Home Blog

ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದು..!

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: “ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ” ಎಂದು ಶಾಸಕ ನೇಮಿರಾಜ್ ನಾಯ್ಕ್ ಹೇಳಿದರು.
ತಾಲೂಕಿನ ತಂಬ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2026-27ನೇ ಸಾಲಿನ ಶಾಲಾ ದಾಖಲಾತಿ, ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಹಿಂದೆ ಶಿಕ್ಷಣ ಕೆಲವೇ ಜನರಿಗೆ ಸೀಮಿತವಾಗಿತ್ತು. ಆದರೆ ಈಗ ಸರ್ಕಾರ ಬಿಸಿಯೂಟ, ಸಮವಸ್ತ್ರ, ಮೊಟ್ಟೆ, ಹಾಲು, ಬಾಳೆಹಣ್ಣು ಸೇರಿದಂತೆ ಹಲವು ಸೌಲಭ್ಯಗಳನ್ನು ಮಕ್ಕಳಿಗೆ ನೀಡುತ್ತಿದೆ. ತಂದೆ-ತಾಯಿಗಳು ಮಕ್ಕಳ ಭವಿಷ್ಯಕ್ಕಾಗಿ ಕಷ್ಟಪಟ್ಟು ದುಡಿದು ಶಾಲೆಗೆ ಕಳುಹಿಸುತ್ತಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಉತ್ತಮ ಶಿಕ್ಷಣ ನೀಡುವುದು ಶಿಕ್ಷಕರ ಕರ್ತವ್ಯ” ಎಂದು ಹೇಳಿದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕಗಳತ್ತ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದ ಅವರು, ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ತಾವು ಬದ್ಧರಾಗಿದ್ದೇವೆ ಎಂದರು.
ಶಾಸಕರ ಅನುದಾನದಡಿ ಸುಮಾರು 3 ಸಾವಿರ ಮಕ್ಕಳು ಎಲ್‌ಕೆಜಿ ಹಾಗೂ ಯುಕೆಜಿ ಶಿಕ್ಷಣ ಪಡೆಯುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು. ಎಲ್‌ಕೆಜಿ, ಯುಕೆಜಿ ಹಾಗೂ ಪ್ರಥಮ ತರಗತಿಗೆ ದಾಖಲಾದ ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಮಕ್ಕಳಿಗೆ ಗೋದಿ ಹುಗ್ಗಿ ಪಾಯಸದ ಸಿಹಿ ಊಟ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಆರ್. ಕವಿತಾ, ಇಒ ಪಾಲಯ್ಯನಕೋಟೆ ವಿಶ್ವನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಜಗದೀಶ್, ಕ್ಲಸ್ಟರ್ ಬಿಆರ್‌ಸಿ ಕನಕಪ್ಪ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಜಿಲ್ಲಾ ಉಪಾಧ್ಯಕ್ಷ ಕೃಷ್ಣಮೂರ್ತಿ ಶೆಟ್ರು, ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಯು. ಕನಕಪ್ಪ, ಬಿ. ಸಿದ್ದರಾಜು, ಗೌರಜ್ಜನವರ ಬಸವರಾಜಪ್ಪ, ಬಣಕಾರ ಕೊಟ್ರೇಶ್, ಕಡ್ಡಿ ಚೆನ್ನಬಸಪ್ಪ, ಎಸ್. ವಿ. ಪಾಟೀಲ, ಕಡ್ಡಿ ಕೊಟ್ರೇಶ್, ಬಣಕಾರ ಮಲ್ಲಿಕಾರ್ಜುನ, ಸೊಬಟಿ ಹರೀಶ್, ಚಿತ್ರ ಕಲಾವಿದ ಚಿಂತ್ರಪಳ್ಳಿ ಕೊಟ್ರೇಶ್, ಬಂಡಿಕ್ಯಾಂಪ ಹನುಮೇಶ್, ಬಿ. ದೇವಿಪ್ರಸಾದ್, ಸಂಡೂರು ಮೆಹಬೂಬ್, ಬ್ಯಾಟಿ ನಾಗರಾಜ್, ಎಸ್‌ಡಿಎಂಸಿ ಅಧ್ಯಕ್ಷ ಹೆಚ್. ನೀಲಗಿರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಕುಮಾರ ನಾಯ್ಕ್, ತಂಬ್ರಹಳ್ಳಿ ಪಿಡಿಒ ಚಂದ್ರಶೇಖರ್, ಮುಖ್ಯ ಶಿಕ್ಷಕ ಹೆಚ್. ಎಂ. ಸಿದ್ದೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪುಸ್ತಕದ ಜೊತೆಗೆ ಕನಸುಗಳಿಗೂ ಹೊಸ ಆರಂಭ..!

