Home Blog

ಕಾವೇರಿ ನೀರು ಬಿಡುಗಡೆ ಆದೇಶ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ಕಿಡಿ

0

ಬೆಂಗಳೂರು: ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ಹಂಚಿಕೆ ಪ್ರಾಧಿಕಾರ ನೀಡಿರುವ ನಿರ್ದೇಶನ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಕರ್ನಾಟಕದ ಕಾವೇರಿ ಕಣಿವೆ ಜಲಾಶಯಗಳ ವಾಸ್ತವ ಸ್ಥಿತಿ, ಕುಡಿಯುವ ನೀರಿನ ಅಗತ್ಯ, ರೈತರ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ನೀರಿನ ಲಭ್ಯತೆ ಕುರಿತು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಪ್ರಾಧಿಕಾರದ ಮುಂದೆ ಸಮರ್ಥವಾಗಿ ವಾದ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಇದು ಕೇವಲ ಆಡಳಿತಾತ್ಮಕ ಲೋಪವಲ್ಲ. ಕರ್ನಾಟಕದ ಜಲ ಹಕ್ಕುಗಳನ್ನು ರಕ್ಷಿಸುವಲ್ಲಿ ಸರ್ಕಾರ ತೋರಿರುವ ಗಂಭೀರ ನಿರ್ಲಕ್ಷ್ಯ ಎಂದು ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

15 ದಿನಗಳ ಕಾಲ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದರೆ ಒಟ್ಟು 7.5 ಟಿಎಂಸಿ ನೀರು ರಾಜ್ಯದಿಂದ ಹೊರಹೋಗಲಿದೆ. ರಾಜ್ಯವೇ ನೀರಿನ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಷ್ಟು ಪ್ರಮಾಣದ ನೀರು ಬಿಡುಗಡೆ ಮಾಡುವುದು ಅಸಾಧ್ಯ. ಹೀಗಾಗಿ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ಸದ್ಯ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಈ ವೈಫಲ್ಯದ ಹೊಣೆ ಹೊತ್ತು ರಾಜ್ಯದ ಜನರಿಗೆ ಉತ್ತರ ನೀಡಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ. ಪ್ರಾಧಿಕಾರದ ಮುಂದೆ ಕರ್ನಾಟಕದ ಪರವಾಗಿ ಯಾವೆಲ್ಲಾ ಅಂಶಗಳನ್ನು ಮಂಡಿಸಲಾಗಿತ್ತು? ರಾಜ್ಯದ ಜಲಾಶಯಗಳ ನೈಜ ಸ್ಥಿತಿಯ ವರದಿಯನ್ನು ಸಲ್ಲಿಸಲಾಗಿತ್ತೇ? ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದರೆ ಬೆಂಗಳೂರಿನ ಕುಡಿಯುವ ನೀರು ಹಾಗೂ ಕರ್ನಾಟಕದ ರೈತರ ಮೇಲೆ ಉಂಟಾಗುವ ಪರಿಣಾಮವನ್ನು ಸಮರ್ಪಕವಾಗಿ ವಿವರಿಸಲಾಗಿತ್ತೇ? ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದ ಹಿತಾಸಕ್ತಿ ಕಾಪಾಡಲು ಪ್ರಾಧಿಕಾರದ ಮುಂದೆ ಸರ್ಕಾರ ಮಂಡಿಸಿರುವ ದಾಖಲೆಗಳನ್ನು ಸಾರ್ವಜನಿಕಗೊಳಿಸಬೇಕು. ಜಲಾಶಯಗಳ ಲೈವ್ ಸ್ಟೋರೇಜ್, ಒಳಹರಿವು ಹಾಗೂ ಮುಂದಿನ ತಿಂಗಳ ನೀರಿನ ಅಗತ್ಯಕ್ಕೆ ಸಂಬಂಧಿಸಿದ ವೈಜ್ಞಾನಿಕ ಲೆಕ್ಕಾಚಾರವನ್ನು ಏಕೆ ಪರಿಣಾಮಕಾರಿಯಾಗಿ ಮಂಡಿಸಲಿಲ್ಲ ಎಂಬುದಕ್ಕೂ ಸರ್ಕಾರ ಉತ್ತರಿಸಬೇಕು ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಬೆಳೆಗಳಿಗೆ ಬೇಕಾಗುವ ನೀರಿನ ಪ್ರಮಾಣವನ್ನು ಪರಿಗಣಿಸಿ ರಾಜ್ಯದಲ್ಲಿನ ನೀರಿನ ಕೊರತೆಯ ವಾಸ್ತವಾಂಶವನ್ನು ಏಕೆ ಸಮರ್ಪಕವಾಗಿ ಮನವರಿಕೆ ಮಾಡಿಕೊಡಲಿಲ್ಲ ಎಂಬುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಪರವಾಗಿ ವಾದ ಮಂಡಿಸಿದ ತಾಂತ್ರಿಕ ಹಾಗೂ ಕಾನೂನು ತಂಡದ ಕಾರ್ಯವೈಖರಿ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಕರ್ನಾಟಕದ ಹಿತಾಸಕ್ತಿಯನ್ನು ಸಮರ್ಪಕವಾಗಿ ಮಂಡಿಸುವಲ್ಲಿ ಯಾರಿಂದ ಲೋಪವಾಗಿದೆ ಎಂಬುದನ್ನು ಗುರುತಿಸಿ, ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ದಿನಗಳಲ್ಲಿ ಯಾವುದೇ ನೀರು ಬಿಡುಗಡೆ ಆದೇಶ ಬರುವ ಮುನ್ನವೇ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮಂಡಿಸಲು ಶಾಶ್ವತ ಕಾವೇರಿ ತಾಂತ್ರಿಕ-ಕಾನೂನು ಕಾರ್ಯತಂತ್ರ ರೂಪಿಸಬೇಕು ಎಂದು ಅಶೋಕ್ ಹೇಳಿದ್ದಾರೆ. “ನೀರು ಬಿಡುವುದು, ಆದೇಶ ಬಂದ ನಂತರ ಕಣ್ಣೀರು ಹಾಕುವುದು—ಇದು ರಾಜ್ಯ ಸರ್ಕಾರದ ಕಾವೇರಿ ನೀತಿ ಆಗಬಾರದು” ಎಂದು ಅವರು ತೀವ್ರವಾಗಿ ಟೀಕಿಸಿದ್ದಾರೆ.

