Home Blog

IPL 2026 Final: ಫೈನಲ್‌ ಗೆದ್ದರೂ ಸಂಭ್ರಮಿಸುವಂತಿಲ್ಲ: ಸಂಭ್ರಮಾಚರಣೆಗೆ ಖಡಕ್ ರೂಲ್ಸ್ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಐಪಿಎಲ್ 2026ರ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಫೈನಲ್ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳ ಉತ್ಸಾಹ ಹೆಚ್ಚಾಗಿದ್ದು,

ಮೇ 31ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಬಳಿಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಪಂದ್ಯದ ಫಲಿತಾಂಶದ ನಂತರ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಆಯುಕ್ತರ ಕಚೇರಿ ವಿಶೇಷ ಸೂಚನೆಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಹಾಗೂ ಕ್ರಿಕೆಟ್ ಅಭಿಮಾನಿಗಳು ಕಡ್ಡಾಯವಾಗಿ ಪಾಲಿಸಬೇಕೆಂದು ಮನವಿ ಮಾಡಿದೆ.

ಪೊಲೀಸರ ಸೂಚನೆಯಂತೆ, ಪಂದ್ಯ ಮುಗಿದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ವಿಜಯೋತ್ಸವ ಅಥವಾ ಗುಂಪು ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ರಸ್ತೆಗಳಿಗೆ ಮುಖಮಾಡಿ ಎಲ್‌ಇಡಿ ವಾಲ್‌ಗಳನ್ನು ಅಳವಡಿಸುವುದಕ್ಕೂ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಸಂಬಂಧಿತ ಅನುಮತಿ ಪಡೆಯದೇ ಮಾಲ್‌ಗಳು, ಪಬ್‌ಗಳು ಹಾಗೂ ವಾಣಿಜ್ಯ ಸಂಸ್ಥೆಗಳ ಹೊರಭಾಗದಲ್ಲಿ ಬೃಹತ್ ಪರದೆಗಳನ್ನು ಅಳವಡಿಸಿ ಪಂದ್ಯ ಪ್ರಸಾರ ಮಾಡುವಂತಿಲ್ಲ.

ಇದೇ ವೇಳೆ ಪಟಾಕಿ ಸಿಡಿಸುವುದು ಹಾಗೂ ಅಪಾಯಕಾರಿ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಂದ್ಯ ಗೆಲುವಿನ ಸಂಭ್ರಮದಲ್ಲಿ ರಸ್ತೆಗಳಲ್ಲಿ ಬೈಕ್ ರ್ಯಾಲಿ, ವ್ಹೀಲಿಂಗ್, ಸ್ಟಂಟ್‌ಗಳು ಅಥವಾ ಅತಿವೇಗದ ಚಾಲನೆ ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಗಲಾಟೆ ಸೃಷ್ಟಿಸುವುದು, ಅಸಭ್ಯ ವರ್ತನೆ ತೋರುವುದು ಅಥವಾ ಸಾರ್ವಜನಿಕ ಶಾಂತಿಗೆ ಭಂಗ ತರುವ ಯಾವುದೇ ಕೃತ್ಯಗಳ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಅಭಿಮಾನಿಗಳು ಟ್ರಾಫಿಕ್ ಪೊಲೀಸರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಜೊತೆಗೆ, ಬೇರೆ ತಂಡಗಳ ಅಭಿಮಾನಿಗಳನ್ನು ಕೆಣಕುವುದು, ನಿಂದಿಸುವುದು ಅಥವಾ ಪ್ರಚೋದನಾತ್ಮಕ ವರ್ತನೆ ತೋರಿಸುವುದನ್ನು ತಪ್ಪಿಸಬೇಕು ಎಂದು ಸೂಚಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿರುವ ಪೊಲೀಸರು, ದ್ವೇಷಪೂರಿತ ಪೋಸ್ಟ್‌ಗಳು, ಸುಳ್ಳು ಸುದ್ದಿಗಳು ಅಥವಾ ವದಂತಿಗಳನ್ನು ಹಂಚಿಕೊಂಡರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಒಟ್ಟಾರೆ, ಐಪಿಎಲ್ ಫೈನಲ್ ಪಂದ್ಯದ ಸಂಭ್ರಮವು ನಗರದ ಶಾಂತಿ ಮತ್ತು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರದಂತೆ ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕು. ಪಂದ್ಯವನ್ನು ಆನಂದಿಸಿ, ಆದರೆ ಕಾನೂನು ಮತ್ತು ಪೊಲೀಸ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬುದು ಬೆಂಗಳೂರು ಪೊಲೀಸರ ಮನವಿಯಾಗಿದೆ.