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಸಮೀಪದ ಜಕ್ಕಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಸಂಕೀರ್ಣದಲ್ಲಿ ಸೋಮವಾರ ಸಂಭ್ರಮ, ಸಡಗರ ಹಾಗೂ ಉತ್ಸಾಹದಿಂದ ನೆರವೇರಿತು.
ಹೊಸ ಶೈಕ್ಷಣಿಕ ವರ್ಷದ ಮೊದಲ ದಿನದ ಅಂಗವಾಗಿ ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ಅಲಂಕಾರಗಳು ಹಾಗೂ ಸ್ವಾಗತ ಫಲಕಗಳಿಂದ ನವವಧುವಿನಂತೆ ಸಿಂಗರಿಸಲಾಗಿತ್ತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಗುಲಾಬಿ ಹೂವು ನೀಡಿ, ಸಿಹಿ ಹಂಚುವ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ಬೇಸಿಗೆ ರಜೆಯ ಬಳಿಕ ಶಾಲೆಗೆ ಮರಳಿದ ವಿದ್ಯಾರ್ಥಿಗಳಲ್ಲಿ ವಿಶೇಷ ಉತ್ಸಾಹ ಕಂಡುಬಂತು.
ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆಯ ಬಳಿಕ ಮಾತನಾಡಿದ ಕೆ.ಜಿ.ಎಸ್. ಜಕ್ಕಲಿಯ ಮುಖ್ಯ ಶಿಕ್ಷಕ ಎಸ್. ಬಿ. ಗವಿ, “ಮಕ್ಕಳು ದೇಶದ ಭವಿಷ್ಯದ ಆಸ್ತಿಯಾಗಿದ್ದು, ಇಂದಿನ ವಿದ್ಯಾರ್ಥಿಗಳೇ ನಾಳಿನ ಪ್ರಜೆಗಳು. ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವುದು ಮೂಲಭೂತ ಹಕ್ಕಾಗಿದೆ” ಎಂದು ಹೇಳಿದರು.
ಶಿಕ್ಷಣ ಇಲಾಖೆಯು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಹಲವು ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಎಲ್ಲರೂ ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಗುಣಮಟ್ಟದ ಶಿಕ್ಷಣ, ಉಚಿತ ಪಠ್ಯಪುಸ್ತಕಗಳು, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿವೇತನ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ಅವರು, ಗ್ರಾಮದ ಪ್ರತಿಯೊಬ್ಬ ಮಗುವೂ ಶಾಲೆಗೆ ದಾಖಲಾಗುವಂತೆ ಪೋಷಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಬಳಿಕ ನಡೆದ ಪೋಷಕರ ಹಾಗೂ ಶಿಕ್ಷಕರ ಮಹಾಸಭೆಯಲ್ಲಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ಇಲಾಖೆಯ ಹೊಸ ಉಪಕ್ರಮಗಳು, ಎಲ್‌ಬಿಎ ಕಾರ್ಯಕ್ರಮ, ದ್ವಿಭಾಷಾ ಶಿಕ್ಷಣ ವ್ಯವಸ್ಥೆ ಹಾಗೂ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡಲಾಯಿತು.
ಮಕ್ಕಳ ನಿಯಮಿತ ಹಾಜರಾತಿ, ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿಗೆ ಪೋಷಕರ ಸಹಕಾರದ ಅಗತ್ಯವನ್ನು ಶಿಕ್ಷಕರು ವಿವರಿಸಿದರು.
ಸಭೆಯಲ್ಲಿ ಮಾತನಾಡಿದ ಶಿಕ್ಷಕರು, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸಮಾನವಾಗಿ ಉತ್ತಮ ಶಿಕ್ಷಣ ಹಾಗೂ ಮೂಲಸೌಕರ್ಯಗಳನ್ನು ಒದಗಿಸುತ್ತಿದ್ದು, ಗ್ರಾಮದ ಎಲ್ಲ ಮಕ್ಕಳು ಸರ್ಕಾರಿ ಶಾಲೆಯಲ್ಲಿಯೇ ಶಿಕ್ಷಣ ಪಡೆಯುವಂತೆ ಪಾಲಕರು ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂಸಿ ಪದಾಧಿಕಾರಿಗಳು ಶಾಲೆಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕ ಹೆಚ್. ಎಸ್. ಬಿಂಗಿ ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಸ್. ಎ. ಪಲ್ಲೇದ ವಂದಿಸಿದರು. ಎಂ. ವಿ. ತಾಳಿಕೋಟಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಾಲಾ ಪ್ರಾರಂಭೋತ್ಸವವನ್ನು ಯಶಸ್ವಿಗೊಳಿಸಿದರು.

