Home Blog

ಬಸ್ ನಿಲ್ದಾಣದಲ್ಲೇ ಪುಂಡನಿಗೆ ಚಪ್ಪಲಿ ಏಟು! ಅಸಭ್ಯ ವರ್ತನೆಗೆ ಮಹಿಳೆಯ ಆಕ್ರೋಶ, ಜನರಿಂದ ಧರ್ಮದೇಟು

0

ರಾಯಚೂರು: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಅಶ್ಲೀಲವಾಗಿ ಮಾತನಾಡಿದ್ದ ಯುವಕನಿಗೆ ಮಹಿಳೆಯೇ ಬಸ್ ನಿಲ್ದಾಣದಲ್ಲೇ ಚಪ್ಪಲಿಯಿಂದ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.

ಲಿಂಗಸುಗೂರು ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಬಸ್‌ಗಾಗಿ ಕಾಯುತ್ತ ನಿಂತಿದ್ದ ವೇಳೆ ಯುವಕ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ ಅಶ್ಲೀಲ ಪದಗಳನ್ನು ಬಳಸಿ ಕಿರುಕುಳ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಯುವಕನ ವರ್ತನೆಯಿಂದ ಆಕ್ರೋಶಗೊಂಡ ಮಹಿಳೆ ಸಾರ್ವಜನಿಕರ ಎದುರೇ ಆತನ ಕೆನ್ನೆಗೆ ಬಾರಿಸಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಘಟನೆ ಗಮನಿಸಿದ ಸ್ಥಳದಲ್ಲಿದ್ದ ಪ್ರಯಾಣಿಕರು ಕೂಡ ಯುವಕನನ್ನು ತರಾಟೆಗೆ ತೆಗೆದುಕೊಂಡು ಧರ್ಮದೇಟು ನೀಡಿದ್ದಾರೆ.

ಪರಿಸ್ಥಿತಿ ಕೈಮೀರಿದುದನ್ನು ಅರಿತ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆ ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! ಜೂನ್ 3ರಂದು ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ರಾಜಕೀಯದ ಬಹುಚರ್ಚಿತ ಬೆಳವಣಿಗೆಗೆ ಕೊನೆಗೂ ಅಂತಿಮ ಮುದ್ರೆ ಬಿದ್ದಿದ್ದು, ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬುಧವಾರ ಸಂಜೆ 4 ಗಂಟೆಯ ಬಳಿಕ ವಿಧಾನಸೌಧದ ಭವ್ಯ ಗ್ರ್ಯಾಂಡ್ ಸ್ಟೆಪ್‌ ಮುಂಭಾಗದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕತ್ವದ ಅಂತಿಮ ಚರ್ಚೆಗಳ ಬಳಿಕ ಕಾರ್ಯಕ್ರಮದ ರೂಪುರೇಷೆಗಳು ಬಹುತೇಕ ಅಂತಿಮಗೊಂಡಿವೆ.

ಇದರ ನಡುವೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಡಿಕೆ ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ರಾಜ್ಯಪಾಲರು ಧರ್ಮಸ್ಥಳ ಪ್ರವಾಸಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಮುಂಚಿತವಾಗಿಯೇ ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಭೇಟಿ ಹಿನ್ನೆಲೆ ಲೋಕಭವನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಮಳೆಯ ಅಬ್ಬರಕ್ಕೆ ತತ್ತರಿಸಿದ ಎರಡು ಜಿಲ್ಲೆಗಳು! ಚಿಕ್ಕಮಗಳೂರಲ್ಲಿ ಕತ್ತಲು, ಚಾಮರಾಜನಗರದಲ್ಲಿ ಮನೆಗಳೊಳಗೆ ನೀರು

ಚಾಮರಾಜನಗರ/ಚಿಕ್ಕಮಗಳೂರು: ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ರಾಜ್ಯದ ಹಲವೆಡೆ ಜನರು ಸಂಕಷ್ಟ ಎದುರಿಸುತ್ತಿದ್ದು, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ವ್ಯಾಪಕ ಹಾನಿ ಉಂಟುಮಾಡಿದೆ.

ಹನೂರು ತಾಲೂಕಿನ ಗುಳ್ಯದಬಯಲು ಗ್ರಾಮದಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ರಾತ್ರಿಯಿಡೀ ಜಾಗರಣೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಆಹಾರ ಧಾನ್ಯಗಳು ಮತ್ತು ಅಗತ್ಯ ವಸ್ತುಗಳು ನೀರಿನಲ್ಲಿ ಹಾನಿಗೊಳಗಾಗಿವೆ.

