Home Blog

ಗದಗ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಸೋಮವಾರದೊಳಗೆ ಬರ ಘೋಷಿಸದಿದ್ದರೆ ಮಂಗಳವಾರ ಬಂದ್ – ರೈತ ಸಂಘ ಎಚ್ಚರಿಕೆ

0

ಗದಗ: ಗದಗ ಜಿಲ್ಲೆಯ ಬರಗಾಲ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ಅಸಮರ್ಪಕ ವರದಿ ಸಲ್ಲಿಸಲಾಗಿದೆ ಎಂಬ ಗಂಭೀರ ಆರೋಪವನ್ನು ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಮಾಡಿದ್ದಾರೆ.

ಗದಗ ಜಿಲ್ಲೆಯ ಗದಗ, ಮುಂಡರಗಿ, ಶಿರಹಟ್ಟಿ, ರೋಣ, ನರಗುಂದ ಹಾಗೂ ಲಕ್ಷ್ಮೇಶ್ವರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಬೆಳೆ ನಷ್ಟ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಸರ್ಕಾರ ಕೇವಲ ಒಂದು ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ರೈತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸರ್ಕಾರಕ್ಕೆ ವಾಸ್ತವ ಪರಿಸ್ಥಿತಿಗೆ ವಿರುದ್ಧವಾದ ಅಥವಾ ಅಸಮರ್ಪಕ ವರದಿ ನೀಡಿರುವ ಸಂಶಯ ವ್ಯಕ್ತವಾಗುತ್ತಿದೆ ಎಂದು ಬಾಬರಿ ಆರೋಪಿಸಿದರು.

ಪಕ್ಕದ ಬಾಗಲಕೋಟೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವ ಸರ್ಕಾರ, ಗದಗ ಜಿಲ್ಲೆಯ ರೈತರ ಸಂಕಷ್ಟವನ್ನು ಕಡೆಗಣಿಸಿರುವುದು ಸರಿಯಲ್ಲ. ಅಧಿಕಾರಿಗಳು ಖುದ್ದಾಗಿ ಹೊಲಗಳಿಗೆ ಭೇಟಿ ನೀಡಿ ಸಮರ್ಪಕ ಸಮೀಕ್ಷೆ ನಡೆಸಿದ್ದಾರೆಯೇ ಅಥವಾ ಕಚೇರಿಯಲ್ಲಿಯೇ ಕುಳಿತು ವರದಿ ಸಿದ್ಧಪಡಿಸಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರು ಮಧ್ಯಪ್ರವೇಶಿಸಿ, ಗದಗ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮರುಪರಿಶೀಲನೆ ನಡೆಸಬೇಕು. ತಪ್ಪು ಅಥವಾ ಅಸಮರ್ಪಕ ವರದಿ ಇದ್ದರೆ ಅದನ್ನು ತಿರಸ್ಕರಿಸಿ, ಸೋಮವಾರದೊಳಗೆ ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸಂಪೂರ್ಣ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.

ಇಲ್ಲವಾದರೆ ಮಂಗಳವಾರ ಗದಗ ಜಿಲ್ಲಾ ಬಂದ್ ನಡೆಸುವುದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಯಲ್ಲಪ್ಪ ಬಾಬರಿ ಎಚ್ಚರಿಕೆ ನೀಡಿದರು.

ಉತ್ತರ ಕರ್ನಾಟಕವನ್ನು ನಿರಂತರವಾಗಿ ಕಡೆಗಣಿಸುವ ಧೋರಣೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಕಿಚ್ಚನ್ನು ರೈತ ಸಂಘಟನೆಗಳು ಹಚ್ಚಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಶಿವಮೊಗ್ಗದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಆರೋಪ! ಮೂವರ ವಿರುದ್ಧ ಸುಮೋಟೋ ಕೇಸ್

0

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ನಿರ್ಮಿಸಲಾಗುತ್ತಿದ್ದ ಕಟೌಟ್ ಮೇಲೆ ಏರಿ ಪ್ಯಾಲೆಸ್ತೀನ್ ಧ್ವಜ ಹಾರಿಸಿ, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಡಿ ಮೂವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ನಗರದ ನಿಹಾಲ್, ಉಮರ್ ಹಾಗೂ ಅಬ್ರಹಾರ್ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ನಿಹಾಲ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆಗಸ್ಟ್ 25ರಂದು ಮಧ್ಯಾಹ್ನ ಆರ್‌ಎಂಎಲ್ ನಗರದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಲಭಿಸಿದ ಮಾಹಿತಿಯ ಆಧಾರದ ಮೇಲೆ ಇನ್‌ಸ್ಟಾಗ್ರಾಂ ಖಾತೆಯೊಂದನ್ನು ಪರಿಶೀಲಿಸಿದ್ದಾರೆ. ಈ ವೇಳೆ ಕಟೌಟ್ ಮೇಲೆ ಮೂವರು ವ್ಯಕ್ತಿಗಳು ಪ್ಯಾಲೆಸ್ತೀನ್ ಧ್ವಜ ಹಾರಿಸುತ್ತಿರುವ 14 ಸೆಕೆಂಡುಗಳ ವಿಡಿಯೋ ಪೋಸ್ಟ್ ಮಾಡಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದಾಗ, ಆಗಸ್ಟ್ 24ರಂದು ಬೆಳಿಗ್ಗೆ 8ರಿಂದ 9 ಗಂಟೆಯ ಅವಧಿಯಲ್ಲಿ ಆರ್‌ಎಂಎಲ್ ನಗರದ ನಿವಾಸಿಗಳಾದ ಮೂವರು ಕಟೌಟ್ ಮೇಲೆ ಏರಿ ಈ ಕೃತ್ಯ ಎಸಗಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಡಿಯೋ ಮೂಲಕ ರಾಷ್ಟ್ರೀಯ ಏಕತೆಗೆ ಧಕ್ಕೆ ತರುವ ಹಾಗೂ ವಿವಿಧ ಸಮುದಾಯಗಳ ನಡುವೆ ವೈಮನಸ್ಸು ಮತ್ತು ದ್ವೇಷದ ಭಾವನೆ ಮೂಡಿಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಪ್ರಯತ್ನ ನಡೆದಿದೆ ಎಂಬ ಆರೋಪದಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದು, ವಶಕ್ಕೆ ಪಡೆದಿರುವ ನಿಹಾಲ್‌ನಿಂದ ವಿಚಾರಣೆ ನಡೆಸುತ್ತಿದ್ದಾರೆ.

