Home Blog

ಹಾಸ್ಟೆಲ್ ಶೌಚಾಲಯದಲ್ಲಿ ಕುಸಿದು 8ನೇ ತರಗತಿ ವಿದ್ಯಾರ್ಥಿನಿ ಸಾವು: ಹೃದಯಾಘಾತ ಶಂಕೆ?

ತುಮಕೂರು: ತಾಲೂಕಿನ ರಂಗಸಮುದ್ರ ಗ್ರಾಮದ ಬಳಿಯ ಕಸ್ತೂರಿಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

ಕಾರಗಾನಹಟ್ಟಿ ಗ್ರಾಮದ ನರಸಿಂಹಮೂರ್ತಿ ಮತ್ತು ಶಾರದಮ್ಮ ದಂಪತಿಯ 14 ವರ್ಷದ ಪುತ್ರಿ ಪ್ರಿಯಾಂಕಾ ಮೃತಪಟ್ಟ ವಿದ್ಯಾರ್ಥಿನಿ. ಈಕೆ ರಂಗಸಮುದ್ರದ ತ್ರಿಯಂಬಕೇಶ್ವರ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಿಯಾಂಕಾ ಚಿಕಿತ್ಸೆಗಾಗಿ ಸ್ವಗ್ರಾಮಕ್ಕೆ ತೆರಳಿದ್ದಳು. ಆರೋಗ್ಯ ಸುಧಾರಿಸಿದ ಬಳಿಕ ಆಗಸ್ಟ್ 7ರಂದು ಮತ್ತೆ ಹಾಸ್ಟೆಲ್‌ಗೆ ಮರಳಿದ್ದಳು ಎನ್ನಲಾಗಿದೆ.

ಶನಿವಾರ ಮುಂಜಾನೆ ಹಾಸ್ಟೆಲ್‌ನ ಶೌಚಾಲಯಕ್ಕೆ ತೆರಳಿದ್ದ ವೇಳೆ ಪ್ರಿಯಾಂಕಾ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣ ಹಾಸ್ಟೆಲ್ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಆಕೆ ಮೃತಪಟ್ಟಿದ್ದಾಳೆ.

ಬಾಲಕಿಗೆ ಹೃದಯಾಘಾತವಾಗಿರಬಹುದು ಎಂದು ಶಂಕಿಸಲಾಗಿದ್ದು, ಸಾವಿಗೆ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಳಿಕ ತಿಳಿದುಬರಬೇಕಿದೆ.

ಘಟನೆಯ ಬಳಿಕ ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಪಾವಗಡ ತಹಶೀಲ್ದಾರ್ ವೈ. ರವಿ ಹಾಗೂ ಪಾವಗಡ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಬಾಲಕಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಘಟನೆ ಸಂಬಂಧ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಎರಡನೇ ದಿನವೂ ಬರ ಪರಿಸ್ಥಿತಿ ಅವಲೋಕನ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗದಗ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಸತತ ಎರಡನೇ ದಿನವೂ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸಿದರು.

ಶನಿವಾರ ಶಿರಹಟ್ಟಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಎರಡೂ ತಾಲೂಕುಗಳ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಮಳೆಯ ಪ್ರಮಾಣ, ಬಿತ್ತನೆ ಪ್ರದೇಶ, ಬೆಳೆಗಳ ಸ್ಥಿತಿ, ಬೆಳೆ ಹಾನಿ ಹಾಗೂ ರೈತರ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದರು.

ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೆಳೆ ಹಾನಿಯ ವಾಸ್ತವಿಕ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿ ಸಲ್ಲಿಸುವಂತೆಯೂ ನಿರ್ದೇಶನ ನೀಡಿದರು.

ಸಭೆಯ ಬಳಿಕ ಸಚಿವ ರಾಯರಡ್ಡಿ ಅವರು ಛಬ್ಬಿ ಗ್ರಾಮಕ್ಕೆ ತೆರಳಿ ಮೆಕ್ಕೆಜೋಳದ ಜಮೀನಿನಲ್ಲಿ ಬೆಳೆ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು. ಮಳೆಯ ಕೊರತೆಯಿಂದ ಬೆಳೆಗಳ ಬೆಳವಣಿಗೆಗೆ ಉಂಟಾಗಿರುವ ಪರಿಣಾಮವನ್ನು ವೀಕ್ಷಿಸಿ, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದರು.