ಇತ್ತ ಚಿಕ್ಕಮಗಳೂರಿನಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಹಲವು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಕೋಟೆ ಬಡಾವಣೆಯಲ್ಲಿ ಮನೆಗಳ ಮೇಲ್ಛಾವಣಿ ಹಾನಿಗೊಳಗಾಗಿದ್ದು, ಹಲವು ಪ್ರದೇಶಗಳಲ್ಲಿ ಅಪಾರ ಆಸ್ತಿ ನಷ್ಟ ಉಂಟಾಗಿದೆ.

ಜಿಲ್ಲಾ ನ್ಯಾಯಾಲಯದ ಎದುರು ಸಾಲುಸಾಲು ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ನಗರದ ಅನೇಕ ಭಾಗಗಳು ಕತ್ತಲಲ್ಲಿ ಮುಳುಗಿವೆ. ಐಬಿ ಮುಂಭಾಗದ ಕಾಂಪೌಂಡ್ ಗೋಡೆಯೂ ಕುಸಿದಿದ್ದು, ನಗರದಲ್ಲಿ ವಿದ್ಯುತ್ ಪೂರೈಕೆ ಪುನಃಸ್ಥಾಪಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಎಚ್ಚರಿಕೆಯಿಂದಿರಲು ಸಾರ್ವಜನಿಕರಿಗೆ ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಬಿರುಗಾಳಿ, ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದ್ದು, ಕೆಲವೆಡೆ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಮಳೆಯ ಚಟುವಟಿಕೆ ಹೆಚ್ಚಾಗಬಹುದು ಎಂದು ಇಲಾಖೆ ತಿಳಿಸಿದೆ.

ಹಾವೇರಿ, ಗದಗ, ಕೊಪ್ಪಳ, ಧಾರವಾಡ ಹಾಗೂ ರಾಯಚೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು, ಸಿಡಿಲು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು ಕೃಷಿ ಚಟುವಟಿಕೆಗಳ ವೇಳೆ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ. ಜೊತೆಗೆ ಗುಡುಗು-ಸಿಡಿಲು ಮತ್ತು ಬಿರುಗಾಳಿಯ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ಒಟ್ಟಾರೆ, ರಾಜ್ಯದ ದಕ್ಷಿಣ ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಕೆಲವು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಾತ್ರ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ವಿಜಯಪುರದಲ್ಲಿ ರಕ್ತದೋಕುಳಿ! ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಭೀಕರ ಕೊಲೆ

ವಿಜಯಪುರ: ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳ ಗುಂಪೊಂದು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜರುಗಿದೆ.