ಕಾವೇರಿ ನೀರು ಕರ್ನಾಟಕದ ರೈತರ ಬದುಕು, ಬೆಂಗಳೂರಿನ ಕುಡಿಯುವ ನೀರು ಹಾಗೂ ರಾಜ್ಯದ ಭವಿಷ್ಯದ ಜಲ ಭದ್ರತೆಯ ಪ್ರಶ್ನೆಯಾಗಿದೆ. ರಾಜ್ಯದ ಹಿತಾಸಕ್ತಿಯನ್ನು ಬಲಿಕೊಟ್ಟು ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದನ್ನು ಬಿಜೆಪಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ಸರ್ಕಾರ ಕೂಡಲೇ ಪ್ರಾಧಿಕಾರದ ಮುಂದೆ ಮರುಪರಿಶೀಲನೆಗೆ ಒತ್ತಾಯಿಸಬೇಕು. ಅಗತ್ಯವಿದ್ದರೆ ಕಾನೂನು ಹೋರಾಟಕ್ಕೂ ಮುಂದಾಗಬೇಕು. ಕರ್ನಾಟಕದ ನೀರಿನ ಮೇಲೆ ಮೊದಲ ಹಕ್ಕು ಕರ್ನಾಟಕದ ಜನರದು ಎಂಬ ನಿಲುವನ್ನು ಸರ್ಕಾರ ಸ್ಪಷ್ಟವಾಗಿ ಹಾಗೂ ನಿರ್ದಾಕ್ಷಿಣ್ಯವಾಗಿ ಪ್ರತಿಪಾದಿಸಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.

ಮೈಶುಗರ್ ಕಾರ್ಖಾನೆ ಬಾಯ್ಲರ್ʼಗೆ ಬಿದ್ದು ಕಾರ್ಮಿಕ ಸಾವು!

0

ಮಂಡ್ಯ: ಮೈಶುಗರ್‌ ಕಾರ್ಖಾನೆಯ ಬಾಯ್ಲರ್‌ಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಕೆ. ಶೆಟ್ಟಿಹಳ್ಳಿ ಗ್ರಾಮದ ಚರಣ್ ಕುಮಾರ್ (33) ಮೃತ ಕಾರ್ಮಿಕ.

ಕಾರ್ಮಿಕನ ಸಾವಿಗೆ ಕಾರ್ಖಾನೆ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಮೃತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಚರಣ್ ಕುಮಾರ್ ಅವರು ಶ್ರೇಯ ಏಜೆನ್ಸಿ ಮೂಲಕ ಗುತ್ತಿಗೆ ಆಧಾರದಲ್ಲಿ ಕಳೆದ ಒಂದೂವರೆ ವರ್ಷದಿಂದ ಮೈಶುಗರ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸೆಪ್ಟೆಂಬರ್‌ 3ರಂದು ಕೆಲಸದ ವೇಳೆ ಬಾಯ್ಲರ್‌ಗೆ ಬಿದ್ದಿದ್ದ ಚರಣ್‌ ಕುಮಾರ್ ಅವರನ್ನು ಗಂಭೀರ ಗಾಯಗಳೊಂದಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಅವರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ.

ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ಹಾಗೂ ಸೂಕ್ತ ಪರಿಹಾರ ದೊರೆಯುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಇದೇ ವೇಳೆ, ಕಾರ್ಖಾನೆ ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಮೈಶುಗರ್‌ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಪ್ರಶ್ನಿಸಿ ಸುಪ್ರೀಂಗೆ ರಾಜ್ಯ ಸರ್ಕಾರ: ಚಲುವರಾಯಸ್ವಾಮಿ

