ಬೆಂಗಳೂರು: ಸಮೃದ್ಧವಾಗಿದ್ದ, ಶಕ್ತಿಯುತವಾಗಿದ್ದ ಇಡೀ ವಿಶ್ವದಲ್ಲೇ ಬಲಿಷ್ಠವಾದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಅಂದರೆ ಅದಕ್ಕೆ ಪ್ರಧಾನ ಮಂತ್ರಿಗಳೇ ಕಾರಣ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ನೀಡಬೇಕು ಹಾಗೂ ಈ ದೇಶದ ಜನರ ಕ್ಷಮೆ ಯಾಚನೆ ಮಾಡಬೇಕು” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು.
ನಿರಂತರ ಯುದ್ಧಗಳು ಮತ್ತು ಜಾಗತಿಕ ಅಸ್ಥಿರತೆಯು ದಶಕಗಳ ಅಭಿವೃದ್ಧಿಯನ್ನು ಹಿಮ್ಮೆಟ್ಟಿಸಬಹುದು ಮತ್ತು ದೊಡ್ಡ ಜನಸಂಖ್ಯೆಯನ್ನು ಮತ್ತೆ ಬಡತನಕ್ಕೆ ತಳ್ಳಬಹುದು ಎನ್ನುವ ಬಗ್ಗೆ ಪ್ರಧಾನಿ ನರೇಂದ್ರ ಅವರು ಸ್ಪಷ್ಟನೆ ನೀಡಬೇಕು. ಪ್ರಧಾನ ಮಂತ್ರಿಗಳು ಯಾವ ಅರ್ಥದಲ್ಲಿಬಡತನದ ಬಗ್ಗೆ ಹೇಳಿದ್ದಾರೆ. ಹಾಗೂ ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಮಾಹಿತಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ” ಎಂದರು.
“ದೇಶದ ಚುಕ್ಕಾಣಿಯನ್ನು ಪ್ರಧಾನಿ ಮೋದಿಯವರು ಹಿಡಿದು ಹನ್ನೆರಡು ವರ್ಷವಾಗಿದೆ. ಈ ಹಿಂದಿನ ಆಡಳಿತಕ್ಕೆ ಹೋಲಿಸಿದಾಗ ಇಲ್ಲಿಯವರೆಗೆ ಹೆಚ್ಚುವರಿಯಾಗಿ ಸುಮಾರು 45 ಲಕ್ಷ ಕೋಟಿ ಹಣವನ್ನು ಪೆಟ್ರೋಲ್ ಮತ್ತು ಡೀಸೆಲ್, ಗ್ಯಾಸ್ ಬೆಲೆ ಏರಿಕೆಯಿಂದ ಪಡೆದಿದ್ದಾರೆ” ಎಂದರು.
ಒಂದೆರಡು ಮೂರು ಕಂಪನಿಗಳಿಗೆ ರಕ್ಷಣೆ ಕೊಡಬೇಕು ಎಂದು ಬೆಲೆ ಏರಿಕೆ ಮಾಡಿದ್ದಾರೆ. ಜನರು ಎಚ್ಚೆತ್ತುಕೊಂಡಿಲ್ಲ. ನೀವು ಬಡತನದ ದವಡೆಗೆ ಸಿಲುಕುವಿರಿ ಎನ್ನುವ ಸಂದೇಶ ನೀಡಿರುವುದು ನೋಡಿದರೆ ನಾವೆಲ್ಲರೂ ಕೂಡ ತಲೆ ತಗ್ಗಿಸುವಂತಹ ವಿಚಾರ ಎಂದು ಹೇಳಿದರು.
ರಾಹುಲ್ ಗಾಂಧಿ ವಿದೇಶದಲ್ಲಿ ಮಾತನಾಡಿದಾಗ ದೇಶದ್ರೋಹಿ ಎನ್ನುತ್ತಾರೆ. ಸ್ವತಃ ಪ್ರಧಾನಮಂತ್ರಿಗಳೇ ವಿದೇಶಿ ನೆಲದಲ್ಲಿ ನಿಂತು ಬಡತನ ಎದುರಾಗಿದೆ ಅಂತ ಮಾತನಾಡಿದ್ದಾರೆ ಎಂದಾಗ, ಯಾವ ದೃಷ್ಟಿಕೋನದಲ್ಲಿ ಅವರು ಹೇಳಿದ್ದಾರೆ ಅನ್ನೋದನ್ನ ಸ್ಪಷ್ಟೀಕರಣ ಕೊಡಬೇಕು. ಅವರು ನೆದರ್ಲ್ಯಾಂಡ್ಸ್ ಅವರನ್ನ ಉದ್ದೇಶಿಸಿ ಮಾತಾಡಿದ್ರಾ? ಅಥವಾ ಭಾರತೀಯರಿಗೆ ಅಲ್ಲಿಂದ ಒಂದು ಸಂದೇಶ ಕೊಟ್ಟರೇ? ಅದನ್ನೂ ಹೇಳಬೇಕು ಎಂದು ತಿರುಗೇಟು ನೀಡಿದರು.
ರಾಹುಲ್ ಗಾಂಧಿಯವರು ಏನೇ ಮಾತಾಡಿದ್ರು ಕೂಡ ಆರೋಪಗಳನ್ನ ಮಾಡ್ತಾರೆ. ಭಾರತೀಯರ ಪರಿಸ್ಥಿತಿ ಇಂತಹ ಶೋಚನೀಯ ಸ್ಥಿತಿಗೆ ಹೋಗಿದೆಯೇ ಅನ್ನೋದನ್ನು ಕೂಡ ನಾವು ಚಿಂತನೆ ಮಾಡಬೇಕಾಗಿದೆ. ನನ್ನ ಪ್ರಕಾರ ಶೋಚನೀಯ ಪರಿಸ್ಥಿತಿಗೆ ನಾವ್ಯಾರು ಕೂಡ ಹೋಗಿಲ್ಲ. ಅವರು ಕೊರೋನಾ ಸಂದರ್ಭದಲ್ಲಿ ಪ್ರಧಾನಿ ಕೊಟ್ಟ ಕರೆಗೆ ಈ ರಾಷ್ಟ್ರದ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.
ಈಗ ಏಕಾಏಕಿ ಒಂದಷ್ಟು ಕಠಿಣ ಕ್ರಮಗಳನ್ನ, ಒಂದಷ್ಟು ಶಿಸ್ತು ಪಾಲನೆಯನ್ನ ಮಾಡಿ ಎಂದು ಮನವಿ ಮಾಡಿದ್ದಾರೆ. ಅವರು ಯುದ್ಧ ಪ್ರಾರಂಭ ಆದ ದಿನವೇ ಎಚ್ಚರಿಕೆ ವಹಿಸಬೇಕಾಗಿತ್ತು. ಅವತ್ತಿಂದ ಎಚ್ಚರಿಕೆಯನ್ನ ವಹಿಸದೆ ಈಗ ಹೇಳುತ್ತಿರುವುದು ಅನುಮಾನಗಳನ್ನ ಹುಟ್ಟು ಹಾಕಿದೆ. ಅವರ ಸ್ನೇಹಿತರಿಗೆ, ಹಿತೈಷಿ ಕಂಪೆನಿಗಳಿಗೆ ನಷ್ಟವಾಗುತ್ತೆ ಅಂತ ಹೇಳಿ ಭಾರತೀಯರ ಮೇಲೆ ಹೊರೆ ಹಾಕ್ತಾ ಇದ್ದಾರೆ ಎಂದು ತಿವಿದರು.

