Home Blog

ಗೇಮಿಂಗ್ ವ್ಯಸನಕ್ಕೆ ಬಲಿಯಾದ ಯುವಕರು: ಇಬ್ಬರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ

0

ಚಂಡೀಗಢ: ಆನ್‌ಲೈನ್ ಗೇಮಿಂಗ್ ವ್ಯಸನ ಮತ್ತೊಂದು ದುರಂತಕ್ಕೆ ಕಾರಣವಾಗಿದ್ದು, ದೊಡ್ಡ ಮೊತ್ತದ ಹಣ ಕಳೆದುಕೊಂಡು ಮಾನಸಿಕ ಒತ್ತಡಕ್ಕೆ ಒಳಗಾದ ಮೂವರು ಸ್ನೇಹಿತರು ವಿಷ ಸೇವಿಸಿರುವ ಘಟನೆ ಪಂಜಾಬ್‌ನ ನವಾಂಶಹರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೃತರನ್ನು ಪರಮ್‌ಜೀತ್ ಸಿಂಗ್ ಖಾಲ್ಸಾ (13) ಮತ್ತು ದಿಲ್‌ಪ್ರೀತ್ ಸಿಂಗ್ (21) ಎಂದು ಗುರುತಿಸಲಾಗಿದೆ. ಮರಿಂದರ್ ಸಿಂಗ್ (15) ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆಗಸ್ಟ್ 10ರಂದು ದಿಲ್‌ಪ್ರೀತ್ ಸಿಂಗ್ ತನ್ನ ಇಬ್ಬರು ಸ್ನೇಹಿತರಿಗೆ ಕರೆ ಮಾಡಿ ವಿಷ ಸೇವಿಸುವುದಾಗಿ ತಿಳಿಸಿದ್ದ. ಕೂಡಲೇ ಇಬ್ಬರೂ ಸ್ಥಳಕ್ಕೆ ತೆರಳಿದ್ದು, ಬಳಿಕ ಮೂವರು ಸೇರಿ ವಿಷಪೂರಿತ ಆಹಾರ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪರಮ್‌ಜೀತ್ ಸಿಂಗ್ ಮೃತಪಟ್ಟರೆ, ಮರುದಿನ ಆಗಸ್ಟ್ 11ರಂದು ದಿಲ್‌ಪ್ರೀತ್ ಸಿಂಗ್ ಕೂಡ ಸಾವನ್ನಪ್ಪಿದ್ದಾನೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮೂವರು ಆಪ್ತ ಸ್ನೇಹಿತರಾಗಿದ್ದರು. ಇವರಲ್ಲಿ ಒಬ್ಬ ಆನ್‌ಲೈನ್ ಗೇಮ್‌ಗಳಲ್ಲಿ ದೊಡ್ಡ ಪ್ರಮಾಣದ ಹಣ ಕಳೆದುಕೊಂಡಿದ್ದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಇದೇ ವೇಳೆ ಕುಟುಂಬದ ಒತ್ತಡವೂ ಹೆಚ್ಚಾಗಿದ್ದ ಕಾರಣ ಈ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಯಾವುದೇ ದೂರು ದಾಖಲಿಸದಿದ್ದರೂ, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೋದಿ-ಶಾ ಆಗಮನದ ನಡುವೆ ಕಲಾಪಕ್ಕೆ ಅಡ್ಡಿ: ಆಡಳಿತ-ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಮುಂಗಾರು ಅಧಿವೇಶನ ಅಂತ್ಯ

0

ನವದೆಹಲಿ:ಪ್ರತಿಪಕ್ಷಗಳ ತೀವ್ರ ಗದ್ದಲ, ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೇ ಲೋಕಸಭೆಯ ಮುಂಗಾರು ಅಧಿವೇಶನ ಇಂದು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ‘ವಂದೇ ಮಾತರಂ’ ಗೀತೆಯೊಂದಿಗೆ ಕಲಾಪ ಅಂತ್ಯಗೊಂಡಿದ್ದು, ಅಧಿವೇಶನದ ಕೊನೆಯ ದಿನವೂ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದಕ್ಕೆ ವೇದಿಕೆಯಾಯಿತು.

ನೀಟ್‌ ಸೇರಿದಂತೆ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಲೋಕಸಭೆಯಲ್ಲಿ ಉತ್ತರ ನೀಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಇದೇ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರು ಇಂದು ಸಂಸತ್‌ಗೆ ಆಗಮಿಸಿದ್ದರು.

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ತಮ್ಮ ಆಸನದಲ್ಲಿ ಕುಳಿತುಕೊಳ್ಳುವ ಮುನ್ನವೇ ವಿಪಕ್ಷ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬಳಿಕ ಸ್ಪೀಕರ್‌ ಅವರು ಸದಸ್ಯರಿಗೆ ಎದ್ದು ನಿಲ್ಲುವಂತೆ ಸೂಚಿಸಿ ‘ವಂದೇ ಮಾತರಂ’ ಗೀತೆಯನ್ನು ಮೊಳಗಿಸಲಾಯಿತು. ಗೀತೆ ಮುಕ್ತಾಯವಾದ ತಕ್ಷಣವೇ ಮತ್ತೆ ವಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿ ಗದ್ದಲ ಮುಂದುವರಿಸಿದರು.

