ್ನು ಹಳೆಯ ಜಾತಿ ಪ್ರಮಾಣ ಪತ್ರದೊಂದಿಗೆ ಲಗತ್ತಿಸಿ ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಬೇಕು.

ಅಧಿಕಾರಿಗಳ ಪರಿಶೀಲನೆಯ ಬಳಿಕ ಹೊಸ ವಿಳಾಸದೊಂದಿಗೆ ಜಾತಿ ಪ್ರಮಾಣ ಪತ್ರ ನೀಡಲಾಗುತ್ತದೆ.

 

POP ಗಣೇಶ ಮೂರ್ತಿಗಳಿಗೆ ಬ್ರೇಕ್? ಸಚಿವರಿಗೆ ಸುರೇಶ್ ಕುಮಾರ್ ತುರ್ತು ಪತ್ರ!

ಬೆಂಗಳೂರು: ಗಣೇಶೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯನ್ನು ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವಂತೆ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಮಾರುಕಟ್ಟೆಯಲ್ಲಿ POP ಗಣೇಶ ಮೂರ್ತಿಗಳ ಹಾವಳಿ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಜಲಮೂಲಗಳು ಮತ್ತು ಪರಿಸರಕ್ಕೆ ಹಾನಿಯಾಗುವುದಲ್ಲದೆ, ಗಣೇಶನ ಮೇಲಿನ ಸಾಂಪ್ರದಾಯಿಕ ಶ್ರದ್ಧೆ ಹಾಗೂ ಪಾವಿತ್ರ್ಯಕ್ಕೂ ಧಕ್ಕೆಯಾಗುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜೂನ್ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವಂತೆ ಹಾಗೂ POP ಮೂರ್ತಿಗಳನ್ನು ತ್ಯಜಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದನ್ನು ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಈಗಾಗಲೇ ಜೂನ್ 29 ಹಾಗೂ ಜುಲೈ 12ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದು ಗಮನ ಸೆಳೆಯಲಾಗಿತ್ತು. ಜುಲೈ 13ರಂದು ಉತ್ತರ ನೀಡುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರಿಸರ ಸಂರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ POP ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.

‘ನಿಮ್ಮ ಆರೋಗ್ಯ ಹೇಗಿದೆ?’; ಆರೋಗ್ಯದ ಊಹಾಪೋಹಗಳಿಗೆ ಸಲ್ಮಾನ್ ಖಾನ್ ಸ್ಟೈಲಿಷ್ ಟಾಂಗ್!

ಮುಂಬೈ: ಆರೋಗ್ಯ ಹದಗೆಟ್ಟಿದೆಯೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗುತ್ತಿದ್ದಂತೆಯೇ ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮದೇ ಸ್ಟೈಲ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ಫೋಟೋಗಳನ್ನು ಹಂಚಿಕೊಂಡು “ನಿಮ್ಮೆಲ್ಲರ ಆರೋಗ್ಯ ಹೇಗಿದೆ?” ಎಂದು ಪ್ರಶ್ನಿಸಿರುವ ನಟ, ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಪರೋಕ್ಷ ಉತ್ತರ ನೀಡಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಸಲ್ಮಾನ್ ಖಾನ್ ಅವರ ಇತ್ತೀಚಿನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ವಿಡಿಯೊದಲ್ಲಿ ಅವರು ತುಂಬಾ ಸಣ್ಣಗಾಗಿರುವಂತೆ ಹಾಗೂ ಮುಖದಲ್ಲಿ ಆಯಾಸದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅಭಿಮಾನಿಗಳು ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಈ ಚರ್ಚೆಗಳು ತೀವ್ರವಾಗುತ್ತಿದ್ದಂತೆ ಸಲ್ಮಾನ್ ಖಾನ್ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆರೋಗ್ಯದ ಬಗ್ಗೆ ನೇರ ಸ್ಪಷ್ಟನೆ ನೀಡದೆ, “ನಿಮ್ಮೆಲ್ಲರ ಆರೋಗ್ಯ ಹೇಗಿದೆ?” ಎಂಬ ಒಂದು ಸಾಲಿನ ಸಂದೇಶದ ಮೂಲಕ ವದಂತಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.