ಹೋರಾಟಕ್ಕೆ ಸಿಕ್ಕ ಫಲ: ವೈದ್ಯಕೀಯ ಶಿಕ್ಷಣದತ್ತ ದುರುಗಮ್ಮ ಹೆಜ್ಜೆ!

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ತಾಲೂಕಿನ ಮೋರಗೇರಿ ಗ್ರಾಮದ ವಿದ್ಯಾರ್ಥಿನಿ ಕುಮಾರಿ ದುರುಗಮ್ಮ ಉತ್ತಂಗಿ ಅವರು ದೇಶದ ಪ್ರತಿಷ್ಠಿತ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬೆಂಗಳೂರಿನ ಸಪ್ತಗಿರಿ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. ಪ್ರವೇಶ ಪಡೆದಿದ್ದು, ಕುಟುಂಬ ಹಾಗೂ ಸಮಾಜಕ್ಕೆ ಹೆಮ್ಮೆ ತಂದಿದ್ದಾರೆ.

ಈ ಸಾಧನೆಯ ಹಿನ್ನೆಲೆಯಲ್ಲಿ ಹಗರಿಬೊಮ್ಮನಹಳ್ಳಿ ತಾಲೂಕು ಮಾದಿಗ ಸಮಾಜ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿದ) ಪದಾಧಿಕಾರಿಗಳು ಮೋರಗೇರಿಯಲ್ಲಿರುವ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ದುರುಗಮ್ಮ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಪರಶುರಾಮ ಹೆಗ್ಡಾಳ್, ಅತ್ಯಂತ ಕಡುಬಡತನದಲ್ಲಿ ಬೆಳೆದ ವಿದ್ಯಾರ್ಥಿನಿ ದುರುಗಮ್ಮ ಅವರು ಅನೇಕ ಸವಾಲುಗಳನ್ನು ಮೆಟ್ಟಿ ನಿಂತು ಶ್ರಮವಹಿಸಿ ಸಾಧನೆ ಮಾಡಿದ್ದಾರೆ. ತಂದೆ-ತಾಯಿ ಹಾಗೂ ಇಡೀ ಸಮಾಜ ಹೆಮ್ಮೆಪಡುವಂತಹ ಸಾಧನೆ ಮಾಡಿರುವ ಅವರು, ಓದುವ ಮಕ್ಕಳಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.

ಕಿತ್ತನೂರು ದೇವೇಂದ್ರ ಮಾತನಾಡಿ, ಕಿತ್ತು ತಿನ್ನುವ ಬಡತನವಿದ್ದರೂ ಕಷ್ಟ-ಕಾರ್ಪಣ್ಯಗಳನ್ನು ಬದಿಗೊತ್ತಿ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿದ ತಂದೆ-ತಾಯಿಯ ಶ್ರಮ ಇಂದು ಸಾರ್ಥಕವಾಗಿದೆ ಎಂದರು.

ನಿವೃತ್ತ ಶಿಕ್ಷಕ ಕೊಟ್ರೇಶ್ ಮೇಷ್ಟ್ರು ಅವರು ವಿದ್ಯಾರ್ಥಿನಿಯ ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯರಾದ ಕೇಚ್ಚಿನಬಂಡಿ ದುರುಗಪ್ಪ, ಯಡ್ರಾಮ್ಮನಹಳ್ಳಿ ಮರಿಯಪ್ಪ, ಕಿತ್ತನೂರು ದುರುಗಪ್ಪ, ಕಡಲಬಾಳು ಪಕೀರಪ್ಪ, ಏಳುಕೋಟಿ ದೂಪದಹಳ್ಳಿ, ಡಿಎಸ್‌ಎಸ್ ಖಜಾಂಚಿ ಚಿಂತ್ರಪಳ್ಳಿ ರಮೇಶ್, ಶಿವಮೂರ್ತಿ ನೆಲ್ಕುದ್ರಿ, ಬ್ಯಾಳಾಳ್ ಅಜಯ್, ತೀರ್ಥ ಪ್ರಸಾದ್ ಹಂಪಪಟ್ಟಣ, ಬಸವರಾಜ ಕೇಚ್ಚಿನಬಂಡಿ, ಬಸವರಾಜ ಸೊಬಟಿ, ಚಾರೆಪ್ಪ ಹೊಸಕೇರಿ, ಸ್ವಾಮಿ ಹೊಸಕೇರಿ, ಪರಶುರಾಮ ಅಂಕಸಮುದ್ರ, ಮಹಾಂತೇಶ ಕಡಲಬಾಳು, ಮಲ್ಲಿಕಾರ್ಜುನ ಮಗಿಮಾವಿನಹಳ್ಳಿ, ಆನಂದಳ್ಳಿ ಬಸವರಾಜ್ ಹಾಗೂ ಸ್ಥಳೀಯ ಮುಖಂಡ ಮೋರಗೇರಿ ಮೈಲಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

