ನವದೆಹಲಿ: ಕೇಂದ್ರ ಸರ್ಕಾರದೊಂದಿಗೆ ನಡೆಯಲಿರುವ ಮೂರನೇ ಸುತ್ತಿನ ಮಾತುಕತೆಗೆ ಮುನ್ನ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಸರ್ಕಾರದೊಂದಿಗೆ ನಡೆಯುವ ಸಭೆಗಳಿಗೆ ಯಾವುದೇ ಅರ್ಥವಿಲ್ಲ ಎಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಸ್ಪಷ್ಟಪಡಿಸಿದ್ದಾರೆ.
ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಇದೇ ನಿಲುವು ಮುಂದುವರಿಸಿದರೆ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಿ ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಎನ್ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ)ಯ 47 ಅಧಿಕಾರಿಗಳನ್ನು ವಜಾಗೊಳಿಸಿರುವುದರಿಂದ ಮಾತ್ರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಹೇಳಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಅದರ ನಂತರದ ಬೆಳವಣಿಗೆಗಳಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ರಾಜಕೀಯ ಮತ್ತು ಆಡಳಿತಾತ್ಮಕ ಹೊಣೆಗಾರರು ಎಂದು ಆರೋಪಿಸಿದರು.
“ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಜವಾಬ್ದಾರಿ ಶಿಕ್ಷಣ ಸಚಿವರ ಮೇಲಿದೆ. ಅವರು ರಾಜೀನಾಮೆ ನೀಡಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಅಗತ್ಯವಾದ ಬೇಡಿಕೆಗಳು ಮತ್ತು ಸಲಹೆಗಳ ಪಟ್ಟಿಯನ್ನು ನಾವು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿದ್ದೇವೆ” ಎಂದು ಅಶುತೋಷ್ ರಂಕಾ ಹೇಳಿದರು.
ಇದರ ನಡುವೆ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಸಿಜೆಪಿ ಪ್ರತಿನಿಧಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಸಿದರು. ಈ ಸಭೆಯಲ್ಲಿ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ಮೂರು ಪ್ರಮುಖ ಬೇಡಿಕೆಗಳು ಹಾಗೂ ಐದು ಸುಧಾರಣಾ ಸಲಹೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದು ತಿಳಿಸಲಾಗಿದೆ.
ಸಭೆಯ ಬಳಿಕ ಮಾತನಾಡಿದ ಜೆ.ಪಿ. ನಡ್ಡಾ, ಸರ್ಕಾರದೊಂದಿಗೆ ನಡೆದ ಚರ್ಚೆಯ ವಿವರಗಳನ್ನು ಶನಿವಾರ ಸಿಜೆಪಿ ಸದಸ್ಯರಿಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.