ನಾಳೆ ಡಿ.ಕೆ.ಶಿವಕುಮಾರ್ ಪದಗ್ರಹಣ: ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ನೆಲಮಂಗಲ: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗುತ್ತಿರುವ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನಲ್ಲಿ ಭರ್ಜರಿ ಸಂಭ್ರಮ ಮನೆ ಮಾಡಿದೆ.

ಈ ಹಿನ್ನಲೆಯಲ್ಲಿ ತಾಲೂಕಿನ ಪ್ರತಿ ಮನೆಗೆ ಲಾಡು ಬಾಕ್ಸ್ ಹಂಚಲು ವಿಶೇಷ ಸಿದ್ಧತೆಗಳು ನಡೆಯುತ್ತಿವೆ.

ತಾಲೂಕಿನಲ್ಲಿ ಸುಮಾರು 9 ರಿಂದ 10 ಲಕ್ಷ ಲಾಡುಗಳನ್ನು ತಯಾರಿಸುವ ಕಾರ್ಯ ಆರಂಭಗೊಂಡಿದ್ದು, 80 ರಿಂದ 90 ಸಾವಿರ ಮನೆಗಳಿಗೆ ಲಾಡು ಬಾಕ್ಸ್ ವಿತರಿಸಲು ಯೋಜನೆ ರೂಪಿಸಲಾಗಿದೆ. ನೆಲಮಂಗಲ ಶಾಸಕ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಈ ಸಿಹಿ ಹಂಚಿಕೆ ಕಾರ್ಯಕ್ರಮ ನಡೆಯುತ್ತಿದೆ.

ಲಾಡು ತಯಾರಿಕೆಗೆ ಸುಮಾರು 250 ರಿಂದ 300 ಮಂದಿ ಬಾಣಸಿಗರನ್ನು ನಿಯೋಜಿಸಲಾಗಿದ್ದು, ಸ್ವಚ್ಛತೆ ಹಾಗೂ ಗುಣಮಟ್ಟದ ಕುರಿತು ಶಾಸಕ ಶ್ರೀನಿವಾಸ್ ಸ್ವತಃ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಕೊರತೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಬೆಂಗಳೂರಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಸಂಜೆ 4:10ಕ್ಕೆ ಮುಖ್ಯಮಂತ್ರಿ ಪದಗ್ರಹಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖ ನಾಯಕರು ಹಾಗೂ ಗಣ್ಯರು ಭಾಗವಹಿಸುವ ಸಾಧ್ಯತೆ ಇದೆ.

ಅವರೊಂದಿಗೆ 14 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯೂ ಇದ್ದು, ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆಗೆ ಭಾರೀ ಮಹತ್ವ ದೊರಕಿದೆ.

