ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಸಿದ್ದರಾಮಯ್ಯ ಅವರು ಇದೀಗ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯಪಾಲರ ಕಚೇರಿಗೆ ರಾಜೀನಾಮೆ ಪತ್ರ ತಲುಪಿದ ಬೆನ್ನಲ್ಲೇ ಸಿದ್ದರಾಮಯ್ಯ ದಿಢೀರ್ ದೆಹಲಿ ಪ್ರಯಾಣಕ್ಕೆ ಸಿದ್ಧರಾಗಿದ್ದಾರೆ ಎನ್ನುವ ಮಾಹಿತಿ ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿದೆ.
ಸಿದ್ದರಾಮಯ್ಯ ಅವರು ಇಂದು ಸಂಜೆಯೇ ದೆಹಲಿಗೆ ತೆರಳುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಈ ಪ್ರವಾಸದ ಪ್ರಮುಖ ಉದ್ದೇಶ ಎಂದು ತಿಳಿದುಬಂದಿದೆ.
ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಹೈಕಮಾಂಡ್ಗೆ ಧನ್ಯವಾದ ತಿಳಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ರಾಜೀನಾಮೆಯ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಹೈಕಮಾಂಡ್ ಸಹ ಈ ಕುರಿತು ಸ್ಪಷ್ಟ ಸೂಚನೆ ನೀಡಿಲ್ಲ.
ಈ ನಡುವೆ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ಸುದ್ದಿ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.