0

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಜ್ಜಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಈ ವಿಚಾರವಾಗಿ ಮುಖ್ಯಮಂತ್ರಿ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚನೆ ನಡೆಸಿ, ನಾಳೆಯೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಇದರ ಜತೆಗೆ CWRC ಮುಂದೆ ಕೂಡ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. CWRC ನೀಡಿದ್ದ ಆದೇಶವನ್ನೇ CWMA ಕೂಡ ಎತ್ತಿಹಿಡಿದಿದೆ. ಆದರೆ ರಾಜ್ಯದ ಜಲಾಶಯಗಳ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ತಮಿಳುನಾಡಿಗೆ ನೀರು ಹರಿಸಲು ರಾಜ್ಯದಲ್ಲೇ ಸಾಕಷ್ಟು ನೀರಿಲ್ಲ ಎಂದು ಚಲುವರಾಯಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಸದ್ಯ ರಾಜ್ಯದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಾಗಿದೆ. ಇದರ ನಡುವೆ ಬತ್ತಿಹೋಗಿರುವ ಕೆರೆ-ಕಟ್ಟೆಗಳನ್ನು ಕೂಡ ತುಂಬಿಸಬೇಕಾದ ಅನಿವಾರ್ಯತೆ ಇದೆ. ಗೌರಿ-ಗಣೇಶ ಹಬ್ಬದ ಒಂದು ವಾರದೊಳಗೆ ಉತ್ತಮ ಮಳೆಯಾದರೆ ಮಾತ್ರ ಪರಿಸ್ಥಿತಿ ತುಸು ಸುಧಾರಿಸಬಹುದು ಎಂದು ಸಚಿವರು ಹೇಳಿದರು.

CWRC ಆದೇಶವನ್ನು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಈ ಹಿಂದೆ ಕರ್ನಾಟಕದಿಂದ 100 ಟಿಎಂಸಿ ನೀರು ಬಿಡಲಾಗಿತ್ತು. ಆದರೆ ಈ ಬಾರಿ ಈಗಾಗಲೇ 30 ಟಿಎಂಸಿ ನೀರು ನೀಡಲಾಗಿದೆ. ಆದರೂ ತಮಿಳುನಾಡು ಸರ್ಕಾರ ನಿರಂತರವಾಗಿ ಒತ್ತಡ ಹೇರುತ್ತಿದೆ ಎಂದು ಅವರು ಹೇಳಿದರು.

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಸಲಹೆಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರ ಪರಿಣಾಮಕಾರಿಯಾಗಿ ವಾದ ಮಂಡಿಸಲು ವಿಶೇಷ ವಕೀಲರನ್ನು ನೇಮಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.

ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೂ ಚರ್ಚೆ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. ರಾಜ್ಯದ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕಾನೂನು ಹೋರಾಟ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರಿಗೆ ಉಗ್ರರ ಮತ್ತೊಮ್ಮೆ ಬೆದರಿಕೆ; ಕೆಲಸ ತೊರೆಯದಿದ್ದರೆ ಅಪಾಯದ ಎಚ್ಚರಿಕೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ ಸಮುದಾಯದ ಸರ್ಕಾರಿ ನೌಕರರಿಗೆ ಉಗ್ರ ಸಂಘಟನೆಗಳಿಂದ ಮತ್ತೊಮ್ಮೆ ಬೆದರಿಕೆ ಬಂದಿದೆ. ಲಷ್ಕರ್-ಎ-ತಯ್ಬಾ ಜೊತೆ ಸಂಪರ್ಕ ಹೊಂದಿರುವುದಾಗಿ ಹೇಳಲಾಗಿರುವ ಯುನೈಟೆಡ್ ಲಿಬರೇಷನ್ ಕೌನ್ಸಿಲ್, ಪ್ರಧಾನಮಂತ್ರಿ ಪ್ಯಾಕೇಜ್ ಅಡಿ ನೇಮಕಗೊಂಡಿರುವ ಕಾಶ್ಮೀರಿ ಪಂಡಿತ ನೌಕರರಿಗೆ ಕೆಲಸ ತೊರೆಯುವಂತೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.

ಕೆಲಸ ಮುಂದುವರಿಸಿದರೆ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರ ಸುರಕ್ಷತೆ ಕುರಿತು ಆತಂಕ ಮತ್ತಷ್ಟು ಹೆಚ್ಚಾಗಿದೆ.

ಮಾಹಿತಿಯ ಪ್ರಕಾರ, ಸುಮಾರು 7 ಸಾವಿರ ಕಾಶ್ಮೀರಿ ಪಂಡಿತ ಉದ್ಯೋಗಿಗಳು ಉಗ್ರರ ಬೆದರಿಕೆಯ ವ್ಯಾಪ್ತಿಯಲ್ಲಿದ್ದಾರೆ ಎನ್ನಲಾಗಿದೆ. ಉದ್ಯೋಗಿಗಳ ಮೊಬೈಲ್ ಸಂಖ್ಯೆ, ಮನೆ ವಿಳಾಸ ಹಾಗೂ ವಾಹನ ನೋಂದಣಿ ಸಂಖ್ಯೆಯಂತಹ ವೈಯಕ್ತಿಕ ಮಾಹಿತಿಯನ್ನು ಭಯೋತ್ಪಾದಕ ಸಂಘಟನೆ ಆನ್‌ಲೈನ್‌ನಲ್ಲಿ ಸೋರಿಕೆ ಮಾಡಿದೆ ಎಂದು ತಿಳಿದುಬಂದಿದೆ.