ಈ ವೇಳೆ ರೈತರು ಮಳೆ ಕೊರತೆ, ಬೆಳೆ ಹಾನಿ ಹಾಗೂ ಕೃಷಿ ಚಟುವಟಿಕೆಗಳಲ್ಲಿನ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ರೈತರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಶೀಲಿಸಿ ವಾಸ್ತವಿಕ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ರಾಯರಡ್ಡಿ, ಬರ ಪರಿಸ್ಥಿತಿಯಿಂದ ರೈತರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ಶಿರಹಟ್ಟಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಜಂಟಿ ನಿರ್ದೇಶಕ ಚಿದಾನಂದ, ಶಿರಹಟ್ಟಿ ತಹಶೀಲ್ದಾರ್ ರಾಘವೇಂದ್ರ, ಲಕ್ಷ್ಮೇಶ್ವರ ತಹಶೀಲ್ದಾರ್ ಧನಂಜಯ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

“ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಸ್ಥಳೀಯವಾಗಿ ಪರಿಶೀಲಿಸಿ ವಾಸ್ತವಿಕ ವರದಿ ಸಲ್ಲಿಸಬೇಕು. ಬರ ಪರಿಸ್ಥಿತಿಯಿಂದ ರೈತರಿಗೆ ತೊಂದರೆಯಾಗದಂತೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು.”
ಬಸವರಾಜ ರಾಯರಡ್ಡಿ, ಸಂಪುಟ ದರ್ಜೆ ಸಚಿವ

ಗುಡ್ಡಗಾಡಿನಲ್ಲಿ ಗರ್ಜಿಸಿದ ಸೈಕ್ಲಿಸ್ಟ್‌ಗಳು

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಯಲಿಶಿರುಂಜ ಗುಡ್ಡಗಾಡು ಪ್ರದೇಶದಲ್ಲಿ ನಡೆದ ೨೧ನೇ ರಾಜ್ಯ ಮಟ್ಟದ ಸೈಕ್ಲಿಂಗ್‌ ಸ್ಪರ್ಧೆ ಅತ್ಯಂತ ರೋಚಕವಾಗಿ ನಡೆಯಿತು. ಕರ್ನಾಟಕ ರಾಜ್ಯ ಹಾಗೂ ಗದಗ ಜಿಲ್ಲಾ ಅಮೇಚೂರ್ ಸೈಕ್ಲಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ರಾಜ್ಯದ ೧೬ ಜಿಲ್ಲೆಗಳಿಂದ ೧೮೦ ಸೈಕ್ಲಿಸ್ಟ್‌ಗಳು ಪಾಲ್ಗೊಂಡು ತಮ್ಮ ಕ್ರೀಡಾ ಸಾಮರ್ಥ್ಯ ಪ್ರದರ್ಶಿಸಿದರು.

ಸ್ಪರ್ಧೆ ಆರಂಭವಾಗುತ್ತಿದ್ದಂತೆ ಸೈಕ್ಲಿಸ್ಟ್‌ಗಳು ಬಿರುಗಾಳಿಯ ವೇಗದಲ್ಲಿ ಟ್ರ್ಯಾಕ್‌ನಲ್ಲಿ ಮುನ್ನುಗ್ಗಿದರು. ಗುಡ್ಡಗಾಡಿನ ಕಠಿಣ ಹಾದಿ, ತಿರುವುಗಳು ಹಾಗೂ ಏರಿಳಿತಗಳ ನಡುವೆ ಗೆಲುವಿಗಾಗಿ ಕ್ರೀಡಾಪಟುಗಳು ನಡೆಸಿದ ಪೈಪೋಟಿ ಪ್ರತಿ ಕ್ಷಣವೂ ಕುತೂಹಲ ಮೂಡಿಸಿತು.

ಯಾರು ಮುನ್ನಡೆ ಸಾಧಿಸಲಿದ್ದಾರೆ, ಕೊನೆಯ ಕ್ಷಣದಲ್ಲಿ ಗೆಲುವಿನ ಗುರಿ ಮುಟ್ಟುವವರು ಯಾರು ಎಂಬ ಕುತೂಹಲದ ನಡುವೆ ಸೈಕ್ಲಿಸ್ಟ್‌ಗಳು ಪ್ರದರ್ಶಿಸಿದ ಕೌಶಲ್ಯ ನೆರೆದಿದ್ದ ಸಹಸ್ರಾರು ಕ್ರೀಡಾಭಿಮಾನಿಗಳನ್ನು ರೋಮಾಂಚನಗೊಳಿಸಿತು.

ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಗದಗ ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ಮುಳಗುಂದ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಆಗಮಿಸಿದ್ದರು.

ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳು ಹಾಗೂ ಯುವಕರು ಸೈಕ್ಲಿಂಗ್ ಸ್ಪರ್ಧೆಯನ್ನು ಕಣ್ತುಂಬಿಕೊಂಡು, ತಾವೂ ಮುಂದಿನ ದಿನಗಳಲ್ಲಿ ಈ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂಬ ಉತ್ಸಾಹ ಪಡೆದುಕೊಂಡರು. ಗುಡ್ಡಗಾಡಿನ ಪ್ರದೇಶದಲ್ಲಿ ನಡೆದ ಸ್ಪರ್ಧೆ ಕ್ರೀಡಾಪಟುಗಳ ಸಾಮರ್ಥ್ಯಕ್ಕೆ ಸವಾಲಾಗುವುದರ ಜೊತೆಗೆ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ‘ಅಭಿಪ್ರಾಯ’ ಸಂಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕಾತಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ವತಿಯಿಂದ ಬ್ಲಾಕ್‌ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ಆರಂಭವಾಗಿದ್ದು, ಗದಗ ಜಿಲ್ಲೆಯ ವಿವಿಧ ಬ್ಲಾಕ್‌ಗಳಲ್ಲಿ ಆ.9ರಿಂದ 11ರವರೆಗೆ ಅಭಿಪ್ರಾಯ ಸಂಗ್ರಹಣಾ ಸಭೆಗಳು ನಡೆಯಲಿವೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಂದ ನೇರವಾಗಿ ಅಭಿಪ್ರಾಯ ಪಡೆಯಲಾಗುವುದು. ಇದಕ್ಕಾಗಿ ಎಐಸಿಸಿ ಕಾರ್ಯದರ್ಶಿ ವಿವೇಕ ಬನ್ಸಾಲ ಅವರನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸತೀಶ ಮೆಹರವಾಡೆ ಹಾಗೂ ರಾಬರ್ಟ್ ದದ್ದಾಪೂರಿ ಸಹವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಆ.9ರಂದು ಮೂರು ಬ್ಲಾಕ್‌ಗಳಲ್ಲಿ ಸಭೆ

ಆ.9ರಂದು ಬೆಳಿಗ್ಗೆ 10ಕ್ಕೆ ಶಿರಹಟ್ಟಿ ಬ್ಲಾಕ್, ಮಧ್ಯಾಹ್ನ 1ಕ್ಕೆ ಲಕ್ಷ್ಮೇಶ್ವರ ಬ್ಲಾಕ್ ಹಾಗೂ ಸಂಜೆ 4ಕ್ಕೆ ಮುಂಡರಗಿ ಬ್ಲಾಕ್ ಕಾಂಗ್ರೆಸ್ ಕಚೇರಿಗಳಲ್ಲಿ ಅಭಿಪ್ರಾಯ ಸಂಗ್ರಹಣಾ ಸಭೆಗಳು ನಡೆಯಲಿವೆ.

ಆ.10ರಂದು ನಾಲ್ಕು ಬ್ಲಾಕ್‌ಗಳಲ್ಲಿ

ಆ.10ರಂದು ಬೆಳಿಗ್ಗೆ 10ಕ್ಕೆ ರೋಣ ಮತ್ತು ನರೇಗಲ್ ಬ್ಲಾಕ್‌, ಮಧ್ಯಾಹ್ನ 2ಕ್ಕೆ ಹೊಳೆಆಲೂರು ಬ್ಲಾಕ್ ಹಾಗೂ ಸಂಜೆ 4ಕ್ಕೆ ನರಗುಂದ ಬ್ಲಾಕ್‌ನಲ್ಲಿ ಸಭೆ ನಡೆಯಲಿದೆ.

ಆ.11ರಂದು ಗದಗ, ಮುಳಗುಂದ

ಆ.11ರಂದು ಬೆಳಿಗ್ಗೆ 11ಕ್ಕೆ ಗದಗ ಮತ್ತು ಮುಳಗುಂದ ಬ್ಲಾಕ್‌ ಹಂತದಲ್ಲಿ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಯಲಿದೆ. ವೀಕ್ಷಕರು ಹಾಗೂ ಸಹವೀಕ್ಷಕರು ಪ್ರತಿಯೊಂದು ಬ್ಲಾಕ್‌ಗೆ ಭೇಟಿ ನೀಡಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಿದ್ದಾರೆ.

ಜಿಲ್ಲೆಯ ಎಲ್ಲ ಕಾಂಗ್ರೆಸ್ ಮುಖಂಡರು, ಬ್ಲಾಕ್‌ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಗಳಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ನೀಡಬೇಕು ಎಂದು ಜಿ.ಎಸ್. ಪಾಟೀಲ ಮನವಿ ಮಾಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಸಕ್ತಿ ಹೊಂದಿರುವವರು ತಮ್ಮ ಅರ್ಜಿಗಳನ್ನು ಇದೇ ಸಂದರ್ಭದಲ್ಲಿ ಸಲ್ಲಿಸಬಹುದಾಗಿದೆ. ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಎಲ್ಲರೂ ಸಭೆಗಳಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ತಿಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗದಗದಲ್ಲಿ ಅಧಿಕಾರಿಗಳ ‘ಠಿಕಾಣಿ’ಗೆ ಬ್ರೇಕ್ ಹಾಕಿ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಒಂದೇ ಕಡೆ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕು ಸೇರಿದಂತೆ ಹಲವು ಸಾರ್ವಜನಿಕ ಹಿತದ ಬೇಡಿಕೆಗಳನ್ನು ಈಡೇರಿಸುವಂತೆ ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಅವರು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿಗೆ ಮನವಿ ಸಲ್ಲಿಸಿದರು.

