ಕೊಪ್ಪಳ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಮತ್ತೊಂದು ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಡೆದ ಪದವಿಪೂರ್ವ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಅಧಿಕಾರಿಗಳು ತಮ್ಮ ಮಾತು ಕೇಳಬೇಕು ಎಂದು ಖಡಕ್ ಸೂಚನೆ ನೀಡಿದ್ದು, ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡುವುದಾಗಿ ಎಚ್ಚರಿಸಿದ್ದಾರೆ.
ವೇದಿಕೆಯಲ್ಲೇ ಯಲಬುರ್ಗಾ ತಹಶೀಲ್ದಾರ್ ಪ್ರಕಾಶ್ ನಾಶಿ ಅವರ ಹೆಸರನ್ನು ಪ್ರಸ್ತಾಪಿಸಿದ ರಾಯರೆಡ್ಡಿ, ಸಚಿವ ಸ್ಥಾನದ ಕಾರ್ಯಭಾರದಲ್ಲಿ ತಾವು ಸಂಪೂರ್ಣ ಬ್ಯುಸಿಯಾಗಿರುವುದರಿಂದ ತಹಶೀಲ್ದಾರ್ ತಮ್ಮ ಪಿಆರ್ಒ ಆಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ತಮ್ಮ ಪಿಎಗೆ ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿರುವುದಾಗಿಯೂ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿ ಕುರಿತು ಮಾತನಾಡಿದ ಸಚಿವರು, ಇಲಾಖೆಯ ಅಡಿಯಲ್ಲಿ ಸುಮಾರು 1.52 ಕೋಟಿ ವಿದ್ಯಾರ್ಥಿಗಳು ಹಾಗೂ 96 ವಿಶ್ವವಿದ್ಯಾಲಯಗಳು ಬರುತ್ತವೆ ಎಂದು ಹೇಳಿದರು. ಇದರ ನಡುವೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ. ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವರ ಹೇಳಿಕೆಗಳನ್ನು ಅವರ ಬೆಂಬಲಿಗರು ಸಮರ್ಥಿಸಿಕೊಂಡಿದ್ದಾರೆ. ಜನಪ್ರತಿನಿಧಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ವೇಗವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ ಎಂದು ಬೆಂಬಲಿಗರು ಹೇಳಿದ್ದಾರೆ.
ಇತ್ತೀಚೆಗಷ್ಟೇ ಮುಸ್ಲಿಂ ಧರ್ಮದ ಕುರಿತು ಬಸವರಾಜ ರಾಯರೆಡ್ಡಿ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಆ ವಿವಾದದ ಬೆನ್ನಲ್ಲೇ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಸಚಿವರು ವೇದಿಕೆಯಲ್ಲಿ ನೀಡಿರುವ ಹೇಳಿಕೆ ಇದೀಗ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