‘ಅಹಿಂದ ಧ್ವನಿ ಮೌನವಾಗಿದೆ’: ವೆಂಕಟರಮಣಪ್ಪ ಸಾವಿಗೆ ಸಿದ್ದರಾಮಯ್ಯ ಕಂಬನಿ

0

ತುಮಕೂರು: ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಪಾವಗಡದ ಹಿರಿಯ ಕಾಂಗ್ರೆಸ್ ನಾಯಕ ವೆಂಕಟರಮಣಪ್ಪ ಅವರ ನಿಧನಕ್ಕೆ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕ ಶ್ರದ್ಧಾಂಜಲಿ ಸಲ್ಲಿಸಿದರು. “ಅವರು ಕೇವಲ ರಾಜಕಾರಣಿ ಅಲ್ಲ, ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು” ಎಂದು ಸ್ಮರಿಸಿದರು.

ಪಾವಗಡದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ವೆಂಕಟರಮಣಪ್ಪ ಅವರಿಗೆ ನನ್ನ ಮೇಲೆ ಅಪಾರ ಪ್ರೀತಿ ಮತ್ತು ಅಭಿಮಾನ ಇತ್ತು. ಅವರ ಅಗಲಿಕೆ ವೈಯಕ್ತಿಕವಾಗಿಯೂ ನನಗೆ ದೊಡ್ಡ ನಷ್ಟ. ಅವರು ಯಾವಾಗಲೂ ಅಹಿಂದ ವರ್ಗಗಳ ಪರವಾಗಿ ನಿಂತವರು. ಕೆಳಸಮುದಾಯಗಳ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ರೈತರ ಹಿತಾಸಕ್ತಿಗಾಗಿ ನಿರಂತರ ಹೋರಾಟ ನಡೆಸಿದವರು” ಎಂದು ಹೇಳಿದರು.

“ಇನ್ನೂ ಕನಿಷ್ಠ ಹತ್ತು ವರ್ಷ ರಾಜಕೀಯ ಮತ್ತು ಸಾರ್ವಜನಿಕ ಬದುಕಿನಲ್ಲಿ ಸಕ್ರಿಯರಾಗಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ವಿಧಿಯಾಟವೇ ಬೇರೆ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ. ಕಳೆದ ಚುನಾವಣೆಯಲ್ಲಿ ತಮ್ಮ ಮಗನನ್ನು ರಾಜಕೀಯಕ್ಕೆ ಕರೆತಂದು ಗೆಲ್ಲಿಸಿದ್ದರು. ತಂದೆಯ ಆದರ್ಶಗಳನ್ನು ಮಗ ಮುಂದುವರಿಸುತ್ತಾನೆ ಎಂಬ ವಿಶ್ವಾಸ ನನಗಿದೆ” ಎಂದು ಹೇಳಿದರು.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರು ಈ ದುಃಖವನ್ನು ಭರಿಸುವ ಶಕ್ತಿ ಹೊಂದಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದರು.

ಹಾಸನ ಸೈಟ್ ವಿವಾದ: ಎಸ್‌ಪಿಗಾಗಿ ಒಂದು ಗಂಟೆ ಕಾದು ವಾಪಸ್ ಆದ ಯಶ್ ತಾಯಿ

0

ಹಾಸನ: ನಟ ಯಶ್ ಅವರ ತಾಯಿ ಪುಷ್ಪಾ ಅರುಣ್‌ಕುಮಾರ್ ಅವರ ಆಸ್ತಿ ಧ್ವಂಸ ಪ್ರಕರಣದಲ್ಲಿ ಕಾನೂನು ಹೋರಾಟ ಮತ್ತಷ್ಟು ತೀವ್ರಗೊಂಡಿದ್ದರೂ, ಎಸ್‌ಪಿ ಭೇಟಿಯ ಪ್ರಯತ್ನ ಮಾತ್ರ ಫಲಕಾರಿಯಾಗಲಿಲ್ಲ. ಕೋರ್ಟ್ ಸೂಚನೆಯಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಅವರನ್ನು ಭೇಟಿ ಮಾಡಲು ಬಂದಿದ್ದ ಪುಷ್ಪಾ ಅರುಣ್‌ಕುಮಾರ್, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಚೇರಿಯಲ್ಲಿ ಕಾಯ್ದ ಬಳಿಕ ಭೇಟಿಯಾಗದೇ ವಾಪಸ್ಸಾದರು.

ಎಸ್‌ಪಿ ಶುಭನ್ವಿತಾ ಅವರು ಸಕಲೇಶಪುರಕ್ಕೆ ತೆರಳಿದ್ದರಿಂದ ಭೇಟಿ ಸಾಧ್ಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ವಿದ್ಯಾನಗರದಲ್ಲಿರುವ ತಮ್ಮ ಶೆಡ್ ಹಾಗೂ ಕಾಂಪೌಂಡ್ ಧ್ವಂಸಗೊಂಡು ಸುಮಾರು 24 ಲಕ್ಷ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ ಎಂದು ಪುಷ್ಪಾ ಅರುಣ್‌ಕುಮಾರ್ ಆರೋಪಿಸಿದ್ದಾರೆ. ದೇವರಾಜ್, ಧರ್ಮ ಸೇರಿದಂತೆ ಹಲವರ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸದೆ ಎನ್‌ಸಿಆರ್ ದಾಖಲಿಸಿದ್ದಾರೆ ಎಂಬುದು ಕುಟುಂಬದ ಆರೋಪವಾಗಿದೆ.