53 ವರ್ಷ ಕಳೆದರೂ ಸ್ಲಂ ನಿವಾಸಿಗಳಿಗೆ ಭೂಮಿಹಕ್ಕಿಲ್ಲ: ಕೂಡಲೇ ಹಕ್ಕು ಖಾತ್ರಿಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ/ಬೆಂಗಳೂರು: ರಾಜ್ಯದಲ್ಲಿ 1973ರಲ್ಲಿ ಜಾರಿಗೆ ಬಂದ ಸ್ಲಂ ಕಾಯ್ದೆಯಡಿ ಸರ್ಕಾರಿ ಹಾಗೂ ಖಾಸಗಿ ಮಾಲಿಕತ್ವದ ಸಾವಿರಾರು ಗುಡಿಸಲು ಪ್ರದೇಶಗಳನ್ನು ಅಧಿಕೃತವಾಗಿ ಸ್ಲಂಗಳೆಂದು ಘೋಷಣೆ ಮಾಡಲಾಗಿದ್ದರೂ, 53 ವರ್ಷಗಳು ಕಳೆದರೂ ಅಲ್ಲಿನ ನಿವಾಸಿಗಳಿಗೆ ಭೂಮಿಯ ಮಾಲಿಕತ್ವ ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿರುವ ಸ್ಲಂ ಜನಾಂದೋಲನ–ಕರ್ನಾಟಕ ರಾಜ್ಯ ಸಮಿತಿ, ಸ್ಲಂ ನಿವಾಸಿಗಳಿಗೆ ಕೂಡಲೇ ಭೂಮಿಹಕ್ಕು ಖಾತ್ರಿಗೊಳಿಸುವಂತೆ ಆಗ್ರಹಿಸಿದೆ.

ಈ ಸಂಬಂಧ ಬೆಂಗಳೂರಿನ ಗಾಂಧಿ ಭವನಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿ, 1973ರ ಸ್ಲಂ ಕಾಯ್ದೆಯಡಿ ಘೋಷಣೆಯಾಗಿರುವ ಕೊಳಗೇರಿ ಪ್ರದೇಶಗಳ ನಿವಾಸಿಗಳಿಗೆ ಭೂಮಿಹಕ್ಕು ಕಲ್ಪಿಸುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕದಲ್ಲಿ ಸ್ಲಂ ಕಾಯ್ದೆಯಡಿ ಇರುವ 708 ಖಾಸಗಿ ಮಾಲಿಕತ್ವದ ಸ್ಲಂ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಈ ಪ್ರದೇಶಗಳನ್ನು ಸ್ಲಂ ಕಾಯ್ದೆಯ ಸೆಕ್ಷನ್ 17ರ ಅಡಿಯಲ್ಲಿ ವಶಪಡಿಸಿಕೊಂಡು, ಭೂಮಿಹಕ್ಕು ಕಲ್ಪಿಸುವ ಉದ್ದೇಶದಿಂದ ಕನಿಷ್ಠ ₹2 ಸಾವಿರ ಕೋಟಿ ಅನುದಾನ ಮೀಸಲಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇತ್ತೀಚೆಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಪ್ರತಿ ಜಿಲ್ಲೆಗೆ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡುವುದಾಗಿ ಘೋಷಿಸಿರುವುದನ್ನು ಸ್ವಾಗತಿಸಿದ ಸಂಘಟನೆ, ಈ ಯೋಜನೆ ಕೇವಲ ಘೋಷಣೆಗೆ ಸೀಮಿತವಾಗದೆ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿ, ರಾಜ್ಯದ ಸ್ಲಂಗಳಲ್ಲಿ ವಾಸಿಸುವ ಕುಟುಂಬಗಳು ಹಾಗೂ ಲಕ್ಷಾಂತರ ನಿವೇಶನ ರಹಿತ ಕುಟುಂಬಗಳಿಗೆ ಇದರ ಪ್ರಯೋಜನ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಸ್ಲಂ ಜನಾಂದೋಲನ–ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ, ರಾಜ್ಯ ಸಂಘಟನಾ ಸಂಚಾಲಕ ಇಮ್ತಿಯಾಜ್ ಆರ್. ಮಾನ್ವಿ, ಜನಾರ್ಧನ ಹಳ್ಳಿಬೆಂಚಿ, ಮಹಿಳಾ ಸಂಚಾಲಕಿ ಚಂದ್ರಮ್ಮ, ವಿಭಾಗೀಯ ಸಂಚಾಲಕಿ ಶೋಭಾ ಕಮತರ, ಖಜಾಂಚಿ ಮಂಜುಬಾಯಿ, ಗದಗ ಭಾಗದ ಸಂಚಾಲಕಿ ಪುಷ್ಪಾ ಬಿಜಾಪೂರ, ಬೆಳಗಾವಿ ಸಂಚಾಲಕ ಫಕ್ಕೀರಪ್ಪ ತಳವಾರ, ಧಾರವಾಡ ಸಂಚಾಲಕ ರಸೂಲ್ ನದಾಫ, ಕೊಪ್ಪಳ ಸಂಚಾಲಕಿ ನಾಗರತ್ನ ಅಳವಂಡಿ, ಗಂಗಾವತಿ ಸಂಚಾಲಕಿ ರೇಷ್ಮಾಬಾನು, ಹೊಸಪೇಟೆ ಸಂಚಾಲಕಿ ವೆಂಕಮ್ಮ, ಚಿತ್ರದುರ್ಗ ಸಂಚಾಲಕಿ ಸುಧಾ, ಕೆ. ರಾಜಣ್ಣ, ತುಮಕೂರು ಸಂಚಾಲಕ ಅರುಣ ಟಿ., ತಿರುಮಲಯ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

4 ಲಕ್ಷ ಹುದ್ದೆಗಳು ಖಾಲಿ, ಭರ್ತಿ ಮಾಡುತ್ತಿರುವುದು ಕೆಲವೇ ಸಾವಿರ: ಸಂಕನೂರ ಪ್ರಶ್ನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ಸೀಮಿತ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗೆ ವಿರುದ್ಧವಾಗಿದೆ ಎಂದು ಪಶ್ಚಿಮ ಪದವೀಧರ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಪ್ರಶ್ನಿಸಿದರು.

ಪಟ್ಟಣದಲ್ಲಿ ಗುರುವಾರ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಪದವೀಧರರನ್ನು ಭೇಟಿ ಮಾಡಿ ಬೆಂಬಲ ಕೋರಿದ ಅವರು, ರಾಜ್ಯದ 43 ಇಲಾಖೆಗಳಲ್ಲಿ ಸುಮಾರು 2.88 ಲಕ್ಷ ಹುದ್ದೆಗಳು ಸೇರಿದಂತೆ ನಿಗಮ-ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಒಟ್ಟು ಸುಮಾರು ನಾಲ್ಕು ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಹೇಳಿದರು.