ಸದನದಲ್ಲಿ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ ಸ್ಪೀಕರ್‌ ಓಂ ಬಿರ್ಲಾ ಅವರು ಯಾವುದೇ ಹೇಳಿಕೆ ನೀಡದೆ ಲೋಕಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಮುಂಗಾರು ಅಧಿವೇಶನದ ಅವಧಿಯುದ್ದಕ್ಕೂ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಸಂಘರ್ಷ ತೀವ್ರವಾಗಿತ್ತು. ಸಂಸತ್‌ ಭವನದ ಮಕರ ದ್ವಾರದ ಬಳಿ ಬಿಜೆಪಿ ಹಾಗೂ INDIA ಒಕ್ಕೂಟದ ಸಂಸದರು ಪರಸ್ಪರ ಪ್ರತಿಭಟನೆ ನಡೆಸಿದರು.

ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರದಲ್ಲಿ ಕಾಂಗ್ರೆಸ್‌ ಮೌನ ವಹಿಸಿದೆ ಎಂದು ಆರೋಪಿಸಿ ಬಿಜೆಪಿ ಸಂಸದರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಮಕರ ದ್ವಾರದ ಬಳಿ ಪ್ರತಿಭಟನೆ ನಡೆಸಿದರು.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ನೇತೃತ್ವದಲ್ಲಿ ವಿಪಕ್ಷ ಸಂಸದರು ಆಟಿಕೆ ಕೋತಿ ಹಿಡಿದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಸಂಸದ ಇಮ್ರಾನ್‌ ಪ್ರತಾಪ್‌ಗಢಿ ಮಾತನಾಡಿ, ಆಡಳಿತ ಪಕ್ಷವೇ ಸಂಸತ್‌ ಕಲಾಪ ನಡೆಯದಂತೆ ತಡೆಯುತ್ತಿದೆ ಎಂದು ಆರೋಪಿಸಿದರು. ಗೃಹ ಸಚಿವರು ಹಾಗೂ ಪ್ರಧಾನಿ ಸದನಕ್ಕೆ ಬಂದು ಪ್ರಮುಖ ವಿಷಯಗಳಿಗೆ ಉತ್ತರ ನೀಡಬೇಕು ಎಂಬುದು ವಿಪಕ್ಷಗಳ ಸಹಜ ಬೇಡಿಕೆ ಎಂದು ಹೇಳಿದರು.

ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಚರ್ಚೆಗಳ ಸಂದರ್ಭದಲ್ಲಿ ಗೃಹ ಸಚಿವರು ಅಥವಾ ಪ್ರಧಾನಿ ಸದನಕ್ಕೆ ಬಂದು ಉತ್ತರಿಸದಿರುವುದನ್ನು ಪ್ರಶ್ನಿಸಿದ ಅವರು, ವಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು.

ಇತ್ತ ಕೇಂದ್ರ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಅವರು ಲೋಕಸಭೆ ಚರ್ಚೆ ನಡೆಸುವ ಪವಿತ್ರ ವೇದಿಕೆಯಾಗಿದೆ. ಆದರೆ ವಿಪಕ್ಷಗಳು ಯಾವುದೇ ವಿಚಾರವನ್ನು ಕೇಳಿಸಿಕೊಳ್ಳಲು ಸಿದ್ಧವಾಗಿಲ್ಲ ಎಂದು ಟೀಕಿಸಿದರು.

ಚರ್ಚೆಯೇ ನಡೆಯದಂತೆ ಸದನದಲ್ಲಿ ಗದ್ದಲ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಸಂಸತ್ತು ಯಾರೊಬ್ಬರ ವೈಯಕ್ತಿಕ ಇಚ್ಛೆಯಂತೆ ನಡೆಯುವುದಿಲ್ಲ. ಇದು ಇಡೀ ದೇಶದ ಪ್ರತಿನಿಧಿಗಳ ವೇದಿಕೆಯಾಗಿದೆ ಎಂದು ಅವರು ಹೇಳಿದರು.

ಒಟ್ಟಾರೆ, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ನಿರಂತರ ಗದ್ದಲ ಹಾಗೂ ಪ್ರತಿಭಟನೆಗಳ ನಡುವೆಯೇ ಲೋಕಸಭೆಯ ಮುಂಗಾರು ಅಧಿವೇಶನ ಅಂತ್ಯಗೊಂಡಿದೆ.

ಪ್ರದೋಷ್ ಮಾಫಿ ಸಾಕ್ಷಿ ವಿಚಾರಕ್ಕೆ ಹೈಕೋರ್ಟ್ ಎಂಟ್ರಿ: ದರ್ಶನ್ ಅರ್ಜಿ ಇಂದು ಮಧ್ಯಾಹ್ನ ವಿಚಾರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದ್ದು, ನಟ ದರ್ಶನ್ 59ನೇ ಸಿಸಿಹೆಚ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಯ ವಿಚಾರಣೆಯಲ್ಲಿ ತಮ್ಮ ವಾದವನ್ನೂ ಆಲಿಸಬೇಕೆಂದು ದರ್ಶನ್ ಪರ ವಕೀಲರು ಮನವಿ ಮಾಡಿದ್ದರೂ, ಆರೋಪಿಗಳ ವಾದ ಕೇಳುವ ಅಗತ್ಯವಿಲ್ಲ ಎಂದು ಸಿಸಿಹೆಚ್ ನ್ಯಾಯಾಲಯ ಸ್ಪಷ್ಟಪಡಿಸಿ ಅರ್ಜಿಯನ್ನು ತಿರಸ್ಕರಿಸಿತ್ತು. ಇದೇ ಆದೇಶವನ್ನು ಪ್ರಶ್ನಿಸಿ ಇದೀಗ ಹೈಕೋರ್ಟ್ ಮೆಟ್ಟಿಲೇರಲಾಗಿದೆ.

ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದ್ದು, ಮಾಫಿ ಸಾಕ್ಷಿ ಪ್ರಕ್ರಿಯೆಯಲ್ಲಿ ಆರೋಪಿಗಳಿಗೆ ವಾದ ಮಂಡಿಸುವ ಅವಕಾಶ ನಿರಾಕರಿಸಿರುವುದು ಕಾನೂನುಬದ್ಧವಲ್ಲ ಎಂದು ವಾದಿಸಿದ್ದಾರೆ. ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಅರ್ಜಿಯ ವಿಚಾರಣೆಯನ್ನು ಇಂದು (ಆಗಸ್ಟ್ 13) ಮಧ್ಯಾಹ್ನ 2:30ಕ್ಕೆ ನಿಗದಿಪಡಿಸಿದೆ. ಜೊತೆಗೆ ರಾಜ್ಯದ ವಿಶೇಷ ಅಭಿಯೋಜಕರಿಗೆ ಈ ಕುರಿತು ಮಾಹಿತಿ ನೀಡುವಂತೆ ದರ್ಶನ್ ಪರ ವಕೀಲರಿಗೆ ಸೂಚನೆ ನೀಡಿದೆ.

ಪ್ರಕರಣದ 14ನೇ ಆರೋಪಿ ಪ್ರದೋಷ್, ಕೊಲೆ ನಡೆದ ದಿನದ ಸಂಪೂರ್ಣ ಘಟನೆ ಬಗ್ಗೆ ನ್ಯಾಯಾಲಯದ ಮುಂದೆ ಸತ್ಯಾಂಶ ಬಿಚ್ಚಿಡಲು ಸಿದ್ಧನಿದ್ದೇನೆ ಎಂದು ಹೇಳಿ, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿ ಪ್ರಕರಣದ ದಿಕ್ಕನ್ನೇ ಬದಲಿಸುವ ಸಾಧ್ಯತೆ ಇರುವುದರಿಂದ, ಅದಕ್ಕೂ ಮೊದಲು ಉಳಿದ ಆರೋಪಿಗಳ ಅಭಿಪ್ರಾಯ ಕೇಳಬೇಕೇ ಎಂಬ ಪ್ರಶ್ನೆ ಸಿಸಿಹೆಚ್ ನ್ಯಾಯಾಲಯದ ಮುಂದೆ ಉದ್ಭವಿಸಿತ್ತು.

ಆದರೆ 59ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ, ಮಾಫಿ ಸಾಕ್ಷಿ ವಿಚಾರದಲ್ಲಿ ಇತರ ಆರೋಪಿಗಳ ಆಕ್ಷೇಪಣೆ ಪರಿಗಣಿಸುವ ಅವಶ್ಯಕತೆ ಇಲ್ಲ ಎಂದು ಆದೇಶ ನೀಡಿದ್ದರು. ಈ ಆದೇಶ ದರ್ಶನ್‌ಗೆ ಹಿನ್ನಡೆಯಾದ ಬೆನ್ನಲ್ಲೇ, ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಆರಂಭಿಸಿದ್ದಾರೆ.

ಖರ್ಗೆ ರ‍್ಯಾಲಿ ಬಳಿಕ ‘ಶುದ್ಧೀಕರಣ’ ಹೋಮ ವಿವಾದ: ರಾಜ್ಯಸಭೆಯಲ್ಲಿ ಸಿಡಿದ ರಾಜಕೀಯ ಕದನ

0

ನವದೆಹಲಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡೆಸಿದ ಸಾರ್ವಜನಿಕ ರ‍್ಯಾಲಿಯ ಬಳಿಕ ಅದೇ ಸ್ಥಳದಲ್ಲಿ ‘ಶುದ್ಧೀಕರಣ’ ಹೋಮ ನಡೆಸಿರುವ ಘಟನೆ ರಾಷ್ಟ್ರ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ದಲಿತ ಸಮುದಾಯಕ್ಕೆ ಸೇರಿದ ಖರ್ಗೆ ವಿರುದ್ಧ ಜಾತಿ ಆಧಾರಿತ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ವಿಷಯ ಸಂಸತ್ತಿನಲ್ಲೂ ಪ್ರತಿಧ್ವನಿಸಿದೆ.

ಆಗಸ್ಟ್ 8ರಂದು ಖರ್ಗೆ ರ‍್ಯಾಲಿ ನಡೆಸಿದ ರಾಮಲೀಲಾ ಮೈದಾನದಲ್ಲಿ ಆಗಸ್ಟ್ 10ರಂದು ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ ಸಂಘಟನೆ ಶುದ್ಧೀಕರಣ ಹೋಮ ನಡೆಸಿತ್ತು. ಈ ಬೆಳವಣಿಗೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್, ಖರ್ಗೆ ದಲಿತ ನಾಯಕ ಎಂಬ ಕಾರಣಕ್ಕೆ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದೆ.

ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಈ ದೇಶದಲ್ಲಿ ದಲಿತರಿಗೆ ಜಾಗವಿಲ್ಲ ಎಂಬುದನ್ನು ನಾವು ಹೇಳುತ್ತಲೇ ಇದ್ದೇವೆ. ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಲಾಗುತ್ತಿದೆ. ನಾನು ನನ್ನ ಭಾಷಣದಲ್ಲಿ ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಮಾತನಾಡಿಲ್ಲ. ಸರ್ಕಾರದ ವೈಫಲ್ಯಗಳ ಬಗ್ಗೆ ಮಾತ್ರ ಪ್ರಸ್ತಾಪಿಸಿದ್ದೆ. ಹಾಗಿದ್ದರೆ ನಾನು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಖರ್ಗೆ ರ‍್ಯಾಲಿ ನಡೆದ ಸ್ಥಳವನ್ನು ‘ಶುದ್ಧೀಕರಿಸುವ’ ಹೆಸರಿನಲ್ಲಿ ಹೋಮ ನಡೆಸಿರುವುದು ಹಿಂದೂ ಧರ್ಮದ ಮೌಲ್ಯಗಳಿಗೂ ವಿರುದ್ಧವಾಗಿದ್ದು, ಇಂತಹ ಕ್ರಮಗಳು ಮುಂದಿನ ದಿನಗಳಲ್ಲಿ ಜಾತಿ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಕಾಂಗ್ರೆಸ್ ಎಚ್ಚರಿಸಿದೆ. ಉತ್ತರಾಖಂಡ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಗೋಡಿಯಾಲ್, ಹೋಮ ನಡೆಸಿದ ಶ್ರೀರಾಮ ಸೇನಾ ಸಂಘಟನೆಗೆ ಬಿಜೆಪಿಯ ಸಂಪರ್ಕವಿದೆ ಎಂದು ಆರೋಪಿಸಿದ್ದು, ಬಿಜೆಪಿ ಈ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ.

ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, “ಖರ್ಗೆ ಅವರ ಬಗ್ಗೆ ನಮಗೆ ಗೌರವವಿದೆ. ನಡೆದ ಶುದ್ಧೀಕರಣ ಕಾರ್ಯಕ್ರಮವನ್ನು ನಾವು ಖಂಡಿಸುತ್ತೇವೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಭರವಸೆ ನೀಡಿದರು. ರಾಜ್ಯಸಭಾ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಕೂಡ ಹೋಮ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಶುದ್ಧೀಕರಣ ಹೋಮ ನಡೆಸಿದ ಶ್ರೀರಾಮ ಸೇನಾ ಧರ್ಮಾರ್ಥ ಸೇವಾ ನ್ಯಾಸ್ ಸಂಘಟನೆ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದು, ರಾಮಲೀಲಾ ಮೈದಾನವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಮೀಸಲಾದ ಸ್ಥಳವಾಗಿದ್ದು, ರಾಜಕೀಯ ರ‍್ಯಾಲಿಗಳಿಗೆ ಅವಕಾಶ ನೀಡಬಾರದು ಎಂದು ವಾದಿಸಿದೆ. ಜೊತೆಗೆ ಖರ್ಗೆ ರ‍್ಯಾಲಿಯಲ್ಲಿ ಸನಾತನ ಧರ್ಮದ ಭಾವನೆಗಳಿಗೆ ಧಕ್ಕೆ ತರುವ ಘೋಷಣೆಗಳು ಕೇಳಿಬಂದಿದ್ದವು ಎಂದು ಬಿಜೆಪಿ ಆರೋಪಿಸಿದ್ದು, ಕಾಂಗ್ರೆಸ್ ಅದನ್ನು ಸಂಪೂರ್ಣವಾಗಿ ನಿರಾಕರಿಸಿದೆ. ಪರಿಣಾಮ ಈ ಘಟನೆ ಉತ್ತರಾಖಂಡ ರಾಜಕೀಯದಲ್ಲಿ ಹೊಸ ಬಿಜೆಪಿ-ಕಾಂಗ್ರೆಸ್ ಸಂಘರ್ಷಕ್ಕೆ ಕಾರಣವಾಗಿದೆ.

ನನ್ನ ಮನೆಯ ಬಳಿ ಮಹಜರು ನಾಟಕ ಮಾಡಲಾಗಿದೆ: ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್ ರಾಜ್ ಕಿಡಿ

0

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈಬಿಟ್ಟಿರುವ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿರುವ ಅವರು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆಯೂ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ತಮ್ಮ ಮತದಾರರ ಗುರುತಿನ ಚೀಟಿ ಖಾಯಂ ಆಗಿ ವರ್ಗಾವಣೆಯಾಗಿದೆ. ಹೀಗಾಗಿ ಫಾರ್ಮ್-6 ಭರ್ತಿ ಮಾಡಿ ಹೊಸ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸುವಂತೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ತೋರಿಸಲಾಗಿತ್ತು. ಇದು ನಿಜವಲ್ಲವೇ ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದ್ದಾರೆ.