ಹೊಸ ಫೋಟೋಗಳಲ್ಲಿ ಸಲ್ಮಾನ್ ಖಾನ್ ಫಿಟ್, ರಿಲ್ಯಾಕ್ಸ್ ಹಾಗೂ ಆತ್ಮವಿಶ್ವಾಸದಿಂದ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ನೆಮ್ಮದಿ ಮೂಡಿಸಿದೆ. “ನೀವು ಆರೋಗ್ಯವಾಗಿದ್ದರೆ ಸಾಕು” ಎಂದು ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ವೃತ್ತಿಜೀವನದತ್ತ ಗಮನಹರಿಸಿರುವ ಸಲ್ಮಾನ್ ಖಾನ್, ಅಪೂರ್ವ ಲಾಖಿಯಾ ನಿರ್ದೇಶನದ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕದ ಕುರಿತು ಮಾತ್ರ ಅವರು ಇನ್ನೂ ಮೌನ ವಹಿಸಿದ್ದಾರೆ.

ಕ್ಷಣಾರ್ಧದಲ್ಲೇ ರಕ್ಷಣಾ ಕಾರ್ಯ: ಚರಂಡಿಗೆ ಉರುಳಿದ ಕಾರಿನಿಂದ ಮಗು ಎತ್ತಿಕೊಂಡು ಬಂದ ಎಸ್ಐ ವಿಡಿಯೊ ವೈರಲ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ ಉರುಳಿದ್ದ ಕಾರಿನೊಳಗೆ ಸಿಲುಕಿದ್ದ ಕುಟುಂಬವನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ರಕ್ಷಿಸಿದ ವಿಟ್ಲ ಪೊಲೀಸರ ಮಾನವೀಯತೆ ಮತ್ತು ಸಮಯಪ್ರಜ್ಞೆ ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಎಸ್ಐ ರಾಮಕೃಷ್ಣ ಪುಟ್ಟ ಮಗುವನ್ನು ಸುರಕ್ಷಿತವಾಗಿ ಹೊರತೆಗೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾನುವಾರ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಪೆಟ್ರೋಲ್ ಬಂಕ್ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತ್ತು. ಕಾರಿನೊಳಗೆ ಮಗು, ಮಹಿಳೆ ಮತ್ತು ಚಾಲಕ ಸಿಲುಕಿಕೊಂಡಿದ್ದು, ಅಪಘಾತದ ತೀವ್ರತೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸಮೀಪದಲ್ಲೇ ಕರ್ತವ್ಯದಲ್ಲಿದ್ದ ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಹಾಗೂ ಸಿಬ್ಬಂದಿ ಕರುಣಾಕರ ಅಪಘಾತದ ಶಬ್ದ ಕೇಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾರಿನೊಳಗೆ ಸಿಲುಕಿದ್ದ ಮೂವರನ್ನೂ ಸುರಕ್ಷಿತವಾಗಿ ಹೊರತೆಗೆದು ತಕ್ಷಣ ನೆರವು ಒದಗಿಸಿದರು.

