Home Blog

DCRE ಘಟಕದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ

ಬೆಂಗಳೂರು: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಹುದ್ದೆಯ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡುವಂತೆ ಮಹತ್ವದ ಆದೇಶ ಹೊರಡಿಸಲಾಗಿದೆ.

ನಿರಂತರ ಕರ್ತವ್ಯ ನಿರ್ವಹಣೆಯಿಂದ ಒತ್ತಡಕ್ಕೆ ಒಳಗಾಗುತ್ತಿದ್ದ ಸಿಬ್ಬಂದಿಗೆ ವಿಶ್ರಾಂತಿ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಡಿಸಿಆರ್‌ಇ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿಗೆ ವಾರಕ್ಕೊಮ್ಮೆ ರಜೆ ಪಡೆಯುವ ಅವಕಾಶ ದೊರೆಯಲಿದೆ.

ಆದೇಶದಲ್ಲಿ ಏನಿದೆ?

2021ರ ಆಗಸ್ಟ್ 3ರಂದು ಪೊಲೀಸ್ ಪ್ರಧಾನ ಕಚೇರಿ ಹೊರಡಿಸಿದ್ದ ಸುತ್ತೋಲೆ ಸಂಖ್ಯೆ ಆರ್‌ಎಲ್‌ಎನ್-1/14/2021 ಅನ್ನು ಉಲ್ಲೇಖಿಸಿ ಈ ನಿರ್ದೇಶನ ನೀಡಲಾಗಿದೆ. ಡಿಸಿಆರ್‌ಇ ಕಂಟ್ರೋಲ್ ರೂಮ್‌ನಿಂದ ಅಧಿಕೃತ ಸಂದೇಶದ ಮೂಲಕ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.

ಆದೇಶದ ಪ್ರಕಾರ, ಪಾಳಿ (ಶಿಫ್ಟ್) ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೂ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ರಜೆ ನೀಡಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಈ ಕ್ರಮದಿಂದಾಗಿ ಸಿಬ್ಬಂದಿಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿದೆ. ಜೊತೆಗೆ, ಹೆಚ್ಚಿನ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಸಮರ್ಪಕ ವಿಶ್ರಾಂತಿ ದೊರೆಯಲಿದೆ ಎಂದು ಇಲಾಖೆ ತಿಳಿಸಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ಅವರು ಜುಲೈ 16ರಂದು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಬಳಿಕ ಆದೇಶದ ಪ್ರತಿಗಳನ್ನು ಡಿಸಿಆರ್‌ಇ ವಲಯದ ಎಲ್ಲಾ ಪೊಲೀಸ್ ಅಧೀಕ್ಷಕರು, ಆಡಳಿತಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಸೀರೆ ಹರಕೆ ತೀರಿಸಿದ ಡಿ ಕೆ ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್

0

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಪವಿತ್ರ ದಿನದಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿತ್ತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಹಲವು ವರ್ಷಗಳ ಹಿಂದೆ ಹೊತ್ತಿದ್ದ ಹರಕೆಯನ್ನು ನೆರವೇರಿಸಿದರು.

ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಚಾಮುಂಡೇಶ್ವರಿಗೆ ಸೀರೆ ಅರ್ಪಿಸುವುದಾಗಿ ಉಷಾ ಶಿವಕುಮಾರ್ ಅವರು ಹರಕೆ ಹೊತ್ತಿದ್ದರು ಎನ್ನಲಾಗಿದೆ. ಅದರಂತೆ ಇಂದು ದೇವಾಲಯಕ್ಕೆ ಆಗಮಿಸಿದ ಅವರು ರೇಷ್ಮೆ ಸೀರೆಯನ್ನು ಕಾಣಿಕೆಯಾಗಿ ನೀಡಿ ದೇವಿಯ ಆಶೀರ್ವಾದ ಪಡೆದರು.

ದೇವಾಲಯದ ಪ್ರಧಾನ ಅರ್ಚಕರು ಹಾಗೂ ಆಡಳಿತ ಮಂಡಳಿ ಸೀರೆಯನ್ನು ದೇವಿಗೆ ಉಡಿಸಿ ವಿಶೇಷ ಅಲಂಕಾರ ಮಾಡಿದರು. ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ಆಗಮಿಸಿದ್ದು, ವಿಶೇಷ ಪೂಜೆಗಳು ನಡೆಯುತ್ತಿವೆ.

ಇನ್ನು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕೂಡ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ವಿವಿಐಪಿ ದರ್ಶನ ವ್ಯವಸ್ಥೆಯ ಮೂಲಕ ದೇವಾಲಯಕ್ಕೆ ಆಗಮಿಸಿದ ಅವರು ವಿಶೇಷ ಪೂಜೆ ಸಲ್ಲಿಸಿ ವಾಪಸ್ ತೆರಳಿದರು.