ಈ ವಿಚಾರವನ್ನು ತಾವು ಪ್ರಸ್ತಾಪಿಸಿದ ಬಳಿಕ ಕೆಲವೇ ಗಂಟೆಗಳಲ್ಲಿ ಅಧಿಕಾರಿಗಳು ಕರೆ ಮಾಡಿ ತಪ್ಪಾಗಿದೆ, ಸರಿಪಡಿಸುತ್ತೇವೆ ಎಂದು ತಿಳಿಸಿದ್ದರು. ಅಲ್ಲದೆ, ಈ ವಿಚಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವಂತೆ ಮನವಿ ಮಾಡಿದ್ದರು ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ಆದರೆ, ಅದೇ ದಿನ ಸಂಜೆ ಸುದ್ದಿಗೋಷ್ಠಿ ನಡೆಸಿ ತಮ್ಮ ಹೆಸರು ಡಿಲೀಟ್ ಆಗಿಲ್ಲ, ಬದಲಾಗಿ ವರ್ಗಾವಣೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದು ಸತ್ಯಕ್ಕೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ವಿಷಯ ಕೈಮೀರಿ ಹೋಗುತ್ತಿದ್ದಂತೆ ರಾತ್ರಿ ಸುಮಾರು 8.30ರ ವೇಳೆಗೆ ಬಿಎಲ್‌ಒ ಸಿಬ್ಬಂದಿಯನ್ನು ಕ್ಯಾಮೆರಾದೊಂದಿಗೆ ತಮ್ಮ ಹಳೆಯ ಮನೆ ವಿಳಾಸಕ್ಕೆ ಕಳುಹಿಸಲಾಗಿತ್ತು ಎಂದು ಪ್ರಕಾಶ್ ರಾಜ್ ಆರೋಪಿಸಿದ್ದಾರೆ.

ಅಲ್ಲಿ ನೆರೆಹೊರೆಯವರನ್ನು ಕರೆದು ಮಹಜರು ನಡೆಸಿದಂತೆ ಮಾಡಿ, ಅದರ ದೃಶ್ಯಗಳನ್ನು ಬಳಿಕ ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ಪರ ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ನೀಡಿ, ತಾವು ಹೇಳಿದ್ದು ತಪ್ಪು ಎಂಬಂತೆ ಬಿಂಬಿಸಲು ಪ್ರಯತ್ನಿಸಲಾಗಿದೆ ಎಂದು ಅವರು ದೂರಿದ್ದಾರೆ.

ತಾವು ವೃತ್ತಿಯಿಂದ ನಟ ಹಾಗೂ ಸೆಲೆಬ್ರಿಟಿಯಾಗಿರಬಹುದು. ಆದರೆ ನಾಗರಿಕನಾಗಿ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯಂತೆ ತಮಗೂ ಸಮಾನ ಹಕ್ಕುಗಳಿವೆ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

ತಮ್ಮ ಹೋರಾಟ ಕೇವಲ ವೈಯಕ್ತಿಕ ವಿಚಾರವಲ್ಲ. ಪ್ರತಿಯೊಬ್ಬ ನಾಗರಿಕನ ಆತ್ಮಗೌರವ ಮತ್ತು ಮತದಾನದ ಹಕ್ಕಿನ ಹೋರಾಟವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತಿ ಐದು ವರ್ಷಕ್ಕೊಮ್ಮೆ ಮತದಾರರ ಮುಂದೆ ಬಂದು ಮತಕ್ಕಾಗಿ ಕೈಮುಗಿದು ಮನವಿ ಮಾಡುವ ರಾಜಕೀಯ ನಾಯಕರು, ಅದೇ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಸಾಲಿನಲ್ಲಿ ನಿಂತು ಬೇಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಿಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳನ್ನು ಎತ್ತಿರುವ ಪ್ರಕಾಶ್ ರಾಜ್, “ಇದೇನು ನಾಟಕ? ಇದೇನು ರಾಜಕೀಯ? ನಿಮ್ಮ ಅಜೆಂಡಾ ಏನು?” ಎಂದು ಚುನಾವಣಾ ವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿನ ತಮ್ಮ ಹೆಸರು ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ಕ್ರಮದ ಕುರಿತು ಪ್ರಕಾಶ್ ರಾಜ್ ಮಾಡಿರುವ ಆರೋಪಗಳು ಇದೀಗ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆಗಳು: ಸಿಎಂ ಡಿ ಕೆ ಶಿವಕುಮಾರ್

0

ಬೆಂಗಳೂರು: “ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ, “ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ. ಅವರ ಸಹಕಾರಕ್ಕೆ ಕೃತಜ್ಞತೆ” ಎಂದು ತಿಳಿಸಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ವಿಐಪಿ ಸೆಲ್ʼನಿಂದ 20 ಕೈದಿಗಳ ಬ್ಯಾರಕ್ʼಗೆ ಎತ್ತಂಗಡಿ

0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜೈಲಿನ ವಿಐಪಿ ಸೆಲ್‌ನಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದ ಆರೋಪ ಬೆಳಕಿಗೆ ಬಂದ ಬೆನ್ನಲ್ಲೇ ಜೈಲು ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಮೂಲಗಳ ಪ್ರಕಾರ, ಪ್ರಜ್ವಲ್ ರೇವಣ್ಣ ಅವರನ್ನು ವಿಐಪಿ ಸೆಲ್‌ನಿಂದ ಸಾಮಾನ್ಯ ಕೈದಿಗಳು ಇರುವ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ. ಸುಮಾರು 20 ಕೈದಿಗಳಿರುವ ಬ್ಯಾರಕ್‌ಗೆ ಅವರನ್ನು ಶಿಫ್ಟ್ ಮಾಡಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಇರಿಸಲಾಗಿದೆ ಎನ್ನಲಾಗಿದೆ.

ಮೊಬೈಲ್‌ನಲ್ಲಿ ಹಲವು ವಿಡಿಯೋ, ಆಡಿಯೋ ದಾಖಲೆ ಪತ್ತೆ?