ಗದಗ ನಗರಕ್ಕೆ ಭೇಟಿ ನೀಡಿದ್ದ ಉಪಲೋಕಾಯುಕ್ತರನ್ನು ಭೇಟಿಯಾದ ಅವರು, ಜಿಲ್ಲೆಯಿಂದ ವರ್ಗಾವಣೆಯಾಗಿರುವ ಅಧಿಕಾರಿಗಳು ಮತ್ತೆ ಇದೇ ಜಿಲ್ಲೆಗೆ ಅಥವಾ ಇಲಾಖೆಗೆ ಮರಳಿ ಬಂದು ಕಾರ್ಯನಿರ್ವಹಿಸುತ್ತಿರುವುದರಿಂದ ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಗಮನ ಸೆಳೆದರು.

ದೀರ್ಘಕಾಲದಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವರ್ಗಾವಣೆ ಮಾಡುವುದರ ಜತೆಗೆ, ವರ್ಗಾವಣೆಯಾದವರು ಪುನಃ ಇದೇ ಜಿಲ್ಲೆಗೆ ಬಾರದಂತೆ ಸೂಕ್ತ ಕಾನೂನು ರೂಪಿಸಲು ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಒತ್ತಾಯಿಸಿದರು.

ನಗರದ ಹೃದಯಭಾಗದಲ್ಲಿರುವ ಗಾಂಧಿ ವೃತ್ತದ ಬಳಿಯ ಹಳೆ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ನವೀಕರಿಸಿ 50 ಹಾಸಿಗೆಗಳ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಬೇಕು. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರು, ಹಿರಿಯ ನಾಗರಿಕರು ಹಾಗೂ ವೃದ್ಧರಿಗೆ ಹೆಚ್ಚಿನ ಆರೋಗ್ಯ ಸೌಲಭ್ಯ ದೊರೆಯಲಿದೆ ಎಂದು ಮನವಿಯಲ್ಲಿ ತಿಳಿಸಿದರು.

ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿಯೂ ಪೂರ್ಣ ಪ್ರಮಾಣದ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಇದರಿಂದ ಗದಗ ನಗರ ಸೇರಿದಂತೆ ಸುತ್ತಮುತ್ತಲಿನ 25ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ. ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪೂರ್ಣ ಪ್ರಮಾಣದ ಚಿಕಿತ್ಸೆಗೆ ಅವಕಾಶ ಕಲ್ಪಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯದ ಅಧಿಕಾರಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಅಗತ್ಯ ಸಿಬ್ಬಂದಿ ನೇಮಕ ಮಾಡಬೇಕು. ಅಂಗನವಾಡಿ ಕೇಂದ್ರಗಳ ದುರಸ್ತಿ ಹಾಗೂ ಮೂಲಸೌಕರ್ಯ ಕಲ್ಪಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಹಿಂದೆ ಇದ್ದ ಗದಗ–ಬೆಟಗೇರಿ ಅವಳಿ ನಗರ ಸಾರಿಗೆ ಬಸ್‌ಗಳ ಸಂಚಾರವನ್ನು ಪುನರಾರಂಭಿಸಬೇಕು ಎಂದು ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು, ಸಾರ್ವಜನಿಕ ಹಿತಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಸಂಬಂಧಿಸಿದ ಇಲಾಖೆಗೆ ರವಾನಿಸಿ ಅಗತ್ಯ ಕ್ರಮಕ್ಕೆ ಸೂಚಿಸಲಾಗುವುದು ಎಂದು ತಿಳಿಸಿದರು.

“ಜಿಲ್ಲೆಯ ಜನರ ಹಿತದೃಷ್ಟಿಯಿಂದ ಸಲ್ಲಿಸಿರುವ ಬೇಡಿಕೆಗಳ ಬಗ್ಗೆ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು.”
— ಕೆ.ಎನ್. ಫಣೀಂದ್ರ, ಉಪಲೋಕಾಯುಕ್ತ ನ್ಯಾಯಮೂರ್ತಿ

ಆರೋಗ್ಯದ ಫಿಟ್‌ನೆಸ್‌ಗೆ ಸೈಕ್ಲಿಂಗ್ ಬೆಸ್ಟ್: ಕೃಷ್ಣಗೌಡ ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ದೇಹದ ಫಿಟ್‌ನೆಸ್ ಕಾಪಾಡಿಕೊಳ್ಳಲು ಸೈಕ್ಲಿಂಗ್‌ನಷ್ಟು ಉತ್ತಮ ವ್ಯಾಯಾಮ ಮತ್ತೊಂದಿಲ್ಲ. ಮಕ್ಕಳು ನಿತ್ಯ ಸೈಕ್ಲಿಂಗ್ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.