ಪ್ರೀತಿಸಿ ಮದುವೆಯಾದ ಯುವಕನ ಹತ್ಯೆ: ಸ್ನೇಹಿತ ಕರೆದಿದ್ದಾನೆಂದು ಹೊರಟವ ಶವವಾಗಿ ಪತ್ತೆ

0

ಬಳ್ಳಾರಿ: ಪ್ರೀತಿಸಿ ವಿವಾಹವಾಗಿದ್ದ ಯುವಕನೊಬ್ಬ ಮದುವೆ ಸಂಭ್ರಮ ಮುಗಿದ ಕೆಲವೇ ಗಂಟೆಗಳಲ್ಲಿ ಹತ್ಯೆಯಾಗಿರುವ ಆಘಾತಕಾರಿ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಡೆದಿದೆ. ನಬಿ ರಸೂಲ್ ಎಂಬ ನವವಿವಾಹಿತನ ಶವ ಮನೆ ಸಮೀಪವೇ ಪತ್ತೆಯಾಗಿದ್ದು, ಪ್ರೇಮ ವಿವಾಹದ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ವಿಚ್ಛೇದಿತ ಮಹಿಳೆಯೊಬ್ಬಳನ್ನು ಪ್ರೀತಿಸುತ್ತಿದ್ದ ರಸೂಲ್, ಕೆಲ ದಿನಗಳ ಹಿಂದೆ ಆಕೆಯನ್ನು ಕರೆದುಕೊಂಡು ಹೋಗಿದ್ದರು. ಬಳಿಕ ಎರಡೂ ಕುಟುಂಬಗಳ ನಡುವೆ ಮಾತುಕತೆ ನಡೆದು ಮದುವೆ ನೆರವೇರಿಸಲಾಗಿತ್ತು. ನಿನ್ನೆ ಮದುವೆ ಹಾಗೂ ಆರತಕ್ಷತೆ ಕಾರ್ಯಕ್ರಮ ಸಂತಸದಿಂದ ನಡೆದಿತ್ತು.

ರಾತ್ರಿ ಸ್ನೇಹಿತನ ಕರೆ ಬಂದಿದೆ ಎಂದು ಹೇಳಿ ಮನೆಯಿಂದ ಹೊರಟಿದ್ದ ರಸೂಲ್, ಮರಳಿ ಮನೆಗೆ ಬರಲಿಲ್ಲ. ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಮನೆಯಿಂದ ಸುಮಾರು 700 ಮೀಟರ್ ದೂರದಲ್ಲಿ ಅವರ ಮೃತದೇಹ ಪತ್ತೆಯಾಯಿತು.

ಮಹಿಳೆಯ ಕುಟುಂಬದವರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರೆಂಬ ಮಾಹಿತಿ ಲಭ್ಯವಾಗಿದ್ದು, ಈ ಹಿಂದೆ ಬೆದರಿಕೆಯೂ ನೀಡಲಾಗಿತ್ತು ಎನ್ನಲಾಗಿದೆ. ಈ ಎಲ್ಲಾ ಆಯಾಮಗಳನ್ನು ಪರಿಗಣಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮನೆಬಾಗಿಲಿಗೇ ಇ-ಸ್ವತ್ತು ಸೇವೆ? ಗ್ರಾಮಸ್ಥರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು ಪಡೆಯಲು ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಗೆ ಶೀಘ್ರದಲ್ಲೇ ತೆರೆ ಬೀಳುವ ಸಾಧ್ಯತೆ ಇದೆ. ಗ್ರಾಮಸ್ಥರ ಮನೆಬಾಗಿಲಿಗೇ ಇ-ಸ್ವತ್ತು ಸೇವೆ ತಲುಪಿಸುವ ವ್ಯವಸ್ಥೆ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇ-ಸ್ವತ್ತು ಪ್ರಕ್ರಿಯೆಯಲ್ಲಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಲು ಪಂಚ ಸದಸ್ಯರ ಸಮಿತಿ ರಚಿಸುವಂತೆ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಸರ್ವರ್ ಹಾಗೂ ತಂತ್ರಾಂಶದ ಸಮಸ್ಯೆಯಿಂದ ಸಾವಿರಾರು ಇ-ಸ್ವತ್ತು ಅರ್ಜಿಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಗ್ರಾಮೀಣ ನಾಗರಿಕರಿಗೆ ವೇಗವಾಗಿ ಹಾಗೂ ಸುಲಭವಾಗಿ ಇ-ಸ್ವತ್ತು ಒದಗಿಸುವ ಉದ್ದೇಶದಿಂದ ಸಮಗ್ರ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ.

ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು, ಮಂಗಳೂರು, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಒಳಗೊಂಡ ಐದು ಸದಸ್ಯರ ಸಮಿತಿ ರಚನೆಯಾಗಲಿದೆ. ಇ-ಸ್ವತ್ತು ಪ್ರಕ್ರಿಯೆಯಲ್ಲಿ ಅಗತ್ಯ ನಿಯಮ ಬದಲಾವಣೆ, ತಾಂತ್ರಿಕ ಸುಧಾರಣೆ ಹಾಗೂ ಆಡಳಿತಾತ್ಮಕ ಕ್ರಮಗಳ ಕುರಿತು 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಗ್ರಾಮಠಾಣಾ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿದ್ದರೂ ದಾಖಲೆಗಳಿಲ್ಲದ ಕಾರಣ ಇ-ಸ್ವತ್ತು ಪಡೆಯಲಾಗದ ಕುಟುಂಬಗಳ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ಮನೆಮನೆ ಸಮೀಕ್ಷೆ ನಡೆಸಿ ದಾಖಲೆರಹಿತ ಸ್ವತ್ತುಗಳಿಗೂ ಇ-ಸ್ವತ್ತು ನೀಡಲು ಅನುಕೂಲವಾಗುವ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ಸಮಿತಿಗೆ ಸೂಚಿಸಲಾಗಿದೆ.

ಇದೇ ವೇಳೆ ಗ್ರಾಮಠಾಣಾ ವ್ಯಾಪ್ತಿಯ ಹೊರಗಿನ ಭೂಪರಿವರ್ತಿತ ಹಾಗೂ ಭೂಪರಿವರ್ತನೆ ಆಗದ ಕಂದಾಯ ಭೂಮಿಗಳಲ್ಲಿರುವ ಬಡಾವಣೆಗಳಿಗೆ ಬಿ-ಖಾತೆ ಹಾಗೂ ಅಗತ್ಯ ದಾಖಲೆಗಳನ್ನು ಒದಗಿಸುವ ಸಾಧ್ಯತೆಯನ್ನೂ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ ಬಿ. ಖಂಡ್ರೆ ನಿರ್ದೇಶನ ನೀಡಿದ್ದಾರೆ.