ಧಾರಾಕಾರ ಮಳೆಗೆ ಬೆಂಗಳೂರು ರಸ್ತೆಗಳು ಜಲಾವೃತ! ಜನಜೀವನ ಅಸ್ತವ್ಯಸ್ತ

ಬೆಂಗಳೂರು: ನಗರದಲ್ಲಿ ಇಂದು ಸಂಜೆ ಏಕಾಏಕಿ ದಿಢೀರ್ ಮಳೆಯಾಗಿದ್ದು, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ವರುಣನ ಆರ್ಭಟದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ಪ್ರಯಾಣಿಕರು ಹಾಗೂ ವಾಹನ ಸವಾರರು ಮಳೆಯ ಹೊಡೆತಕ್ಕೆ ಸಿಲುಕಿ ಪರದಾಟ ನಡೆಸಿದ್ದಾರೆ. ಬಸ್ ನಿಲ್ದಾಣಗಳು, ಅಂಗಡಿ ಮುಂಗಟ್ಟುಗಳು ಮತ್ತು ಮೆಟ್ರೋ ನಿಲ್ದಾಣಗಳ ಬಳಿ ಜನರು ಆಶ್ರಯ ಪಡೆದ ದೃಶ್ಯ ಸಾಮಾನ್ಯವಾಗಿ ಕಂಡುಬಂದಿದೆ.

ಮೆಜೆಸ್ಟಿಕ್, ವಸಂತನಗರ, ಕೆ.ಆರ್. ಸರ್ಕಲ್, ವಿಜಯನಗರ, ಜಯನಗರ, ಬನಶಂಕರಿ, ಕೆಂಗೇರಿ, ರಾಜಾಜಿನಗರ, ಶಿವಾಜಿನಗರ, ಮಲ್ಲೇಶ್ವರಂ, ಬಸವನಗುಡಿ, ಕೋರಮಂಗಲ, ಹೆಚ್‌ಎಸ್‌ಆರ್ ಲೇಔಟ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಧಾರಾಕಾರ ಮಳೆ ದಾಖಲಾಗಿದೆ.

ಭಾಗ್ಮನೆ ಟೆಕ್ ಪಾರ್ಕ್ ಹಾಗೂ ಮಾರತಹಳ್ಳಿ ಸುತ್ತಮುತ್ತ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ದೇವರಬೀಸನಹಳ್ಳಿ ಮೇಲ್ಸೇತುವೆ ರ್ಯಾಂಪ್‌ನಲ್ಲಿ ನೀರು ಜಮಾವಣೆಯಾದ ಕಾರಣ ಕಡುಬೀಸನಹಳ್ಳಿಯಿಂದ ಬೆಳ್ಳಂದೂರು ಮಾರ್ಗದಲ್ಲಿ ಸಂಚಾರ ನಿಧಾನಗೊಂಡಿದೆ.

ಇತ್ತ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಮುತ್ತಲೂ ಭಾರೀ ಮಳೆಯಾಗಿದ್ದು, ಗುಡುಗು ಸಹಿತ ವರುಣನ ಆರ್ಭಟದಿಂದ ನವದೆಹಲಿಯಿಂದ ಆಗಮಿಸಿದ್ದ ಇಂಡಿಗೋ ವಿಮಾನವು ಲ್ಯಾಂಡಿಂಗ್ ವಿಳಂಬವಾಗಿ ಕೆಲ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ನಡೆದಿದೆ. ಪ್ರಯಾಣಿಕರು ಮಳೆಯ ಕಾರಣದಿಂದ ತೀವ್ರ ಅಸೌಕರ್ಯ ಅನುಭವಿಸಿದ್ದಾರೆ.

ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಪತಿ-ಅತ್ತೆಗೆ 14 ದಿನ ನ್ಯಾಯಾಂಗ ಬಂಧನ

ಭೋಪಾಲ್ : ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಪತಿ ಸಮರ್ಥ್ ಸಿಂಗ್ ಹಾಗೂ ಅತ್ತೆ ಗಿರಿಬಾಲಾ ಸಿಂಗ್ ಇಬ್ಬರಿಗೂ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ವರದಕ್ಷಿಣೆ ಕಿರುಕುಳ ಆರೋಪದಡಿ ಬಂಧಿತರಾಗಿದ್ದ ಇಬ್ಬರ ಸಿಬಿಐ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯವು ಜೂನ್ 16ರವರೆಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ ಎಂದು ತಿಳಿದುಬಂದಿದೆ.