ಪಟ್ಟಣದ ಯಲಿಶಿರುಂಜ ಗುಡ್ಡದಲ್ಲಿ ಕರ್ನಾಟಕ ರಾಜ್ಯ ಗದಗ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಮೌಂಟನ್ ಸೈಕ್ಲಿಂಗ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗದಗ ಜಿಲ್ಲೆ ಕ್ರೀಡಾಪಟುಗಳ ತೌರಾಗಿದ್ದು, ಕ್ರೀಡೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಹೊಂದಿದೆ. ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣಗಳಿದ್ದು, ಕ್ರೀಡಾ ಚಟುವಟಿಕೆಗಳಿಗೆ ಮುಳಗುಂದ ಪಟ್ಟಣವೂ ಸಾಕಷ್ಟು ಸಹಕಾರ ನೀಡುತ್ತಿದೆ. ಇದರಿಂದ ಹಲವು ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ ಎಂದರು.

ಮೌಂಟನ್ ಸೈಕ್ಲಿಂಗ್ ರೋಚಕ ಕ್ರೀಡೆಯಾಗಿದ್ದು, ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡೆಯ ಮೂಲಕ ಪ್ರತಿಭೆ ಹೊರಹೊಮ್ಮುವುದರ ಜತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯವೂ ಉತ್ತಮವಾಗುತ್ತದೆ ಎಂದು ಹೇಳಿದರು.

ಮುಳಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಸುಂಕಾಪುರ ಮಾತನಾಡಿ, ಮುಳಗುಂದದಲ್ಲಿ ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅವರ ಭವಿಷ್ಯಕ್ಕೆ ಉತ್ತಮ ಅವಕಾಶಗಳು ದೊರೆಯಲಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ. ಕಣವಿ ವಹಿಸಿದ್ದರು. ಎಸ್.ಎಂ. ನೀಲಗುಂದ, ಎಂ.ಡಿ. ಬಟ್ಟೂರ, ಡಾ. ಎಸ್.ಸಿ. ಚವಡಿ, ಜಿ.ವಿ. ಪಾಟೀಲ, ಪೊಲೀಸ್ ಇನ್ಸ್‌ಪೆಕ್ಟರ್ ಜಿ.ಬಿ. ಸುಬ್ಬಾಪೂರಮಠ, ನಾಗರಾಜ ದೇಶಪಾಂಡೆ, ಕೆ.ಎಲ್. ಕರಿಗೌಡ್ರ, ಅಶೋಕ ಹುಣಸಿಮರದ, ಎಂ.ಕೆ. ಡಾಲಾಯತ, ವಿಲಾಸ ನೀಲಗುಂದ, ಎಸ್.ಎಂ. ಕುರಣಿ, ಐಶ್ವರ್ಯ ಕರಿಗಾರ, ಪವಿತ್ರಾ ಕುರ್ತಕೋಟಿ ಸೇರಿದಂತೆ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್‌ನ ಸದಸ್ಯರು ಉಪಸ್ಥಿತರಿದ್ದರು.

“ದೇಹದ ಫಿಟ್‌ನೆಸ್ ಕಾಯ್ದುಕೊಳ್ಳಲು ಸೈಕ್ಲಿಂಗ್‌ನಷ್ಟು ಉತ್ತಮ ವ್ಯಾಯಾಮ ಇನ್ನೊಂದಿಲ್ಲ. ಮಕ್ಕಳು ನಿತ್ಯ ಸೈಕ್ಲಿಂಗ್ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು.”
— ಕೃಷ್ಣಗೌಡ ಪಾಟೀಲ, ಅಧ್ಯಕ್ಷರು, ಗದಗ ಜಿಲ್ಲಾ ಯುವ ಕಾಂಗ್ರೆಸ್

ವೀರನಾರಾಯಣನ ದರ್ಶನ ಪಡೆದ ಉಪಲೋಕಾಯುಕ್ತರು

0

ವಿಜಯಸಾಕ್ಷಿ ಸುದ್ದಿ, ಗದಗ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಶುಕ್ರವಾರ ಗದಗ ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ವೀರನಾರಾಯಣನ ದರ್ಶನ ಪಡೆದರು.