ಪ್ರಕರಣದಲ್ಲಿ ಸಮರ್ಪಕ ತನಿಖೆ ನಡೆಯುತ್ತಿಲ್ಲ ಎಂದು ಆರೋಪಿಸಿ ಸಂಬಂಧಿ ದುರ್ಗಾಪ್ರಸಾದ್ ಡಿಜಿಟಲ್ ಸಾಕ್ಷ್ಯಗಳೊಂದಿಗೆ ಹಾಸನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಸ್‌ಪಿ ಭೇಟಿಗೆ ಬಂದಿದ್ದರೂ, ಅಧಿಕಾರಿಯ ಅನುಪಸ್ಥಿತಿಯಿಂದ ಭೇಟಿ ಸಾಧ್ಯವಾಗದೇ ಹೋಗಿರುವುದು ಇದೀಗ ಪ್ರಕರಣಕ್ಕೆ ಮತ್ತೊಂದು ಕುತೂಹಲಕಾರಿ ತಿರುವು ನೀಡಿದೆ.

ಅಕ್ರಮ ಮರಳು ಮಾಫಿಯಾ: ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಅಕ್ರಮ ಮರಳು ಸಾಗಣೆ ಕುರಿತ ದೂರುಗಳು ಹೆಚ್ಚಾಗುತ್ತಿದ್ದಂತೆಯೇ ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ವಿವಿಧ ಕ್ವಾರಿಗಳು ಮತ್ತು ಮರಳು ಸಂಗ್ರಹ ಕೇಂದ್ರಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಜಿಲ್ಲೆಯ ಹಲವೆಡೆ ನಡೆಯುತ್ತಿರುವ ಮರಳು ಗಣಿಗಾರಿಕೆ ಹಾಗೂ ಸಂಗ್ರಹ ಚಟುವಟಿಕೆಗಳ ದಾಖಲೆಗಳನ್ನು ಪರಿಶೀಲಿಸಿರುವ ಅಧಿಕಾರಿಗಳು, ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೊಸನಗರ, ಸಾಗರ, ತೀರ್ಥಹಳ್ಳಿ ಸೇರಿದಂತೆ ಹಲವು ತಾಲೂಕುಗಳ ಕ್ವಾರಿಗಳು ತನಿಖೆಗೆ ಒಳಗಾಗಿವೆ.

ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲೂ ಅಕ್ರಮ ಮರಳು ಸಾಗಾಟದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ದೂರುಗಳ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದು, ಗಣಿಗಾರಿಕೆ ವಲಯದಲ್ಲಿ ಆತಂಕ ಮೂಡಿಸಿದೆ.

ರಾಜ್ಯದ ಆರ್ಥಿಕತೆ ಹದಗೆಟ್ಟಿದೆ, ಡಿಕೆಶಿಗೆ ದೊಡ್ಡ ಸವಾಲು: ಅರವಿಂದ್ ಬೆಲ್ಲದ್

ಧಾರವಾಡ: ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಗಂಭೀರವಾಗಿ ಹದಗೆಟ್ಟಿದ್ದು, ನೂತನ ನಾಯಕತ್ವದ ಮುಂದೆ ಅದನ್ನು ಸರಿಪಡಿಸುವ ದೊಡ್ಡ ಸವಾಲು ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅಭಿಪ್ರಾಯಪಟ್ಟಿದ್ದಾರೆ.

ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಉತ್ತಮ ಅವಕಾಶ ಸಿಕ್ಕಿದ್ದು, ತಮ್ಮ ಅವಧಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