ವಿಚಾರಣೆ ಸಂದರ್ಭದಲ್ಲಿ ಎರಡೂ ಕಡೆಯ ವಕೀಲರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಆರೋಪಿಗಳ ಪರ ವಕೀಲ ಅನುರಾಗ್ ಶ್ರೀವಾಸ್ತವ್ ಜಬಲ್ಪುರ ಕೋರ್ಟ್ ಆವರಣದಲ್ಲಿ ಸಮರ್ಥ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಗಿರಿಬಾಲಾ ಸಿಂಗ್ ಮಾಡಿದ್ದಾರೆ. ಆದರೆ ಈ ಆರೋಪವನ್ನು ವಕೀಲರು ನಿರಾಕರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸಾಕ್ಷಿಯಾಗಿ ಉಲ್ಲೇಖಿಸಿದ್ದಾರೆ.

ಇದಷ್ಟೇ ಅಲ್ಲದೆ ಪ್ರಕರಣದ ಪ್ರಮುಖ ಸಾಕ್ಷಿ ನೀರಜ್ ದುಬೆ ಮೇಲೆ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಅನುಮಾನ ಹೆಚ್ಚಿಸಿದೆ. ಮೇ 30ರಂದು ಭೋಪಾಲ್‌ನಲ್ಲಿ ನೀರಜ್ ದುಬೆ ಅವರನ್ನು ನಾಲ್ಕೈದು ಮಂದಿ ಸುತ್ತುವರಿದು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನಂತರ ಅವರು ಕಟಾರಾ ಹಿಲ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತ, ಸೋಮವಾರ (ಜೂ.1) ಆರೋಪಿಗಳನ್ನು ಸ್ಥಳಕ್ಕೆ ಕರೆದೊಯ್ದು ಅಪರಾಧ ಮರುಸೃಷ್ಟಿ ಮಾಡಿಸಲಾಗಿದ್ದು, ಮೇ 12ರ ರಾತ್ರಿ ನಡೆದ ಘಟನೆ ಕುರಿತು ಸಿಬಿಐ ವಿವರವಾದ ಮಾಹಿತಿ ಸಂಗ್ರಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬಂಗಾರಪೇಟೆ ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ: 3 ಕಾರು ಭಸ್ಮ!

ಕೋಲಾರ: ಕಾರು ಗ್ಯಾರೇಜ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಐದು ಕಾರುಗಳಿಗೆ ಹಾನಿಯಾಗಿರುವ ಘಟನೆ ಬಂಗಾರಪೇಟೆ ತಾಲೂಕಿನ ಎಸ್.ಜಿ ಕೋಟೆ ಸಮೀಪ ನಡೆದಿದೆ.

ಈರಣ್ಣ ಅವರಿಗೆ ಸೇರಿದ ಚೌಡೇಶ್ವರಿ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಕಳೆದ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಗ್ಯಾರೇಜ್ ಒಳಗೆ ನಿಲ್ಲಿಸಿದ್ದ 3 ಕಾರುಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಹೊರಗೆ ನಿಲ್ಲಿಸಿದ್ದ ಇನ್ನೂ 2 ಕಾರುಗಳಿಗೆ ಭಾಗಶಃ ಹಾನಿಯಾಗಿದೆ.

ಘಟನೆಯ ವೇಳೆ ಸರ್ವಿಸ್ ಸೆಂಟರ್‌ನಲ್ಲಿ ಕೆಲಸಗಾರರು ಇಲ್ಲದಿದ್ದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳು ಹಾಗೂ ಆಸ್ತಿಪಾಸ್ತಿ ನಾಶವಾಗಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿ ಅವಘಡದ ಮಾಹಿತಿ ದೊರೆತ ತಕ್ಷಣ ಬಂಗಾರಪೇಟೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: 70 ವರ್ಷದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 70 ವರ್ಷದ ಆರೋಪಿಗೆ ಸ್ಥಳೀಯ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಜೊತೆಗೆ ಆರೋಪಿಗೆ 5 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.