ರಕ್ಷಣಾ ಕಾರ್ಯಾಚರಣೆಯ ವೇಳೆ ಅಳುತ್ತಿದ್ದ ಮಗುವನ್ನು ಎಸ್ಐ ರಾಮಕೃಷ್ಣ ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಪೊಲೀಸರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಅಪಘಾತದಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣದ ಪೊಲೀಸ್ ಕಾರ್ಯಾಚರಣೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಮಯೋಚಿತವಾಗಿ ಸ್ಪಂದಿಸಿದ ಪೊಲೀಸರ ಕಾರ್ಯಕ್ಕೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿಗರಿಗೆ ತಂಪೆರೆದ ವರುಣ; ಅರ್ಧ ಕರ್ನಾಟಕದಲ್ಲಿ ನಾಳೆ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಸೋಮವಾರವೂ ಬೆಂಗಳೂರಿನಲ್ಲಿ ಮುಂದುವರಿದಿದ್ದು, ನಗರದ ಹಲವು ಭಾಗಗಳಲ್ಲಿ ಉತ್ತಮ ವರ್ಷಧಾರೆ ದಾಖಲಾಗಿದೆ. ಬಸವನಗುಡಿ, ಶಾಂತಿನಗರ, ಟೌನ್‌ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಮಳೆಯ ಪರಿಣಾಮ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಯಿತು. ಹಲವು ಮಂದಿ ಬಸ್ ನಿಲ್ದಾಣಗಳು, ಅಂಗಡಿ ಮುಂಗಟ್ಟುಗಳು ಹಾಗೂ ಮೇಲ್ಛಾವಣಿ ಇರುವ ಸ್ಥಳಗಳಲ್ಲಿ ಆಶ್ರಯ ಪಡೆದು ಮಳೆ ಕಡಿಮೆಯಾಗುವವರೆಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು.

ಇದೇ ವೇಳೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ನಾಳೆ ಅರ್ಧ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಳು ಪ್ರದೇಶದಲ್ಲಿ 160.5 ಮಿ.ಮೀ. ಮಳೆಯಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಮಳೆ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ-1ನಲ್ಲಿ 155 ಮಿ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ 98.5 ಮಿ.ಮೀ. ಮಳೆಯಾಗಿದೆ.

ಇದಲ್ಲದೆ, ಮಡಿಕೇರಿಯ ಪೆರಾಜೆ ಹಾಗೂ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ., ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದೊಡ್ಮನೆಯಲ್ಲಿ 57.5 ಮಿ.ಮೀ. ಹಾಗೂ ಬೆಳಗಾವಿ ಜಿಲ್ಲೆಯ ಬೆಳವಟ್ಟಿಯಲ್ಲಿ 56 ಮಿ.ಮೀ. ಮಳೆ ದಾಖಲಾಗಿದೆ.

ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಎಚ್ಚರಿಕೆ ವಹಿಸುವಂತೆ ಹಾಗೂ ಮಳೆಯ ಸಮಯದಲ್ಲಿ ಅನಗತ್ಯ ಸಂಚಾರವನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಲಾಗಿದೆ.

ಭಾರತದಲ್ಲಿ ಮೊದಲ ಡೆಂಗ್ಯೂ ಲಸಿಕೆಗೆ ಅನುಮೋದನೆ: 4 ರಿಂದ 60 ವರ್ಷದವರಿಗೆ QDENGA ನೀಡಲು ಗ್ರೀನ್ ಸಿಗ್ನಲ್

0

ನವದೆಹಲಿ: ಡೆಂಗ್ಯೂ ನಿಯಂತ್ರಣದತ್ತ ಭಾರತ ಮಹತ್ವದ ಹೆಜ್ಜೆ ಇಟ್ಟಿದ್ದು, ದೇಶದಲ್ಲೇ ಮೊದಲ ಬಾರಿಗೆ QDENGA ಡೆಂಗ್ಯೂ ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (DCGI) ಅನುಮೋದನೆ ನೀಡಿದ್ದಾರೆ. ಈ ಮೂಲಕ ಭಾರತದಲ್ಲಿ ಡೆಂಗ್ಯೂ ತಡೆಗಟ್ಟಲು ಮೊದಲ ಅಧಿಕೃತ ಲಸಿಕೆ ಲಭ್ಯವಾಗಿದೆ.