ಮೃತರನ್ನು ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಎಂದು ಗುರುತಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಲೆಯಾದವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ನಿರಾಳೆ ಹಾಗೂ ಗೊಳಗಿ ಎಂಬ ಕುಟುಂಬದ ಮಧ್ಯೆ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಿತ್ತು. ಕಳೆದ ಕೆಲ ದಿನಗಳ ಹಿಂದೆ ಎರಡೂ ಕುಟುಂಬಗಳ ಮಧ್ಯೆ ನ್ಯಾಯ ಪಂಚಾಯಿತಿ ಆಗಿತ್ತು. ಇಂದು ಅದೇ‌ ಜಮೀನಿನ ವಿಚಾರದಲ್ಲಿ ನ್ಯಾಯ ಪಂಚಾಯಿತಿಗೆ ಹೋಗಿದ್ದ ವೇಳೆ 15-20 ಜನರನ್ನು ಒಳಗೊಂಡ ದುರ್ಷರ್ಮಿಗಳ ಗುಂಪೊಂದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ಏಕಾಏಕಿ ದಾಳಿ ನಡೆಸಿ, ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಚಡಚಣ ಪಟ್ಟಣದ ನಿರಾಳೆ ಕುಟುಂಬದವರು ಗೋವಿಂದಪುರ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೇರಿದ 25 ಎಕರೆ ವಿವಾದಿತ ಜಮೀನನ್ನು ಆರು ತಿಂಗಳ ಹಿಂದೆ ಖರೀದಿ ಮಾಡಲು ಮುಂದಾಗಿತ್ತು. ಈ ವೇಳೆ ಗ್ರಾಮಸ್ಥರು ವಿವಾದಿತ ಜಮೀನು ಖರೀದಿಸದಂತೆ ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ.‌ ವಿರೋಧದ ನಡುವೆಯೂ ನಿರಾಳೆ ಕುಟುಂಬದವರು ಜಮೀನು ಖರೀದಿ ಮಾಡಿದ್ದರು. ಅಲ್ಲದೇ, ಇದೀಗ ಟ್ರ್ಯಾಕ್ಟರ್, ಜೆಸಿಬಿ ಮೂಲಕ ಹೊಲವನ್ನು ಸ್ವಚ್ಛಗೊಳಿಸಿ, ಕೃಷಿಗೆ ಸಜ್ಜುಗೊಳಿಸುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ, ಮಾರಣಹೋಮ ನಡೆಸಿರುವುದಾಗಿ ಪ್ರಾಥಮಿಕ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿ ಆಗಿದ್ದರೂ ದೇಹದಲ್ಲಿ ಯಾವುದೇ ಗಾಯಗಳು ಕಂಡುಬಂದಿಲ್ಲ. ಹೀಗಾಗಿ ಮರಣೋತ್ತರ ಪರೀಕ್ಷೆ ಬಳಿಕ ಖಚಿತ ಮಾಹಿತಿ ಸಿಗಲಿದ್ದು, ಪೋಲೀಸರು ಇದುವರೆಗೂ ಎಫ್ಐಆರ್ ದಾಖಲಿಸಿಲ್ಲ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಪೋಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಲಕ್ನೋ ತಂಡದ ನಾಯಕ ಸ್ಥಾನದಿಂದ ಇಳಿದ ರಿಷಭ್ ಪಂತ್! ದಿಢೀರ್ ನಿರ್ಧಾರಕ್ಕೆ ಕಳಪೆ ಪ್ರದರ್ಶನ ಕಾರಣವಾ?

ಐಪಿಎಲ್ 2026ರ ಆವೃತ್ತಿ ಮುಕ್ತಾಯದ ಹಂತಕ್ಕೆ ತಲುಪುತ್ತಿರುವ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ತಂಡದ ನಾಯಕ ರಿಷಭ್ ಪಂತ್ ಅವರು ನಾಯಕತ್ವ ಸ್ಥಾನದಿಂದ ಕೆಳಗಿಳಿಯಲು ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ.

ಈ ಸೀಸನ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿರೀಕ್ಷಿತ ಪ್ರದರ್ಶನ ನೀಡದೆ 14 ಪಂದ್ಯಗಳಲ್ಲಿ ಕೇವಲ 4 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿತ್ತು. ನಾಯಕತ್ವದ ಒತ್ತಡದ ನಡುವೆಯೂ ಪಂತ್ ಅವರ ವೈಯಕ್ತಿಕ ಬ್ಯಾಟಿಂಗ್ ಪ್ರದರ್ಶನವೂ ಕುಂಠಿತವಾಗಿತ್ತು.

ಪಂತ್ ಅವರು ತಾವಾಗಿಯೇ ಫ್ರಾಂಚೈಸಿಗೆ ನಾಯಕತ್ವದಿಂದ ಮುಕ್ತಿ ನೀಡುವಂತೆ ಮನವಿ ಮಾಡಿದ್ದು, ಅದನ್ನು ಲಕ್ನೋ ತಂಡ ಗೌರವಪೂರ್ವಕವಾಗಿ ಅಂಗೀಕರಿಸಿದೆ ಎಂದು ಕ್ರಿಕೆಟ್ ನಿರ್ದೇಶಕ ಟಾಮ್ ಮೂಡಿ ತಿಳಿಸಿದ್ದಾರೆ. “ತಂಡದ ಪುನರ್ರಚನೆ ಮತ್ತು ಮುಂದಿನ ಸೀಸನ್‌ಗೆ ಬಲಿಷ್ಠವಾಗಿ ಸಿದ್ಧಗೊಳ್ಳಲು ಇದು ಸಹಾಯಕವಾಗಲಿದೆ” ಎಂದು ಅವರು ಹೇಳಿದ್ದಾರೆ.