ಯುರೋಪ್ʼನಲ್ಲಿ ಭೀಕರ ಬಿಸಿಗಾಳಿ ಅಬ್ಬರ: ಜೂನ್ ತಿಂಗಳಲ್ಲೇ 9 ದೇಶಗಳಲ್ಲಿ 12 ಸಾವಿರಕ್ಕೂ ಅಧಿಕ ಸಾವು

0

ಫ್ರಾನ್ಸ್‌: ಯುರೋಪ್ ರಾಷ್ಟ್ರಗಳಲ್ಲಿ ಜೂನ್ ತಿಂಗಳಲ್ಲಿ ಕಾಣಿಸಿಕೊಂಡ ಭೀಕರ ಬಿಸಿಗಾಳಿಯಿಂದಾಗಿ ಭಾರಿ ಪ್ರಮಾಣದ ಸಾವು ಸಂಭವಿಸಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಒಂಬತ್ತು ಯುರೋಪಿಯನ್ ದೇಶಗಳಲ್ಲಿ ಕನಿಷ್ಠ 12 ಸಾವಿರಕ್ಕೂ ಹೆಚ್ಚು ಮಂದಿ ಉಷ್ಣ ಅಲೆಗೆ ಬಲಿಯಾಗಿದ್ದಾರೆ ಎಂದು ರಾಷ್ಟ್ರೀಯ ಅಂಕಿ-ಅಂಶಗಳ ವಿಶ್ಲೇಷಣೆಯಿಂದ ತಿಳಿದುಬಂದಿದೆ.

ಈ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಎಫ್‌ಪಿ (AFP) ವಿಶ್ಲೇಷಣೆ ತಿಳಿಸಿದೆ. ಜೂನ್ ತಿಂಗಳಲ್ಲಿ ಯುರೋಪ್‌ನ ಹಲವು ಭಾಗಗಳಲ್ಲಿ ದಾಖಲೆ ಮಟ್ಟದ ತಾಪಮಾನ ಕಂಡುಬಂದಿದ್ದು, ಇಂಗ್ಲೆಂಡ್ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಸಾರ್ವಕಾಲಿಕ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು.

ಜೂನ್ 22ರಿಂದ 28ರವರೆಗೆ ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಲಕ್ಸೆಂಬರ್ಗ್, ನೆದರ್‌ಲ್ಯಾಂಡ್ಸ್, ಸ್ಪೇನ್ ಮತ್ತು ಸ್ವಿಟ್ಜರ್‌ಲ್ಯಾಂಡ್ ಸೇರಿದಂತೆ ಹಲವು ದೇಶಗಳಲ್ಲಿ ಶಾಖದ ಅಲೆಯ ಪರಿಣಾಮ ಹೆಚ್ಚುವರಿ ಸಾವುಗಳು ಸಂಭವಿಸಿವೆ. ಈ ಅವಧಿಯಲ್ಲೇ ಸುಮಾರು 10 ಸಾವಿರಕ್ಕೂ ಅಧಿಕ ಹೆಚ್ಚುವರಿ ಸಾವುಗಳು ದಾಖಲಾಗಿವೆ ಎಂದು ವರದಿ ತಿಳಿಸಿದೆ.

ಬ್ರಿಟನ್‌ನ ಹವಾಮಾನ ಕಚೇರಿ ನೀಡಿರುವ ಅಂದಾಜಿನ ಪ್ರಕಾರ, ಜೂನ್ 18ರಿಂದ 28ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಉಷ್ಣ ಅಲೆಯಿಂದಾಗಿ ಸುಮಾರು 2,200 ಮಂದಿ ಮೃತಪಟ್ಟಿದ್ದಾರೆ. ಯುರೋಪಿಯನ್ ಮರಣ ಮೇಲ್ವಿಚಾರಣಾ ವ್ಯವಸ್ಥೆ (ಯುರೋಮೊಮೊ)ದ ತಾತ್ಕಾಲಿಕ ವರದಿ ಪ್ರಕಾರ, ಜೂನ್ ಕೊನೆಯ ವಾರದಲ್ಲಿ ಹಲವು ದೇಶಗಳಲ್ಲಿ ಹೆಚ್ಚುವರಿ ಸಾವುಗಳು ಸಂಭವಿಸಿದ್ದು, ಒಟ್ಟು ಸಂಖ್ಯೆ 14,260ಕ್ಕೆ ತಲುಪಿದೆ ಎಂದು ತಿಳಿಸಲಾಗಿದೆ.

ಯುರೋಮೊಮೊ 24 ದೇಶಗಳ ಅಧಿಕೃತ ಅಂಕಿ-ಅಂಶಗಳನ್ನು ಆಧರಿಸಿ ಈ ಮಾಹಿತಿ ನೀಡಿದ್ದು, ಪೂರ್ವ ಯುರೋಪ್‌ನ ಕೆಲವು ಭಾಗಗಳ ಮಾಹಿತಿಗಳು ಇದರಲ್ಲಿ ಸೇರಿಲ್ಲ ಎಂದು ತಿಳಿಸಿದೆ.