ಕೆಲವು ಬೆದರಿಕೆ ಪತ್ರಗಳು ಮೊದಲು ಡಾರ್ಕ್ ವೆಬ್‌ನಲ್ಲಿ ಕಾಣಿಸಿಕೊಂಡಿದ್ದು, ಬಳಿಕ ವಾಟ್ಸ್‌ಆ್ಯಪ್ ಮತ್ತು ಟೆಲಿಗ್ರಾಂ ಮೂಲಕ ಹರಿದಾಡಿವೆ ಎನ್ನಲಾಗಿದೆ. ಉದ್ಯೋಗಿಗಳ ವೈಯಕ್ತಿಕ ಮಾಹಿತಿಯ ಸೋರಿಕೆಯ ಮೂಲವನ್ನು ಪತ್ತೆಹಚ್ಚುವುದು ಹಾಗೂ ಇದರ ಹಿಂದೆ ಇರುವ ಜಾಲವನ್ನು ಬಯಲಿಗೆಳೆಯುವುದು ಭದ್ರತಾ ಸಂಸ್ಥೆಗಳಿಗೆ ಸವಾಲಾಗಿದೆ.

ಕಳೆದ ಒಂದು ತಿಂಗಳಲ್ಲಿ ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ಕನಿಷ್ಠ ಐದು ಬೆದರಿಕೆ ಪತ್ರಗಳು ಹೊರಬಂದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿವೆ.

ಸೆಪ್ಟೆಂಬರ್ 5ರಂದು ಹೊರಬಂದ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಪೊಲೀಸ್ ಸೈಬರ್ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಬೆದರಿಕೆ ಪತ್ರಗಳು ಮತ್ತು ವೈಯಕ್ತಿಕ ಮಾಹಿತಿಯ ಸೋರಿಕೆ ಕುರಿತು ತನಿಖೆ ಮುಂದುವರಿದಿದ್ದು, ಉದ್ಯೋಗಿಗಳ ಸುರಕ್ಷತೆ ಹಾಗೂ ಮಾಹಿತಿಯ ಮೂಲದ ಬಗ್ಗೆ ಭದ್ರತಾ ಸಂಸ್ಥೆಗಳು ಗಮನಹರಿಸಿವೆ.

ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಬಿಡಬೇಕಾದ ಪರಿಸ್ಥಿತಿ; ‘ಕರ್ನಾಟಕವೇ ಪಿಟಿಷನರ್ ಆಗಬೇಕು’ – ಬೊಮ್ಮಾಯಿ ಒತ್ತಾಯ

0

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಚೆಲ್ಲಿ ಕೂತಿದೆ ಎಂಬ ಭಾವನೆ ರೈತರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರಲ್ಲಿ ಮೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಪ್ರಸ್ತುತ ಹೊರಡಿಸಿರುವ ಆದೇಶದ ವಿರುದ್ಧ ಕೂಡಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕ ನಿರಂತರವಾಗಿ ಸಂಕಷ್ಟ ಎದುರಿಸುತ್ತಿದೆ. ರಾಜ್ಯದ ಸಮಸ್ಯೆ ಹಾಗೂ ವಾಸ್ತವ ಪರಿಸ್ಥಿತಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಪರಿಣಾಮಕಾರಿಯಾಗಿ ಮಂಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಧಿಕಾರಿಗಳು ಏನೇ ಹೇಳಿದರೂ ರಾಜ್ಯದ ವಾಸ್ತವ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಸ್ತುತ ಆದೇಶದಂತೆ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ನೀರನ್ನು ಬಿಡಬೇಕಾಗಿದೆ. ಇದರಿಂದ ಕರ್ನಾಟಕದಿಂದ ಸುಮಾರು 7.5 ಟಿಎಂಸಿ ನೀರು ಹೊರಹೋಗಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಈಗಾಗಲೇ ಕಬಿನಿ ಜಲಾಶಯದ ನೀರಿನ ಸಂಗ್ರಹ ಅರ್ಧಕ್ಕೆ ಇಳಿದಿದೆ. ಕೆಆರ್‌ಎಸ್‌ನಿಂದಲೂ ಪ್ರತಿದಿನ ಸುಮಾರು 5,000ರಿಂದ 6,000 ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, ಇದರಿಂದ ಪ್ರತಿದಿನ ಸುಮಾರು ಅರ್ಧ ಟಿಎಂಸಿ ನೀರು ಕಡಿಮೆಯಾಗುತ್ತಿದೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಮಳೆಯಾಗುವ ಲಕ್ಷಣಗಳೂ ಕಾಣಿಸುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಕಾವೇರಿ ನೀರಿನ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

ಪ್ರತಿ ಬಾರಿ ತಮಿಳುನಾಡು ಸಲ್ಲಿಸುವ ಅರ್ಜಿಗೆ ಪ್ರತಿವಾದಿಯಾಗಿ ನಿಲ್ಲುವ ಬದಲು, ಕರ್ನಾಟಕವೇ ಪಿಟಿಷನರ್ ಆಗಬೇಕು ಎಂದು ಅವರು ಹೇಳಿದ್ದಾರೆ. ಕೇವಲ ಅಂಕಿ-ಅಂಶಗಳನ್ನು ಮಾತ್ರ ಸುಪ್ರೀಂ ಕೋರ್ಟ್‌ ಮುಂದೆ ಮಂಡಿಸದೆ, ನೀರು ಬಿಡುವುದರಿಂದ ರಾಜ್ಯದ ರೈತರಿಗೆ ಹಾಗೂ ಕುಡಿಯುವ ನೀರಿಗೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆಯೂ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಶೇಷ ಹಿರಿಯ ನ್ಯಾಯವಾದಿಯನ್ನು ನೇಮಿಸಬೇಕು. ಈಗಿರುವ ವ್ಯವಸ್ಥೆಯಿಂದ ರಾಜ್ಯಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಮುಖ್ಯಮಂತ್ರಿ ಕೂಡಲೇ ಈ ವಿಚಾರದಲ್ಲಿ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.