ಜೈಲಿನಲ್ಲಿ ಪತ್ತೆಯಾದ ಮೊಬೈಲ್ ಫೋನ್‌ನ ಪರಿಶೀಲನೆ ವೇಳೆ ಸುಮಾರು 90 ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಪ್ರಜ್ವಲ್ ರೇವಣ್ಣ ಅವರು ಪರಿಚಿತರೊಂದಿಗೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಗಳ ಆಡಿಯೋ ದಾಖಲೆಗಳೂ ಮೊಬೈಲ್‌ನಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ.

ಜೈಲಿನಲ್ಲಿದ್ದ ಮೊಬೈಲ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬರೊಂದಿಗೆ ನಡೆಸಿದ ಸಂಭಾಷಣೆಯ ವಿವರಗಳೂ ತನಿಖಾಧಿಕಾರಿಗಳ ಗಮನಕ್ಕೆ ಬಂದಿವೆ ಎಂದು ತಿಳಿದುಬಂದಿದೆ. ಆದರೆ, ಮೊಬೈಲ್‌ನಲ್ಲಿರುವ ವಿಡಿಯೋಗಳು ಮತ್ತು ಆಡಿಯೋ ದಾಖಲೆಗಳ ಮೂಲ, ಅವುಗಳನ್ನು ಯಾವಾಗ ಹಾಗೂ ಹೇಗೆ ದಾಖಲಿಸಲಾಗಿದೆ ಎಂಬುದರ ಕುರಿತು ತನಿಖೆಯಿಂದಲೇ ಸ್ಪಷ್ಟ ಮಾಹಿತಿ ಹೊರಬರಬೇಕಿದೆ.

ಜೈಲು ಕೊಠಡಿಯಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದ ವಿಡಿಯೋ ವೈರಲ್

ಇದರ ನಡುವೆ ಪ್ರಜ್ವಲ್ ರೇವಣ್ಣ ಅವರು ಜೈಲಿನ ಕೊಠಡಿಯೊಳಗೆ ಜೈಲು ಸಮವಸ್ತ್ರ ಧರಿಸದೇ ವೈಯಕ್ತಿಕ ಉಡುಪಿನಲ್ಲಿ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವಿಡಿಯೋವೊಂದು ಬಹಿರಂಗವಾಗಿದೆ.

ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಸದ್ಯಕ್ಕೆ ನಿಖರವಾಗಿ ತಿಳಿದುಬಂದಿಲ್ಲ. ಆದರೆ ವಿಡಿಯೋ ಬಹಿರಂಗವಾಗಿರುವುದು ಜೈಲು ಆಡಳಿತದಲ್ಲಿ ಭದ್ರತಾ ಲೋಪದ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಿಸಿಬಿ ದಾಳಿ ವೇಳೆ ಮೊಬೈಲ್ ಪತ್ತೆ

ನಿನ್ನೆ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಕೊಠಡಿ ಮೇಲೆ ದಾಳಿ ನಡೆಸಿದ ವೇಳೆ ಒಂದು ಮೊಬೈಲ್ ಫೋನ್ ಪತ್ತೆಯಾಗಿತ್ತು ಎಂದು ತಿಳಿದುಬಂದಿದೆ.

ಜೈಲಿನೊಳಗೆ ಮೊಬೈಲ್ ಫೋನ್ ಹೇಗೆ ಪ್ರವೇಶಿಸಿತು? ಅದನ್ನು ಪ್ರಜ್ವಲ್ ರೇವಣ್ಣ ಅವರಿಗೆ ಯಾರು ನೀಡಿದರು? ಎಷ್ಟು ದಿನಗಳಿಂದ ಅವರು ಮೊಬೈಲ್ ಬಳಸುತ್ತಿದ್ದರು? ಮೊಬೈಲ್ ಮೂಲಕ ಯಾರೊಂದಿಗೆ ಸಂಪರ್ಕದಲ್ಲಿದ್ದರು? ಎಂಬ ಹಲವು ಪ್ರಶ್ನೆಗಳು ಇದೀಗ ತನಿಖೆಯ ವ್ಯಾಪ್ತಿಗೆ ಬಂದಿವೆ. ಪ್ರಕರಣದ ಹಿನ್ನೆಲೆಯಲ್ಲಿ ಜೈಲು ಭದ್ರತಾ ವ್ಯವಸ್ಥೆ, ಸಿಬ್ಬಂದಿಯ ಕರ್ತವ್ಯ ಹಾಗೂ ಜೈಲು ನಿಯಮಗಳ ಪಾಲನೆ ಬಗ್ಗೆಯೂ ತನಿಖೆ ನಡೆಯುವ ಸಾಧ್ಯತೆ ಇದೆ.

ಲಡಾಖ್ನ ಲೇಹ್ʼನಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ 2 ಬಾರಿ ಭೂಕಂಪ: 5.5 ಮತ್ತು 4.3 ತೀವ್ರತೆಯ ಕಂಪನ

0

ಲೇಹ್: ಲಡಾಖ್‌ನ ಲೇಹ್‌ನಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ಎರಡು ಬಾರಿ ಭೂಕಂಪ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರದ ಮಾಹಿತಿ ಪ್ರಕಾರ, ಬೆಳಿಗ್ಗೆ 6:05ರ ಸುಮಾರಿಗೆ 10 ಕಿಲೋಮೀಟರ್ ಆಳದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ.