ದೇವಸ್ಥಾನಕ್ಕೆ ಆಗಮಿಸಿದ ನ್ಯಾಯಮೂರ್ತಿ ಫಣೀಂದ್ರ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ವೀರನಾರಾಯಣ ದೇವಸ್ಥಾನದ ಇತಿಹಾಸ, ಪರಂಪರೆ ಹಾಗೂ ಧಾರ್ಮಿಕ ಮಹತ್ವದ ಕುರಿತು ಅವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು ಹಾಗೂ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ್, ಸುನೀಲಕುಮಾರ್ ಆರ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ, ಉಪಾಧೀಕ್ಷಕ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಉಪಸ್ಥಿತರಿದ್ದರು.

ಕಳಪೆ ಬದನೆ ಸಸಿ ಮಾರಾಟ: ನರ್ಸರಿಗೆ ₹6.25 ಲಕ್ಷ ದಂಡ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಉತ್ತಮ ಗುಣಮಟ್ಟದ ಹಾಗೂ ಅಧಿಕ ಇಳುವರಿ ನೀಡುವ ಹಸಿರು ಬದನೆ ಸಸಿಗಳೆಂದು ನಂಬಿಸಿ ಕಳಪೆ ಗುಣಮಟ್ಟದ ಬಿಳಿ ಬದನೆ ಸಸಿಗಳನ್ನು ರೈತರಿಗೆ ಮಾರಾಟ ಮಾಡಿದ್ದ ತಡಕೋಡದ ಕೆ.ಕೆ. ಅಗ್ರಿ ನರ್ಸರಿಗೆ ಒಟ್ಟು ₹6.25 ಲಕ್ಷ ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ಧಾರವಾಡ ತಾಲೂಕಿನ ಮಂಗಳಗಟ್ಟಿ ಹಾಗೂ ಮುಳಮುತ್ತಲ ಗ್ರಾಮದ ರೈತರಾದ ವಿರುಪಾಕ್ಷಪ್ಪ ಸಬರದ, ಬಾಳಪ್ಪ ಪೂಜಾರ, ಶಂಕರಗೌಡ ಗೌಡರ, ನಾಗಪ್ಪ ಮುಮ್ಮಿಗಟ್ಟಿ ಹಾಗೂ ಯಲ್ಲನಗೌಡ ಪಾಟೀಲ ಅವರು ತಮ್ಮ ಜಮೀನುಗಳಲ್ಲಿ ನಾಟಿ ಮಾಡಲು ಕೆ.ಕೆ. ಅಗ್ರಿ ನರ್ಸರಿಯಿಂದ ಬದನೆ ಸಸಿಗಳನ್ನು ಖರೀದಿಸಿದ್ದರು.

ನರ್ಸರಿಯವರು ಉತ್ತಮ ಗುಣಮಟ್ಟದ ಹಾಗೂ ಅಧಿಕ ಇಳುವರಿ ನೀಡುವ ಹಸಿರು ಬದನೆಕಾಯಿ ತಳಿಯ ಸಸಿಗಳು ಎಂದು ರೈತರನ್ನು ನಂಬಿಸಿ ಸಸಿಗಳನ್ನು ಮಾರಾಟ ಮಾಡಿದ್ದರು. ರೈತರು ಸಸಿಗಳನ್ನು ಜಮೀನಿನಲ್ಲಿ ನಾಟಿ ಮಾಡಿ, ಸೂಕ್ತ ಗೊಬ್ಬರ ಹಾಗೂ ನೀರು ನೀಡಿ ಆರೈಕೆ ಮಾಡಿದ್ದರು.

ಆದರೆ ಬೆಳೆ ಬಂದಾಗ ಹಸಿರು ಬದನೆಕಾಯಿ ಬದಲಾಗಿ ಬಿಳಿ ಬದನೆಕಾಯಿ ಬಂದಿದ್ದು, ನರ್ಸರಿಯವರು ಹೇಳಿದ್ದಕ್ಕಿಂತ ಅತ್ಯಂತ ಕಡಿಮೆ ಇಳುವರಿ ದೊರೆತಿದೆ. ಇದರಿಂದ ತಮಗೆ ಅಪಾರ ಪ್ರಮಾಣದ ಆರ್ಥಿಕ ನಷ್ಟ ಉಂಟಾಗಿದೆ ಎಂದು ರೈತರು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಕೆ.ಕೆ. ಅಗ್ರಿ ನರ್ಸರಿಯವರಿಂದ ಸೇವಾ ನ್ಯೂನತೆ ಉಂಟಾಗಿದೆ ಎಂದು ಆರೋಪಿಸಿ ಐವರು ರೈತರು 2026ರ ಮಾರ್ಚ್ 5ರಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ಪ್ರತ್ಯೇಕ ದೂರುಗಳನ್ನು ಸಲ್ಲಿಸಿದ್ದರು.

