ದಾವಣಗೆರೆ: ಜಗಳೂರು ತಾಲೂಕಿನ ಬರ ಪರಿಸ್ಥಿತಿಗೆ ಸರ್ಕಾರ ಸ್ಪಂದಿಸದಿದ್ದರೆ ಶಾಸಕ ಸ್ಥಾನ ತ್ಯಜಿಸುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಎಚ್ಚರಿಕೆ ನೀಡಿದ್ದು, ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಬಹಿರಂಗಪಡಿಸಿದ್ದಾರೆ.
ಜಗಳೂರಿನಲ್ಲಿ ಮಾತನಾಡಿದ ಅವರು, ತಾಲೂಕಿನ ಜನರಿಗೆ ನ್ಯಾಯ ದೊರೆಯದಿದ್ದರೆ ಶಾಸಕನಾಗಿ ಮುಂದುವರಿಯುವುದರಲ್ಲಿ ಅರ್ಥವಿಲ್ಲ. ಅಗತ್ಯಬಿದ್ದರೆ ಕಠಿಣ ನಿರ್ಧಾರ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಸರ್ಕಾರಕ್ಕೆ ಸಂದೇಶ ರವಾನಿಸಿದರು.
ಜಗಳೂರನ್ನು ಎರಡನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿರುವ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಕುರಿತು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಹಿರಿಯ ನಾಯಕರು ಕೂಡ ಜಗಳೂರನ್ನು ಪಟ್ಟಿಗೆ ಸೇರಿಸುವುದಾಗಿ ಭರವಸೆ ನೀಡಿದ್ದು, ಅಲ್ಲಿಯವರೆಗೆ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದರು.
ತಾಲೂಕಿನ ಬರ ಪರಿಸ್ಥಿತಿಯ ಕುರಿತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ದೇವೇಂದ್ರಪ್ಪ, ‘ಹಣ್ಣು ಬಿಡುವ ಮರದ ಕೆಳಗೆ ಹೋದರೆ ಮಾತ್ರ ಹಣ್ಣು ಸಿಗುತ್ತದೆ. ಜಾಲಿ ಮರದ ಕೆಳಗೆ ಹಣ್ಣು ನಿರೀಕ್ಷಿಸುವುದು ಹೇಗೆ?’ ಎಂದು ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಮಾತನಾಡಿದರು.
ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿರುವುದರಿಂದ ಜಗಳೂರು ಕ್ಷೇತ್ರಕ್ಕೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂಬ ನೋವನ್ನು ವ್ಯಕ್ತಪಡಿಸಿದ ಅವರು, ಕಲ್ಯಾಣ ಕರ್ನಾಟಕ ವಲಯಕ್ಕೆ ಕ್ಷೇತ್ರವನ್ನು ಸೇರ್ಪಡೆ ಮಾಡಿದರೆ ವಿಶೇಷ ಅನುದಾನದ ಮೂಲಕ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.
ಜಗಳೂರನ್ನು ಕಲ್ಯಾಣ ಕರ್ನಾಟಕಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ಹಲವು ಬಾರಿ ಮುಂದಿಟ್ಟಿದ್ದು, ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಈ ಬೇಡಿಕೆಗೆ ಬದ್ಧನಾಗಿರುವುದಾಗಿ ಶಾಸಕ ಬಿ. ದೇವೇಂದ್ರಪ್ಪ ಸ್ಪಷ್ಟಪಡಿಸಿದರು.