ಯುರೋಪ್‌ನ ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಹ್ಯಾನ್ಸ್ ಹೆನ್ರಿ ಪಿ. ಕ್ಲುಗೆ, ಬೇಸಿಗೆ ಇನ್ನೂ ಮುಗಿದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಖದ ಅಲೆಯನ್ನು ಕೇವಲ ಹವಾಮಾನ ಘಟನೆ ಎಂದು ಪರಿಗಣಿಸದೆ ಆರೋಗ್ಯ ತುರ್ತು ಪರಿಸ್ಥಿತಿಯಾಗಿ ಸರ್ಕಾರಗಳು ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ.

“ಈ ಸಾವುಗಳಲ್ಲಿ ಹೆಚ್ಚಿನದನ್ನು ತಡೆಯಲು ಅಗತ್ಯವಾದ ಕ್ರಮಗಳು ಲಭ್ಯವಿವೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳು ಮತ್ತು ಸಾಕ್ಷ್ಯಾಧಾರಗಳು ಈಗಾಗಲೇ ಇವೆ” ಎಂದು ಕ್ಲುಗೆ ತಿಳಿಸಿದ್ದಾರೆ.

ಕಳೆದ ಏಳು ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಸಾವುಗಳು ಸಂಭವಿಸಿದ ಬೇಸಿಗೆಯ ವಾರಗಳಲ್ಲಿ ಜುಲೈ 2022 ಕೂಡ ಪ್ರಮುಖವಾಗಿತ್ತು. ಆ ಸಂದರ್ಭದಲ್ಲಿ ಕೋವಿಡ್ ಸೋಂಕು ಹಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಇನ್ನೂ ಸಕ್ರಿಯವಾಗಿತ್ತು.

ಈ ಬಾರಿ ದಾಖಲಾಗಿರುವ ಹೆಚ್ಚುವರಿ ಸಾವುಗಳಿಗೆ ಬಿಸಿಗಾಳಿಯೇ ಪ್ರಮುಖ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೇರೆ ಯಾವುದೇ ಪ್ರಮುಖ ಕಾರಣಗಳು ಕಂಡುಬಂದಿಲ್ಲ ಎಂದು ಡೆನ್ಮಾರ್ಕ್‌ನ ಸ್ಟೇಟನ್ಸ್ ಸೀರಮ್ ಇನ್‌ಸ್ಟಿಟ್ಯೂಟ್‌ನ ಸಾಂಕ್ರಾಮಿಕ ರೋಗ ತಜ್ಞ ಹಾಗೂ ಯುರೋಮೊಮೊ ಸಂಯೋಜಕ ಲಾಸ್ ವೆಸ್ಟರ್‌ಗಾರ್ಡ್ ತಿಳಿಸಿದ್ದಾರೆ.

1958ರ ವಿಶ್ವಕಪ್ ಫೈನಲ್ʼನಲ್ಲಿ ಪೀಲೆ ಧರಿಸಿದ್ದ ಟಿ-ಶರ್ಟ್ 47.23 ಕೋಟಿ ರೂ.ಗೆ ಮಾರಾಟ!

0

ನ್ಯೂಯಾರ್ಕ್: ಬ್ರೆಜಿಲ್ ಫುಟ್‌ಬಾಲ್ ದಂತಕಥೆ ಪೀಲೆ 1958ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಧರಿಸಿದ್ದ ಐತಿಹಾಸಿಕ ಜೆರ್ಸಿ (ಟಿ-ಶರ್ಟ್) ಭಾರೀ ಮೊತ್ತಕ್ಕೆ ಹರಾಜಾಗಿದೆ. ಬರೋಬ್ಬರಿ 4.9 ಮಿಲಿಯನ್ ಅಮೆರಿಕನ್ ಡಾಲರ್‌ (ಸುಮಾರು ₹47.23 ಕೋಟಿ) ಬೆಲೆಗೆ ಈ ಜೆರ್ಸಿ ಮಾರಾಟವಾಗಿದ್ದು, ಫುಟ್‌ಬಾಲ್ ಇತಿಹಾಸದಲ್ಲೇ ಅತ್ಯಂತ ಅಮೂಲ್ಯ ಸ್ಮರಣಿಕೆಗಳಲ್ಲಿ ಒಂದಾಗಿ ದಾಖಲಾಗಿದೆ.

1958ರಲ್ಲಿ ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ನಡೆದ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಸ್ವೀಡನ್ ವಿರುದ್ಧ ಬ್ರೆಜಿಲ್ 5-2 ಗೋಲುಗಳ ಅಂತರದಲ್ಲಿ ಗೆದ್ದು ತನ್ನ ಮೊದಲ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿತ್ತು. ಆ ಐತಿಹಾಸಿಕ ಪಂದ್ಯದಲ್ಲಿ ಕೇವಲ 17 ವರ್ಷದ ಪೀಲೆ ಧರಿಸಿದ್ದ ನಂಬರ್ 10 ಜೆರ್ಸಿಯೇ ಇದೀಗ ದಾಖಲೆ ಮೊತ್ತಕ್ಕೆ ಹರಾಜಾಗಿದೆ. ಆ ಪಂದ್ಯದಲ್ಲಿ ಪೀಲೆ ಎರಡು ಅದ್ಭುತ ಗೋಲುಗಳನ್ನು ಗಳಿಸಿ ಬ್ರೆಜಿಲ್‌ಗೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದರು.