ಇದಾದ ಕೆಲವೇ ಗಂಟೆಗಳ ಬಳಿಕ ಬೆಳಿಗ್ಗೆ 9:54ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು, 4.3 ತೀವ್ರತೆಯ ಭೂಕಂಪ ದಾಖಲಾಗಿದೆ. ಸತತವಾಗಿ ಎರಡು ಬಾರಿ ಭೂಕಂಪ ಸಂಭವಿಸಿರುವುದು ಜನರಲ್ಲಿ ಭಯದ ವಾತಾವರಣ ನಿರ್ಮಿಸಿದೆ.

ಈವರೆಗೆ ಭೂಕಂಪನದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಅಧಿಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.

ಲಡಾಖ್ ಭೂಕಂಪನ ವಲಯಕ್ಕೆ ಒಳಪಡುವ ಪ್ರದೇಶವಾಗಿರುವುದರಿಂದ ಇಲ್ಲಿ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತಿರುತ್ತವೆ. ಆದರೂ ಒಂದೇ ದಿನದಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ಎರಡು ಬಾರಿ ಭೂಕಂಪ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕೆಂಪುಕೋಟೆ ಬಾಂಬ್ ದಾಳಿ ರಹಸ್ಯ ಬಯಲು: AQIS ಕೈವಾಡ ದೃಢಪಡಿಸಿದ ಯುಎನ್ ವರದಿ

0

ನ್ಯೂಯಾರ್ಕ್/ನವದೆಹಲಿ: ಕಳೆದ ನವೆಂಬರ್ 2025ರಲ್ಲಿ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಸಮೀಪ ನಡೆದ ಭೀಕರ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ತನ್ನ 38ನೇ ‘Analytical Support and Sanctions Monitoring Team’ ವರದಿಯಲ್ಲಿ, ಈ ಉಗ್ರ ದಾಳಿಯನ್ನು ಆಲ್-ಖೈದಾ ಇನ್ ದಿ ಇಂಡಿಯನ್ ಸಬ್‌ಕಾಂಟಿನೆಂಟ್ (AQIS) ಸಂಘಟನೆಯೇ ನಡೆಸಿದೆ ಎಂದು ಅಧಿಕೃತವಾಗಿ ಉಲ್ಲೇಖಿಸಿದೆ. ಈ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ವರದಿಯ ಪ್ರಕಾರ, AQIS ಭಾರತೀಯ ಉಪಖಂಡದಲ್ಲಿ ತನ್ನ ಚಟುವಟಿಕೆಗಳನ್ನು ವೇಗವಾಗಿ ವಿಸ್ತರಿಸುತ್ತಿದ್ದು, ಸಣ್ಣ ತಂಡಗಳ ಮೂಲಕ ಕಾರ್ಯಾಚರಣೆ ನಡೆಸುವ ತಂತ್ರ ಅನುಸರಿಸುತ್ತಿದೆ. ಸಂಘಟನೆ ಹಣಕಾಸು ಮತ್ತು ಲಾಜಿಸ್ಟಿಕ್ಸ್ ಜಾಲವನ್ನು ಬಲಪಡಿಸುವ ಜೊತೆಗೆ, ಬಾಂಗ್ಲಾದೇಶದಲ್ಲಿ ಹೊಸ ನೆಲೆಗಳು ಮತ್ತು ಬೆಂಬಲ ಜಾಲ ನಿರ್ಮಿಸಲು ಸಕ್ರಿಯ ಪ್ರಯತ್ನ ನಡೆಸುತ್ತಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಹಿಂದೆ ಯುಎನ್ ಸದಸ್ಯ ರಾಷ್ಟ್ರವೊಂದು ಈ ದಾಳಿಯ ಹಿಂದೆ ಜೈಷ್-ಎ-ಮೊಹಮ್ಮದ್ (JeM) ಕೈವಾಡವಿದೆ ಎಂದು ಹೇಳಿತ್ತು. ಆದರೆ ಈಗ ಯುಎನ್‌ಎಸ್‌ಸಿಯ ಅಧಿಕೃತ ವರದಿ ದಾಳಿಯ ಹೊಣೆಯನ್ನು ನೇರವಾಗಿ AQIS ಮೇಲೆ ಹೊರಿಸಿದೆ.

ವರದಿಯಲ್ಲಿ ಮತ್ತೊಂದು ಆತಂಕಕಾರಿ ಸಂಗತಿಯನ್ನೂ ಉಲ್ಲೇಖಿಸಲಾಗಿದೆ. ಆಲ್-ಖೈದಾ ಹಾಗೂ ಐಸಿಸ್ ಸಂಘಟನೆಗಳು ರಾಸಾಯನಿಕ ಮತ್ತು ಜೈವಿಕ ಆಯುಧಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನ ಮುಂದುವರಿಸಿದ್ದು, ಇತ್ತೀಚೆಗೆ ಐಸಿಸ್ ಪ್ರಕಟಿಸಿದ ‘ಇನ್ವೇಡ್’ ಆನ್‌ಲೈನ್ ಮ್ಯಾಗಜೀನ್‌ನಲ್ಲಿ ಸೈನೈಡ್ ಹಾಗೂ ಬೊಟುಲಿನಮ್ ಟಾಕ್ಸಿನ್ ತಯಾರಿಕೆ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ. ಐಸಿಸ್-ಕೆ (ISIL-K) ಸಂಘಟನೆ ರೈಸಿನ್ ವಿಷ ತಯಾರಿಕೆಯ ಮಾರ್ಗಸೂಚಿಗಳನ್ನೂ ಹರಡುತ್ತಿದೆ ಎಂದು ವರದಿ ಎಚ್ಚರಿಸಿದೆ.