ವಿಚಾರಣೆಗೆ ಹಾಜರಾಗದ ನರ್ಸರಿ

ದೂರುಗಳ ವಿಚಾರಣೆ ನಡೆಸಿದ ಆಯೋಗ, ಎದುರುದಾರರಾದ ಕೆ.ಕೆ. ಅಗ್ರಿ ನರ್ಸರಿಗೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ನರ್ಸರಿಯವರು ಆಯೋಗದ ಮುಂದೆ ಹಾಜರಾಗದೆ ಗೈರು ಉಳಿದಿದ್ದರು.

ರೈತರ ದೂರಿನ ಹಿನ್ನೆಲೆಯಲ್ಲಿ ಧಾರವಾಡ ತೋಟಗಾರಿಕೆ ಇಲಾಖೆ, ಬಾಗಲಕೋಟೆ ತೋಟಗಾರಿಕೆ ಇಲಾಖೆಯ ವಿಜ್ಞಾನಿಗಳು ಹಾಗೂ ಅಧಿಕಾರಿಗಳಿಗೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬದನೆ ಬೆಳೆ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು.

ಅದರಂತೆ ತಜ್ಞರು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಬಿಳಿ ಬದನೆ ಸಸಿಗಳನ್ನು ಮಾರಾಟ ಮಾಡಿರುವುದರಿಂದ ರೈತರಿಗೆ ನಷ್ಟ ಉಂಟಾಗಿದೆ ಎಂದು ವರದಿ ನೀಡಿದ್ದರು.

ತಜ್ಞರ ವರದಿ ಸೇರಿದಂತೆ ಲಭ್ಯವಿದ್ದ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ, ಕೆ.ಕೆ. ಅಗ್ರಿ ನರ್ಸರಿಯವರಿಂದ ರೈತರಿಗೆ ಸೇವಾ ನ್ಯೂನತೆ ಉಂಟಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ತಲಾ ₹1.25 ಲಕ್ಷ ಪರಿಹಾರ

ರೈತರಿಗೆ ಉಂಟಾದ ಬೆಳೆ ನಷ್ಟ, ಅನಾನುಕೂಲ ಹಾಗೂ ಮಾನಸಿಕ ಹಿಂಸೆಯನ್ನು ಪರಿಗಣಿಸಿದ ಆಯೋಗ, ಐವರು ರೈತರಿಗೆ ತಲಾ ₹1.25 ಲಕ್ಷದಂತೆ ಒಟ್ಟು ₹6.25 ಲಕ್ಷ ಪರಿಹಾರ ನೀಡುವಂತೆ ಕೆ.ಕೆ. ಅಗ್ರಿ ನರ್ಸರಿಗೆ ನಿರ್ದೇಶಿಸಿದೆ.

ತೀರ್ಪು ನೀಡಿದ ಒಂದು ತಿಂಗಳೊಳಗೆ ಪರಿಹಾರ ಮೊತ್ತವನ್ನು ರೈತರಿಗೆ ಪಾವತಿಸಬೇಕು ಎಂದು ಗ್ರಾಹಕರ ಆಯೋಗ ಆದೇಶಿಸಿದೆ.

ಐವರು ರೈತರಿಗೆ ತಲಾ ₹1.25 ಲಕ್ಷ — ಒಟ್ಟು ₹6.25 ಲಕ್ಷ ಪರಿಹಾರ ದೊರಕಿದಂತಾಗಿದೆ.

ಹಕ್ಕು–ಸೌಲಭ್ಯಗಳಿಗಾಗಿ ಸಂಘಟಿತ ಹೋರಾಟ ಅಗತ್ಯ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಹುಬ್ಬಳ್ಳಿಯಲ್ಲಿ ಅ. 9ರಂದು ನಡೆಯಲಿರುವ 32ನೇ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯದ ಆದಿವಾಸಿ ಹಾಗೂ ಬುಡಕಟ್ಟು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಘಟನೆಯ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಆದಿವಾಸಿ ಹಿರಿಯ ನಾರಾಯಣ ಹರಣಶಿಕಾರಿ ಕರೆ ನೀಡಿದರು.

