ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
ಪ್ರಸ್ತುತ ದಿನಕ್ಕೆ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು 6 ಸಾವಿರ ಕ್ಯೂಸೆಕ್ಗೆ ಇಳಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.
ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಮುಂದುವರಿಯದಿರುವುದು, ಜಲಾಶಯಗಳ ಒಳಹರಿವು ಗಣನೀಯವಾಗಿ ಕುಸಿದಿರುವುದು ಹಾಗೂ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ನೀರಾವರಿಗೆ ಎದುರಾಗಬಹುದಾದ ಸಂಕಷ್ಟವನ್ನು ಕರ್ನಾಟಕ ಸರ್ಕಾರ ತನ್ನ ಮೇಲ್ಮನವಿಯಲ್ಲಿ ಉಲ್ಲೇಖಿಸಿದೆ.
ಆಗಸ್ಟ್ನಲ್ಲಿ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನೀಡಿದ್ದ ಆದೇಶವು ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಉತ್ತಮ ಮುಂಗಾರು ಮಳೆಯಾಗಲಿದೆ ಎಂಬ ನಿರೀಕ್ಷೆಯನ್ನು ಆಧರಿಸಿತ್ತು. ಆದರೆ ಸೂಪರ್ ಎಲ್ ನಿನೊ ಪರಿಣಾಮದಿಂದ ಮುಂಗಾರು ದುರ್ಬಲಗೊಂಡಿದ್ದು, ಜಲಾಶಯಗಳಿಗೆ ಹರಿದುಬರುವ ನೀರಿನ ಪ್ರಮಾಣ ತೀವ್ರವಾಗಿ ಇಳಿಕೆಯಾಗಿದೆ ಎಂದು ಸರ್ಕಾರ ತಿಳಿಸಿದೆ.
ಆಗಸ್ಟ್ 18ರ ವೇಳೆಗೆ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಒಟ್ಟು 77.907 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಜೂನ್ 1ರಿಂದ ಆಗಸ್ಟ್ 18ರವರೆಗೆ ನಾಲ್ಕು ಪ್ರಮುಖ ಜಲಾಶಯಗಳಿಗೆ 88.662 ಟಿಎಂಸಿ ನೀರು ಒಳಹರಿವು ಬಂದಿದೆ. ದೀರ್ಘಾವಧಿಯ ಸರಾಸರಿ 169.452 ಟಿಎಂಸಿಗೆ ಹೋಲಿಸಿದರೆ ಶೇ.47.68ರಷ್ಟು ಕೊರತೆ ಉಂಟಾಗಿದೆ.
ಇನ್ನು ಜಲಾಶಯಗಳ ಒಳಹರಿವು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಆಗಸ್ಟ್ 10ರಂದು 25,964 ಕ್ಯೂಸೆಕ್ ಇದ್ದ ಒಳಹರಿವು ಆಗಸ್ಟ್ 14ರಂದು 15,060 ಕ್ಯೂಸೆಕ್ಗೆ ಹಾಗೂ ಆಗಸ್ಟ್ 18ರಂದು 13,141 ಕ್ಯೂಸೆಕ್ಗೆ ಇಳಿಕೆಯಾಗಿದೆ.
ಬಿಳಿಗುಂಡ್ಲುವಿನಲ್ಲಿ 12 ಸಾವಿರ ಕ್ಯೂಸೆಕ್ ನೀರು ಖಚಿತಪಡಿಸಲು ಜಲಾಶಯಗಳಿಂದ ಸುಮಾರು 15 ಸಾವಿರ ಕ್ಯೂಸೆಕ್ ಹೊರಹರಿವು ಮಾಡಬೇಕಾಗುತ್ತದೆ. ಇದರಿಂದ ಕರ್ನಾಟಕದ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಮತ್ತಷ್ಟು ಕುಸಿಯಲಿದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಕಬಿನಿ ಜಲಾಶಯದ ಒಳಹರಿವು ಕೂಡ ಆಗಸ್ಟ್ 17ರಂದು 7,747 ಕ್ಯೂಸೆಕ್ನಿಂದ ಆಗಸ್ಟ್ 18ರಂದು 6,457 ಕ್ಯೂಸೆಕ್ಗೆ ಇಳಿಕೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಿಳಿಗುಂಡ್ಲುವಿಗೆ 12 ಸಾವಿರ ಕ್ಯೂಸೆಕ್ ನೀರು ತಲುಪಿಸಲು ಕೆಆರ್ಎಸ್ನಿಂದಲೂ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಬೇಕಾಗಬಹುದು ಎಂದು ಸರ್ಕಾರ ಹೇಳಿದೆ.
ಕೆಆರ್ಎಸ್ ಜಲಾಶಯದಲ್ಲಿ ಪ್ರಸ್ತುತ 26.602 ಟಿಎಂಸಿ ಲೈವ್ ಸ್ಟೋರೇಜ್ ಇದ್ದು, ಜಲಾಶಯದ ಒಟ್ಟು ವಿನ್ಯಾಸ ಸಾಮರ್ಥ್ಯ 45.051 ಟಿಎಂಸಿಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದರೆ ಸುಮಾರು 1.959 ಲಕ್ಷ ಎಕರೆ ನೀರಾವರಿ ಪ್ರದೇಶ ಹಾಗೂ ಬೆಂಗಳೂರಿನ ಕುಡಿಯುವ ನೀರಿನ ಪೂರೈಕೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.
ರಾಜ್ಯದ ಕುಡಿಯುವ ನೀರು ಮತ್ತು ನೀರಾವರಿ ಅಗತ್ಯಗಳಿಗೆ ಸುಮಾರು 144 ಟಿಎಂಸಿ ಹಾಗೂ ಪರಿಸರ ಹರಿವಿಗೆ ಸುಮಾರು 10 ಟಿಎಂಸಿ ಸೇರಿದಂತೆ ಒಟ್ಟು 155 ಟಿಎಂಸಿ ನೀರು ಅಗತ್ಯವಿದೆ. ಆದರೆ ಸದ್ಯ ಜಲಾಶಯಗಳಲ್ಲಿ 77.907 ಟಿಎಂಸಿ ನೀರು ಮಾತ್ರ ಲಭ್ಯವಿದೆ.
ಮತ್ತೊಂದೆಡೆ, ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಸುಮಾರು 45 ಟಿಎಂಸಿ ನೀರು ಸಂಗ್ರಹವಿದೆ ಎಂದು ಕರ್ನಾಟಕ ಸರ್ಕಾರ ತನ್ನ ಮೇಲ್ಮನವಿಯಲ್ಲಿ ಉಲ್ಲೇಖಿಸಿದೆ. ಬರ ಪರಿಸ್ಥಿತಿಯಿಂದ ಸಾಂಬಾ ಭತ್ತದ ಬಿತ್ತನೆ ಪ್ರದೇಶವೂ ಸಾಮಾನ್ಯ ವರ್ಷಗಳಿಗಿಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಕರ್ನಾಟಕದ ಕುಡಿಯುವ ನೀರು ಮತ್ತು ನೀರಾವರಿ ಅಗತ್ಯಗಳಿಗೆ ನೀರು ಉಳಿಸುವ ನಿಟ್ಟಿನಲ್ಲಿ ಆಗಸ್ಟ್ 11ರಂದು ನೀಡಿರುವ ದಿನಕ್ಕೆ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ, ಅದನ್ನು 6 ಸಾವಿರ ಕ್ಯೂಸೆಕ್ಗೆ ಇಳಿಸುವಂತೆ CWMAಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.