ಈ ಜೆರ್ಸಿ ಫುಟ್‌ಬಾಲ್ ಇತಿಹಾಸದಲ್ಲಿ ಹರಾಜಾದ ಎರಡನೇ ಅತ್ಯಂತ ದುಬಾರಿ ಜೆರ್ಸಿಯಾಗಿದೆ. ಮೊದಲ ಸ್ಥಾನದಲ್ಲಿ ಅರ್ಜೆಂಟೀನಾದ ದಂತಕಥೆ ಡಿಯಾಗೋ ಮರಡೋನಾ ಅವರು 1986ರ ವಿಶ್ವಕಪ್ ಕ್ವಾರ್ಟರ್‌ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಧರಿಸಿದ್ದ ಜೆರ್ಸಿಯಿದ್ದು, ಅದು 2022ರಲ್ಲಿ ಸುಮಾರು ₹89.64 ಕೋಟಿಗೆ ಮಾರಾಟವಾಗಿತ್ತು. ಆ ಪಂದ್ಯದಲ್ಲಿ ಮರಡೋನಾ ಪ್ರಸಿದ್ಧ ‘ಹ್ಯಾಂಡ್ ಆಫ್ ಗಾಡ್’ ಗೋಲು ದಾಖಲಿಸಿದ್ದರು.

ವಿಶೇಷವೆಂದರೆ, ಇದೇ ಪೀಲೆ ಜೆರ್ಸಿ 2004ರಲ್ಲಿ ನಡೆದ ಹರಾಜಿನಲ್ಲಿ ಸುಮಾರು ₹91.5 ಲಕ್ಷಕ್ಕೆ ಮಾರಾಟವಾಗಿತ್ತು. ಎರಡು ದಶಕಗಳ ಅವಧಿಯಲ್ಲಿ ಅದರ ಮೌಲ್ಯ ಹಲವು ಪಟ್ಟು ಹೆಚ್ಚಾಗಿದೆ.

ಪೀಲೆ ತಮ್ಮ ವೃತ್ತಿಜೀವನದಲ್ಲಿ 1958, 1962 ಮತ್ತು 1970ರ ಫಿಫಾ ವಿಶ್ವಕಪ್‌ಗಳನ್ನು ಬ್ರೆಜಿಲ್‌ಗೆ ಗೆಲ್ಲಿಸಿಕೊಟ್ಟ ಏಕೈಕ ಆಟಗಾರ ಎಂಬ ಅಪರೂಪದ ದಾಖಲೆಯನ್ನು ಹೊಂದಿದ್ದಾರೆ. 1958ರ ವಿಶ್ವಕಪ್‌ನಲ್ಲಿ ಒಟ್ಟು ಆರು ಗೋಲುಗಳನ್ನು ಗಳಿಸಿದ್ದ ಅವರು, ವಿಶ್ವಕಪ್ ಫೈನಲ್‌ನಲ್ಲಿ ಗೋಲು ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನೂ ನಿರ್ಮಿಸಿದ್ದರು.

1962ರ ವಿಶ್ವಕಪ್‌ನಲ್ಲಿ ಗಾಯದ ಸಮಸ್ಯೆಯ ನಡುವೆಯೂ ಬ್ರೆಜಿಲ್ ಪ್ರಶಸ್ತಿ ಉಳಿಸಿಕೊಂಡಿತ್ತು. ಬಳಿಕ 1970ರ ವಿಶ್ವಕಪ್ ಫೈನಲ್‌ನಲ್ಲಿ ಇಟಲಿ ವಿರುದ್ಧ ನಡೆದ ಪಂದ್ಯದಲ್ಲಿ ಪೀಲೆ ಗೋಲು ದಾಖಲಿಸಿ ಬ್ರೆಜಿಲ್‌ಗೆ 4-1 ಅಂತರದ ಗೆಲುವು ಹಾಗೂ ಮೂರನೇ ವಿಶ್ವಕಪ್ ಪ್ರಶಸ್ತಿ ತಂದುಕೊಟ್ಟಿದ್ದರು.

ಫುಟ್‌ಬಾಲ್ ಲೋಕದ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ಪೀಲೆ, ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು 2022ರಲ್ಲಿ 82ನೇ ವಯಸ್ಸಿನಲ್ಲಿ ನಿಧನರಾದರು. ಅವರ ವಿಶ್ವಕಪ್ ಫೈನಲ್ ಜೆರ್ಸಿ ಇದೀಗ ಮತ್ತೊಮ್ಮೆ ಜಾಗತಿಕ ಗಮನ ಸೆಳೆದಿದೆ.

ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ʼಗೆ ನಿವೃತ್ತಿ ಘೋಷಿಸಲಿದ್ದಾರಾ? ಲಾರ್ಡ್ಸ್ ಪಂದ್ಯಕ್ಕೂ ಮುನ್ನ ಹೆಚ್ಚಿದ ಕುತೂಹಲ

0

ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯಕ್ಕೂ ಮುನ್ನ ಭಾರತ ತಂಡದ ಹಿರಿಯ ಆರಂಭಿಕ ಬ್ಯಾಟರ್ ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

ಜುಲೈ 19ರಂದು ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಪಂದ್ಯವೇ ರೋಹಿತ್ ಅವರ ಕೊನೆಯ ಏಕದಿನ ಪಂದ್ಯವಾಗಬಹುದು ಎಂಬ ವರದಿಗಳು ಕ್ರಿಕೆಟ್ ವಲಯದಲ್ಲಿ ಗಮನ ಸೆಳೆದಿವೆ. ಮಾಧ್ಯಮ ವರದಿಗಳ ಪ್ರಕಾರ, ಬಿಸಿಸಿಐ ಆಯ್ಕೆ ಸಮಿತಿ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ರೋಹಿತ್ ಶರ್ಮಾ ಅವರೊಂದಿಗೆ ತಂಡದ ಭವಿಷ್ಯದ ಯೋಜನೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ಯುವ ಆಟಗಾರರನ್ನು ಸಜ್ಜುಗೊಳಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ರೋಹಿತ್ ಅವರನ್ನು ಏಕದಿನ ತಂಡಕ್ಕೆ ಪರಿಗಣಿಸದಿರಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