ಭಾರತೀಯ ದಂಡ ಸಂಹಿತೆ (IPC) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಪೋಕ್ಸೋ (POCSO) ಕಾಯ್ದೆಯ ವಿವಿಧ ವಿಧಿಗಳ ಅಡಿಯಲ್ಲಿ ಆರೋಪಿಯನ್ನು ತಪ್ಪಿತಸ್ಥನೆಂದು ನ್ಯಾಯಾಲಯ ಘೋಷಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕಠಿಣ ಶಿಕ್ಷೆ ವಿಧಿಸಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

2023ರ ಮೇ 11ರಂದು ಬಾಲಕಿ ಹಾಲು ಖರೀದಿಸಲು ಸಮೀಪದ ಅಂಗಡಿಗೆ ತೆರಳಿದ್ದ ವೇಳೆ ಆರೋಪಿ ಆಕೆಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಘಟನೆಯ ಬಳಿಕ ಅಳುತ್ತಾ ಮನೆಗೆ ಬಂದ ಬಾಲಕಿ ತನ್ನ ಚಿಕ್ಕಪ್ಪನಿಗೆ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಳು. ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಚಂದ್ರಾಯನಗುಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಳಿಕ ನ್ಯಾಯವ್ಯಾಪ್ತಿಯ ಆಧಾರದ ಮೇಲೆ ಸಂತೋಷ್‌ನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ತನಿಖೆ ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಕೊಡಗು ಮೂಲಕ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಊಹಾಪೋಹಗಳಿಗೆ ಸಂಸದ ಯದುವೀರ್ ಸ್ಪಷ್ಟನೆ

ಮೈಸೂರು: ಕೊಡಗು ಜಿಲ್ಲೆಯ ಮೂಲಕ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರೈಲ್ವೆ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಹಾಗೂ ಸಂಪರ್ಕ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆ ಕುರಿತು ಕೆಲವು ವರದಿಗಳು ಹಾಗೂ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದವು. ಆದರೆ ರೈಲ್ವೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ, ಇಂತಹ ಯಾವುದೇ ಯೋಜನೆ ಅಥವಾ ಪ್ರಸ್ತಾವನೆ ಪ್ರಸ್ತುತ ರೈಲ್ವೆ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಯದುವೀರ್ ತಿಳಿಸಿದ್ದಾರೆ.

ಭವಿಷ್ಯದಲ್ಲಿ ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಮೂಲಸೌಕರ್ಯ ಯೋಜನೆ ಕೈಗೊಳ್ಳುವ ಸಂದರ್ಭ ಬಂದರೆ, ಅದಕ್ಕೂ ಮೊದಲು ಎಲ್ಲಾ ಹಿತಾಸಕ್ತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಜೊತೆಗೆ ಜಿಲ್ಲೆಯ ಪರಿಸರ, ಭೌಗೋಳಿಕ ಪರಿಸ್ಥಿತಿ ಹಾಗೂ ಅಭಿವೃದ್ಧಿ ಸಂಬಂಧಿತ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ಮಾತ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕೊಡಗಿನ ಸಮತೋಲಿತ ಅಭಿವೃದ್ಧಿಗೆ ಆದ್ಯತೆ ನೀಡುವ ಜೊತೆಗೆ, ಜಿಲ್ಲೆಯ ವಿಶಿಷ್ಟ ಪರಿಸರ ಮತ್ತು ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯನ್ನೂ ಖಚಿತಪಡಿಸಿಕೊಳ್ಳಲಾಗುವುದು. ಉತ್ತಮ ಸಂಪರ್ಕ ವ್ಯವಸ್ಥೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳಲ್ಲಿ ರೈಲ್ವೆ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಂಸದರು ಭರವಸೆ ನೀಡಿದ್ದಾರೆ.

ಊಹಾಪೋಹಗಳು ಮತ್ತು ಅಪೂರ್ಣ ಮಾಹಿತಿಗಳ ಆಧಾರದ ಮೇಲೆ ಹರಿದಾಡುತ್ತಿರುವ ವರದಿಗಳಿಂದ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು. ಈ ವಿಷಯಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಬೆಳವಣಿಗೆಗಳಿದ್ದರೆ, ಅವುಗಳನ್ನು ಪಾರದರ್ಶಕವಾಗಿ ಹಾಗೂ ಅಧಿಕೃತ ಮಾರ್ಗಗಳ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ಬಡವರ ಅನ್ನಕ್ಕೆ ಕನ್ನ..! ರೋಣದಲ್ಲಿ ಆಹಾರ ಇಲಾಖೆಯ ಮಧ್ಯರಾತ್ರಿ ರೇಡ್ –ಪಿಡಿಎಸ್ ಅಕ್ಕಿ ಜಪ್ತಿ