ಮಂತ್ರಿಮಂಡಲ ರಚನೆ ಸೇರಿದಂತೆ ಹಲವು ವಿಚಾರಗಳಿಗೆ ದೆಹಲಿಗೆ ತೆರಳುವ ಮುಖ್ಯಮಂತ್ರಿ, ಕಾವೇರಿ ನೀರಿನ ವಿಚಾರದಲ್ಲೂ ದೆಹಲಿಗೆ ತೆರಳಿ ಕಾನೂನು ಹಾಗೂ ತಾಂತ್ರಿಕ ತಜ್ಞರೊಂದಿಗೆ ಬದಲಾಗಿರುವ ಪರಿಸ್ಥಿತಿ ಕುರಿತು ಚರ್ಚಿಸಬೇಕು. ರಾಜ್ಯದ ನ್ಯಾಯಾಂಗ ತಂಡಕ್ಕೆ ಹೊಸ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

KPSC ಪಶುವೈದ್ಯರ ನೇಮಕಾತಿ ಹಗರಣ: ಬಸವರಾಜ್ ಕನ್ನಾಳೆ ಆಪ್ತರಿಗೆ ಸಿಐಡಿ ನೋಟಿಸ್ ಭೀತಿ

0

ಬೀದರ್: ಕೆಪಿಎಸ್‌ಸಿ ಪಶುವೈದ್ಯರ ನೇಮಕಾತಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಸವರಾಜ್ ಕನ್ನಾಳೆ ಅವರ ಆಪ್ತರಿಗೆ ಇದೀಗ ಸಿಐಡಿ ಪೊಲೀಸರ ನೋಟಿಸ್‌ ಹಾಗೂ ಬಂಧನದ ಭೀತಿ ಶುರುವಾಗಿದೆ.

ಒಂದೆಡೆ ಬಸವರಾಜ್ ಕನ್ನಾಳೆ ಅವರ ಸಂಬಂಧಿಕರಿಗೆ ಸಿಐಡಿ ನೋಟಿಸ್‌ ಭಯ ಎದುರಾಗಿದ್ದರೆ, ಮತ್ತೊಂದೆಡೆ ಕನ್ನಾಳೆ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಆಪ್ತರಿಗೂ ಆತಂಕ ಎದುರಾಗಿದೆ. ಕನ್ನಾಳೆ ಅವರ ಬ್ಯಾಂಕ್‌ ಖಾತೆಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದು ಹಾಗೂ ಹಣವನ್ನು ವಿವಿಧ ಕಡೆಗಳಲ್ಲಿ ಹೂಡಿಕೆ ಮಾಡಿರುವ ಶಂಕೆಯ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಅವರ ಆಪ್ತರ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇದೇ ತಿಂಗಳ 5ರಂದು ಸಿಐಡಿ ಪೊಲೀಸರು ಬೀದರ್ ನಗರದ ಚಿದ್ರಿ ಬಳಿ ಇರುವ ಲೈಫ್‌ ಇನ್ಶೂರೆನ್ಸ್‌ ಕಂಪನಿಯೊಂದರ ಮೇಲೆ ದಾಳಿ ನಡೆಸಿ, ಹಲವು ದಾಖಲೆಗಳನ್ನು ಪರಿಶೀಲಿಸಿದ್ದರು. ಈ ಕಂಪನಿಗೆ ಸಂಬಂಧಿಸಿದ ವ್ಯಕ್ತಿಗಳು ಹಾಗೂ ಬಸವರಾಜ್ ಕನ್ನಾಳೆ ಅವರ ಆಪ್ತರ ಮೇಲೂ ಸಿಐಡಿ ಅಧಿಕಾರಿಗಳ ನಿಗಾ ಮುಂದುವರಿದಿದೆ ಎನ್ನಲಾಗಿದೆ.

ಕನ್ನಾಳೆ ಅವರ ಆಪ್ತರಾಗಿರುವ ಪವನ್‌ ರೆಡ್ಡಿ, ಸಂಬಂಧಿತ ಕಂಪನಿಯ ಮಾಲೀಕರು, ಆರ್‌ಟಿಒ ಇನ್‌ಸ್ಪೆಕ್ಟರ್‌ ರಾಜಶೇಖರ್‌ ಚಿದ್ರಿ ಹಾಗೂ ಭಾಲ್ಕಿಯ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಓಂಕಾರ್‌ ಸೇರಿದಂತೆ ಕೆಲವರಿಗೆ ಇದೀಗ ಸಿಐಡಿ ತನಿಖೆಯ ಆತಂಕ ಎದುರಾಗಿದೆ.

ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆ ಮುಂದುವರಿಸಿರುವ ಸಿಐಡಿ ಅಧಿಕಾರಿಗಳು ಹಣದ ವಹಿವಾಟು ಹಾಗೂ ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಸವರಾಜ್ ಕನ್ನಾಳೆ ಅವರೊಂದಿಗೆ ಸಂಪರ್ಕ ಹೊಂದಿದ್ದ ಇನ್ನಷ್ಟು ಮಂದಿಗೆ ನೋಟಿಸ್‌ ನೀಡುವ ಸಾಧ್ಯತೆಯಿದ್ದು, ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.

ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ED ದಾಳಿ: ಸುಳ್ಳು ಕಥೆ ಕಟ್ಟಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ – ಡಿಕೆಶಿ ವಾಗ್ದಾಳಿ

0

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಪಕ್ಷವನ್ನು ರಾಜಕೀಯವಾಗಿ ಗುರಿಯಾಗಿಸಲು ಇ.ಡಿ.ಯನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸತೀಶ್ ಜಾರಕಿಹೊಳಿ ನಿವಾಸಗಳ ಮೇಲಿನ ಇ.ಡಿ. ದಾಳಿ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಸಚಿವರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. ಇ.ಡಿ. ಯಾರನ್ನೂ ಬಿಡುವುದಿಲ್ಲ. ಸುಳ್ಳು ಕಥೆಗಳನ್ನು ಕಟ್ಟಿಕೊಂಡು, ಸುಳ್ಳು ಆರೋಪಗಳನ್ನು ಮಾಡಿ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದೇ ವೇಳೆ, ಸುಮಾರು 40 ಮಂದಿ ಕಾಂಗ್ರೆಸ್ ಶಾಸಕರು ಹಾಗೂ ಸಚಿವರನ್ನು ಇ.ಡಿ. ಗುರಿಯಾಗಿಸಬಹುದು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರು ಹಾಗೂ ಶಾಸಕರಿಗೆ ಸಲಹೆ ನೀಡಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ಹಳೆಯ ಎಫ್‌ಐಆರ್‌ಗಳ ಬಗ್ಗೆಯೂ ಡಿ.ಕೆ. ಶಿವಕುಮಾರ್ ಪ್ರಶ್ನೆ ಎತ್ತಿದ್ದಾರೆ. ವಿಶೇಷವಾಗಿ ಭೋವಿ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇ.ಡಿ. ಇನ್ನೂ ಏಕೆ ತನಿಖೆ ನಡೆಸಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷವನ್ನು ರಾಜಕೀಯವಾಗಿ ಗುರಿಯಾಗಿಸುವ ಉದ್ದೇಶದಿಂದ ಇ.ಡಿ. ತನಿಖಾ ಸಂಸ್ಥೆಯನ್ನು ಬಳಸಲಾಗುತ್ತಿದೆ ಎಂಬ ತಮ್ಮ ಆರೋಪವನ್ನು ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

ರಸ್ತೆಯಲ್ಲೇ ಮರಳು, ಕಲ್ಲು ಹಾಕಿ ಸಾರ್ವಜನಿಕರಿಗೆ ತೊಂದರೆ: ಮನೆ ಕಟ್ಟುವ ವ್ಯಕ್ತಿಗೆ ಹೈಕೋರ್ಟ್ ತರಾಟೆ

0

ಬೆಂಗಳೂರು: ಮನೆ ನಿರ್ಮಾಣ ಮಾಡುವ ನೆಪದಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಮರಳು, ಎಂ-ಸ್ಯಾಂಡ್‌, ಇಟ್ಟಿಗೆ ಹಾಗೂ ಕಲ್ಲು ಸೇರಿದಂತೆ ನಿರ್ಮಾಣ ಸಾಮಗ್ರಿಗಳನ್ನು ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ. ವ್ಯಕ್ತಿಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಹಾಗೂ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸಲು ನ್ಯಾಯಾಲಯ ನಿರಾಕರಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಹಾಗೂ ದೇವನಹಳ್ಳಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಪೀಠ, ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ವಿರುದ್ಧದ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಎಂ-ಸ್ಯಾಂಡ್‌, ಕಲ್ಲು ಸೇರಿದಂತೆ ಹಲವು ನಿರ್ಮಾಣ ಸಾಮಗ್ರಿಗಳನ್ನು ಸಾರ್ವಜನಿಕ ರಸ್ತೆಯಲ್ಲಿ ಹಾಕಿರುವ ಆರೋಪವಿದೆ. ಸ್ಥಳೀಯ ಅಧಿಕಾರಿಗಳು ಅವುಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದರೂ ಪದೇಪದೆ ರಸ್ತೆಯಲ್ಲೇ ನಿರ್ಮಾಣ ಸಾಮಗ್ರಿಗಳನ್ನು ಹಾಕಲಾಗಿದೆ ಎಂದು ಪ್ರಶ್ನಿಸಿದರು.