ಐಎಎನ್‌ಎಸ್ ವರದಿಯನ್ನು ಉಲ್ಲೇಖಿಸಿ ಕೆಲವು ಮಾಧ್ಯಮಗಳು ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಆಯ್ಕೆ ಸಮಿತಿ ತನ್ನ ನಿಲುವನ್ನು ರೋಹಿತ್ ಅವರಿಗೆ ತಿಳಿಸಿದ್ದು, ಗೌರವಯುತವಾಗಿ ನಿವೃತ್ತಿ ಘೋಷಿಸಬೇಕೇ ಅಥವಾ ಮುಂದುವರಿಯಬೇಕೇ ಎಂಬುದು ಅವರ ವೈಯಕ್ತಿಕ ನಿರ್ಧಾರ ಎಂದು ಹೇಳಲಾಗಿದೆ. ಆದರೆ ಈ ಕುರಿತು ಬಿಸಿಸಿಐಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಇದೇ ವೇಳೆ, ರೋಹಿತ್ ಶರ್ಮಾ ಅವರ ಪೋಷಕರಾದ ಗುರುನಾಥ್ ಶರ್ಮಾ ಮತ್ತು ಪೂರ್ಣಿಮಾ ಶರ್ಮಾ ಲಂಡನ್‌ಗೆ ತೆರಳಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಲಾರ್ಡ್ಸ್‌ನಲ್ಲಿ ನಡೆಯಲಿರುವ ಪಂದ್ಯವನ್ನು ವೀಕ್ಷಿಸಲು ಅವರು ತೆರಳಿದ್ದಾರೆ ಎನ್ನಲಾಗುತ್ತಿದ್ದರೂ, ಇದಕ್ಕೂ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ರೋಹಿತ್ ಶರ್ಮಾ 2025ರ ಮೇ 7ರಂದು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಬಳಿಕ ಟೆಸ್ಟ್ ತಂಡದ ನಾಯಕತ್ವವನ್ನು ಶುಭ್‌ಮನ್ ಗಿಲ್ ವಹಿಸಿಕೊಂಡಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಇದುವರೆಗೆ 286 ಪಂದ್ಯಗಳನ್ನು ಆಡಿರುವ ರೋಹಿತ್, 11,731 ರನ್ ಗಳಿಸಿದ್ದು,

ಭಾರತದ ಅತ್ಯಂತ ಯಶಸ್ವಿ ಆರಂಭಿಕ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದಾರೆ. ನಾಯಕನಾಗಿ 56 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ ಅವರು, 2023ರ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಫೈನಲ್‌ಗೆ ಕೊಂಡೊಯ್ದಿದ್ದರು. 2025ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನೂ ಭಾರತದ ಪಾಲಾಗುವಂತೆ ಮಾಡಿದ್ದರು.

ಆದರೆ, ಇಂಗ್ಲೆಂಡ್ ವಿರುದ್ಧದ ಪ್ರಸ್ತುತ ಏಕದಿನ ಸರಣಿಯಲ್ಲಿ ಅವರ ಬ್ಯಾಟಿಂಗ್ ನಿರೀಕ್ಷಿತ ಮಟ್ಟದಲ್ಲಿಲ್ಲ. ಮೊದಲ ಪಂದ್ಯದಲ್ಲಿ 11 ರನ್ ಗಳಿಸಿದ್ದ ಅವರು, ಎರಡನೇ ಪಂದ್ಯದಲ್ಲಿ 47 ಎಸೆತಗಳಲ್ಲಿ 26 ರನ್‌ಗಳಿಗೆ ಸೀಮಿತರಾಗಿದ್ದರು. ಈ ಹಿನ್ನೆಲೆ ಅವರ ಏಕದಿನ ಭವಿಷ್ಯದ ಕುರಿತು ಚರ್ಚೆಗಳು ಮತ್ತಷ್ಟು ಜೋರಾಗಿವೆ.

ಆದಾಗ್ಯೂ, ರೋಹಿತ್ ಶರ್ಮಾ ಅವರ ನಿವೃತ್ತಿ ಅಥವಾ ಅವರನ್ನು ತಂಡದಿಂದ ಕೈಬಿಡುವ ಕುರಿತು ಬಿಸಿಸಿಐ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಹೀಗಾಗಿ ಈ ಕುರಿತ ವರದಿಗಳಿಗೆ ಅಧಿಕೃತ ಸ್ಪಷ್ಟನೆ ಇನ್ನಷ್ಟೇ ಬರಬೇಕಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಡಿಸೆಂಬರ್ʼಗೆ: ರಾಜ್ಯ ಸರ್ಕಾರಕ್ಕೆ ಮತ್ತೆ ಅವಧಿ ವಿಸ್ತರಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು/ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಂಬಂಧಿಸಿದ ಹಗ್ಗಜಗ್ಗಾಟದ ನಡುವೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರಾಳತೆ ನೀಡಿದೆ. ಈ ಹಿಂದೆ ಆಗಸ್ಟ್ 31ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ನೀಡಿದ್ದ ಆದೇಶವನ್ನು ಪರಿಷ್ಕರಿಸಿರುವ ಸುಪ್ರೀಂ ಕೋರ್ಟ್, ಇದೀಗ 2026ರ ಡಿಸೆಂಬರ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ.

ಎಸ್ಐಆರ್ (Special Intensive Revision) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಹೊಸ ಗಡುವು ನಿಗದಿಪಡಿಸಿದೆ.

