ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಅಮೆರಿಕ ನಡುವಿನ ಸಂಘರ್ಷ ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯ ಹಿನ್ನೆಲೆ ದೇಶದಲ್ಲಿ ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ವಿಶೇಷ ಭದ್ರತಾ ಪಡೆ ಬಳಸುವ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇ.50ರಷ್ಟು ಕಡಿತಗೊಳಿಸಲು ಸೂಚನೆ ನೀಡಲಾಗಿದೆ.
ಮಿತವ್ಯಯ ಕ್ರಮಗಳ ಭಾಗವಾಗಿ ಇತ್ತೀಚೆಗೆ ನಡೆದ ಗುಹಾವಾಟಿ ಮತ್ತು ವಡೋದರಾ ಭೇಟಿಗಳ ಸಂದರ್ಭದಲ್ಲೂ ಕಡಿಮೆ ವಾಹನಗಳೊಂದಿಗೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಈ ಮೂಲಕ ಸಾರ್ವಜನಿಕರಿಗೆ ಮಾತ್ರವಲ್ಲ, ಸರ್ಕಾರವೂ ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳನ್ನು ಅನುಸರಿಸುತ್ತಿದೆ ಎಂಬ ಸಂದೇಶ ರವಾನಿಸಲಾಗಿದೆ.
ಇದಲ್ಲದೆ, ಪ್ರಧಾನಿ ಭದ್ರತೆಗೆ ಬಳಸುವ ಕೆಲವು ವಿಶೇಷ ಬೆಂಗಾವಲು ವಾಹನಗಳಲ್ಲಿ ಎಲೆಕ್ಟ್ರಿಕ್ ಕಾರುಗಳ ಬಳಕೆಗೆ ಸಹ ಅನುಮತಿ ನೀಡಲಾಗಿದೆ. ಇಂಧನ ಬಳಕೆಯನ್ನು ತಗ್ಗಿಸುವುದರ ಜೊತೆಗೆ ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆಗೆ ಸರ್ಕಾರ ಒತ್ತು ನೀಡುತ್ತಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರಧಾನ ಮಂತ್ರಿಗಳ ಕಚೇರಿ, ಪ್ರಧಾನಿ ಮೋದಿ ಭಾಷಣದ ಪ್ರತಿಗಳನ್ನು ಹಂಚಿಕೆ ಮಾಡಿದೆ ಎನ್ನಲಾಗಿದೆ. ಅದರಲ್ಲಿ ಜಾಗತಿಕ ಸಂಕಷ್ಟದ ಸಂದರ್ಭದಲ್ಲಿ ಅನುಸರಿಸಬೇಕಾದ ಮಿತವ್ಯಯ ಕ್ರಮಗಳು ಮತ್ತು ಕಾರ್ಯಯೋಜನೆಗಳ ಕುರಿತು ವಿವರಿಸಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ಕಾರ್ಯಯೋಜನೆಯಡಿ ನಾಗರಿಕರಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು, ಅನಗತ್ಯ ಇಂಧನ ಬಳಕೆಯನ್ನು ಕಡಿಮೆ ಮಾಡಲು ಹಾಗೂ ಅಗತ್ಯವಿಲ್ಲದ ಪ್ರಯಾಣಗಳನ್ನು ತಪ್ಪಿಸಲು ಕರೆ ನೀಡಲಾಗಿದೆ. ಸಭೆಗಳು ಮತ್ತು ಅಧಿಕೃತ ಕಾರ್ಯಗಳನ್ನು ಸಾಧ್ಯವಾದಷ್ಟು ಆನ್ಲೈನ್ ಮೂಲಕ ನಡೆಸುವಂತೆ ಸೂಚಿಸಲಾಗಿದೆ.
ಪಶ್ಚಿಮ ಏಷ್ಯಾದ ಅಸ್ಥಿರತೆಯಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಒತ್ತಡಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಡಳಿತದ ಕಾರ್ಯಕ್ಷಮತೆ ಮತ್ತು ಭದ್ರತಾ ಮಾನದಂಡಗಳನ್ನು ಕಾಪಾಡಿಕೊಂಡೇ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ಪ್ರಾಯೋಗಿಕ ಮಿತವ್ಯಯ ಕ್ರಮಗಳನ್ನು ಅನುಸರಿಸಬೇಕು ಎಂಬುದು ಪ್ರಧಾನಿ ಮೋದಿ ಆಶಯವಾಗಿದೆ ಎಂದು ಹೇಳಲಾಗಿದೆ.
ಈ ಕ್ರಮಗಳ ಪರಿಣಾಮ ಈಗಾಗಲೇ ಬಿಜೆಪಿ ಆಡಳಿತದ ಹಲವು ರಾಜ್ಯಗಳಲ್ಲಿ ಕಾಣಿಸಿಕೊಳ್ಳತೊಡಗಿದ್ದು, ಹಲವಾರು ನಾಯಕರು ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದ್ದಾರೆ.