ಇದೇ ವೇಳೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪ್ರಕರಣದ ತನಿಖೆ ಪೂರ್ಣಗೊಳಿಸಿ, 11 ಆರೋಪಿಗಳ ವಿರುದ್ಧ 7,500 ಪುಟಗಳ ಬೃಹತ್ ಚಾರ್ಜ್‌ಶೀಟ್ ಸಲ್ಲಿಸಿದೆ. 580ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿರುವ ಈ ದೋಷಾರೋಪಣಾ ಪಟ್ಟಿಯ ವಿಚಾರಣೆಯನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 27ರಂದು ಕೈಗೆತ್ತಿಕೊಳ್ಳಲಿದೆ.

ನವೆಂಬರ್ 2025ರ ಸಂಜೆ ಸುಮಾರು 7 ಗಂಟೆ ವೇಳೆಗೆ ಕೆಂಪುಕೋಟೆ ಸಮೀಪ ಸಂಚರಿಸುತ್ತಿದ್ದ ಹುಂಡೈ i20 ಕಾರಿನಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ ಕಾರು ಚಲಾಯಿಸುತ್ತಿದ್ದ ಉಮರ್ ಉನ್ ನಬಿ ಸೇರಿದಂತೆ 11 ಮಂದಿ ಮೃತಪಟ್ಟಿದ್ದರು. ಈ ಘಟನೆ ದೇಶದ ಭದ್ರತಾ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು.

ಶ್ರೀಲಂಕಾ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್‌ಗೆ ಸಚಿನ್ ದಾಖಲೆ ಮೇಲೆ ಕಣ್ಣು!

0

ಆಗಸ್ಟ್ 15ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಮಹತ್ವದ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಜೈಸ್ವಾಲ್, ಅಭ್ಯಾಸ ಪಂದ್ಯದಲ್ಲೂ ಅರ್ಧಶತಕ ಸಿಡಿಸುವ ಮೂಲಕ ಉತ್ತಮ ಲಯದಲ್ಲಿರುವುದನ್ನು ತೋರಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ಶತಕ ಬಾರಿಸಿದರೆ, 24ನೇ ವಯಸ್ಸಿಗೂ ಮುನ್ನ ಐದು ವಿಭಿನ್ನ ದೇಶಗಳಲ್ಲಿ ಟೆಸ್ಟ್ ಶತಕ ಸಿಡಿಸಿದ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಈ ವಿಶೇಷ ದಾಖಲೆ ಸದ್ಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ.

ಜೈಸ್ವಾಲ್ ಈಗಾಗಲೇ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ಮತ್ತು ವೆಸ್ಟ್ ಇಂಡೀಸ್ ನೆಲದಲ್ಲಿ ಟೆಸ್ಟ್ ಶತಕ ಬಾರಿಸಿದ್ದಾರೆ. ಇದೀಗ ಶ್ರೀಲಂಕಾದಲ್ಲೂ ಶತಕ ಸಿಡಿಸಿದರೆ, ಸಚಿನ್ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ಏಷ್ಯಾದ ಮೈದಾನಗಳಲ್ಲೂ ಜೈಸ್ವಾಲ್ ಅವರ ಬ್ಯಾಟಿಂಗ್ ದಾಖಲೆ ಗಮನಾರ್ಹವಾಗಿದೆ. ಏಷ್ಯಾದಲ್ಲಿ ಇದುವರೆಗೆ 15 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 1,417 ರನ್ ಗಳಿಸಿದ್ದಾರೆ. 54.5ರ ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಜೈಸ್ವಾಲ್, ನಾಲ್ಕು ಶತಕ ಹಾಗೂ ಎಂಟು ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ ಅಜೇಯ 214 ರನ್.

ಆದರೆ ಶ್ರೀಲಂಕಾ ನೆಲದಲ್ಲಿ ಜೈಸ್ವಾಲ್‌ಗೆ ಸವಾಲು ಎದುರಾಗಲಿದೆ. ಏಕೆಂದರೆ ಅವರು ಇದೇ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. ಅಲ್ಲದೆ, ಶ್ರೀಲಂಕಾ ವಿರುದ್ಧವೂ ಇದು ಅವರ ಮೊದಲ ಟೆಸ್ಟ್ ಸರಣಿಯಾಗಿದೆ. ಹೀಗಾಗಿ ಸಿಂಹಳೀಯರ ನಾಡಿನಲ್ಲಿ ಜೈಸ್ವಾಲ್ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬ ಕುತೂಹಲ ಮೂಡಿದೆ.

ಇದರ ಜೊತೆಗೆ ಮತ್ತೊಂದು ಮೈಲಿಗಲ್ಲು ಸಾಧಿಸುವ ಅವಕಾಶವೂ ಜೈಸ್ವಾಲ್ ಮುಂದಿದೆ. ಈ ಟೆಸ್ಟ್ ಸರಣಿಯಲ್ಲಿ ಐದು ಸಿಕ್ಸರ್‌ಗಳನ್ನು ಬಾರಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 50 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ಮೂರನೇ ಭಾರತೀಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಪಟ್ಟಿಯಲ್ಲಿ ಈಗಾಗಲೇ ರೋಹಿತ್ ಶರ್ಮಾ ಮತ್ತು ವೀರೇಂದ್ರ ಸೆಹ್ವಾಗ್ ಸ್ಥಾನ ಪಡೆದಿದ್ದಾರೆ.