ಬೆಂಗಳೂರಿನ ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಾದರಿಗೆ ಪರಿವರ್ತಿಸಲಾಗಿದ್ದರೂ, ಚುನಾವಣೆ ಮಾತ್ರ ಇನ್ನೂ ನಡೆದಿಲ್ಲ. ವಿವಿಧ ಕಾರಣಗಳಿಂದ ಚುನಾವಣೆ ನಿರಂತರವಾಗಿ ಮುಂದೂಡಲ್ಪಡುತ್ತಿದ್ದು, ಈ ಬಾರಿ ಎಸ್ಐಆರ್ ಪ್ರಕ್ರಿಯೆಯನ್ನು ಉಲ್ಲೇಖಿಸಿ ಸರ್ಕಾರ ಹೆಚ್ಚುವರಿ ಸಮಯ ಪಡೆದುಕೊಂಡಿದೆ.

2020ರ ಸೆಪ್ಟೆಂಬರ್ 10ರಂದು ಬಿಬಿಎಂಪಿಯ ಚುನಾಯಿತ ಆಡಳಿತದ ಅವಧಿ ಅಂತ್ಯಗೊಂಡಿತ್ತು. ಅದೇ ವರ್ಷ ಹೊಸ ಕಾರ್ಪೋರೇಟರ್‌ಗಳ ಆಯ್ಕೆಗಾಗಿ ಚುನಾವಣೆ ನಡೆಯಬೇಕಾಗಿದ್ದರೂ, ಕೋವಿಡ್-19 ಸಾಂಕ್ರಾಮಿಕದ ಕಾರಣ ಮತದಾನ ಮುಂದೂಡಲಾಯಿತು. ಬಳಿಕವೂ ವಿವಿಧ ಆಡಳಿತಾತ್ಮಕ ಮತ್ತು ಕಾನೂನು ಕಾರಣಗಳಿಂದ ಚುನಾವಣೆ ನಡೆಸಲಾಗಿಲ್ಲ.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಕಾಂಗ್ರೆಸ್ ನಾಯಕರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಆಡಳಿತ ವಿಕೇಂದ್ರೀಕರಣದ ಉದ್ದೇಶದಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪುನರ್‌ರಚನೆ ಮಾಡಲಾಗಿದೆ. ಆದಾಗ್ಯೂ, ಹೊಸ ಸಂಸ್ಥೆಗೆ ಚುನಾಯಿತ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ.

ಸದ್ಯ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಆಡಳಿತಾಧಿಕಾರಿಗಳೇ ಗ್ರೇಟರ್ ಬೆಂಗಳೂರು ಆಡಳಿತವನ್ನು ನಿರ್ವಹಿಸುತ್ತಿದ್ದು, ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಹೊಸ ಗಡುವಿನೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ.

ರೈತರ ಭೂಮಿ ಕಸಿದು ಹೈಕಮಾಂಡ್ ತೃಪ್ತಿಪಡಿಸುವ ಯತ್ನ: ಡಿ.ಕೆ. ಶಿವಕುಮಾರ್ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಬಿಡದಿ ಸ್ಯಾಟಲೈಟ್ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಫಲವತ್ತಾದ ಜಮೀನುಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ರಿಯಲ್ ಎಸ್ಟೇಟ್ ರಾಜಕೀಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಡದಿ ಭಾಗದ ರೈತರ ಪರವಾಗಿ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಟೀಕಿಸಿದರು.

ಬಿಡದಿ ಭಾಗದಲ್ಲಿ ರೈತರ ಜಮೀನುಗಳನ್ನು ಒತ್ತಾಯಪೂರ್ವಕವಾಗಿ ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಕೃಷಿಯನ್ನೇ ನಂಬಿ ಬದುಕುತ್ತಿರುವ ಬಡ ರೈತ ಕುಟುಂಬಗಳ ನಾಲ್ಕೈದು ಎಕರೆ ಜಮೀನನ್ನು ಕಸಿದು ಅವರನ್ನು ಸಂಕಷ್ಟಕ್ಕೆ ತಳ್ಳಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ಮತ್ತೊಂದೆಡೆ ಕಾಂಗ್ರೆಸ್ ನಾಯಕರು ಮತ್ತು ಶಾಸಕರು ನೂರಾರು ಎಕರೆ ಜಮೀನು ಹೊಂದಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಸರ್ಕಾರದ ದ್ವಂದ್ವ ನೀತಿಯನ್ನು ಬಯಲು ಮಾಡುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಉತ್ತರ ಕರ್ನಾಟಕದ ರೈತರ ಸಮಸ್ಯೆಗಳಿಗಿಂತ ಬಿಡದಿ ಟೌನ್‌ಶಿಪ್ ಹಾಗೂ ಕನಕಪುರ ವಿಮಾನ ನಿಲ್ದಾಣದಂತಹ ಯೋಜನೆಗಳ ಮೇಲೆಯೇ ಹೆಚ್ಚಿನ ಆಸಕ್ತಿ ಇದೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಹೈಕಮಾಂಡ್‌ಗೆ ನೀಡಿದ ಭರವಸೆಯನ್ನು ಈಡೇರಿಸಲು ರೈತರ ಜಮೀನುಗಳನ್ನು ಗುರಿಯಾಗಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಜಮೀನು ನೀಡಲು ನಿರಾಕರಿಸುವ ರೈತರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದರು. ರೈತರ ಮನೆಗಳಿಗೆ ರಾತ್ರಿ ವೇಳೆ ಗುಂಡಾಗಳನ್ನು ಕಳುಹಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಒಂದೆಡೆ ಬಲವಂತದ ಭೂಸ್ವಾಧೀನ ಮಾಡುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದರೆ, ಮತ್ತೊಂದೆಡೆ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧವೇ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಕಳುಹಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ರೈತರ ಹೋರಾಟವನ್ನು ಅಧಿಕಾರದ ಬಲದಿಂದ ಹತ್ತಿಕ್ಕಲು ಸರ್ಕಾರ ಯತ್ನಿಸುತ್ತಿದೆ ಎಂದು ಹೇಳಿದ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆಯ ಕಾರ್ಯಕ್ಷಮತೆ ಸಂಪೂರ್ಣ ಕುಸಿದಿದೆ ಎಂದು ಟೀಕಿಸಿದರು.