2025ರ ಮೆಗಾ ಹರಾಜಿನಲ್ಲಿ 27 ಕೋಟಿ ರೂ.ಗೆ ಪಂತ್ ಅವರನ್ನು ಖರೀದಿಸಿ ನಾಯಕನನ್ನಾಗಿ ಮಾಡಲಾಗಿತ್ತು. ಆದರೆ ನಿರೀಕ್ಷಿತ ಫಲಿತಾಂಶಗಳು ಲಭಿಸದೇ ಹೋದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದಿದೆ.

ಇತ್ತೀಚೆಗೆ ಭಾರತ ಟೆಸ್ಟ್ ತಂಡದ ಉಪನಾಯಕತ್ವದಿಂದಲೂ ಅವರನ್ನು ಕೈಬಿಡಲಾಗಿದ್ದು, ಇದೀಗ ನಾಯಕತ್ವದಿಂದ ದೂರ ಸರಿದಿರುವುದು ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮುಂದಿನ ಸೀಸನ್‌ಗೆ ಲಕ್ನೋ ತಂಡ ಹೊಸ ನಾಯಕನನ್ನು ಘೋಷಿಸುವ ಸಾಧ್ಯತೆ ಇದೆ.

ಹೊಳೆಆಲೂರು ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಿ

ವಿಜಯಸಾಕ್ಷಿ ಸುದ್ದಿ, ಹೊಳೆಆಲೂರು: ಹೊಳೆಆಲೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಭವನದಲ್ಲಿ ವೈದ್ಯಾಧಿಕಾರಿಗಳ ಕೊರತೆ, ಸಮರ್ಪಕ ಔಷಧಿ ಹಾಗೂ ಮೂಲಸೌಕರ್ಯಗಳ ಅಭಾವ ಇರುವುದನ್ನು ಯುವ ಕರ್ನಾಟಕ ವೇದಿಕೆ ಖಂಡಿಸಿದೆ. 
ಯುವ ಕರ್ನಾಟಕ ವೇದಿಕೆಯ ಗದಗ ಜಿಲ್ಲಾ ಅಧ್ಯಕ್ಷ ಎಂ.ಎಚ್. ನದಾಫ್ ಮಾತನಾಡಿ, ಹೊಳೆಆಲೂರು ಸರ್ಕಾರಿ ಆಸ್ಪತ್ರೆ ಸುತ್ತಮುತ್ತಲಿನ 21 ಗ್ರಾಮಗಳ ಜನರಿಗೆ ಪ್ರಮುಖ ಆಸ್ಪತ್ರೆಯಾಗಿದ್ದು, ಪ್ರತಿನಿತ್ಯ 100ರಿಂದ 150 ರವರೆಗೆ ಓಪಿಡಿ ನಡೆಯುತ್ತದೆ. ಆದರೆ ಇಲ್ಲಿ ಒಬ್ಬರೇ ವೈದ್ಯಾಧಿಕಾರಿಗಳು ಕಾರ್ಯನಿರ್ವಹಿಸುತ್ತಿರುವುದು ದುರ್ದೈವದ ಸಂಗತಿ ಎಂದು ಹೇಳಿದರು.
ಹೆರಿಗೆ ಸೇರಿದಂತೆ ವಿವಿಧ ಚಿಕಿತ್ಸೆಗಳಿಗಾಗಿ ಗ್ರಾಮೀಣ ಭಾಗದ ಜನರು ಆಸ್ಪತ್ರೆಗೆ ಬರುತ್ತಿದ್ದರೂ ಸಮರ್ಪಕ ವೈದ್ಯರು, ಸ್ಟಾಫ್ ನರ್ಸ್‌ಗಳು, ಔಷಧಿಗಳು ಹಾಗೂ ಲಸಿಕೆಗಳ ಕೊರತೆಯಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸುಮಾರು ಆರು ತಿಂಗಳ ಹಿಂದೆ ಸಮುದಾಯ ಆರೋಗ್ಯ ಭವನ ಉದ್ಘಾಟನೆಗೊಂಡಿದ್ದರೂ ಸಮರ್ಪಕ ಚಿಕಿತ್ಸೆ ವ್ಯವಸ್ಥೆ ಆರಂಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳೀಯ ಶಾಸಕರು ಹಾಗೂ ಸಂಬಂಧಪಟ್ಟ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಕ್ಷಣ ಗಮನಹರಿಸಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮಸ್ಥರೊಂದಿಗೆ ಆಸ್ಪತ್ರೆ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹಾದಿಮನಿ, ನಿಂಗಪ್ಪ ಹಾದಿಮನಿ, ಮಾರುತಿ, ಶರೀಫ್ ನದಾಫ್, ರಾಜು ಹೊಂಬಾಳ, ಬಾಬು ಕಾತರಕಿ, ನಯಿಮ್ ನದಾಫ್, ನಿಯಾಜ್ ಮುಲ್ಲಾ, ಹನುಮಂತ ಗಾಡಗೋಳಿ, ಅಶೋಕ್ ಮುಂದಿನಮನಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಏಷ್ಯನ್ ಪ್ಯಾರಾ ಥ್ರೋಬಾಲ್‌ಗೆ ಗದಗ ಕ್ರೀಡಾಪಟುಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಗದಗ: ಜೂನ್ 2ರಿಂದ 5ರವರೆಗೆ ಮಲೇಷ್ಯಾದಲ್ಲಿ ನಡೆಯಲಿರುವ 2ನೇ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಗದಗ ಜಿಲ್ಲೆಯ ಪ್ಯಾರಾ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಗದಗಿನ ಮಾಲತಿ ಇನಾಮತಿ ಅವರು ಈ ಬಾರಿಯೂ ಭಾರತ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಕಳೆದ ಬಾರಿ ನಡೆದ ದಕ್ಷಿಣ ಏಷ್ಯನ್ ಪ್ಯಾರಾ ಥ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಅವರ ನಾಯಕತ್ವದಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದು ಸಾಧನೆ ಮಾಡಿತ್ತು.
ಇದೇ ವೇಳೆ ಬಿಂಕದಕಟ್ಟಿ ಗ್ರಾಮದ ಪ್ಯಾರಾ ಥ್ರೋಬಾಲ್ ಕ್ರೀಡಾಪಟುವಾದ ದೇವಮ್ಮಾ ಗರೇಬಾಳ ಅವರು ಕೂಡ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಗದಗಿನ ರಿಯಾಜ್ ಬಾನಿ ಅವರು ಭಾರತೀಯ ತಂಡದ ಸಹಾಯಕ ಕೋಚ್ ಆಗಿ ಮಲೇಷ್ಯಾಕ್ಕೆ ತೆರಳಲಿದ್ದಾರೆ. ಜಿಲ್ಲೆಯ ಕ್ರೀಡಾಪಟುಗಳ ಈ ಸಾಧನೆಗೆ ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