“ಏಕೆ ಮರಳು, ಕಲ್ಲುಗಳನ್ನು ರಸ್ತೆಯ ಮೇಲೆ ಹಾಕಿದ್ದೀರಿ? ಜನರು ರಸ್ತೆಯಲ್ಲಿ ಓಡಾಡಬಾರದೇ? ರಸ್ತೆ ಇರುವುದು ಮನೆ ಕಟ್ಟುವ ಸಾಮಗ್ರಿಗಳನ್ನು ಹಾಕುವುದಕ್ಕಾಗಿಯೇ? ಸಾರ್ವಜನಿಕರಿಗೆ ಏಕೆ ತೊಂದರೆ ಕೊಟ್ಟಿದ್ದೀರಿ?” ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಅಷ್ಟೇ ಅಲ್ಲದೆ, ಸಾರ್ವಜನಿಕ ರಸ್ತೆಯನ್ನು ಅಕ್ರಮವಾಗಿ ಬಳಸುತ್ತಿರುವುದಕ್ಕೆ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ರಸ್ತೆಯಲ್ಲಿ ಮರಳು, ಕಲ್ಲು ಹಾಕಿ ರಾಜ್ಯಭಾರ ಮಾಡುತ್ತಿದ್ದೀರಾ? ನೀವೇನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೀರೋ ಅಥವಾ ರಾಜರ ಕಾಲದಲ್ಲಿದ್ದೀರೋ?” ಎಂದು ತೀಕ್ಷ್ಣವಾಗಿ ಪ್ರಶ್ನಿಸುವ ಮೂಲಕ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡರು.

ತಪ್ಪು ಮಾಡಿದ ಬಳಿಕ ಹೈಕೋರ್ಟ್‌ಗೆ ಬಂದು ಪ್ರಕರಣ ರದ್ದುಪಡಿಸುವಂತೆ ಕೋರುತ್ತಿದ್ದೀರಿ. ಅರ್ಜಿಯನ್ನು ಹಿಂಪಡೆಯುತ್ತೀರೋ ಅಥವಾ ಪ್ರಕರಣದ ಅರ್ಹತೆಯ ಆಧಾರದ ಮೇಲೆ ತೀರ್ಪು ನೀಡಬೇಕೋ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು. ಅಲ್ಲದೆ, ಪ್ರಕರಣದ ಕುರಿತು ತೀರ್ಪು ನೀಡಿದರೆ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿದಾರರು ಸಂಕಷ್ಟ ಎದುರಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆಯುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ಅರ್ಜಿದಾರರ ಪರ ವಕೀಲರು ಕೆಲಕಾಲ ವಾದ ಮಂಡಿಸಿದ ಬಳಿಕ ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಅರ್ಜಿ ಹಿಂಪಡೆಯಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ತಮ್ಮ ಎಲ್ಲ ವಾದಾಂಶಗಳನ್ನು ವಿಚಾರಣಾ ನ್ಯಾಯಾಲಯದ ಮುಂದೆ ಮಂಡಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.

8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರಿನ ಇಬ್ಬರು ಪಿಯು ವಿದ್ಯಾರ್ಥಿನಿಯರು ಪತ್ತೆ: ಒಬ್ಬಳು ಗರ್ಭಿಣಿ

0

ಬೆಂಗಳೂರು: ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರಣ್ಯಪುರ ಮೂಲದ ಇಬ್ಬರು ಪಿಯು ವಿದ್ಯಾರ್ಥಿನಿಯರನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಪತ್ತೆಹಚ್ಚಿದ್ದಾರೆ. ಜನವರಿ 31ರಂದು ಇಬ್ಬರೂ ನಾಪತ್ತೆಯಾಗಿದ್ದು, ಅವರಲ್ಲಿ ಒಬ್ಬರು ದ್ವಿತೀಯ ಪಿಯುಸಿ ಹಾಗೂ ಮತ್ತೊಬ್ಬರು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಸದ್ಯ ಇಬ್ಬರೂ ಪತ್ತೆಯಾಗಿದ್ದು, ಅವರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮದುವೆಯಾಗಿದ್ದು ಗರ್ಭಿಣಿಯಾಗಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯರು ನಾಪತ್ತೆಯಾದ ಬಳಿಕ ಪೋಷಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಪೊಲೀಸರು ಹುಡುಕಾಟ ನಡೆಸಿದರೂ ಆರಂಭದಲ್ಲಿ ಇಬ್ಬರ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಮಗುವಿನೊಂದಿಗೆ ಆಟವಾಡುತ್ತಿರುವುದು ಕಂಡುಬಂದಿತ್ತು. ಆ ಸಂದರ್ಭದಲ್ಲಿ ಮಗುವಿನ ತಾಯಿ ಹಾಗೂ ಇಬ್ಬರು ವಿದ್ಯಾರ್ಥಿನಿಯರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದರು. ಇದಾದ ಬಳಿಕ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿರಲಿಲ್ಲ.

ತಮ್ಮ ಮಕ್ಕಳ ಪತ್ತೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹೈಕೋರ್ಟ್ ಮೊರೆ ಹೋಗಿದ್ದರು. ಸುಮಾರು ಐದಾರು ತಿಂಗಳ ಬಳಿಕ ಪ್ರಕರಣವನ್ನು ಹೈಕೋರ್ಟ್ ಸಿಐಡಿಗೆ ವರ್ಗಾವಣೆ ಮಾಡಿತ್ತು. ಕಳೆದ ಮೂರು ತಿಂಗಳಿಂದ ಸಿಐಡಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ವಿದ್ಯಾರ್ಥಿನಿಯರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.