136 ಸ್ಥಾನಗಳನ್ನು ನೀಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಜನರು ರಾಜ್ಯದ ಅಭಿವೃದ್ಧಿ ಮತ್ತು ಸುಭಿಕ್ಷೆಯ ನಿರೀಕ್ಷೆಯಲ್ಲಿದ್ದರು. ಆದರೆ ಕಳೆದ ಮೂರು ವರ್ಷಗಳಲ್ಲಿ ಆ ಮಟ್ಟದ ಅಭಿವೃದ್ಧಿ ಕಂಡುಬಂದಿಲ್ಲ. ಜನರ ನಿರೀಕ್ಷೆಗಳಿಗೆ ತಕ್ಕ ಆಡಳಿತ ಸಿಗಲಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದ ಬೆಲ್ಲದ್, ಅಲ್ಪಸಂಖ್ಯಾತರ ಓಲೈಕೆಯ ರಾಜಕಾರಣ ಬಿಟ್ಟು ಎಲ್ಲ ವರ್ಗಗಳನ್ನೂ ಸಮಾನವಾಗಿ ಕಾಣುವ ಆಡಳಿತ ನೀಡಬೇಕಿತ್ತು. ಆದರೆ ಆ ದಿಸೆಯಲ್ಲಿ ಕೆಲಸ ನಡೆದಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಹಿಂದೆಂದೂ ಕಾಣದ ಮಟ್ಟಿಗೆ ಹೆಚ್ಚಾಗಿದೆ. ಆಡಳಿತದಲ್ಲಿ ಪಾರದರ್ಶಕತೆ ಕೊರತೆಯಾಗಿದ್ದು, ಅಭಿವೃದ್ಧಿ ಕಾರ್ಯಗಳಿಗಿಂತ ರಾಜಕೀಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ದೂರಿದರು.

ನೂತನ ಮುಖ್ಯಮಂತ್ರಿ ಆಗಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿದ ಅವರು, ಇದು ಅವರಿಗೆ ಮಹತ್ವದ ಅವಕಾಶ. ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುವ ಆಡಳಿತ ನೀಡಬೇಕು. ಕಾಂಗ್ರೆಸ್‌ಗೆ 136 ಸ್ಥಾನಗಳು ಬಂದಿರುವುದು ಕೇವಲ ಒಂದು ವರ್ಗದ ಮತಗಳಿಂದಲ್ಲ, ಎಲ್ಲ ವರ್ಗಗಳ ಜನರ ಬೆಂಬಲದಿಂದ. ಆದ್ದರಿಂದ ಎಲ್ಲರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಬೇಕು ಎಂದು ಹೇಳಿದರು.

ರಾಜ್ಯದ ಆರ್ಥಿಕ ಸ್ಥಿತಿ ಈಗಾಗಲೇ ಹದಗೆಟ್ಟಿರುವುದರಿಂದ ಅದನ್ನು ಸುಧಾರಿಸುವ ನಿಟ್ಟಿನಲ್ಲಿ ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಹೊಸ ನಾಯಕತ್ವ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಿ, ಆರ್ಥಿಕ ಶಿಸ್ತು ಹಾಗೂ ಉತ್ತಮ ಆಡಳಿತದ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು” ಎಂದು ಅರವಿಂದ್ ಬೆಲ್ಲದ್ ಸಲಹೆ ನೀಡಿದರು.

ಡಿಸಿಎಂ ಹುದ್ದೆ ಅನಗತ್ಯ, ನಾಯಕನ ಆಯ್ಕೆಯಲ್ಲಿ ಸ್ಪರ್ಧೆಯೇ ಇಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರ ಆಯ್ಕೆಗಾಗಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಅಧಿಕೃತವಾಗಿ ನಾಯಕನಾಗಿ ಆಯ್ಕೆ ಮಾಡುವ ಪ್ರಕ್ರಿಯೆಗೆ ಮುದ್ರೆ ಬೀಳಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಅಥವಾ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಈಗಾಗಲೇ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿರಿಸಿರುವ ಹಿನ್ನೆಲೆಯಲ್ಲಿ ಸಿಎಲ್‌ಪಿ ಸಭೆ ಕೇವಲ ಔಪಚಾರಿಕ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಯಾವುದೇ ಪೈಪೋಟಿ ಇಲ್ಲ. ಹೈಕಮಾಂಡ್ ನಿರ್ಧಾರ ಈಗಾಗಲೇ ಪ್ರಕಟವಾಗಿದೆ. ಇಂದು ನಡೆಯುವ ಸಭೆ ರಾಜ್ಯಪಾಲರಿಗೆ ಮಾಹಿತಿ ನೀಡುವ ಪ್ರಕ್ರಿಯೆಯ ಭಾಗ ಮಾತ್ರ ಎಂದು ಅವರು ತಿಳಿಸಿದರು.

ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ನಡೆಯುತ್ತಿರುವ ಚರ್ಚೆ ಬಗ್ಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಡಿಸಿಎಂ ಹುದ್ದೆ ಸೃಷ್ಟಿಸುವ ಅಗತ್ಯವಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.

