ಹಾವೇರಿ: ಕಳೆದ ಏಳು ತಿಂಗಳಿಂದ ಅಪರೂಪದ ಆಟೋ ಇಮ್ಯೂನ್ ಸಮಸ್ಯೆಯಿಂದ ಕೈಕಾಲುಗಳ ಸ್ವಾಧೀನ ಕಳೆದುಕೊಂಡು ವೀಲ್ಚೇರ್ಗೆ ಸೀಮಿತವಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಇದೀಗ ಮತ್ತೆ ನಡೆದಾಡುತ್ತಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ಗಮನ ಸೆಳೆದಿದೆ.
ಕುಟುಂಬಸ್ಥರು ಇದನ್ನು ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹವೆಂದು ನಂಬಿದ್ದು, ವೈದ್ಯಕೀಯ ಚಿಕಿತ್ಸೆ ಕೂಡ ಈ ಅವಧಿಯಲ್ಲಿ ಮುಂದುವರಿದಿತ್ತು.
ಹಾವೇರಿ ತಾಲೂಕಿನ ನೆಗಳೂರು ಗ್ರಾಮದ 22 ವರ್ಷದ ನಿವೇದಿತಾ ಶಿವಪ್ಪ ನೆಗಳೂರು ಈ ವಿದ್ಯಾರ್ಥಿನಿ. ಕೆಲವು ತಿಂಗಳ ಹಿಂದೆ ಅವರಿಗೆ ಪದೇ ಪದೇ ಮೂರ್ಚೆ ಹೋಗುವ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಆರೋಗ್ಯ ಸ್ಥಿತಿ ಹದಗೆಟ್ಟು ಕೈಕಾಲುಗಳ ಸ್ವಾಧೀನ ಕಳೆದುಕೊಂಡು ವೀಲ್ಚೇರ್ ಬಳಸುವ ಪರಿಸ್ಥಿತಿ ಎದುರಾಗಿತ್ತು.
ವೈದ್ಯಕೀಯ ಪರೀಕ್ಷೆ ವೇಳೆ ಆಟೋ ಇಮ್ಯೂನ್ ಸಮಸ್ಯೆಯಿಂದ ಉಂಟಾದ ಪ್ರತಿಕಾಯಗಳು (ಆ್ಯಂಟಿಬಾಡಿ) ಮೆದುಳಿನ ಮೇಲೆ ಪರಿಣಾಮ ಬೀರುತ್ತಿರುವುದು ಪತ್ತೆಯಾಗಿತ್ತು. ಕುಟುಂಬಸ್ಥರು ಹಾವೇರಿ ಹಾಗೂ ಹುಬ್ಬಳ್ಳಿಯ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದು, ಸುಮಾರು ಐದರಿಂದ ಆರು ಲಕ್ಷ ರೂಪಾಯಿ ವೆಚ್ಚ ಮಾಡಿದ್ದರು. ವೈದ್ಯರ ಸಲಹೆಯಂತೆ ಚಿಕಿತ್ಸೆ ಮುಂದುವರಿದಿದ್ದರೂ ಆರಂಭದಲ್ಲಿ ನಿರೀಕ್ಷಿತ ಚೇತರಿಕೆ ಕಾಣಿಸಿರಲಿಲ್ಲ.
ಕುಟುಂಬಸ್ಥರು ನಿವೇದಿತಾಳನ್ನು ಹೊಸರಿತ್ತಿ ರಾಯರ ಮಠಕ್ಕೆ ಕರೆದೊಯ್ದಿದ್ದರು. ಅಲ್ಲಿ ನಡೆದ 100ನೇ ಸುಶೀಲೇಂದ್ರ ತೀರ್ಥ ಆರಾಧನೆಯ ಸಂದರ್ಭದಲ್ಲಿ ಸುಭುದೇಂದ್ರ ತೀರ್ಥ ಸ್ವಾಮೀಜಿಗಳು ಮಂತ್ರಾಕ್ಷತೆ ಮತ್ತು ರಾಯರ ಭಾವಚಿತ್ರ ನೀಡಿ ಐದು ವಾರಗಳ ಕಾಲ ರಾಯರ ಮಠಕ್ಕೆ ನಡೆದುಕೊಳ್ಳುವಂತೆ ಸಲಹೆ ನೀಡಿದ್ದರು.
ಕುಟುಂಬದ ಹೇಳಿಕೆಯ ಪ್ರಕಾರ, ಮೂರು ವಾರಗಳಲ್ಲೇ ನಿವೇದಿತಾಳ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಂಡಿದ್ದು, ಐದು ವಾರಗಳ ಹರಕೆಯ ಬಳಿಕ ಅವರು ಸ್ವತಃ ನಡೆಯುವ ಮಟ್ಟಿಗೆ ಚೇತರಿಸಿಕೊಂಡಿದ್ದಾರೆ.
ಮಗಳ ಆರೋಗ್ಯದಲ್ಲಿ ಕಂಡುಬಂದ ಬದಲಾವಣೆಯಿಂದ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಇದನ್ನು ಗುರು ರಾಘವೇಂದ್ರ ಸ್ವಾಮಿಗಳ ಕೃಪೆ ಮತ್ತು ಆಶೀರ್ವಾದವೆಂದು ನಂಬಿದ್ದಾರೆ. ಚಿಕಿತ್ಸೆ ಮತ್ತು ಚೇತರಿಕೆಯ ಬಳಿಕ ಅವರು ಮಂತ್ರಾಲಯಕ್ಕೂ ಭೇಟಿ ನೀಡುವಂತೆ ಸೂಚನೆ ದೊರೆತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.