ಈ ನಡುವೆ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಸಿಮ್ ಕಾರ್ಡ್ ಖರೀದಿಸಲು ತೆರಳಿದ್ದಳು. ಈ ವೇಳೆ ಆಧಾರ್ ಕಾರ್ಡ್ ಸಂಖ್ಯೆ ಬಳಸಿದಾಗ ಸರ್ವಿಸ್ ಪ್ರೊವೈಡರ್ ಮೂಲಕ ಸಿಐಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಈ ಸುಳಿವಿನ ಆಧಾರದ ಮೇಲೆ ತನಿಖೆ ಮುಂದುವರಿಸಿದ ಅಧಿಕಾರಿಗಳು ಇಬ್ಬರು ವಿದ್ಯಾರ್ಥಿನಿಯರನ್ನು ಪತ್ತೆಹಚ್ಚಿದ್ದಾರೆ.

ವಿಚಾರಣೆ ವೇಳೆ ಇಬ್ಬರು ವಿದ್ಯಾರ್ಥಿನಿಯರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕನಕಪುರ ತಾಲೂಕಿನ ಯುವಕನೊಬ್ಬನ ಪರಿಚಯವಾಗಿರುವುದು ತಿಳಿದುಬಂದಿದೆ. ಕುಟುಂಬದಲ್ಲಿ ಸಮಸ್ಯೆಗಳಿದ್ದ ಹಿನ್ನೆಲೆಯಲ್ಲಿ ದೊಡ್ಡ ವಿದ್ಯಾರ್ಥಿನಿ ತನ್ನ ತಂಗಿ, ತಂದೆ-ತಾಯಿ ಹಾಗೂ ಕುಟುಂಬಸ್ಥರು ಯಾರೂ ಇಲ್ಲ ಎಂದು ಯುವಕನಿಗೆ ಸುಳ್ಳು ಹೇಳಿದ್ದಳು ಎನ್ನಲಾಗಿದೆ. ಬಳಿಕ ಇಬ್ಬರೂ ಆ ಯುವಕನೊಂದಿಗೆ ತೆರಳಿದ್ದರು.

ನಂತರ ದೊಡ್ಡ ವಿದ್ಯಾರ್ಥಿನಿ ಆ ಯುವಕನನ್ನು ಮದುವೆಯಾಗಿದ್ದು, ಇಬ್ಬರೂ ಒಟ್ಟಿಗೆ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಸದ್ಯ ಆಕೆ ಗರ್ಭಿಣಿಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಇಂದು ಹೈಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.

ಬೆಳ್ಳಂಬೆಳಗ್ಗೆಯೇ ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ಇಡಿ ದಾಳಿ! ರೇಡ್ʼಗೆ ಅಸಲಿ ಕಾರಣವೇನು?

0

ಬೆಂಗಳೂರು: ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಪರವಾನಗಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.

ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಬೆಳಗಾವಿಗೆ ವರ್ಗಾವಣೆಯಾಗುವ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಪ್ರಭಾವ ಬೀರಿದ್ದರು ಎಂಬ ಆರೋಪವೂ ಕೇಳಿಬಂದಿದೆ.

ಇದಲ್ಲದೆ, ಮಂಜುನಾಥ್ ಅವರು ತಮ್ಮ ಸಂಬಂಧಿಕರು ಹಾಗೂ ಆಪ್ತರ ಹೆಸರಿನಲ್ಲಿ ಅಬಕಾರಿ ಪರವಾನಗಿಗಳನ್ನು ಪಡೆದುಕೊಂಡಿದ್ದರು ಎಂಬ ಆರೋಪವಿದೆ. ಈ ಮೂಲಕ ಅಕ್ರಮವಾಗಿ ಸಂಗ್ರಹಿಸಲಾದ ಹಣವನ್ನು ವಿವಿಧ ಕಡೆಗಳಲ್ಲಿ ಹೂಡಿಕೆ ಮಾಡಲಾಗಿತ್ತು ಎಂಬ ಆರೋಪದ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಈ ಪ್ರಕರಣದ ತನಿಖೆ ವೇಳೆ ಮಂಜುನಾಥ್ ಅವರ ನಿವಾಸದಲ್ಲಿ ಡೈರಿಯೊಂದು ಪತ್ತೆಯಾಗಿತ್ತು ಎನ್ನಲಾಗಿದೆ. ಈ ಡೈರಿಯಲ್ಲಿರುವ ಮಾಹಿತಿಯನ್ನು ಆಧರಿಸಿ ಜೂನ್ 24ರಿಂದ ಇ.ಡಿ. ಅಧಿಕಾರಿಗಳು ಪ್ರಕರಣದ ಕುರಿತು ಕೂಲಂಕುಷ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವೇಳೆ ಕೆಲವು ಮಹತ್ವದ ಸುಳಿವುಗಳು ದೊರೆತಿವೆ ಎನ್ನಲಾಗಿದ್ದು, ಡೈರಿಯಲ್ಲಿನ ದಾಖಲೆಗಳ ಆಧಾರದ ಮೇಲೆ ಸತೀಶ್ ಜಾರಕಿಹೊಳಿ ಅವರ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ದಾಳಿ ಹಾಗೂ ಪರಿಶೀಲನೆಯ ವೇಳೆ ಲಭ್ಯವಾಗುವ ದಾಖಲೆಗಳು ಮತ್ತು ಮಾಹಿತಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.