ಡಿಸಿಎಂ ಎಂಬುದು ಸಾಂವಿಧಾನಿಕ ಹುದ್ದೆಯಲ್ಲ. ಇಂತಹ ಹುದ್ದೆಗಳನ್ನು ಹೆಚ್ಚಿಸಿದರೆ ವಿವಿಧ ಸಮುದಾಯಗಳು ಮತ್ತು ಗುಂಪುಗಳಿಂದ ಮತ್ತಷ್ಟು ಬೇಡಿಕೆಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ವಿಚಾರದಲ್ಲಿ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಸಚಿವ ಸಂಪುಟದಲ್ಲಿ ತಮ್ಮ ಪಾತ್ರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ರಾಜಕೀಯ ಅನುಭವ ಮತ್ತು ಹಿರಿತನಕ್ಕೆ ತಕ್ಕ ಜವಾಬ್ದಾರಿ ಸಿಗುವ ನಿರೀಕ್ಷೆಯಿದೆ ಎಂದು ಹೇಳಿದರು.

“ನಾನು ಯಾವುದೇ ಖಾತೆಗಾಗಿ ಲಾಬಿ ನಡೆಸುವುದಿಲ್ಲ. ಪಕ್ಷ ಮತ್ತು ನಾಯಕತ್ವ ಯಾವ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿರ್ವಹಿಸುವ ವಿಶ್ವಾಸ ನನ್ನಲ್ಲಿದೆ” ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ತೆರಿಗೆ ಸಂಗ್ರಹದಲ್ಲೇ ಸರ್ಕಾರ ಬ್ಯುಸಿ, ಜನರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಸಿ.ಎನ್. ಅಶ್ವತ್ಥನಾರಾಯಣ ಆರೋಪ

ಬೆಂಗಳೂರು: ರಾಜ್ಯ ಸರ್ಕಾರ ಜನರಿಂದ ವಿವಿಧ ರೀತಿಯ ತೆರಿಗೆಗಳನ್ನು ಸಂಗ್ರಹಿಸುತ್ತಿದ್ದರೂ, ಅವರ ಬದುಕಿಗೆ ಯಾವುದೇ ಭದ್ರತೆ ಅಥವಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.

ನಗರದ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬಂದಾಗ ಬೆಂಗಳೂರಿನ ಜನರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದರು.

“ಪ್ರತಿ ವರ್ಷ ಮಳೆಗಾಲ ಆರಂಭವಾದಾಗ ಬೆಂಗಳೂರಿನಲ್ಲಿ ನೂರಾರು ಸಮಸ್ಯೆಗಳು ತಲೆದೋರುತ್ತವೆ. ಆದರೆ ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇತ್ತೀಚೆಗೆ ಬೌರಿಂಗ್ ಆಸ್ಪತ್ರೆ ಸಮೀಪ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟಿದ್ದರು. ನಿನ್ನೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇವು ದಾಖಲಾಗಿರುವ ಸಾವುಗಳು ಮಾತ್ರ. ಗುಂಡಿಗಳಲ್ಲಿ ಬಿದ್ದು ಅಥವಾ ಮರದ ಕೊಂಬೆಗಳು ಬಿದ್ದು ಮೃತಪಟ್ಟವರ ಸಂಖ್ಯೆ ಬೇರೆ ಇದೆ” ಎಂದು ಹೇಳಿದರು.

ಜನರ ಜೀವಹಾನಿಯಂತಹ ಗಂಭೀರ ಘಟನೆಗಳ ಬಗ್ಗೆ ಸರ್ಕಾರ ಯಾವುದೇ ಕಾಳಜಿ ತೋರಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಮುಂಗಾರು ಆರಂಭಕ್ಕೂ ಮುನ್ನ ನಗರದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳತ್ತ ಸರ್ಕಾರ ಗಮನಹರಿಸಿಲ್ಲ ಎಂದರು.

ಮಾರತಹಳ್ಳಿ, ಸಿಲ್ಕ್ ಬೋರ್ಡ್, ಕೆ.ಆರ್. ಸರ್ಕಲ್ ಸೇರಿದಂತೆ ನಗರದ ಹಲವು ಪ್ರಮುಖ ಜಂಕ್ಷನ್‌ಗಳು ಮಳೆ ಬಂದಾಗ ಜಲಾವೃತವಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಮಸ್ಯೆ ವರ್ಷದಿಂದ ವರ್ಷಕ್ಕೆ ಮುಂದುವರಿಯುತ್ತಿದೆ. ಆದರೂ ಸರ್ಕಾರದಿಂದ ಯಾವುದೇ ಪರಿಣಾಮಕಾರಿ ಕ್ರಮಗಳು ಕಾಣಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ಮನೆ ತೆರಿಗೆ, ಘನತ್ಯಾಜ್ಯ ತೆರಿಗೆ ಸೇರಿದಂತೆ ವಿವಿಧ ಶುಲ್ಕಗಳ ಮೂಲಕ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸುತ್ತದೆ. ಆದರೆ ಸಾರ್ವಜನಿಕರಿಗೆ ಅಗತ್ಯವಾದ ಸೇವೆಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಮಳೆ ಬಂದರೆ ಇಡೀ ಬೆಂಗಳೂರು ಮುಳುಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

ನಗರ ಮತ್ತು ರಾಜ್ಯದ ಆಡಳಿತ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಅಶ್ವತ್ಥನಾರಾಯಣ, ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯವಿರುವ ಹಣ ಸರ್ಕಾರದ ಬಳಿ ಇದ್ದರೂ ಅದನ್ನು ಸಮರ್ಪಕವಾಗಿ ಬಳಸುತ್ತಿಲ್ಲ. ಹೀಗಾಗಿ ಕೂಡಲೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದಾರಿಯಲ್ಲಿ ಸಿಕ್ಕ ₹1.67 ಲಕ್ಷ ಪೊಲೀಸರಿಗೆ ಒಪ್ಪಿಸಿದ ಯುವಕರು!