ಕೃಷಿ ಸಚಿವರ ಕೆಲಸವೇ ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದ ಅವರು, ರೈತರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿರುವ ಸರ್ಕಾರ ಕೃಷಿ ಇಲಾಖೆಯ ಹೆಸರನ್ನೇ ‘ರಿಯಲ್ ಎಸ್ಟೇಟ್ ಕಾಂಗ್ರೆಸ್ ಇಲಾಖೆ’ ಎಂದು ಬದಲಾಯಿಸಿಕೊಂಡರೆ ಸೂಕ್ತವಾಗುತ್ತದೆ ಎಂದು ಕಟುವಾಗಿ ಲೇವಡಿ ಮಾಡಿದರು.

ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ

0

ಚಂಡೀಗಢ: ಭಾರತದ ರೈಲ್ವೆ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿ ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ಈ ರೈಲು ಉತ್ತರ ರೈಲ್ವೆ ವ್ಯಾಪ್ತಿಯ ಹರಿಯಾಣ ರಾಜ್ಯದ 89 ಕಿಲೋಮೀಟರ್ ಉದ್ದದ ಜಿಂದ್–ಸೋನಿಪತ್ ಮಾರ್ಗದಲ್ಲಿ ಸಂಚರಿಸಲಿದೆ.

ಭಾರತದಲ್ಲಿ ಮೊದಲ ಬಾರಿಗೆ ಹೈಡ್ರೋಜನ್ ಇಂಧನ ಕೋಶ (Hydrogen Fuel Cell) ತಂತ್ರಜ್ಞಾನವನ್ನು ರೈಲ್ವೆ ಸೇವೆಯಲ್ಲಿ ಅಳವಡಿಸಲಾಗಿದೆ. ಈ ತಂತ್ರಜ್ಞಾನದಲ್ಲಿ ಹೈಡ್ರೋಜನ್ ಇಂಧನ ಕೋಶಗಳ ಮೂಲಕ ವಿದ್ಯುತ್ ಉತ್ಪಾದಿಸಿ ರೈಲನ್ನು ಚಲಾಯಿಸಲಾಗುತ್ತದೆ. ಇದರಿಂದ ಡೀಸೆಲ್ ಬಳಕೆ ಕಡಿಮೆಯಾಗುವ ಜೊತೆಗೆ ಪರಿಸರ ಮಾಲಿನ್ಯವೂ ತಗ್ಗುವ ನಿರೀಕ್ಷೆಯಿದೆ.

ಈ ಯೋಜನೆಯ ಭಾಗವಾಗಿ ಹೈಡ್ರೋಜನ್ ಸಂಗ್ರಹಣೆ ಹಾಗೂ ಇಂಧನ ತುಂಬುವ (Refuelling) ವಿಶೇಷ ಮೂಲಸೌಕರ್ಯಗಳನ್ನೂ ಅಭಿವೃದ್ಧಿಪಡಿಸಲಾಗಿದೆ. ಹೀಗಾಗಿ ಭವಿಷ್ಯದಲ್ಲಿ ದೇಶದ ವಿವಿಧ ಮಾರ್ಗಗಳಲ್ಲಿ ಹೈಡ್ರೋಜನ್ ರೈಲುಗಳ ಸಂಚಾರಕ್ಕೆ ಇದು ಅಡಿಪಾಯವಾಗಲಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಹೈಡ್ರೋಜನ್ ಚಾಲಿತ ರೈಲು ಸೇವೆಯ ಆರಂಭವು ಭಾರತದ ರೈಲ್ವೆ ಕ್ಷೇತ್ರದಲ್ಲಿ ಶುದ್ಧ ಮತ್ತು ಹಸಿರು ತಂತ್ರಜ್ಞಾನ ಅಳವಡಿಕೆಗೆ ಹೊಸ ದಿಕ್ಕು ನೀಡಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ಹೈಡ್ರೋಜನ್ ರೈಲುಗಳನ್ನು ಹೊಂದಿರುವ ವಿಶ್ವದ ಆಯ್ದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರ್ಪಡೆಯಾಗಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಪ್ರಾಯೋಗಿಕ ಯೋಜನೆಯಾಗಿ ಅಭಿವೃದ್ಧಿಪಡಿಸಿರುವ ಈ ರೈಲು, ಹೈಡ್ರೋಜನ್ ಇಂಧನ ತಂತ್ರಜ್ಞಾನದ ಕಾರ್ಯಕ್ಷಮತೆಯನ್ನು ಪರೀಕ್ಷಿಸುವ ಜೊತೆಗೆ, ಪರಿಸರ ಸ್ನೇಹಿ ಮತ್ತು ಸುಸ್ಥಿರ ರೈಲು ಸಾರಿಗೆ ವ್ಯವಸ್ಥೆ ನಿರ್ಮಾಣಕ್ಕೆ ಅಗತ್ಯವಾದ ಭವಿಷ್ಯದ ಯೋಜನೆಗಳಿಗೆ ದಾರಿಯಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.