ಜಪಾನ್ ಮೂಲದ ಬಯೋಫಾರ್ಮಾ ಕಂಪನಿ ಟಕೇಡಾ ಅಭಿವೃದ್ಧಿಪಡಿಸಿರುವ QDENGA ಲಸಿಕೆಯನ್ನು 4 ರಿಂದ 60 ವರ್ಷದೊಳಗಿನವರಿಗೆ ನೀಡಲು ಅನುಮತಿ ನೀಡಲಾಗಿದೆ. ಡೆಂಗ್ಯೂ ಸೋಂಕು ಹಿಂದೆ ಬಂದಿದ್ದರೂ ಅಥವಾ ಬರದಿದ್ದರೂ ಈ ಲಸಿಕೆಯನ್ನು ಪಡೆಯಬಹುದಾಗಿದೆ.

ಈ ಲಸಿಕೆಯ ಮತ್ತೊಂದು ವಿಶೇಷತೆ ಎಂದರೆ, ಲಸಿಕೆ ಪಡೆಯುವ ಮೊದಲು ಡೆಂಗ್ಯೂ ಪರೀಕ್ಷೆ ಮಾಡಿಸಬೇಕಾದ ಅಗತ್ಯವಿಲ್ಲ. ಇದರಿಂದ ಸಾಮಾನ್ಯ ಜನರಿಗೆ ಲಸಿಕೆ ಪಡೆಯುವ ಪ್ರಕ್ರಿಯೆ ಇನ್ನಷ್ಟು ಸುಲಭವಾಗಲಿದೆ.

QDENGA ಲಸಿಕೆಯನ್ನು ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ. ಮೊದಲ ಡೋಸ್ ನೀಡಿದ ಮೂರು ತಿಂಗಳ ಬಳಿಕ ಎರಡನೇ ಡೋಸ್ ನೀಡಲಾಗುತ್ತದೆ. ಈ ಲಸಿಕೆಯನ್ನು ಡೆಂಗ್ಯೂ ವೈರಸ್‌ನ ನಾಲ್ಕೂ ಸೆರೋಟೈಪ್‌ಗಳ ವಿರುದ್ಧ ರಕ್ಷಣೆ ನೀಡುವಂತೆ ಅಭಿವೃದ್ಧಿಪಡಿಸಲಾಗಿದೆ.

ಲಸಿಕೆಗೆ ಅನುಮೋದನೆ ನೀಡುವ ಮೊದಲು 19 ಹಂತಗಳ ಕ್ಲಿನಿಕಲ್ ಪರೀಕ್ಷೆ ನಡೆಸಲಾಗಿದೆ. ವಿಶ್ವದ ವಿವಿಧ ದೇಶಗಳ 28 ಸಾವಿರಕ್ಕೂ ಹೆಚ್ಚು ಮಂದಿ ಈ ಅಧ್ಯಯನದಲ್ಲಿ ಭಾಗವಹಿಸಿದ್ದರು. ಭಾರತದಲ್ಲೂ 4 ರಿಂದ 60 ವರ್ಷದವರ ಮೇಲೆ ಮೂರನೇ ಹಂತದ ಕ್ಲಿನಿಕಲ್ ಪರೀಕ್ಷೆ ನಡೆಸಿ, ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಪರಿಶೀಲಿಸಲಾಗಿದೆ.

2022ರಿಂದ ಇಲ್ಲಿಯವರೆಗೆ 43 ದೇಶಗಳು QDENGA ಲಸಿಕೆಗೆ ಅನುಮೋದನೆ ನೀಡಿದ್ದು, ವಿಶ್ವದಾದ್ಯಂತ 3.2 ಕೋಟಿಗೂ ಹೆಚ್ಚು ಡೋಸ್‌ಗಳನ್ನು ವಿತರಿಸಲಾಗಿದೆ.

ಭಾರತದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಡೆಂಗ್ಯೂ ಸೋಂಕಿಗೆ ಒಳಗಾಗುತ್ತಿದ್ದಾರೆ. ನಗರೀಕರಣ, ಹವಾಮಾನ ಬದಲಾವಣೆ ಹಾಗೂ ಸೊಳ್ಳೆಗಳ ಸಂಖ್ಯೆಯ ಹೆಚ್ಚಳದಿಂದ ಡೆಂಗ್ಯೂ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಲಸಿಕೆಗೆ ದೊರೆತಿರುವ ಅನುಮೋದನೆ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ, ವಿಶ್ವ ಆರೋಗ್ಯ ಸಂಸ್ಥೆ (WHO) ಕೂಡ ಡೆಂಗ್ಯೂ ಹೆಚ್ಚಿರುವ ಪ್ರದೇಶಗಳಲ್ಲಿ QDENGA ಲಸಿಕೆ ಬಳಕೆಯನ್ನು ಶಿಫಾರಸು ಮಾಡಿದೆ. ಈ ಲಸಿಕೆಗೆ WHO ಪ್ರೀಕ್ವಾಲಿಫಿಕೇಶನ್ ಕೂಡ ಲಭ್ಯವಾಗಿದ್ದು, ಗುಣಮಟ್ಟ, ಸುರಕ್ಷತೆ ಹಾಗೂ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ಅಂತರರಾಷ್ಟ್ರೀಯ ಮಾನದಂಡಗಳನ್ನು ಪೂರೈಸಿದೆ.

ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ; ಕುಡಿಯುವ ನೀರಿಗೆ ಮೊದಲ ಆದ್ಯತೆ, ಗ್ರಾಮದಲ್ಲೇ ಉದ್ಯೋಗ ಸೃಷ್ಟಿಗೆ ಸೂಚನೆ – ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ 178 ತಾಲೂಕುಗಳಲ್ಲಿ ಮಳೆಯ ಕೊರತೆ ದಾಖಲಾಗಿದ್ದು, ಅವುಗಳಲ್ಲಿ 60 ತಾಲೂಕುಗಳು ತೀವ್ರ ಮಳೆ ಅಭಾವವನ್ನು ಎದುರಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಈಗಾಗಲೇ 117 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಜೊತೆಗೆ 95 ಕೋಟಿ ರೂಪಾಯಿ ಮೌಲ್ಯದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಇನ್ನೂ 25 ಕೋಟಿ ರೂಪಾಯಿ ವಿವಿಧ ಜಿಲ್ಲೆಗಳಲ್ಲಿ ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಯಾವುದೇ ಗ್ರಾಮ ಅಥವಾ ತಾಂಡಾದಲ್ಲಿ ಕುಡಿಯುವ ನೀರಿನ ಕೊಳವೆಬಾವಿಗಳು ಬತ್ತಿದರೆ, ಖಾಸಗಿ ಬೋರ್‌ವೆಲ್ ಅಥವಾ ಬಾವಿಗಳನ್ನು ಬಾಡಿಗೆಗೆ ಪಡೆದು ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ತೀರಾ ಅನಿವಾರ್ಯ ಪರಿಸ್ಥಿತಿಯಲ್ಲಿ ಹೊಸ ಕೊಳವೆಬಾವಿ ಕೊರೆಯಲು ಸಹ ಅನುಮತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಮುಂದಿನ ಮೂರುರಿಂದ ನಾಲ್ಕು ತಿಂಗಳುಗಳವರೆಗೆ ಸಮರ್ಪಕ ಮಳೆಯಾಗದಿದ್ದರೂ ಮುಂದಿನ ಮುಂಗಾರು ಆರಂಭವಾಗುವವರೆಗೆ ನೀರಿನ ಕೊರತೆ ಉಂಟಾಗದಂತೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಈಗಾಗಲೇ ಅಧ್ಯಯನ ಹಾಗೂ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ ಸಚಿವರು, ಬ್ಯಾಂಕ್ ಸಾಲ ಬಾಕಿ ಇರುವ ರೈತರು ಹಾಗೂ ಸಾಲವನ್ನು ಒಮ್ಮೆ ಇತ್ಯರ್ಥಪಡಿಸಿರುವ ರೈತರೂ ಸಹ ಸಮುದಾಯ ಸೇವಾ ಕೇಂದ್ರಗಳ ಮೂಲಕ ಬೆಳೆ ವಿಮೆ ಕಂತು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಅನುದಾನದ ಅನುಪಾತವನ್ನು 90:10ರಿಂದ 60:40ಕ್ಕೆ ಬದಲಾಯಿಸಿರುವುದರಿಂದ ರಾಜ್ಯದ ಮೇಲಿನ ಆರ್ಥಿಕ ಹೊರೆ ಹೆಚ್ಚಾದರೂ, ಬಡವರು,