ಸರ್ಕಾರ ಕೇವಲ ಕೆಲವು ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಿರುವುದರಿಂದ ನಿರುದ್ಯೋಗಿ ಪದವೀಧರರಲ್ಲಿ ನಿರಾಸೆ ಮೂಡಿದೆ. ಕನಿಷ್ಠ ಎರಡು ಲಕ್ಷ ಹುದ್ದೆಗಳನ್ನಾದರೂ ಭರ್ತಿ ಮಾಡುವ ಮೂಲಕ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸರ್ಕಾರವನ್ನು ನಿರಂತರವಾಗಿ ಒತ್ತಾಯಿಸಲಾಗುವುದು ಎಂದರು.

ಕಳೆದ ಎರಡು ಅವಧಿಯಲ್ಲಿ ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಜನರು ಅವಕಾಶ ನೀಡಿದ್ದು, ಈ ಬಾರಿಯೂ ಬೆಂಬಲ ನೀಡುವ ವಿಶ್ವಾಸವಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲದೆ ಸದಾ ಪದವೀಧರರ ಸಮಸ್ಯೆಗಳ ಪರವಾಗಿ ವಿಧಾನಪರಿಷತ್ತಿನಲ್ಲಿ ಧ್ವನಿಯಾಗುವುದಾಗಿ ಭರವಸೆ ನೀಡಿದರು.

ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಶಿಕ್ಷಕರು, ಪದವೀಧರರು ಹಾಗೂ ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳ ಕುರಿತು ಪ್ರೊ. ಸಂಕನೂರ ಅವರು ಹಲವು ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಪದವೀಧರರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಗಂಗಾಧರ ಮೆಣಸಿನಕಾಯಿ, ಪ್ರಕಾಶ ಮಾದನೂರ, ಚಂದ್ರಶೇಖರ ಲಮಾಣಿ, ಸಂತೋಷ ರಾಥೋಡ, ಕಿರಣ ಹಿರೇಮಠ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಪದವೀಧರರು ಉಪಸ್ಥಿತರಿದ್ದರು.

ನಿರುದ್ಯೋಗಿ ಪದವೀಧರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದು ನನ್ನ ಆದ್ಯತೆಯಾಗಿದೆ. ಚುನಾವಣೆಯ ಸಮಯದಲ್ಲಿ ಮಾತ್ರವಲ್ಲದೆ ಸದಾ ಅವರ ಪರವಾಗಿ ನನ್ನ ಧ್ವನಿ ವಿಧಾನಪರಿಷತ್ತಿನಲ್ಲಿ ಪ್ರತಿಧ್ವನಿಸಲಿದೆ.

— ಪ್ರೊ. ಎಸ್.ವಿ. ಸಂಕನೂರ

ಕೃಷ್ಣ–ವಿಶ್ವಕರ್ಮ ಜಯಂತಿಗೆ ಭರದ ಸಿದ್ಧತೆ ; ಅರ್ಥಪೂರ್ಣ ಆಚರಣೆಗೆ ಎಡಿಸಿ ಸೂಚನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮುಂಬರುವ ಶ್ರೀ ಕೃಷ್ಣ ಜಯಂತಿ ಹಾಗೂ ವಿಶ್ವಕರ್ಮ ಜಯಂತಿಯನ್ನು ಎಲ್ಲರ ಸಹಕಾರ ಮತ್ತು ಸಮನ್ವಯದೊಂದಿಗೆ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಶ್ರೀ ಕೃಷ್ಣ ಜಯಂತಿ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ ಸಂಬಂಧ ಪ್ರತ್ಯೇಕವಾಗಿ ನಡೆದ ಪೂರ್ವಸಿದ್ಧತಾ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆ. 4ರಂದು ಶ್ರೀ ಕೃಷ್ಣ ಜಯಂತಿ

ಸೆಪ್ಟೆಂಬರ್ 4ರಂದು ಜರುಗಲಿರುವ ಶ್ರೀ ಕೃಷ್ಣ ಜಯಂತಿಯನ್ನು ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಿ, ವೇದಿಕೆ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ತಾಲೂಕುಗಳು, ಶಾಲಾ–ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.

ಶ್ರೀ ಕೃಷ್ಣನ ಜೀವನ, ತತ್ವಾದರ್ಶಗಳು ಹಾಗೂ ಭಗವದ್ಗೀತೆಯ ಸಂದೇಶವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸುವ ಮೂಲಕ ಕಾರ್ಯಕ್ರಮವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಬೇಕು ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು, ಊಟೋಪಹಾರ, ಆಸನ ವ್ಯವಸ್ಥೆ, ವೇದಿಕೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಸೆ. 17ರಂದು ವಿಶ್ವಕರ್ಮ ಜಯಂತಿ

ಇದೇ ವೇಳೆ ಸೆಪ್ಟೆಂಬರ್ 17ರಂದು ಜರುಗಲಿರುವ ವಿಶ್ವಕರ್ಮ ಜಯಂತಿಯನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಾ. ದುರಗೇಶ್ ಕೆ.ಆರ್. ತಿಳಿಸಿದರು.

ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರಿಗೆ ಆಹ್ವಾನ ನೀಡಬೇಕು. ಜಿಲ್ಲೆ ಹಾಗೂ ತಾಲೂಕು ಮಟ್ಟದ ಜತೆಗೆ ಶಾಲಾ–ಕಾಲೇಜುಗಳು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ವಿಶ್ವಕರ್ಮರ ಜೀವನ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಪ್ರತಿಭಾವಂತರು ಹಾಗೂ ಹಿರಿಯರನ್ನು ಗುರುತಿಸಿ ಸನ್ಮಾನಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಯಂತಿ ಕಾರ್ಯಕ್ರಮದ ಅಂಗವಾಗಿ ವೇದಿಕೆ, ಆಸನ, ಕುಡಿಯುವ ನೀರು, ಊಟೋಪಹಾರ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ವಿಶ್ವಕರ್ಮರ ಕುರಿತು ವಿಶೇಷ ಉಪನ್ಯಾಸ, ಪುಸ್ತಕ ಬಿಡುಗಡೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು.