ಡಿಕೆಶಿಗೆ ಸಿಎಂ ಯೋಗ ಲಿಂ. ವೀರಗಂಗಾಧರರ ಆಶೀರ್ವಾದದ ಫಲ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಕ್ತಿಮಂದಿರ ಮಹರ್ಷಿ ಲಿಂ. ಜಗದ್ಗುರು ವೀರಗಂಗಾಧರ ಭಗವತ್ಪಾದರ ಬಗ್ಗೆ ಅಪಾರ ಭಕ್ತಿಯನ್ನು ಹೊಂದಿದ್ದು, ಅಧಿಕಾರದ ಗದ್ದುಗೆ ಏರುವ ಸಂದರ್ಭದಲ್ಲಿ ಲಿಂ. ವೀರಗಂಗಾಧರ ಮಹರ್ಷಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದ್ದಾರೆ.
ಕಳೆದ ಎಪ್ರಿಲ್ 19ರಂದು ಡಿಕೆಶಿ ಮುಕ್ತಿಮಂದಿರ ಕ್ಷೇತ್ರಕ್ಕೆ ಆಗಮಿಸಿ ಸುಮಾರು ಎರಡು ಗಂಟೆಗಳ ಕಾಲ ಲಿಂ. ಶ್ರೀಗಳ ಗದ್ದುಗೆಗೆ ಪೂಜೆ, ಮಂಗಳಾರತಿ ಹಾಗೂ ಧ್ಯಾನ ನೆರವೇರಿಸಿ ಮನಃಪೂರ್ವಕವಾಗಿ ಬೇಡಿಕೆ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ.
ಲಿಂ. ಶ್ರೀಗಳ ಪವಾಡದ ಅರಿವು ಡಿಕೆಶಿ ಅವರಿಗೆ ಇದ್ದು, ತಮ್ಮ ಸಂಕಲ್ಪ ಸಿದ್ಧಿಯಾಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದರು. ಅಂದು “ಲಿಂ. ಶ್ರೀಗಳ ಆಶೀರ್ವಾದದಿಂದ ಅವರು ಅಂದುಕೊಂಡ ಹುದ್ದೆ ಶೀಘ್ರದಲ್ಲೇ ದೊರೆಯಲಿದೆ” ಎಂದು ಆಶೀರ್ವಾದ ಮಾಡಿ ಕಳುಹಿಸಿದ್ದಾಗಿ ಶ್ರೀಗಳು ತಿಳಿಸಿದ್ದಾರೆ.
ಡಿ.ಕೆ. ಶಿವಕುಮಾರ ಅವರು ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಅಧಿಕಾರ ಬಿಟ್ಟು ಕೊಡುವಲ್ಲಿ ಪ್ರಬುದ್ಧತೆ ಮೆರೆದಿದ್ದಾರೆ. ಎಲ್ಲ ವರ್ಗಗಳನ್ನು ಸಮನ್ವಯದಿಂದ ಕೊಂಡೊಯ್ಯುವ ಶಕ್ತಿಯನ್ನು ಲಿಂ. ಜಗದ್ಗುರು ವೀರಗಂಗಾಧರರು ಡಿಕೆಶಿಗೆ ಕರುಣಿಸಲಿ ಎಂದು ಶ್ರೀಗಳು ಆಶಿಸಿದ್ದಾರೆ.