ರೋಣ: ಬಡವರ ಹೊಟ್ಟೆ ತುಂಬಿಸಬೇಕಾದ ಸರ್ಕಾರದ ಪಡಿತರ ಅಕ್ಕಿಯನ್ನೇ ಹಣ ಮಾಡುವ ದಂಧೆಗೆ ಬಳಸಲು ಯತ್ನಿಸಿದ್ದ ಅಕ್ರಮ ಜಾಲವನ್ನು ರೋಣದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಡೆದ ದಾಳಿಯಲ್ಲಿ ಭಾರಿ ಪ್ರಮಾಣದ ಪಿಡಿಎಸ್ ಅಕ್ಕಿ ಜಪ್ತಿಯಾಗಿದ್ದು, ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಜೂನ್ 1ರಂದು ರಾತ್ರಿ ಆಹಾರ ನಿರೀಕ್ಷಕಿ ಸುವರ್ಣಾ ಮುಕ್ಕಣ್ಣ ಜಮ್ಮನಕಟ್ಟಿ ನೇತೃತ್ವದ ಅಧಿಕಾರಿಗಳ ತಂಡ ರೋಣ ಪಟ್ಟಣದ ಶಿವಾನಂದನಗರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿತು. ದಾಳಿ ವೇಳೆ ಮನೆಯಲ್ಲಿ ರಾಶಿರಾಶಿಯಾಗಿ ಸಂಗ್ರಹಿಸಲಾಗಿದ್ದ 35 ಚೀಲಗಳಲ್ಲಿನ 14 ಕ್ವಿಂಟಲ್ 40 ಕೆಜಿ ಪಿಡಿಎಸ್ ಅಕ್ಕಿ ಪತ್ತೆಯಾಗಿ ಅಧಿಕಾರಿಗಳೇ ಬೆಚ್ಚಿಬಿದ್ದರು.

ಪರಿಶೀಲನೆ ನಡೆಸಿದಾಗ, ಜಪ್ತಿಯಾದ ಅಕ್ಕಿ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ಬಡ ಕುಟುಂಬಗಳಿಗೆ ವಿತರಿಸಬೇಕಾದ ಅಕ್ಕಿಯೇ ಆಗಿರುವುದು ಬಹಿರಂಗವಾಗಿದೆ. ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಸಿದ್ಧತೆ ನಡೆದಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ದಾಳಿಯ ವೇಳೆ ಮನೆಯೊಳಗೆ ಅಕ್ಕಿ ಚೀಲಗಳು ಗುಡ್ಡದಂತೆ ರಾಶಿಯಾಗಿದ್ದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅಧಿಕಾರಿಗಳು ತಕ್ಷಣವೇ ಅಕ್ಕಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಜಪ್ತಿಯಾದ ಅಕ್ಕಿಯ ಮೌಲ್ಯ ಸುಮಾರು ₹31,500 ಎಂದು ಅಂದಾಜಿಸಲಾಗಿದೆ.