ಕೊಪ್ಪಳ: ನಗರದ ಅಶೋಕ್ ಸರ್ಕಲ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ ₹1,67,330 ನಗದು ಹಣವನ್ನು ಇಬ್ಬರು ಯುವಕರು ಪ್ರಾಮಾಣಿಕವಾಗಿ ಪೊಲೀಸ್ ಠಾಣೆಗೆ ಒಪ್ಪಿಸಿ ಮಾದರಿಯಾಗಿದ್ದಾರೆ.

ಬೀರಪ್ಪ ತಂದೆ ಮರಿಯಪ್ಪ ಅವರು ಬೈಕ್‌ನಲ್ಲಿ ತೆರಳುವಾಗ ಹಣವಿದ್ದ ಬ್ಯಾಗ್ ದಾರಿಯಲ್ಲಿ ಬಿದ್ದಿತ್ತು. ಇದೇ ವೇಳೆ ಜಾಕೀರ್ ತಂದೆ ಅಬ್ದುಲ್ ಶುಕೂರ್ ಸಾಬ್ ಹಾಗೂ ಇಂದ್ರೇಶ್ ತಂದೆ ರಾಮಪ್ಪ ಕೊಳ್ಳಿ ದನಕಾದೊಡ್ಡಿ ಅವರಿಗೆ ಬ್ಯಾಗ್ ಸಿಕ್ಕಿದೆ.

ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ ₹1,67,330 ನಗದು ಇರುವುದನ್ನು ಕಂಡ ಇಬ್ಬರು, ಹಣವನ್ನು ತಮ್ಮ ಬಳಿ ಇಟ್ಟುಕೊಳ್ಳದೆ ತಕ್ಷಣವೇ ಕೊಪ್ಪಳ ನಗರ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಒಪ್ಪಿಸಿದರು.

ನಂತರ ಪೊಲೀಸರು ಹಣ ಕಳೆದುಕೊಂಡಿದ್ದ ಬೀರಪ್ಪ ಅವರಿಗೆ ನಗದು ಹಣವನ್ನು ಹಸ್ತಾಂತರಿಸಿದರು. ಸಂಕಷ್ಟದ ಕಾಲದಲ್ಲಿ ಪ್ರಾಮಾಣಿಕತೆ ಮೆರೆದ ಜಾಕೀರ್ ಹಾಗೂ ಇಂದ್ರೇಶ್ ಅವರ ಕಾರ್ಯವನ್ನು ಸಾರ್ವಜನಿಕರು ಹಾಗೂ ಪೊಲೀಸರು ಶ್ಲಾಘಿಸಿದ್ದಾರೆ.

IPL 2026: ಗಿಲ್-ಸುದರ್ಶನ್ ಜೋಡಿಯ ಅಬ್ಬರಕ್ಕೆ ಗೇಲ್-ಕೊಹ್ಲಿ ದಾಖಲೆ ನುಚ್ಚುನೂರು!

ಚಂಡೀಗಢ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕ್ವಾಲಿಫೈಯರ್-2 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ ತಂಡ ಮೂರನೇ ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದೆ. ಆದರೆ ಈ ಗೆಲುವಿಗಿಂತಲೂ ಹೆಚ್ಚು ಚರ್ಚೆಗೆ ಗ್ರಾಸವಾಗಿರುವುದು ನಾಯಕ ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅವರ ಅಮೋಘ ಆರಂಭಿಕ ಜೊತೆಯಾಟ.