ಸೋಮೇಶ್ವರ ದೇವಸ್ಥಾನದ ಸುತ್ತ ಮಾಂಸ ಮಾರಾಟ ನಿಲ್ಲಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹಲವಾರು ವರ್ಷಗಳಿಂದ ಲಕ್ಷ್ಮೇಶ್ವರ ಪಟ್ಟಣದ ಶ್ರೀ ಸೋಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಡೆಯುತ್ತಿರುವ ಚಿಕನ್, ಮೀನು, ಕುರಿ ಹಾಗೂ ಮಾಂಸ ಮಾರಾಟ ಅಂಗಡಿಗಳನ್ನು ಕೂಡಲೇ ಸ್ಥಳಾಂತರಿಸಬೇಕು. ಪುರಸಭೆ ಜಾಗದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಸಾಯಿಖಾನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶುಕ್ರವಾರ ಶ್ರೀರಾಮ್ ಸೇನೆ ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗಡದಾರಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಶ್ರೀರಾಮ್ ಸೇನೆ ತಾಲೂಕು ಅಧ್ಯಕ್ಷ ಈರಣ್ಣ ಪೂಜಾರ ಹಾಗೂ ಹಿಂದೂ ಯುವ ಮುಖಂಡರಾದ ಗಂಗಾಧರ ಮೆಣಸಿನಕಾಯಿ, ಸೋಮೇಶ ಉಪನಾಳ, ಮಂಜುನಾಥ ಹೊಗೆಸೊಪ್ಪಿನ ಅವರು, ದೇವಸ್ಥಾನದ ಹಿಂಭಾಗದಲ್ಲಿ ದಶಕಗಳಿಂದ ಮಾಂಸ ಮಾರಾಟ ಅಂಗಡಿಗಳು ಹಾಗೂ ಅಕ್ರಮ ಕಸಾಯಿಖಾನೆಗಳು ನಡೆಯುತ್ತಿರುವುದು ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.
ದೇವಸ್ಥಾನಕ್ಕೆ ಸಮೀಪದಲ್ಲೇ ಮಾಂಸ ಸಾಗಣೆ ನಡೆಯುತ್ತಿದ್ದು, ಈ ಕುರಿತು ಹಲವು ವರ್ಷಗಳಿಂದ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಪುರಸಭೆಯವರು ಮಾಂಸ ಮಾರಾಟಗಾರರಿಗೆ ಭಯಪಡುತ್ತಿದ್ದಾರೆ. ಅಧಿಕಾರಿಗಳು ಮಾಂಸ ವ್ಯಾಪಾರಿಗಳೊಂದಿಗೆ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ” ಎಂದು ಅವರು ಆರೋಪಿಸಿದರು.