ಡಂಬಳ ಹೋಬಳಿಯ ಜಂತ್ಲಿ ಶಿರೂರ ಗ್ರಾಮದಲ್ಲಿ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ ಹಕ್ಕಿಪಿಕ್ಕಿ, ಹರಣಶಿಕಾರಿ, ಪಾರದಿ ಶಿಕಾರಿ ಸೇರಿದಂತೆ ವಿವಿಧ ಸಮುದಾಯಗಳ ಸಂಘಟನೆಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಹರಣಶಿಕಾರಿ ಹಾಗೂ ಪಾರದಿ ಸಮುದಾಯಗಳ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ 49 ಆದಿವಾಸಿ ಬುಡಕಟ್ಟು ಸಮುದಾಯಗಳು ಹಾಗೂ 32 ಅಂತರ ಸಮುದಾಯಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ಮತ್ತು ಸೆಟ್ಲ್‌ಮೆಂಟ್ ಪ್ರದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಆದಿವಾಸಿ ಸಮುದಾಯಗಳಿಗೆ ಸರ್ಕಾರದಿಂದ ದೊರೆಯಬೇಕಾದ ಹಕ್ಕು ಮತ್ತು ಸೌಲಭ್ಯಗಳನ್ನು ಪಡೆಯಲು ಸಂಘಟಿತ ಹೋರಾಟ ಅಗತ್ಯ. ಜೊತೆಗೆ ಸಮುದಾಯಗಳ ಸಾಂಪ್ರದಾಯಿಕ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಮಾರುತಿ ಪಗಲೆಪ್ಪ ಹರಣಶಿಕಾರಿ, ಮಾರುತಿ ಗಂಗಪ್ಪ ಹರಣಶಿಕಾರಿ, ರಾಮಣ್ಣ ಗೋವಿಂದಪ್ಪ ಹರಣಶಿಕಾರಿ, ಅರ್ಜುನ್ ಅಪ್ಪನ ಕಟ್ಟಿಮನಿ, ಶೇಖಪ್ಪ ರಾಮಪ್ಪ ಚವಾಣ್, ಅಣ್ಣಪ್ಪ ಗೋಪಾಲ್ ಹರಣಶಿಕಾರಿ, ಚಂದ್ರು ಬಸಪ್ಪ ಹರಣಶಿಕಾರಿ, ನಾಗಪ್ಪ ಜಾರಪ್ಪ ಹರಣಶಿಕಾರಿ, ಮಲ್ಲೇಶ್ ಬಸಪ್ಪ ಲಕ್ಕುಂಡಿ, ಬಸವರಾಜ ಬಾಲಪ್ಪ ಚವಾಣ, ಬಸವರಾಜ ಮಾರುತಿ ಚವಾಣ, ಮಲ್ಲಪ್ಪ ಬಸಪ್ಪ ಹರಣಶಿಕಾರಿ, ಚೆನ್ನಪ್ಪ ಬಸಪ್ಪ ಹರಣಶಿಕಾರಿ, ಬಸವರಾಜ ಗಂಗಪ್ಪ ಹರಣಶಿಕಾರಿ, ದಲ್ಲಪ್ಪ ಅಪ್ಪಣ್ಣ ಕಟ್ಟಿಮನಿ ಸೇರಿದಂತೆ ಸಮುದಾಯದ ಹಿರಿಯರು, ಯುವಕರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

ಗದಗ ಜಿಲ್ಲೆ ಬರಪೀಡಿತವೆಂದು ಘೋಷಿಸಲು ಆಗ್ರಹಿಸಿ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಸಮಯಕ್ಕೆ ಸರಿಯಾಗಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಅಗತ್ಯ ನೆರವು ನೀಡಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ.

ಗದಗ ಜಿಲ್ಲೆಗೆ ಬರ ಅಧ್ಯಯನಕ್ಕಾಗಿ ಪ್ರಪ್ರಥಮ ಬಾರಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ವೇದಿಕೆ ವತಿಯಿಂದ ಸ್ವಾಗತಿಸಿ ಮನವಿ ಸಲ್ಲಿಸಲಾಯಿತು.

ಮಳೆ ಕೊರತೆಯಿಂದ ಪ್ರಸಕ್ತ ಸಾಲಿನ ಬೆಳೆಗಳು ಹಾನಿಗೊಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಚಿವರು ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಸಮಗ್ರವಾಗಿ ಪರಿಶೀಲಿಸಿ, ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಲಪ್ಪ ವರವಿ ಮನವಿ ಮಾಡಿದರು.

ಇದರೊಂದಿಗೆ 2025-26ನೇ ಸಾಲಿನ ಬೆಳೆ ಪರಿಹಾರ ಇನ್ನೂ ರೈತರ ಕೈ ಸೇರಿಲ್ಲ. ಬಾಕಿ ಇರುವ ಪರಿಹಾರವನ್ನು ಅರ್ಹ ರೈತರಿಗೆ ಶೀಘ್ರವಾಗಿ ವಿತರಿಸಬೇಕು. 2026-27ನೇ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿಯನ್ನೂ ನಿಖರವಾಗಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಬರ ಘೋಷಣೆ ಸೇರಿದಂತೆ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಗದಗ ಜಿಲ್ಲಾಧ್ಯಕ್ಷ ಸಣ್ಣೆಲಪ್ಪ ರಾಮಣ್ಣ ವಳಗೇರಿ, ಜಗದೀಶ ಕರಡಿಗುಡ್ಡ, ಕುಮಾರ ಲಮಾಣಿ, ಸಂತೋಷ ರಾಥೋಡ, ಚಂದ್ರು ಈಟಿ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.