ರಾಜಸ್ಥಾನ್ ನೀಡಿದ್ದ 215 ರನ್‌ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಪರ ಇನ್ನಿಂಗ್ಸ್ ಆರಂಭಿಸಿದ ಗಿಲ್ ಮತ್ತು ಸುದರ್ಶನ್ ಮೊದಲ ವಿಕೆಟ್‌ಗೆ 167 ರನ್‌ಗಳ ಭರ್ಜರಿ ಜೊತೆಯಾಟವಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ತಮ್ಮ 11ನೇ ಶತಕದ ಜೊತೆಯಾಟ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಕೊಹ್ಲಿ-ಗೇಲ್ ದಾಖಲೆಯನ್ನು ಹಿಂದಿಕ್ಕಿದ ಜೋಡಿ

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕದ ಜೊತೆಯಾಟ ನಡೆಸಿದ ಜೋಡಿ ಎಂಬ ದಾಖಲೆಯನ್ನು ಇದೀಗ ಗಿಲ್ ಮತ್ತು ಸಾಯಿ ಸುದರ್ಶನ್ ತಮ್ಮದಾಗಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕದ ಜೊತೆಯಾಟಗಳು

  1. ಶುಭಮನ್ ಗಿಲ್ – ಸಾಯಿ ಸುದರ್ಶನ್: 11 ಶತಕದ ಜೊತೆಯಾಟ (48 ಇನ್ನಿಂಗ್ಸ್)
  2. ಕ್ರಿಸ್ ಗೇಲ್ – ವಿರಾಟ್ ಕೊಹ್ಲಿ: 10 ಶತಕದ ಜೊತೆಯಾಟ (63 ಇನ್ನಿಂಗ್ಸ್)
  3. ಬಾಬರ್ ಆಜಂ – ಮೊಹಮ್ಮದ್ ರಿಜ್ವಾನ್: 10 ಶತಕದ ಜೊತೆಯಾಟ (75 ಇನ್ನಿಂಗ್ಸ್)
  4. ಎಬಿ ಡಿವಿಲಿಯರ್ಸ್ – ವಿರಾಟ್ ಕೊಹ್ಲಿ: 10 ಶತಕದ ಜೊತೆಯಾಟ (77 ಇನ್ನಿಂಗ್ಸ್)
  5. ಅಭಿಷೇಕ್ ಶರ್ಮಾ – ಪ್ರಭ್ಸಿಮ್ರನ್ ಸಿಂಗ್: 10 ಶತಕದ ಜೊತೆಯಾಟ (ದೇಶೀಯ ಟಿ20 ಕ್ರಿಕೆಟ್)

ಇದಲ್ಲದೆ, ಮೊದಲ ವಿಕೆಟ್‌ಗೆ 100ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವನ್ನು ಎಂಟು ಬಾರಿ ನಿರ್ಮಿಸಿದ ಸಾಧನೆಯನ್ನು ಗಿಲ್-ಸುದರ್ಶನ್ ಜೋಡಿ ಮಾಡಿದೆ. ಈ ಹಿಂದೆ ಈ ದಾಖಲೆ ಪಾಕಿಸ್ತಾನದ ಬಾಬರ್ ಆಜಂ ಮತ್ತು ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿತ್ತು.

ಐಪಿಎಲ್ ಪ್ಲೇಆಫ್‌ನಲ್ಲೂ ಹೊಸ ದಾಖಲೆ

167 ರನ್‌ಗಳ ಜೊತೆಯಾಟದ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲೇ ಯಾವುದೇ ವಿಕೆಟ್‌ಗೆ ಅತ್ಯಧಿಕ ಜೊತೆಯಾಟದ ದಾಖಲೆಯನ್ನೂ ಈ ಜೋಡಿ ತಮ್ಮ ಹೆಸರಿಗೆ ಬರೆದುಕೊಂಡಿದೆ.

ಐಪಿಎಲ್ ಪ್ಲೇಆಫ್‌ನಲ್ಲಿ ಅತ್ಯಧಿಕ ಜೊತೆಯಾಟಗಳು

  1. ಗಿಲ್ – ಸಾಯಿ ಸುದರ್ಶನ್ (ಜಿಟಿ vs ಆರ್‌ಆರ್, 2026 ಕ್ವಾಲಿಫೈಯರ್-2): 167 ರನ್
  2. ಮೈಕಲ್ ಹಸ್ಸಿ – ಮುರಳಿ ವಿಜಯ್ (ಸಿಎಸ್ಕೆ vs ಆರ್‌ಸಿಬಿ, 2011 ಫೈನಲ್): 159 ರನ್
  3. ಮೈಕಲ್ ಹಸ್ಸಿ – ಸುರೇಶ್ ರೈನಾ (ಸಿಎಸ್ಕೆ vs ಮುಂಬೈ, 2013 ಕ್ವಾಲಿಫೈಯರ್): ಅಜೇಯ 140 ರನ್
  4. ಗಿಲ್ – ಸಾಯಿ ಸುದರ್ಶನ್ (ಜಿಟಿ vs ಮುಂಬೈ, 2023 ಕ್ವಾಲಿಫೈಯರ್-2): 138 ರನ್
  5. ಮನ್ವಿಂದರ್ ಬಿಸ್ಲಾ – ಜಾಕ್ ಕಾಲಿಸ್ (ಕೆಕೆಆರ್ vs ಸಿಎಸ್ಕೆ, 2012 ಫೈನಲ್): 136 ರನ್

ರಾಜಸ್ಥಾನ್ ರಾಯಲ್ಸ್ ನೀಡಿದ್ದ 215 ರನ್‌ಗಳ ಗುರಿ ಬೆನ್ನತ್ತಿದ ಗುಜರಾತ್ ಪರ ಗಿಲ್ ಮತ್ತು ಸುದರ್ಶನ್ ಕೇವಲ 77 ಎಸೆತಗಳಲ್ಲಿ 167 ರನ್ ಸೇರಿಸಿ ತಂಡದ ಗೆಲುವಿಗೆ ಭದ್ರ ಅಡಿಪಾಯ ಹಾಕಿದರು.