ಕಳೆದ ನಾಲ್ಕು ವರ್ಷಗಳ ಹಿಂದೆ ಅಂದಿನ ಜಿಲ್ಲಾಧಿಕಾರಿಗಳು ಅಂಗಡಿಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದರೂ, ಇದುವರೆಗೆ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆರೋಪಿಸಿದ ಅವರು, ಇನ್ನೂ ಒಂದು ತಿಂಗಳೊಳಗೆ ಅಂಗಡಿಗಳನ್ನು ಸ್ಥಳಾಂತರಿಸದಿದ್ದರೆ ಪುರಸಭೆ ಎದುರು ಸಮಸ್ತ ಹಿಂದೂ ಸಂಘಟನೆಗಳಿಂದ ತೆರವುಗೊಳಿಸುವವರೆಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಜಾರ್ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವೇಶ ಮಹಾಂತಶೆಟ್ಟರ, ವರ್ತಕರಾದ ಚಂಬಣ್ಣ ಬಾಳಿಕಾಯಿ ಹಾಗೂ ವಿಜಯ ಹತ್ತಿಕಾಳ ಮಾತನಾಡಿದರು.
ಈ ಸಂದರ್ಭದಲ್ಲಿ ಸೋಮೇಶ್ವರ ದೇವಸ್ಥಾನ ಭಕ್ತರ ಸೇವಾ ಟ್ರಸ್ಟ್ ಕಮಿಟಿ ಅಧ್ಯಕ್ಷ ಗುರುರಾಜ ಪಾಟೀಲ್ ಕುಲಕರ್ಣಿ, ದುಂಡೇಶ ಕೊಟಗಿ, ಥಾವರಪ್ಪ ಲಮಾಣಿ, ರಾಜು ಅಂದಲಗಿ, ಬಸವರಾಜ ಚಕ್ರಸಾಲಿ, ಶಿವಣ್ಣ ಲಮಾಣಿ, ಪುಂಡಲೀಕ ಲಮಾಣಿ, ಪ್ರವೀಣ ಬೋಮಲೆ, ವಿಜಯ ಕುಂಬಾರ, ಗಿರೀಶ ಚೌರಡ್ಡಿ, ಮಲ್ಲಿಕಾರ್ಜುನ ನೀರಾಲೋಟ, ಶಕ್ತಿ ಕತ್ತಿ, ವಿಶಾಲ ಬಟಗುರ್ಕಿ, ಅಮಿತ ಗುಡಗೇರಿ, ಮಹಾಂತೇಶ ರಗಟಿ, ಮಹಾದೇವಪ್ಪ ಅಣ್ಣಿಗೇರಿ, ಹನುಮಂತ ರಾಮಗೇರಿ, ಸಂತೋಷ ಬೋಮಲೆ, ಸುಮಂಗಲಾ ಕುಂಬಾರ, ಗೀತಾ ಬಡಿಗೇರ, ಶೋಭಾ ಇಟಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
 “ಒಂದು ತಿಂಗಳೊಳಗೆ ಮಾಂಸ ಅಂಗಡಿಗಳನ್ನು ಸ್ಥಳಾಂತರಿಸದಿದ್ದರೆ ಪುರಸಭೆ ಎದುರು ಸಮಸ್ತ ಹಿಂದೂ ಸಂಘಟನೆಗಳಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು.”
ಈರಣ್ಣ ಪೂಜಾರ, ಶ್ರೀರಾಮ್ ಸೇನೆ ತಾಲೂಕು ಅಧ್ಯಕ್ಷ
  • ಒಂದು ತಿಂಗಳ ಗಡುವು!
  • ಸೋಮೇಶ್ವರ ದೇವಸ್ಥಾನ ಹಿಂಭಾಗದಲ್ಲೇ ಮಾಂಸ ಅಂಗಡಿಗಳ ಕಾರ್ಯಾಚರಣೆ
  • ಅಕ್ರಮ ಕಸಾಯಿಖಾನೆಗಳ ವಿರುದ್ಧ ಕ್ರಮಕ್ಕೆ ಆಗ್ರಹ
  • ನಾಲ್ಕು ವರ್ಷಗಳ ಹಿಂದೆ ಜಿಲ್ಲಾಧಿಕಾರಿಗಳಿಂದ ತೆರವು ಆದೇಶ
  • ಇನ್ನೂ ತೆರವು ಕಾರ್ಯವಾಗಿಲ್ಲವೆಂದು ಆರೋಪ
  • “ಅಧಿಕಾರಿಗಳು ಮಾಂಸ ವ್ಯಾಪಾರಿಗಳ ಜೊತೆ ಶಾಮೀಲು” ಎಂದು ಟೀಕೆ
  • ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
error: Content is protected !!