ಎರಡೂ ಪೂರ್ವಸಿದ್ಧತಾ ಸಭೆಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಬಾರದು. ಮಹನೀಯರ ಜೀವನ, ತತ್ವಾದರ್ಶ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಜನರಿಗೆ ತಲುಪಿಸುವ ಮೂಲಕ ಯುವಜನತೆಗೂ ಪ್ರೇರಣೆ ನೀಡುವಂತಾಗಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡದೆ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು.
— ಡಾ. ದುರಗೇಶ್ ಕೆ.ಆರ್., ಅಪರ ಜಿಲ್ಲಾಧಿಕಾರಿ

ಹಾವೇರಿಯಲ್ಲಿ ದುರಂತ! ಬೆಳೆ ರಕ್ಷಿಸಲು ಇಟ್ಟಿದ್ದ ನಾಡಬಾಂಬ್‌ಗೆ ಬಲಿಯಾದ ಮೂಕಜೀವಿಗಳು

0

ಹಾವೇರಿ: ಕಾಡುಹಂದಿಗಳಿಂದ ಬೆಳೆ ರಕ್ಷಿಸಿಕೊಳ್ಳಲು ಜಮೀನಿನಲ್ಲಿ ಇಡಲಾಗಿದ್ದ ಎನ್ನಲಾದ ನಾಡಬಾಂಬ್ ಸೇವಿಸಿ ಎರಡು ಶ್ವಾನಗಳು ಹಾಗೂ ಒಂದು ನರಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ವೈ.ಟಿ. ಹೊನ್ನತ್ತಿ ಗ್ರಾಮದ ಸಮೀಪ ನಡೆದಿದೆ.

ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಮೀನುಗಳಲ್ಲಿ ಕಾಡುಹಂದಿಗಳ ಹಾವಳಿ ಹೆಚ್ಚಾಗಿದ್ದು, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗುತ್ತಿದೆ ಎನ್ನಲಾಗಿದೆ. ಇದರಿಂದ ಬೇಸತ್ತ ಕೆಲ ರೈತರು ಕಾಡುಹಂದಿಗಳನ್ನು ತಡೆಯುವ ಉದ್ದೇಶದಿಂದ ಜಮೀನಿನಲ್ಲಿ ನಾಡಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.

ಆದರೆ ಕಾಡುಹಂದಿಗಳ ಬದಲಿಗೆ ಎರಡು ಶ್ವಾನಗಳು ಹಾಗೂ ಒಂದು ನರಿ ಆ ಸ್ಫೋಟಕವನ್ನು ಸೇವಿಸಿದ್ದು, ಸಾವನ್ನಪ್ಪಿವೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ನಾಡಬಾಂಬ್ ಇಟ್ಟವರು ಯಾರು ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ನೇಪಾಳದಲ್ಲಿ ಭೀಕರ ಪ್ರವಾಹ: 8 ಕನ್ನಡಿಗರು ಸಂಪರ್ಕಕ್ಕೆ ಸಿಗುತ್ತಿಲ್ಲ- ಗೃಹ ಸಚಿವ ಪರಮೇಶ್ವರ್ ಮಾಹಿತಿ

0

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದಲ್ಲಿ 8 ಮಂದಿ ಕನ್ನಡಿಗರು ನಾಪತ್ತೆಯಾಗಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಈಶಾ ಫೌಂಡೇಷನ್‌ ವತಿಯಿಂದ ಕೈಲಾಸ-ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಬೆಂಗಳೂರು ಮೂಲದ ಹಾಗೂ ಅಮೆರಿಕದ ವರ್ಜೀನಿಯಾದಲ್ಲಿ ನೆಲೆಸಿರುವ ಶ್ರೀನಿವಾಸ್ ಸುಧೀರ್, ಸುಧೀಂದ್ರ, ಲಕ್ಷ್ಮಿನಾಥ್ ಗೋಪಿಶೆಟ್ಟಿ, ವೆಂಕಟ್ ಬೆಂಗಳೂರು ಹಾಗೂ ಕೇಶವರಾವ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಿಳಿದುಬಂದಿದೆ. ಧಾರವಾಡ ಮೂಲದ ಆಸ್ಟ್ರೇಲಿಯಾ ನಿವಾಸಿ ರಾಕೇಶ್ ನಾಯಕ್ ಕೂಡ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಈ ನಡುವೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಲ್ಲಿನಾಥ್ ಕೊಲಕುಂದಿ ಹಾಗೂ ಸಂಗಮೇಶ್ ಕನಕಪುರ ಸುರಕ್ಷಿತವಾಗಿದ್ದಾರೆ. ಇಬ್ಬರೂ ಹೈದರಾಬಾದ್‌ನ 23 ಜನರೊಂದಿಗೆ ಆಗಸ್ಟ್ 21ರಂದು ನೇಪಾಳಕ್ಕೆ ತೆರಳಿದ್ದರು. ಮಲ್ಲಿನಾಥ್ ಇದ್ದ ಸ್ಥಳದ ಸಮೀಪವೇ ಭೀಕರ ಪ್ರವಾಹ ಸಂಭವಿಸಿದ್ದು, ಕೆಲವೇ ನಿಮಿಷಗಳ ಅಂತರದಲ್ಲಿ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿ. ಪರಮೇಶ್ವರ್, ನಾಪತ್ತೆಯಾಗಿರುವ ಕನ್ನಡಿಗರ ಕುರಿತು ಯಾವುದೇ ಸಾವು-ನೋವಿನ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅವರನ್ನು ಸಂಪರ್ಕಿಸುವ ಹಾಗೂ ಪತ್ತೆಹಚ್ಚುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದರು.

