ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಪರ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕನ್ನಡ ಚಿತ್ರರಂಗ ಅಧಿಕೃತವಾಗಿ ಬೀದಿಗಿಳಿಯಲು ಸಜ್ಜಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಪ್ರತಿದಿನ 3,500 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ನೀಡಿರುವ ನಿರ್ದೇಶನಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ವೇಳೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದೆ.
ಗುರುವಾರ ನಡೆದ ಮಹತ್ವದ ಸಭೆಯಲ್ಲಿ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ, ಕಲಾವಿದರ ಸಂಘದ ಕಾರ್ಯದರ್ಶಿ ರಾಕ್ಲೈನ್ ವೆಂಕಟೇಶ್, ಪ್ರದರ್ಶಕರ, ವಿತರಕರ ಹಾಗೂ ಫಿಲ್ಮ್ ಚೇಂಬರ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಂಗ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಒಮ್ಮತದ ನಿರ್ಧಾರ ಕೈಗೊಂಡರು.
ಕನ್ನಡಪರ ಸಂಘಟನೆಗಳು ಮುಂದಿನ ದಿನಗಳಲ್ಲಿ ಘೋಷಿಸುವ ಯಾವುದೇ ಪ್ರತಿಭಟನೆ, ಚಳುವಳಿ ಅಥವಾ ಹೋರಾಟಕ್ಕೂ ಚಿತ್ರರಂಗ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಭೆಯಲ್ಲಿ ಘೋಷಿಸಲಾಯಿತು.
“ನೆಲ, ಜಲ ಮತ್ತು ಭಾಷೆಯ ವಿಷಯ ಬಂದಾಗ ಕನ್ನಡ ಚಿತ್ರೋದ್ಯಮ ಎಂದಿಗೂ ಹಿಂದೆ ಸರಿಯುವುದಿಲ್ಲ. ಡಾ. ರಾಜ್ಕುಮಾರ್ ಅವರ ಕನ್ನಡಾಭಿಮಾನವೇ ನಮ್ಮ ಮಾರ್ಗದರ್ಶಕ” ಎಂದು ಅಧ್ಯಕ್ಷೆ ಜಯಮಾಲಾ ಸ್ಪಷ್ಟ ಸಂದೇಶ ನೀಡಿದರು.
ರಾಕ್ಲೈನ್ ವೆಂಕಟೇಶ್ ಮಾತನಾಡಿ, ಅಗತ್ಯವಿದ್ದರೆ ಕನ್ನಡ ಚಿತ್ರರಂಗದ ತಾರೆಯರು ಒಂದೇ ವೇದಿಕೆಯಲ್ಲಿ ಸೇರಿ ಹೋರಾಟಕ್ಕೆ ಕೈಜೋಡಿಸಲಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷರು ಹಾಗೂ ಕನ್ನಡಪರ ಹೋರಾಟಗಾರರು, ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ಹೋರಾಟಕ್ಕೂ ಫಿಲ್ಮ್ ಚೇಂಬರ್ ಹೆಗಲಿಗೆ ಹೆಗಲು ನೀಡಿ ನಿಲ್ಲಲಿದೆ ಎಂದು ಘೋಷಿಸಿದರು.
ಕಾವೇರಿ ನೀರಿನ ವಿವಾದ ಮತ್ತೊಮ್ಮೆ ರಾಜಕೀಯ ಹಾಗೂ ಸಾಮಾಜಿಕ ಕಾವೇರಿಯಾಗಿ ಉಕ್ಕುತ್ತಿರುವ ಹೊತ್ತಿನಲ್ಲಿ, ಕನ್ನಡ ಚಿತ್ರರಂಗದ ಈ ಅಧಿಕೃತ ಬೆಂಬಲ ಹೋರಾಟಕ್ಕೆ ಹೊಸ ಆಯಾಮ ನೀಡುವ ಬೆಳವಣಿಗೆಯಾಗಿ ಪರಿಣಮಿಸಿದೆ.