ಈ ಪ್ರಕರಣದಲ್ಲಿ ಮೆಹಬೂಬ್ ಭಾಷಾಸಾಬ್ ಮುಲ್ಲಾ ಎಂಬಾತ ಪ್ರಮುಖ ಆರೋಪಿಯಾಗಿದ್ದು, ಬಡವರ ಪಾಲಿನ ಅನ್ನಕ್ಕೆ ಕನ್ನ ಹಾಕಿದ ಆರೋಪ ಎದುರಿಸುತ್ತಿದ್ದಾನೆ. ಆಹಾರ ಇಲಾಖೆ ನೀಡಿದ ದೂರಿನ ಮೇರೆಗೆ ರೋಣ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 99/2026 ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955ರ ಕಲಂ 3 ಮತ್ತು 7 ಹಾಗೂ ಪಿಡಿಎಸ್ ನಿಯಂತ್ರಣ ಆದೇಶ-1992ರ ಕಲಂ 18 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ; 55ಕ್ಕೂ ಹೆಚ್ಚು ಧರ್ಮ ಪ್ರತಿನಿಧಿಗಳಿಗೆ ಆಹ್ವಾನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದ ವಿಶೇಷವೆಂದರೆ ವಿವಿಧ ಧರ್ಮಗಳ ಸ್ವಾಮೀಜಿಗಳು, ಮಠಾಧೀಶರು, ಫಾದರ್‌ಗಳು ಹಾಗೂ ಮೌಲ್ವಿಗಳ ಸಮ್ಮುಖದಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ವಧರ್ಮ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಯೊಬ್ಬರು ಪ್ರಮಾಣವಚನ ಸ್ವೀಕರಿಸುತ್ತಿರುವುದು ವಿಶೇಷವಾಗಿದೆ. ಈ ಮೂಲಕ ಸರ್ವಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಹಾಗೂ ಸೌಹಾರ್ದತೆಯ ಸಂದೇಶವನ್ನು ರಾಜ್ಯದ ಜನತೆಗೆ ನೀಡುವ ಉದ್ದೇಶವನ್ನು ಡಿಕೆ ಶಿವಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ವಿವಿಧ ಜಾತಿ, ಧರ್ಮ ಹಾಗೂ ಸಮುದಾಯಗಳನ್ನು ಪ್ರತಿನಿಧಿಸುವ ಸುಮಾರು 55ಕ್ಕೂ ಹೆಚ್ಚು ಧರ್ಮಗುರುಗಳನ್ನು ಆಹ್ವಾನಿಸಲು ಸೂಚನೆ ನೀಡಲಾಗಿದೆ. ಸ್ವಾಮೀಜಿಗಳು, ಫಾದರ್‌ಗಳು, ಮೌಲ್ವಿಗಳು ಹಾಗೂ ವಿವಿಧ ಮಠಗಳ ಮುಖ್ಯಸ್ಥರಿಗೆ ಸರ್ಕಾರದ ವತಿಯಿಂದಲೇ ಅಧಿಕೃತ ಆಹ್ವಾನ ಪತ್ರ ಕಳುಹಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಈ ಸಂಬಂಧ ಶಿಷ್ಟಾಚಾರ ವಿಭಾಗವು ಡಿಕೆ ಶಿವಕುಮಾರ್ ಕಚೇರಿಯಿಂದ ಧರ್ಮಗುರುಗಳ ಪಟ್ಟಿಯನ್ನು ಪಡೆದುಕೊಂಡಿದೆ.

ಇನ್ನೊಂದೆಡೆ, ಜ್ಯೋತಿಷ್ಯ ಹಾಗೂ ಧಾರ್ಮಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ನೀಡುವ ಡಿಕೆ ಶಿವಕುಮಾರ್, ಧರ್ಮಗುರುಗಳು ಸೂಚಿಸಿರುವ ಶುಭ ದಿನ ಮತ್ತು ಮುಹೂರ್ತದ ಅನ್ವಯವೇ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಅದರಂತೆ ಅವರು ಪೂರ್ವಾಭಿಮುಖವಾಗಿ ನಿಂತು ಪ್ರಮಾಣವಚನ ಸ್ವೀಕರಿಸಲಿದ್ದು, ಗಾಜಿನ ಮನೆಯಲ್ಲಿ ಅದಕ್ಕೆ ಅನುಗುಣವಾಗಿ ವೇದಿಕೆ ಸಿದ್ಧಪಡಿಸಲಾಗಿದೆ.

ಲೋಕಭವನದ ಗಾಜಿನ ಮನೆಯಲ್ಲಿ ಸುಮಾರು 1,100 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಧರ್ಮಗುರುಗಳು, ನ್ಯಾಯಾಧೀಶರು, ವಿಶೇಷ ಆಹ್ವಾನಿತರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ನಾಯಕರು ಹಾಗೂ ಗಣ್ಯರಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

ನೂತನ ಸರ್ಕಾರದ ಅಧಿಕಾರ ಸ್ವೀಕಾರ ಸಮಾರಂಭವನ್ನು ವಿಭಿನ್ನ ಹಾಗೂ ಸರ್ವಧರ್ಮ ಸಮನ್ವಯದ ಸಂಕೇತವಾಗಿ ರೂಪಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಕಾರ್ಯಕ್ರಮ ರಾಜ್ಯ ರಾಜಕೀಯದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುವ ಸಾಧ್ಯತೆಯಿದೆ.

error: Content is protected !!