ನಾಪತ್ತೆಯಾಗಿರುವವರ ಕುರಿತು ಮಾಹಿತಿ ಸಂಗ್ರಹಿಸಲು ಕಾಠ್ಮಂಡುವಿಗೆ ಹಿರಿಯ ಅಧಿಕಾರಿಯೊಬ್ಬರನ್ನು ಕಳುಹಿಸಲಾಗುವುದು. ಚೀನಾ ರಾಯಭಾರ ಕಚೇರಿ ಹಾಗೂ ಟಿಬೆಟಿಯನ್ ಅಧಿಕಾರಿಗಳೊಂದಿಗೂ ಸಂಪರ್ಕ ಸಾಧಿಸಲು ಪ್ರಯತ್ನಿಸಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಅಗತ್ಯವಿದ್ದರೆ ಸಚಿವರನ್ನೂ ಕಳುಹಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

ನೇಪಾಳದಲ್ಲಿ ಸಿಲುಕಿರುವ ಕರ್ನಾಟಕದವರು 1070-080-22253707 ಸಂಖ್ಯೆಗೆ ಸಂಪರ್ಕಿಸಿ ನೆರವು ಪಡೆಯಬಹುದು ಎಂದು ಅವರು ಮಾಹಿತಿ ನೀಡಿದರು.

ಇನ್ನು ಕೇಂದ್ರ ವಿದೇಶಾಂಗ ಸಚಿವಾಲಯದ ಮಾಹಿತಿ ಪ್ರಕಾರ, ನೇಪಾಳ ಹಾಗೂ ಟಿಬೆಟ್ ಭಾಗದಲ್ಲಿ ಹಲವು ಮಂದಿ ಸಂಪರ್ಕಕ್ಕೆ ಸಿಗದಿರುವುದು ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡಿನ 21 ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಲಾಗಿದೆ. ಭಾರತ ಸರ್ಕಾರ ನೇಪಾಳದೊಂದಿಗೆ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯಕ್ಕೆ ನೆರವು ನೀಡುತ್ತಿದೆ.

ಈ ನಡುವೆ ನೇಪಾಳದಿಂದ ಭಾರೀ ಪ್ರಮಾಣದ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಬಿಹಾರ ಹಾಗೂ ಉತ್ತರ ಪ್ರದೇಶದಲ್ಲೂ ಮುನ್ನೆಚ್ಚರಿಕೆ ವಹಿಸಲಾಗಿದೆ. ಗಂಡಕ್ ನದಿ ಪಾತ್ರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಬಿಹಾರದಲ್ಲಿ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಉತ್ತರ ಪ್ರದೇಶದ ಗಂಡಕ್ ಡ್ಯಾಮ್‌ನ ಹಲವು ಗೇಟ್‌ಗಳನ್ನು ತೆರೆಯಲಾಗಿದ್ದು, ನದಿಗೆ ನೀರು ಹರಿಸಲಾಗುತ್ತಿದೆ.

ನೇಪಾಳ ಪ್ರವಾಹ ದುರಂತದ ಹಿನ್ನೆಲೆಯಲ್ಲಿ ನಾಪತ್ತೆಯಾಗಿರುವ ಕನ್ನಡಿಗರ ಕುಟುಂಬಗಳಲ್ಲಿ ಆತಂಕ ಹೆಚ್ಚಾಗಿದ್ದು, ಅವರ ಸುರಕ್ಷತೆಗಾಗಿ ಕುಟುಂಬಸ್ಥರು ಹಾಗೂ ಸರ್ಕಾರದ ಅಧಿಕಾರಿಗಳು ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದಾರೆ.

ಭಾರತದ ಆಧ್ಯಾತ್ಮಿಕ ಪರಂಪರೆ ವಿಶ್ವಕ್ಕೆ ಮಾದರಿ: ಕೆ.ಎಸ್. ಈಶ್ವರಪ್ಪ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗ್ರಾಮ ದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿಜಾತ್ರಾ ಮಹೋತ್ಸವ 18 ವರ್ಷಗಳ ಬಳಿಕ ಒಕ್ಕಲಗೇರಿ ಓಣಿಯಲ್ಲಿ ಭಕ್ತಿಭಾವ ಹಾಗೂ ಸಂಭ್ರಮದಿಂದ ನಡೆಯುತ್ತಿದ್ದು, ಜಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವಿಯರ ದರ್ಶನ ಪಡೆದು ಪುನೀತರಾದರು.

ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಭಾರತ ದೇಶ ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಪರಂಪರೆಯಿಂದ ಶ್ರೀಮಂತವಾಗಿದೆ. ಜಗತ್ತಿನ ಹಲವೆಡೆ ಒಂದೇ ಧರ್ಮದವರೇ ಪರಸ್ಪರ ಬಡಿದಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಭಾರತದಲ್ಲಿ ವಿವಿಧ ಧರ್ಮ, ಜಾತಿ, ಪಂಥಗಳ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಇದಕ್ಕೆ ದೇಶದ ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಪರಂಪರೆಯೇ ಕಾರಣ ಎಂದರು.