ಗ್ರಾಮೀಣರು, ದಲಿತರು ಹಾಗೂ ವಂಚಿತ ವರ್ಗದ ಜನರ ಹಿತದೃಷ್ಟಿಯಿಂದ ಜುಲೈ 1ರಿಂದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಇದುವರೆಗೆ ಸುಮಾರು 5 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಕೇಳಿ ಬಂದ ಪ್ರತಿಯೊಬ್ಬರಿಗೂ ಕೆಲಸ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದಲ್ಲದೆ, ವಿಬಿಜಿ ರಾಮ್‌ಜಿ ಯೋಜನೆಯಡಿ 318 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದ್ದು, ಹೆಚ್ಚುವರಿ ಕ್ರಿಯಾ ಯೋಜನೆ ಸಲ್ಲಿಸಲು ಪೋರ್ಟಲ್ ತೆರೆದಿದೆ. ಶಾಲಾ ಕೊಠಡಿಗಳು, ಆರೋಗ್ಯ ಕೇಂದ್ರಗಳು, ಸರ್ಕಾರಿ ಕಟ್ಟಡಗಳ ದುರಸ್ತಿ, ಕೃಷಿ ಹೊಂಡ ನಿರ್ಮಾಣ, ವಿತರಣಾ ಕಾಲುವೆ, ಹನಿ ನೀರಾವರಿ ಹಾಗೂ ಕಿರು ಅರಣ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಈ ಯೋಜನೆಗಳ ಸದುಪಯೋಗವನ್ನು ಗ್ರಾಮೀಣ ಜನರು ಪಡೆದುಕೊಳ್ಳಬೇಕು ಎಂದು ಸಚಿವ ಈಶ್ವರ್ ಬಿ. ಖಂಡ್ರೆ ಮನವಿ ಮಾಡಿದರು.

ಕ್ಷಮಿಸಿ ಅಪ್ಪ… ನನ್ನಿಂದ ಸರ್ಕಾರಿ ಕೆಲಸ ಪಡೆಯಲು ಸಾಧ್ಯವಾಗಲಿಲ್ಲ: ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಬಿ.ಟೆಕ್ ವಿದ್ಯಾರ್ಥಿ!

0

ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಸರ್ಕಾರಿ ಉದ್ಯೋಗಕ್ಕಾಗಿ ಹಲವು ಬಾರಿ ಪ್ರಯತ್ನಿಸಿದರೂ ಯಶಸ್ಸು ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದ ಯುವಕ, ಡೆತ್‌ನೋಟ್ ಬರೆದು ತಂದೆಗೆ ಕ್ಷಮೆಯಾಚಿಸಿ ಜೀವತ್ಯಾಗ ಮಾಡಿದ್ದಾನೆ.

ಮೃತನನ್ನು 23 ವರ್ಷದ ಆನಂದ್ ಕುಮಾರ್ ಎಂದು ಗುರುತಿಸಲಾಗಿದೆ. 2024ರಲ್ಲಿ ಕಾನ್ಪುರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶ ಮಟ್ಟದಲ್ಲಿ ಮೂರನೇ ರ್ಯಾಂಕ್ ಗಳಿಸಿದ್ದ. ಈ ಸಾಧನೆಗಾಗಿ ನಡೆದ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರಿಂದ ಚಿನ್ನದ ಪದಕ ಸ್ವೀಕರಿಸಿದ್ದ ಎನ್ನಲಾಗಿದೆ.