ಸಾಯಿ ಸುದರ್ಶನ್ 32 ಎಸೆತಗಳಲ್ಲಿ 58 ರನ್ ಗಳಿಸಿ ಬ್ರಿಜೇಶ್ ಶರ್ಮಾಗೆ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ನಾಯಕ ಶುಭಮನ್ ಗಿಲ್ 53 ಎಸೆತಗಳಲ್ಲಿ 104 ರನ್ ಸಿಡಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರು. ಅವರನ್ನು ಜೋಫ್ರಾ ಆರ್ಚರ್ ಔಟ್ ಮಾಡಿದರೂ, ಆಗಲೇ ಪಂದ್ಯ ಗುಜರಾತ್ ಹಿಡಿತಕ್ಕೆ ಬಂದಿತ್ತು.

ಈ ಆರಂಭಿಕ ಜೋಡಿಯ ನಿರ್ಣಾಯಕ ಜೊತೆಯಾಟದ ನೆರವಿನಿಂದ ಗುಜರಾತ್ ಟೈಟಾನ್ಸ್ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿ ಫೈನಲ್‌ಗೆ ಲಗ್ಗೆ ಇಟ್ಟಿತು.

ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಹೆಸರು ಅಧಿಕೃತ ಘೋಷಣೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಭೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇದೇ ಸಭೆಯಲ್ಲಿ ಸಚಿವ ಸಂಪುಟದ ರೂಪುರೇಷೆಗಳ ಕುರಿತೂ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ನಗರದ ಸರ್ಕಾರಿ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ, ಸಿಎಲ್‌ಪಿ ಸಭೆಯ ಪ್ರಮುಖ ಅಜೆಂಡಾ ಮುಖ್ಯಮಂತ್ರಿ ಆಯ್ಕೆ ಮಾತ್ರವಾಗಿದ್ದು, ಹೈಕಮಾಂಡ್ ಈಗಾಗಲೇ ತೆಗೆದುಕೊಂಡಿರುವ ತೀರ್ಮಾನದಂತೆ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

“ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರಕ್ಕೆ ಅಧಿಕೃತ ಮುದ್ರೆ ಬೀಳಲಿದೆ” ಎಂದು ಜಾರಕಿಹೊಳಿ ಹೇಳಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸಮಯ ನಿಗದಿಪಡಿಸುವ ಉದ್ದೇಶದಿಂದ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಸಮಾರಂಭದ ಕುರಿತು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಮೂರು ಅಥವಾ ನಾಲ್ಕು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಪಕ್ಷದ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದ್ದು, ನಾಳೆಯೊಳಗೆ ಸ್ಪಷ್ಟ ಚಿತ್ರಣ ದೊರೆಯಬಹುದು ಎಂದು ಜಾರಕಿಹೊಳಿ ಹೇಳಿದರು.

ತಮ್ಮ ಹೆಸರೂ ಡಿಸಿಎಂ ಹುದ್ದೆಗೆ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ತಾನೇ ನಿರ್ಧರಿಸುತ್ತದೆ. ತಮ್ಮಿಂದ ಯಾವುದೇ ಬೇಡಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಯಾರನ್ನು ನೇಮಿಸಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ, ಈ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದರು. ವರಿಷ್ಠರ ಬಳಿ ಎರಡು ಅಥವಾ ಮೂರು ಹೆಸರುಗಳು ಇರಬಹುದು. ಅವರಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಹೈಕಮಾಂಡ್‌ಗೇ ಸೇರಿದೆ ಎಂದು ಹೇಳಿದರು.

ಹೊಸ ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ ಅವರು, ಆಡಳಿತದಲ್ಲಿ ಅನುಭವಿಗಳೂ ಬೇಕು, ಹೊಸ ಮುಖಗಳಿಗೂ ಅವಕಾಶ ಸಿಗಬೇಕು. ಸಚಿವ ಸಂಪುಟದಲ್ಲಿ ಈ ಎರಡರ ಸಮತೋಲನ ಕಾಪಾಡುವುದು ಅಗತ್ಯವಾಗಿದ್ದು, ಅದನ್ನು ಗಮನದಲ್ಲಿಟ್ಟುಕೊಂಡೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

error: Content is protected !!