18 ವರ್ಷಗಳ ಬಳಿಕ ದ್ಯಾಮವ್ವ ಹಾಗೂ ದುರ್ಗಮ್ಮ ದೇವಿಯರ ಆಶೀರ್ವಾದ ಪಡೆಯುವ ಅವಕಾಶ ನಮ್ಮೆಲ್ಲರ ತಂದೆ-ತಾಯಿಯರ ಪುಣ್ಯದ ಫಲವಾಗಿದೆ. ಜಾತಿ, ಮತ, ಪಂಥ, ಪಕ್ಷದ ಭೇದವಿಲ್ಲದೆ ದೇವಿಯರ ಭಕ್ತರಾಗಿ ಒಂದೆಡೆ ಸೇರಿರುವುದು ನಮ್ಮ ಪುಣ್ಯ. ರಾಜ್ಯದ ಕೆಲವೆಡೆ ಅತಿವೃಷ್ಟಿ, ಇನ್ನೂ ಕೆಲವೆಡೆ ಅನಾವೃಷ್ಟಿ ಉಂಟಾಗಿದೆ. ಎಲ್ಲೆಡೆ ಉತ್ತಮ ಮಳೆ-ಬೆಳೆ ಆಗಲಿ ಎಂದು ಜಾತ್ರೆಯಲ್ಲಿ ಸೇರಿರುವ ಭಕ್ತರೆಲ್ಲರೂ ದೇವಿಯರಲ್ಲಿ ಪ್ರಾರ್ಥಿಸೋಣ ಎಂದು ಹೇಳಿದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ದೇಶದಲ್ಲಿ ಭ್ರಷ್ಟಾಚಾರ, ಅನಾಚಾರ ಹಾಗೂ ದುರಾಚಾರ ಮಿತಿಮೀರಿವೆ. ದೇವಿ ರಕ್ತಬೀಜಾಸುರನನ್ನು ಸಂಹರಿಸಿದಂತೆ ಸಮಾಜದಲ್ಲಿನ ದುಷ್ಪ್ರವೃತ್ತಿಗಳನ್ನು ಮೆಟ್ಟಿಹಾಕಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಯುವ ಮುಖಂಡ ಅನಿಲ ಮೆಣಸಿನಕಾಯಿ ಮಾತನಾಡಿ, ಸಮಾನತೆ, ಜಾತ್ಯತೀತತೆ ಹಾಗೂ ಪಕ್ಷಾತೀತ ಭಾವನೆಯೊಂದಿಗೆ ಗ್ರಾಮದೇವತೆಗಳ ಜಾತ್ರೆ ನಡೆಯುತ್ತಿದೆ. ನಮ್ಮ ಹಿರಿಯರು ಜಾತ್ರೆಯನ್ನು ಯಾವ ಭಕ್ತಿ-ಭಾವದಿಂದ ಆಚರಿಸುತ್ತಿದ್ದರೋ ಅದನ್ನು ಮುಂದಿನ ಪೀಳಿಗೆಯೂ ಮುಂದುವರಿಸಬೇಕು. ಗದಗ ನಗರದಲ್ಲಿ ನಡೆಯುತ್ತಿರುವ ಈ ಜಾತ್ರೆ ರಾಜ್ಯ ಮಟ್ಟದಲ್ಲಿ ಇತಿಹಾಸ ನಿರ್ಮಿಸಿದೆ. ಭಕ್ತಿ ಇದ್ದಲ್ಲಿ ಶಕ್ತಿ ಇರುತ್ತದೆ. ಎಲ್ಲರ ಒಳಿತಿಗಾಗಿ ದೇವಿಯರಲ್ಲಿ ಭಕ್ತಿಯಿಂದ ಪ್ರಾರ್ಥಿಸೋಣ ಎಂದರು.

ಅಡ್ನೂರ-ಗದಗ ಮಠದ ಶ್ರೀಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಆಧ್ಯಾತ್ಮಿಕ ವಿದ್ಯಾಶ್ರಮದ ಶಿವಶರಣೆ ಶ್ರೀ ನೀಲಮ್ಮತಾಯಿ ಅಸುಂಡಿ ಪ್ರವಚನ ನೀಡಿದರು. ಟ್ರಸ್ಟ್ ಸಮಿತಿ ಅಧ್ಯಕ್ಷ ಕೊಟ್ರಪ್ಪ ನಿಂಗಪ್ಪ ಕಮತರ ಅಧ್ಯಕ್ಷತೆ ವಹಿಸಿದ್ದರು.

ಡಾ. ಎನ್.ಎಸ್. ನಿಂಬಣ್ಣವರ, ಡಾ. ಎಸ್.ಎನ್. ಬಿರಾದಾರ, ಡಾ. ಶ್ರೀಮತಿ ಎಂ.ಡಿ. ಗೋಜನೂರ, ವೀರಣ್ಣ ಮೇಟಿ, ಈಶ್ವರಯ್ಯ ಹಿರೇಮಠ, ಸಿದ್ದಲಿಂಗಪ್ಪ ಎಂ., ಗೋಪಾಲ ಅಗರವಾಲ, ರಾಜು ಖಾನಪ್ಪನವರ, ಈರಣ್ಣ ಕರಬಿಷ್ಠಿ, ನೀಲಪ್ಪ ಅಗರವಾಲ, ನೀಲಪ್ಪ ಕಮತರ, ಸಿದ್ಧಲಿಂಗೇಶ್ವರ ಪಾಟೀಲ, ಸತ್ಯಪ್ಪ ಗಿಡ್ಡಹನಮಣ್ಣವರ, ಸಿದ್ದಣ್ಣ ಮಾರನಬಸರಿ, ಕುಮಾರ ಮಾರನಬಸರಿ, ಉಮೇಶಗೌಡ ಪಾಟೀಲ, ಸದಾಶಿವಯ್ಯ ಮದರಿಮಠ, ಬಸವರಾಜ ಬಿಂಗಿ ಸೇರಿದಂತೆ ಹಲವರು ಉಪಸ್ಥಿತರಿದ್ದು ಸನ್ಮಾನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಬಸವರಾಜ ಮಡಿವಾಳರ, ಪರಶುರಾಮ ಹಳ್ಳದ, ಮಂಜುನಾಥ ಕಮತರ, ಮಲ್ಲಿಕಾರ್ಜುನ ಮಹಾಂತಶೆಟ್ಟರ, ಪ್ರಕಾಶ ಕಟ್ಟಿ, ಚೇತನ ಅಬ್ಬಿಗೇರಿ, ಶಿವು ಕುರಗೋಡ, ಆದರ್ಶ ಬಳಗಾನೂರ, ಕುಮಾರ ಮೆಣಸಗಿ, ಈಶ್ವರ ಹಳ್ಳಿ, ಈಶ್ವರ ಗೋಜನೂರ, ಸಚಿನ್ ಮೆಣಸಗಿ, ನಾಗರಾಜ ಮೆಣಸಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು.