ಘಟನೆ ನಡೆದ ವೇಳೆ ಮನೆಯಲ್ಲಿ ಆನಂದ್ ಒಬ್ಬರೇ ಇದ್ದರು. ಕುಟುಂಬದ ಸದಸ್ಯರು ಹಿರಿಯ ಸಹೋದರನ ವಿವಾಹ ನಿಶ್ಚಯದ ಹಿನ್ನೆಲೆಯಲ್ಲಿ ಸ್ವಗ್ರಾಮ ಬಿಹಾರಕ್ಕೆ ತೆರಳಿದ್ದರು. ಈ ವೇಳೆ ಮನೆ ಕೆಲಸದಾಕೆ ಬಂದು ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ನೆರೆಹೊರೆಯವರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನೆ ಬಾಗಿಲು ತೆರೆಯಿಸಿ ಪರಿಶೀಲನೆ ನಡೆಸಿದಾಗ ಆನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ಕೊಠಡಿಯಲ್ಲಿ ಐದು ಸಾಲುಗಳ ಡೆತ್‌ನೋಟ್ ಪತ್ತೆಹಚ್ಚಿದ್ದಾರೆ. ಅದರಲ್ಲಿ ಇಂಗ್ಲಿಷ್‌ನಲ್ಲಿ, “ಸಾರಿ ಅಪ್ಪ… ಸರ್ಕಾರಿ ಉದ್ಯೋಗಕ್ಕಾಗಿ ಸುಮಾರು 50 ಬಾರಿ ಪ್ರಯತ್ನಿಸಿದೆ. ಆದರೆ ನನಗೆ ಯಶಸ್ಸು ಸಿಗಲಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಬರೆದಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಮೃತನ ತಂದೆ ರಾಜಕುಮಾರ್, ಆನಂದ್ ಪದವಿ ಪೂರ್ಣಗೊಳಿಸಿದ ಬಳಿಕ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ಮುಗಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ತೊಡಗಿದ್ದನು. ರೈಲ್ವೆ, ಎಸ್‌ಎಸ್‌ಸಿ, ಬ್ಯಾಂಕ್ ಹಾಗೂ ಶಿಕ್ಷಣ ಇಲಾಖೆಯ ವಿವಿಧ ನೇಮಕಾತಿ ಪರೀಕ್ಷೆಗಳನ್ನು ಬರೆದಿದ್ದರೂ ಎಲ್ಲಿಯೂ ಆಯ್ಕೆಯಾಗಿರಲಿಲ್ಲ. ಇದರಿಂದ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂದು ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಡೆತ್‌ನೋಟ್ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ.

CJP ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರಿಂದ ಅಶ್ರುವಾಯು ಪ್ರಯೋಗ! ಅಭಿಜೀತ್ ದೀಪ್ಕೆ ಪೊಲೀಸರ ವಶಕ್ಕೆ

0

ನವದೆಹಲಿ: ಸಂಸತ್ ಚಲೋ ಪ್ರತಿಭಟನಾ ರ್ಯಾಲಿ ವೇಳೆ ದೆಹಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪಕ್ಷದ ಸಂಸ್ಥಾಪಕ ಅಭಿಜಿತ್ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸತ್ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಇದರ ನಡುವೆಯೂ ಪ್ರತಿಭಟನಾಕಾರರು ‘ಸಂಸತ್ ಚಲೋ’ ಮೆರವಣಿಗೆ ನಡೆಸಿ, ಬ್ಯಾರಿಕೇಡ್‌ಗಳನ್ನು ದಾಟಿ ಸಂಸತ್ ಕಡೆಗೆ ತೆರಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುನ್ನೆಚ್ಚರಿಕೆ ನೀಡಿದ್ದರು.

ಇದೇ ವೇಳೆ, NEET-2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪವನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಹಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಸಾವಿರಾರು ವಿದ್ಯಾರ್ಥಿಗಳು, ಪ್ರತಿಭಟನಾಕಾರರು ಹಾಗೂ ವಿರೋಧ ಪಕ್ಷದ ನಾಯಕರು ಈ ಹೋರಾಟದಲ್ಲಿ ಭಾಗಿಯಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.