ಭಾರತದ ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಪರಂಪರೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ನಮ್ಮ ದೇಶದ ಸಾಧು-ಸಂತರನ್ನು ಬೇರೆ ದೇಶಗಳಿಗೂ ಆಹ್ವಾನಿಸಲಾಗುತ್ತಿರುವುದು ಭಾರತೀಯ ಆಧ್ಯಾತ್ಮಿಕ ಪರಂಪರೆಯ ಶಕ್ತಿಗೆ ಸಾಕ್ಷಿಯಾಗಿದೆ.
— ಕೆ.ಎಸ್. ಈಶ್ವರಪ್ಪ

ಜಾತಿ, ಮತ, ಪಕ್ಷದ ಭೇದವಿಲ್ಲದೆ ದ್ಯಾಮವ್ವ-ದುರ್ಗಮ್ಮರ ಜಾತ್ರೆ ನಡೆಯುತ್ತಿರುವುದು ವಿಶೇಷ. ಭಕ್ತಿ ಇದ್ದಲ್ಲಿ ಶಕ್ತಿ ಇರುತ್ತದೆ. ಎಲ್ಲರ ಒಳಿತಿಗಾಗಿ ದೇವಿಯರಲ್ಲಿ ಪ್ರಾರ್ಥಿಸೋಣ.
— ಅನಿಲ ಮೆಣಸಿನಕಾಯಿ, ಯುವ ಮುಖಂಡರು

ಸಂಸ್ಕೃತ ಕಲಿತು ಬೆಳೆಸೋಣ: ಪ್ರಶಾಂತ ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಸಂಸ್ಕೃತ ಭಾಷೆ ನಮ್ಮ ದೇಶದ ಅಮೂಲ್ಯ ಸಂಪತ್ತಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಂಸ್ಕೃತ ಕಲಿಯುವ ಮೂಲಕ ಅದರ ಸಂರಕ್ಷಣೆ ಹಾಗೂ ಬೆಳವಣಿಗೆಗೆ ಮುಂದಾಗಬೇಕು ಎಂದು ವಿದ್ಯಾದಾನ ಸಮಿತಿ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರಶಾಂತ ಪಾಟೀಲ ಹೇಳಿದರು.

ಗದಗ ಜಿಲ್ಲಾ ಸಂಸ್ಕೃತ ಭಾರತೀ ವತಿಯಿಂದ ನಗರದ ಹಳೆ ಸರಾಫ ಬಜಾರದ ಜಗದಂಬಾ ಮಂದಿರದಲ್ಲಿ ಆಯೋಜಿಸಿದ್ದ ಸಂಸ್ಕೃತ ಸುಭಾಷಿತ ಪಾಠನ ವರ್ಗದ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಸ್‌ಎಸ್‌ಕೆ ಮಹಿಳಾ ಮಂಡಳಿ ಅಧ್ಯಕ್ಷೆ ಸ್ನೇಹಲತಾ ಪಾ. ಕಬಾಡಿ ಮಾತನಾಡಿ, ನಾವು ನಿತ್ಯ ಜೀವನದಲ್ಲಿ ಅನೇಕ ಸಂಸ್ಕೃತ ಪದಗಳನ್ನು ಬಳಸುತ್ತಿದ್ದರೂ ಅವು ಸಂಸ್ಕೃತ ಪದಗಳೆಂಬ ಅರಿವು ಹಲವರಿಗೆ ಇಲ್ಲ. ಆದ್ದರಿಂದ ಸಂಸ್ಕೃತವನ್ನು ಉಳಿಸಿ, ಬೆಳೆಸಿ, ಹೆಚ್ಚು ಹೆಚ್ಚು ಕಲಿಯಬೇಕು ಎಂದರು.

ಗದಗ ಜಿಲ್ಲಾ ಸಂಸ್ಕೃತ ಭಾರತೀ ಸಂಯೋಜಕ ಹಾಗೂ ಜಗದ್ಗುರು ತೋಂಟದಾರ್ಯ ಸಂಸ್ಕೃತ ಪಾಠಶಾಲೆಯ ಮುಖ್ಯಾಧ್ಯಾಪಕ ಎಸ್.ಎನ್. ಶಿಂಪಿಗೇರ ಮಾತನಾಡಿ, ಪ್ರಾಚೀನ ಮತ್ತು ಸಮೃದ್ಧ ಭಾಷೆಯಾಗಿರುವ ಸಂಸ್ಕೃತವನ್ನು ಎಲ್ಲರೂ ಕಲಿತು ಇತರರಿಗೂ ಕಲಿಸುವ ಮೂಲಕ ಗ್ರಾಮಮಟ್ಟದಿಂದಲೇ ಅದರ ಬೆಳವಣಿಗೆಗೆ ಶ್ರಮಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಶುರಾಮಸಾ ಬದಿಯವರು ವಹಿಸಿದ್ದರು. ಜಗದ್ಗುರು ತೋಂಟದಾರ್ಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿನಿಯರಿಂದ ಸಮೂಹ ನೃತ್ಯ ನಡೆಯಿತು.

ಸಂಸ್ಕೃತ ಭಾರತೀ ಬಾಲಕೇಂದ್ರ ಪ್ರಮುಖ ಶೈಲಜಾ ಕುಲಕರ್ಣಿ, ನಗರ ಸಂಯೋಜಕ ಮೌನೇಶ ಭಜಂತ್ರಿ, ಸಂಸ್ಕೃತ ಶಿಕ್ಷಕಿ ವಿಜಯಲಕ್ಷ್ಮೀ ಪಟ್ಟಣಶೆಟ್ಟಿ, ಸುಮನ್ ಖಟವಟೆ ಉಪಸ್ಥಿತರಿದ್ದರು. ರೇಖಾ ಮಡಿವಾಳರ ಕಾರ್ಯಕ್ರಮ ನಿರೂಪಿಸಿದರು. ಸುಮನಾ ಭಗಿನಿ ವಂದಿಸಿದರು. ಶಾಂತಿಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಸಂಸ್ಕೃತ ಭಾಷೆ ನಮ್ಮ ದೇಶದ ಅಮೂಲ್ಯ ಸಂಪತ್ತಾಗಿದೆ. ಸಂಸ್ಕೃತ ಸಂಭಾಷಣೆಯ ಮೂಲಕ ಅದರ ಪ್ರಚಾರವನ್ನು ಹೆಚ್ಚಿಸಿ, ಹೆಚ್ಚಿನ ಜನರು ಈ ಭಾಷೆಯನ್ನು ಕಲಿಯುವಂತೆ ಮಾಡಬೇಕು.

— ಪ್ರಶಾಂತ ಪಾಟೀಲ, ಸಂಸ್ಕೃತ ಉಪನ್ಯಾಸಕ